ರಾಜಕೀಯ
ಸಿದ್ದರಾಮೋತ್ಸವ ; ಇದು ಗೂಗ್ಲಿಯೂ ಹೌದು; ಮೊದಲ ಬಾಲಿಗೆ ಸಿಕ್ಸರೂ ಹೌದು..!
- ರಾಜಾರಾಂ ತಲ್ಲೂರು
ಒಂದು ಆಡಳಿತಪಕ್ಷ ದುರಾಡಳಿತದಲ್ಲಿ ತೊಡಗಿರುವಾಗ, ವಿರೋಧಪಕ್ಷ ಶಕ್ತಿಹೀನವಾಗುತ್ತಿದೆ ಎಂದು ಬಿಂಬಿತವಾಗುತ್ತಿರುವಾಗ ರಾಜ್ಯದ ಪ್ರಮುಖ ವಿರೋಧಪಕ್ಷ ಕಾಂಗ್ರೆಸ್ಸಿಗೆ ಇಂತಹದೊಂದು ಬೂಸ್ಟರ್ ಡೋಸ್ ಬೇಕಿತ್ತು. ಈಗ ಸಂಜೆಯ ಹೊತ್ತಿಗೆ ಕಾಂಗ್ರೆಸ್ಸಿಗರಲ್ಲಿ ಬೂಸ್ಟರ್ ಡೋಸ್ ಪಡೆದ ಭಾವ ಕಾರ್ಯಕರ್ತರ ನೆಲಮಟ್ಟದಲ್ಲೂ, ಸೋಷಿಯಲ್ ಮೀಡಿಯಾದ ಮುಗಿಲಿನಲ್ಲೂ ಕಾಣಿಸುತ್ತಿದೆ ಎಂಬ ಮಟ್ಟಿಗೆ ಈವತ್ತಿನ “ದಾವಣಗೆರೆ ಶೋಆಫ್” ಯಶಸ್ವಿ.
ಒಂದು ಕ್ಷಣ, ಈ ಸಿದ್ಧರಾಮೋತ್ಸವದ ರನ್ಅಪ್ ಕಡೆ ಹಿಂದಿರುಗಿ ನೋಡಿ
ಆಳುವವರ ಪರ ಇರುವ ರಾಜ್ಯದ ಬಹುತೇಕ ಮಾಧ್ಯಮಗಳು, ಇದು ಸಿದ್ಧರಾಮಯ್ಯ-ಡಿಕೆ ಶಿವಕುಮಾರ್ ನಡುವಿನ ಶೋಡೌನ್ ಎಂದೇ ಬಿಂಬಿಸಿದ್ದವು. ಕಾಂಗ್ರೆಸ್ಸಿನ ಒಡಕು ಈ ಸಮಾರಂಭದ ಮೂಲಕ ಹೊರಬೀಳಲಿದೆ ಎಂಬುದು ಅವರ ತುಂಬು ನಿರೀಕ್ಷೆ ಆಗಿತ್ತು. ಸಮಾರಂಭಕ್ಕೆ “ಐವತ್ತು ಕೋಟಿ ಖರ್ಚು ಮಾಡುವ ಸಮಾಜವಾದ” ಎಂಬ ಟೀಕೆಯಿಂದ ಹಿಡಿದು, ಸಿದ್ಧರಾಮಯ್ಯ ಸುಳ್ಳು ಜನ್ಮದಿನಾಂಕದೊಂದಿಗೆ ಹುಟ್ಟಿದ ಹಬ್ಬ ಆಚರಣೆಯ ತುರ್ತಿಗೆ ಬಿದ್ದಿದ್ದಾರೆ ಎಂಬಲ್ಲಿಯ ತನಕ “ಅಪ”ಪ್ರಚಾರ ನಡೆದಿತ್ತು. ಪ್ರಚಾರಕ್ಕಿಂತ ಅಪಪ್ರಚಾರದ ಅಬ್ಬರವೇ ಹೆಚ್ಚಿತ್ತು. ಇದರ ಪರಿಣಾಮವಾಗಿ ಈ ಸಮಾರಂಭದ ಹೆಸರು “ಸಿದ್ಧರಾಮೋತ್ಸವ” ಇರಬೇಕೇ ಬೇಡವೇ ಎಂಬ ಚರ್ಚೆ ಕೂಡ ಕಾಂಗ್ರೆಸ್ಸಿನೊಳಗೆ ನಡೆದ ಬಗ್ಗೆ ಸುದ್ದಿ ಆಗಿತ್ತು.
ಇಂತಹದೊಂದು “ಶೇಕೀ ರನ್ ಅಪ್” ಜೊತೆಗೇ ಆರಂಭಗೊಂಡ “ಸಿದ್ಧರಾಮಯ್ಯನವರ 75ನೇ ಹುಟ್ಟುಹಬ್ಬದ ತಯಾರಿ, ಇಂದು ಬೆಳಗ್ಗೆಯ ಹೊತ್ತಿಗೆ ಹದಿನೈದು ಕಿಲೋಮೀಟರ್ ಹಿಂದೆಯೇ ಜನಸಂದಣಿಯ ಕಾರಣಕ್ಕೆ ಟ್ರಾಫಿಕ್ ಜಾಮ್ ಎಂಬಂತಹ ಸುದ್ದಿಗಳ ಜೊತೆ ಅಂತಿಮ ಹಂತ ತಲುಪಿದ್ದು, ಕಾಂಗ್ರೆಸ್ಸಿಗರು ಈ ಸಮಾವೇಶವನ್ನು ಎಷ್ಟು ಗಂಭೀರವಾಗಿ ಪರಿಗಣಿಸಿದ್ದರು ಎಂಬುದಕ್ಕೆ ಸೂಚನೆ.
ಕಾಂಗ್ರೆಸ್ಸಿಗೆ ತಾನು ಮರೆತೇ ಹೋಗಿದ್ದ “ಸ್ವಸಾಮರ್ಥ್ಯ ಮರುಪರಿಚಯ”ಕ್ಕೆ ಇಂತಹದೊಂದು ಬೂಸ್ಟರ್ ಡೋಸ್ ಅಗತ್ಯ ಇತ್ತು. ಒಂದಿಡೀ ಟರ್ಮ್ ಆಡಳಿತ ನಡೆಸಿದ್ದ ಸಿದ್ಧರಾಮಯ್ಯ ಸರ್ಕಾರ ಎರಡನೇ ಟರ್ಮಿಗೆ 55-45ರ ಸಣ್ಣ ಅಂತರದಲ್ಲಿ ಸೋತರೂ ಬಾಹ್ಯ ಬೆಂಬಲದಿಂದ ಸರ್ಕಾರ ರಚಿಸಿದ್ದು, ಪ್ರಲೋಭನೆಯ ಪಕ್ಷಾಂತರಗಳಿಂದಾಗಿ ಅಧಿಕಾರ ಕಳೆದುಕೊಂಡದ್ದು… ಎಲ್ಲವನ್ನೂ ಕಾಂಗ್ರೆಸ್ ಕಾರ್ಯಕರ್ತರು ಮರೆತಂತೆ ಕಾಣುತ್ತಿತ್ತು.
ಯಾಕೆ ಈ ಮರೆವು ಉಂಟಾಗಿತ್ತೆಂದರೆ “ಡಬ್ಬಲ್ ಎಂಜಿನ್” ಭೋರ್ಗರೆತ ಅಷ್ಟು ಗಟ್ಟಿಯಾಗಿತ್ತು! ಜೊತೆಗೆ #ಡಿಯರ್_ಮೀಡಿಯಾ ಪ್ರತಿಪಕ್ಷವನ್ನೇ ಆಡಳಿತಪಕ್ಷವೆಂದು ಪರಿಗಣಿಸಿ ಪ್ರಹಾರ ನಿರತವಾಗಿತ್ತು. ಮೆದುಳಿಗೆ ಈ ಸತತ ಪ್ರಹಾರದ ಪರಿಣಾಮ ಮತ್ತು ಕೋವಿಡ್ ಮತ್ತಿತರ ಸಂಕಷ್ಟಗಳು ಕಾಂಗ್ರೆಸ್ ಕಾರ್ಯಕರ್ತರನ್ನು ವಿನಮನಸ್ಕಗೊಳಿಸಿದ್ದವು.
ತಳಮಟ್ಟದಲ್ಲಿ ಅವರ ಶಕ್ತಿ ಸಾಮರ್ಥ್ಯಗಳು ಅವರಿಗೇ ಮರೆತುಹೋಗಿದ್ದವು. ಇಂದಿನ ಸಮಾರಂಭ ಅದನ್ನು ಬಡಿದೆಚ್ಚರಿಸಿದೆ. ಇಂದು ಸಮಾರಂಭದ ವೇದಿಕೆಯಲ್ಲಿದ್ದ ನಾಯಕಗಢಣದ ಮಾತುಗಳು, ಅಭಿವ್ಯಕ್ತಿಗಳು ಈ “ಸಂತಸ”ವನ್ನು ಸಾರಿ ಸಾರಿ ಹೇಳುತ್ತಿದ್ದವು. ಅವರೆಲ್ಲರ ನಿರೀಕ್ಷೆ ಮೀರಿ ದಾವಣಗೆರೆಗೆ ಕಾಂಗ್ರೆಸ್ ಕಾರ್ಯಕರ್ತರು ಲಗ್ಗೆ ಇಟ್ಟಿದ್ದರು!
ಈ ಸಮಾರಂಭ ಏಕೆ ಗೂಗ್ಲಿ ಎಂದರೆ, ಸಿದ್ಧರಾಮಯ್ಯ ಅವರ “ಜನ್ಮದಿನ ಸಂಭ್ರಮ” ಎಂದೇ ಎಲ್ಲರೂ ಊಹಿಸಿಕೊಂಡಿದ್ದ ಈ ಕಾರ್ಯಕ್ರಮ, ಕಾಂಗ್ರೆಸ್ಸಿನ ಮಟ್ಟಿಗೆ ವಿಧಾನಸಭಾ ಚುನಾವಣೆಗಳಿಗೆ ತಯಾರಿಯ ಉದ್ಘಾಟನಾ ಸಮಾರಂಭ ಆಗಿ ಬದಲಾಗಿತ್ತು. ಆ ಮಟ್ಟಿಗೆ ಕಾರ್ಯಕ್ರಮದ ಆಯೋಜಕರು ಮತ್ತು ಸಿದ್ಧರಾಮಯ್ಯನವರ ಸೂಕ್ಷ್ಮಗ್ರಾಹಿತ್ವವನ್ನು ಮೆಚ್ಚಬೇಕು. ಆಡಳಿತಪಕ್ಷಕ್ಕೆ ಇದು ಅನಿರೀಕ್ಷಿತ. ಇಂತಹದೊಂದು ನಿರೀಕ್ಷೆ ಇದ್ದಿದ್ದರೆ, ಅವರದನ್ನು ಬೇರೆ ರೀತಿಯಲ್ಲಿ ನಿಭಾಯಿಸಲು ಅವಕಾಶಗಳಿದ್ದವು.
ಬೇರೆಲ್ಲ ವ್ಯವಸ್ಥೆ ಮಾಡಿಕೊಂಡು, ಸಿದ್ಧರಾಮಯ್ಯನವರನ್ನು ಕಟ್ಟಿ ಹಾಕುವುದು ಹೇಗೆ ಎಂಬ ಚಿಂತೆಯಲ್ಲಿದ್ದ ಆಡಳಿತ ಪಕ್ಷಕ್ಕೆ ಈವತ್ತು ದಾವಣಗೆರೆಯಲ್ಲಿ ಸೇರಿದ ಜನಸಾಗರ, ವೇದಿಕೆಯಲ್ಲಿದ್ದ ಕಾಂಗ್ರೆಸ್ ನಾಯಕರ ಮೂಡ್ ಹೊಸ ಚಿಂತೆಯ ಗೆರೆಗಳನ್ನು ಮೂಡಿಸಿದ್ದರೆ ಅಚ್ಚರಿ ಇಲ್ಲ. ತಳಮಟ್ಟದಲ್ಲಿ ಎಲ್ಲವೂ ಸರಿಯಾಗಿಲ್ಲ, ಜನಸಾಮಾನ್ಯರ ಪರಿಸ್ಥಿತಿ ತೀರಾ ಕೆಟ್ಟಿದ್ದು, ಕೇವಲ “ಮೋದಿ” ಹೆಸರು ಈ ಬಾರಿ ಮತ್ತೊಮ್ಮೆ ಓಟು ತಂದುಕೊಡದು ಎಂಬುದು ಅವರಿಗೂ ಅರಿವಿದೆ.
ಈವತ್ತು ಬೆಳಗ್ಗೆ ದಾವಣಗೆರೆಯಲ್ಲಿ ಒಮ್ಮೆ ಜನಸಾಗರವನ್ನು ನೋಡಿದ ಬಳಿಕ ಕಾಂಗ್ರೆಸ್ ನಾಯಕರೆಲ್ಲರೂ “ಸಿಕ್ಸರ್” ಬಾರಿಸುವ ಹುಮ್ಮಸ್ಸಿನಲ್ಲಿದ್ದರು. ಅವರ ಮಾತುಗಳಲ್ಲಿ ಅದು ಮತ್ತೆ ಮತ್ತೆ ವ್ಯಕ್ತವಾಯಿತು. ಡಿ ಕೆ ಶಿವಕುಮಾರ್, ಸಿದ್ಧರಾಮಯ್ಯ ಮತ್ತು ಅವರ ಸರ್ವೋಚ್ಛನಾಯಕ ರಾಹುಲ್ ಗಾಂಧಿ ಮೂವರೂ ಬಹಳ ಎಚ್ಚರಿಕೆಯಿಂದ ತಮ್ಮ ಮಾತುಗಳನ್ನು ಆಯ್ದುಕೊಳ್ಳುವ ಮೂಲಕ, “ಸಿದ್ಧರಾಮೋತ್ಸವ” ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 2023ರ ಚುನಾವಣಾ ಪ್ರಚಾರದ ಆರಂಭ ಎಂಬುದನ್ನು ಕಾರ್ಯಕರ್ತರಿಗೆ ತಲುಪಿಸಿದರು.
ಈ ಸಿಕ್ಸರ್ ಕೂಡ ಆಡಳಿತ ಪಕ್ಷಕ್ಕೆ ಅನಿರೀಕ್ಷಿತ
ಆಟ ಇಲ್ಲಿಗೇ ಮುಗಿಯುವುದಿಲ್ಲ. ಇದಿನ್ನೂ ಆರಂಭ ಮಾತ್ರ. ಆದರೆ ತಯಾರಿಯ ಕೊರತೆಯಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಮಟ್ಟಿಗೆ ಇವತ್ತಿನದು ಭರ್ಜರಿ ಆರಂಭ ಎಂಬುದರಲ್ಲಿ ಸಂಶಯ ಇಲ್ಲ. ಕಾಂಗ್ರೆಸ್ಸಿಗರು ಈವತ್ತಿನದೇ ಕೊನೆಯ ಬಾಲ್, ಸಿಕ್ಸರ್ ಬಿದ್ದಿದೆ ಅಂದುಕೊಂಡು ತಣ್ಣಗೆ ಕುಳಿತರೆ ಮಾತ್ರ ಕೆಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ
ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.
ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ
ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.
ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ
ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.
ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ
ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.
ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ
ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.
ಭವಿಷ್ಯದ ಆಶಯ
ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ 19 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಐ.ಡಿ.ಪಿ ಅನುದಾನದ ಅಡಿಯಲ್ಲಿ ನಡೆದಿರುವ ರೂ. 2,59,89,250/-ಗಳ ಖರೀದಿ ವ್ಯವಹಾರದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತೆ ಮಂಜುಶ್ರೀ ಸೇರಿ 6 ಜನ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಐ.ಡಿ.ಪಿ ಅನುದಾನವನ್ನು ಅಗತ್ಯಕ್ಕೆ ಅನುಗುಣವಾಗಿ ಆಯಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳೇ ನಿಯಮಾನುಸಾರ ಖರೀದಿ ವ್ಯವಹಾರ ನಡೆಸಬೇಕೆಂಬ ನಿಯಮವಿದ್ದರೂ, ಕಮೀಷನ್ ಆಸೆಗಾಗಿ ಕಾಲೇಜು ಶಿಕ್ಷಣ ಇಲಾಖೆ ಕೇಂದ್ರ ಕಛೇರಿಯ ಅಧಿಕಾರಿಗಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳ ಅಧಿಕಾರವನ್ನು ಕಿತ್ತುಕೊಂಡು 2024-25ನೇ ಸಾಲಿನಲ್ಲಿ ರೂ. 2,59,89,250/-ಗಳ ಖರೀದಿ ಪ್ರಕ್ರಿಯೆಗೆ ಮುಂದಾಗಿರುತ್ತಾರೆ. ಐ.ಡಿ.ಪಿ ಅನುದಾನದಲ್ಲಿ 19 ಕಾಲೇಜುಗಳಿಗೆ ಅಗತ್ಯವಿರುವ ಡೆಸ್ಕ್ಟಾಪ್, ಲ್ಯಾಪ್ಟಾಪ್, ಯು.ಪಿ.ಎಸ್ ಮತ್ತು ಪ್ರಿಂಟರ್ಗಳ ಖರೀದಿಯಲ್ಲಿ ಸಾಕಷ್ಟು ಲೋಪಗಳಿದ್ದು, ನಿಯಮಾನುಸಾರ ಟೆಂಡರ್ ಪ್ರಕ್ರಿಯೆ ನಡೆಸದೆ ಇರುವುದು, ಖರೀದಿಸಿದ ಸಾಮಾಗ್ರಿಗಳಿಗೆ ಮಾರುಕಟ್ಟೆಗಿಂತ ಅಧಿಕ ಬೆಲೆ ನೀಡಿರುವುದು ಸೇರಿ ಹಲವಾರು ಅಂಶಗಳನ್ನು ಗುರುತಿಸಿ ಹೆಚ್ಚಿನ ತನಿಖೆ ನಡೆಸುವಂತೆ ದೂರು ಅರ್ಜಿಯಲ್ಲಿ ತಿಳಿಸಿದ್ದಾರೆ.
ಇಷ್ಟೆ ಅಲ್ಲದೆ ಇದೇ ಸಮಯದಲ್ಲಿ ರೂಸಾ ಅನುದಾನದ ಅಡಿಯಲ್ಲಿ ನಡೆದ ಖರೀದಿ ವ್ಯವಹಾರ ಹಾಗೂ ಕಾಲೇಜುಗಳಿಗೆ ವಿಜ್ಞಾನ ಪರಿಕರಗಳ ಖರೀದಿ ವ್ಯವಹಾರವನ್ನು ನಡೆಸಿದ್ದು, ಇದರಲ್ಲಿಯೂ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ನಡೆದಿದ್ದು, ಈ ಎಲ್ಲಾ ಖರೀದಿ ವ್ಯವಹಾರಗಳಲ್ಲಿ ಭಾಗಿಯಾಗಿರುವ ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಡಾ.ಶೋಭಾ ಜಿ, ನಿರ್ದೇಶಕರು. ಶ್ರೀ ಚೇತನ್ ಕುಮಾರ್ ಎನ್, ಲೆಕ್ಕಾಧಿಕಾರಿಗಳು, ಡಾ.ನಂದಿತಾ ಪ್ರಸಾದ್, ಮಾಹಿತಿ ತಂತ್ರಜ್ಞಾನ ಅಧಿಕಾರಿಗಳು. ಡಾ.ಶ್ರೀಕಾಂತ್ ಆರ್, ಸಮನ್ವಯಾಧಿಕಾರಿಗಳು. ಡಾ.ಸುಮ ಎಸ್, ರೂಸಾ ಸಮನ್ವಯಾಧಿಕಾರಿಗಳು ಇವರುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆರೋಪಿಸಿರುವುದಾಗಿ ತಿಳಿಸಿದ್ದಾರೆ.
2023ನೇ ಸಾಲಿನಲ್ಲಿ ಅಂದಾಜು 23 ಕೋಟಿ ರೂಪಾಯಿಗಳ ಖರೀದಿ ವ್ಯವಹಾರವನ್ನು ಕೇಂದ್ರ ಕಛೇರಿಯಿಂದ ನಡೆಸಿದ್ದು, ಇದಕ್ಕೆ ಸಂಬಂಧಿಸಿದ ಅಧಿಕೃತ ಮಾಹಿತಿಯನ್ನು ನೀಡದ ಕಾರಣ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಿಗೆ ದೂರು ನೀಡಿ, ಇಲಾಖಾ ತನಿಖೆ ನಡೆಸುವಂತೆ ಕೋರಲಾಗಿದ್ದು, ನಿಗಧಿತ ಅವಧಿಯಲ್ಲಿ ಯಾವುದೇ ಪ್ರತ್ಯುತ್ತರ ಬಂದಿರುವುದಿಲ್ಲ. ಮುಂದಿನ ದಿನಗಳಲ್ಲಿ ಅಂದಾಜು 23 ಕೋಟಿ ಮೊತ್ತದ ಖರೀದಿ ವ್ಯವಹಾರವನ್ನು ತನಿಖೆ ನಡೆಸುವಂತೆ ದೂರು ನೀಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ5 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ5 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

