ದಿನದ ಸುದ್ದಿ
ಇಂದು ರಾತ್ರಿ ನರೇಂದ್ರ ಮೋದಿ ಪ್ರಮಾಣವಚನ; ರಾಷ್ಟ್ರಪತಿ ಭವನ ಸಜ್ಜು : ದೆಹಲಿಗೆ ಬಂದಿಳಿದ ವಿದೇಶಿ ಗಣ್ಯರು; ಎಲ್ಲೆಡೆ ಬಿಗಿ ಭದ್ರತೆ
ಸುದ್ದಿದಿನಡೆಸ್ಕ್: ಎನ್ಡಿಎ ಮೈತ್ರಿಕೂಟದ ನಾಯಕ ನರೇಂದ್ರ ಮೋದಿ ಇಂದು ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೊಸ ಸರ್ಕಾರದ ಸಚಿವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಮತ್ತು ಅಧಿಕಾರದ ಗೌಪ್ಯತೆ ಬೋಧಿಸಲಿದ್ದಾರೆ. ಇದೇ 7 ರಂದು ನರೇಂದ್ರ ಮೋದಿ ಅವರು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು.
ಸಮಾರಂಭಕ್ಕೆ ನೆರೆಹೊರೆ ರಾಷ್ಟ್ರಗಳ ಹಲವು ನಾಯಕರನ್ನು ಆಹ್ವಾನಿಸಲಾಗಿದೆ. ಶ್ರೀಲಂಕಾದ ಅಧ್ಯಕ್ಷ ರಾಣಿಲ್ ವಿಕ್ರಮ ಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು, ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನ, ಮಾರಿಷಸ್ ಪ್ರಧಾನಿ ಪ್ರವೀಂದ್ ಕುಮಾರ್ ಜುಗ್ನೌತ್, ನೇಪಾಳದ ಪ್ರಧಾನಿ ಪುಷ್ಪಕಮಲ್ ದಹಲ್ ಪ್ರಚಂಡ, ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಮತ್ತು ಪೂರ್ವ ಆಫ್ರಿಕಾದ ರಾಷ್ಟ್ರವಾದ ಸೀಶೆಲ್ನ ಉಪರಾಷ್ಟ್ರಪತಿ ಅಹ್ಮದ್ ಅಫೀಫ್ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಮಾಲ್ಡೀವ್ಸ್ ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು, ಮಾರಿಷಸ್ ಪ್ರಧಾನಿ ಪ್ರವೀಂದ್ ಕುಮಾರ್ ಜುಗ್ನೌತ್ ಹಾಗೂ ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಹಾಗೂ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನ ಮತ್ತು ಸೀಶೆಲ್ನ ಉಪರಾಷ್ಟ್ರಪತಿ ಅಹ್ಮದ್ ಅಫೀಫ್ ನವದೆಹಲಿಗೆ ಆಗಮಿಸಿದ್ದಾರೆ.
ನಿಯೋಜಿತ ಪ್ರಧಾನ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಇಂದು ಚಹಾ ಕೂಟ ಏರ್ಪಡಿಸಿದ್ದರು. ಈ ಸಭೆಯಲ್ಲಿ ಬಿಜೆಪಿ ನಾಯಕರಾದ ಶಿವರಾಜ್ ಸಿಂಗ್ ಚೌಹಾಣ್, ಜ್ಯೋತಿರಾಧಿತ್ಯ ಸಿಂಧಿಯಾ, ಅರ್ಜುನ್ ಮೇಘವಾಲ್, ಜಿ.ಕಿಶನ್ ರೆಡ್ಡಿ ಮೊದಲಾದವರು ಪಾಲ್ಗೊಂಡಿದ್ದರು.
ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ, ಇಂದು ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲಿರುವ ವಿದೇಶಿ ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಔತಣಕೂಟ ಏರ್ಪಡಿಸಿದ್ದಾರೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೆಹಲಿ ಪೊಲೀಸರು ಬಿಗಿಬಂದೋಬಸ್ತ್ ಮಾಡಿದ್ದಾರೆ. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಸುರಕ್ಷತೆ ಮತ್ತು ಭದ್ರತೆ ಕಾಯ್ದುಕೊಳ್ಳಲು ಅಗತ್ಯ ಕ್ರಮ ಕೈಗೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243