ನೆಲದನಿ
ಕೋಟೆ ನಾಡಿನಲ್ಲೊಂದು ಬಂಡಾಯ ದನಿ: ಡಾ.ಸಿ.ಶಿವಲಿಂಗಪ್ಪ ಮೀರಾಸಾಬಿಹಳ್ಳಿ
- ಡಾ.ಕೆ.ಎ.ಓಬಳೇಶ್
ಮಾನವನ ಬದುಕಿನ ಚಾರಿತ್ರಿಕ ಹಿನ್ನೆಲೆಯನ್ನು ಸೂಕ್ಷ್ಮವಾಗಿ ಗಮನಿಸುತ್ತ ಬಂದರೆ ಪ್ರತಿಯೊಬ್ಬ ವ್ಯಕ್ತಿಯು ಒಂದಿಲ್ಲೊಂದು ಕಾರಣಕ್ಕಾಗಿ ಪ್ರತಿಭಟನೆ ಮತ್ತು ಹೋರಾಟಗಳನ್ನು ಮುಂದುವರೆಸಿಕೊಂಡು ಬಂದಿದ್ದಾನೆ. ಈ ಪ್ರತಿಭಟನೆ ಮತ್ತು ಹೋರಾಟಗಳ ಸ್ವರೂಪ ಭಿನ್ನವಾಗಿರಬಹುದು. ಆದರೆ ಇವೆಲ್ಲ ಬಂಡಾಯ ಕೇಂದ್ರಿತವಾದವುಗಳೆ.
ಭಾರತದಂತಹ ಬಹುತ್ವದ ನಾಡಿನಲ್ಲಿ ಬಂಡಾಯವು ನಿರಂತರವಾದ ಪ್ರಕ್ರಿಯೆಯಾಗಿದೆ. ಇಲ್ಲಿನ ಅಸಮಾನತೆ, ಲಿಂಗತಾರತಮ್ಯ, ಅಸ್ಪೃಶ್ಯತೆಯಂತಹ ಅಮಾನವೀಯ ಆಚರಣೆಗಳ ವಿರುದ್ಧ ಹಲವಾರು ದಾರ್ಶನಿಕರು, ಚಿಂತಕರು ಹಾಗೂ ಪ್ರಗತಿಪರರು ನಿರಂತರವಾದ ಬಂಡಾಯದ ಮೂಲಕವಾಗಿ ಹೋರಾಟಗಳನ್ನು ಮುನ್ನಡೆಸಿಕೊಂಡು ಬಂದಿದ್ದಾರೆ. ಕರ್ನಾಟಕದಲ್ಲಿ ಎಪ್ಪತ್ತರ ದಶಕದ ವೇಳೆಗೆ ತಳಸಮುದಾಯದಿಂದ ಬಂದ ಶಿಕ್ಷಿತ ಸಮುದಾಯವು ಇಂತಹ ಸಾಮಾಜಿಕ ಅಸಮಾನತೆಯ ವಿರುದ್ಧ ಚಳವಳಿಯನ್ನು ರೂಪಿಸುವ ಮೂಲಕ ಸಮಸಮಾಜಕ್ಕಾಗಿ ತುಡಿಯುತ್ತ ಬಂದಿದ್ದಾರೆ.
ಈ ಸಂದರ್ಭದಲ್ಲಿಯೇ ಬಂಡಾಯ ಸಾಹಿತ್ಯ ಸಂಘಟನೆ ಜನ್ಮತಳೆದು ‘ಖಡ್ಗವಾಗಲಿ ಕಾವ್ಯ ಜನರ ನೋವಿಗೆ ಮಿಡಿವ ಪ್ರಾಣಮಿತ್ರ’ ಎಂಬ ಘೋಷವಾಕ್ಯದ ಮೂಲಕ ಸಮತೆಯ ಭಾರತಕ್ಕಾಗಿ ಮಿಡಿದಿದೆ. ಎಂಬತ್ತರ ದಶಕದ ವೇಳೆಗೆ ಜನ್ಮತಳೆದ ಬಂಡಾಯ ಸಾಹಿತ್ಯ ಮತ್ತು ಚಳವಳಿಯನ್ನು ಮುನ್ನಡೆಸುವಲ್ಲಿ ಕರ್ನಾಟಕದ ಮೂಲೆ ಮೂಲೆಯಿಂದಲೂ ಪ್ರಜ್ಞಾವಂತ ಮನಸ್ಸುಗಳು ಶ್ರಮಿಸಿವೆ. ಇಂತಹ ಪ್ರಜ್ಞಾವಂತ ಮನಸ್ಸುಗಳಲ್ಲಿ ಕೋಟೆನಾಡಿನ ಪ್ರೊ.ಸಿ.ಶಿವಲಿಂಗಪ್ಪನವರು ಒಬ್ಬರಾಗಿದ್ದಾರೆ.
ಶ್ರೀಯುತ ಸಿ.ಶಿವಲಿಂಗಪ್ಪನವರು1955 ರಲ್ಲಿ ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕಿನ ಮೀರಾಸಾಬಿಹಳ್ಳಿಯಲ್ಲಿ ಶ್ರೀ ಚಿಕ್ಕೀರಪ್ಪ ಮತ್ತು ಶ್ರೀಮತಿ ಹನುಮಕ್ಕ ದಂಪತಿಗಳ ಹಿರಿಯ ಮಗನಾಗಿ ಜನಿಸಿದರು. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮವಾದ ಮೀರಾಸಾಬಿಹಳ್ಳಿಯಲ್ಲಿ, ಪ್ರೌಢ, ಪದವಿಪೂರ್ವ ಶಿಕ್ಷಣವನ್ನು ಚಳ್ಳಕೆರೆ ಮತ್ತು ಚಿತ್ರದುರ್ಗದಲ್ಲಿ, ಪದವಿ ಶಿಕ್ಷಣವನ್ನು ಚಳ್ಳಕೆರೆಯಲ್ಲಿ ಪೂರೈಸಿದರು.
ಪದವಿಪೂರ್ವ ಶಿಕ್ಷಣದಲ್ಲಿ ವಿಜ್ಞಾನ ವಿಷಯವನ್ನು ಆಯ್ದುಕೊಂಡು ಅಧ್ಯಯನ ಪೂರೈಸಿದ ನಂತರ ಮನೆಯಲ್ಲಿನ ಒತ್ತಡದ ಕಾರಣದಿಂದ ಒಂದು ವರ್ಷ ಶಿಕ್ಷಣವು ಮೊಟಕುಗೊಂಡಿತು. ನಂತರ ಪದವಿಯಲ್ಲಿ ಐಚ್ಚಿಕ ಕನ್ನಡವನ್ನು ಆಯ್ದುಕೊಂಡು ಅಧ್ಯಯನಕ್ಕೆ ಮುಂದಾದರು. ಓದಿನಲ್ಲಿ ವಿಶಿಷ್ಟವಾದ ಆಸಕ್ತಿಯನ್ನು ಹೊಂದಿದ್ದ ಇವರು ಪದವಿ ಹಂತದಲ್ಲಿಯೇ ಸಾಹಿತ್ಯದ ಅಭಿರುಚಿಯನ್ನು ಮೈಗೂಡಿಸಿಕೊಂಡಿದ್ದರು. ಇದರೊಂದಿಗೆ ಬಾಲ್ಯದ ದಿನಗಳಿಂದಲೂ ಗ್ರಾಮೀಣ ಪರಿಸರದಲ್ಲಿ ಬೆಳೆದ ಇವರು ಹಲವಾರು ಜನಪದ ಕಲೆಗಳನ್ನು ರೂಢಿಸಿಕೊಂಡಿದ್ದರು.
ಪದವಿ ಶಿಕ್ಷಣ ಪಡೆಯುವ ಹಂತಕ್ಕಾಗಲೇ ಸಾಮಾಜಿಕ ನಾಟಕಗಳಲ್ಲಿ ಅಭಿನಯಿಸುವ ಮೂಲಕ ಜನಪದ ಕಲೆಯಲ್ಲಿ ವಿಶಿಷ್ಟವಾದ ಅಭಿರುಚಿಯನ್ನು ಬೆಳೆಸಿಕೊಂಡಿದ್ದರು. ಪದವಿಯಲ್ಲಿ ಐಚ್ಚಿಕ ಕನ್ನಡವನ್ನು ಆಯ್ದುಕೊಂಡ ಕಾರಣದಿಂದಾಗಿ ತಮ್ಮ ಸುತ್ತಮುತ್ತಲಿನ ಜನಜೀವನ ಹಾಗೂ ಪ್ರಾಕೃತಿಕ ಪರಿಸರವನ್ನು ಆಪ್ತವಾಗಿ ಕಾಣುವ ಮತ್ತು ಇದು ನಮ್ಮದೆಂದು ಅರಿಯುವ ಸಂವೇದನೆ ಮೂಡಿತ್ತು.
ಗುರುಗಳಾದ ಮೀರಾಸಾಬಿಹಳ್ಳಿ ಶಿವಣ್ಣ, ಬಿ.ಪಿ.ವೀರೇಂದ್ರಕುಮಾರ್ ಹಾಗೂ ಬಿ.ಬಿ.ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಬೆಳೆದು, ಪಠ್ಯ ಮತ್ತು ಪಠ್ಯೇತರ ಚಟುವಟಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು.
ಪದವಿ ಹಂತದಲ್ಲಿ ಮೂಡಿದ ಸಾಹಿತ್ಯದ ಅಭಿರುಚಿಯಿಂದಾಗಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಮುಂದಾದರು. ಈ ಸಂದರ್ಭದಲ್ಲಿ ತನ್ನ ತವರು ಜಿಲ್ಲೆಯ ಒಡನಾಡಿಗಳಾದ ಪ್ರಹ್ಲಾದ್ ಅಗಸನಕಟ್ಟೆ, ಜಿ.ಎನ್.ಮಲ್ಲಿಕಾರ್ಜುನಪ್ಪ ಅವರೊಂದಿಗೆ ಆಪ್ತವಾದ ಒಡನಾಟ ಬೆಳೆಯಿತು. ಇವರ ಒಡನಾಟ ಮತ್ತಷ್ಟು ಗಟ್ಟಿಯಾಗಲು ಎಲ್ಲರ ಸಮಾನವಾದ ಬಡತನದ ಬದುಕು, ಸಂವೇದನೆ ಹಾಗೂ ಸಾಹಿತ್ಯಾಭಿರುಚಿಗಳು ಪ್ರಮುಖ ಕಾರಣವಾಗಿದ್ದವು.
ಇವರ ಒಡನಾಟದಿಂದಾಗಿ ಸಿ.ಶಿವಲಿಂಗಪ್ಪನವರಿಗೆ ಸಾಹಿತ್ಯದಲ್ಲಿ ಮತ್ತಷ್ಟು ಒಲವು ಮೂಡಿತು. ಪ್ರಹ್ಲಾದ್ ಅಗಸನಕಟ್ಟೆಯವರು ಅತ್ಯುತ್ತಮ ಕತೆಗಾರರಾಗಿದ್ದು, ಜಿ.ಎನ್.ಮಲ್ಲಿಕಾರ್ಜುನಪ್ಪನವರು ಸಾಹಿತ್ಯದ ಅಭಿರುಚಿಯನ್ನು ಹೊಂದಿದವರಾಗಿದ್ದರು. ಸ್ನಾತಕೋತ್ತರ ಅಧ್ಯಯನ ಮಾಡುವ ಹಂತದಲ್ಲಿಯೇ ಕನ್ನಡದ ಪ್ರಸಿದ್ಧ ಸಾಹಿತಿಗಳಾದ ಯು.ಆರ್.ಅನಂತಮೂರ್ತಿ, ದೇವನೂರು ಮಹಾದೇವ ಹಾಗೂ ಇತರೆ ಸಾಹಿತಿಗಳ ಸಂದರ್ಶನ, ಅವರೊಂದಿಗೆ ಸಾಹಿತ್ಯ ಮತ್ತು ಸಾಮಾಜಿಕ ಕಟ್ಟುಪಾಡುಗಳ ಕುರಿತು ಚರ್ಚೆಯಲ್ಲಿ ತಲ್ಲೀನರಾಗುತ್ತಿದ್ದರು.
ಇದೇ ಸಂದರ್ಭದಲ್ಲಿ ಆಗ ತಾನೇ ಸಮಸಮಾಜದ ಕನಸೊತ್ತು ಜನ್ಮತಳೆದಿದ್ದ ಲಂಕೇಶ್ ಪತ್ರಿಕೆಯ ಒಡನಾಟವನ್ನು ಬೆಳೆಸಿಕೊಂಡರು. ಹೀಗೆ ಆಪ್ತ ಸ್ನೇಹಿತರು ಹಾಗೂ ಕನ್ನಡದ ಹೆಸರಾಂತ ಸಾಹಿತಿಗಳ ಒಡನಾಟದಿಂದಾಗಿ ಇವರಿಗೆ ಸಾಹಿತ್ಯದಲ್ಲಿ ವಿಶೇಷವಾದ ಆಸಕ್ತಿ ಮೈಗೂಡಿತು. ಹಾಗೆಯೇ ಸಮಸಮಾಜದ ಆಶಯಗಳೊಂದಿಗೆ ಪಿ.ಲಂಕೇಶ್ ಅವರ ನೇತೃತ್ವದಲ್ಲಿ ಆರಂಭವಾದ ‘ಪ್ರಗತಿರಂಗ’ ಪಕ್ಷದ ಚಟುವಟಿಕೆಗಳಲ್ಲಿ ಒಲವುಳ್ಳ ಹಿನ್ನೆಯಲ್ಲಿ ಸ್ವಗ್ರಾಮವಾದ ಮೀರಸಾಬಿಹಳ್ಳಿಯಲ್ಲಿ ಸಮಾರಂಭವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಪಿ.ಲಂಕೇಶ್ ಅವರು ಆಗಮಿಸಿರುತ್ತಾರೆ.
ಶ್ರೀಯುತರು ಸ್ನಾತಕೋತ್ತರ ಪದವಿ ಪಡೆದ ನಂತರ 1981ರಲ್ಲಿ ಮೊದಲ ಬಾರಿಗೆ ತಾವು ಶಿಕ್ಷಣ ಪಡೆದ ಚಳ್ಳಕೆರೆ ಪ್ರಥಮ ದರ್ಜೆ ಕಾಲೇಜಿನಿಂದಲೇ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ಹೀಗೆ ಚಳ್ಳಕೆರೆಯಿಂದ ಆರಂಭವಾದ ವೃತ್ತಿ ಜೀವನವು ಚಿತ್ರದುರ್ಗ, ಸಕಲೇಶಪುರ, ಪರಶುರಾಮಪುರ, ಹೊನ್ನಾಳಿ, ಹಿರಿಯೂರುಗಳಲ್ಲಿ ಮುಂದುವರೆಯಿತು. ಸುಮಾರು 35 ವರ್ಷಗಳ ನಿರಂತರವಾದ ಬೋಧನೆಯೊಂದಿಗೆ ಪ್ರಾಂಶುಪಾಲರಾಗಿ 2015ರಲ್ಲಿ ವೃತ್ತಿಯಿಂದ ನಿವೃತ್ತಿ ಹೊಂದಿರುತ್ತಾರೆ. ತಮ್ಮ ವೃತ್ತಿ ಜೀವನದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಗುರುಗಳಾಗಿದ್ದವರು.
ಇವರು ವಿದ್ಯಾರ್ಥಿಗಳನ್ನು ಕೇವಲ ಪಠ್ಯಕ್ಕೆ ಮಾತ್ರ ಸೀಮಿತಗೊಳಿಸದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಕ್ರಿಯಾಶೀಲರಾಗುವಂತೆ ಮುನ್ನಡೆಸಿಕೊಂಡು ಬಂದಿರುತ್ತಾರೆ. ಹಾಗೆಯೇ ವಿದ್ಯಾರ್ಥಿಗಳಲ್ಲಿ ವೈಚಾರಿಕತೆ ಮತ್ತು ಸಾಮಾಜಿಕ ಅಸಮಾನತೆಯ ವಿರುದ್ಧ ಬಂಡಾಯ ಪ್ರಜ್ಞೆ ಮೂಡಿಸುವಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿರುತ್ತಾರೆ.
ಕಾಲೇಜಿನಲ್ಲಿ ನಡೆಸುವ ಪ್ರತಿಯೊಂದು ಕಾರ್ಯಕ್ರಮಗಳನ್ನು ಪ್ರಾರ್ಥನೆಯ ಮೂಲಕವೇ ಆರಂಭಿಸುವ ಸಾಂಪ್ರದಾಯಿಕ ಮಾದರಿಯನ್ನು ಬದಲಾಯಿಸಿ ‘ಬದುಕಿನ ಗೀತೆ’ಗಳ ಮೂಲಕ ಕಾರ್ಯಕ್ರಮವನ್ನು ಆರಂಭಿಸುವಲ್ಲಿ ಮಹತ್ವದ ಪಾತ್ರವಹಿಸಿರುತ್ತಾರೆ. ಹಾಗೆಯೇ ತಮ್ಮ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಭಾವೇದಿಕೆ ಭಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರವಹಿಸಿರುತ್ತಾರೆ.
ಬಾಲ್ಯದ ದಿನಗಳಿಂದಲೂ ಬಡತನದ ಕಹಿಯುಂಡು ಬೆಳೆದ ಶ್ರೀಯುತ ಸಿ.ಶಿವಲಿಂಗಪ್ಪನವರು ಸಾಮಾಜಿಕ ಅಸಮಾನತೆಯ ವಿರುದ್ಧ ವೈಚಾರಿಕ ದೃಷ್ಟಿಕೋನ ಬೆಳೆಸಿಕೊಂಡವರು. ಕುವೆಂಪು ಹಾಗೂ ಎಡಪಂಥಿಯ ಧೋರಣೆಯುಳ್ಳ ದಲಿತ-ಬಂಡಾಯ ಸಾಹಿತ್ಯ, ಚಳವಳಿಗಳ ಸಂಘಟನಾತ್ಮಕ ನಾಯಕತ್ವ ವಹಿಸಿಕೊಂಡಿದ್ದ ಬರಗೂರು ರಾಮಚಂದ್ರಪ್ಪನವರ ವೈಚಾರಿಕ ಚಿಂತನೆಗಳಿಂದ ಪ್ರಭಾವಿತರಾದ ಇವರು, ಬಂಡಾಯ ಚಳವಳಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ದುಡಿಯುತ್ತ ಬಂದಿದ್ದಾರೆ.
ಚಿತ್ರದುರ್ಗ ಜಿಲ್ಲಾ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿ, ಜಿಲ್ಲೆಯಾದ್ಯಂತ ಬಂಡಾಯದ ಪ್ರಜ್ಞೆಯನ್ನು ಪಸರಿಸುವಲ್ಲಿ ಇವರು ತೋರಿದ ಕ್ರಿಯಾಶೀಲತೆ ವಿಶಿಷ್ಟವಾಗಿದೆ. ತಾವು ಪಡೆದ ಶಿಕ್ಷಣ, ಸಾಹಿತ್ಯದ ಒಡನಾಟದಿಂದ ಪಡೆದುಕೊಂಡ ಸಂವೇದನೆ ಹಾಗೂ ಬಂಡಾಯ ಚಳವಳಿಯ ಪ್ರಭಾವದಿಂದ ಪಡೆದುಕೊಂಡ ವೈಚಾರಿಕ ಪ್ರಜ್ಞೆಯನ್ನು ಸ್ವತಃ ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು, ಪ್ರಯೋಗಕ್ಕೂ ಒಳಪಡಿಸಿರುತ್ತಾರೆ.
1985ರಲ್ಲಿ ಇವರು ತಮ್ಮ ವಿವಾಹ ಸಂದರ್ಭದಲ್ಲಿ ಯಾವುದೇ ಪೌರೋಹಿತ್ಯ, ವರದಕ್ಷಿಣೆ, ಆಡಂಬರವಿಲ್ಲದೆ, ಕುವೆಂಪು ಅವರ ಮಂತ್ರ ಮಾಂಗಲ್ಯ ಮತ್ತು ತಾವೇ ಬರೆದ ಬರಹವನ್ನು ವಾಚನ ಮಾಡುವ ಮೂಲಕ ದಾಂಪತ್ಯದ ಬದುಕಿಗೆ ಕಾಲಿಟ್ಟಿದ್ದಾರೆ.
ಶ್ರೀಯುತ ಸಿ.ಶಿವಲಿಂಗಪ್ಪನವರು ಬಂಡಾಯ ಸಾಹಿತ್ಯ ಸಂಘಟನೆಯ ಜಿಲ್ಲಾ ಸಂಚಾಲಕರಾಗಿ ಹಲವಾರು ಮಹತ್ತರವಾದ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.
1990ರಲ್ಲಿ ಚಳ್ಳಕೆರೆಯಲ್ಲಿ ರಾಜ್ಯಮಟ್ಟದ ಬಂಡಾಯ ಸಾಹಿತ್ಯ ಸಮಾವೇಶವನ್ನು ಗುಡಿಹಳ್ಳಿ ನಾಗರಾಜ್, ಎಂ.ಜಯಣ್ಣ, ಎಲ್.ರಮೇಶ್, ಸಿ.ಎಂ.ಮಹಾದೇವ, ಸಿ.ವಿ.ಪಾಟೀಲ್ ಇವರೊಂದಿಗೆ ಆಯೋಜಿಸುವಲ್ಲಿ ಮಹತ್ವದ ಪಾತ್ರವಹಿಸಿರುತ್ತಾರೆ. ಹಾಗೆಯೇ ಹಲವಾರು ಬಂಡಾಯ ಸಾಹಿತಿಗಳನ್ನು ಚಳ್ಳಕೆರೆ ಆಹ್ವಾನಿಸುವ ಮೂಲಕ ರಾಜ್ಯಕ್ಕೆ ಮಾದರಿಯಾದ ನೆಲೆಯಲ್ಲಿ ಬಿ.ಬಿ.ಪಾಟೀಲ್, ಮೀರಾಸಾಬಿಹಳ್ಳಿ ಶಿವಣ್ಣ, ಸಿ.ವೈ.ಶಿವರುದ್ರಪ್ಪ, ಪಿ.ಆರ್.ವೀರಭದ್ರ ನಾಯಕ, ಹೆಚ್.ಎಸ್.ಸಯ್ಯದ್ ಮುಂತಾದ ಸಂಗಾತಿಗಳೊಂದಿಗೆ ಇಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.
ಇವುಗಳಲ್ಲಿ ‘ಬರಗೂರು ರಾಮಚಂದ್ರಪ್ಪನವರ ಬದುಕು-ಬರಹ’ ಎಂಬ ವಿಚಾರ ಗೋಷ್ಠಿಗಳಿಂದ ಆರಂಭಗೊಂಡು, ಬಿ.ಟಿ.ಲಲಿತಾನಾಯಕ್, ಸಾರಾ ಅಬೂಬಕರ್, ಕಾಳೇಗೌಡ ನಾಗವಾರ, ಚಂದ್ರಶೇಖರ್ ಪಾಟೀಲ್ ಮುಂತಾದ ಬಂಡಾಯ ಸಾಹಿತಿಗಳ ತಾತ್ವಿಕ ಧೋರಣೆಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ವಿಶಿಷ್ಟ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ.
ಇವರು ಬಂಡಾಯ ಸಾಹಿತ್ಯ ಸಂಘಟನೆಗೆ ಮಾತ್ರ ಸೀಮಿತವಾಗದೆ, ಹಲವಾರು ದಲಿತ-ಬಂಡಾಯ ಚಳವಳಿ ಮತ್ತು ಹೋರಾಟಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವುಗಳಲ್ಲಿ ಬೆಂಡಿಗೆರೆ ಪ್ರಕರಣ, ಅನಸೂಯಮ್ಮನ ಪ್ರಕರಣ ಹಾಗೂ ಹಲವಾರು ಜೀವಪರ ಹೋರಾಟಗಳಲ್ಲಿ ತಮ್ಮ ಸಹಭಾಗಿತ್ವವನ್ನು ವ್ಯಕ್ತಪಡಿಸಿರುತ್ತಾರೆ.
ಮೈಸೂರು ವಿಶ್ವವಿದ್ಯಾಲಯ, ಮಾನಸ ಗಂಗೋತ್ರಿಯಲ್ಲಿ ಅಧ್ಯಯನ ಮಾಡುವ ಸಂದರ್ಭದಲ್ಲಿಯೇ ಚಿತ್ರದುರ್ಗ ಭಾಗದ ವಿದ್ಯಾರ್ಥಿಗಳೆಲ್ಲ ಸೇರಿಕೊಂಡು ಸ್ಥಾಪಿಸಿಕೊಂಡಿದ್ದ ‘ಮದಕರಿ ಬಳಗ’ದ ಚುನಾವಣೆಗೆ ಸ್ಪರ್ಧಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಹೀಗೆ ಸಂಘಟನೆ ಮತ್ತು ಹೋರಾಟದ ಹವ್ಯಾಸವನ್ನು ರೂಢಿಸಿಕೊಂಡು ಬಂದ ಶ್ರೀಯುತರು ದಲಿತ-ಬಂಡಾಯ ನೆಲೆಯ ಸಂಘಟನೆ, ಚಳವಳಿ ಹಾಗೂ ಹೋರಾಟಗಳ ಮುಖಾಂತರ ಅಸಮಾನತೆ, ಅನ್ಯಾಯ, ದೌರ್ಜನ್ಯದ ವಿರುದ್ಧ ದನಿ ಎತ್ತಿದವರಾಗಿದ್ದಾರೆ.
ನಂತರದ ದಿನಮಾನಗಳಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸೆನೆಟ್ ಚುನಾವಣೆಗೆ ಸ್ಪರ್ಧಿಸಿ ಅತ್ಯಧಿಕ ಮತಗಳಿಂದ ಜಯಶೀಲರಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವಾರು ವಿಶಿಷ್ಟ ಯೋಜನೆಗಳನ್ನು ಅನುಷ್ಠಾನಗೊಳಿಸಿರುತ್ತಾರೆ. ಹಾಗೆಯೇ ಕುವೆಂಪು ವಿಶ್ವವಿದ್ಯಾಲಯ ಕನ್ನಡ ಅಧ್ಯಾಪಕರ ಸಂಘಕ್ಕೆ ಎರಡು ಬಾರಿ ಅಧ್ಯಕ್ಷರಾಗಿ ಹಲವಾರು ಮಹತ್ವದ ಕಾರ್ಯಯೋಜನೆಗಳನ್ನು ರೂಪಿಸಿದ್ದಾರೆ.
ಅಧ್ಯಾಪಕರ ಹಿತಕ್ಕಾಗಿ ಸಂವಿಧಾನಬದ್ಧ ನೆಲೆಯಲ್ಲಿ ಹಲವಾರು ಶಾಂತಿಯುತ ಹೋರಾಟ ಮತ್ತು ಪ್ರತಿಭಟನೆಗಳನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುತ್ತಾರೆ. ಹಾಗೆಯೇ ವಿದ್ಯಾರ್ಥಿಗಳು ಹಾಗೂ ಕನ್ನಡ ಅಧ್ಯಾಪಕರ ಅಭಿರುಚಿಗೆ ತಕ್ಕಂತೆ ಕನ್ನಡ ಭಾಷಾ ಮತ್ತು ಐಚ್ಛಿಕ ಪಠ್ಯಗಳನ್ನು ರೂಪಿಸುವಲ್ಲಿ ಇವರು ತೋರಿದ ಕಾಳಜಿ ಅನನ್ಯವಾದದು.
ಶ್ರೀಯುತರು ಬಾಲ್ಯದ ದಿನಗಳಿಂದಲೇ ರಂಗಕಲೆಗಳಲ್ಲಿ ವಿಶೇಷವಾದ ಆಸಕ್ತಿಯನ್ನು ಮೈಗೂಡಿಸಿಕೊಂಡವರು. ಹೈಸ್ಕೂಲ್ ಹಂತದಲ್ಲಿಯೇ ಮೊದಲ ಬಾರಿಗೆ ‘ಅಣ್ಣ-ತಂಗಿ’ ಎಂಬ ಸಾಮಾಜಿಕ ನಾಟಕದಲ್ಲಿ ತಂಗಿಯ ಪಾತ್ರ ನಿರ್ವಹಿಸುವ ಮೂಲಕ ಪ್ರೇಕ್ಷಕರ ಮನಸೂರೆಗೊಂಡಿದ್ದರು. ಇವರ ಈ ಹವ್ಯಾಸವು ನಿರಂತರವಾಗಿ ಮುಂದುವರೆದುಕೊಂಡು ಬಂದಿತ್ತು. ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಅಧ್ಯಯನ ಮಾಡುವ ಸಂದರ್ಭದಲ್ಲಿ ಪ್ರತಿಯೊಂದು ಕಾರ್ಯಕ್ರಮಗಳಲ್ಲಿಯೂ ಇವರು ನಾಟಕ ಹಾಗೂ ಏಕಪಾತ್ರಾಭಿನಯವನ್ನು ಪ್ರದರ್ಶಿಸುವ ಮೂಲಕ ತಮ್ಮೊಳಗೆ ಅಂತರ್ಗತವಾಗಿದ್ದ ಕಲೆಯನ್ನು ಅಭಿವ್ಯಕ್ತಿಸುತ್ತ ಬಂದವರು.
ಇವರ ಆಂತರ್ಯದಲ್ಲಿ ಮನೆ ಮಾಡಿಕೊಂಡಿದ್ದ ನಟನ ಕಲೆಯು ಇವರನ್ನು ಸಿನಿಮಾ ಕ್ಷೇತ್ರದತ್ತ ಸೆಳೆಯುತಿತ್ತು. ಮಾನಸ ಗಂಗೋತ್ರಿಯಲ್ಲಿ ಅಧ್ಯಯನ ಮಾಡುವ ಸಂದರ್ಭದಲ್ಲಿ ತಮ್ಮ ಸ್ನೇಹಿತರಾದ ಮೆದೆಹಳ್ಳಿ ಶಿವಕುಮಾರ್ ಅವರೊಂದಿಗೆ ಒಮ್ಮೆ ಹೆಸರಾಂತ ಸಿನಿಮಾ ನಿರ್ಮಾಪಕರಾದ ಎಂ.ಪಿ.ಶಂಕರ್ ಅವರನ್ನು ಭೇಟಿ ಮಾಡಿ, ತಮಗೂ ಒಂದು ಅವಕಾಶ ನೀಡುವಂತೆ ವಿನಂತಿಸಿಕೊಂಡಿದ್ದರು. ಆಗ ಎಂ.ಪಿ.ಶಂಕರ್ ಅವರು ಅಲ್ಲಿಯೇ ಇದ್ದ ಉದಯೋನ್ಮುಖ ಸಿನಿಮಾ ನಟರನ್ನು ತೋರಿಸಿ, ಇವರ ಸಂಭಾವನೆ ಕೇವಲ ಒಂದು ಸಾವಿರ ಮಾತ್ರ.
ನೀವು ಇಲ್ಲಿ ಬಂದು ಜೀವನ ಕಟ್ಟಿಕೊಳ್ಳುವುದು ತುಂಬಾ ಕಷ್ಟ ಎಂದು ಬುದ್ಧಿಮಾತು ಹೇಳಿ ಕಳುಹಿಸಿದ್ದರು. ಅಂದಿನಿಂದ ಸಿನಿಮಾ ಜಗತ್ತಿನಿಂದ ದೂರ ಉಳಿದು ವಿದ್ಯಾಭ್ಯಾಸದ ಕಡೆ ತಮ್ಮ ಗಮನವನ್ನು ಕೇಂದ್ರೀಕರಿಸಿ, ಮುಂದೆ ಅಧ್ಯಾಪಕ ವೃತ್ತಿಯಲ್ಲಿಯೇ ಬದುಕನ್ನು ಕಟ್ಟಿಕೊಂಡರು. ಈ ನಡುವೆ ಬರಗೂರು ಮೇಷ್ಟುç ಅವರೊಂದಿಗಿನ ಒಡನಾಟದಿಂದಾಗಿ ಬಂಡಾಯ ಸಾಹಿತ್ಯ ಮತ್ತು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಹೀಗಾಗಿ ಇವರ ಬಹುದಿನ ಆಸೆಯನ್ನು ಬರಗೂರು ಮೇಷ್ಟ್ರು ಪೂರೈಸಿದಂತಾಯಿತು.
ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದಲ್ಲಿ ಮೂಡಿಬಂದ ‘ತಾಯಿ’ ಸಿನಿಮಾದಲ್ಲಿ ಮೊದಲ ಬಾರಿಗೆ ಚಿಕ್ಕ ಪಾತ್ರವನ್ನು ನಿರ್ವಹಿಸುವ ಮೂಲಕ ಇವರ ಬಹುದಿನದ ಕನಸು ಈಡೇರಿದಂತಾಯಿತು. ನಂತರ ‘ಶಬರಿ’ ಚಿತ್ರದಲ್ಲಿ ರಾಜಕಾರಣಿಯಾಗಿ, ‘ಜನಪದ’ ಚಿತ್ರದಲ್ಲಿ ಕಲಾವಿದರಾಗಿ, ‘ಭೂತಾಯಿ’ ಚಿತ್ರದಲ್ಲಿ ಎ.ಸಿ.ಪಿ ಅಧಿಕಾರಿಯಾಗಿ ಪಾತ್ರನಿರ್ವಹಿಸಿದ್ದಾರೆ. ಹೀಗೆ ತಮ್ಮ ಆಂತರ್ಯದೊಳಗೆ ಬಹುದಿನಗಳಿಂದ ನೆಲೆಯೂರಿದ್ದ ಸಿನಿಮಾ ಎಂಬ ಮಾಯಲೋಕದ ಕನಸು ಬರಗೂರು ಮೇಷ್ಟ್ರು ಮೂಲಕ ನೆರವೇರಿತು.
ಈ ಮೂಲಕ ಕನ್ನಡದ ಹೆಸರಾಂತ ನಟರಾದ ಕುಮಾರ್ ಗೋವಿಂದ್, ಶ್ರೀನಿವಾಸ್ಮೂರ್ತಿ, ಕಿಶೋರ್, ಸುಧಾರಾಣಿ, ರಾಧಿಕಾ, ಅನುಶ್ರೀ ಮುಂತಾದ ನಟರೊಂದಿಗೆ ಬಣ್ಣದ ಲೋಕದ ಅನುಭವವನ್ನು ಪಡೆದುಕೊಂಡರು.
ಶ್ರೀಯುತ ಸಿ.ಶಿವಲಿಂಗಪ್ಪನವರು ತಮ್ಮ ಪದವಿ ಶಿಕ್ಷಣದ ಹಂತದಿಂದಲೂ ಸಾಹಿತ್ಯಲ್ಲಿ ವಿಶೇಷವಾದ ಆಸಕ್ತಿಯನ್ನು ಬೆಳೆಸಿಕೊಂಡವರು. ಇಲ್ಲಿನ ಗುರುಗಳಾದ ಬಿ.ಬಿ.ಪಾಟೀಲ್, ಮೀರಾಸಾಬಿಹಳ್ಳಿ ಶಿವಣ್ಣ ಹಾಗೂ ಬಿ.ಪಿ.ವೀರೇಂದ್ರಕುಮಾರ್ ಅವರಂತಹ ಸಾಹಿತ್ಯಾಸಕ್ತ ಅಧ್ಯಾಪಕರ ತತ್ವ-ಸಿದ್ಧಾಂತಗಳಿಂದ ಪ್ರಭಾವಿತರಾಗಿ ಪದವಿ ಹಂತದಲ್ಲಿಯೇ ಕವಿತೆಗಳನ್ನು ಬರೆಯುವ ಹವ್ಯಾಸವನ್ನು ರೂಢಿಸಿಕೊಂಡವರು.
ನಂತರ ಸ್ನಾತಕೋತ್ತರ ಪದವಿಯ ಅಧ್ಯಯನದ ಸಂದರ್ಭದಲ್ಲಿ ನಾಡಿನ ಹಲವಾರು ಸಾಹಿತಿಗಳು ಮತ್ತು ಆಪ್ತ ಸ್ನೇಹಿತರ ಒಡನಾಟದಿಂದಾಗಿ ಇದು ಮತ್ತಷ್ಟು ಗಟ್ಟಿಕೊಂಡು ಸಾಹಿತ್ಯ ಕೃತಿಗಳ ವಿಮರ್ಶೆ ಮತ್ತು ತಮ್ಮ ಸುತ್ತಮುತ್ತಲಿನ ವಿದ್ಯಮಾನಗಳ ಕುರಿತು ಲೇಖನ ಬರೆಯುವ ಹವ್ಯಾಸವನ್ನು ರೂಢಿಸಿಕೊಂಡರು. 1988ರ ಸುಮಾರಿಗೆ ನಾಡಿನಲ್ಲಿ ಬರಗಾಲ ಬಂದು ಜನಜೀವನ ತುಂಬ ಸಂಕಷ್ಟಕ್ಕೆ ಒಳಗಾಗಿತ್ತು.
ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಬರಗಾಲದ ತಲ್ಲಣಗಳನ್ನು ಅಭಿವ್ಯಕ್ತಿಸುವ ನೆಲೆಯಲ್ಲಿ ನಾಡಿನ ವಿವಿಧ ಭಾಗದ ಸಾಹಿತಿಗಳಿಂದ ಕವಿತೆಗಳನ್ನು ಸಂಪಾದಿಸಿ ‘ಬರ’ ಎಂಬ ಕವನ ಸಂಕಲನವನ್ನು ಕನ್ನಡ ಸಾರಸ್ವತ ಲೋಕಕ್ಕೆ ಸಮರ್ಪಿಸಿದ್ದಾರೆ. ಇದರಲ್ಲಿ ಕನ್ನಡ ನಾಡಿನ ಹೆಸರಾಂತ ಮೂವತ್ತೊಂಭತ್ತು ಪ್ರಗತಿಪರ ಚಿಂತಕರ ಕವಿತೆಗಳನ್ನು ಸಂಗ್ರಹಿಸಲಾಗಿದೆ. ‘ಬರ’ ಎಂಬುದು ವಿಶೇಷವಾಗಿ ಶೋಷಿತರ ಬದುಕಿಗೆ ಅತ್ಯಂತ ಅಪಾಯಕಾರಿಯಾದದ್ದು. ಶ್ರಮಿಕನ ಬದುಕನ್ನು ತಿಂದು ಹಾಕುವ ಮಹಾಮಾರಿಯಾದ ಬರವನ್ನು ಕುರಿತು ಪ್ರಗತಿಪರ ಚಿಂತಕರು ವ್ಯಕ್ತಪಡಿಸಿರುವ ಜೀವಪರ ಆಶಯಗಳು ಇಲ್ಲಿನ ಕವಿತೆಗಳ ಮೂಲಕ ಅಭಿವ್ಯಕ್ತವಾಗಿವೆ.
ಈ ಕಾರಣದಿಂದಾಗಿ ಈ ಕವನ ಸಂಕಲನವು ಮೌಲ್ಯಯುತವಾಗಿದೆ. ನಂತರ 1998ರಲ್ಲಿ ‘ಆಷಾಡದ ಮುಗಿಲು’ ಎಂಬ ಕವನ ಸಂಕಲನವನ್ನು ಪ್ರಕಟಿಸಿರುತ್ತಾರೆ. ಇದು ಶಿವಲಿಂಗಪ್ಪನವರ ಸ್ವರಚಿತ ಕವನ ಸಂಕಲನವಾಗಿದೆ. ಇದರಲ್ಲಿ ಒಟ್ಟು ಮೂವತೈದು ಕವನಗಳಿವೆ. ಇಲ್ಲಿನ ಬಹುತೇಕ ಕವಿತೆಗಳು ಬಂಡಾಯದ ಸೈದ್ಧಾಂತಿಕತೆಯಿಂದ ಕೂಡಿವೆ. ಇದರಲ್ಲಿ ವಿಶೇಷವಾಗಿ ‘ಕಾಲ ಹಂಡಿ’ ಎಂಬ ಕವಿತೆಯು ಸದಾ ಹಸಿವಿಗಾಗಿ ಪರಿತಪಿಸುವ ಬಿಹಾರದ ಕಾಲ ಹಂಡಿಯ ಕುರಿತಾಗಿ ಜೀವಪರ ನಿಲುವುಗಳನ್ನು ವ್ಯಕ್ತಪಡಿಸುತ್ತದೆ.
‘ಬಿರುಗಾಳಿ’ ಎಂಬ ಕವಿತೆಯು ಪಶ್ಚಿಮ ಬಂಗಾಳದಲ್ಲಿ ಅಪ್ಪಳಿಸಿದ ಬಿರುಗಾಳಿಗೆ ತತ್ತರಿಸಿದ ಜೀವಗಳ ಕುರಿತು ಮಿಡಿಯುತ್ತದೆ. ಹಾಗೆಯೇ ‘ತಿಪಟೂರಿನ ಶಶಿಕಲಾ’ ಎಂಬ ಕವಿತೆಯು ಗಂಡನ ಕ್ರೌರ್ಯಕ್ಕೆ ಬೆಂದು ಬಲಿಯಾದ ಶಶಿಕಲಾ ಎಂಬ ಮಹಿಳೆಯ ಸಂವೇದನೆಗಳನ್ನು ಜೀವಪರ ನೆಲೆಯಲ್ಲಿ ಪ್ರತಿಪಾದಿಸುತ್ತದೆ. ಬಂಡಾಯದ ಗರಡಿಯೊಳಗೆ ಪಳಗಿದ ಲೇಖಕರು ತಮ್ಮ ಕವಿತೆಗಳ ಮೂಲಕ ತಮ್ಮ ಬಂಡಾಯದ ಧೋರಣೆಗಳನ್ನು ಅಭಿವ್ಯಕ್ತಿಸಿದ್ದಾರೆ. 2009ರಲ್ಲಿ ‘ಸಹಸ್ಪಂದನ’ ಎಂಬ ವಿಮರ್ಶಾ ಲೇಖನ ಸಂಕಲನವನ್ನು ಪ್ರಕಟಿಸಿದ್ದಾರೆ. ಇದರಲ್ಲಿ ಒಟ್ಟು ಹನ್ನೆರಡು ಲೇಖನಗಳಿದ್ದು, ಇವುಗಳು ಚಿತ್ರದುರ್ಗ ಜಿಲ್ಲೆಯ ಪ್ರಾಚೀನತೆ, ಕನ್ನಡ ಸಾಹಿತ್ಯ ಹಾಗೂ ವೈಚಾರಿಕ ಚಿಂತನೆಗಳಿಂದ ಕೂಡಿವೆ. 2020ರಲ್ಲಿ ‘ಒಳದನಿ’ ಎಂಬ ಲೇಖನಗಳ ಸಂಕಲನ ಕೃತಿಯನ್ನು ಪ್ರಕಟಿಸಿರುತ್ತಾರೆ.
ಪ್ರಸ್ತುತ ಕೃತಿಯಲ್ಲಿ ಒಟ್ಟು ಇಪ್ಪತ್ತು ಲೇಖನಗಳಿದ್ದು, ಜಾನಪದ, ಸಮಕಾಲೀನ ವಿದ್ಯಮಾನ, ವೈಚಾರಿಕ ಚಿಂತನೆ ಹಾಗೂ ರೇಡಿಯೊ ಭಾಷಣಗಳಿಂದ ಕೂಡಿದ ಲೇಖನಗಳು ಇಲ್ಲಿ ವಿಶೇಷವಾಗಿವೆ. ಜಾನಪದ ವಿಷಯದಲ್ಲಿ ವಿಶೇಷವಾದ ಆಸಕ್ತಿಯನ್ನು ಹೊಂದಿರುವ ಇವರು ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಶ್ರೀಕಂಠ ಕೂಡಿಗೆ ಅವರ ಮಾರ್ಗದರ್ಶನದಲ್ಲಿ ‘ಕುಂಚಟಿಗ ಸಾಂಸ್ಕೃತಿಕ ವೀರರು- ಒಂದು ಜಾನಪದೀಯ ಅಧ್ಯಯನ’ ಎಂಬ ಮಹಾಪ್ರಬಂಧವನ್ನು ಸಲ್ಲಿಸಿ2006 ರಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿರುತ್ತಾರೆ.
ಶ್ರೀಯುತರ ಸಾಹಿತ್ಯ ಸೇವೆ ಹಾಗೂ ಸಮಸಮಾಜಕ್ಕಾಗಿ ಸಂಘಟನೆ ಮತ್ತು ಚಳವಳಿಗಳ ಮೂಲಕ ಅಭಿವ್ಯಕ್ತಿಸಿದ ಹೋರಾಟವನ್ನು ಗುರುತಿಸಿ ಹಲವಾರು ಪ್ರಶಸ್ತಿ, ಪುರಸ್ಕಾರ, ಗೌರವಗಳು ಇವರ ಮುಡಿಗೇರಿವೆ. ಅವುಗಳೆಂದರೆ; 2010ರಲ್ಲಿ ಚಿತ್ರದುರ್ಗ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, 2018ರಲ್ಲಿ ರಾಜ್ಯಮಟ್ಟದ ‘ಕನಕ ಪ್ರಶಸ್ತಿ’ ಪ್ರಮುಖವಾಗಿವೆ. ಹಾಗೆಯೇ ಇವರ ಸಾಹಿತ್ಯ ಸೇವೆಗಾಗಿ2013ರಲ್ಲಿ ನಡೆದ ಚಳ್ಳಕೆರೆ ತಾಲ್ಲೂಕಿನ ‘ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಗೌರವ’ ಲಭಿಸಿದೆ.
ಹೀಗೆ ಹಲವಾರು ಸಾಹಿತ್ಯ ಮತ್ತು ಸಂಘಟನಾತ್ಮಕ ಚಟುವಟಿಕೆಗಳ ಮೂಲಕ ಸದಾ ಕ್ರಿಯಾಶೀಲರಾದ ಶ್ರೀಯುತರು ಸಮತ ಭಾರತಕ್ಕಾಗಿ ಬಂಡಾಯದ ನೆಲೆಯಲ್ಲಿ ಹೋರಾಟವನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಇಂದು ವೃತ್ತಿ ಬದುಕಿನಿಂದ ನಿವೃತ್ತಿ ಪಡೆದುಕೊಂಡರು ಕೂಡ ತಮ್ಮ ಕ್ರಿಯಾಶೀಲ ಚಟುವಟಿಕೆಗಳನ್ನು ನಿಲ್ಲಿಸದೆ, ಸಮಾನ ಮನಸ್ಕರೊಂದಿಗೆ ಬೆರೆತು ಮೊದಲಿಗಿಂತಲೂ ಚುರುಕಾಗಿ ಸಾಹಿತ್ಯ ಮತ್ತು ಸಂಘಟನಾತ್ಮಕ ಕಾರ್ಯಗಳಲ್ಲಿ ತಲ್ಲೀನರಾಗಿದ್ದಾರೆ. ಶ್ರೀಯುತರಿಂದ ಯುವ ಸಮುದಾಯವನ್ನು ಜಾಗೃತಗೊಳಿಸುವಂತಹ ಬಂಡಾಯದ ದನಿ ಮತ್ತಷ್ಟು ಗಟ್ಟಿಯಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇವೆ.
-ಡಾ.ಕೆ.ಎ.ಓಬಳೇಶ್ ಮೊ: 9591420216
ಸುದ್ದಿದಿನ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ18 hours agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ4 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ4 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ2 days agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ5 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ3 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!



