ದಿನದ ಸುದ್ದಿ
ಸತ್ತವರಲ್ಲಿ ನಮ್ಮವರು ಯಾರು ?
“ಎಲ್ಲಿ ನೋಡಿದರಲ್ಲಿ ಚಿಂದಿಯಾದ ಶವಗಳು. ಕಾಲಿಟ್ಟಲೆಲ್ಲ ರಕ್ತವೋ ರಕ್ತ. ಲೆಕ್ಕವಿಲ್ಲದಷ್ಟು ಮೃತದೇಹಗಳ ಅವಶೇಷಗಳು. ಮುಂಡವಿಲ್ಲದ ರುಂಡಗಳು, ರುಂಡವಿಲ್ಲದ ಮುಂಡಗಳು. ಕೈ ಕಾಲುಗಳಿಲ್ಲದ ದೇಹಗಳು. ಗಾಯಗೊಂಡು ಒದ್ದಾಡುತ್ತಿದ್ದ ಹಲವರ ದೇಹಗಳಲ್ಲಿ ಚೂಪಾದ ಗಾಜಿನ ಚೂರುಗಳು ಹೊಕ್ಕಿದ್ದವು. ತಮ್ಮವರ ಪತ್ತೆಗಾಗಿ ಸಾವಿರಾರು ಮಂದಿ ಅಲ್ಲಿ ಸೇರಿದ್ದರು. ಶವಗಳನ್ನು ಗುರುತಿಸಲಾಗದೆ ಅವರು ರೋಧಿಸುತ್ತಿದ್ದರು. ಅವರ ಆಕ್ರಂದನ ಮುಗಿಲು ಮುಟ್ಟಿತ್ತು.” ಇದು ಈಸ್ಟರ್ ಭಾನುವಾರ ದ್ವೀಪರಾಷ್ಟ್ರ ಶ್ರೀಲಂಕಾದ ಕೊಲೊಂಬೋ ನಗರದಲ್ಲಿನ 3 ಚರ್ಚ್ಗಳಲ್ಲಿ ಮತ್ತು 3 ಪಂಚತಾರಾ ಹೊಟೇಲುಗಳಲ್ಲಿ ಸಂಭವಿಸಿದ ಭೀಕರ ಸರಣಿ ಬಾಂಬ್ ಸ್ಟೋಟದ ನಂತರ ಕಂಡುಬಂದ ಮನಕಲಕುವ ದೃಶ್ಯ.
ಚರ್ಚ್ಗಳಲ್ಲಿ ಪ್ರಾರ್ಥನೆಯಲ್ಲಿ ನಿರತರಾಗಿದ್ದವರ ಮೇಲೆ ಮತ್ತು ವಿಲಾಸಿ ಹೊಟೇಲುಗಳಲ್ಲಿ ತಂಗಿದ್ದ ವಿದೇಶಿ ಪ್ರವಾಶಿಗರನ್ನು ಗುರಿಯಾಗಿಸಿಕೊಂಡು ನಡೆದ ಎರಡು ಆತ್ಮಹತ್ಯಾ ದಾಳಿ ಮತ್ತು ಬಾಂಬ್ ಸ್ಪೋಟಗಳಿಂದಾಗಿ 300 ಕ್ಕೂ ಅಧಿಕ ಮಂದಿ ಅಮಾಯಕರು ಅಸುನೀಗಿ, 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾರತ, ಪಾಕಿಸ್ತಾನ, ಅಮೇರಿಕ, ಡೆನ್ಮಾರ್ಕ್, ಬ್ರಿಟನ್, ಟರ್ಕಿ, ಪೋರ್ಚುಗಲ್, ಚೀನಾ ಮೊದಲಾದ ದೇಶಗಳ 35 ಪ್ರಜೆಗಳು ಮೃತಪಟ್ಟಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲೇ ಅತ್ಯಂತ ಬೀಭತ್ಸವಾದ ಈ ದಾಳಿಯನ್ನು ಭಾರತವೂ ಸೇರಿದಂತೆ ವಿಶ್ವದ ಅನೇಕ ದೇಶಗಳ ಗಣ್ಯರು ಬಲವಾಗಿ ಖಂಡಿಸಿದ್ದಾರೆ.
ಅಲ್ಲಿ ಮಕ್ಕಳನ್ನು ಕಳೆದುಕೊಂಡ ಹೆತ್ತವರು, ಅಪ್ಪ-ಅಮ್ಮನನ್ನು ಕಳೆದುಕೊಂಡ ಮಕ್ಕಳು, ಪತಿಯನ್ನು ಕಳೆದುಕೊಂಡ ಮಹಿಳೆಯರು, ಪತ್ನಿಯನ್ನು ಕಳೆದುಕೊಂಡ ಪುರುಷರು ತಮ್ಮವರನ್ನು ಹುಡುಕುತ್ತಿದ್ದರು. ಛಿಧ್ರ, ಛಿಧ್ರವಾದ ಮಾನವ ದೇಹದ ತುಂಡುಗಳಲ್ಲಿ ತಮ್ಮವರನ್ನು ಗುರುತಿಸುವುದು ಹೇಗೆ? ಸತ್ತವರಲ್ಲಿ ನಮ್ಮವರು ಯಾರು?
ಅದೇ ರಕ್ತ! ಅದೇ ಅಂಗಾಂಗಗಳು! ಇವರು ನಮ್ಮವರಾ? ಅವರು ನಮ್ಮವರಾ? ಒಂದರ ಮೇಲೊಂದು ಎಂಬಂತೆ ಬಿದ್ದಿರುವ ಮೃತದೇಹಗಳಲ್ಲಿ ನಮ್ಮವರು ಯಾರು ಎಂದು ಗುರುತಿಸುವುದು ಹೇಗೆ? ಇಂತಹ ಪ್ರಕರಣಗಳಲ್ಲಿ ಮೃತದೇಹಗಳನ್ನು ಗುರುತಿಸಲಾಗದೆ. ತಮಗೆ ಸಂಬಂಧವಿಲ್ಲದ ಮೃತ ದೇಹವನ್ನು ಹಸ್ತಾಂತರಿಸಿಕೊಂಡು ಅಂತ್ಯಸಂಸ್ಕಾರ ಮಾಡಿದ ಉದಾರಣೆಗಳಿವೆ. ಶ್ರೀಲಂಕಾ ಸ್ಪೋಟದಲ್ಲಿ ಮಡಿದ 7 ಜನ ಕನ್ನಡಿಗರು ಸೇರಿದಂತೆ 10 ಜನ ಭಾರತೀಯರು ನಮ್ಮವರೇ. ಮೃತಪಟ್ಟ ಇನ್ನುಳಿದವರೆಲ್ಲರೂ ನಮ್ಮವರೇ. “ಇವ ನಮ್ಮವ, ಇವ ನಮ್ಮವ” ಎನ್ನುವವನಿಗೆ ತಮ್ಮವರು ಸಿಗುತ್ತಾರೆ.ಆತನಿಗೆ ಎಲ್ಲರೂ ತನ್ನವರೇ ಆಗಿರುತ್ತಾರೆ. ಆತ ಮಾನವ ರಕ್ತದಲ್ಲಿ ಬೇಧ ಕಾಣುವುದಿಲ್ಲ.
ಹುಟ್ಟಿನಿಂದಲೇ ಕೆಲವರು ಕೀಳು ಜಾತಿಯವರಾಗಿರುತ್ತಾರೆ ಎಂಬುವುದನ್ನು ಆತ ಒಪ್ಪುವುದಿಲ್ಲ. ಮತ ಧರ್ಮಗಳ ಖಾಸಗಿ ನಂಬಿಕೆಗಳನ್ನು ಆತ ವಿವಾದಾಸ್ಪದಗೊಳಿಸುವುದಿಲ್ಲ. ಪುಲ್ವಾಮಾ ದಾಳಿಯಲ್ಲಿ ಸಾವನ್ನಪ್ಪಿದ ಯೋಧರನ್ನು ಆತ ‘ತನ್ನವರು’ ಎಂದು ದುಃಖಿಸುತ್ತಾನೆ. ಕಳೆದ ಮಾರ್ಚ್ 15 ರಂದು ನ್ಯೂಜಿಲ್ಯಾಂಡ್ನ ಮಸೀದಿಯಲ್ಲಿ ನಡೆದ ಶೂಟೌಟ್ಗೆ ಬಲಿಯಾದ 50 ಮಂದಿ ಪ್ರಾರ್ಥನಾ ನಿರತರನ್ನು ಆತ ‘ತನ್ನವರು’ ಎಂದು ಗುರುತಿಸುತ್ತಾನೆ. ಈಗ ಶ್ರೀಲಂಕಾದ ಚರ್ಚುಗಳಲ್ಲಿ ಬಾಂಬ್ ಸ್ಪೋಟಿಸಿ ಸಾಯಿಸಿದ ನೂರಾರು ಮಂದಿ ಭಕ್ತರನ್ನು ಆತ ‘ತನ್ನವರು’ ಎಂದು ಕಣ್ಣೀರು ಹಾಕುತ್ತಾನೆ. ಆತನಿಗೆ ‘ತನ್ನವರು’ ಸಿಕ್ಕೇ ಸಿಗುತ್ತಾರೆ.
‘ತನ್ನವರು’ ಚೆನ್ನಾಗಿರಬೇಕು. ತನ್ನವರು ನೆಮ್ಮದಿಯಿಂದ ಇರಬೇಕು. ಅವರಿಗೆ ಕಷ್ಟಗಳು ಬರಬಾರದು. ಹೀಗೆ ‘ಇವ ನಮ್ಮವ ಇವ ನಮ್ಮವ’ ಎನ್ನುವವನಿಗೆ ಎಲ್ಲರೂ ಚೆನ್ನಾಗಿರಬೇಕೆಂಬ ಮಹದಾಸೆ! ಆತನಿಗೆ ಯುದ್ಧ ಬೇಡ, ಶಾಂತಿ ಬೇಕು. ಆತನಿಗೆ ಪ್ರೀತಿ ಬೇಕು, ಹಿಂಸೆ ಬೇಡ, ಆತ ಹಂಚಿಕೊಂಡು ಬದುಕು ಬಯಸುತ್ತಾನೆ. ಎಲ್ಲರನ್ನೂ ಒಳಗೊಳ್ಳಲು ಶ್ರಮಿಸುತ್ತಾನೆ. ಆತ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಾನೆ. ಆತ ಗಡಿಗಳಿಲ್ಲದ, ಗಡಿ ಘರ್ಷಣೆಗಳಿಲ್ಲದ ವಿಶ್ವದ ಕನಸು ಕಾಣುತ್ತಾನೆ. ಆತ ವಿಶ್ವಮಾನವ. ಸರ್ವಜನಾಂಗ ಪ್ರೇಮಿ, ವಿಶ್ವದ ಕರಿಯರಲ್ಲಿ, ಬಿಳಿಯರಲ್ಲಿ ಆತ ಭೇಧ ಕಾಣುವುದಿಲ್ಲ. ಆಫ್ರಿಕಾದವರು, ಅಮೆರಿಕದವರು ಆತನಿಗೆ ಬೇರೆ ಬೇರೆ ಅಲ್ಲ. ಅವರ ಭಾಷೆ ಯಾವುದೇ ಇರಲಿ. ಅವರ ಆಹಾರ ವಿಹಾರ ಹೇಗೂ ಇರಲಿ, ಆತನಿಗೆ ಅವರೆಲ್ಲರೂ ‘ತನ್ನವರು’.
ಎಲ್ಲಾದರೂ ಸರಿಯೇ, ಭೂಕಂಪದಂತಹ, ಪ್ರವಾಹದಂತಹ, ಬರಗಾಲದಂತಹ ನೈಸರ್ಗಿಕ ವಿಕೋಪ ಸಂಭವಿಸಿ ಸಾವು ನೋವುಗಳಾದಾಗ ಆತ ಮರಗುತ್ತಾನೆ. ತನ್ನ ಕೈಲಾದಷ್ಟು ನೆರವು ನೀಡುತ್ತಾನೆ. ಆತನಿಗೆ ಪಾಕಿಸ್ತಾನ, ಹಿಂದುಸ್ಥಾನ ಎಂಬ ಭೇದವಿಲ್ಲ. ಹಿಂದು-ಮುಸ್ಲಿಂ ಎಂಬ ದ್ವೇಷವಿಲ್ಲ. ಅವನು ಚರ್ಚ್ಗಳನ್ನು ಧ್ವಂಸ ಮಾಡುವುದಿಲ್ಲ. ಮಸೀದಿಯನ್ನು ಕೆಡವಿ ಹೆಮ್ಮೆ ಪಟ್ಟುಕೊಳ್ಳುವುದಿಲ್ಲ. ಆತ ತನ್ನ ನಂಬಿಕೆಗಳನ್ನು ಇತರರ ಮೇಲೆ ಹೇರುವುದಿಲ್ಲ. ದಲಿತರನ್ನು ಆತ ನಿಂದಿಸುವುದಿಲ್ಲ.
ಮಹಿಳೆಯರ ದೇವಸ್ಥಾನ ಪ್ರವೇಶವನ್ನು ಆತ ವಿರೋಧಿಸುವುದಿಲ್ಲ. ಎಲ್ಲರ ಸ್ವಾತಂತ್ರ್ಯವನ್ನು ಆತ ಗೌರವಿಸುತ್ತಾನೆ. ಎಲ್ಲೆಲ್ಲ್ಲೂ ತನ್ನವರಿದ್ದಾರೆ. ಎಲ್ಲಾ ದೇಶಗಳಲ್ಲಿದ್ದಾರೆ. ಎಲ್ಲಾ ಭಾಷೆಗಳನ್ನಾಡುವವರಲ್ಲಿದ್ದಾರೆ. ಎಲ್ಲಾ ಮತಧರ್ಮಗಳ ಅನುಯಾಯಿಗಳಲ್ಲಿದ್ದಾರೆ. ಯಾವುದೇ ಮತವನ್ನು ಪ್ರತಿಪಾದಿಸದಿರುವವರ ನಡುವೆಯೂ ಇದ್ದಾರೆ. ಎಲ್ಲಾ ತರಹದ ಆಹಾರ ಸೇವಿಸುವವರ, ವಿಭಿನ್ನ ಉಡುಪುಗಳನ್ನು ತೊಡುವವರ, ಎಲ್ಲರ ನಡುವೆಯೂ ಆ ವಿಶ್ವ ಮಾನವನಿಗೆ ‘ತನ್ನವರು’ ಇದ್ದಾರೆ.
( ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




