ರಾಜಕೀಯ
ಬಿಜೆಪಿ ಅಭ್ಯರ್ಥಿಯಾಗಿ ಭಯೋತ್ಪಾದನಾ ಆರೋಪಿ-ಒಂದು ಕೇಡಿನ ಪ್ರತೀಕ
- ಚುನಾವಣಾ ಅಭ್ಯರ್ಥಿಯಾಗಿ ಪ್ರಜ್ಞಾ ಠಾಕುರ್ ಆಯ್ಕೆ ಮತದಾರರಲ್ಲಿ ಧ್ರುವೀಕರಣ ತರುವ ಉದ್ದೆಶದಿಂದ ಕೋಮುವಾದವೇ ಮುಖ್ಯ ಒತ್ತು ಹಾಕಿರುವ ಬಿಜೆಪಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬಂದಿದೆ. ಇಂತಹ ಒಂದು ವಿಭಜನಕಾರೀ ಪ್ರಚಾರದಲ್ಲಿ, ಒಬ್ಬ ಕಾವಿಧಾರಿ ಭಯೋತ್ಪಾದನಾ-ಆರೋಪಿ ಮತ್ತು ಮುಸ್ಲಿಂ-ದ್ವೇಷಿ ಬಿಜೆಪಿಯ ಚುನಾವಣಾ ಅಜೆಂಡಾದ ಒಂದು ಪ್ರತೀಕವಾಗಿದ್ದಾರೆ. ಇದು ಕೂಡ ಬಹಳ ಹೊಸದೇನಲ್ಲ. ಇನ್ನೊಬ್ಬ ಮುಸ್ಲಿಂರ ವಿರುದ್ಧ ದ್ವೇಷ ಕಾರುವ, ಕಾವಿಧಾರಿ, ಆದಿತ್ಯನಾಥರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಲಾಗಿದೆ ತಾನೇ?
ಭೋಪಾಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಜ್ಞಾ ಸಿಂಗ್ ಠಾಕುರ್ ನಾಮಕರಣ 17ನೇ ಲೋಕಸಭಾ ಚುನಾವಣೆಗಳಲ್ಲಿ ಒಂದು ಮಹತ್ವದ, ಅಶುಭಕಾರೀ ಕ್ಷಣ. ಬಿಜೆಪಿಯ ಈ ನಿರ್ಧಾರ ಈ ಚುನಾವಣೆಯಲ್ಲಿ ಅದರ ನಿಜವಾದ ವೇದಿಕೆ ಏನೆಂಬುದರ ಒಂದು ಘೋಷಣೆಯಾಗಿದೆ. ಯಾವುದೇ ಮುಲಾಜಿಲ್ಲದ ಉಗ್ರ ಹಿಂದುತ್ವ, ಮತ್ತು ಅದರೊಂದಿಗೆ ಅದರ ಎಲ್ಲ ನಕಾರಾತ್ಮಕ ತೊಡಕುಗಳು-ಇದೇ ಆ ವೇದಿಕೆ.
ಪ್ರಜ್ಞಾ ಠಾಕುರ್ 2008ರ ಮಾಲೆಗಾಂವ್ ಸ್ಫೋಟದ ಒಬ್ಬ ಆರೋಪಿ. ಈ ಸ್ಫೊಟವನ್ನು ಸಂಘಟಿಸಿದ ಗುಂಪಿನ ಸೂತ್ರಧಾರಳು ಎಂಬ ಆಪಾದನೆ ಆಕೆಯ ಮೇಲಿದೆ. ಈ ಮೊಕದ್ದಮೆಯ ಆರೋಪ ಪತ್ರ ಆರು ಜನಗಳನ್ನು ಸಾಯಿಸಿದ ಈ ಸ್ಫೋಟವನ್ನು ಉಂಟು ಮಾಡುವಲ್ಲಿ ಬಳಸಿದ ಸ್ಫೋಟಕಗಳಿಂದ ತುಂಬಿದ್ದ ಮೋಟಾರ್ ಸೈಕಲ್ ಆಕೆಯದ್ದು ಎಂದು ಹೊರಗೆಡಹಿದೆ.
ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ, ಆಕೆಯ ವಿರುದ್ಧ ಇದ್ದ ಮೊಕದ್ದಮೆಯನ್ನು ವಿಫಲಗೊಳಿಸಲು ಸಕಲ ಪ್ರಯತ್ನಗಳೂ ನಡೆದವು. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಆಕೆಯ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿಲ್ಲ ಎಂದು ನ್ಯಾಯಾಲಯಕ್ಕೆ ಹೇಳಿತು. ಆದರೆ ನ್ಯಾಯಾಲಯ ಅದನ್ನು ಒಪ್ಪದೆ ಆಕೆಯನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಆರೋಪಿಯಾಗಿಸಿದೆ. ಈಗ ಆಕೆ ವಿಚಾರಣೆಯ ನಡುವೆ ಜಾಮೀನಿನಲ್ಲಿ ಹೊರಗಿದ್ದಾರೆ.
ಇಂತಹ ಒಬ್ಬ ಭಯೋತ್ಪಾದನಾ ಆರೋಪಿಯನ್ನು ಭೋಪಾಲದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಮಾಡಿದೆ. ಈ ಎಲ್ಲ ವರ್ಷಗಳಲ್ಲಿ ಆಕೆ ತನ್ನ ಉನ್ಮತ್ತ ಹಿಂದುತ್ವ ಮತ್ತು ಮುಸ್ಲಿಂ-ದ್ವೇಷಿ ಅಭಿಪ್ರಾಯಗಳನ್ನು ಎಂದೂ ಗುಟ್ಟಾಗಿ ಇಟ್ಟಿಲ್ಲ.
ನಾಮಪತ್ರ ಸಲ್ಲಿಸಿದ ಕೂಡಲೇ ಆಕೆ ಮಹಾರಾಷ್ಟ್ರ ಪೋಲೀಸ್ ಪಡೆಯ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ದ ಮುಖ್ಯಸ್ಥರಾಗಿದ್ದ ದಿವಂಗತ ಹೇಮಂತ ಕರ್ಕರೆ ಮೇಲೆ ಎರಗಿದರು. ಕರ್ಕರೆ ಮಾಲೆಗಾಂವ್ ಸ್ಫೋಟದ ತನಿಖೆ ಮಾಡಿದ್ದ, ಮತ್ತು ಪ್ರಜ್ಞಾ ಠಾಕುರ್ ಮತ್ತು ಆಕೆಯ ಸಹಯೋಗಿಗಳನ್ನು ಬಂಧಿಸಿದ್ದ ಪೋಲೀಸ್ ಅಧಿಕಾರಿ. ತಾನು ಕರ್ಕರೆಗೆ ಶಾಪ ಹಾಕಿದ್ದೆ, ಅದರಿಂದಾಗಿ ೪೫ ದಿನಗಳೊಳಗೆ ಆತ ಭಯೋತ್ಪಾದಕ ಗುಂಡಿಗೆ ಬಲಿಯಾಗಿ ಸತ್ತರು ಎಂದು ಆಕೆ ಹೇಳಿದಳು. ಹೇಮಂತ ಕರ್ಕರೆ ಒಬ್ಬ ಧೀರ ಪೋಲೀಸ್ ಅಧಿಕಾರಿಯಾಗಿದ್ದು, ನವಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರು. ಇಂತಹ ಒಂದು ಆಘಾತಕಾರಿ ಹೇಳಿಕೆಯ ನಂತರವೂ, ಬಿಜೆಪಿ ಅದನ್ನು ಖಂಡಿಸುವ ಆಶಯವನ್ನು ತೋರಲಿಲ್ಲ, ಅದು ಆಕೆಯ ವೈಯಕ್ತಿಕ ಅಭಿಪ್ರಾಯವಷ್ಟೇ, ಬಹುಶಃ ಪೋಲೀಸರಿಂದ ಆಕೆ ಅನುಭವಿಸಿದ ಚಿತ್ರಹಿಂಸೆಯಿಂದಾಗಿ ಇರಬಹುದು ಎಂದಷ್ಟೇ ಹೇಳಿತು.
ಈ ಬಗ್ಗೆ ಬಂದ ಟೀಕೆಯಿಂದ ವಿಚಲಿತಳಾಗದ ಪ್ರಜ್ಞಾ ಠಾಕುರ್ ಇನ್ನೂ ಮುಂದೆ ಹೋಗಿ ಬಾಬ್ರಿ ಮಸೀದಿಯ ಧ್ವಂಸ ನಡೆಯುತ್ತಿದ್ದಾಗ ತಾನು ಗುಮ್ಮಟದ ತುದಿಯಲ್ಲಿದ್ದೆ, ಆ ಸ್ಥಳದಲ್ಲಿ ರಾಮ ದೇವಸ್ಥಾನ ಕಟ್ಟುವಾಗಲೂ ಆ ಸ್ಥಳದಲ್ಲಿ ಇರುತ್ತೇನೆ ಎಂದರು.
ಪ್ರಜ್ಞಾ ಠಾಕುರ್ನ್ನು ಅಭ್ಯರ್ಥಿಯಾಗಿ ನಿಲ್ಲಿಸಿದ್ದು ಒಂದು ಬಹಳ ಯೋಚನೆ ಮಾಡಿ ನಿರ್ಧರಿಸಿದ್ದ ನಡೆ ಎಂಬುದು ನರೇಂದ್ರ ಮೋದಿ ಅದನ್ನು ಸಮರ್ಥಿಸಿಕೊಂಡ ರೀತಿಯಲ್ಲೇ ಕಾಣುತ್ತದೆ. ಆಕೆ ಅಭ್ಯರ್ಥಿಯಾಗಿರುವುದು ವಸುಧೈವ ಕುಟುಂಬಕಮ್ ನಲ್ಲಿ ನಂಬಿಕೆಯಿರುವ 5000 ವರ್ಷಗಳಷ್ಟು ಹಳೆಯ ನಾಗರಿಕತೆಯ ಹೆಸರುಗೆಡಿಸುವವರಿಗೆ, ಭಯೋತ್ಪಾದಕರು ಎಂದು ಕರೆದವರಿಗೆ ನೀಡಿರುವ ಒಂದು ಉತ್ತರ ಎಂದು ಅವರು ಹೇಳಿದ್ದಾರೆ. ಇದಕ್ಕೆ ಮೊದಲು ಎಪ್ರಿಲ್ 1 ರಂದು ವರ್ಧಾದಲ್ಲಿ ಮಾತಾಡುತ್ತ ಮೋದಿ, ಹಿಂದು ಭಯೋತ್ಪಾದನೆಯ ಮಾತಾಡುವವರು ಇಡೀ ಹಿಂದೂ ಸಮುದಾಯವನ್ನು ಅವಮಾನ ಮಾಡುತ್ತಾರೆ ಎಂದು ಹೇಳಿದ್ದರು.
ಸಾವಿರ ವರ್ಷಗಳ ಇತಿಹಾಸದಲ್ಲಿ ಹಿಂದೂ ಭಯೋತ್ಪಾದನೆಯ ಕೃತ್ಯವನ್ನು ತೋರಿಸುವ ಒಂದೇ ಒಂದು ಘಟನೆ ನಡೆದಿಲ್ಲ ಎಂದು ಅವರು ಸಾರಿದರು. ಇದು ಎಲ್ಲ ತರ್ಕಗಳನ್ನೂ ಹುಸಿಯಾಗಿಸಿರುವ ಅಸಂಬದ್ಧ ಹೇಳಿಕೆ. ನಾಥುರಾಂ ಗೋಡ್ಸೆಯಿಂದ ಹಿಡಿದು 2002ರ ಗುಜರಾತ್ ಹತ್ಯಾಕಾಂಡದ ವರೆಗೆ, ನಂತರ ದಭೋಲ್ಕರ್, ಪನ್ಸರೆ, ಕಲ್ಬುರ್ಗಿ, ಗೌರಿ ಹತ್ಯೆಗಳ ವರೆಗೆ ಹಿಂದುತ್ವ ಭಯೋತ್ಪಾದನೆಯ ಒಂದು ದೊಡ್ಡ ಸಾಲೇ ಇದೆ. ಈ ಎಲ್ಲ ಹೇಳಿಕೆಗಳ ಹಿಂದೆ ಇರುವ ತಿಳುವಳಿಕೆಯೆಂದರೆ, ಹಿಂದೂಗಳು ಭಯೋತ್ಪಾದಕರಾಗಲು ಸಾಧ್ಯವಿಲ್ಲ, ಕೇವಲ ಮುಸ್ಲಿಮರು ಮಾತ್ರವೇ ಹಾಗಾಗಲು ಸಾಧ್ಯ.
ಪ್ರಜ್ಞಾ ಠಾಕುರ್ ಒಬ್ಬ ಅಮಾಯಕ ಸಾಧ್ವಿ, ಆಕೆಯನ್ನು ಒಂದು ಸುಳ್ಳು ಕೇಸಿನಲ್ಲಿ ಸಿಗಿಸಲಾಗಿದೆ ಎಂಬುದು ಅಮಿತ್ ಷಾ ಮತ್ತು ಬಿಜೆಪಿಯ ನಿಲುವು. ಆದರೆ, ಅದೇ ವೇಳೆಗೆ, ಸಂಘ ಪಡೆಗಳು ಆಕೆ ಹಿಂದೂಗಳನ್ನು ಸಾಯಿಸಿದ್ದಕ್ಕೆ ಪ್ರತೀಕಾರ ತೀರಿಸಿರುವ ಧೀರೆ ಎಂದು ವೈಭವೀಕರಿಸುತ್ತಿವೆ.
ಚುನಾವಣಾ ಅಭ್ಯರ್ಥಿಯಾಗಿ ಪ್ರಜ್ಞಾ ಠಾಕುರ್ ಆಯ್ಕೆ ಮತದಾರರಲ್ಲಿ ಧ್ರುವೀಕರಣ ತರುವ ಉದ್ದೆಶದಿಂದ ಕೋಮುವಾದವೇ ಮುಖ್ಯ ಒತ್ತಾಗಿರುವ ಬಿಜೆಪಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬಂದಿದೆ. ನರೇಂದ್ರ ಮೋದಿ ಮತ್ತು ಅಮಿತ್ ಷಾ ರಿಂದ ಹಿಡಿದು ಎಲ್ಲ ಬಿಜೆಪಿ ಮುಖಂಡರುಗಳ ಭಾಷಣಗಳು ದಿನಗಳೆದಂತೆ ಹೆಚ್ಚೆಚ್ಚು ಕರ್ಕಶಗೊಳ್ಳುತ್ತಿವೆ. ಹಿಂದೂಗಳಿಗೆ ಹೊರಗಿನ ಮತ್ತು ಒಳಗಿನ ಶತ್ರುಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಬೇಕೆಂಬ ಕರೆ ನೀಡಲಾಗುತ್ತಿದೆ; ಅಲ್ಪಸಂಖ್ಯಾತರು ಬುಡಮೇಲು ಪಾತ್ರ ವಹಿಸುತ್ತಿದ್ದಾರೆ ಎಂದು ಸಾಕಷ್ಟು ಬಹಿರಂಗವಾಗಿಯೇ ಬೆದರಿಕೆ ಹಾಕಲಾಗುತ್ತಿದೆ; ತಮ್ಮ ರಾಷ್ಟ್ರೋನ್ಮಾದದ ಅಪಪ್ರಚಾರಕ್ಕೆ ಸಶಸ್ತ್ರ ಪಡೆಗಳ ಹೆಸರನ್ನು ಬಳಸಲಾಗುತ್ತಿದೆ; ಮತ್ತು ನಾಗರಿಕತ್ವ(ತಿದ್ದುಪಡಿ) ಮಸೂದೆ ಹಾಗೂ ರಾಷ್ಟ್ರೀಯ ನಾಗರಿಕರ ದಾಖಲೆ(ಎನ್ಆರ್ಸಿ) ಹೊರಗಿನವರನ್ನು ಹೊರಹಾಕುವ ಸಾಧನಗಳು ಎಂದು ಬಿಂಬಿಸಲಾಗುತ್ತಿದೆ.
ಇಂತಹ ಒಂದು ವಿಭಜನಕಾರೀ ಪ್ರಚಾರದಲ್ಲಿ, ಒಬ್ಬ ಕಾವಿಧಾರಿ ಭಯೋತ್ಪಾದನಾ-ಆರೋಪಿ ಮತ್ತು ಮುಸ್ಲಿಂ-ದ್ವೇಷಿ ಬಿಜೆಪಿಯ ಚುನಾವಣಾ ಅಜೆಂಡಾದ ಒಂದು ಪ್ರತೀಕವಾಗಿದ್ದಾರೆ. ಇದು ಕೂಡ ಬಹಳ ಹೊಸದೇನಲ್ಲ. ಇನ್ನೊಬ್ಬ ಮುಸ್ಲಿಂರ ವಿರುದ್ಧ ದ್ವೇಷ ಕಾರುವ, ಕಾವಿಧಾರಿ, ಆದಿತ್ಯನಾಥರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಲಾಗಿದೆ ತಾನೇ?
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯನ್ನು ನಿಜವಾಗಿಯೂ ಬಿಟ್ಟೇ ಬಿಡಲಾಗಿದೆ. ಅದರ ಜಾಗದಲ್ಲಿ ಒಂದು ಬಹಿರಂಗ ಹಿಂದುತ್ವ ಕೋಮುವಾದಿ-ಮಿಲಿಟರಿಶಾಹಿಮಾದರಿ-ಸಂಕುಚಿತವಾದೀ ಮನವಿ ಬಂದಿದೆ. ಇದು, ಮೋದಿ ವಿಕಾಸದ ಮಾತಾಡುವವರು ಎಂಬ ನಂಬಿಕೆಗೆ ಜೋತು ಬಿದ್ದಿರುವವರನ್ನೂ ಬೆಚ್ಚಿ ಬೀಳಿಸುವಂತದ್ದು. ಇಂತಹ ಭ್ರಮೆಗಳಿಗೆ ಈಗ ಯಾವ ಅವಕಾಶವೂ ಉಳಿದಿಲ್ಲ. ದೇಶವನ್ನು ಉಳಿಸುವ ಏಕೈಕ ದಾರಿಯೆಂದರೆ, ಬಿಜೆಪಿ ಮತ್ತು ಮೋದಿ ಸೋಲುವಂತೆ ಮಾಡುವುದು.
( ಈ ವಾರದ ಜನಶಕ್ತಿವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
–ಪ್ರಕಾಶ ಕಾರಟ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.




