Connect with us

ಲೈಫ್ ಸ್ಟೈಲ್

ಹೀಗೊಂದು ಹೆಬ್ಬಾವಿನ ಚಿಕಿತ್ಸೆ..!

Published

on

ಡಾ.ಎನ್.ಬಿ.ಶ್ರೀಧರ್ ಅವರು ಹೆಬ್ಬಾವಿಗೆ ಚಿಕಿತ್ಸೆ ನೀಡುತ್ತಿರುವುದು.
  • ಡಾ.ಎನ್.ಬಿ.ಶ್ರೀಧರ, ಪ್ರಾಧ್ಯಾಪಕರು, ವೆಟರ್ನರಿ ಕಾಲೇಜು, ಶಿವಮೊಗ್ಗ

ನೇಕ ಸಲ ನಮಗೆ ಹೊಸ ರೀತಿಯ “ಪೇಶಂಟು”ಗಳು ಬಂದು ಅಚ್ಚರಿಗೊಳಿಸುವುದುಂಟು. ಅದರಲ್ಲೂ ಕಾಡಿನಿಂದ ಬರುವ “ರೋಗಿ” ಗಳ ಚಿಕಿತ್ಸೆ ಒಂದು ಸವಾಲು. ಪಶುವೈದ್ಯಕೀಯ ಓದುವಾಗ ಈ ರೀತಿಯ ಯಕ:ಶ್ಚಿತ್ ಹುಳ ಹುಪ್ಪಟೆಗಳಂತ ಪ್ರಾಣಿಗಳನ್ನು ಚಿಕಿತ್ಸೆ ಮಾಡಬೇಕಾಬಹುದಾದ ಸಂದರ್ಭವೆಂದೂ ಬರದು ಎಂದು “ವೈಲ್ಡ್ ಲೈಫ಼್ ಚಿಕಿತ್ಸೆ”ಯ ಪಾಠ ಮಾಡುವಾಗ ದಿವ್ಯ ನಿರ್ಲಕ್ಷ್ಯದಿಂದಿರುವುದು ನಮ್ಮಲ್ಲಿ ಅನೇಕರಿಗೆ ಸಾಮಾನ್ಯವಾಗಿತ್ತು. ಒಂದಿಬ್ಬರು ಸಹೋದ್ಯೋಗಿ ವಿದ್ಯಾರ್ಥಿಗಳು ಈ ರೀತಿಯ ತರಹೇವಾರಿ ಪ್ರಾಣಿಗಳ ಕ್ರಿಮಿಕೀಟಗಳ ಚಿಕಿತ್ಸೆಯಲ್ಲಿ ಆಸಕ್ತಿ ವಹಿಸುವುದು ಬಿಟ್ಟರೆ ಉಳಿದವರ ಆಸಕ್ತಿ ಅಷ್ಟಕ್ಕಷ್ಟೇ. ನಮ್ಮದೇನಿದ್ದರೂ ದನ, ಎಮ್ಮೆ, ಬೆಕ್ಕು, ನಾಯಿ, ಕುದುರೆ, ಕೋಳಿ, ಹಂದಿ ಎಂಬಿತ್ಯಾದಿ ಹಲವು ಹತ್ತು ಸಾಕು ಪ್ರಾಣಿ ಕುಲಕೋಟಿಗಳ ಚಿಕಿತ್ಸೆ ಬಿಟ್ಟರೆ ಉಳಿದ ಪ್ರಾಣಿಗಳ ಗೊಡವೆ ನಮಗ್ಯಾಕೆ ಎಂಬ ದಿವ್ಯ ನಿರ್ಲಕ್ಷ್ಯವಿತ್ತು.

ಆದರೆ ಕೆಲವೊಮ್ಮೆ ಆಮೆ, ಮೊಸಳೆ, ಉಡ,ಕರಡಿ, ಚಿರತೆ, ಕಾಡುಕೋಣ ಇವುಗಳ ಚಿಕಿತ್ಸೆ ದುತ್ತನೇ ಬಂದು ತಲೆ ಕೆರೆದುಕೊಂಡ ಘಟನೆಗಳು ಅನೇಕ. ಆಮೆಯಂತ ಪ್ರಾಣಿಗಳನ್ನು ಸಾಕಿ “ಡಾಕ್ಟ್ರೇ. ನಮ್ಮನೆ ’ಕಣ್ವ’ (ಆಮೆಯ ಹೆಸರು) ಯಾಕೋ ಫುಡ್ಡೇ ತಿಂತಿಲ್ಲ. ಜ್ವರಾ ಬಂದಿದೆ ಅನ್ಸತ್ತೆ. ಸ್ವಲ್ಪ ನೋಡಿ” ಎಂದಾಗ “ಎಲಾ..ಈ ಆಮೆಗೆ ಹ್ಯಾಗೆ ಜ್ವರ ಪರೀಕ್ಷೆ ಮಾಡೋದು?” ಪಾಠ ಮಾಡುವಾಗ ಸ್ವಲ್ಪ ಆಸಕ್ತಿ ವಹಿಸಬೇಕಿತ್ತು” ಎಂದುಕೊಳ್ಳುತ್ತಾ ಇಂಜೆಕ್ಷನ್ ಕೊಡಬೇಕೆಂದು ಅದರ ಕಾಲನ್ನು ಎಳೆದು ಹಿಡಿದು ಸೂಜಿ ಚುಚ್ಚಬೇಕೆಂದುಕೊಂಡರೆ ಇದ್ದಕ್ಕಿದ್ದಂತೆ ಲಬಕ್ಕೆಂದು ತಲೆ ಕಾಲುಗಳನ್ನು ಒಳಗೆಳೆದುಕೊಂಡು ಕೂರ್ಮಾವತಾರ ತಳೆದು ಪಶುವೈದ್ಯ ಜ್ಞಾನ ಅಣಕಿಸಿದ್ದಿದೆ.

ಬಹುಶ: ತೊಂಬತ್ತರ ದಶಕದ ದಿನಗಳಿರಬಹುದು. ಎಂದಿನಂತೆ ಪಶುಚಿಕಿತ್ಸೆಯಲ್ಲಿ ತೊಡಗಿದ್ದೆ. ಸಾಗರದ ಉರಗತಜ್ಞ ಮನ್ಮಥ ಕುಮಾರ್ ಸ್ಥಿರ ದೂರವಾಣಿಗೆ ಕರೆ ಮಾಡಿ “ಡಾಕ್ಟ್ರೇ. ಹೆಬ್ಬಾವಿಗೊಂದು ಚಿಕಿತ್ಸೆ ಆಗಬೇಕಿತ್ತು. ಆಸ್ಪತ್ರೆಯಲ್ಲಿರ್ತಿಲ್ಲಾ. ಬರ್ತಾ ಇರುವೆ” ಎಂದು ಅರ್ಧ ಘಂಟೆಯಲ್ಲಿ ಪ್ರತ್ಯಕ್ಷರಾದರು. ಜೊತೆಯಲ್ಲಿ ಅರಣ್ಯ ಇಲಾಖೆಯ ಖಾಕಿ ಪಡೆಯ ಸಾತ್ ಬೇರೆ. ನನ್ನ ಪೇಶಂಟ್ ಅವರ ಜೀಪಿನಲ್ಲಿಟ್ಟಿದ್ದ ಗೋಣಿಚೀಲದಲ್ಲಿತ್ತು. ಬೆಳಿಗ್ಗೆ ಸೋಮಾರಿತನದಿಂದ ಏಳುವ ಹುಡುಗರಿಗೆ “ಏಯ್. ಹೆಬ್ಬಾವಿನಂತೆ ಬಿದ್ದುಕೊಂಡಿದ್ದೆಯಲ್ಲೋ.. ಎಂದು ಬಯ್ಯುವವರು ನಿಜವಾಗಲೂ ಹೆಬ್ಬಾವಿನ ಸೋಮಾರಿತನ ಗಮನಿಸಬೇಕು. ಈ ಹೆಬ್ಬಾವು ಯಾರದೋ ಮನೆಯಲ್ಲಿ ದೊಡ್ಡ ಹೆಗ್ಗಣ ನುಂಗಿ ಹೊಟ್ಟೆ ಭಾರ ಆಗಿ ಸ್ವಲ್ಪ ರಿಲ್ಯಾಕ್ಸ್ ಮಾಡೋಣ ಎಂದು ಯಾರದೋ ಮನೆಯ ಒಳಗೆ ಸೇರಿ ಮಂಚದ ಅಡಿಗೆ ಸೇರಿಕೊಂಡು ಬಿಟ್ಟಿತ್ತಂತೆ.

ಮೊದಲೇ ಸೋಮಾರಿ. ಹೆಗ್ಗಣ ಹೊಟ್ಟೆಯಲ್ಲಿರುವುದರಿಂದ ಇನ್ನೂ ಸೋಮಾರಿಯಾಗಿ ಮಂಚದಡಿ ನಿದ್ದೆ ಹೊಡೆದಿದೆ. ಮನೆಯೊಡತಿ ಸೌತೆಕಾಯಿಯ ಜಾತಿಯ ಮೊಗೆ ಕಾಯಿಯ ಜ್ಯೂಸ್ ಮಾಡೋಣ ಎಂದು ಮಂಚದಡಿ ಒಂದೆರಡು ಹಣ್ಣಾದ ಮೊಗೆಕಾಯಿ(?)ಗಳಿಗಾಗಿ ಹುಡುಕಲು ತಡಕಾಡಿದಾಗ ನಿಧಾನವಾಗಿ ಮಿಸುಕಾಡುವ “ತಣ್ಣನೆ”ಯ ಸರೀಸ್ರಪ ಕೈಗೆ ತಾಗಿ ನಂತರ ಅದು ಹೆಬ್ಬಾವು ಎಂದು ಗೊತ್ತಾಗಿ ಗಾಬರಿಗೊಂಡಿದ್ದಾರೆ. ಮನೆಯವರು ಮತ್ತು ಸುತ್ತಲೂ ಇರುವ ಜನ ಈ ವಿಶೇಷ ಅತಿಥಿಯ ಬೀಳ್ಕೊಡುಗೆಯ ಸಮಾರಂಭವೇರ್ಪಡಿಸಲು ಪ್ರಯತ್ನ ಪಟ್ಟಿದ್ದಾರೆ. ಹೆಬ್ಬಾವೂ ಸಹ ಗಾಬರಿಗೊಂಡು ಪೆಟ್ಟಿಗೆಯಾಕಾರದ ಮಂಚದ ಗೂಡಿನಲ್ಲಿ ಸೇರಿಕೊಂಡು ಬಿಟ್ಟಿದೆ.

ಕಿರಿದಾದ ಗ್ಯಾಪಿನಿಂದ ಅದನ್ನು ಹೊರತರಲು ಅದರ ಉದ್ದನೆಯ ಬಾಲ ಹಿಡಿದು ಜನರೆಲ್ಲಾ ಸೇರಿ ಎಳೆದಾಗ ಹೆಗ್ಗಣ ಹೊಟ್ಟೆಯೊಳಗಿರುವುದರಿಂದ “ಹೊಟ್ಟೆ ಡುಮ್ಮಣ್ಣ”ನಾಗಿದ್ದರಿಂದ ಮಂಚದ ಸಣ್ಣ ಗ್ಯಾಪಿನಲ್ಲಿ ಸಿಕ್ಕಿ ಹಾಕಿಕೊಂಡು ಅದರ ಚರ್ಮ ಸುಲಿದು ಬಿಡಿಸಿದ ಹಲಸಿನ ಹಣ್ಣಿನ ಪರಿಸ್ಥಿತಿಯಾಗಿದೆ. ಚೀನಾದಲ್ಲಾದರೆ ನಮಗೆ “ಹೋಳಿಗೆಯೇ ಜಾರಿ ತುಪ್ಪಕ್ಕೆ ಬಿದ್ದಹಾಗೇ” ಎಂಬ ಗಾದೆಯ ಹಾಗೇ “ಹಾವು ಅಡಿಗೆ ಮನೆಗೆ ಬಂದಹಾಗೆ” ಎಂಬ ಗಾಧೆ ಅನ್ವರ್ಥವಾಗಿ ಎಲ್ಲರಿಗೂ ಇದೊಂದು ವಿಶೇಷ “ಹೆಬ್ಬಾವಿನ ಹಬ್ಬ”ವಾಗಿ ಅದಕ್ಕೆ ತರತರದ ಮಸಾಲೆ ಹಾಕಿ ವಿವಿಧ ಖಾದ್ಯ ಮಾಡಿ ಹುರಿದು ಮುಕ್ಕುತ್ತಿದ್ದರೇನೋ?. ಅಷ್ಟೊತ್ತಿಗೆ ಜನ ಮನ್ಮಥಕುಮಾರನ್ನು ಕರೆಸಿದಾಗ ಹೆಬ್ಬಾವಿಗೆ ಆದ ಗಾಯ ನೋಡಿ ಅವರು ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕರೆ ಮಾಡಿದರು.

ಹೆಬ್ಬಾವು ತುಂಬಾ ಗಾಯಗೊಂಡಿತ್ತು. ಐದಾರು ಜನ ಹಿಡಿದು ಎಳೆದ ಹೊಡೆತಕ್ಕೆ ಹೊಟ್ಟೆಯ ಭಾಗದ ಚರ್ಮದ ಮೇಲ್ಪದರ ಹಿಸಿದು ಹೋಗಿ ಅಂಗಾಂಗಗಳೆಲ್ಲಾ ಹೊರಚೆಲ್ಲಿಕೊಂಡು ವಿಕಾರವಾಗಿ ಕಾಣುತ್ತಿದ್ದವು. ಅವೆಲ್ಲಾ ಕೆಸರುಮಯವಾಗಿ ಮೂಲ ಬಣ್ಣವೇನು ಎಂಬುದೇ ಗೊತ್ತಾಗುತ್ತಿರಲಿಲ್ಲ. ಇಷ್ಟಿದ್ದರೂ ಸಹ ಸಹ ಹೆಬ್ಬಾವು ಪಿಳಿ ಪಿಳಿ ಎಂದು ಉದ್ದನೆಯ ನಾಲಿಗೆಯನ್ನು ಹೊರಹಾಕಿ ಒಳಗೆಳೆದುಕೊಂಡು ತನ್ನ ಬದುಕಿರುವಿಕೆಯನ್ನು ನಿರ್ವಿಕಾರವಾಗಿ ತೋರಿಸುತ್ತಿತ್ತು.

ಇದರ ಚಿಕಿತ್ಸೆಗೆ ಸುಮಾರು ಎರಡು ತಾಸು ಸಮಯ ಬೇಕು. ನಮ್ಮ ಆಸ್ಪತ್ರೆಯಲ್ಲಿ ಆಗ ಅಪರೇಷನ್ ಟೇಬಲ್ಲು ಇರಲಿಲ್ಲ. ಎರಡು ಗಂಟೆಗಳ ಕಾಲ ಕುಳಿತು ಈ ಕೈಂಕರ್ಯ ಮಾಡಿದರೆ ಬೆನ್ನು ಸೊಂಟ ಬಿದ್ದು ಹೋಗುತ್ತಿತ್ತು. ಈ ಜೀವಿಯ ಚಿಕಿತ್ಸೆಗೆ ಯಾರನ್ನೇನು ಕೇಳುವುದು ಎಂದು ನನ್ನ ಮನೆಯಲ್ಲಿದ್ದ ಟೀಪಾಯಿಯನ್ನು ತರಿಸಿ ಅದನ್ನೇ ಅಪರೇಷನ್ ಟೇಬಲ್ ಮಾಡಿಕೊಂಡೆ. ಈಗಿನಂತೆ ಮೊಬೈಲು, ವಾಟ್ಸಾಪ್ಪುಗಳಿರದೇ ಇರುವುದರಿಂದ ಯಾರನ್ನು ಕೇಳುವುದು?.

ನನ್ನ ಬಳಿಯಿರುವ ಪಶುವೈದ್ಯಕೀಯ ಗ್ರಂಥಗಳನ್ನು ಕೆದಕಿ ಅಧ್ಯಯನ ಮಾಡಿ ಅವಶ್ಯವಿರುವ ಅರಿವಳಿಕೆಗಳು, ಜೀವನಿರೋಧಕಗಳು, ಹೊಲಿಗೆ ದಾರ, ಸೂಜಿ ಇವನ್ನೆಲ್ಲ್ಲಾ ಸಾಗರದ ಮೆಡಿಕಲ್ಲಿನಿಂದ ತರಿಸಿದೆ. ಮನ್ಮಥಕುಮಾರ್ ಹೆಬ್ಬಾವಿನ ನಿಯಂತ್ರಣ ಸಾಧಿಸಿಕೊಟ್ಟರು. ಯಾವುದೋ ಕಚೇರಿ ಕೆಲಸಕ್ಕೆಂದು ಕಾರ್ಗಲ್ಲಿನಿಂದ ಬಂದ ಹಿರಿಯ ಪಶುವೈದ್ಯಕೀಯ ಪರೀಕ್ಷಕ ಶ್ರೀ ಪ್ರಭಯ್ಯಮಠ (ಅವರು ಈಗಿಲ್ಲ) ಮತ್ತು ಕೆರೆಯಪ್ಪ ಇವರೂ ಕೈಜೋಡಿಸಿದರು. ಅರಿವಳಿಕೆ ನೀಡಿದ ನಂತರ ಹೆಬ್ಬಾವಿನ ಹೊಟ್ಟೆಯಲ್ಲಿನ ವಿವಿಧ ಜೀವಜಠರಸಾಮ್ಲಗಳ ಸ್ನಾನದಿಂದ ಮಿಂದು ಇನ್ನೇನು ಜೀರ್ಣವಾಗಿ ಹಾವಿನ ರಕ್ತ ಸೇರಬೇಕಾಗಿದ್ದ ಅರೆ ಜೀವವಾಗಿದ್ದ ಹೆಗ್ಗಣವನ್ನು ಹೊರತೆಗೆದು, ಕರುಳಿನಂತಿರುವ ಅನೇಕ ಅಂಗಗಳನ್ನು ಸ್ವಚ್ಚಗೊಳಿಸಿ ಒಳಗೆ ಹಾಕಿ ವಿವಿಧ ಪದರಗಳಿಗೆ ಹೊಲಿಗೆ ಹಾಕಿ ಒಂದೆರಡು ಗಂಟೆಗಳ ಕಾಲದ ಪ್ರಯತ್ನದ ನಂತರ ಶಸ್ತ್ರಚಿಕಿತ್ಸೆ ಮುಗಿಯಿತು.

ಇದಾದ ನಂತರವೇ ಬಂದಿದ್ದು ನಿಜವಾದ ಪಜೀತಿ. ಈ ಉರಗಕ್ಕೆ ದಿನಾ ಜೀವ ನಿರೋಧಕ, ನಂಜುನಿವಾರಕ ಚುಚ್ಚು ಮದ್ದು ಒಂದು ವಾರ ನೀಡಬೇಕಲ್ಲ? ಯಾರು ನೀಡುವವರು? ಎಂಬ ಪ್ರಶ್ನೆ ಬಂತು. ಇಲ್ಲದಿದ್ದರೆ ಹೆಬ್ಬಾವು ನಂಜಾಗಿ ಸತ್ತು ಹೋಗುವ ಸಾಧ್ಯತೆ ಇತ್ತು. ಈ ಜೀವ ಜಂತಿಗೆ ಇಂಜೆಕ್ಷನ್ ಕೊಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗೆ ದಿನಾಲೂ ನಮ್ಮ ಆಸ್ಪತ್ರೆಯ ದರ್ಶನ ಮಾಡಿಸಲು ಹೇಳಿದೆ. ಅವರು ಅವರಿಗೆ ಇಂತಹ ಸಹಸ್ರ ಕೆಲಸ ಕಾರ್ಯಗಳಿವೆಯೆಂದೂ, ಕಾಡಿನ ಸಮಸ್ಥ ಜೀವಜಲಚರ ರಕ್ಷಣೆಯ ಭಾರ ಅವರ ಮೇಲಿದೆಯೆಂದೂ, ಸಾಗವಾನಿ, ಬೀಟೆ, ಶ್ರಿಗಂಧ ಇತ್ಯಾದಿ ದುಬಾರಿ ಮರಗಳನ್ನು ಮರಗಳ್ಳರಿಂದ ರಕ್ಷಣೆ ಮಾಡಬೇಕಾದ ಗುರುತರ ಜವಾಬ್ಧಾರಿಯಿರುವದರಿಂದ ನಮ್ಮ ಆಸ್ಪತ್ರೆಯಲ್ಲಿಯೇ ಇದನ್ನು “ಒಳರೋಗಿ”ಯಾಗಿ ಸೇರಿಸಿಕೊಂಡು ಚಿಕಿತ್ಸೆ ಮಾಡಬೇಕೆಂದು ಹಾಗೂ ಅವರು ದಿನಾ ಬಂದು ನಮಗೆ ಪೂರ್ಣ ಸಹಕಾರ ಕೊಡುವುದಾಗಿ ಕೋರಿಕೊಂಡರು. ಆಸ್ಪತ್ರೆಗೆ ಹೊಂದಿಕೊಂಡ ಮೊಲ ಸಾಕಣೆ ಕೇಂದ್ರವನ್ನು ಹೆಬ್ಬಾವಿಗೆ “ಒಳರೋಗಿ ಚಿಕಿತ್ಸಾ ಕೇಂದ್ರ” ಮಾಡಿ ಅಲ್ಲೊಂದು ಗೋಣಿಚೀಲ ಹಾಕಿ ಅದರ ಮೇಲಿಟ್ಟೆವು.

ಮೊದ ಮೊದಲು ತಣ್ಣಗೇ ಇರುವ ಈ ಶೀತರಕ್ತದ ಪ್ರಾಣಿಯನ್ನು ಮುಟ್ಟಲೂ ಅಸಹ್ಯಮಾಡಿಕೊಂಡು ಬೇಸರ ಪಟ್ಟುಕೊಂಡ ಕೆರಿಯಪ್ಪ ನಿಧಾನವಾಗಿ ಅದರ ಮೇಲೆ ಮಮತೆ ಬೆಳೆಸಿಕೊಂಡ. ಅದರ ಹಸಿವು ನೀಗಲು ಒಂದೆರಡು ಕಪ್ಪೆಗಳನ್ನು ಹಿಡಿದು ಆ ರೂಮಿನಲ್ಲಿ ಬಿಟ್ಟ. ಈ ಸೋಮಾರಿ ಹೆಬ್ಬಾವು ಚುರುಕಾಗಿರುವ ಕಪ್ಪೆಗಳನ್ನು ಬೆನ್ನು ಹತ್ತಿ ಬೇಟೆ ಮಾಡುವ ಬಗ್ಗೆ ಸಂಪೂರ್ಣ ಸಂಶಯವಿತ್ತು. ಈ ಕಪ್ಪೆಗಳೋ ಅವುಗಳ ಎಂದಿನ ಹುಟ್ಟುಗುಣದಂತೆ ಅಲ್ಲಿಂದಿಲ್ಲಿಗೆ, ಇಲ್ಲಿಂದಲ್ಲಿಗೆ ಎಗರಾಡಿ ಇಡೀ ರೂಮಿನಲ್ಲಿ ಕುಣಿದು ಕುಪ್ಪಳಿಸಿ ಹೆಬ್ಬಾವಿನ ಮೈಮೇಲೆಯೂ ಸವಾರಿ ಮಾಡಿ ಅವು ಅದರ ಆಹಾರವಾಗುವ ನಮ್ಮ ಬಯಕೆಯನ್ನೇ ನಿವಾಳಿಸಿ ಒಗೆದವು.

ಹೆಬ್ಬಾವಿನ ಜಾತಿಯ ಹಾವುಗಳು ಆಹಾರವಿಲ್ಲದೆಯೂ ಅನೇಕ ದಿನ ಬದುಕಬಲ್ಲವು ಮತ್ತು ಇದಕ್ಕೆ ಆಹಾರ ಹಾಕುವ ವ್ಯರ್ಥ ಪ್ರಯತ್ನ ಬೇಡವೆಂದರೂ ಸಹ ಅದರ ನೈಸರ್ಗಿಕ ಅಹಾರವಾದ ಇಲಿಗಳು, ಮೊಟ್ಟೆ ಇತ್ಯಾದಿಗಳನ್ನು ಅದಕ್ಕೆ ತಿನ್ನಿಸುವ ನಿರಂತರ ಪ್ರಯತ್ನ ಕೆರಿಯಪ್ಪನಿಂದ ನಡೆದೇ ಇತ್ತು. ಆಗಾಗ ತನ್ನ ನಾಲಿಗೆಯನ್ನು ಹೊರಚಾಚಿ ಒಳಗೆಳೆದುಕೊಂಡು ತಾನು ಬದುಕಿರುವಿಕೆಯನ್ನು ಹೆಬ್ಬಾವು ಖಚಿತಪಡಿಸುತ್ತಿತ್ತು. ಈಗಾಗಲೇ ಅದು ವಿಷರಹಿತ ಮತ್ತು ಅಪಾಯರಹಿತ ಎಂದು ಗೊತ್ತಾಗಿರುವುದರಿಂದ ಆರಾಮವಾಗಿ ಅದಕ್ಕೆ ಒಂದೈದಾರು ದಿನ ಅವಶ್ಯಕ ಚುಚ್ಚುಮದ್ದು ನೀಡಿದೆವು.

ಚುಚ್ಚು ಮದ್ದಿನ ಮೂಲಕ ಔಷಧಿ ನೀಡದೆಯೇ ಇದಕ್ಕೆ ಗುಳಿಗೆ ತಿನ್ನಿಸಲಾದೀತೇ?. ಹತ್ತು ದಿನಗಳ ನಂತರ ಗಾಯ ವಾಸಿಯಾಗಿದ್ದರಿಂದ ಹಾಕಿದ ಹೊಲಿಗೆಯನ್ನೂ ಬಿಡಿಸಿಯಾಯ್ತು. ಇಷ್ಟಾದರೂ ಕಾಡುಕಾಯುವ ಗುರುತರ ಜವಾಬ್ದಾರಿ ಹೊಂದಿದ ಅರಣ್ಯ ಮತ್ತು ಹೆಬ್ಬಾವು ಹಿಡಿದು ಅದಕ್ಕೆ ಚುಚ್ಚುಮದ್ದು ನೀಡಲು ನಮಗೆ ಸಹಕಾರದ ಮಹಾನ್ ಆಶ್ವಾಸನೆ ನೀಡಿದ ಇಲಾಖೆಯ ಸಿಬ್ಬಂದಿಯ ಪತ್ತೆಯೇ ಇರಲಿಲ್ಲ.

ಹೆಬ್ಬಾವಿಗೆ ಅಪರೇಷನ್ ಮಾಡಿದ ಈ ಸುದ್ಧಿ ಮಾಧ್ಯಮದವರಿಗೆ ಹೇಗೋ ತಿಳಿದು ಅದು ಅನೇಕ ಪೇಪರ್ರುಗಳಲ್ಲಿ ಬಂದು ಸುತ್ತ ಮುತ್ತಲಿನ ಜನ ನಮ್ಮ ವಿಶೇಷ ಒಳರೋಗಿಯನ್ನು ನೋಡಲು ತಂಡೋಪ ತಂಡವಾಗಿ ಬರತೊಡಗಿದರು. ನಮ್ಮ ದಿನ ನಿತ್ಯದ ಕಾಯಕ ಬದಿಗೊತ್ತಿ ಹೆಬ್ಬಾವಿನ ಅಪರೇಶನ್ನಿನ ಕಥೆಯನ್ನೇ ಪ್ರಾರಂಭದಿಂದ ಹೇಳಿ ಹೇಳಿ ಸಾಕಾಗಿ ಹೋಯಿತು. ಶಾಲಾ ಮಕ್ಕಳು ಅಧ್ಯಯನ ಶಿಬಿರದಂತೆ ಬೇಟಿಕೊಡಲಾರಂಭಿಸಿದ್ದರಿಂದ ಹೆಬ್ಬಾವಿಗೂ ಕಿರಿ ಪ್ರಾರಂಭವಾಯಿತೇನೋ?

ಇದು ಪ್ರಾಣ ಬಿಟ್ಟರೆ ಹೆಬ್ಬಾವನ್ನು ಸ್ವರ್ಗಕ್ಕಟ್ಟಿದ ಪಶುವೈದ್ಯ ಸಿಬ್ಬಂದಿ ಇತ್ಯಾದಿ ಚಿತ್ರ ವಿಚಿತ್ರ ತಲೆಬರಹದಲ್ಲಿ ಸುದ್ಧಿ ಬರಬಹುದಾದ ಸಾಧ್ಯತೆ ನೆನೆದು ಅರಣ್ಯ ಇಲಾಖೆಯವರಿಗೆ ಈ ಹೆಬ್ಬಾವನ್ನು ಕೂಡಲೇ ಕಾಡಿಗೆ ಸೇರಿಸಬೇಕೆಂದು ಮೊರೆಯಿಟ್ಟೆ. ನನ್ನ ನಿರಂತರ ಮೊರೆ ಕೇಳಿ ಅವರು ಒಂದು ಶುಭ ದಿನದಂದು ಬಂದು ಅದನ್ನು ಗೋಣಿಚೀಲದಲ್ಲಿ ತುಂಬಿಕೊಂಡು ಸಮೀಪದ ಅಭಯಾರಣ್ಯದಲ್ಲಿ ಬಿಟ್ಟ ಕೂಡಲೇ ಒಮ್ಮೆಯೂ ತಿರುಗಿ ನೋಡದೇ ಸರಸರನೇ ಹರಿದು ದಟ್ಟ ಕಾಡಿನಲ್ಲಿ ಕಣ್ಮರೆಯಾಯ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending