ಲೈಫ್ ಸ್ಟೈಲ್
ಹೀಗೊಂದು ಹೆಬ್ಬಾವಿನ ಚಿಕಿತ್ಸೆ..!
- ಡಾ.ಎನ್.ಬಿ.ಶ್ರೀಧರ, ಪ್ರಾಧ್ಯಾಪಕರು, ವೆಟರ್ನರಿ ಕಾಲೇಜು, ಶಿವಮೊಗ್ಗ
ಅನೇಕ ಸಲ ನಮಗೆ ಹೊಸ ರೀತಿಯ “ಪೇಶಂಟು”ಗಳು ಬಂದು ಅಚ್ಚರಿಗೊಳಿಸುವುದುಂಟು. ಅದರಲ್ಲೂ ಕಾಡಿನಿಂದ ಬರುವ “ರೋಗಿ” ಗಳ ಚಿಕಿತ್ಸೆ ಒಂದು ಸವಾಲು. ಪಶುವೈದ್ಯಕೀಯ ಓದುವಾಗ ಈ ರೀತಿಯ ಯಕ:ಶ್ಚಿತ್ ಹುಳ ಹುಪ್ಪಟೆಗಳಂತ ಪ್ರಾಣಿಗಳನ್ನು ಚಿಕಿತ್ಸೆ ಮಾಡಬೇಕಾಬಹುದಾದ ಸಂದರ್ಭವೆಂದೂ ಬರದು ಎಂದು “ವೈಲ್ಡ್ ಲೈಫ಼್ ಚಿಕಿತ್ಸೆ”ಯ ಪಾಠ ಮಾಡುವಾಗ ದಿವ್ಯ ನಿರ್ಲಕ್ಷ್ಯದಿಂದಿರುವುದು ನಮ್ಮಲ್ಲಿ ಅನೇಕರಿಗೆ ಸಾಮಾನ್ಯವಾಗಿತ್ತು. ಒಂದಿಬ್ಬರು ಸಹೋದ್ಯೋಗಿ ವಿದ್ಯಾರ್ಥಿಗಳು ಈ ರೀತಿಯ ತರಹೇವಾರಿ ಪ್ರಾಣಿಗಳ ಕ್ರಿಮಿಕೀಟಗಳ ಚಿಕಿತ್ಸೆಯಲ್ಲಿ ಆಸಕ್ತಿ ವಹಿಸುವುದು ಬಿಟ್ಟರೆ ಉಳಿದವರ ಆಸಕ್ತಿ ಅಷ್ಟಕ್ಕಷ್ಟೇ. ನಮ್ಮದೇನಿದ್ದರೂ ದನ, ಎಮ್ಮೆ, ಬೆಕ್ಕು, ನಾಯಿ, ಕುದುರೆ, ಕೋಳಿ, ಹಂದಿ ಎಂಬಿತ್ಯಾದಿ ಹಲವು ಹತ್ತು ಸಾಕು ಪ್ರಾಣಿ ಕುಲಕೋಟಿಗಳ ಚಿಕಿತ್ಸೆ ಬಿಟ್ಟರೆ ಉಳಿದ ಪ್ರಾಣಿಗಳ ಗೊಡವೆ ನಮಗ್ಯಾಕೆ ಎಂಬ ದಿವ್ಯ ನಿರ್ಲಕ್ಷ್ಯವಿತ್ತು.
ಆದರೆ ಕೆಲವೊಮ್ಮೆ ಆಮೆ, ಮೊಸಳೆ, ಉಡ,ಕರಡಿ, ಚಿರತೆ, ಕಾಡುಕೋಣ ಇವುಗಳ ಚಿಕಿತ್ಸೆ ದುತ್ತನೇ ಬಂದು ತಲೆ ಕೆರೆದುಕೊಂಡ ಘಟನೆಗಳು ಅನೇಕ. ಆಮೆಯಂತ ಪ್ರಾಣಿಗಳನ್ನು ಸಾಕಿ “ಡಾಕ್ಟ್ರೇ. ನಮ್ಮನೆ ’ಕಣ್ವ’ (ಆಮೆಯ ಹೆಸರು) ಯಾಕೋ ಫುಡ್ಡೇ ತಿಂತಿಲ್ಲ. ಜ್ವರಾ ಬಂದಿದೆ ಅನ್ಸತ್ತೆ. ಸ್ವಲ್ಪ ನೋಡಿ” ಎಂದಾಗ “ಎಲಾ..ಈ ಆಮೆಗೆ ಹ್ಯಾಗೆ ಜ್ವರ ಪರೀಕ್ಷೆ ಮಾಡೋದು?” ಪಾಠ ಮಾಡುವಾಗ ಸ್ವಲ್ಪ ಆಸಕ್ತಿ ವಹಿಸಬೇಕಿತ್ತು” ಎಂದುಕೊಳ್ಳುತ್ತಾ ಇಂಜೆಕ್ಷನ್ ಕೊಡಬೇಕೆಂದು ಅದರ ಕಾಲನ್ನು ಎಳೆದು ಹಿಡಿದು ಸೂಜಿ ಚುಚ್ಚಬೇಕೆಂದುಕೊಂಡರೆ ಇದ್ದಕ್ಕಿದ್ದಂತೆ ಲಬಕ್ಕೆಂದು ತಲೆ ಕಾಲುಗಳನ್ನು ಒಳಗೆಳೆದುಕೊಂಡು ಕೂರ್ಮಾವತಾರ ತಳೆದು ಪಶುವೈದ್ಯ ಜ್ಞಾನ ಅಣಕಿಸಿದ್ದಿದೆ.
ಬಹುಶ: ತೊಂಬತ್ತರ ದಶಕದ ದಿನಗಳಿರಬಹುದು. ಎಂದಿನಂತೆ ಪಶುಚಿಕಿತ್ಸೆಯಲ್ಲಿ ತೊಡಗಿದ್ದೆ. ಸಾಗರದ ಉರಗತಜ್ಞ ಮನ್ಮಥ ಕುಮಾರ್ ಸ್ಥಿರ ದೂರವಾಣಿಗೆ ಕರೆ ಮಾಡಿ “ಡಾಕ್ಟ್ರೇ. ಹೆಬ್ಬಾವಿಗೊಂದು ಚಿಕಿತ್ಸೆ ಆಗಬೇಕಿತ್ತು. ಆಸ್ಪತ್ರೆಯಲ್ಲಿರ್ತಿಲ್ಲಾ. ಬರ್ತಾ ಇರುವೆ” ಎಂದು ಅರ್ಧ ಘಂಟೆಯಲ್ಲಿ ಪ್ರತ್ಯಕ್ಷರಾದರು. ಜೊತೆಯಲ್ಲಿ ಅರಣ್ಯ ಇಲಾಖೆಯ ಖಾಕಿ ಪಡೆಯ ಸಾತ್ ಬೇರೆ. ನನ್ನ ಪೇಶಂಟ್ ಅವರ ಜೀಪಿನಲ್ಲಿಟ್ಟಿದ್ದ ಗೋಣಿಚೀಲದಲ್ಲಿತ್ತು. ಬೆಳಿಗ್ಗೆ ಸೋಮಾರಿತನದಿಂದ ಏಳುವ ಹುಡುಗರಿಗೆ “ಏಯ್. ಹೆಬ್ಬಾವಿನಂತೆ ಬಿದ್ದುಕೊಂಡಿದ್ದೆಯಲ್ಲೋ.. ಎಂದು ಬಯ್ಯುವವರು ನಿಜವಾಗಲೂ ಹೆಬ್ಬಾವಿನ ಸೋಮಾರಿತನ ಗಮನಿಸಬೇಕು. ಈ ಹೆಬ್ಬಾವು ಯಾರದೋ ಮನೆಯಲ್ಲಿ ದೊಡ್ಡ ಹೆಗ್ಗಣ ನುಂಗಿ ಹೊಟ್ಟೆ ಭಾರ ಆಗಿ ಸ್ವಲ್ಪ ರಿಲ್ಯಾಕ್ಸ್ ಮಾಡೋಣ ಎಂದು ಯಾರದೋ ಮನೆಯ ಒಳಗೆ ಸೇರಿ ಮಂಚದ ಅಡಿಗೆ ಸೇರಿಕೊಂಡು ಬಿಟ್ಟಿತ್ತಂತೆ.
ಮೊದಲೇ ಸೋಮಾರಿ. ಹೆಗ್ಗಣ ಹೊಟ್ಟೆಯಲ್ಲಿರುವುದರಿಂದ ಇನ್ನೂ ಸೋಮಾರಿಯಾಗಿ ಮಂಚದಡಿ ನಿದ್ದೆ ಹೊಡೆದಿದೆ. ಮನೆಯೊಡತಿ ಸೌತೆಕಾಯಿಯ ಜಾತಿಯ ಮೊಗೆ ಕಾಯಿಯ ಜ್ಯೂಸ್ ಮಾಡೋಣ ಎಂದು ಮಂಚದಡಿ ಒಂದೆರಡು ಹಣ್ಣಾದ ಮೊಗೆಕಾಯಿ(?)ಗಳಿಗಾಗಿ ಹುಡುಕಲು ತಡಕಾಡಿದಾಗ ನಿಧಾನವಾಗಿ ಮಿಸುಕಾಡುವ “ತಣ್ಣನೆ”ಯ ಸರೀಸ್ರಪ ಕೈಗೆ ತಾಗಿ ನಂತರ ಅದು ಹೆಬ್ಬಾವು ಎಂದು ಗೊತ್ತಾಗಿ ಗಾಬರಿಗೊಂಡಿದ್ದಾರೆ. ಮನೆಯವರು ಮತ್ತು ಸುತ್ತಲೂ ಇರುವ ಜನ ಈ ವಿಶೇಷ ಅತಿಥಿಯ ಬೀಳ್ಕೊಡುಗೆಯ ಸಮಾರಂಭವೇರ್ಪಡಿಸಲು ಪ್ರಯತ್ನ ಪಟ್ಟಿದ್ದಾರೆ. ಹೆಬ್ಬಾವೂ ಸಹ ಗಾಬರಿಗೊಂಡು ಪೆಟ್ಟಿಗೆಯಾಕಾರದ ಮಂಚದ ಗೂಡಿನಲ್ಲಿ ಸೇರಿಕೊಂಡು ಬಿಟ್ಟಿದೆ.
ಕಿರಿದಾದ ಗ್ಯಾಪಿನಿಂದ ಅದನ್ನು ಹೊರತರಲು ಅದರ ಉದ್ದನೆಯ ಬಾಲ ಹಿಡಿದು ಜನರೆಲ್ಲಾ ಸೇರಿ ಎಳೆದಾಗ ಹೆಗ್ಗಣ ಹೊಟ್ಟೆಯೊಳಗಿರುವುದರಿಂದ “ಹೊಟ್ಟೆ ಡುಮ್ಮಣ್ಣ”ನಾಗಿದ್ದರಿಂದ ಮಂಚದ ಸಣ್ಣ ಗ್ಯಾಪಿನಲ್ಲಿ ಸಿಕ್ಕಿ ಹಾಕಿಕೊಂಡು ಅದರ ಚರ್ಮ ಸುಲಿದು ಬಿಡಿಸಿದ ಹಲಸಿನ ಹಣ್ಣಿನ ಪರಿಸ್ಥಿತಿಯಾಗಿದೆ. ಚೀನಾದಲ್ಲಾದರೆ ನಮಗೆ “ಹೋಳಿಗೆಯೇ ಜಾರಿ ತುಪ್ಪಕ್ಕೆ ಬಿದ್ದಹಾಗೇ” ಎಂಬ ಗಾದೆಯ ಹಾಗೇ “ಹಾವು ಅಡಿಗೆ ಮನೆಗೆ ಬಂದಹಾಗೆ” ಎಂಬ ಗಾಧೆ ಅನ್ವರ್ಥವಾಗಿ ಎಲ್ಲರಿಗೂ ಇದೊಂದು ವಿಶೇಷ “ಹೆಬ್ಬಾವಿನ ಹಬ್ಬ”ವಾಗಿ ಅದಕ್ಕೆ ತರತರದ ಮಸಾಲೆ ಹಾಕಿ ವಿವಿಧ ಖಾದ್ಯ ಮಾಡಿ ಹುರಿದು ಮುಕ್ಕುತ್ತಿದ್ದರೇನೋ?. ಅಷ್ಟೊತ್ತಿಗೆ ಜನ ಮನ್ಮಥಕುಮಾರನ್ನು ಕರೆಸಿದಾಗ ಹೆಬ್ಬಾವಿಗೆ ಆದ ಗಾಯ ನೋಡಿ ಅವರು ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕರೆ ಮಾಡಿದರು.
ಹೆಬ್ಬಾವು ತುಂಬಾ ಗಾಯಗೊಂಡಿತ್ತು. ಐದಾರು ಜನ ಹಿಡಿದು ಎಳೆದ ಹೊಡೆತಕ್ಕೆ ಹೊಟ್ಟೆಯ ಭಾಗದ ಚರ್ಮದ ಮೇಲ್ಪದರ ಹಿಸಿದು ಹೋಗಿ ಅಂಗಾಂಗಗಳೆಲ್ಲಾ ಹೊರಚೆಲ್ಲಿಕೊಂಡು ವಿಕಾರವಾಗಿ ಕಾಣುತ್ತಿದ್ದವು. ಅವೆಲ್ಲಾ ಕೆಸರುಮಯವಾಗಿ ಮೂಲ ಬಣ್ಣವೇನು ಎಂಬುದೇ ಗೊತ್ತಾಗುತ್ತಿರಲಿಲ್ಲ. ಇಷ್ಟಿದ್ದರೂ ಸಹ ಸಹ ಹೆಬ್ಬಾವು ಪಿಳಿ ಪಿಳಿ ಎಂದು ಉದ್ದನೆಯ ನಾಲಿಗೆಯನ್ನು ಹೊರಹಾಕಿ ಒಳಗೆಳೆದುಕೊಂಡು ತನ್ನ ಬದುಕಿರುವಿಕೆಯನ್ನು ನಿರ್ವಿಕಾರವಾಗಿ ತೋರಿಸುತ್ತಿತ್ತು.
ಇದರ ಚಿಕಿತ್ಸೆಗೆ ಸುಮಾರು ಎರಡು ತಾಸು ಸಮಯ ಬೇಕು. ನಮ್ಮ ಆಸ್ಪತ್ರೆಯಲ್ಲಿ ಆಗ ಅಪರೇಷನ್ ಟೇಬಲ್ಲು ಇರಲಿಲ್ಲ. ಎರಡು ಗಂಟೆಗಳ ಕಾಲ ಕುಳಿತು ಈ ಕೈಂಕರ್ಯ ಮಾಡಿದರೆ ಬೆನ್ನು ಸೊಂಟ ಬಿದ್ದು ಹೋಗುತ್ತಿತ್ತು. ಈ ಜೀವಿಯ ಚಿಕಿತ್ಸೆಗೆ ಯಾರನ್ನೇನು ಕೇಳುವುದು ಎಂದು ನನ್ನ ಮನೆಯಲ್ಲಿದ್ದ ಟೀಪಾಯಿಯನ್ನು ತರಿಸಿ ಅದನ್ನೇ ಅಪರೇಷನ್ ಟೇಬಲ್ ಮಾಡಿಕೊಂಡೆ. ಈಗಿನಂತೆ ಮೊಬೈಲು, ವಾಟ್ಸಾಪ್ಪುಗಳಿರದೇ ಇರುವುದರಿಂದ ಯಾರನ್ನು ಕೇಳುವುದು?.
ನನ್ನ ಬಳಿಯಿರುವ ಪಶುವೈದ್ಯಕೀಯ ಗ್ರಂಥಗಳನ್ನು ಕೆದಕಿ ಅಧ್ಯಯನ ಮಾಡಿ ಅವಶ್ಯವಿರುವ ಅರಿವಳಿಕೆಗಳು, ಜೀವನಿರೋಧಕಗಳು, ಹೊಲಿಗೆ ದಾರ, ಸೂಜಿ ಇವನ್ನೆಲ್ಲ್ಲಾ ಸಾಗರದ ಮೆಡಿಕಲ್ಲಿನಿಂದ ತರಿಸಿದೆ. ಮನ್ಮಥಕುಮಾರ್ ಹೆಬ್ಬಾವಿನ ನಿಯಂತ್ರಣ ಸಾಧಿಸಿಕೊಟ್ಟರು. ಯಾವುದೋ ಕಚೇರಿ ಕೆಲಸಕ್ಕೆಂದು ಕಾರ್ಗಲ್ಲಿನಿಂದ ಬಂದ ಹಿರಿಯ ಪಶುವೈದ್ಯಕೀಯ ಪರೀಕ್ಷಕ ಶ್ರೀ ಪ್ರಭಯ್ಯಮಠ (ಅವರು ಈಗಿಲ್ಲ) ಮತ್ತು ಕೆರೆಯಪ್ಪ ಇವರೂ ಕೈಜೋಡಿಸಿದರು. ಅರಿವಳಿಕೆ ನೀಡಿದ ನಂತರ ಹೆಬ್ಬಾವಿನ ಹೊಟ್ಟೆಯಲ್ಲಿನ ವಿವಿಧ ಜೀವಜಠರಸಾಮ್ಲಗಳ ಸ್ನಾನದಿಂದ ಮಿಂದು ಇನ್ನೇನು ಜೀರ್ಣವಾಗಿ ಹಾವಿನ ರಕ್ತ ಸೇರಬೇಕಾಗಿದ್ದ ಅರೆ ಜೀವವಾಗಿದ್ದ ಹೆಗ್ಗಣವನ್ನು ಹೊರತೆಗೆದು, ಕರುಳಿನಂತಿರುವ ಅನೇಕ ಅಂಗಗಳನ್ನು ಸ್ವಚ್ಚಗೊಳಿಸಿ ಒಳಗೆ ಹಾಕಿ ವಿವಿಧ ಪದರಗಳಿಗೆ ಹೊಲಿಗೆ ಹಾಕಿ ಒಂದೆರಡು ಗಂಟೆಗಳ ಕಾಲದ ಪ್ರಯತ್ನದ ನಂತರ ಶಸ್ತ್ರಚಿಕಿತ್ಸೆ ಮುಗಿಯಿತು.
ಇದಾದ ನಂತರವೇ ಬಂದಿದ್ದು ನಿಜವಾದ ಪಜೀತಿ. ಈ ಉರಗಕ್ಕೆ ದಿನಾ ಜೀವ ನಿರೋಧಕ, ನಂಜುನಿವಾರಕ ಚುಚ್ಚು ಮದ್ದು ಒಂದು ವಾರ ನೀಡಬೇಕಲ್ಲ? ಯಾರು ನೀಡುವವರು? ಎಂಬ ಪ್ರಶ್ನೆ ಬಂತು. ಇಲ್ಲದಿದ್ದರೆ ಹೆಬ್ಬಾವು ನಂಜಾಗಿ ಸತ್ತು ಹೋಗುವ ಸಾಧ್ಯತೆ ಇತ್ತು. ಈ ಜೀವ ಜಂತಿಗೆ ಇಂಜೆಕ್ಷನ್ ಕೊಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗೆ ದಿನಾಲೂ ನಮ್ಮ ಆಸ್ಪತ್ರೆಯ ದರ್ಶನ ಮಾಡಿಸಲು ಹೇಳಿದೆ. ಅವರು ಅವರಿಗೆ ಇಂತಹ ಸಹಸ್ರ ಕೆಲಸ ಕಾರ್ಯಗಳಿವೆಯೆಂದೂ, ಕಾಡಿನ ಸಮಸ್ಥ ಜೀವಜಲಚರ ರಕ್ಷಣೆಯ ಭಾರ ಅವರ ಮೇಲಿದೆಯೆಂದೂ, ಸಾಗವಾನಿ, ಬೀಟೆ, ಶ್ರಿಗಂಧ ಇತ್ಯಾದಿ ದುಬಾರಿ ಮರಗಳನ್ನು ಮರಗಳ್ಳರಿಂದ ರಕ್ಷಣೆ ಮಾಡಬೇಕಾದ ಗುರುತರ ಜವಾಬ್ಧಾರಿಯಿರುವದರಿಂದ ನಮ್ಮ ಆಸ್ಪತ್ರೆಯಲ್ಲಿಯೇ ಇದನ್ನು “ಒಳರೋಗಿ”ಯಾಗಿ ಸೇರಿಸಿಕೊಂಡು ಚಿಕಿತ್ಸೆ ಮಾಡಬೇಕೆಂದು ಹಾಗೂ ಅವರು ದಿನಾ ಬಂದು ನಮಗೆ ಪೂರ್ಣ ಸಹಕಾರ ಕೊಡುವುದಾಗಿ ಕೋರಿಕೊಂಡರು. ಆಸ್ಪತ್ರೆಗೆ ಹೊಂದಿಕೊಂಡ ಮೊಲ ಸಾಕಣೆ ಕೇಂದ್ರವನ್ನು ಹೆಬ್ಬಾವಿಗೆ “ಒಳರೋಗಿ ಚಿಕಿತ್ಸಾ ಕೇಂದ್ರ” ಮಾಡಿ ಅಲ್ಲೊಂದು ಗೋಣಿಚೀಲ ಹಾಕಿ ಅದರ ಮೇಲಿಟ್ಟೆವು.
ಮೊದ ಮೊದಲು ತಣ್ಣಗೇ ಇರುವ ಈ ಶೀತರಕ್ತದ ಪ್ರಾಣಿಯನ್ನು ಮುಟ್ಟಲೂ ಅಸಹ್ಯಮಾಡಿಕೊಂಡು ಬೇಸರ ಪಟ್ಟುಕೊಂಡ ಕೆರಿಯಪ್ಪ ನಿಧಾನವಾಗಿ ಅದರ ಮೇಲೆ ಮಮತೆ ಬೆಳೆಸಿಕೊಂಡ. ಅದರ ಹಸಿವು ನೀಗಲು ಒಂದೆರಡು ಕಪ್ಪೆಗಳನ್ನು ಹಿಡಿದು ಆ ರೂಮಿನಲ್ಲಿ ಬಿಟ್ಟ. ಈ ಸೋಮಾರಿ ಹೆಬ್ಬಾವು ಚುರುಕಾಗಿರುವ ಕಪ್ಪೆಗಳನ್ನು ಬೆನ್ನು ಹತ್ತಿ ಬೇಟೆ ಮಾಡುವ ಬಗ್ಗೆ ಸಂಪೂರ್ಣ ಸಂಶಯವಿತ್ತು. ಈ ಕಪ್ಪೆಗಳೋ ಅವುಗಳ ಎಂದಿನ ಹುಟ್ಟುಗುಣದಂತೆ ಅಲ್ಲಿಂದಿಲ್ಲಿಗೆ, ಇಲ್ಲಿಂದಲ್ಲಿಗೆ ಎಗರಾಡಿ ಇಡೀ ರೂಮಿನಲ್ಲಿ ಕುಣಿದು ಕುಪ್ಪಳಿಸಿ ಹೆಬ್ಬಾವಿನ ಮೈಮೇಲೆಯೂ ಸವಾರಿ ಮಾಡಿ ಅವು ಅದರ ಆಹಾರವಾಗುವ ನಮ್ಮ ಬಯಕೆಯನ್ನೇ ನಿವಾಳಿಸಿ ಒಗೆದವು.
ಹೆಬ್ಬಾವಿನ ಜಾತಿಯ ಹಾವುಗಳು ಆಹಾರವಿಲ್ಲದೆಯೂ ಅನೇಕ ದಿನ ಬದುಕಬಲ್ಲವು ಮತ್ತು ಇದಕ್ಕೆ ಆಹಾರ ಹಾಕುವ ವ್ಯರ್ಥ ಪ್ರಯತ್ನ ಬೇಡವೆಂದರೂ ಸಹ ಅದರ ನೈಸರ್ಗಿಕ ಅಹಾರವಾದ ಇಲಿಗಳು, ಮೊಟ್ಟೆ ಇತ್ಯಾದಿಗಳನ್ನು ಅದಕ್ಕೆ ತಿನ್ನಿಸುವ ನಿರಂತರ ಪ್ರಯತ್ನ ಕೆರಿಯಪ್ಪನಿಂದ ನಡೆದೇ ಇತ್ತು. ಆಗಾಗ ತನ್ನ ನಾಲಿಗೆಯನ್ನು ಹೊರಚಾಚಿ ಒಳಗೆಳೆದುಕೊಂಡು ತಾನು ಬದುಕಿರುವಿಕೆಯನ್ನು ಹೆಬ್ಬಾವು ಖಚಿತಪಡಿಸುತ್ತಿತ್ತು. ಈಗಾಗಲೇ ಅದು ವಿಷರಹಿತ ಮತ್ತು ಅಪಾಯರಹಿತ ಎಂದು ಗೊತ್ತಾಗಿರುವುದರಿಂದ ಆರಾಮವಾಗಿ ಅದಕ್ಕೆ ಒಂದೈದಾರು ದಿನ ಅವಶ್ಯಕ ಚುಚ್ಚುಮದ್ದು ನೀಡಿದೆವು.
ಚುಚ್ಚು ಮದ್ದಿನ ಮೂಲಕ ಔಷಧಿ ನೀಡದೆಯೇ ಇದಕ್ಕೆ ಗುಳಿಗೆ ತಿನ್ನಿಸಲಾದೀತೇ?. ಹತ್ತು ದಿನಗಳ ನಂತರ ಗಾಯ ವಾಸಿಯಾಗಿದ್ದರಿಂದ ಹಾಕಿದ ಹೊಲಿಗೆಯನ್ನೂ ಬಿಡಿಸಿಯಾಯ್ತು. ಇಷ್ಟಾದರೂ ಕಾಡುಕಾಯುವ ಗುರುತರ ಜವಾಬ್ದಾರಿ ಹೊಂದಿದ ಅರಣ್ಯ ಮತ್ತು ಹೆಬ್ಬಾವು ಹಿಡಿದು ಅದಕ್ಕೆ ಚುಚ್ಚುಮದ್ದು ನೀಡಲು ನಮಗೆ ಸಹಕಾರದ ಮಹಾನ್ ಆಶ್ವಾಸನೆ ನೀಡಿದ ಇಲಾಖೆಯ ಸಿಬ್ಬಂದಿಯ ಪತ್ತೆಯೇ ಇರಲಿಲ್ಲ.
ಹೆಬ್ಬಾವಿಗೆ ಅಪರೇಷನ್ ಮಾಡಿದ ಈ ಸುದ್ಧಿ ಮಾಧ್ಯಮದವರಿಗೆ ಹೇಗೋ ತಿಳಿದು ಅದು ಅನೇಕ ಪೇಪರ್ರುಗಳಲ್ಲಿ ಬಂದು ಸುತ್ತ ಮುತ್ತಲಿನ ಜನ ನಮ್ಮ ವಿಶೇಷ ಒಳರೋಗಿಯನ್ನು ನೋಡಲು ತಂಡೋಪ ತಂಡವಾಗಿ ಬರತೊಡಗಿದರು. ನಮ್ಮ ದಿನ ನಿತ್ಯದ ಕಾಯಕ ಬದಿಗೊತ್ತಿ ಹೆಬ್ಬಾವಿನ ಅಪರೇಶನ್ನಿನ ಕಥೆಯನ್ನೇ ಪ್ರಾರಂಭದಿಂದ ಹೇಳಿ ಹೇಳಿ ಸಾಕಾಗಿ ಹೋಯಿತು. ಶಾಲಾ ಮಕ್ಕಳು ಅಧ್ಯಯನ ಶಿಬಿರದಂತೆ ಬೇಟಿಕೊಡಲಾರಂಭಿಸಿದ್ದರಿಂದ ಹೆಬ್ಬಾವಿಗೂ ಕಿರಿ ಪ್ರಾರಂಭವಾಯಿತೇನೋ?
ಇದು ಪ್ರಾಣ ಬಿಟ್ಟರೆ ಹೆಬ್ಬಾವನ್ನು ಸ್ವರ್ಗಕ್ಕಟ್ಟಿದ ಪಶುವೈದ್ಯ ಸಿಬ್ಬಂದಿ ಇತ್ಯಾದಿ ಚಿತ್ರ ವಿಚಿತ್ರ ತಲೆಬರಹದಲ್ಲಿ ಸುದ್ಧಿ ಬರಬಹುದಾದ ಸಾಧ್ಯತೆ ನೆನೆದು ಅರಣ್ಯ ಇಲಾಖೆಯವರಿಗೆ ಈ ಹೆಬ್ಬಾವನ್ನು ಕೂಡಲೇ ಕಾಡಿಗೆ ಸೇರಿಸಬೇಕೆಂದು ಮೊರೆಯಿಟ್ಟೆ. ನನ್ನ ನಿರಂತರ ಮೊರೆ ಕೇಳಿ ಅವರು ಒಂದು ಶುಭ ದಿನದಂದು ಬಂದು ಅದನ್ನು ಗೋಣಿಚೀಲದಲ್ಲಿ ತುಂಬಿಕೊಂಡು ಸಮೀಪದ ಅಭಯಾರಣ್ಯದಲ್ಲಿ ಬಿಟ್ಟ ಕೂಡಲೇ ಒಮ್ಮೆಯೂ ತಿರುಗಿ ನೋಡದೇ ಸರಸರನೇ ಹರಿದು ದಟ್ಟ ಕಾಡಿನಲ್ಲಿ ಕಣ್ಮರೆಯಾಯ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.
http://Visit : www.suddidina.com
3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?
ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.
ಉದಾಹರಣೆ:
ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.
ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!
ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.
ಖಾತೆದಾರರು ಏನು ಮಾಡಬೇಕು?
1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.
2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.
3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

ದಿನದ ಸುದ್ದಿ
ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್ಗಳಾದ ಓಲಾ, ಉಬರ್, ರ್ಯಾಪಿಡೋ ನಂತಹ ಆ್ಯಪ್ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
http://Visit : www.suddidina.com
ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.
ನಮ್ಮ ಬಿಎಂಟಿಸಿ 2.0′ ಆ್ಯಪ್ನಲ್ಲಿ ಏನಿದೆ ಹೊಸತು?
ಖಾಸಗಿ ಆ್ಯಪ್ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್ನಲ್ಲಿ ಬಿಎಂಟಿಸಿ ನೆಟ್ವರ್ಕ್ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್ಗಳು ಸೇರಿದಂತೆ ಒಟ್ಟು 6,938 ಬಸ್ಗಳಿವೆ. ಪ್ರತಿದಿನ ಸರಾಸರಿ 6,200 ಬಸ್ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.
ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ:
ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
200 ಹೊಸ ಮಿನಿ ಬಸ್ಗಳ ಖರೀದಿ:
ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.
ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:
ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್ಗಳ ಪೈಕಿ 200 ಮಿನಿ ಎಸಿ ಇ-ಬಸ್ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

ದಿನದ ಸುದ್ದಿ
EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ
ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.
http://Visit : www.suddidina.com
ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.
ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.
ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.
ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.
ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.



