ದಿನದ ಸುದ್ದಿ
ನೈತಿಕತೆ ಜಾರುತ್ತಿದೆ ಅಂತ ತೋರಿಸಿತು ಜಾರಕಿಹೊಳಿ ಎಪಿಸೋಡು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2021/03/Ramesh-Jarkiholi_suddidina-88.jpg&description=ನೈತಿಕತೆ ಜಾರುತ್ತಿದೆ ಅಂತ ತೋರಿಸಿತು ಜಾರಕಿಹೊಳಿ ಎಪಿಸೋಡು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2021/03/Ramesh-Jarkiholi_suddidina-88.jpg&description=ನೈತಿಕತೆ ಜಾರುತ್ತಿದೆ ಅಂತ ತೋರಿಸಿತು ಜಾರಕಿಹೊಳಿ ಎಪಿಸೋಡು', 'pinterestShare', 'width=750,height=350'); return false;" title="Pin This Post">
- ಆರ್.ಟಿ.ವಿಠ್ಠಲಮೂರ್ತಿ
ಕರ್ನಾಟಕದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಹಲ ಸಚಿವರು ಕೂಡಾ ತಮ್ಮ ಸುತ್ತ ಇಂತಹ ವಿವಾದಗಳು ಸುತ್ತಿಕೊಳ್ಳಬಹುದು ಎಂಬ ಆತಂಕದಿಂದ ನ್ಯಾಯಾಲಯದ ಕಟಕಟೆ ಏರಿದ್ದಾರೆ.
ಜಾರಕಿಹೊಳಿ ಅವರ ಪ್ರಕರಣದ ಬಗ್ಗೆ ಹಲವು ರೀತಿಯ ಚರ್ಚೆಗಳಾಗುತ್ತಿವೆ.ಇದು ಬ್ಲಾಕ್ ಮೇಲ್ ಎಂಬುದರಿಂದ ಹಿಡಿದು ಮಹಿಳೆಯ ಜತೆಗಿನ ಸಂಬಂಧ ಪರಸ್ಪರ ಸಮ್ಮತಿಯದೇ ಹೊರತು ಕಿರುಕುಳ ಅಲ್ಲ ಎಂಬಲ್ಲಿಯವರೆಗೆ ಚರ್ಚೆ ಸಾಗಿದೆ. ಆದರೆ ಪ್ರಶ್ನೆ ಇರುವುದು ನೈತಿಕತೆಯದು.
ಯಾಕೆಂದರೆ ಅವರಿಗೆ ಧರ್ಮಪತ್ನಿ ಇದ್ದಾರೆ.ಧರ್ಮಪತ್ನಿ ಇರುವಾಗ ಈ ರೀತಿಯ ಸಂಬಂಧ ಸಾಧಿತವಾಗುವುದು ಸರಿಯೇ?ಎಂಬುದರಲ್ಲಿ. ಅದೇನೇ ಇರಲಿ,ಇವತ್ತು ರಮೇಶ್ ಜಾರಕಿಹೊಳಿ ಪ್ರಕರಣದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಚರ್ಚೆಗಳು ಒಂದು ವಿಷಯವನ್ನು ಸ್ಪಷ್ಟವಾಗಿ ಎತ್ತಿ ತೋರಿಸಿವೆ.ಅದೆಂದರೆ ನೈತಿಕತೆಯ ಚೌಕಟ್ಟನ್ನು ವ್ಯವಸ್ಥೆಯೇ ಸಡಿಲಿಸುತ್ತಾ ಬಂದಿರುವುದು.
ವಾಸ್ತವವಾಗಿ,ಇಂತಹದೊಂದು ಪ್ರಕರಣ ನಡೆದಿದೆ ಎಂಬುದು ಗೊತ್ತಾದ ಕೂಡಲೇ ನಮ್ಮ ವ್ಯವಸ್ಥೆ ರಮೇಶ್ ಜಾರಕಿಹೊಳಿ ಮಾಡಿದ್ದು ತಪ್ಪು ಎಂದು ಸ್ಪಷ್ಟವಾಗಿ ಹೇಳಬೇಕಿತ್ತು.
ಆದರೆ ರಮೇಶ್ ಜಾರಕಿಹೊಳಿ ಅವರು ಮಾಡಿದ್ದು ತಪ್ಪು ಎನ್ನುವ ಕೂಗು ಎದ್ದಾಗಲೇ,ಇದು ಕೆಲವರ ಷಡ್ಯಂತ್ರ ಎಂಬ ಅಪಸ್ವರ ಕೇಳಿ ಬಂತು.ಹಾಗೆಯೇ ಇದು ಪರಸ್ಪರ ಸಮ್ಮತಿಯ ಸಂಬಂಧ ಎಂಬ ಕೂಗು ತೇಲಿ ಬಂತು.
ಅದು ನಿಜವೂ ಇರಬಹುದು.ಆದರೆ ಪ್ರಶ್ನೆ ಇದ್ದುದು ಅಲ್ಲಲ್ಲ,ಜವಾಬ್ದಾರಿಯುತ ಸ್ಥಾನದಲ್ಲಿದ್ದ ರಮೇಶ್ ಜಾರಕಿಹೊಳಿ ಮಾಡಿದ್ದು ಸರಿಯೇ?ಎಂಬಲ್ಲಿ. ಈ ಪ್ರಶ್ನೆಯನ್ನು ಮುಂದಿಟ್ಟುಕೊಂಡರೆ ಸಮಾಜದ ನೈತಿಕತೆಯ ಬೇರುಗಳು ಹೇಗೆ ಸಡಿಲವಾಗುತ್ತಾ ನಡೆದಿವೆ?ಎಂಬುದು ಸ್ಪಷ್ಟವಾಗುತ್ತದೆ.
ಕೆಂಗಲ್ ಹನುಮಂತಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಟಿ.ಸಿದ್ಧಲಿಂಗಯ್ಯ ಮಂತ್ರಿಯಾಗಿದ್ದರು.ಒಂದು ಸಂದರ್ಭದಲ್ಲಿ ಅವರ ಸಹೋದರನಿಗೆ ವಿದ್ಯುತ್ ಇಲಾಖೆಯ ಗುತ್ತಿಗೆಯೊಂದು ಸಿಕ್ಕಿತು.
ಇದನ್ನೂ ಓದಿ | ರಾಜ್ಯ ಬಜೆಟ್ | 60 ಸಾವಿರ ಮಹಿಳೆಯರಿಗೆ ಉದ್ಯೋಗ : ಸಿಎಂ ಯಡಿಯೂರಪ್ಪ
ಇದು ಗೊತ್ತಾಗುತ್ತಿದ್ದಂತೆಯೇ ಸಿದ್ಧಲಿಂಗಯ್ಯ ಅವರು ಕೆಂಗಲ್ ಹನುಮಂತಯ್ಯ ಅವರನ್ನು ನೋಡಲು ಹೋದರು.ಅವರನ್ನು ನೋಡುತ್ತಲೇ ಕೆಂಗಲ್ ಹನುಮಂತಯ್ಯ ಅವರು:ನೀವು ಬಂದೇ ಬರುತ್ತೀರಿ ಎಂದು ನನಗೆ ಗೊತ್ತಿತ್ತು ಎಂದರು. ಸಿದ್ಧಲಿಂಗಯ್ಯ ಅವರು ಮರುಮಾತನಾಡದೆ ತಮ್ಮ ರಾಜೀನಾಮೆ ಪತ್ರವನ್ನು ಅವರಿಗೆ ಸಲ್ಲಿಸಿದರು.ವಸ್ತುಸ್ಥಿತಿ ಎಂದರೆ ತಮ್ಮ ಸಹೋದರನಿಗೆ ಇಂತಹ ಕಾಂಟ್ರಾಕ್ಟು ಕೊಡಿ ಎಂದು ಸಿದ್ಧಲಿಂಗಯ್ಯನವರು ಹೇಳಿರಲೇ ಇಲ್ಲ.
ಹಾಗಂತ ಹೇಳಿ ಕೆಂಗಲ್ ಹನುಮಂತಯ್ಯನವರು:ನಿಮ್ಮ ರಾಜೀನಾಮೆಯ ಅಗತ್ಯವಿಲ್ಲ ಎಂದರಾದರೂ ಸಿದ್ದಲಿಂಗಯ್ಯನವರು ಒಪ್ಪಲಿಲ್ಲ.ಬದಲಿಗೆ:ನಿಮಗೆ ಇದು ಗೊತ್ತಿದೆ.ಆದರೆ ಜನರಿಗೆ ಗೊತ್ತಾಗುವುದು ಹೇಗೆ?ಇದರ ನೈತಿಕ ಹೊಣೆ ಹೊರದೆ ಬೇರೆ ದಾರಿಯೇ ಇಲ್ಲ ಎಂದು ಹೇಳಿ ಬಂದರು.
ನಿಜಲಿಂಗಪ್ಪ ಅವರು ಮೊದಲು 1956 ರಲ್ಲಿ ಮುಖ್ಯಮಂತ್ರಿಯಾದರಲ್ಲ?ಆ ಸಂದರ್ಭದಲ್ಲಿ ತಮ್ಮ ಸಚಿವ ಸಂಪುಟಕ್ಕೆ ಸೇರುವಂತೆ ಅವರು ಶ್ರೀಮತಿ ಯಶೋದರಮ್ಮ ತುಳಸೀದಾಸಪ್ಪ ಅವರನ್ನು ಕೋರಿದ್ದರು.ಆಗವರು:ನೀವು ಪಾನ ನಿಷೇಧ ಮಾಡಲು ಒಪ್ಪಿಕೊಂಡರೆ ನಿಮ್ಮ ಸಂಪುಟ ಸೇರುತ್ತೇನೆ ಎಂದರು.
ಪಾನ ನಿಷೇಧ ಮಾಡುವ ವಿಷಯದಲ್ಲಿ ನಿಜಲಿಂಗಪ್ಪನವರಿಗೂ ಒಲವಿತ್ತು.ಹಾಗಂತಲೇ:ಖಂಡಿತ ಮಾಡೋಣ.ನೀವು ಮಂತ್ರಿ ಮಂಡಲಕ್ಕೆ ಸೇರಿ ಎಂದರು.ಆದರೆ ಮುಂದೆ ಪಾನ ನಿಷೇಧದ ಮಾತು ಬಂದಾಗ ನಿಜಲಿಂಗಪ್ಪ ಸಂಪುಟದ ಬಹುತೇಕ ಸಚಿವರು ಅಪಸ್ವರ ತೆಗೆದರು.
ಸರ್ಕಾರದ ಪ್ರಮುಖ ಆದಾಯ ಮೂಲ ಅದು.ಹೀಗಿರುವಾಗಿ ಪಾನನಿಷೇಧ ಮಾಡಿ ಸರ್ಕಾರವನ್ನು ಹೇಗೆ ನಡೆಸುತ್ತೀರಿ?ಏಂದು ಪ್ರಶ್ನಿಸಿದರು.ಆಗ ನಿಜಲಿಂಗಪ್ಪ ಅಸಹಾಯಕರಾಗಬೇಕಾಯಿತು.
ಆದರೆ ಇದನ್ನು ಒಪ್ಪದ ಶ್ರೀಮತಿ ಯಶೋದರಮ್ಮ ದಾಸಪ್ಪ ಅವರು ಮಂತ್ರಿ ಪದವಿಗೆ ರಾಜೀನಾಮೆ ನೀಡಿ ಹೊರಬಂದರು.
ಇದೇ ರೀತಿ ಮುಂದೆ ನಿಜಲಿಂಗಪ್ಪ ಅವರ ಸಚಿವ ಸಂಪುಟದಲ್ಲಿ ಎಂ.ವಿ.ರಾಮರಾವ್ ಅವರು ಗೃಹ ಸಚಿವರಾಗಿದ್ದಾಗ ಒಂದು ಘಟನೆ ನಡೆಯಿತು.
ಅವತ್ತು ಪೋಲೀಸ್ ಠಾಣೆಯೊಂದರಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ನಡೆದು ಆಕೆ ಅನಾಹುತ ಮಾಡಿಕೊಂಡಿದ್ದಳು.ಈ ವಿಷಯ ವಿಧಾನಸಭೆಯಲ್ಲಿ ಪ್ರಸ್ತಾಪವಾಯಿತು.
ಪ್ರತಿಪಕ್ಷದ ನಾಯಕರೊಬ್ಬರು:ಗೃಹ ಸಚಿವರೇ ಈ ವಿಷಯದ ಬಗ್ಗೆ ಹೆಚ್ಚು ಚರ್ಚೆ ಮಾಡುವುದು ಬೇಡ.ಆ ನೊಂದ ಹೆಣ್ಣು ಮಗಳ ಜಾಗದಲ್ಲಿ ನಿಮ್ಮ ಮಗಳು ಇದ್ದಿದ್ದರೆ ನೀವೇನು ಮಾಡುತ್ತಿದ್ದಿರಿ?ಎಂದು ಪ್ರಶ್ನಿಸಿದರು.
ಅವರ ಪ್ರಶ್ನೆ ಕೇಳಿ ಅರೆಕ್ಷಣ ಸ್ತಂಭೀಭೂತರಾದ ರಾಮರಾವ್ ಅವರು:ನೀವು ಹೇಳಿದ್ದು ನನ್ನ ಮನಸ್ಸು ಮುಟ್ಟಿದೆ ಎಂದು ಹೇಳಿದವರೇ ಮುಖ್ಯಮಂತ್ರಿಗಳಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು. ಇದೇ ರೀತಿ ನಿಜಲಿಂಗಪ್ಪ ಅವರ ಕಾಲದಲ್ಲಿ ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದ ರಾಮಕೃಷ್ಣ ಹೆಗಡೆ ಅವರು ಪಂಚಾಯ್ತ್ ಮಸೂದೆಯೊಂದನ್ನು ತಂದರು.ಅದನ್ನು ವಿಧಾನಮಂಡಲದಲ್ಲಿಟ್ಟು ಅಂಗೀಕಾರ ಪಡೆಯುವ ಮುನ್ನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಂಡಿಸಿದರು.
ಆಗೆಲ್ಲ ಒಂದು ಕಾಯ್ದೆಯನ್ನು ತರುವ ಮುನ್ನ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯುವ ಸಂಪ್ರದಾಯವಿತ್ತು.ಅದರನುಸಾರ ಹೆಗಡೆ ಕೂಡಾ ಆ ಮಸೂದೆಯನ್ನು ಪಕ್ಷದ ಶಾಸಕಾಂಗ ಸಭೆಯಲ್ಲಿ ಮಂಡಿಸಿದ್ದರು.
ಆದರೆ ಒಂದೇ ಮತದ ಅಂತರದಲ್ಲಿ ಹೆಗಡೆ ಅವರು ಶಾಸಕಾಂಗ ಸಭೆಯಲ್ಲಿ ಮಂಡಿಸಿದ ಮಸೂದೆಗೆ ಸೋಲಾಯಿತು.
ಇದರಿಂದ ನೊಂದ ಹೆಗಡೆ:ಇನ್ನು ಗ್ರಾಮೀಣಾಭಿವೃದ್ಧಿ ಸಚಿವನಾಗಿ ಮುಂದುವರಿಯುವುದು ನೈತಿಕತೆಯಲ್ಲ ಎಂದವರೇ ಮುಖ್ಯಮಂತ್ರಿಗಳಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು.
ಇದೇ ರೀತಿ ದೇವರಾಜ ಅರಸರ ಕಾಲದಲ್ಲಿ ಸಚಿವರಾಗಿದ್ದ ಆರ್.ಡಿ.ಕಿತ್ತೂರು ಅವರ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯೊಬ್ಬರು ನಾಪತ್ತೆಯಾದರು.ವಿಷಯ ಭಾರೀ ಕೋಲಾಹಲಕ್ಕೆ ಕಾರಣವಾಯಿತು.
ಆ ಸಂದರ್ಭದಲ್ಲಿ ಹಲವು ರೀತಿಯ ಮಾತುಗಳು ಕೇಳಿ ಬಂದವು.ಪರಿಣಾಮ?ಆರ್.ಡಿ.ಕಿತ್ತೂರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಆ ಸಂದರ್ಭದಲ್ಲಿ ಪ್ರತಿಪಕ್ಷಗಳ ನಾಯಕರೇ:ಬಾಳೇ ಹಣ್ಣು ತಿಂದವರು ಯಾರೋ?ಆದರೆ ಸಿಪ್ಪೆ ಹಿಡಿದುಕೊಂಡಿದ್ದ ಕಾರಣಕ್ಕಾಗಿ ಅರ್.ಡಿ.ಕಿತ್ತೂರ್ ರಾಜೀನಾಮೆ ಕೊಡಬೇಕಾಯಿತು ಎಂದು ಮಾತನಾಡಿಕೊಂಡರು.
ಮುಂದೆ ತಾವೇ ಮುಖ್ಯಮಂತ್ರಿಯಾದ ಕಾಲದಲ್ಲಿ ಬಾಟ್ಲಿಂಗ್ ಹಗರಣ ಮತ್ತು ಟೆಲಿಫೋನ್ ಟ್ಯಾಪಿಂಗ್ ಹಗರಣ ನಡೆದಾಗ ಹೆಗಡೆ ರಾಜೀನಾಮೆ ನೀಡಿದರು.
ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಅಂಬೇಡ್ಕರ್ ಪ್ರತಿಮೆಗೆ ತಮ್ಮ ಪುತ್ರ ಮಧ್ಯಾಭಿಷೇಕ ಮಾಡಿದ ಆರೋಪ ಕೇಳಿ ಬಂದಾಗ ಸಚಿವರಾಗಿದ್ದ ಬಿ.ಟಿ.ಲಲಿತಾನಾಯಕ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದರು. ಆದರೆ ಇಂತಹ ಸತ್ಸಂಪ್ರದಾಯಗಳು ಕ್ರಮೇಣ ಮರೆಯಾಗುತ್ತಾ ಹೋಗಿ ಈಗ ಯಾವ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದರೆ ತಪ್ಪು ಮಾಡಿದವರನ್ನೂ ಸಮರ್ಥನೆ ಮಾಡುವ ದೊಡ್ಡ ಜನಸಮೂಹ ಬೆಳೆದುನಿಂತಿದೆ.
ವಿಪರ್ಯಾಸವೆಂದರೆ ಮಾಡಿದ ತಪ್ಪು ಕಣ್ಣೆದುರಿಗಿದ್ದರೂ ತಪ್ಪು ಮಾಡಿದವರೇ ಸ್ವಾತಂತ್ರ್ಯ ಹೋರಾಟಗಾರರ ಫೋಜು ಕೊಡುತ್ತಾ ತಮ್ಮ ಕೈನ ಎರಡೂ ಬೆರಳುಗಳನ್ನು ಎತ್ತಿ ತೋರಿಸುತ್ತಾ,ವಿಜಯೋತ್ಸವ ಆಚರಿಸುತ್ತಾರೆ.
ಅಂದ ಹಾಗೆ ಆರೋಪಗಳಿಗೆ ನಾನಾ ಮುಖಗಳಿರಬಹುದು.
ಯಾರದೋ ಷಡ್ಯಂತ್ರವೂ ಇದಕ್ಕೆ ಕಾರಣವಾಗಿರಬಹುದು,ಆದರೆ ನಡೆದಿದ್ದು ತಪ್ಪು ಎಂಬುದು ಸ್ಪಷ್ಟವಾದಾಗ ಶಿಕ್ಷೆಯನ್ನು ಸ್ವೀಕರಿಸುವ ಮತ್ತು ತನಿಖೆಯನ್ನು ಎದುರಿಸುವ ಗುಣ ಇರಬೇಕು.ಇಂತಹ ವಾತಾವರಣ ಸೃಷ್ಟಿಗೆ ವ್ಯವಸ್ಥೆಯೂ ಬಲ ನೀಡಬೇಕು. ಆದರೆ ರಮೇಶ್ ಜಾರಕಿಹೊಳಿ ಪ್ರಕರಣ ಅಂತಹ ವಾತಾವರಣ ಸೃಷ್ಟಿಸಲು ವ್ಯವಸ್ಥೆಯೇ ತಯಾರಿಲ್ಲ ಎಂಬುದನ್ನು ಸಾಬೀತುಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
ಸುದ್ದಿದಿನ,ದಾವಣಗೆರೆ:ತಾಲ್ಲೂಕಿನ ಕಾಡಜ್ಜಿ ಗ್ರಾಮದ ದೇಗುಲಗಳಲ್ಲಿ ನಿಧಿ ಶೋಧಿಸಲು ಯತ್ನಿಸಿದ ಆರು ಜನರ ಆರೋಪಿಗಳನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಾಡಜ್ಜಿ ಗ್ರಾಮದ ಬಸವರಾಜ (42), ಮಲೇಬೆನ್ನೂರಿನ ಪ್ರಕಾಶ ಆಚಾರಿ (48), ಮಂಜುನಾಥ (51), ಪ್ರಕಾಶ (42), ಹೊನ್ನಾವರ ತಾಲ್ಲೂಕಿನ ಇಡಗುಂಜಿ ಗ್ರಾಮದ ರಾಮನಾಥ ಪೈ (52), ಸಾಗರ ತಾಲ್ಲೂಕಿನ ಬ್ಯಾಕೋಡು ಗ್ರಾಮದ ಶ್ರೀಕಾಂತ ಭಟ್ (51) ಬಂಧಿತರು.
ಆರೋಪಿಗಳು ಏ. 22ರಂದು ರಾತ್ರಿ ಕಾಡಜ್ಜಿ ಗ್ರಾಮದ ಚೌಡಮ್ಮ ದೇಗುಲದಲ್ಲಿ ನಿಧಿ ಶೋಧ ಮಾಡಿದ್ದರು. ಏ.29ರಂದು ರಾತ್ರಿ ಪೇಟೆ ದುರುಗಮ್ಮ ದೇಗುಲದ ಬಳಿ ಜೆಸಿಬಿ ಮೂಲಕ ಗುಂಡಿ ತೆಗೆದಿದ್ದರು. ದುಷ್ಟ ಶಕ್ತಿ ಪೂಜೆ, ಹೋಮ– ಹವನ ಮಾಡಿ ಗರ್ಭಗುಡಿಯಲ್ಲಿ ನಿಧಿ ತೆಗೆಯಲು ಮುಂದಾಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಆರೋಪಿಗಳನ್ನು ಹಿಡಿಯಲು ಯತ್ನಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆಯ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.
ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’ ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು. ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.
ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್ಸಿ ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.
ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ಎಸ್ಎಲ್ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ
ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್ ಶೇ. 97 ದ್ವಿತೀಯ ಹಾಗೂ ಸಮರ್ಥ್ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.
ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.
ಯಶಸ್ಸಿನ ಹಿಂದಿನ ಶಕ್ತಿ:
ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


