ದಿನದ ಸುದ್ದಿ
ಮೋದಿ ಸರ್ಕಾರದ ಮೂರು ರೈತ ವಿರೋಧಿ ಮರಣಶಾಸನಗಳು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/12/farmers_protest_suddidina-754.jpg&description=ಮೋದಿ ಸರ್ಕಾರದ ಮೂರು ರೈತ ವಿರೋಧಿ ಮರಣಶಾಸನಗಳು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/12/farmers_protest_suddidina-754.jpg&description=ಮೋದಿ ಸರ್ಕಾರದ ಮೂರು ರೈತ ವಿರೋಧಿ ಮರಣಶಾಸನಗಳು', 'pinterestShare', 'width=750,height=350'); return false;" title="Pin This Post">
- ಶಿವಸುಂದರ್
ಭಾರತದ ರೈತಾಪಿಯನ್ನು ಕಳೆದ 70 ವರ್ಷಗಳಿಂದ ಬಂಧನದಲ್ಲಿಟ್ಟಿದ್ದ ಎಲ್ಲಾ ಸಂಕೋಲೆಗಳಿಂದ ಬಿಡುಗಡೆ ಮಾಡಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದ ಮುಸುಕನ್ನು ಹೊದ್ದಿದ್ದ, ಆದರೆ ಆದರೆ ರೈತ ಬದುಕನ್ನು ಬಾಣಲೆಯಿಂದ ಬೆಂಕಿಗೆ ತಳ್ಳುವಂತ ಮೂರು ರೈತ ವಿರೋಧಿ ಸುಗ್ರೀವಾಜ್ನೆಗಳಿಗೆ ಕಳೆದ ವಾರ ಮೋದಿ ಸರ್ಕಾರ ಅತ್ಯಂತ ಅಪ್ರಜಾತಾಂತ್ರಿಕವಾಗಿ ಸದನದ ಎರಡೂ ಮನೆಗಳಲ್ಲಿ ಅನುಮೋದನೆ ದಕ್ಕಿಸಿಕೊಂಡಿದೆ. ಲೋಕಸಭೆಯಲ್ಲಿ ಸಾಮ, ದಾನ, ಬೇಧದ ಉಪಾಯಗಳನ್ನು ಬಳಸಿದರೆ ರಾಜ್ಯಸಭೆಯಲ್ಲಂತೂ ದಂಡೋಪಾಯವನ್ನೂ ಬಳಸಿದೆ.
ಇನ್ನು ನಮ್ಮ ರಾಷ್ಟ್ರಪತಿಯವರಂತೂ ಹೇಗೂ ಮೋದಿ ಸರ್ಕಾರದ ನೀತಿಗಳಿಗೆ ಮಧ್ಯರಾತ್ರಿಯಲ್ಲೂ ನಿದ್ದೆಗಣ್ಣಿನಲ್ಲಿ ಸಹಿಹಾಕಲು ಸಿದ್ದರಿದ್ದೇ ಇರುತ್ತಾರೆ. ಆದ್ದರಿಂದ ಸ್ವತಂತ್ರ ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ರೈತ ವಿರೋಧಿ ಕಾಯಿದೆಗಳನ್ನು ಜಾರಿ ಮಾಡಿದ ಕೀರ್ತಿಯೂ ಸಹ ಮೋದಿ ಸರ್ಕಾರಕ್ಕೆ ದಕ್ಕಲಿದೆ.
ಹಾಗೆ ನೋಡಿದರೆ ಸರ್ಕಾರ ಹೇಳುವ ಪ್ರಕಾರ ಈ ಮಸೂದೆಗಳು ರೈತ ಪರವಾಗಿದ್ದಲ್ಲಿ ಎರಡೂ ಸದನಗಳಲ್ಲಿ ಚರ್ಚೆ ಮಾಡಿ ವಿರೋಧ ಪಕ್ಷಗಳನ್ನು ಬಯಲುಗೊಳಿಸಿ ಇಡೀ ರಾಷ್ಟ್ರಕ್ಕೆ ತಮ್ಮ ಸದಿಂಗಿತವನ್ನು ಸಾಬೀತುಪಡಿಸಬಹುದಾಗಿತ್ತು, ಸರ್ಕಾರ ಅಂತಹ ಯಾವುದೇ ಪ್ರಜಾತಾಂತ್ರಿಕ ಪ್ರಕ್ರಿಯೆಗಳಿಗೂ ಮುಂದಾಗದೆ ಕೋವಿಡ್ ಸಂದರ್ಭವನ್ನು ಬಳಸಿಕೊಂಡು ಪ್ರಜಾತಂತ್ರಕ್ಕೆ ಮಾಸ್ಕ್ ತೊಡಿಸಿ ಈ ಮರಣಶಾಸನಗಳನ್ನು ಜಾರಿ ಮಾಡಿರುವುದು ಸರ್ಕಾರದ ದುಷ್ಟ ಉದ್ದೇಶಗಳಿಗೆ ಒಂದು ಮಹತ್ವದ ಪುರಾವೆಯೇ ಆಗಿದೆ.
ಈ ಮೂರೂ ಶಾಸನಗಳ ಮೇಲ್ನೋಟದ ಓದು ಅನುಮಾನವನ್ನು ಹುಟ್ಟಿಸಿದರೆ ಮಸೂದೆಯ ಪೂರ್ಣ ವಿವರಗಳು ಆತಂಕವನ್ನೇ ಹುಟ್ಟಿಸುತ್ತದೆ. ಮೋದಿ ಸರ್ಕಾರದ ರಾಜಕೀಯಕ್ಕೆ ತಕ್ಕನಾಗಿ ಈ ಮಸೂದೆಗಳ ಒಳತಿರುಳಿಗೆ ತದ್ವಿರುದ್ಧವಾದ ಅರ್ಥವನ್ನು ಸ್ಪುರಿಸುವ ಹೆಸರುಗಳನ್ನು ಈ ಮೂರೂ ಮಸೂದೆಗಳಿಗೆ ಇಡಲಾಗಿದೆ.
ಸರಳವಾಗಿ ಆ ಮೂರು ಮಸೂದೆಗಳನ್ನುAPMC ಯನ್ನು ಬದಿಗೆ ಸರಿಸುವ ಕಾಯಿದೆ .ಕಾಂಟ್ರಾಕ್ಟ್ ಫಾರ್ಮಿಂಗ್ ಜಾರಿ ಮಾಡುವ ಕಾಯಿದೆ.ಬೃಹತ್ ಕೃಷಿ ಕಂಪನಿಗಳಿಗೆ ನಮ್ಮ ದೇಶದ ಆಹಾರ ಸರಕುಗಳನ್ನು ದಾಸ್ತಾನು ಮಾಡಿಟ್ಟುಕೊಳ್ಳಲು ಅವಕಾಶ ಕೊಡುವ ಕಾಯಿದೆ ಎಂದು ಹೇಳಬಹುದು.
01. APMC ಯನ್ನು ಮೂಲೆಗುಂಪು ಮಾಡುವ ಮಸೂದೆ
ಸರ್ಕಾರದ ಪರಿಭಾಷೆಯಲ್ಲಿ ಈ ಮಸೂದೆಗೆ Farmers Produce Trade and Commerce (Promotion And Facilitation) Bill 2020 ಎಂದು ಕರೆಯಲಾಗುತ್ತದೆ. ಅಂದರೆ ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯಗಳಿಗೆ ಉತ್ತೇಜನ ಮತ್ತು ಸೌಕರ್ಯ ಕಲ್ಪಿಸಿ ಕೊಡುವ ಮಸೂದೆ ಎಂದರ್ಥ.
ಮೇಲ್ನೋಟಕ್ಕೆ ರೈತಪರ ಧ್ವನಿಯಲ್ಲಿರುವ ಈ ಮಸೂದೆಯು ನಿಜಕ್ಕೂ ರೈತರ ಉತ್ಪನ್ನಗಳ ವಾಣಿಜ್ಯದಲ್ಲಿ ರೈತರಿಗೆ ಸೌಕರ್ಯವನ್ನೂ ಉತ್ತೇಜನವನ್ನೂ ನೀಡಲಿದೆಯೇ?
ರೈತರು ತಮ್ಮ ಉತ್ಪನ್ನಗಳನ್ನು ಮಾರಾಟಮಾಡಲು ಹಾಗೂ ಖಚಿತವಾದ ಆದಾಯವನ್ನು ಖಾತರಿ ಮಾಡುವ ಸಲುವಾಗಿಯೇ ರೈತರು, ಮಧ್ಯವರ್ತಿ ದಲ್ಲಾಳಿಗಳೂ ಹಾಗೂ ವ್ಯಾಪಾರಿಗಳನ್ನು ಒಳಗೊಂಡ APMC- ಕೃಷಿ ಉತ್ಪನ್ನ ಮಾರಾಟ ಸಮಿತಿಗಳು ರೂಪುಗೊಂಡವು. ಸರ್ಕಾರವು ಈ APMC ಹಾಗೂ ಮಂಡಿಗಳ ಮೂಲಕ ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು (MSP)ಯನ್ನು ಕೊಟ್ಟು ಅವರ ಸರಕುಗಳನ್ನು ಖರೀದಿಸುತ್ತಿತ್ತು.
ಹಾಗೆ ರೈತರಿಂದ ಖರೀದಿಸಿದ ಧಾನ್ಯಗಳ ಮೂಲಕವೇ ದೇಶಾದ್ಯಂತ ಬಡಜನರಿಗೆ ರಿಯಾಯತಿ ದರದಲ್ಲಿ ಆಹಾರ ಧಾನ್ಯಗಳನ್ಜು ಸರಬರಾಜು ಮಾಡಿ ಈ ದೇಶದ ಜನರ ಆಹಾರ ಭದ್ರತೆಯನ್ನು ಖಾತರಿಗೊಳಿಸುತ್ತಿತ್ತು. 2013ರಲ್ಲಿ ಜಾರಿಗೆ ಬಂದ ಆಹಾರ ಭದ್ರತಾ ಕಾಯಿದೆಯ ನಂತರ ಈ ದೇಶದ 80 ಕೋಟಿಗೂ ಹೆಚ್ಚು ಜನರಿಗೆ ರಿಯಾಯತಿ ದರದಲ್ಲಿ ಆಹಾರ ಧಾನ್ಯಗಳು ಸಿಗುತ್ತಿರುವುದಕ್ಕೆ ಈ ವ್ಯವಸ್ಥೆಯೇ ಕಾರಣ. APMC ಹಾಗೂ MSP ವ್ಯವಸ್ಥೆಯ ಕಾರಣದಿಂದಾಗಿಯೇ ಈ ದೇಶದ ಕೋಟ್ಯಾಂತರ ರೈತರ ಆದಾಯ ಸುನಿಶ್ಚಿತವಾಗಿತ್ತು. ಆದರೆ ಈ ವ್ಯವಸ್ಥೆಯಲ್ಲಿ ರೈತರಿಗೆ ಹಲವಾರು ತೊಂದರೆಗಳಿರುವುದು ನಿಜ.
APMC ಯಲ್ಲಿ ರೈತರಿಗಿಂತ ವ್ಯಾಪಾರಿಗಳು ಮತ್ತು ದಲಾಳಿಗಳು ಸಶಕ್ತರಾಗಿದ್ದಾರೆ. ಅವರುಗಳಿಂದ ರೈತರಿಗೆ ತೂಕದಲ್ಲಿ, ಪ್ರಮಾಣದಲ್ಲಿ ಹಾಗೂ ಬೆಲೆಯ ಪಾವತಿಯಲ್ಲಿ ಹಲವಾರು ಬಾರಿ ಮೋಸವಾಗುತ್ತಿದೆ. ಹಾಗೆಯೇ MSP ವ್ಯವಸ್ಥೆಯು ಪಂಜಾಬ್, ಹರ್ಯಾಣ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಒರಿಸ್ಸಾ ದಂತ ರಾಜ್ಯಗಳನ್ನು ಬಿಟ್ಟರೆ ಎಲಾ ರಾಜ್ಯಗಳ ರೈತರಿಗೂ ಸರಿಸಮನಾಗಿಯೂ ಒದಗುತ್ತಿಲ್ಲ ಹಾಗೂ ಅಕ್ಕಿ, ಗೋಧಿ ಹಾಗೂ ಇನ್ನಿತರ ಇಪ್ಪತ್ತು ರೈತೋತ್ಪನ್ನಗಳನ್ನು ಬಿಟ್ಟರೆ ಬಿಟ್ಟರೆ ರೈತ ಬೆಳೆಯುವ ಎಲ್ಲಾ ಬೆಳೆಗಳು MSP ಅಡಿ ಬರುವುದಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ MSP ಲೆಕ್ಕಾಚಾರದಲ್ಲೇ ರೈತರ ಎಲ್ಲಾ ವೆಚ್ಚಗಳನ್ನೂ ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ದೇಶದ ರೈತರೆಲ್ಲಾ ಸ್ವಾಮಿನಾಥನ್ ಸಮಿತಿ ವರದಿಯನ್ನು ಜಾರಿ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ.
ಹೀಗೆ ಈಗಿರುವ APMC ಹಾಗೂ MSP ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಹೀಗಾಗಿ ಈವ್ಯವಸ್ಥೆಯಲ್ಲಿ ರೈತಪರ ಸುಧಾರಣೆಗಳ ಅಗತ್ಯವಿದ್ದದ್ದು ನಿಜ. ಹಾಗಿದ್ದಲ್ಲಿ ಮೋದಿ ಸರ್ಕಾರ ತಂದಿರುವ ಈ ಹೊಸ ಮಸೂದೆ/ಕಾಯಿದೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕೊಡುತ್ತದೆಯೇ?
-ಮೋದಿ ಸರ್ಕಾರದ ಈ ಕಾಯಿದೆ APMC ಯಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವ ಬದಲು ಅದನ್ನು ಸಂಪೂರ್ಣವಾಗಿ ಮೂಲೆಗುಂಪು ಮಾಡಿ ಅದರ ಜಾಗದಲ್ಲಿ ರೈತರಿಗೆ ಯಾವ ಪಾತ್ರವೂ ಇಲ್ಲದ ದೊಡ್ದದೊಡ್ಡ ಬಂಡವಾಳಶಾಹಿಗಳ ಒಡೆತನ ಮತ್ತು ನಿಯಂತ್ರಣದಲ್ಲಿರುವ ಖಾಸಗಿ ಮಂಡಿಗಳು ಮತ್ತು ಖಾಸಗಿ APMC ಗಳ ಸ್ಥಾಪನಗೆ ಅವಕಾಶ ಮಾಡಿಕೊಡುತ್ತದೆ.
-ಹಾಲಿ ಇರುವ APMC ಯಲ್ಲಿ ನಡೆಯುವ ವ್ಯವಹಾರಗಳ ಮೇಲೆ ಕೊಳ್ಳುವವರ ಹಾಗೂ ಮಾರುವವರ ಮೇಲೆ ಸರ್ಕಾರ ತೆರಿಗೆಯನ್ನು ಮತ್ತು ಶುಲ್ಕವನ್ನು ವಿಧಿಸುತ್ತಿತ್ತು. ಆದರೆ ಈ ಹೊಸ ಕಾಯಿದೆಯು ಖಾಸಗಿ ಮಂಡಿಗಳಲ್ಲಿ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ. ಆ ಮೂಲಕ ಖಾಸಗಿ ಮಂಡಿಗಳಿಗೆ ಉತ್ತೇಜನ ಕೊಡುತ್ತಾ ಹಾಲಿ ಇರುವ APMC ಯಿಂದಲೂ ವ್ಯಾಪಾರಿಗಳು ಹಾಗೂ ಮಾರಾಟಗಾರು ಖಾಸಗಿ ಮಂಡಿಯತ್ತ ಆಕರ್ಷಿತರಾಗಿ ಹಳೆಯ APMCನಿಧಾನವಾಗಿ ಸಾವನ್ನಪ್ಪುವಂತೆ ಮಾಡುತ್ತವೆ.
-ಎಲ್ಲಕ್ಕಿಂತ ಮುಖ್ಯವಾದ ವಿಷಯವೇನೆಂದರೆ APMC ಇಲ್ಲವಾದರೆ ರೈತರಿಗೆ MSP ದರಗಳು ದಕ್ಕುತ್ತವೆಯೇ ಎಂಬುದು. ವಾಸ್ತವವಾಗಿ ಪ್ರಧಾನಿಗಳು ಪದೇ ಪದೇ MSP ರದ್ದು ಮಾಡುವುದಿಲ್ಲ ಎಂದು ಹೇಳುತ್ತಿರುವುದರಲ್ಲಿ ಅರ್ಧ ಸತ್ಯ ಮಾತ್ರ ಇದೆ. ಹಾಲಿ ಅಸ್ಥಿತ್ವದಲ್ಲಿರುವ APMC ಗಳಲ್ಲಿ MSP ರದ್ದು ಮಾಡಲಾಗುವುದು ಎಂಬ ನಿಯಮವೇನೂ ಕಾಯಿದೆಯಲ್ಲಿಲ್ಲ ಎಂಬುದು ನಿಜ.
ಆದರೆ ಹೊಸದಾಗಿ ಅಸ್ಥಿತ್ವಕ್ಕೆ ಬರಲಿರುವ ಖಾಸಗಿ ಮಂಡಿಗಳಲ್ಲಿ MSP ಯನ್ನು ಖಾತರಿಪಡಿಸುವ ನಿಯಮವೂ ಕಾಯಿದೆಯಲ್ಲಿಲ್ಲ ಎಂಬುದನ್ನು ಪ್ರಧಾನಿಯವರು ರೈತರಿಂದ ಮುಚ್ಚಿಡುತ್ತಿದ್ದಾರೆ.
ಹಾಗೂ ಈ ಹೊಸ ಕಾಯಿದೆಯಿಂದಾಗಿ ಹಳೆಯ APMC ಗಳು ನಿಧಾನವಾಗಿ ರದ್ದಾಗಿ ಕೆಲವು ವರ್ಷಗಳ ನಂತರ ಬಹುಪಾಲು ಖಾಸಗಿ ಮಂಡಿಗಳ ಕಾರ್ಟೆಲ್ಗಳೇ ಉಳಿದುಕೊಳ್ಳುವುದರಿಂದ ಸರ್ಕಾರವ ಕಾಲಕ್ರಮೇಣ MSP ಹೊಣೆಗಾರಿಕೆಯಿಂದ ಮುಕ್ತವಾಗಲಿದೆ ಎಮ್ಬುದರಲ್ಲಿ ಯಾವುದೇ ಸಂದೇಹವಿಲ್ಲ.
-ಪ್ರಾರಂಭದಲ್ಲಿ ದೊಡ್ಡ ಕೃಷಿ ಉದ್ದಿಮೆದಾರರು ನಡೆಸುವ ಮಂಡಿಗಳಲ್ಲಿ ರೈತರಿಗೆ ಸ್ವಲ್ಪ ಹೆಚ್ಚಿನ ದರ ದೊರೆತರೂ ಎಲ್ಲಾ ಉದ್ದಿಮೆಗಳಲ್ಲಿ ನಡೆಯುವಂತೆ ಈ ಕ್ಷೇತ್ರದಲ್ಲೂ ಬೃಹತ್ ಕಾರ್ಪೊರೇಟು ಉದ್ದಿಮೆಗಳೇ ಬಹಳ ಬೇಗ ಏಕಸ್ವಾಮ್ಯ ಸಾಧಿಸುತ್ತಾರೆ.
ಈ ವ್ಯವಹಾರಕ್ಕೆ ಈಗಾಗಲೇ ಅಂಬಾನಿ. ಆದಾನಿ ಹಾಗೂ ವಿಶ್ವದ ಅತಿದೊಡ್ಡ ಬಹುರಾಷ್ಟ್ರೀಯ ಕಂಪನಿಗಳೂ ದಾಳಿ ಇಡಲು ಸಿದ್ಧವಾಗುತ್ತಿವೆ. ಇಂಥಾ ದೊಡ್ಡ ಉದ್ದಿಮೆಗಳ ಮುಂದೆ ಸಣ್ಣಪುಟ್ಟವರ ಮಂಡಿಗಳು ಉಳಿಯಲು ಸಾಧ್ಯವೇ ಇಲ್ಲ. ಅಂಬಾನಿಯ ಜಿಯೋ ಮೊಬೈಲ್ ಕ್ಷೇತ್ರದಲ್ಲಿ ಏಕಸ್ವಾಮ್ಯ ಸಾಧಿಸಿದ ನಂತರ ಟೆಲಿಕಾಂ ಕ್ಷೇತ್ರದಲ್ಲಿ ನಡೆಯುತ್ತಿರುವುದನ್ನು ನೆನಪಿಸಿಕೊಳ್ಳೋಣ.
ದೊಡ್ಡ ಬಂಡವಾಳಿಗರು ತಮ್ಮ ನಡುವೆ ಕಾರ್ಟೆಲ್ಲುಗಳನ್ನು ಮಾಡಿಕೊಂಡು ದರದ ಯಾವ ಲಾಭವೂ ರೈತರಿಗೆ ಸಿಗದಂತೆ ಮಾಡುತ್ತಾರೆ. ಆಗ ರೈತರು ಬೇರೆ ಯಾವುದೇ ಆಯ್ಕೆ ಇಲ್ಲದೆ ಇದೇ ಕಾರ್ಟೆಲ್ಲುಗಳಿಗೆ ಅವರು ವಿಧಿಸುವ ಬೆಲೆಗೆ ಮಾರಿಕೊಳ್ಳಬೇಕಾಗುತ್ತದೆ.
ಬಿಹಾರದಲ್ಲಿ 2006ರಲ್ಲೇ APMC ಗಳು ರದ್ದಾಗಿದ್ದು ಅಲ್ಲಿ ಯಾವುದೇ ಖಾಸಗಿ ಮಂಡಿಗಳು ರೈತರಿಗೆ ಸ್ಪರ್ಧಾತ್ಮ ದರಗಳನ್ನು ನೀಡುತ್ತಿಲ್ಲ. ವಾಸ್ತವದಲ್ಲಿ ಅಲ್ಲಿನ ರೈತರಿಗೆ ಬಹಳಷ್ಟು ಬಾರಿ ಇತರ ರಾಜ್ಯಗಳ ರೈತರಿಗೆ ಸಿಗುತ್ತಿರುವ MSP ಯ ಮುಕ್ಕಾಲು ಪಾಲೂ ಸಿಗುತ್ತಿಲ್ಲ.
– APMC ಗಳೇ ಇಲ್ಲದಿರುವ ಸಂದರ್ಭದಲ್ಲಿ ಸರ್ಕಾರವು ಪಡಿತರ ವ್ಯವಸ್ಥೆಗಾಗಿ ಆಹಾರ ಖರೀದಿಯನ್ನು ನಿಲ್ಲಿಸುತ್ತದೆ.
ವಾಸ್ತವದಲ್ಲಿ 2015 ರಿಂದಲೂ ಮೋದಿ ಸರ್ಕಾರವು ಪಡಿತರ ಬಿಲ್ಲನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ ತೊಡಗಿದೆ. 2016ರಲ್ಲಿ ಶಾಂತಕುಮಾರ ಸಮಿತಿಯೂ ಸಹ ಸರ್ಕಾರಕ್ಕೆ ಆಹಾರ ಪಡಿತರ ಸಬ್ಸೀಡಿಯನ್ನು ಶೇ. 50ರಷ್ಟು ಕಡಿತಗೊಳಿಸಬೇಕೆಂದು ಶಿಫಾರಸ್ಸು ಮಾಡಿತ್ತು. 2018 ಮತ್ತು 2020 ರಲ್ಲಿ ಸರ್ಕಾರದ ಕಾರ್ಯದರ್ಶಿಗಳ ಸಮಿತಿಯು ಪಡಿತರ ಸೌಲಭ್ಯವನ್ನು 80 ಕೋಟಿ ಜನರಿಂದ 20 ಕೋಟಿ ಜನರಿಗೆ ಇಳಿಸುವಂತೆ ಮತ್ತು ಪಡಿತರ ದರವನ್ನು ಎರಡು ಪಟ್ಟು ಹೆಚ್ಚಿಸುವಂತೆ ಶಿಫಾರಸ್ಸು ಮಾಡಿದೆ.
ಈ APMC ಮೂಲೆಗುಂಪು ಕಾಯಿದೆಯು ಸರ್ಕಾರದ ಈ ಉದ್ದೆಶವನ್ನು ಸುಲಭವಾಗಿ ಈಡೇರುವಂತೆ ಮಾಡಿ ದೇಶದ ಕೋಟ್ಯಾಂತರ ಬಡವರ ಬದುಕನ್ನು ಮತ್ತಷ್ಟು ದುರ್ಭರಗೊಳಿಸಲಿದೆ.
ಹೀಗೆ APMC ವ್ಯವಸ್ಥೆಯಲ್ಲಿರುವ ಲೋಪಗಳನ್ನು ಬಳಸಿಕೊಂಡು ಮೋದಿ ಸರ್ಕಾರ ಇಡೀ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಸ್ಥೆಯನ್ನು ಕಾರ್ಪೊರೇಟ್ ಧಣಿಗಳಿಗೆ ವಹಿಸಿ ರೈತರನ್ನು ಅವರ ಗುಲಾಮಗಿರಿಗೆ ದೂಡಲಿದೆ. ಇಂಥಾ ಕಾಯಿದೆಯನ್ನು ಬೆಂಬಲಿಸಲು ಸಾಧ್ಯವೇ?
2. ಕಾಂಟ್ರಾಕ್ಟ್ ಫಾರ್ಮಿಂಗ್ ಮಸೂದೆ
ರೈತ ಹಿಡುವಳಿಗಳು ಸಣ್ಣದಾಗುತ್ತಿರುವಂತೆ ಕೃಷಿ ಲಾಭದಾಯಕವಾಗುವುದಿಲ್ಲ ಮತ್ತು ಮಾರುಕಟ್ಟೆಯ ಏರುಪೇರುಗಳನ್ನು ಸಣ್ಣ ರೈತರು ತಡೆದುಕೊಳ್ಳಲು ಸಾಧ್ಯವಿಲ್ಲ ಎಂಬುದು ಈ ಕಾಯಿದೆ ತರಲು ಸರ್ಕಾರ ಮುಂದಿಡುತ್ತಿರುವ ಕಾರಣ. ಆದರೆ ಕಾಂಟ್ರಾಕ್ಟ್ ಫಾರ್ಮಿಂಗ್ ಈ ಸಮಸ್ಯೆಗೆ ಪರಿಹಾರವೇ?
ಮೋದಿ ಸರ್ಕಾರ ತರುತ್ತಿರುವ ಎರಡನೇ ಮರಣ ಶಾಸನವಾದ ಕಾಂಟ್ರಾಕ್ಟ್ ಫಾರ್ಮಿಂಗ್ ಶಾಸನದ ಮೂಲಕ ಸರ್ಕಾರವು ರೈತರ ಹಿಡುವಳಿಗಳನ್ನು ಬೃಹತ್ ಬಹುರಾಷ್ಟ್ರೀಯ ಕಂಪನಿಗಳಿಗೆ ಒಪ್ಪಂದದ ಆಧಾರದಲ್ಲಿ ಗುತ್ತಿಗೆಗೆ ಕೊಡಲು ಅನುವು ಮಾಡಿಕೊಡುತ್ತದೆ. ಮಸೂದೆಯ ನಿಜವಾದ ಅರ್ಥವನ್ನು ಬಚ್ಚಿಡಲು ಅದಕ್ಕೆ Farmers (Empowerment And Protection) Price Assurance And Farm Services ಎಂಬ ಉದ್ದನೆಯ ಮತ್ತು ತಪ್ಪು ಅರ್ಥವನ್ನು ಕೊಡುವ ಹೆಸರನ್ನು ಮೋದಿ ಸರ್ಕಾರ ಇಟ್ಟಿದೆ.
ಈ ಮಸೂದೆಯ ಪ್ರಕಾರ ರೈತಾಪಿ ಹಾಗು ದೊಡ್ಡ ಕಾರ್ಪೊರೇಟ್ ಕಂಪನಿಗಳು (ಸರ್ಕಾರದ ಭಾಷೆಯಲ್ಲಿ ಹೇಳುವುದಾದರೆ -Sponsores- ಪ್ರಾಯೋಜಕರು ) ಬೆಲೆ, ಗುಣಮಟ್ಟ ( Grade, Quality and Standards ) ಹಾಗು ಬೆಳೆಗಳ ಬಗ್ಗೆ ಪೂರ್ವಭಾವಿ ಒಪ್ಪಂದಕ್ಕೆ ಬರಬಹುದು.
ಹಾಗೂ ಆ ಒಪ್ಪಂದಗಳಿಗೆ ಸರ್ಕಾರ ರೂಪಿಸಿರುವ ಚೌಕಟ್ಟು ರೈತರ ಪರವಾಗಿದೆ ಮತ್ತು ಅವರನ್ನು ಸಬಲೀಕರಿಸುವುದಕ್ಕೆ ಪೂರಕವಾಗಿದೆ ಎಂದು ಸರ್ಕಾರದ ವಾದ.ಆದರೆ ಸರ್ಕಾರದ ಈ ಭರವಸೆ ಎಷ್ಟು ಸುಳ್ಳು ಎಂಬುದನ್ನು ಆ ಮಸೂದೆಯ ಕೆಳಗಿನ ಮೂರು ಅಂಶಗಳನ್ನು ಮಾತ್ರ ನೋಡಿದರೂ ಅರ್ಥವಾಗುತ್ತದೆ.
- – ಮಸೂದೆಯ 4ನೇ ಸೆಕ್ಷನ್ನಿನ 2ನೇ ಸಬ್ ಕ್ಲಾಸಿನ ಪ್ರಕಾರ :
ರೈತಾಪಿ ಹಾಗು ಪ್ರಾಯೋಜಕರು ಬೆಳೆಯ ಗುಣಮಟ್ಟದ ಬಗ್ಗೆ ಮಾಡಿಕೊಳ್ಳುವ ಒಪ್ಪಂದವು ಸರ್ಕಾರ ಅಥವಾ ಸರ್ಕಾರದಿಂದ ಗುರುತಿಸಲ್ಪಟ್ಟ “ಸ್ವತಂತ್ರ” ಏಜೆನ್ನಿಯು ನಿಗದಿ ಮಾಡುವ ಗುಣಮಟ್ಟವನ್ನು ಅಳವಡಿಸಿಕೊಳ್ಳಬೇಕು. ಮತ್ತು ಅದಕ್ಕೆ ಬದ್ಧವಾಗಿರಬೇಕು
- – ಎಲ್ಲಕ್ಕಿಂತ ಮುಖ್ಯವಾಗಿ ಮಸೂದೆಯ ಸೆಕ್ಷನ್ 6ರ ಸಬ್ ಕ್ಲಾಸ್ 2ರ ಪ್ರಕಾರ
ಪ್ರಾಯೋಜಕರು ರೈತರಿಂದ ಸರಕನ್ನು ಸ್ವೀಕರಿಸುವ ಮುನ್ನ ಸರಕಿನ ಗುಣಮಟ್ಟವು ಒಪ್ಪಂದದಲ್ಲಿ ಮಾಡಿಕೊಂಡ ಗುಣಮಟ್ಟಕ್ಕೆ ತಕ್ಕ ಹಾಗಿದೆಯೇ ಎಂದು ಪರಿಶೀಲಿಸಬೇಕು..ಒಂದು ವೇಳೆ ಪರಿಶೀಲಿಸದೆ ಒಪ್ಪಿಕೊಂಡರೆ ಆ ನಂತರ ಸರಕನ್ನು ತಿರಸ್ಕರಿಸುವಂತಿಲ್ಲ ಎಂದರ್ಥ.
ಕೊನೆಯ ಸಾಲಿನಲ್ಲಿ ರೈತಪರ ಧ್ವನಿ ಕಂಡುಬಂದರೂ ಒಟ್ಟಾರೆ ತಾತ್ಪರ್ಯವೇನು ?
ಒಂದು ವೇಳೆ ಸರಕು ಸ್ವೀಕರಿಸುವ ಮುನ್ನ ಗುಣಮಟ್ಟ ಪರಿಶೀಲಿಸಿದಾಗ ಒಪ್ಪಂದದ ಗುಣಮಟ್ಟಕ್ಕೆ ತಕ್ಕ ಹಾಗೆ ಸರಕಿಲ್ಲ ಎಂದರೆ ಡೆಲಿವರಿಯನ್ನು ತಿರಸ್ಕರಿಸಬಹುದು ಎನ್ನುವುದೇ ಈ ಸಬ್ ಕ್ಲಾಸಿನ ನಿಜವಾದ ತಾತ್ಪರ್ಯ.
ಆಗ ರೈತನಿಗೆ ಇರುವ ದಾರಿಗಳೇನು?
– ಮಸೂದೆಯ 13 ಮತ್ತು 14 ನೇ ಸೆಕ್ಷನ್ನಿನ ಪ್ರಕಾರ ಆಗ ರೈತ ತಾನು ಒಪ್ಪಂದ ಮಾಡಿಕೊಂಡ ಪ್ರಾಯೋಜಕ ದೈತ್ಯ ಕಂಪನಿಯ ಬಗ್ಗೆ ಆ ಪ್ರದೇಶದ ತಹಶೀಲ್ದಾರರಿಗೆ ದೂರು ಸಲ್ಲಿಸಬಹುದು .
ಆಗ ತಹಶೀಲ್ದಾರ್ ಪ್ರಾಯೋಜಕ, ರೈತ ಹಾಗು ಮೂರನೇ ವ್ಯಕ್ತಿಗಳು ಇರುವ ಒಂದು ಸಂಧಾನ ಸಮಿತಿ ಮಾಡುತ್ತಾರೆ. ಅದು 30 ದಿನಗಳೊಳಗೆ ಸಂಧಾನ ಕ್ಕೆ ಬರಬೇಕು.
ಅದು ಆಗದಿದ್ದಲ್ಲಿ ತಹಶೀಲ್ದಾರ್ ಮುಂದಿನ 30 ದಿನಗಳೊಳಗೆ ವ್ಯಾಜ್ಯ ಬಗೆಹರಿಸಬೇಕು. ಈ ತೀರ್ಮಾನವು ಸರಿ ಬರಲಿಲ್ಲವೆಂದರೆ ಡಿಸಿ ನೇತೃತ್ವದ ಮೇಲ್ಮನವಿ ಸಮಿತಿಗೆ ದೂರು ಸಲ್ಲಿಸಬಹುದು .ಅದು ಮುಂದಿನ 30 ದಿನಗಳಲ್ಲಿ ಏನು ತೀರ್ಮಾನ ಕೊಡುತ್ತದೋ ಅದು ಅಖೈರು.
ಎಲ್ಲಾ ಸರ್ಕಾರಗಳೂ ಮತ್ತು ಪಕ್ಷಗಳು ಬಹಿರಂಗವಾಗಿ ಮತ್ತು ಸ್ಪರ್ಧಾತ್ಮಕ ವಾಗಿ ಬಹುರಾಷ್ಟ್ರೀಯ ಕಂಪನಿಗಳ ಹಿತಾಸಕ್ತಿ ಗೆ ಪರವಾದ ನೀತಿಗಳನ್ನು ಘೋಷಿಸುತ್ತಿರುವಾಗ, ಅವರಡಿ ಕೆಲಸ ಮಾಡುವ ಅಧಿಕಾರಿಗಳ ಕೋರ್ಟುಗಳು ಕಂಪನಿಗಳ ವಿರುದ್ಧ ಸೊಲ್ಲೆತ್ತಬಲ್ಲವೇ?
ಜೊತೆಗೆ, ಈ ಇಡೀ ವ್ಯಾಜ್ಯದ ಅವಧಿಯಲ್ಲಿ ರೈತ ತನ್ನ ಸರಕನ್ನು ಬೇರೆಡೆ ಮಾರುವ ಹಾಗು ಇಲ್ಲ. ಸಂಗ್ರಹಿಸಿಟ್ಟುಕೊಳ್ಳಲು ಸಣ್ಣಪುಟ್ಟ ರೈತರಿಗೆ ಯಾವುದೇ ಸೌಕರ್ಯವೂ ಇರುವುದಿಲ್ಲ.
ನೂರು ದಿನಗಳ ಕಾಲ ಬೆಳೆದ ಬೆಳೆಗೆ ಹಣ ದಕ್ಕಲಿಲ್ಲವೆಂದರೆ ರೈತರಿಗೆ ನೇಣು ಹಾಕಿಕೊಳ್ಳುವುದು ಬಿಟ್ಟು ಬೇರೆ ಪರ್ಯಾಯವು ಇರುವುದಿಲ್ಲ.
ಮತ್ತೊಂದೆಡೆ ಲಕ್ಷ ಕೋಟಿ ವ್ಯವಹಾರ ನಡೆಸುವ ಕಂಪನಿಗಳಿಗೆ ಈ ವ್ಯಾಜ್ಯಗಳಿಂದ ಯಾವ ತೊಂದರೆಯೂ ಆಗುವುದಿಲ್ಲ.
ವಾಸ್ತವದಲ್ಲಿ ಸಣ್ಣ ಹಿಡುವಳಿಗಳ ಸಮಸ್ಯೆಗೆ ಸಹಕಾರಿ ಕೃಷಿ ಅಥವಾ ಅಂಬೇಡ್ಕರ್ ಹೇಳಿದಂತೆ ಕೃಷಿಯ ರಾಷ್ಟ್ರಿಕರಣ ನಿಜವಾದ ಪರಿಹಾರ. ಕೃಷಿಯ ಕಾರ್ಪೊರೇಟೀಕರಣವಲ್ಲ.
3.ಬೃಹತ್ ಕೃಷಿ ಕಂಪನಿಗಳಿಗೆ ನಮ್ಮ ದೇಶದ ಆಹಾರ ಸರಕುಗಳನ್ನು ದಾಸ್ತಾನು ಮಾಡಿಟ್ಟುಕೊಳ್ಳಲು ಅವಕಾಶ ಕೊಡುವ ಕಾಯಿದೆ ಅರ್ಥಾತ್ ಅಗತ್ಯ ಸರಕುಗಳ ತಿದ್ದುಪಡಿ ಕಾಯಿದೆ. (Essential Commodities (Amendment) Act):
1955ರಲ್ಲಿ ಈ ಕಾಯಿದೆಯನ್ನು ಜಾರಿಗೆ ತಂದಾಗ ಅದರ ಹಿಂದಿದ್ದ ಉದ್ದೆಶ ಆಹಾರ ಧಾನ್ಯಗಳು ಹಾಗೂ ದೇಶವನ್ನು ಕಟ್ಟಲು ಅತ್ಯಗತ್ಯವಾಗಿರುವ ಕಲ್ಲಿದ್ದಲು, ಕಬ್ಬಿಣ ಇನ್ನಿತ್ಯಾದಿ ಸರಕುಗಳನ್ನು ದೊಡ್ದದೊಡ್ದ ವ್ಯಾಪಾರಿಗಳು ದುರುದ್ದೇಶಪೂರ್ವಕವಾಗಿ ಸಂಗ್ರಹಿಸಿಟ್ಟುಕೊಂಡು, ಕಾಳಸಂತೆ ಹಾಗೂ ಕಳ್ಳದಂಧೆಯನ್ನು ಮಾಡುತಾ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಬಾರದೆಂಬುದಾಗಿತ್ತು.
ಸರ್ಕಾರದ ಪ್ರಕಾರ ಕೃಷಿಯ ಉತ್ಪಾದನೆ, ಮಾರಾಟ, ಸಾಗಾಟ, ಸಂಗ್ರಹ ಹಾಗೂ ಬೆಲೆ ನಿಗದಿ ಪ್ರಕ್ರಿಯೆಗಳಲ್ಲಿ ಸರ್ಕಾರದ ಮಧ್ಯಪ್ರವೆಶದಿಂದಾಗಿ ಈ ಬಾಬತ್ತುಗಳಲ್ಲಿ ವಿದೇಶಿ ಮತ್ತು ಖಾಸಗಿ ಬಂಡವಾಳ ಬರುತ್ತಿಲ್ಲ. ಆದ್ದರಿಂದ ಸರ್ಕಾರ ಈ ತಿದ್ದುಪಡಿ ಮಸೂದೆಯ ಮೂಲಕ ಆಹಾರ ಸರಕುಗಳ ಸಾಗಾಟ, ಸಂಗ್ರಹ ಇತ್ಯಾದಿಗಳಿಗಿದ್ದ ಮಿತಿಯನ್ನು ತೆಗೆದುಹಾಕುತ್ತದೆ. ಮತ್ತು ಆಹಾರ ಸಂಸ್ಕರಣೆ ಉದ್ಯಮಗಳಿಗಾಗಿ ಮತ್ತು ರಫ್ತುಗಳಿಗಾಗಿ ದೊಡ್ಡದೊಡ್ಡ ಅಗ್ರಿ ಬಿಸಿನೆಸ್ ಕಂಪನಿಗಳು ಎಷ್ಟು ಬೇಕಾದರೂ ಆಹಾರ ಸಂಗ್ರಹ ಮಾಡಿಟ್ಟುಕೊಳ್ಳಲು ಈ ಕಾಯಿದೆ ಅವಕಾಶ ಕಲ್ಪಿಸಿಕೊಡುತ್ತದೆ.
ಹಾಗಿದ್ದಲ್ಲಿ ದೊಡ್ಡ ದೊಡ್ಡ ಅಗ್ರಿ ಬಿಸಿನೆಸ್ ಕಂಪನಿಗಳು ಅಪಾರ ಆಹಾರ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸಿ ಬೆಲೆ ಹೆಚ್ಚಳವಾಗುವಂತೆ ಮಾಡುವುದಿಲ್ಲವೇ?
ಈ ಕಾಯಿದೆಯ ಪ್ರಕಾರ ಬೆಲೆಗಳಲ್ಲಿ ದುಪ್ಪಟ್ಟು ಹೆಚ್ಚಳ ಆದರೆ ಮಾತ್ರ ಹಾಗೂ ಯುದ್ಧ, ಬರ ಇನ್ನಿತ್ಯಾದಿ ವಿಶೇಷ ಸಂದರ್ಭಗಳಲ್ಲಿ ಮಾತ್ರ ಸರ್ಕಾರ ಮಧ್ಯಪ್ರವೇಶ ಮಾಡುತ್ತದಂತೆ!!
ಅಷ್ಟು ಮಾತ್ರವಲ್ಲ.. ಯುದ್ಧ, ಕ್ಷಾಮ ಬಂದಾಗಲೂ ಕೂಡ ಖಾಸಗಿ ಕಂಪನಿಗಳು ರಫ್ತಿಗಾಗಿ ಹಾಗೂ ಕೈಗಾರಿಕೋತ್ಪಾದನೆಗಾಗಿ ಮಾಡಿಕೊಂಡ ಸಂಗ್ರಹವನ್ನು ಮುಟ್ಟುವುದಿಲ್ಲ ಎಂಬ ಭರವಸೆಯನ್ನು ಈ ಕಾಯಿದೆ ಖುಲ್ಲಂಖುಲ್ಲಾ ನೀಡುತ್ತದೆ.
ಹೀಗೆ ಸಾರಾಂಶದಲ್ಲಿ ಈ ಮೂರೂ ಮಸೂದೆಗಳೂ ದೇಶದ ಹಿತಾಸಕ್ತಿಗಿಂತ ಜನರ ಕಲ್ಯಾಣಕ್ಕಿಂತ ಅಗ್ರಿ ಬಿಸಿನೆಸ್ ಕಂಪನಿಗಳಿಗೆ ಅವಕಾಶ ಮಾಡಿಕೊಡುವ ದೇಶದ್ರೋಹಿ ಮಸೂದೆಗಳೇ ಆಗಿವೆ. ಹೊಟ್ಟೆಗೆ ಅನ್ನ ತಿನ್ನುವ ಯಾರೇ ಆದರೂ ಈ ಮಸೂದೆಯನ್ನು ಬೆಂಬಲಿಸಲು ಸಾಧ್ಯವೇ?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.
ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.
ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ6 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ3 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ3 days agoಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

