ರಾಜಕೀಯ
ಸಮಾಜಶಕ್ತಿಗೆ ಭ್ರಮನಿರಸನ
ತುರ್ತು ಪರಿಸ್ಥಿತಿಯ ನಂತರದ ಚುನಾವಣೆಯಷ್ಟೇ ಮಹತ್ವದ ಚುನಾವಣೆ ಇದು ಕೆಲವರು ವಿಶ್ಲೇಷಿಸಿದ್ದರು. 2014 ರಿಂದ ಇಂದಿನವರೆಗೂ ದೇಶದಲ್ಲಿ ನಡೆದ ವಿದ್ಯಮಾನಗಳು ಮತ್ತು ಅವು ಎತ್ತಿದ ಪ್ರಶ್ನೆಗಳನ್ನು ತಿರುವಿ ಹಾಕಿದಾಗ ಅದು ನಿಜ ಎಂದೇ ಅನಿಸಿತ್ತು. ಹಾಗಿದ್ದ ಮೇಲೆ ಎಲ್ಲ ಪಕ್ಷಗಳೂ ಆ ಮಟ್ಟದ ಒಗ್ಗಟ್ಟಿನ ಹೋರಾಟಕ್ಕೆ ತಯಾರಾಗಿರಬೇಕಿತ್ತು.
ದೇಶದ ಬಿಜೆಪಿಯೇತರ ಎಲ್ಲ ನಾಯಕರುಗಳ ಹುಮ್ಮಸ್ಸು ಮೇಳೈಸಿ ದೇಶದ ಸಂಘಟಿತ ಪರ್ಯಾಯ ಶಕ್ತಿಗೆ ನಾಂದಿ ಆಯಿತು ಎನ್ನುವಂತೆ ಕುಮಾರಸ್ವಾಮಿಯವರ ಅಧಿಕಾರ ಸ್ವೀಕಾರ ವೇದಿಕೆಯಲ್ಲಿ ಸಂಭ್ರಮಿಸಲಾಯಿತು. ಆದರೆ ಆನಂತರ ಆದದ್ದು ನಾಯಿ ಬಾಲದ ಕಥೆಯೇ. ಬಿಜೆಪಿಯ ಬೆಂಬಲಿಗರು ಈಗ ಮೂರು ವರ್ಷಗಳಿಂದ ಒಂದು ಪ್ರಶ್ನೆಯನ್ನು ಕೇಳುತ್ತಲೇ ಇದ್ದರು: ‘ಮೋದಿಗೆ ಪರ್ಯಾಯ ಯಾರು? ಯಾರೂ ಇಲ್ಲವಲ್ಲಾ!’ ಎಂದು.
ಅದನ್ನು ಇಂದು ಸ್ಪಷ್ಟ ಗುರಿಯೇ ಇಲ್ಲದ, ಇದ್ದರೂ ಅದಕ್ಕೊಂದು ಅಜೆಂಡಾನೇ ಇಲ್ಲದ ಜಢತ್ವಕ್ಕೆ ಶರಣಗಿದ್ದ ಈ ಪಕ್ಷಗಳು ಒಪ್ಪಿಕೊಂಡಾಯಿತು. ಅದರ ನೈತಿಕ ಹೊಣೆಯನ್ನು ಈ ಪಕ್ಷಗಳು ಹೊರುವುದಿರಲಿ, ಅವು ದೇಶವನ್ನು ಎತ್ತ ತಳ್ಳಿದವು ಎನ್ನುವುದು ಅಕ್ಷಮ್ಯ. ಹಾಗೊಮ್ಮೆ ಬಿಜೆಪಿಯೇತರ ಸರ್ಕಾರ ರಚನೆಗೆ ಅವಕಾಶವಾಗುವಂತೆ ಫಲಿತಾಂಶ ಬಂದಿದ್ದರೂ ಅಂತಹ ಸರ್ಕಾರವನ್ನು ಈ ಪಕ್ಷಗಳು ಎಷ್ಟರ ಮಟ್ಟಿಗೆ ಸಧೃಢವಾಗಿ ನಡೆಸುತ್ತಿದ್ದವು ಎನ್ನುವ ಪ್ರಶ್ನೆ ದೊಡ್ಡದಾಗಿಯೇ ಇರುತ್ತಿತ್ತು. ಅದು ಇನ್ನೂ ಭಯಾನಕ. ಸಂಘ ಪರಿವಾರದ ಗುರಿ ಮಾತ್ರ ಸ್ವಾತಂತ್ರಪೂರ್ವದಿಂದಲೂ ಸ್ಪಷ್ಠವಾಗಿಯೇ ಇದೆ. ಹಂತಹಂತವಾಗಿ ಆ ಕಡೆಗೆ ಅದು ಸಾಗುತ್ತಲೇ ಇದೆ. ಇದು ಈ ದೇಶ-ಕಾಲದ ನಿಜ ಸ್ಥಿತಿ.
ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಕಪಾಳಕ್ಕೆ ಹೊಡೆದಂತಾ ಈ ಫಲಿತಾಂಶಕ್ಕೆ ಇಲ್ಲಿ ನಡೆದ ಅಪ್ರಬುದ್ಧ ಅಥವಾ ಸ್ವಾರ್ಥ ತುಂಬಿದ ನಡೆಗಳೇ ಕಾರಣ. ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡಿಕೊಂಡಿದ್ದೇ ಈ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು. ಯಾವುದೇ ಕಾರಣಕ್ಕೂ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬಾರದು, ಬಿಜೆಪಿಯ ಅತ್ಯಂತ ಕಡಿಮೆ ಲೋಕಸಭಾ ಸದಸ್ಯರನ್ನು ಕರ್ನಾಟಕದಿಂದ ದೆಹಲಿಗೆ ಕಳಿಸುವಂತಾಗಬೇಕು ಎನ್ನುವ ದೃಷ್ಟಿ.
ಅದಕ್ಕಾಗಿ ಕಾಂಗ್ರೆಸ್ ಮುಖ್ಯಮಂತ್ರಿ ಸ್ಥಾನವನ್ನೂ ಜೆಡಿಎಸ್ಸಿಗೆ ಕೊಟ್ಟುಬಿಟ್ಟಿತ್ತು. ರಾಷ್ಟ್ರಮಟ್ಟದಲ್ಲಿ ಬಿಜೆಪಿಯೇತರ ಪಕ್ಷಗಳು ಒಂದೇ ವೇದಿಕೆಯಲ್ಲಿ ಹೇಗೆ ಬರಲು ಸಾಧ್ಯವಾಗಲಿಲ್ಲವೋ ಹಾಗೆಯೇ ಕರ್ನಾಟಕದಲ್ಲೂ ಕೂಡ ಸೀಟು ಹಂಚಿಕೆ ವಿಚಾರದಲ್ಲಿ ಮಿತ್ರಪಕ್ಷಗಳು ಒಮ್ಮತಕ್ಕೆ ಬರಲು ಸಾಧ್ಯವೇ ಆಗಲಿಲ್ಲ. ಈ ರಾಜಕೀಯ ಆಟಗಳಿಂದ ಪ್ರಜಾಪ್ರಭುತ್ವಕ್ಕಾದ ಧಕ್ಕೆ ಅಷ್ಟಿಷ್ಟಲ್ಲ.
ದೇವೇಗೌಡರ ಎದೆಯಲ್ಲಿ ಬಿಜೆಪಿಯೇತರ ಸರ್ಕಾರದ ಉದ್ದೇಶ ಇದ್ದರೂ ಅವರು ತಮ್ಮ ಕುಟುಂಬಕ್ಕೆ ತಮ್ಮನ್ನು ಕಟ್ಟಿಹಾಕಿಕೊಳ್ಳುತ್ತಾರೆ. ಆ ಕುಟುಂಬದ ಮೂರನೇ ತಲೆಮಾರಿನ ನಿನ್ನೆಯ ಹುಡುಗರು ಇಂದು ಸ್ವಂತ ಕಾಲ ಮೇಲೆ ನಿಲ್ಲಬೇಕಾದ ಅನಿವಾರ್ಯಕ್ಕೆ ಸಿಕ್ಕಿರುವ ಯುವಕರಾಗಿಬಿಟ್ಟಿದ್ದಾರೆ. ಆ ಒಬ್ಬೊಬ್ಬರಿಗೂ ಒಂದೊಂದು ನೆಲೆ ದೊರಕಿಸುವುದು ಆ ಕುಟುಂಬದ ಜವಾಬ್ದಾರಿ. ಆ ಕುಟುಂಬಕ್ಕೆ ಗೊತ್ತಿರುವುದು, ಆಸರೆಯಾಗಿರುವುದು ರಾಜಕೀಯವೇ. ಹಾಗಾಗಿ ತನ್ನ ಹಾಸನ ಕ್ಷೇತ್ರವನ್ನೇ ಒಬ್ಬ ಮೊಮ್ಮಗನಿಗೆ ದಾನ ಮಾಡಿದ ದೇವೇಗೌಡರು ತುಮಕೂರಿಗೆ ನಡೆದರು. ಅಥವಾ ಮೊಮ್ಮಗನೇ ಕಿತ್ತುಕೊಂಡು ಕಳಿಸಿದ್ದ!
ಮತ್ತೊಬ್ಬ ಮೊಮ್ಮಗನಿಗೆ ತಾವು ಕೆಲವು ವರ್ಷಗಳಿಂದ ಅನುಕೂಲಕರ ವಾತಾವರಣ ನಿರ್ಮಿಸಿಕೊಂಡ ಹಾಗೂ ಸಧ್ಯಕ್ಕೆ ಪ್ರಬಲ ಸ್ಪರ್ಧೆಯೊಡ್ಡಬಹುದಾದ ಯಾವ ಆಕಾಂಕ್ಷಿ ಇಲ್ಲವೆಂದೇ ತಿಳಿದಿದ್ದ ಮಂಡ್ಯ ಕ್ಷೇತ್ರವನ್ನು ಆಯ್ದುಕೊಂಡರು. ಯಾವ ಮೂಲ ಉದ್ದೇಶಕ್ಕಾಗಿ ಮೈತ್ರಿ ರಾಜಕೀಯಕ್ಕೆ ಅವಕಾಶ ಮಾಡಿಕೊಂಡಿದ್ದರೋ ಆ ಉದ್ದೇಶವನ್ನು ಪಕ್ಕಕ್ಕೆ ಸರಿಸಲಾಯಿತು. ಅಥವಾ, ನಿಜಕ್ಕೂ ಮೂಲ ಉದ್ದೇಶ ಇದು ಅಲ್ಲವೇ ಅಲ್ಲ, ಅದು ಚುನಾವಣೆಯಿಂದ ಚುನಾವಣೆಗೆ ಜಹಗೀರು ವಿಸ್ತರಣೆಯೇ. ಮುಂದೊಂದು ದಿನ ಭಾರತದಲ್ಲಿ ಪ್ರಜಾಪ್ರಭುತ್ವ ಕಳಚಿಹೋಗಿ ಮತ್ತೆ ರಾಜಾಡಳಿತ ಬರುತ್ತದೇನೋ, ಹಾಗಾಗುವುದಾದರೆ ತಮ್ಮ ಕುಟುಂಬವೇ ಅರಸಾಗಲಿ ಎನ್ನುವ ಮುಂಗಾಣ್ಕೆಯೋ ಎನ್ನುವ ಹಾಗೆ! ಪರಿಣಾಮ ಎದುರಿಗೇ ಇದೆ.
ದೇವೇಗೌಡರ ಉದ್ದೇಶ ನಿಜಕ್ಕೂ ಜಾತ್ಯತೀತ ಮನಸ್ಸಿನ, ಸಂವಿಧಾನಬದ್ಧ ಪರ್ಯಾಯ ಶಕ್ತಿಯನ್ನು ಹುಟ್ಟಿಹಾಕುವುದೇ ಆಗಿದ್ದಿದ್ದರೆ, ಅವರು ಈಗ ನಡೆದುಕೊಂಡಂತೆ ನಡೆದುಕೊಳ್ಳುತ್ತಿರಲಿಲ್ಲ. ಅವರು ತಮ್ಮ ಮೊಮ್ಮಕ್ಕಳನ್ನು ಮುಂದೆ ತರುವ ಕೆಲಸವನ್ನು ಮುಂದಕ್ಕೆ ಹಾಕುತ್ತಿದ್ದರು. ಅದರಿಂದ ಅವರ ಕುಟುಂಬಕ್ಕೆ ತುಂಬಾ ದೊಡ್ಡ ನಷ್ಟವೇನೂ ಆಗುತ್ತಿರಲಿಲ್ಲ. ಬದಲಿಗೆ ದಕ್ಷ ಅಭ್ಯರ್ಥಿಗಳನ್ನು ಹುಡುಕಿ ಅವಕಾಶ ಕೊಟ್ಟಿದ್ದರೆ ತಮ್ಮ ಪಕ್ಷದ ವರ್ಚಸ್ಸು ಇನ್ನಷ್ಟು ಬೆಳೆಯುತ್ತಿತ್ತು.
ಮೂರೂ ಕ್ಷೇತ್ರಗಳಲ್ಲಿ ಮೈತ್ರಿಯ ಅಭ್ಯರ್ಥಿಗಳೇ ಗೆಲ್ಲುತ್ತಿದ್ದರೇನೋ! ಇದನ್ನು ಬರೆಯುತ್ತಿರುವಾಗ ನನ್ನ ಬಗ್ಗೆ ನನಗೇ ನಗು ಬರುತ್ತದೆ. ಯಾವ ಆದರ್ಶವನ್ನು ಯಾರಿಂದ ನಿರೀಕ್ಷಿಸುತ್ತಿದ್ದೇವೆ ಎಂದು! ಬಿಜೆಪಿಯ ಸುಳಿವೇ ಇರದ ಮಂಡ್ಯವನ್ನು ಆ ಪಕ್ಷಕ್ಕೆ ಧಾರೆಯೆರೆದು ಕೊಟ್ಟಾಯಿತು. ಈ ರೀತಿಯ ಅಪ್ರಬುದ್ಧ, ಸ್ವಾರ್ಥ ರಾಜಕಾರಣದ ಚಾರಿತ್ರಿಕ ಪ್ರಮಾದಗಳೇ ಕರ್ನಾಟಕದಲ್ಲಿ ಬಿಜೆಪಿ ತಳವೂರಲು ಕಾರಣವಾಯ್ತು.
ಇನ್ನು ಕಾಂಗ್ರೆಸ್ಸಿಗೆ ಮತ್ತೆ ಬಿಜೆಪಿಗೆ ಅಧಿಕಾರ ಕೊಡಬಾರದು ಎನ್ನುವ ಛಲ ಮಾತಿನಲ್ಲಿ ಮಾತ್ರ ಕಂಡಿತು. ಕೃತಿಯಲ್ಲಿ ನಿರ್ಧಿಷ್ಠ ಗುರಿಯೇ ಇರಲಿಲ್ಲ ಎಂಬಂತೆ ತೋರಿತು. ಇಡೀ ದೇಶದಲ್ಲಿದ್ದ ಕಾಂಗ್ರೆಸ್ಸಿನ ಬಲಹೀನ ಸ್ಥಿತಿ ಕರ್ನಾಟಕ ಕಾಂಗ್ರೆಸ್ಸಿನ ಮೇಲೆ ಅಡ್ಡ ಪರಿಣಾಮ ಬೀರಿಯೇ ಇದ್ದಿತು. ಹೇಗಾದರೂ ಮಾಡಿ ಹಿಂದಿನ ಬಾರಿ ಗೆದ್ದ ಕ್ಷೇತ್ರಗಳನ್ನು ಉಳಿಸಿಕೊಂಡು ಲೋಕಸಭಾ ಚುನಾವಣೆಯೆಂಬ ದೈಯ್ಯವನ್ನು ಸಾಗಹಾಕುವ ಒಳಮನಸ್ಸೇ ಇಲ್ಲಿನ ಕಾಂಗ್ರೆಸ್ ನಾಯಕರಲ್ಲಿ ಕಂಡಿತು.ಈ ಮೈತ್ರಿ ಪಕ್ಷಗಳು ಮಾಡಿಕೊಂಡ ಗೊಂದಲ, ಅರಾಜಕತೆ ಮತ್ತು ಸ್ವಾರ್ಥಚಿಂತನೆಗಳಿಂದ ದೊಡ್ಡ ಲಾಭವಾಗಿದ್ದು, ಆಗುತ್ತಿರುವುದು ಬಿಜೆಪಿಗೆ. ದೊಡ್ಡ ನೈತಿಕ ನಷ್ಟವಾಗಿದ್ದು, ಆಗುವುದು ಈ ಮೈತ್ರಿ ಪಕ್ಷಗಳಿಗೆ.
ಎಲ್ಲಕ್ಕಿಂತ ಹೆಚ್ಚಾಗಿ ಈ ಮೈತ್ರಿ ಪಕ್ಷಗಳಿಂದ ದೊಡ್ಡ ಭ್ರಮನಿರಸನವಾಗಿದ್ದು ಕರ್ನಾಟಕದ ಪ್ರಗತಿಪರ ಯುವಶಕ್ತಿಗೆ ಮತ್ತು ಸಮಾಜಶಕ್ತಿಗೆ. ಕೋಮುವಾದೀ, ವಿಭಜಕ ಶಕ್ತಿಗಳು ಕರ್ನಾಟಕದಲ್ಲಿ ಬೆಳೆಯುವುದನ್ನು, ನೆಲೆಕಾಣುವುದನ್ನು ತಡೆಯಲು ಎಲ್ಲ ಪ್ರಜಾಪ್ರಭುತ್ವವಾದೀ ದಾರಿಗಳನ್ನೂ ಬಳಸಿಕೊಂಡು ಸ್ವಯಂಪ್ರೇರಿತವಾಗಿ ಸತತ ಹೋರಾಡುತ್ತಿವೆ ಈ ಶಕ್ತಿಗಳು. ಬಹುಶಃ ಈ ಮಟ್ಟಕ್ಕೆ ಟೊಂಕ ಕಟ್ಟಿ ಜನಪರವಾಗಿ, ಸಂವಿಧಾನದ ಪರವಾಗಿ ನಿಂತು ಪ್ರತಿರೋಧ ಒಡ್ಡುತ್ತಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ.
ಆ ಕಾರಣದಿಂದಲೇ ಇಲ್ಲಿ ಇಂದಿನ ಮೈತ್ರಿ ಸರ್ಕಾರಕ್ಕೂ ಅವಕಾಶವಾಯಿತು. ಇದನ್ನು ಈ ಮೈತ್ರಿಪಕ್ಷಗಳು ಮರೆಯಬಾರದು. ಆದರೆ ಇಂದು ತಮ್ಮ ನಡೆಗಳಿಂದ ಅವು ಈ ಶಕ್ತಿಗಳ ವಿಶ್ವಾಸವನ್ನು ಸಾಕಷ್ಟು ಕಳಕೊಂಡಿವೆ. ಈಗ ಈ ಮೈತ್ರಿ ಸರ್ಕಾರ ನಿಜಕ್ಕೂ ಉಳಿದುಕೊಂಡರೆ ತಾನು ಕಳಕೊಂಡ ಈ ಶಕ್ತಿಗಳ ವಿಶ್ವಾಸವನ್ನು ಮತ್ತೆ ಗಳಿಸಿಕೊಳ್ಳುವ ಪ್ರಯತ್ನ ಪಡಬೇಕು. ಮತ್ತು ಆ ಪ್ರಯತ್ನ ಪ್ರಾಮಾಣಿಕವಾಗಿರಬೇಕು, ಅಷ್ಟೇ.
– ಕೇಸರಿ ಹರವೂ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


