ರಾಜಕೀಯ
ಸಮಾಜಶಕ್ತಿಗೆ ಭ್ರಮನಿರಸನ
ತುರ್ತು ಪರಿಸ್ಥಿತಿಯ ನಂತರದ ಚುನಾವಣೆಯಷ್ಟೇ ಮಹತ್ವದ ಚುನಾವಣೆ ಇದು ಕೆಲವರು ವಿಶ್ಲೇಷಿಸಿದ್ದರು. 2014 ರಿಂದ ಇಂದಿನವರೆಗೂ ದೇಶದಲ್ಲಿ ನಡೆದ ವಿದ್ಯಮಾನಗಳು ಮತ್ತು ಅವು ಎತ್ತಿದ ಪ್ರಶ್ನೆಗಳನ್ನು ತಿರುವಿ ಹಾಕಿದಾಗ ಅದು ನಿಜ ಎಂದೇ ಅನಿಸಿತ್ತು. ಹಾಗಿದ್ದ ಮೇಲೆ ಎಲ್ಲ ಪಕ್ಷಗಳೂ ಆ ಮಟ್ಟದ ಒಗ್ಗಟ್ಟಿನ ಹೋರಾಟಕ್ಕೆ ತಯಾರಾಗಿರಬೇಕಿತ್ತು.
ದೇಶದ ಬಿಜೆಪಿಯೇತರ ಎಲ್ಲ ನಾಯಕರುಗಳ ಹುಮ್ಮಸ್ಸು ಮೇಳೈಸಿ ದೇಶದ ಸಂಘಟಿತ ಪರ್ಯಾಯ ಶಕ್ತಿಗೆ ನಾಂದಿ ಆಯಿತು ಎನ್ನುವಂತೆ ಕುಮಾರಸ್ವಾಮಿಯವರ ಅಧಿಕಾರ ಸ್ವೀಕಾರ ವೇದಿಕೆಯಲ್ಲಿ ಸಂಭ್ರಮಿಸಲಾಯಿತು. ಆದರೆ ಆನಂತರ ಆದದ್ದು ನಾಯಿ ಬಾಲದ ಕಥೆಯೇ. ಬಿಜೆಪಿಯ ಬೆಂಬಲಿಗರು ಈಗ ಮೂರು ವರ್ಷಗಳಿಂದ ಒಂದು ಪ್ರಶ್ನೆಯನ್ನು ಕೇಳುತ್ತಲೇ ಇದ್ದರು: ‘ಮೋದಿಗೆ ಪರ್ಯಾಯ ಯಾರು? ಯಾರೂ ಇಲ್ಲವಲ್ಲಾ!’ ಎಂದು.
ಅದನ್ನು ಇಂದು ಸ್ಪಷ್ಟ ಗುರಿಯೇ ಇಲ್ಲದ, ಇದ್ದರೂ ಅದಕ್ಕೊಂದು ಅಜೆಂಡಾನೇ ಇಲ್ಲದ ಜಢತ್ವಕ್ಕೆ ಶರಣಗಿದ್ದ ಈ ಪಕ್ಷಗಳು ಒಪ್ಪಿಕೊಂಡಾಯಿತು. ಅದರ ನೈತಿಕ ಹೊಣೆಯನ್ನು ಈ ಪಕ್ಷಗಳು ಹೊರುವುದಿರಲಿ, ಅವು ದೇಶವನ್ನು ಎತ್ತ ತಳ್ಳಿದವು ಎನ್ನುವುದು ಅಕ್ಷಮ್ಯ. ಹಾಗೊಮ್ಮೆ ಬಿಜೆಪಿಯೇತರ ಸರ್ಕಾರ ರಚನೆಗೆ ಅವಕಾಶವಾಗುವಂತೆ ಫಲಿತಾಂಶ ಬಂದಿದ್ದರೂ ಅಂತಹ ಸರ್ಕಾರವನ್ನು ಈ ಪಕ್ಷಗಳು ಎಷ್ಟರ ಮಟ್ಟಿಗೆ ಸಧೃಢವಾಗಿ ನಡೆಸುತ್ತಿದ್ದವು ಎನ್ನುವ ಪ್ರಶ್ನೆ ದೊಡ್ಡದಾಗಿಯೇ ಇರುತ್ತಿತ್ತು. ಅದು ಇನ್ನೂ ಭಯಾನಕ. ಸಂಘ ಪರಿವಾರದ ಗುರಿ ಮಾತ್ರ ಸ್ವಾತಂತ್ರಪೂರ್ವದಿಂದಲೂ ಸ್ಪಷ್ಠವಾಗಿಯೇ ಇದೆ. ಹಂತಹಂತವಾಗಿ ಆ ಕಡೆಗೆ ಅದು ಸಾಗುತ್ತಲೇ ಇದೆ. ಇದು ಈ ದೇಶ-ಕಾಲದ ನಿಜ ಸ್ಥಿತಿ.
ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಕಪಾಳಕ್ಕೆ ಹೊಡೆದಂತಾ ಈ ಫಲಿತಾಂಶಕ್ಕೆ ಇಲ್ಲಿ ನಡೆದ ಅಪ್ರಬುದ್ಧ ಅಥವಾ ಸ್ವಾರ್ಥ ತುಂಬಿದ ನಡೆಗಳೇ ಕಾರಣ. ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡಿಕೊಂಡಿದ್ದೇ ಈ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು. ಯಾವುದೇ ಕಾರಣಕ್ಕೂ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬಾರದು, ಬಿಜೆಪಿಯ ಅತ್ಯಂತ ಕಡಿಮೆ ಲೋಕಸಭಾ ಸದಸ್ಯರನ್ನು ಕರ್ನಾಟಕದಿಂದ ದೆಹಲಿಗೆ ಕಳಿಸುವಂತಾಗಬೇಕು ಎನ್ನುವ ದೃಷ್ಟಿ.
ಅದಕ್ಕಾಗಿ ಕಾಂಗ್ರೆಸ್ ಮುಖ್ಯಮಂತ್ರಿ ಸ್ಥಾನವನ್ನೂ ಜೆಡಿಎಸ್ಸಿಗೆ ಕೊಟ್ಟುಬಿಟ್ಟಿತ್ತು. ರಾಷ್ಟ್ರಮಟ್ಟದಲ್ಲಿ ಬಿಜೆಪಿಯೇತರ ಪಕ್ಷಗಳು ಒಂದೇ ವೇದಿಕೆಯಲ್ಲಿ ಹೇಗೆ ಬರಲು ಸಾಧ್ಯವಾಗಲಿಲ್ಲವೋ ಹಾಗೆಯೇ ಕರ್ನಾಟಕದಲ್ಲೂ ಕೂಡ ಸೀಟು ಹಂಚಿಕೆ ವಿಚಾರದಲ್ಲಿ ಮಿತ್ರಪಕ್ಷಗಳು ಒಮ್ಮತಕ್ಕೆ ಬರಲು ಸಾಧ್ಯವೇ ಆಗಲಿಲ್ಲ. ಈ ರಾಜಕೀಯ ಆಟಗಳಿಂದ ಪ್ರಜಾಪ್ರಭುತ್ವಕ್ಕಾದ ಧಕ್ಕೆ ಅಷ್ಟಿಷ್ಟಲ್ಲ.
ದೇವೇಗೌಡರ ಎದೆಯಲ್ಲಿ ಬಿಜೆಪಿಯೇತರ ಸರ್ಕಾರದ ಉದ್ದೇಶ ಇದ್ದರೂ ಅವರು ತಮ್ಮ ಕುಟುಂಬಕ್ಕೆ ತಮ್ಮನ್ನು ಕಟ್ಟಿಹಾಕಿಕೊಳ್ಳುತ್ತಾರೆ. ಆ ಕುಟುಂಬದ ಮೂರನೇ ತಲೆಮಾರಿನ ನಿನ್ನೆಯ ಹುಡುಗರು ಇಂದು ಸ್ವಂತ ಕಾಲ ಮೇಲೆ ನಿಲ್ಲಬೇಕಾದ ಅನಿವಾರ್ಯಕ್ಕೆ ಸಿಕ್ಕಿರುವ ಯುವಕರಾಗಿಬಿಟ್ಟಿದ್ದಾರೆ. ಆ ಒಬ್ಬೊಬ್ಬರಿಗೂ ಒಂದೊಂದು ನೆಲೆ ದೊರಕಿಸುವುದು ಆ ಕುಟುಂಬದ ಜವಾಬ್ದಾರಿ. ಆ ಕುಟುಂಬಕ್ಕೆ ಗೊತ್ತಿರುವುದು, ಆಸರೆಯಾಗಿರುವುದು ರಾಜಕೀಯವೇ. ಹಾಗಾಗಿ ತನ್ನ ಹಾಸನ ಕ್ಷೇತ್ರವನ್ನೇ ಒಬ್ಬ ಮೊಮ್ಮಗನಿಗೆ ದಾನ ಮಾಡಿದ ದೇವೇಗೌಡರು ತುಮಕೂರಿಗೆ ನಡೆದರು. ಅಥವಾ ಮೊಮ್ಮಗನೇ ಕಿತ್ತುಕೊಂಡು ಕಳಿಸಿದ್ದ!
ಮತ್ತೊಬ್ಬ ಮೊಮ್ಮಗನಿಗೆ ತಾವು ಕೆಲವು ವರ್ಷಗಳಿಂದ ಅನುಕೂಲಕರ ವಾತಾವರಣ ನಿರ್ಮಿಸಿಕೊಂಡ ಹಾಗೂ ಸಧ್ಯಕ್ಕೆ ಪ್ರಬಲ ಸ್ಪರ್ಧೆಯೊಡ್ಡಬಹುದಾದ ಯಾವ ಆಕಾಂಕ್ಷಿ ಇಲ್ಲವೆಂದೇ ತಿಳಿದಿದ್ದ ಮಂಡ್ಯ ಕ್ಷೇತ್ರವನ್ನು ಆಯ್ದುಕೊಂಡರು. ಯಾವ ಮೂಲ ಉದ್ದೇಶಕ್ಕಾಗಿ ಮೈತ್ರಿ ರಾಜಕೀಯಕ್ಕೆ ಅವಕಾಶ ಮಾಡಿಕೊಂಡಿದ್ದರೋ ಆ ಉದ್ದೇಶವನ್ನು ಪಕ್ಕಕ್ಕೆ ಸರಿಸಲಾಯಿತು. ಅಥವಾ, ನಿಜಕ್ಕೂ ಮೂಲ ಉದ್ದೇಶ ಇದು ಅಲ್ಲವೇ ಅಲ್ಲ, ಅದು ಚುನಾವಣೆಯಿಂದ ಚುನಾವಣೆಗೆ ಜಹಗೀರು ವಿಸ್ತರಣೆಯೇ. ಮುಂದೊಂದು ದಿನ ಭಾರತದಲ್ಲಿ ಪ್ರಜಾಪ್ರಭುತ್ವ ಕಳಚಿಹೋಗಿ ಮತ್ತೆ ರಾಜಾಡಳಿತ ಬರುತ್ತದೇನೋ, ಹಾಗಾಗುವುದಾದರೆ ತಮ್ಮ ಕುಟುಂಬವೇ ಅರಸಾಗಲಿ ಎನ್ನುವ ಮುಂಗಾಣ್ಕೆಯೋ ಎನ್ನುವ ಹಾಗೆ! ಪರಿಣಾಮ ಎದುರಿಗೇ ಇದೆ.
ದೇವೇಗೌಡರ ಉದ್ದೇಶ ನಿಜಕ್ಕೂ ಜಾತ್ಯತೀತ ಮನಸ್ಸಿನ, ಸಂವಿಧಾನಬದ್ಧ ಪರ್ಯಾಯ ಶಕ್ತಿಯನ್ನು ಹುಟ್ಟಿಹಾಕುವುದೇ ಆಗಿದ್ದಿದ್ದರೆ, ಅವರು ಈಗ ನಡೆದುಕೊಂಡಂತೆ ನಡೆದುಕೊಳ್ಳುತ್ತಿರಲಿಲ್ಲ. ಅವರು ತಮ್ಮ ಮೊಮ್ಮಕ್ಕಳನ್ನು ಮುಂದೆ ತರುವ ಕೆಲಸವನ್ನು ಮುಂದಕ್ಕೆ ಹಾಕುತ್ತಿದ್ದರು. ಅದರಿಂದ ಅವರ ಕುಟುಂಬಕ್ಕೆ ತುಂಬಾ ದೊಡ್ಡ ನಷ್ಟವೇನೂ ಆಗುತ್ತಿರಲಿಲ್ಲ. ಬದಲಿಗೆ ದಕ್ಷ ಅಭ್ಯರ್ಥಿಗಳನ್ನು ಹುಡುಕಿ ಅವಕಾಶ ಕೊಟ್ಟಿದ್ದರೆ ತಮ್ಮ ಪಕ್ಷದ ವರ್ಚಸ್ಸು ಇನ್ನಷ್ಟು ಬೆಳೆಯುತ್ತಿತ್ತು.
ಮೂರೂ ಕ್ಷೇತ್ರಗಳಲ್ಲಿ ಮೈತ್ರಿಯ ಅಭ್ಯರ್ಥಿಗಳೇ ಗೆಲ್ಲುತ್ತಿದ್ದರೇನೋ! ಇದನ್ನು ಬರೆಯುತ್ತಿರುವಾಗ ನನ್ನ ಬಗ್ಗೆ ನನಗೇ ನಗು ಬರುತ್ತದೆ. ಯಾವ ಆದರ್ಶವನ್ನು ಯಾರಿಂದ ನಿರೀಕ್ಷಿಸುತ್ತಿದ್ದೇವೆ ಎಂದು! ಬಿಜೆಪಿಯ ಸುಳಿವೇ ಇರದ ಮಂಡ್ಯವನ್ನು ಆ ಪಕ್ಷಕ್ಕೆ ಧಾರೆಯೆರೆದು ಕೊಟ್ಟಾಯಿತು. ಈ ರೀತಿಯ ಅಪ್ರಬುದ್ಧ, ಸ್ವಾರ್ಥ ರಾಜಕಾರಣದ ಚಾರಿತ್ರಿಕ ಪ್ರಮಾದಗಳೇ ಕರ್ನಾಟಕದಲ್ಲಿ ಬಿಜೆಪಿ ತಳವೂರಲು ಕಾರಣವಾಯ್ತು.
ಇನ್ನು ಕಾಂಗ್ರೆಸ್ಸಿಗೆ ಮತ್ತೆ ಬಿಜೆಪಿಗೆ ಅಧಿಕಾರ ಕೊಡಬಾರದು ಎನ್ನುವ ಛಲ ಮಾತಿನಲ್ಲಿ ಮಾತ್ರ ಕಂಡಿತು. ಕೃತಿಯಲ್ಲಿ ನಿರ್ಧಿಷ್ಠ ಗುರಿಯೇ ಇರಲಿಲ್ಲ ಎಂಬಂತೆ ತೋರಿತು. ಇಡೀ ದೇಶದಲ್ಲಿದ್ದ ಕಾಂಗ್ರೆಸ್ಸಿನ ಬಲಹೀನ ಸ್ಥಿತಿ ಕರ್ನಾಟಕ ಕಾಂಗ್ರೆಸ್ಸಿನ ಮೇಲೆ ಅಡ್ಡ ಪರಿಣಾಮ ಬೀರಿಯೇ ಇದ್ದಿತು. ಹೇಗಾದರೂ ಮಾಡಿ ಹಿಂದಿನ ಬಾರಿ ಗೆದ್ದ ಕ್ಷೇತ್ರಗಳನ್ನು ಉಳಿಸಿಕೊಂಡು ಲೋಕಸಭಾ ಚುನಾವಣೆಯೆಂಬ ದೈಯ್ಯವನ್ನು ಸಾಗಹಾಕುವ ಒಳಮನಸ್ಸೇ ಇಲ್ಲಿನ ಕಾಂಗ್ರೆಸ್ ನಾಯಕರಲ್ಲಿ ಕಂಡಿತು.ಈ ಮೈತ್ರಿ ಪಕ್ಷಗಳು ಮಾಡಿಕೊಂಡ ಗೊಂದಲ, ಅರಾಜಕತೆ ಮತ್ತು ಸ್ವಾರ್ಥಚಿಂತನೆಗಳಿಂದ ದೊಡ್ಡ ಲಾಭವಾಗಿದ್ದು, ಆಗುತ್ತಿರುವುದು ಬಿಜೆಪಿಗೆ. ದೊಡ್ಡ ನೈತಿಕ ನಷ್ಟವಾಗಿದ್ದು, ಆಗುವುದು ಈ ಮೈತ್ರಿ ಪಕ್ಷಗಳಿಗೆ.
ಎಲ್ಲಕ್ಕಿಂತ ಹೆಚ್ಚಾಗಿ ಈ ಮೈತ್ರಿ ಪಕ್ಷಗಳಿಂದ ದೊಡ್ಡ ಭ್ರಮನಿರಸನವಾಗಿದ್ದು ಕರ್ನಾಟಕದ ಪ್ರಗತಿಪರ ಯುವಶಕ್ತಿಗೆ ಮತ್ತು ಸಮಾಜಶಕ್ತಿಗೆ. ಕೋಮುವಾದೀ, ವಿಭಜಕ ಶಕ್ತಿಗಳು ಕರ್ನಾಟಕದಲ್ಲಿ ಬೆಳೆಯುವುದನ್ನು, ನೆಲೆಕಾಣುವುದನ್ನು ತಡೆಯಲು ಎಲ್ಲ ಪ್ರಜಾಪ್ರಭುತ್ವವಾದೀ ದಾರಿಗಳನ್ನೂ ಬಳಸಿಕೊಂಡು ಸ್ವಯಂಪ್ರೇರಿತವಾಗಿ ಸತತ ಹೋರಾಡುತ್ತಿವೆ ಈ ಶಕ್ತಿಗಳು. ಬಹುಶಃ ಈ ಮಟ್ಟಕ್ಕೆ ಟೊಂಕ ಕಟ್ಟಿ ಜನಪರವಾಗಿ, ಸಂವಿಧಾನದ ಪರವಾಗಿ ನಿಂತು ಪ್ರತಿರೋಧ ಒಡ್ಡುತ್ತಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ.
ಆ ಕಾರಣದಿಂದಲೇ ಇಲ್ಲಿ ಇಂದಿನ ಮೈತ್ರಿ ಸರ್ಕಾರಕ್ಕೂ ಅವಕಾಶವಾಯಿತು. ಇದನ್ನು ಈ ಮೈತ್ರಿಪಕ್ಷಗಳು ಮರೆಯಬಾರದು. ಆದರೆ ಇಂದು ತಮ್ಮ ನಡೆಗಳಿಂದ ಅವು ಈ ಶಕ್ತಿಗಳ ವಿಶ್ವಾಸವನ್ನು ಸಾಕಷ್ಟು ಕಳಕೊಂಡಿವೆ. ಈಗ ಈ ಮೈತ್ರಿ ಸರ್ಕಾರ ನಿಜಕ್ಕೂ ಉಳಿದುಕೊಂಡರೆ ತಾನು ಕಳಕೊಂಡ ಈ ಶಕ್ತಿಗಳ ವಿಶ್ವಾಸವನ್ನು ಮತ್ತೆ ಗಳಿಸಿಕೊಳ್ಳುವ ಪ್ರಯತ್ನ ಪಡಬೇಕು. ಮತ್ತು ಆ ಪ್ರಯತ್ನ ಪ್ರಾಮಾಣಿಕವಾಗಿರಬೇಕು, ಅಷ್ಟೇ.
– ಕೇಸರಿ ಹರವೂ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.
ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.
ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.
ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕೊರತೆಯಾಗಬಾರದು. 100 ವಿದ್ಯಾರ್ಥಿಗಳು ವಾಸಿಸುವ ಕಟ್ಟಡಕ್ಕೆ ಬದಲಾಗಿ 400 ವಿದ್ಯಾರ್ಥಿಗಳು ವಾಸ ಮಾಡುವ ಕಟ್ಟಡವನ್ನು ನಿರ್ಮಿಸಬೇಕು ಎಂದರು. ಖಬರಸ್ಥಾನಕ್ಕೆ ಮತ್ತು ಸ್ಮಶಾನಕ್ಕೆ ಜಾಗದ ಅವಶ್ಯಕತೆ ಇದ್ದರೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
ಅಂಗನವಾಡಿ ಕೇಂದ್ರಗಳನ್ನು ಅಲ್ಪಸಂಖ್ಯಾತರ ಸಮುದಾಯದ ಜನರು ಅಧಿಕವಾಗಿ ವಾಸಿಸುತ್ತಿರುವ ತಾಲ್ಲೂಕುಗಳು ಮತ್ತು ಗ್ರಾಮಗಳಲ್ಲಿ ತೆರೆಯುವುದು, ಇದರಿಂದಾಗಿ ಯೋಜನೆಯ ಪ್ರಯೋಜನೆಗಳು ಅವರುಗಳಿಗೆ ನೇರವಾಗಿ ಸಿಗುತ್ತವೆ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ವಕ್ಫ್ ಬೋರ್ಡ್ ಅಥವಾ ಯಾವುದೇ ಇಲಾಖೆಯ ಅಧೀನದಲ್ಲಿನ ನಿವೇಶನವಿದ್ದರೂ ಗುರುತಿಸಿ ಶಾಲೆ, ಕಾಲೇಜುಗಳ ಕಟ್ಟಡ ನಿರ್ಮಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಇಲಾಖೆಗಳಲ್ಲಿನ ಯೋಜನೆಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು.
ವಿವಿಧ ಇಲಾಖೆಯ ಅನುಪಾಲನಾ ವರದಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಭಕ್ತಮಾರ್ಕಡೇಶ್ವರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು.
ಸಮಾಜದ ಧಾರ್ಮಿಕ ಮುಖಂಡರು ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ವಸತಿ ಶಾಲೆಗೆ ಸೇರಿಸುವಂತಾಗಲು ಪ್ರೇರೇಪಿಸಬೇಕು. ವಸತಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದರ ಜೊತೆಗೆ ಅಗತ್ಯ ಸೌಲಭ್ಯ ಇರುವ ಬಗ್ಗೆ ತಿಳಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಮತ ಹೊಸಗೌಡ್ರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ, ಡಿಡಿಪಿಐ ಕೊಟ್ರೇಶ್, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

