ದಿನದ ಸುದ್ದಿ
ಸತ್ತವರಲ್ಲಿ ನಮ್ಮವರು ಯಾರು ?

“ಎಲ್ಲಿ ನೋಡಿದರಲ್ಲಿ ಚಿಂದಿಯಾದ ಶವಗಳು. ಕಾಲಿಟ್ಟಲೆಲ್ಲ ರಕ್ತವೋ ರಕ್ತ. ಲೆಕ್ಕವಿಲ್ಲದಷ್ಟು ಮೃತದೇಹಗಳ ಅವಶೇಷಗಳು. ಮುಂಡವಿಲ್ಲದ ರುಂಡಗಳು, ರುಂಡವಿಲ್ಲದ ಮುಂಡಗಳು. ಕೈ ಕಾಲುಗಳಿಲ್ಲದ ದೇಹಗಳು. ಗಾಯಗೊಂಡು ಒದ್ದಾಡುತ್ತಿದ್ದ ಹಲವರ ದೇಹಗಳಲ್ಲಿ ಚೂಪಾದ ಗಾಜಿನ ಚೂರುಗಳು ಹೊಕ್ಕಿದ್ದವು. ತಮ್ಮವರ ಪತ್ತೆಗಾಗಿ ಸಾವಿರಾರು ಮಂದಿ ಅಲ್ಲಿ ಸೇರಿದ್ದರು. ಶವಗಳನ್ನು ಗುರುತಿಸಲಾಗದೆ ಅವರು ರೋಧಿಸುತ್ತಿದ್ದರು. ಅವರ ಆಕ್ರಂದನ ಮುಗಿಲು ಮುಟ್ಟಿತ್ತು.” ಇದು ಈಸ್ಟರ್ ಭಾನುವಾರ ದ್ವೀಪರಾಷ್ಟ್ರ ಶ್ರೀಲಂಕಾದ ಕೊಲೊಂಬೋ ನಗರದಲ್ಲಿನ 3 ಚರ್ಚ್ಗಳಲ್ಲಿ ಮತ್ತು 3 ಪಂಚತಾರಾ ಹೊಟೇಲುಗಳಲ್ಲಿ ಸಂಭವಿಸಿದ ಭೀಕರ ಸರಣಿ ಬಾಂಬ್ ಸ್ಟೋಟದ ನಂತರ ಕಂಡುಬಂದ ಮನಕಲಕುವ ದೃಶ್ಯ.
ಚರ್ಚ್ಗಳಲ್ಲಿ ಪ್ರಾರ್ಥನೆಯಲ್ಲಿ ನಿರತರಾಗಿದ್ದವರ ಮೇಲೆ ಮತ್ತು ವಿಲಾಸಿ ಹೊಟೇಲುಗಳಲ್ಲಿ ತಂಗಿದ್ದ ವಿದೇಶಿ ಪ್ರವಾಶಿಗರನ್ನು ಗುರಿಯಾಗಿಸಿಕೊಂಡು ನಡೆದ ಎರಡು ಆತ್ಮಹತ್ಯಾ ದಾಳಿ ಮತ್ತು ಬಾಂಬ್ ಸ್ಪೋಟಗಳಿಂದಾಗಿ 300 ಕ್ಕೂ ಅಧಿಕ ಮಂದಿ ಅಮಾಯಕರು ಅಸುನೀಗಿ, 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾರತ, ಪಾಕಿಸ್ತಾನ, ಅಮೇರಿಕ, ಡೆನ್ಮಾರ್ಕ್, ಬ್ರಿಟನ್, ಟರ್ಕಿ, ಪೋರ್ಚುಗಲ್, ಚೀನಾ ಮೊದಲಾದ ದೇಶಗಳ 35 ಪ್ರಜೆಗಳು ಮೃತಪಟ್ಟಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲೇ ಅತ್ಯಂತ ಬೀಭತ್ಸವಾದ ಈ ದಾಳಿಯನ್ನು ಭಾರತವೂ ಸೇರಿದಂತೆ ವಿಶ್ವದ ಅನೇಕ ದೇಶಗಳ ಗಣ್ಯರು ಬಲವಾಗಿ ಖಂಡಿಸಿದ್ದಾರೆ.
ಅಲ್ಲಿ ಮಕ್ಕಳನ್ನು ಕಳೆದುಕೊಂಡ ಹೆತ್ತವರು, ಅಪ್ಪ-ಅಮ್ಮನನ್ನು ಕಳೆದುಕೊಂಡ ಮಕ್ಕಳು, ಪತಿಯನ್ನು ಕಳೆದುಕೊಂಡ ಮಹಿಳೆಯರು, ಪತ್ನಿಯನ್ನು ಕಳೆದುಕೊಂಡ ಪುರುಷರು ತಮ್ಮವರನ್ನು ಹುಡುಕುತ್ತಿದ್ದರು. ಛಿಧ್ರ, ಛಿಧ್ರವಾದ ಮಾನವ ದೇಹದ ತುಂಡುಗಳಲ್ಲಿ ತಮ್ಮವರನ್ನು ಗುರುತಿಸುವುದು ಹೇಗೆ? ಸತ್ತವರಲ್ಲಿ ನಮ್ಮವರು ಯಾರು?
ಅದೇ ರಕ್ತ! ಅದೇ ಅಂಗಾಂಗಗಳು! ಇವರು ನಮ್ಮವರಾ? ಅವರು ನಮ್ಮವರಾ? ಒಂದರ ಮೇಲೊಂದು ಎಂಬಂತೆ ಬಿದ್ದಿರುವ ಮೃತದೇಹಗಳಲ್ಲಿ ನಮ್ಮವರು ಯಾರು ಎಂದು ಗುರುತಿಸುವುದು ಹೇಗೆ? ಇಂತಹ ಪ್ರಕರಣಗಳಲ್ಲಿ ಮೃತದೇಹಗಳನ್ನು ಗುರುತಿಸಲಾಗದೆ. ತಮಗೆ ಸಂಬಂಧವಿಲ್ಲದ ಮೃತ ದೇಹವನ್ನು ಹಸ್ತಾಂತರಿಸಿಕೊಂಡು ಅಂತ್ಯಸಂಸ್ಕಾರ ಮಾಡಿದ ಉದಾರಣೆಗಳಿವೆ. ಶ್ರೀಲಂಕಾ ಸ್ಪೋಟದಲ್ಲಿ ಮಡಿದ 7 ಜನ ಕನ್ನಡಿಗರು ಸೇರಿದಂತೆ 10 ಜನ ಭಾರತೀಯರು ನಮ್ಮವರೇ. ಮೃತಪಟ್ಟ ಇನ್ನುಳಿದವರೆಲ್ಲರೂ ನಮ್ಮವರೇ. “ಇವ ನಮ್ಮವ, ಇವ ನಮ್ಮವ” ಎನ್ನುವವನಿಗೆ ತಮ್ಮವರು ಸಿಗುತ್ತಾರೆ.ಆತನಿಗೆ ಎಲ್ಲರೂ ತನ್ನವರೇ ಆಗಿರುತ್ತಾರೆ. ಆತ ಮಾನವ ರಕ್ತದಲ್ಲಿ ಬೇಧ ಕಾಣುವುದಿಲ್ಲ.
ಹುಟ್ಟಿನಿಂದಲೇ ಕೆಲವರು ಕೀಳು ಜಾತಿಯವರಾಗಿರುತ್ತಾರೆ ಎಂಬುವುದನ್ನು ಆತ ಒಪ್ಪುವುದಿಲ್ಲ. ಮತ ಧರ್ಮಗಳ ಖಾಸಗಿ ನಂಬಿಕೆಗಳನ್ನು ಆತ ವಿವಾದಾಸ್ಪದಗೊಳಿಸುವುದಿಲ್ಲ. ಪುಲ್ವಾಮಾ ದಾಳಿಯಲ್ಲಿ ಸಾವನ್ನಪ್ಪಿದ ಯೋಧರನ್ನು ಆತ ‘ತನ್ನವರು’ ಎಂದು ದುಃಖಿಸುತ್ತಾನೆ. ಕಳೆದ ಮಾರ್ಚ್ 15 ರಂದು ನ್ಯೂಜಿಲ್ಯಾಂಡ್ನ ಮಸೀದಿಯಲ್ಲಿ ನಡೆದ ಶೂಟೌಟ್ಗೆ ಬಲಿಯಾದ 50 ಮಂದಿ ಪ್ರಾರ್ಥನಾ ನಿರತರನ್ನು ಆತ ‘ತನ್ನವರು’ ಎಂದು ಗುರುತಿಸುತ್ತಾನೆ. ಈಗ ಶ್ರೀಲಂಕಾದ ಚರ್ಚುಗಳಲ್ಲಿ ಬಾಂಬ್ ಸ್ಪೋಟಿಸಿ ಸಾಯಿಸಿದ ನೂರಾರು ಮಂದಿ ಭಕ್ತರನ್ನು ಆತ ‘ತನ್ನವರು’ ಎಂದು ಕಣ್ಣೀರು ಹಾಕುತ್ತಾನೆ. ಆತನಿಗೆ ‘ತನ್ನವರು’ ಸಿಕ್ಕೇ ಸಿಗುತ್ತಾರೆ.
‘ತನ್ನವರು’ ಚೆನ್ನಾಗಿರಬೇಕು. ತನ್ನವರು ನೆಮ್ಮದಿಯಿಂದ ಇರಬೇಕು. ಅವರಿಗೆ ಕಷ್ಟಗಳು ಬರಬಾರದು. ಹೀಗೆ ‘ಇವ ನಮ್ಮವ ಇವ ನಮ್ಮವ’ ಎನ್ನುವವನಿಗೆ ಎಲ್ಲರೂ ಚೆನ್ನಾಗಿರಬೇಕೆಂಬ ಮಹದಾಸೆ! ಆತನಿಗೆ ಯುದ್ಧ ಬೇಡ, ಶಾಂತಿ ಬೇಕು. ಆತನಿಗೆ ಪ್ರೀತಿ ಬೇಕು, ಹಿಂಸೆ ಬೇಡ, ಆತ ಹಂಚಿಕೊಂಡು ಬದುಕು ಬಯಸುತ್ತಾನೆ. ಎಲ್ಲರನ್ನೂ ಒಳಗೊಳ್ಳಲು ಶ್ರಮಿಸುತ್ತಾನೆ. ಆತ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಾನೆ. ಆತ ಗಡಿಗಳಿಲ್ಲದ, ಗಡಿ ಘರ್ಷಣೆಗಳಿಲ್ಲದ ವಿಶ್ವದ ಕನಸು ಕಾಣುತ್ತಾನೆ. ಆತ ವಿಶ್ವಮಾನವ. ಸರ್ವಜನಾಂಗ ಪ್ರೇಮಿ, ವಿಶ್ವದ ಕರಿಯರಲ್ಲಿ, ಬಿಳಿಯರಲ್ಲಿ ಆತ ಭೇಧ ಕಾಣುವುದಿಲ್ಲ. ಆಫ್ರಿಕಾದವರು, ಅಮೆರಿಕದವರು ಆತನಿಗೆ ಬೇರೆ ಬೇರೆ ಅಲ್ಲ. ಅವರ ಭಾಷೆ ಯಾವುದೇ ಇರಲಿ. ಅವರ ಆಹಾರ ವಿಹಾರ ಹೇಗೂ ಇರಲಿ, ಆತನಿಗೆ ಅವರೆಲ್ಲರೂ ‘ತನ್ನವರು’.
ಎಲ್ಲಾದರೂ ಸರಿಯೇ, ಭೂಕಂಪದಂತಹ, ಪ್ರವಾಹದಂತಹ, ಬರಗಾಲದಂತಹ ನೈಸರ್ಗಿಕ ವಿಕೋಪ ಸಂಭವಿಸಿ ಸಾವು ನೋವುಗಳಾದಾಗ ಆತ ಮರಗುತ್ತಾನೆ. ತನ್ನ ಕೈಲಾದಷ್ಟು ನೆರವು ನೀಡುತ್ತಾನೆ. ಆತನಿಗೆ ಪಾಕಿಸ್ತಾನ, ಹಿಂದುಸ್ಥಾನ ಎಂಬ ಭೇದವಿಲ್ಲ. ಹಿಂದು-ಮುಸ್ಲಿಂ ಎಂಬ ದ್ವೇಷವಿಲ್ಲ. ಅವನು ಚರ್ಚ್ಗಳನ್ನು ಧ್ವಂಸ ಮಾಡುವುದಿಲ್ಲ. ಮಸೀದಿಯನ್ನು ಕೆಡವಿ ಹೆಮ್ಮೆ ಪಟ್ಟುಕೊಳ್ಳುವುದಿಲ್ಲ. ಆತ ತನ್ನ ನಂಬಿಕೆಗಳನ್ನು ಇತರರ ಮೇಲೆ ಹೇರುವುದಿಲ್ಲ. ದಲಿತರನ್ನು ಆತ ನಿಂದಿಸುವುದಿಲ್ಲ.
ಮಹಿಳೆಯರ ದೇವಸ್ಥಾನ ಪ್ರವೇಶವನ್ನು ಆತ ವಿರೋಧಿಸುವುದಿಲ್ಲ. ಎಲ್ಲರ ಸ್ವಾತಂತ್ರ್ಯವನ್ನು ಆತ ಗೌರವಿಸುತ್ತಾನೆ. ಎಲ್ಲೆಲ್ಲ್ಲೂ ತನ್ನವರಿದ್ದಾರೆ. ಎಲ್ಲಾ ದೇಶಗಳಲ್ಲಿದ್ದಾರೆ. ಎಲ್ಲಾ ಭಾಷೆಗಳನ್ನಾಡುವವರಲ್ಲಿದ್ದಾರೆ. ಎಲ್ಲಾ ಮತಧರ್ಮಗಳ ಅನುಯಾಯಿಗಳಲ್ಲಿದ್ದಾರೆ. ಯಾವುದೇ ಮತವನ್ನು ಪ್ರತಿಪಾದಿಸದಿರುವವರ ನಡುವೆಯೂ ಇದ್ದಾರೆ. ಎಲ್ಲಾ ತರಹದ ಆಹಾರ ಸೇವಿಸುವವರ, ವಿಭಿನ್ನ ಉಡುಪುಗಳನ್ನು ತೊಡುವವರ, ಎಲ್ಲರ ನಡುವೆಯೂ ಆ ವಿಶ್ವ ಮಾನವನಿಗೆ ‘ತನ್ನವರು’ ಇದ್ದಾರೆ.
( ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

- ಪುರಂದರ್ ಲೋಕಿಕೆರೆ
ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.
ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.
100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.
ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.
ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.
ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.
ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ6 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ2 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ5 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ2 days ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ