Connect with us

ದಿನದ ಸುದ್ದಿ

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ ; 2027 ಕ್ಕೆ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ : ಸಚಿವರಾದ ವಿ.ಸೋಮಣ್ಣ

Published

on

ಸುದ್ದಿದಿನ,ದಾವಣಗೆರೆ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು ಕಳೆದ ಎರಡೂವರೆಗೆ ತಿಂಗಳಿಂದ ಇದರ ಪ್ರಗತಿ ವೇಗ ಹೆಚ್ಚಿಸಲಾಗಿದೆ. ಒಟ್ಟು ಈ ಯೋಜನೆಗೆ 2406.73 ಎಕರೆ ಭೂಮಿ ಬೇಕಾಗಿದ್ದು ಈಗಾಗಲೇ 2119.16 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಹಾದುಹೋಗುವ 263.78 ಎಕರೆ ಜಮೀನಿನಲ್ಲಿ 246.20 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು 17.58 ಎಕರೆಯ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿದ್ದು ಕೆಲವೇ ದಿನಗಳಲ್ಲಿ ಪೂರ್ಣವಾಗಲಿದೆ ಎಂದರು.

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದ್ದು 2027 ರ ಜನವರಿಯೊಳಗಾಗಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ. ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ಅಭಿವೃದ್ದಿ ಮಾಡಲಾಗುತ್ತದೆ. ಇದೇ ಆರ್ಥಿಕ ವರ್ಷದ ಕೊನೆಯಾಗುವ ವೇಳೆಗೆ ಕನಿಷ್ಠ 4 ರಿಂದ 5 ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು ಇದಕ್ಕಾಗಿ 43 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ.

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಯೋಜನೆಗೆ ಈಗಾಗಲೇ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 115.11.08 ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ ಎಂದರು.

ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ; ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಕಡೆ ರೈಲ್ವೆ ಇಲಾಖೆಯಿಂದಲೇ ಮೇಲ್ಸೇತುವೆ ಹಾಗೂ ಕೆಳಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ದಾವಣಗೆರೆ ನಗರದ ಅಶೋಕ ಟಾಕೀಸ್ ಹತ್ತಿರ ರೈಲ್ವೆ ಲೈನ್ ಕೆಳಸೇತುವೆಗೆ ಸಂಪರ್ಕ ರಸ್ತೆ ನಿರ್ಮಾಣದ ಭೂ ನೇರ ಖರೀದಿಗೆ ರೂ.23.09 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು ಆದಷ್ಟು ಬೇಗ ಈ ಕಾಮಗಾರಿ ಮಾಡಲು ಅನುವು ಮಾಡಿಕೊಡಲಾಗುತ್ತದೆ ಎಂದರು.

ರೈಲ್ವೆ ವೇಗ ಹೆಚ್ಚಿಸಲು ಕ್ರಮ; ರೈಲ್ವೆ ಇಂಜಿನ್‍ಗಳು ಬಹುತೇಕ ಶೇ 98 ರಷ್ಟು ವಿದ್ಯುತ್ ಚಾಲಿತವಾಗಿದ್ದು ಶೇ 2 ರಷ್ಟು ಮಾತ್ರ ಡೀಸೆಲ್ ಇಂಜಿನ್‍ಗಳಿವೆ. ರೈಲ್ವೆ ಪ್ರಯಾಣದ ವೇಗ ಪ್ರಸ್ತುತ 110 ಕಿ.ಮೀ ಇದ್ದು ಇದನ್ನು 135 ಕಿ.ಮೀ ವರೆಗೆ ವೇಗ ಹೆಚ್ಚಿಸುವ ಗುರಿಯೊಂದಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮಾಡಲಾಗುತ್ತಿದೆ. ವಂದೇ ಭಾರತ್ ರೈಲು ಬಡುವರು, ಮಧ್ಯಮ ವರ್ಗದವರಿಗೆ ತುರ್ತು ಪ್ರಯಾಣಕ್ಕಾಗಿ ಕೈಗೆಟಕುವ ದರದಲ್ಲಿ ಟಿಕೆಟ್ ಇದ್ದು ಇದರಲ್ಲಿ ನೀಡಲಾಗಿರುವ ಸೌಲಭ್ಯಗಳ ಬಗ್ಗೆ ಅರಿಯಲು ಪ್ರಯಾಣಿಸಬೇಕೆಂದರು.

ಕನ್ನಡದಲ್ಲೆ ರೈಲ್ವೆ ಪರೀಕ್ಷೆ; ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿ ಖಾಲಿ ಇರುವ 46 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.

ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ಸಭೆಯಲ್ಲಿ ಮಾತನಾಡಿ ದಾವಣಗೆರೆ ನಗರದಲ್ಲಿನ ಮೀನು ಮಾರುಕಟ್ಟೆ ಬಳಿ ರೈಲ್ವೆ ಮೇಲ್ಸೇತುವೆ ಅಥವಾ ಕೆಳಸೇತುವೆ ಅಗತ್ಯವಾಗಿದೆ. ಅಶೋಕ ಟಾಕೀಸ್ ಹತ್ತಿರ ರಸ್ತೆ ಕಿರಿದಾಗಿದ್ದು ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು, ಲಿಂಗೇಶ್ವರ ದೇವಸ್ಥಾನದ ಹತ್ತಿರ ಪಾದಚಾರಿ ಮಾರ್ಗ ನಿರ್ಮಿಸಲು, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಮಾರ್ಗದಲ್ಲಿ ಸೂರಗೊಂಡನಕೊಪ್ಪ ಅಥವಾ ನ್ಯಾಮತಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಅವಕಾಶ ಮಾಡಲು, ಹರಿಹರದಲ್ಲಿನ ರೈಲ್ವೆ ಆಸ್ಪತ್ರೆ, ಸ್ಕೂಲ್ ಮೇಲ್ದರ್ಜೆಗೇರಿಸಲು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.

ಹರಿಹರ ಶಾಸಕರಾದ ಬಿ.ಪಿ.ಹರೀಶ್ ಹೊಸಪೇಟೆ ಹೋಗುವ ಹೆದ್ದಾರಿಯಲ್ಲಿ ಒಂದೇ ರೈಲ್ವೆ ಸೇತುವೆ ಇದ್ದು ಮತ್ತೊಂದು ಬ್ರಿಡ್ಜ್ ನಿರ್ಮಾಣ ಮಾಡಬೇಕು, ಮಳೆ ಬಂದಾಗ ಈ ಮಾರ್ಗದ ವಾಹನಗಳಿಗೆ ತೊಂದರೆಯಾಗುವುದರಿಂದ ರೈಲ್ವೆ ಸೇತುವೆಯ ಅವಶ್ಯಕತೆ ಇದೆ ಎಂದರು.

ಸಭೆಯಲ್ಲಿ ಮೇಯರ್ ಚಮನ್ ಸಾಬ್, ದೂಡಾ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ರೈಲ್ವೆ ಹಿರಿಯ ಅಧಿಕಾರಿ ಶರ್ಮಾ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

Published

on

ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.

ಸೇವೆಯನ್ನು ಈ ಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 26 ಕೊನೆಯ ದಿನವಾಗಿದೆ.

ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಶಿಷ್ಯ ವೇತನ ನೀಡಲಾಗುವುದು. ತರಬೇತಿಯು 2026 ರ ಜನವರಿಯಿಂದ ಡಿಸೆಂಬರ್‍ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.

ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದಿರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೆಕ್ಕೆಜೋಳ ಖರೀದಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ರೈತರಿಂದ ಎಕರೆಗೆ 12 ಕ್ವಿಂಟಾಲ್ ಹಾಗೂ ಗರಿಷ್ಠ 50 ಕ್ವಿಂಟಾಲ್‌ನಂತೆ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400.00 ರಂತೆ ಖರೀದಿಸಲಾಗುವುದು. ಮೆಕ್ಕೆಜೋಳ ಖರೀದಿದಾರರು ಡಿಸ್ಟಿಲರಿ ಮಾಲೀಕರಿಂದ ಮಾರಾಟದ ಮೊತ್ತ ಪಡೆದ ದಿನಾಂಕದಿಂದ ಮೂರು ದಿನಗಳಲ್ಲಿ ಸಂಬಂಧಪಟ್ಟ ರೈತರಿಗೆ ಡಿಬಿಟಿ ಮೂಲಕ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಗೆ ಎನ್‌ಇಎಂಎಲ್ (NEML) ಸಂಸ್ಥೆಯ ತಂತ್ರಾಂಶ ಅಳವಡಿಸಿಕೊಂಡು ಸರ್ಕಾರದ ಪ್ರೂಟ್ಸ್ ಪೊರ್ಟಲ್(FRUITS Portal) ಮತ್ತು ಡಿಬಿಟಿ ಸಂಯೋಜನೆಯೊಂದಿಗೆ ರೈತರ ನೊಂದಣಿ ಕಾರ್ಯ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ 730 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಗುರಿಯನ್ನು ಹೊಂದಲಾಗಿದೆ. ರೈತರು ಮೆಕ್ಕೆಜೋಳ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಇದರ ಪ್ರಯೋಜನೆ ಪಡೆದುಕೊಳ್ಳುವಂತೆ ತಿಳಿಸಿದರು. ಸಹಕಾರ ಇಲಾಖೆ ಮತ್ತು ಎಪಿಎಂಸಿ ಅಧಿಕಾರಿಗಳು ಮೆಕ್ಕೆಜೋಳ ಖರೀದಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಮುದ್ರಿಸಿ ರೈತರಿಗೆ ನೀಡಬೇಕು. ಮೆಕ್ಕೆಜೋಳ ಖರೀದಿಯಲ್ಲಿ ಯಾವುದೇ ಗೊಂದಲ ಆಗದಂತೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಅಬಕಾರಿ ಇಲಾಖೆಯ ಉಪ ಆಯುಕ್ತ ಜುನೈದ್ , ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending