ರಾಜಕೀಯ
ಬಿಜೆಪಿ ಅಭ್ಯರ್ಥಿಯಾಗಿ ಭಯೋತ್ಪಾದನಾ ಆರೋಪಿ-ಒಂದು ಕೇಡಿನ ಪ್ರತೀಕ
- ಚುನಾವಣಾ ಅಭ್ಯರ್ಥಿಯಾಗಿ ಪ್ರಜ್ಞಾ ಠಾಕುರ್ ಆಯ್ಕೆ ಮತದಾರರಲ್ಲಿ ಧ್ರುವೀಕರಣ ತರುವ ಉದ್ದೆಶದಿಂದ ಕೋಮುವಾದವೇ ಮುಖ್ಯ ಒತ್ತು ಹಾಕಿರುವ ಬಿಜೆಪಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬಂದಿದೆ. ಇಂತಹ ಒಂದು ವಿಭಜನಕಾರೀ ಪ್ರಚಾರದಲ್ಲಿ, ಒಬ್ಬ ಕಾವಿಧಾರಿ ಭಯೋತ್ಪಾದನಾ-ಆರೋಪಿ ಮತ್ತು ಮುಸ್ಲಿಂ-ದ್ವೇಷಿ ಬಿಜೆಪಿಯ ಚುನಾವಣಾ ಅಜೆಂಡಾದ ಒಂದು ಪ್ರತೀಕವಾಗಿದ್ದಾರೆ. ಇದು ಕೂಡ ಬಹಳ ಹೊಸದೇನಲ್ಲ. ಇನ್ನೊಬ್ಬ ಮುಸ್ಲಿಂರ ವಿರುದ್ಧ ದ್ವೇಷ ಕಾರುವ, ಕಾವಿಧಾರಿ, ಆದಿತ್ಯನಾಥರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಲಾಗಿದೆ ತಾನೇ?
ಭೋಪಾಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಜ್ಞಾ ಸಿಂಗ್ ಠಾಕುರ್ ನಾಮಕರಣ 17ನೇ ಲೋಕಸಭಾ ಚುನಾವಣೆಗಳಲ್ಲಿ ಒಂದು ಮಹತ್ವದ, ಅಶುಭಕಾರೀ ಕ್ಷಣ. ಬಿಜೆಪಿಯ ಈ ನಿರ್ಧಾರ ಈ ಚುನಾವಣೆಯಲ್ಲಿ ಅದರ ನಿಜವಾದ ವೇದಿಕೆ ಏನೆಂಬುದರ ಒಂದು ಘೋಷಣೆಯಾಗಿದೆ. ಯಾವುದೇ ಮುಲಾಜಿಲ್ಲದ ಉಗ್ರ ಹಿಂದುತ್ವ, ಮತ್ತು ಅದರೊಂದಿಗೆ ಅದರ ಎಲ್ಲ ನಕಾರಾತ್ಮಕ ತೊಡಕುಗಳು-ಇದೇ ಆ ವೇದಿಕೆ.
ಪ್ರಜ್ಞಾ ಠಾಕುರ್ 2008ರ ಮಾಲೆಗಾಂವ್ ಸ್ಫೋಟದ ಒಬ್ಬ ಆರೋಪಿ. ಈ ಸ್ಫೊಟವನ್ನು ಸಂಘಟಿಸಿದ ಗುಂಪಿನ ಸೂತ್ರಧಾರಳು ಎಂಬ ಆಪಾದನೆ ಆಕೆಯ ಮೇಲಿದೆ. ಈ ಮೊಕದ್ದಮೆಯ ಆರೋಪ ಪತ್ರ ಆರು ಜನಗಳನ್ನು ಸಾಯಿಸಿದ ಈ ಸ್ಫೋಟವನ್ನು ಉಂಟು ಮಾಡುವಲ್ಲಿ ಬಳಸಿದ ಸ್ಫೋಟಕಗಳಿಂದ ತುಂಬಿದ್ದ ಮೋಟಾರ್ ಸೈಕಲ್ ಆಕೆಯದ್ದು ಎಂದು ಹೊರಗೆಡಹಿದೆ.
ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ, ಆಕೆಯ ವಿರುದ್ಧ ಇದ್ದ ಮೊಕದ್ದಮೆಯನ್ನು ವಿಫಲಗೊಳಿಸಲು ಸಕಲ ಪ್ರಯತ್ನಗಳೂ ನಡೆದವು. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಆಕೆಯ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿಲ್ಲ ಎಂದು ನ್ಯಾಯಾಲಯಕ್ಕೆ ಹೇಳಿತು. ಆದರೆ ನ್ಯಾಯಾಲಯ ಅದನ್ನು ಒಪ್ಪದೆ ಆಕೆಯನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಆರೋಪಿಯಾಗಿಸಿದೆ. ಈಗ ಆಕೆ ವಿಚಾರಣೆಯ ನಡುವೆ ಜಾಮೀನಿನಲ್ಲಿ ಹೊರಗಿದ್ದಾರೆ.
ಇಂತಹ ಒಬ್ಬ ಭಯೋತ್ಪಾದನಾ ಆರೋಪಿಯನ್ನು ಭೋಪಾಲದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಮಾಡಿದೆ. ಈ ಎಲ್ಲ ವರ್ಷಗಳಲ್ಲಿ ಆಕೆ ತನ್ನ ಉನ್ಮತ್ತ ಹಿಂದುತ್ವ ಮತ್ತು ಮುಸ್ಲಿಂ-ದ್ವೇಷಿ ಅಭಿಪ್ರಾಯಗಳನ್ನು ಎಂದೂ ಗುಟ್ಟಾಗಿ ಇಟ್ಟಿಲ್ಲ.
ನಾಮಪತ್ರ ಸಲ್ಲಿಸಿದ ಕೂಡಲೇ ಆಕೆ ಮಹಾರಾಷ್ಟ್ರ ಪೋಲೀಸ್ ಪಡೆಯ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ದ ಮುಖ್ಯಸ್ಥರಾಗಿದ್ದ ದಿವಂಗತ ಹೇಮಂತ ಕರ್ಕರೆ ಮೇಲೆ ಎರಗಿದರು. ಕರ್ಕರೆ ಮಾಲೆಗಾಂವ್ ಸ್ಫೋಟದ ತನಿಖೆ ಮಾಡಿದ್ದ, ಮತ್ತು ಪ್ರಜ್ಞಾ ಠಾಕುರ್ ಮತ್ತು ಆಕೆಯ ಸಹಯೋಗಿಗಳನ್ನು ಬಂಧಿಸಿದ್ದ ಪೋಲೀಸ್ ಅಧಿಕಾರಿ. ತಾನು ಕರ್ಕರೆಗೆ ಶಾಪ ಹಾಕಿದ್ದೆ, ಅದರಿಂದಾಗಿ ೪೫ ದಿನಗಳೊಳಗೆ ಆತ ಭಯೋತ್ಪಾದಕ ಗುಂಡಿಗೆ ಬಲಿಯಾಗಿ ಸತ್ತರು ಎಂದು ಆಕೆ ಹೇಳಿದಳು. ಹೇಮಂತ ಕರ್ಕರೆ ಒಬ್ಬ ಧೀರ ಪೋಲೀಸ್ ಅಧಿಕಾರಿಯಾಗಿದ್ದು, ನವಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರು. ಇಂತಹ ಒಂದು ಆಘಾತಕಾರಿ ಹೇಳಿಕೆಯ ನಂತರವೂ, ಬಿಜೆಪಿ ಅದನ್ನು ಖಂಡಿಸುವ ಆಶಯವನ್ನು ತೋರಲಿಲ್ಲ, ಅದು ಆಕೆಯ ವೈಯಕ್ತಿಕ ಅಭಿಪ್ರಾಯವಷ್ಟೇ, ಬಹುಶಃ ಪೋಲೀಸರಿಂದ ಆಕೆ ಅನುಭವಿಸಿದ ಚಿತ್ರಹಿಂಸೆಯಿಂದಾಗಿ ಇರಬಹುದು ಎಂದಷ್ಟೇ ಹೇಳಿತು.
ಈ ಬಗ್ಗೆ ಬಂದ ಟೀಕೆಯಿಂದ ವಿಚಲಿತಳಾಗದ ಪ್ರಜ್ಞಾ ಠಾಕುರ್ ಇನ್ನೂ ಮುಂದೆ ಹೋಗಿ ಬಾಬ್ರಿ ಮಸೀದಿಯ ಧ್ವಂಸ ನಡೆಯುತ್ತಿದ್ದಾಗ ತಾನು ಗುಮ್ಮಟದ ತುದಿಯಲ್ಲಿದ್ದೆ, ಆ ಸ್ಥಳದಲ್ಲಿ ರಾಮ ದೇವಸ್ಥಾನ ಕಟ್ಟುವಾಗಲೂ ಆ ಸ್ಥಳದಲ್ಲಿ ಇರುತ್ತೇನೆ ಎಂದರು.
ಪ್ರಜ್ಞಾ ಠಾಕುರ್ನ್ನು ಅಭ್ಯರ್ಥಿಯಾಗಿ ನಿಲ್ಲಿಸಿದ್ದು ಒಂದು ಬಹಳ ಯೋಚನೆ ಮಾಡಿ ನಿರ್ಧರಿಸಿದ್ದ ನಡೆ ಎಂಬುದು ನರೇಂದ್ರ ಮೋದಿ ಅದನ್ನು ಸಮರ್ಥಿಸಿಕೊಂಡ ರೀತಿಯಲ್ಲೇ ಕಾಣುತ್ತದೆ. ಆಕೆ ಅಭ್ಯರ್ಥಿಯಾಗಿರುವುದು ವಸುಧೈವ ಕುಟುಂಬಕಮ್ ನಲ್ಲಿ ನಂಬಿಕೆಯಿರುವ 5000 ವರ್ಷಗಳಷ್ಟು ಹಳೆಯ ನಾಗರಿಕತೆಯ ಹೆಸರುಗೆಡಿಸುವವರಿಗೆ, ಭಯೋತ್ಪಾದಕರು ಎಂದು ಕರೆದವರಿಗೆ ನೀಡಿರುವ ಒಂದು ಉತ್ತರ ಎಂದು ಅವರು ಹೇಳಿದ್ದಾರೆ. ಇದಕ್ಕೆ ಮೊದಲು ಎಪ್ರಿಲ್ 1 ರಂದು ವರ್ಧಾದಲ್ಲಿ ಮಾತಾಡುತ್ತ ಮೋದಿ, ಹಿಂದು ಭಯೋತ್ಪಾದನೆಯ ಮಾತಾಡುವವರು ಇಡೀ ಹಿಂದೂ ಸಮುದಾಯವನ್ನು ಅವಮಾನ ಮಾಡುತ್ತಾರೆ ಎಂದು ಹೇಳಿದ್ದರು.
ಸಾವಿರ ವರ್ಷಗಳ ಇತಿಹಾಸದಲ್ಲಿ ಹಿಂದೂ ಭಯೋತ್ಪಾದನೆಯ ಕೃತ್ಯವನ್ನು ತೋರಿಸುವ ಒಂದೇ ಒಂದು ಘಟನೆ ನಡೆದಿಲ್ಲ ಎಂದು ಅವರು ಸಾರಿದರು. ಇದು ಎಲ್ಲ ತರ್ಕಗಳನ್ನೂ ಹುಸಿಯಾಗಿಸಿರುವ ಅಸಂಬದ್ಧ ಹೇಳಿಕೆ. ನಾಥುರಾಂ ಗೋಡ್ಸೆಯಿಂದ ಹಿಡಿದು 2002ರ ಗುಜರಾತ್ ಹತ್ಯಾಕಾಂಡದ ವರೆಗೆ, ನಂತರ ದಭೋಲ್ಕರ್, ಪನ್ಸರೆ, ಕಲ್ಬುರ್ಗಿ, ಗೌರಿ ಹತ್ಯೆಗಳ ವರೆಗೆ ಹಿಂದುತ್ವ ಭಯೋತ್ಪಾದನೆಯ ಒಂದು ದೊಡ್ಡ ಸಾಲೇ ಇದೆ. ಈ ಎಲ್ಲ ಹೇಳಿಕೆಗಳ ಹಿಂದೆ ಇರುವ ತಿಳುವಳಿಕೆಯೆಂದರೆ, ಹಿಂದೂಗಳು ಭಯೋತ್ಪಾದಕರಾಗಲು ಸಾಧ್ಯವಿಲ್ಲ, ಕೇವಲ ಮುಸ್ಲಿಮರು ಮಾತ್ರವೇ ಹಾಗಾಗಲು ಸಾಧ್ಯ.
ಪ್ರಜ್ಞಾ ಠಾಕುರ್ ಒಬ್ಬ ಅಮಾಯಕ ಸಾಧ್ವಿ, ಆಕೆಯನ್ನು ಒಂದು ಸುಳ್ಳು ಕೇಸಿನಲ್ಲಿ ಸಿಗಿಸಲಾಗಿದೆ ಎಂಬುದು ಅಮಿತ್ ಷಾ ಮತ್ತು ಬಿಜೆಪಿಯ ನಿಲುವು. ಆದರೆ, ಅದೇ ವೇಳೆಗೆ, ಸಂಘ ಪಡೆಗಳು ಆಕೆ ಹಿಂದೂಗಳನ್ನು ಸಾಯಿಸಿದ್ದಕ್ಕೆ ಪ್ರತೀಕಾರ ತೀರಿಸಿರುವ ಧೀರೆ ಎಂದು ವೈಭವೀಕರಿಸುತ್ತಿವೆ.
ಚುನಾವಣಾ ಅಭ್ಯರ್ಥಿಯಾಗಿ ಪ್ರಜ್ಞಾ ಠಾಕುರ್ ಆಯ್ಕೆ ಮತದಾರರಲ್ಲಿ ಧ್ರುವೀಕರಣ ತರುವ ಉದ್ದೆಶದಿಂದ ಕೋಮುವಾದವೇ ಮುಖ್ಯ ಒತ್ತಾಗಿರುವ ಬಿಜೆಪಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬಂದಿದೆ. ನರೇಂದ್ರ ಮೋದಿ ಮತ್ತು ಅಮಿತ್ ಷಾ ರಿಂದ ಹಿಡಿದು ಎಲ್ಲ ಬಿಜೆಪಿ ಮುಖಂಡರುಗಳ ಭಾಷಣಗಳು ದಿನಗಳೆದಂತೆ ಹೆಚ್ಚೆಚ್ಚು ಕರ್ಕಶಗೊಳ್ಳುತ್ತಿವೆ. ಹಿಂದೂಗಳಿಗೆ ಹೊರಗಿನ ಮತ್ತು ಒಳಗಿನ ಶತ್ರುಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಬೇಕೆಂಬ ಕರೆ ನೀಡಲಾಗುತ್ತಿದೆ; ಅಲ್ಪಸಂಖ್ಯಾತರು ಬುಡಮೇಲು ಪಾತ್ರ ವಹಿಸುತ್ತಿದ್ದಾರೆ ಎಂದು ಸಾಕಷ್ಟು ಬಹಿರಂಗವಾಗಿಯೇ ಬೆದರಿಕೆ ಹಾಕಲಾಗುತ್ತಿದೆ; ತಮ್ಮ ರಾಷ್ಟ್ರೋನ್ಮಾದದ ಅಪಪ್ರಚಾರಕ್ಕೆ ಸಶಸ್ತ್ರ ಪಡೆಗಳ ಹೆಸರನ್ನು ಬಳಸಲಾಗುತ್ತಿದೆ; ಮತ್ತು ನಾಗರಿಕತ್ವ(ತಿದ್ದುಪಡಿ) ಮಸೂದೆ ಹಾಗೂ ರಾಷ್ಟ್ರೀಯ ನಾಗರಿಕರ ದಾಖಲೆ(ಎನ್ಆರ್ಸಿ) ಹೊರಗಿನವರನ್ನು ಹೊರಹಾಕುವ ಸಾಧನಗಳು ಎಂದು ಬಿಂಬಿಸಲಾಗುತ್ತಿದೆ.
ಇಂತಹ ಒಂದು ವಿಭಜನಕಾರೀ ಪ್ರಚಾರದಲ್ಲಿ, ಒಬ್ಬ ಕಾವಿಧಾರಿ ಭಯೋತ್ಪಾದನಾ-ಆರೋಪಿ ಮತ್ತು ಮುಸ್ಲಿಂ-ದ್ವೇಷಿ ಬಿಜೆಪಿಯ ಚುನಾವಣಾ ಅಜೆಂಡಾದ ಒಂದು ಪ್ರತೀಕವಾಗಿದ್ದಾರೆ. ಇದು ಕೂಡ ಬಹಳ ಹೊಸದೇನಲ್ಲ. ಇನ್ನೊಬ್ಬ ಮುಸ್ಲಿಂರ ವಿರುದ್ಧ ದ್ವೇಷ ಕಾರುವ, ಕಾವಿಧಾರಿ, ಆದಿತ್ಯನಾಥರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಲಾಗಿದೆ ತಾನೇ?
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯನ್ನು ನಿಜವಾಗಿಯೂ ಬಿಟ್ಟೇ ಬಿಡಲಾಗಿದೆ. ಅದರ ಜಾಗದಲ್ಲಿ ಒಂದು ಬಹಿರಂಗ ಹಿಂದುತ್ವ ಕೋಮುವಾದಿ-ಮಿಲಿಟರಿಶಾಹಿಮಾದರಿ-ಸಂಕುಚಿತವಾದೀ ಮನವಿ ಬಂದಿದೆ. ಇದು, ಮೋದಿ ವಿಕಾಸದ ಮಾತಾಡುವವರು ಎಂಬ ನಂಬಿಕೆಗೆ ಜೋತು ಬಿದ್ದಿರುವವರನ್ನೂ ಬೆಚ್ಚಿ ಬೀಳಿಸುವಂತದ್ದು. ಇಂತಹ ಭ್ರಮೆಗಳಿಗೆ ಈಗ ಯಾವ ಅವಕಾಶವೂ ಉಳಿದಿಲ್ಲ. ದೇಶವನ್ನು ಉಳಿಸುವ ಏಕೈಕ ದಾರಿಯೆಂದರೆ, ಬಿಜೆಪಿ ಮತ್ತು ಮೋದಿ ಸೋಲುವಂತೆ ಮಾಡುವುದು.
( ಈ ವಾರದ ಜನಶಕ್ತಿವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
–ಪ್ರಕಾಶ ಕಾರಟ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.
ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.
ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.
ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕೊರತೆಯಾಗಬಾರದು. 100 ವಿದ್ಯಾರ್ಥಿಗಳು ವಾಸಿಸುವ ಕಟ್ಟಡಕ್ಕೆ ಬದಲಾಗಿ 400 ವಿದ್ಯಾರ್ಥಿಗಳು ವಾಸ ಮಾಡುವ ಕಟ್ಟಡವನ್ನು ನಿರ್ಮಿಸಬೇಕು ಎಂದರು. ಖಬರಸ್ಥಾನಕ್ಕೆ ಮತ್ತು ಸ್ಮಶಾನಕ್ಕೆ ಜಾಗದ ಅವಶ್ಯಕತೆ ಇದ್ದರೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
ಅಂಗನವಾಡಿ ಕೇಂದ್ರಗಳನ್ನು ಅಲ್ಪಸಂಖ್ಯಾತರ ಸಮುದಾಯದ ಜನರು ಅಧಿಕವಾಗಿ ವಾಸಿಸುತ್ತಿರುವ ತಾಲ್ಲೂಕುಗಳು ಮತ್ತು ಗ್ರಾಮಗಳಲ್ಲಿ ತೆರೆಯುವುದು, ಇದರಿಂದಾಗಿ ಯೋಜನೆಯ ಪ್ರಯೋಜನೆಗಳು ಅವರುಗಳಿಗೆ ನೇರವಾಗಿ ಸಿಗುತ್ತವೆ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ವಕ್ಫ್ ಬೋರ್ಡ್ ಅಥವಾ ಯಾವುದೇ ಇಲಾಖೆಯ ಅಧೀನದಲ್ಲಿನ ನಿವೇಶನವಿದ್ದರೂ ಗುರುತಿಸಿ ಶಾಲೆ, ಕಾಲೇಜುಗಳ ಕಟ್ಟಡ ನಿರ್ಮಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಇಲಾಖೆಗಳಲ್ಲಿನ ಯೋಜನೆಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು.
ವಿವಿಧ ಇಲಾಖೆಯ ಅನುಪಾಲನಾ ವರದಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಭಕ್ತಮಾರ್ಕಡೇಶ್ವರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು.
ಸಮಾಜದ ಧಾರ್ಮಿಕ ಮುಖಂಡರು ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ವಸತಿ ಶಾಲೆಗೆ ಸೇರಿಸುವಂತಾಗಲು ಪ್ರೇರೇಪಿಸಬೇಕು. ವಸತಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದರ ಜೊತೆಗೆ ಅಗತ್ಯ ಸೌಲಭ್ಯ ಇರುವ ಬಗ್ಗೆ ತಿಳಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಮತ ಹೊಸಗೌಡ್ರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ, ಡಿಡಿಪಿಐ ಕೊಟ್ರೇಶ್, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ1 day agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

