Connect with us

ಬಹಿರಂಗ

‘ಹಿಂದೂ ಧರ್ಮ,ಅಸ್ಪೃಶ್ಯತೆ, ಗೋಮಾಂಸ ಸೇವನೆ ಮತ್ತು ರಾಜಕೀಯ’ದ ಬಗ್ಗೆ ಸ್ವಾಮಿ ವಿವೇಕಾನಂದರ ಚಿಂತನೆಗಳು..!

Published

on

  • ಹಿಂದೂ ಧರ್ಮ, ಪೌರೋಹಿತ್ಯ, ಅಸ್ಪೃಶ್ಯತೆ, ಆಹಾರ, ಗೋಮಾಂಸ ಸೇವನೆ ಮತ್ತು ರಾಜಕೀಯದ ಬಗ್ಗೆ ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಅವರ ಜನ್ಮದಿನವಾದ ಇಂದು (ಜ.12) ಮನನ ಮಾಡಿಕೊಳ್ಳೋಣ.

–ದಿನೇಶ್ ಅಮೀನ್ ಮಟ್ಟು

  1. ಹಿಂದೂ ಧರ್ಮ

ಸ್ವಾಮಿ ವಿವೇಕಾನಂದರು ಎಂದೂ ತಾವೊಬ್ಬ ಹಿಂದೂ ಎಂದಾಗಲಿ, ಹಿಂದೂ ಸನ್ಯಾಸಿಯೆಂದಾಗಲಿ ಹೇಳಿಕೊಳ್ಳಲಿಲ್ಲ. ಅವರಿಗೆ ಹಿಂದೂ ಎನ್ನುವ ಶಬ್ದದ ಬಗ್ಗೆಯೇ ಭಿನ್ನಾಭಿಪ್ರಾಯ ಇತ್ತು. ಮೂಲಭೂತವಾಗಿ ಹಿಂದುತ್ವದ ವ್ಯಾಖ್ಯಾನವನ್ನೇ ತಪ್ಪಾಗಿ ಮಾಡಲಾಗಿದೆ ಎಂದು ಅವರು ಹೇಳುತ್ತಿದ್ದರು.

ಸಿಂಧೂ ನದಿಯ ಆಚೆದಡದಲ್ಲಿರುವವರೆಲ್ಲರೂ ಹಿಂದೂಗಳು. ಅದರಲ್ಲಿ ಮುಸ್ಲಿಮ್, ಕ್ರಿಶ್ಚಿಯನ್, ಬೌದ್ಧರು ಸೇರಿದಂತೆ ಎಲ್ಲ ಧರ್ಮದವರೂ ಇದ್ದರು. ಪರ್ಷಿಯನರು ಮೂಲ ಸಿಂಧೂವನ್ನು ಅಪಭ್ರಂಶಗೊಳಿಸಿ ಹಿಂದೂ ಕರೆದರು. ಮುಸ್ಲಿಮ್ ಅರಸರ ಆಳ್ವಿಕೆಯ ಕಾಲದಲ್ಲಿ ಹಿಂದೂಗಳೆನಿಸಿಕೊಂಡವರು ಬಹಿರಂಗವಾಗಿ ತಮ್ಮನ್ನು ಹಿಂದೂಗಳೆಂದು ಕರೆಸಿಕೊಂಡರು ಎಂದು ಸ್ವತ: ವಿವೇಕಾನಂದರೇ ಹೇಳಿಕೊಂಡಿದ್ದಾರೆ. ಅವರ ಪ್ರಕಾರ ಹಿಂದೂಗಳು ತಮ್ಮನ್ನು ವೇದಾಂತಿಗಳು ಎಂದು ಕರೆದುಕೊಳ್ಳಬೇಕು.

ವಿವೇಕಾನಂದರ ಧರ್ಮದ ವ್ಯಾಖ್ಯಾನವೇ ಬೇರೆ ಇತ್ತು. “ದೇವರು ಬಂದು ಭೂಮಂಡಲವನ್ನು ಸೃಷ್ಟಿಸಿದ, ಅಂದಿನಿಂದ ಕಾಲ ಸ್ಥಬ್ಧವಾಗಿದೆ ಎನ್ನುವುದೆಲ್ಲ ಸುಳ್ಳು, ದೇವರು ಎನ್ನುವವನ ಅಸ್ತಿತ್ವ ಪ್ರತಿಯೊಬ್ಬನಿಗೂ ಹೃದಯದ ಮೂಲಕ ಅರಿವಾಗುವಂತಹದ್ದು. ಇದಕ್ಕಿಂತಲೂ ಮುಖ್ಯವಾದುದು ಭೂಮಂಡಲದ ಎಲ್ಲ ಜೀವಿಗಳ ಹೃದಯದಲ್ಲಿ ದೇವರಿದ್ದಾನೆ ಎಂಬ ಅರಿವು. ವ್ಯತ್ಯಾಸ ಇರುವುದು ಅದರ ಅಭಿವ್ಯಕ್ತಿಯ ರೂಪಗಳಲ್ಲಿ ಮಾತ್ರ. ದೇವರು ಎಲ್ಲ ಮನುಷ್ಯರೊಳಗೆ ಇರುತ್ತಾನೆ.ಮನುಷ್ಯನೊಳಗಿನ ದೈವತ್ವವನ್ನು ಕಂಡುಕೊಳ್ಳುವುದೇ ಧರ್ಮ” ಎಂದು ವಿವೇಕಾನಂದ ಹೇಳಿದ್ದರು.

ಅದಕ್ಕಾಗಿ ಅವರು ದರಿದ್ರರಲ್ಲಿ ಬಡವರಲ್ಲಿ ರೋಗಿಗಳಲ್ಲಿ, ನಿರ್ಗತಿಕರಲ್ಲಿ ದೇವರನ್ನು ಕಾಣು ಎಂದು ಹೇಳಿದ್ದರು. ನಾವು ಈಗ ಬಡತನ ಎನ್ನುವುದು ಪೂರ್ವಜನ್ಮದ ಪಾಪದ ಫಲ, ಅದೊಂದು ಅಪರಾಧ ಎಂದು ತಿಳಿದುಕೊಂಡವರ ಕಾಲದಲ್ಲಿದ್ದೇವೆ.

ದೇವರು ಎನ್ನುವುದು ಪ್ರೀತಿ, ಎಲ್ಲವನ್ನು ದೇವರು ಎಂದು ಭಾವಿಸುವ ಮೂಲಕ ದೇವರಪೂಜೆ ಮಾಡಬಹುದು. ವಿವೇಕಾನಂದರು ಪ್ರತಿಪಾದಿಸಿದ ಹಿಂದುತ್ವದಲ್ಲಿ ಜಾತಿ,ಸಂಕೇತ, ಆಚರಣೆ, ಪೂಜೆಯ ಸ್ಥಳ ಮತ್ತು ವಿಧಾನಗಳು ಇರಲಿಲ್ಲ. ಮೂರ್ತಿಪೂಜೆಗೆ ಅವರ ಸಹಮತ ಇರಲಿಲ್ಲ. ಒಮ್ಮೆ ಅವರು ಅಲ್ಮೋರದಲ್ಲಿರುವ ಮಾಯಾವತಿ ಆಶ್ರಮಕ್ಕೆ ಹೋಗಿದ್ದರು.

ಅಲ್ಲಿ ಗೋಡೆಯ ಮೇಲಿದ್ದ ರಾಮಕೃಷ್ಣ ಪರಮಹಂಸರ ಚಿತ್ರ ನೋಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಗುರುಗಳ ದೈಹಿಕ ಚಹರೆಯ ಮೂಲಕ ಅವರನ್ನು ನಾನು ನೆನಪಲ್ಲಿಟ್ಟುಕೊಳ್ಳುವುದು ಬೇಕಾಗಿಲ್ಲ. ಅವರ ಆದರ್ಶಗಳ ಪಾಲನೆ ಮತ್ತು ಪ್ರಚಾರದ ಮೂಲಕ ಅವರನ್ನು ನೆನಪಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದ್ದರು.

ಧರ್ಮ ಎನ್ನುವುದು ಬಾಯಿ ಮಾತಲ್ಲ, ನಂಬಿಕೆಯೂ ಅಲ್ಲ, ಸಿದ್ಧಾಂತವೂ ಅಲ್ಲ, ಅದೊಂದು ಕೋಮುವಾದಿ ಭಾವನೆಯೂ ಅಲ್ಲ. ಧರ್ಮ ಎನ್ನುವುದು ಕೋಮುಗಳಲ್ಲಿ ಇಲ್ಲವೆ ಸಂಘಗಳಲ್ಲಿ ಬಾಳಲಾರದು. ಆತ್ಮನಿಗೂ, ದೇವರಿಗೂ ಇರುವ ಸಂಬಂಧ ಇದು. ಇದಕ್ಕೆ ಸಾಂಘಿಕ ರೂಪ ಕೊಟ್ಟಕೂಡಲೇ ಅದು ವ್ಯಾಪಾರವಾಗುವುದು. ಯಾವ ಧರ್ಮದಲ್ಲಿ ವ್ಯಾಪಾರದ ಗುಣಗಳಿರುವುದೋ ಅಲ್ಲಿ ಆಧ್ಯಾತ್ಮಿಕತೆ ನಾಶವಾಗುವುದು.

ಧರ್ಮ ಎನ್ನುವುದು ದೇವಾಲಯ ಕಟ್ಟುವುದರಲ್ಲಿ ಇಲ್ಲ, ಅಥವಾ ಸಾಮಾಜಿಕ ಪೂಜೆಗೆ ಹೋಗುವುದರಲ್ಲಿ ಇಲ್ಲ. ಅದು ಧರ್ಮಗ್ರಂಥಗಳಲ್ಲಿ ಇಲ್ಲ. ಉಪವಾಸದಲ್ಲಿಯೂ ಅಲ್ಲ. ಧರ್ಮವೆಂದರೆ ಸಾಕ್ಷಾತ್ಕಾರ. ಒಂದು ಕಣದಷ್ಟು ಧರ್ಮಾನುಷ್ಠಾನ ಮತ್ತು ಆತ್ಮ ಸಾಕ್ಷಾತ್ಕಾರ ಒಂದು ಮಣ ಮಾತಿಗಿಂತ ಮತ್ತು ಒಣ ಹೆಮ್ಮೆಗಿಂತ ಮೇಲು.

ಪುರೋಹಿತಷಾಹಿ ಬಗ್ಗೆ ವಿವೇಕಾನಂದರಷ್ಟು ಕಟುವಾಗಿ ಮಾತಾಡಿದ ಇನ್ನೊಬ್ಬ ಧಾರ್ಮಿಕ ನಾಯಕನಿಲ್ಲ.ಒಮ್ಮೊಮ್ಮೆ ಅವರ ಮಾತುಗಳು ಪೆರಿಯಾರ್ ಅವರಿಗಿಂತಲೂ ತೀಕ್ಷ್ಣವಾಗಿರುತ್ತಿತ್ತು. ನೀಚರು, ಕುತಂತ್ರಿಗಳಾಗಿರುವ ಪುರೋಹಿತರು ಎಲ್ಲ ವಿಧದ ಮೂಢನಂಬಿಕೆಗಳನ್ನು ವೇದ ಮತ್ತು ಹಿಂದೂ ಧರ್ಮದ ಸಾರ ಎಂದು ಬೋಧಿಸುತ್ತಾರೆ. ಈ ಮೋಸಗಾರರು ಅಥವಾ ಅವರ ತಾತಮುತ್ತಾತರಾಗಲಿ ಕಳೆದ ನಾನೂರು ತಲೆಮಾರುಗಳಿಂದಲೂ ವೇದದ ಒಂದು ಭಾಗವನ್ನೂ ನೋಡಿಲ್ಲ. ಕಲಿಯುಗದಲ್ಲಿ ಬ್ರಾಹ್ಮಣ ವೇಷದಲ್ಲಿರುವ ಈ ರಾಕ್ಷಸರಿಂದ ಮುಗ್ಧ ಜನರನ್ನು ಆ ದೇವರೇ ಕಾಪಾಡಬೇಕು.

ಪುರೋಹಿತರ ಹೃದಯ ಎಂದಿಗೂ ವಿಶಾಲವಾಗುವುದಿಲ್ಲ, ಅವರು ತಿದ್ದಿಕೊಳ್ಳುವುದಿಲ್ಲ. ಶತಶತಮಾನಗಳಿಂದ ಬಂದ ಮೂಢ ನಂಬಿಕೆ ಮತ್ತು ದಬ್ಬಾಳಿಕೆಯ ಸಂತಾನ ಅವರು. ಅವರು ಪ್ರಗತಿಗೆ ವಿರುದ್ಧವಾಗಿರುವವರು. ಮೊದಲು ಪುರೋಹಿತಷಾಹಿಯನ್ನು ಬೇರು ಸಹಿತ ಕಿತ್ತೊಗೆಯಿರಿ. ಬನ್ನಿ ಮನುಷ್ಯರಾಗಿ, ಸಂಕುಚಿತ ಬಿಲಗಳಿಂದ ಹೊರಗೆ ಬನ್ನಿ, ಕಣ್ಣು ಬಿಟ್ಟು ಹೊರಗೆ ನೋಡಿ, ಮನುಷ್ಯರನ್ನು ಪ್ರೀತಿಸಿ, ದೇಶವನ್ನು ಪ್ರೀತಿಸಿ, ಉನ್ನತವಾದ ಕೆಲಸಗಳಿಗಾಗಿ ಹೋರಾಡಿ.

ಪ್ರಪಂಚದ ಯಾವ ಧರ್ಮವೂ ಹಿಂದೂ ಧರ್ಮದಷ್ಟು ಭವ್ಯವಾಣಿಯಲ್ಲಿ ಮನುಷ್ಯತ್ವದ ಘನತೆ ಗೌರವಗಳ ಬಗ್ಗೆ ಬೋಧನೆ ಮಾಡಿಲ್ಲ. ಪ್ರಪಂಚದ ಯಾವ ಧರ್ಮವೂ ದೀನದಲಿತರ ಕುತ್ತಿಗೆಯನ್ನು ಹಿಂದೂ ಧರ್ಮದಷ್ಟು ಕ್ರೂರವಾಗಿ ತುಳಿಯುವುದಿಲ್ಲ. ತಪ್ಪು ಹಿಂದೂ ಧರ್ಮದಲ್ಲ , ಅಲ್ಲಿರುವ ಸಂಪ್ರದಾಯ ಶರಣರದ್ದು, ಪುರೋಹಿತರದ್ದು. ಪಾರಮಾರ್ಥಿಕ ಮತ್ತು ವ್ಯಾವಹಾರಿಕ ಎಂದು ನಾನಾ ಬಗೆಯ ಕ್ರೂರ ಸಾಧನೆಗಳನ್ನು ಸೃಷ್ಟಿಸುವ ಠಕ್ಕರದ್ದು.

ನನ್ನ ದೃಷ್ಟಿಯಲ್ಲಿ ಗ್ರಂಥಗಳು ಒಳ್ಳೆಯದಕ್ಕಿಂತ ಹೆಚ್ಚು ಕೆಟ್ಟದ್ದನ್ನು ಮಾಡಿವೆ. ಮತಾಂಧತೆ, ಅನ್ಯಧರ್ಮಿಯರನ್ನು ಹಿಂಸಿಸುವುದು, ಮೂಢನಂಬಿಕೆ, ಕಂದಾಚಾರ, ಕಪಟಾಚಾರಕ್ಕೆಲ್ಲ ಈ ಧರ್ಮಗ್ರಂಥಗಳು ಕಾರಣ. ಎಲ್ಲಿಯ ವರೆಗೆ ಧರ್ಮ ಎಲ್ಲೊ ಕೆಲವು ಆರಿಸಿದ ವ್ಯಕ್ತಿಗಳ ಕೈಯಲ್ಲಿ ಅಥವಾ ಕೆಲವು ಪುರೋಹಿತರ ಕೈಯಲ್ಲಿ ಇರುತ್ತೋ ಆಗ ಧರ್ಮ, ದೇವಸ್ಥಾನ, ಚರ್ಚ್, ಮಸೀದಿ, ಶಾಸ್ತ್ರ, ಮೂಢನಂಬಿಕೆಗಳ ಸುತ್ತ ಗಿರಕಿ ಹೊಡೆಯುತ್ತಿರುತ್ತದೆ. ಯಾವಾಗ ನಾವು ನಿಜವಾದ ಆಧ್ಯಾತ್ಮಿಕ ಸಮಷ್ಠಿ ಭಾವನೆಗೆ ಬರುವೆವೋ ಆಗ ಮಾತ್ರ ಧರ್ಮ ಸತ್ಯವಾಗುವುದು, ಬದುಕಿರುವುದು. ಅದು ನಮ್ಮ ಸ್ವಭಾವದಲ್ಲಿ, ನಡತೆಯಲ್ಲಿ, ಕಾರ್ಯದಲ್ಲಿ ವ್ಯಕ್ತವಾಗಬೇಕು. (3-14)

2. ಅಸ್ಪೃಶ್ಯತೆ

‘ನಾನೇ ಶುದ್ಧ ಉಳಿದವರೆಲ್ಲರೂ ಅಶುದ್ಧ’ ಎಂದು ಹೇಳುವುದು ಮೃಗೀಯವಾದ ರಾಕ್ಷಸ ಧರ್ಮ. ನರಕ ಸದೃಶವಾದ ಧರ್ಮ. ಭರತ ಖಂಡದಲ್ಲಿ ಧರ್ಮವೇನಾದರೂ ಉಳಿದುಕೊಂಡಿದೆ ಎಂದು ತಿಳಿದುಕೊಂಡಿದ್ಧಿರೇನು? ಜ್ಞಾನ, ಭಕ್ತಿ, ಯೋಗಗಳ ಮಾರ್ಗಗಳೆಲ್ಲ ಹೋಯಿತು. ಈಗ ಉಳಿದಿರುವುದು ಒಂದೇ ಧರ್ಮ. ಅದು ‘ಮುಟ್ಟಬೇಡ, ಮುಟ್ಟಬೇಡ ಎಂಬುದು.

ಪ್ರಪಂಚವೆಲ್ಲ ಮೈಲಿಗೆ ನಾನೊಬ್ಬನೇ ಮಡಿ, ಅಹಾ ಎಂತಹ ತಿಳಿಯಾದ ಬ್ರಹ್ಮಜ್ಞಾನ.ಇಂದಿನ ಹಿಂದೂ ಧರ್ಮ ಜ್ಞಾನ ಮಾರ್ಗವೂ ಅಲ್ಲ, ಭಕ್ತಿ ಮಾರ್ಗವೂ ಅಲ್ಲ. ಅದರ ಧರ್ಮವೇ ಅಸ್ಪೃಶ್ಯತೆ. ಎಲ್ಲರಲ್ಲಿಯೂ ಒಂದೇ ಆತ್ಮವನ್ನು ನೋಡಬೇಕೆಂಬ ಉಪದೇಶ ಗ್ರಂಥಗಳಲ್ಲಿಯೂ ಉಳಿದಿದೆ. ಹಸಿದವನಿಗೆ ಒಂದು ತುತ್ತನ್ನು ಕೊಡದವರು ಮೋಕ್ಷವನ್ನು ಹೇಗೆ ಕೊಟ್ಟಾರು? ಮತ್ತೊಬ್ಬರ ಉಸಿರಿನ ಸೋಕಿನಿಂದಲೇ ಇವರು ಪಾಪಿಗಳಾಗುವುದಿದ್ದರೆ ಇನ್ನೊಬ್ಬರನ್ನು ಹೇಗೆ ಶುದ್ಧಿ ಮಾಡಿಯಾರು. ಅಸ್ಪೃಶ್ಯತೆ ಎನ್ನುವುದು ಒಂದು ಮನೋರೋಗ. ಈ ರೋಗ ಗುಣವಾಗದೆ ಹಿಂದೂ ಧರ್ಮ ಉದ್ಧಾರವಾಗಲಾರದು.

ಸಮಾನತೆಯ ಭಾವವನ್ನು ಯಾವುದಾದರೂ ಒಂದು ಧರ್ಮ ಪಾಲಿಸುತ್ತಾ ಬಂದಿದ್ದರೆ ಅದು ಇಸ್ಲಾಂ ಧರ್ಮ. ವೇದಾಂತ ತತ್ವಗಳು ಎಷ್ಟೊಂದು ವಿಚಾರಪೂರ್ಣವಾಗಿದ್ದರೂ ಅದು ವಿಶ್ವದ ಮಾನವ ವರ್ಗದ ಬಹುಮಂದಿಗೆ ತಲುಪಬೇಕಾದರೆ ಇಸ್ಲಾಂಧರ್ಮದ ಅನುಷ್ಠಾನದ ಮಾದರಿಯನ್ನು ಅನುಸರಿಸಬೇಕಾಗುತ್ತದೆ. ನಮ್ಮ ಮಾತೃಭೂಮಿಯಲ್ಲಿ ಹಿಂದೂ ಮತ್ತು ಮುಸಲ್ಮಾನ ಧರ್ಮಗಳೆರಡೂ ಮಿಲನವಾಗಬೇಕು, ವೇದಾಂತದ ಮೆದುಳು ಮತ್ತು ಇಸ್ಲಾಮಿನ ದೇಹ ಇದೊಂದೇ ನಮ್ಮ ಪುರೋಗಮನಕ್ಕೆ ಹಾದಿ. ನನ್ನ ಕಣ್ಣಿಗೆ ಇಂದಿನ ಗೊಂದಲ ಮತ್ತು ತಿಕ್ಕಾಟದಿಂದ ವೇದಾಂತದ ಮೆದುಳು ಮತ್ತು ಇಸ್ಲಾಮಿನ ದೇಹದಿಂದ ಕೂಡಿದ ತೇಜೋಮಯವಾದ, ಅಜೇಯವಾದ ಮುಂದಿನ ನಿಷ್ಕಳಂಕ ಭಾರತದ ಉದಯ ಕಾಣುತ್ತಿದೆ.

ಪ್ರತಿಯೊಬ್ಬರು ಒಂದೇ ಧರ್ಮಕ್ಕೆ ಸೇರಿ ಒಂದೇ ಮಾರ್ಗವನ್ನು ಅನುಸರಿಸುವ ದುರ್ದಿನ ಪ್ರಪಂಚಕ್ಕೆ ಬಾರದಿರಲಿ, ಆಗ ಧರ್ಮ ಮತ್ತು ಆಧ್ಯಾತ್ಮ ಎರಡೂ ನಾಶವಾಗುವುದು. ವೈವಿಧ್ಯವೇ ಜೀವನದ ರಹಸ್ಯ. ಇದು ನಾಶವಾದರೆ ಸೃಷ್ಟಿನಾಶವಾಗುವುದು. ನನ್ನ ಧರ್ಮ ಎನ್ನುವುದು ಎಂದೂ ಇರಲಿಲ್ಲ. ಯಾವಾಗಲೂ ಇರುವುದು ಒಂದೇ ಧರ್ಮ. ಈ ಧರ್ಮವೇ ಹಲವು ದೇಶಗಳಲ್ಲಿ ಹಲವು ರೀತಿಗಳಲ್ಲಿ ವ್ಯಕ್ತವಾಗುತ್ತಾ ಹೋಗುವುದು. ಆದ್ದರಿಂದ ನಾವು ಎಲ್ಲ ಧರ್ಮಗಳಿಗೂ ಗೌರವವನ್ನು ತೋರಬೇಕು. ಸಾಧ್ಯವಾದ ಮಟ್ಟಿಗೆ ಎಲ್ಲವನ್ನೂ ಸ್ವೀಕರಿಸಬೇಕು. ಸ್ವಾಮಿ ವಿವೇಕಾನಂದರ ಎಷ್ಟೋ ವಿಚಾರಗಳನ್ನು ಓದಿದರೆ ಅವರೊಬ್ಬ ನಾಸ್ತಿಕನೂ ಇರಬಹುದೇನೋ ಎಂಬ ಸಂಶಯವೂ ಬಾರದೆ ಇರದು.

3. ಆಹಾರ

ನಮ್ಮ ಆಹಾರ ಪದ್ದತಿಯ ಬಗ್ಗೆ ವಿವೇಕಾನಂದರು ದೀರ್ಘವಾಗಿ ಮಾತನಾಡಿದ್ದಾರೆ. ನಿನಗಿಷ್ಟವಾದ ಮೀನು-ಮಾಂಸ ತಿನ್ನು. ಈ ದೇಶವೆಲ್ಲ ಒಂದೇ ಬಗೆಯ ತರಕಾರಿಯಲ್ಲಿ ಜೀವಿಸುವ, ಅಜೀರ್ಣದಿಂದ ನರಳುವ ಬಾಬಾಜಿಗಳಿಂದ ತುಂಬಿಹೋಗಿವೆ. ಸತ್ವಗುಣದ ಚಿಹ್ನೆಯೇ ಇಲ್ಲ. ಬರೀ ತಮಸ್ಸು. ನಗುಮುಖ, ಅಭಯೋತ್ಸಾಹ, ತೃಪ್ತಿ, ಉತ್ಕಟ, ಕ್ರಿಯಾಶೀಲತೆ ಇವೆಲ್ಲ ಸತ್ವಗುಣದ ಪರಿಣಾಮ. ಸೋಮಾರಿತನ, ಆಲಸ್ಯ, ಉತ್ಕಟ ಮೋಹ, ನಿದ್ದೆ ಎಲ್ಲವೂ ತಾಮಸ ಚಿಹ್ನೆಗಳು. ನಮಗಿಂದು ಬೇಕಾಗಿರುವುದು ಸತ್ವಗುಣಿಗಳು. ದೇಶದ ಜನರಿಗೆ ಅನ್ನ, ಬಟ್ಟೆ, ಉದ್ಯೋಗ ಬೇಕು. ದೇಶ ಜಾಗೃತಗೊಳ್ಳಬೇಕು, ಚಟುವಟಿಕೆಯಿಂದ ಇರುವಂತೆ ಪ್ರೇರೇಪಿಸಬೇಕು. ಇಲ್ಲದಿದ್ದರೆ ಅವರು ಮತ್ತಷ್ಟು ಜಡವಾಗಿ, ಮರ ಕಲ್ಲುಗಳಂತಾಗುತ್ತಾರೆ, ಆದ್ದರಿಂದ ಹೆಚ್ಚು ಮಾಂಸ, ಮೀಣು ತಿನ್ನಬೇಕೆಂದು ನಾನು ಹೇಳುತ್ತಿದ್ದೇನೆ.

ಪ್ರಾಣಿಗಳನ್ನು ಕೊಲ್ಲುವುದು ಖಂಡಿತವಾಗಿಯೂ ಕೆಟ್ಟದ್ದು. ಆದರೆ ರಸಾಯನಶಾಸ್ತ್ರದ ಅಭಿವೃದ್ಧಿಯೊಂದಿಗೆ ಎಲ್ಲಿಯ ವರೆಗೆ ಸಸ್ಯಾಹಾರ ಮನುಷ್ಯನ ದೇಹದ ಎಲ್ಲ ಅವಶ್ಯಕತೆಗಳನ್ನು ಪೂರೈಸುವುದಿಲ್ಲವೋ ಅಲ್ಲಿಯ ವರೆಗೆ ಮಾಂಸವನ್ನು ತಿನ್ನದೆ ವಿಧಿ ಇಲ್ಲ. ಉತ್ತಮ ಮತ್ತು ಪೌಷ್ಠಿಕಾಂಶದಿಂದ ಕೂಡಿದ ಆಹಾರ ಏನೆಲ್ಲ ಮಾಡಬಲ್ಲದು ಎಂಬುದಕ್ಕೆ ಜಪಾನ್ ದೇಶವೇ ಉದಾಹರಣೆ (7-125) ಹಿಂದೂ ಮತ್ತು ಚೀನಿಯರನ್ನು ನೋಡಿ ಅವರು ದೈಹಿಕವಾಗಿ ಎಷ್ಟೊಂದು ಬಡವಾಗಿದ್ದಾರೆ, ಅವರು ಮಾಂಸ ತಿನ್ನುವುದಿಲ್ಲ.

ಅಕ್ಕಿ ಮತ್ತು ಸಿಕ್ಕಿದ ತರಕಾರಿ ತಿಂದು ಜೀವಿಸುತ್ತಿದ್ದಾರೆ. ಹಿಂದೆ ಜಪಾನಿಯರೂ ಇದೇ ಸ್ಥಿತಿಯಲ್ಲಿದ್ದರು. ಅವರು ಮಾಂಸಹಾರ ಪ್ರಾರಂಭಿಸಿದ ನಂತರ ಆ ದೇಶದ ಚರಿತ್ರೆಯೇ ಬದಲಾಗಿ ಹೋಯಿತು. ಎಲ್ಲಿಯವರೆಗೆ ಸಮಾಜದಲ್ಲಿ ಶಕ್ತಿಶಾಲಿಗೆ ಜಯವೆಂಬುದು ಇರುತ್ತೋ ಅಲ್ಲಿಯ ವರೆಗೆ ಮಾಂಸಾಹಾರಿಗಳಾಗಿರಬೇಕು. ಇಲ್ಲದೆ ಇದ್ದರೆ ದುರ್ಬಲರು ಬಲಾಢ್ಯರ ಪಾದದ ಅಡಿಗೆ ಸಿಕ್ಕಿ ನಾಶವಾಗುತ್ತಾರೆ. ಎಲ್ಲೋ ಕೆಲವರಿಗೆ ಶಾಖಾಹಾರದಿಂದ ಪ್ರಯೋಜನವನ್ನು ಹೇಳಿದರಷ್ಟೇ ಸಾಲದು. ಒಂದು ದೇಶವನ್ನು ಮತ್ತೊಂದು ದೇಶದೊಂದಿಗೆ ಹೋಲಿಸಿ ನಿರ್ಣಯಕ್ಕೆ ಬನ್ನಿ.

4. ಗೋಮಾಂಸ

ಭಾರತದಲ್ಲಿ ಹಿಂದೆ ದನದ ಮಾಂಸ ತಿನ್ನದ ಬ್ರಾಹ್ಮಣ ಬ್ರಾಹ್ಮಣನಾಗಿ ಉಳಿಯುತ್ತಿರಲಿಲ್ಲ. ಸನ್ಯಾಸಿ, ರಾಜ, ಮಹಾತ್ಮರು ಮನೆಗೆ ಬಂದರೆ ಗೌರವಾರ್ಥವಾಗಿ ಅತ್ಯುತ್ತಮ ಗೂಳಿಯನ್ನು ಕೊಂದು ಅಡಿಗೆ ಮಾಡುತ್ತಿದ್ದರು. ಎಂದು ವೇದದಲ್ಲಿದೆ. ನಮ್ಮದು ಕೃಷಿಪ್ರಧಾನ ದೇಶ. ಅತ್ಯುತ್ತಮ ಎತ್ತುಗಳನ್ನು ಕೊಂದರೆ ಕಾಲಕ್ರಮೇಣ ದನದ ಜಾತಿಯೇನಾಶವಾಗುವುದೆಂದು ತಿಳಿದು, ಗೋಹತ್ಯೆ ಮಹಾಪಾಪವೆಂದು ನಿರ್ಬಂಧ ಹೇರಲಾಯಿತು.

ಈಗ ನಾನು ಕೇವಲ ಮಾಂಸವನ್ನು ಮಾತ್ರ ತಿಂದು ಜೀವಿಸುತ್ತಿದ್ದೇನೆ ಎಂದು 1897ರ ಏಪ್ರಿಲ್ 28ರಂದು ವಿವೇಕಾನಂದರು ಶ್ರೀಮತಿ ಹೆಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.ನಮ್ಮ ದೇಶದ ಜನರಿಗೆ ಸತ್ಯವಾದ ಧರ್ಮವನ್ನು ಅನುಸರಿಸಿ ಸಾಧನೆ ಮಾಡುವಷ್ಟು ಶಕ್ತಿಯಾದರೂ ಉಳಿದಿದೆಯೇ? ತಾವು ಸಾತ್ವಿಕರೆಂದು ತಮ್ಮಲ್ಲಿ ತಾವೇ ಹೆಮ್ಮೆ ಪಡುವುದೊಂದೇ ಅವರಿಗಿರುವುದು.

ಯಾವ ಮನುಷ್ಯ ಕೊಂಚವೂ ಶ್ರಮಪಡದೆ ಕೇವಲ ಹರಿನಾಮವನ್ನು ಜಪಿಸುತ್ತಾ ಕೊಠಡಿಯ ಬಾಗಿಲು ಮುಚ್ಚಿಕೊಂಡು ಕುಳಿತಿರುವನೋ, ಯಾರು ಸ್ವತ: ತನ್ನ ಕಣ್ಣುಗಳೆದರೇ ಇತರರಿಗೆ ಆಗುತ್ತಿರುವ ಅನ್ಯಾಯ-ಅತ್ಯಾಚಾರಗಳನ್ನು ನೋಡಿಯೂ ಮೌನವಾಗಿ ಉದಾಸೀನದಿಂದ ಇರುವನೋ, ಅಂತಹ ಸಾತ್ವಿಕ ಮನುಷ್ಯನಿಂದ ಏನು ಪ್ರಯೋಜನ?

ಒಂದು ದೇಶದ ಜನರಿಗೆ ತಮ್ಮ ಹಸಿವನ್ನು ಹಿಂಗಿಸಲು ಸಾಕಷ್ಟು ಆಹಾರ ಇಲ್ಲದೆ ಇದ್ದಾಗ ಹೇಗೆ ತಾನೆ ಧರ್ಮದಲ್ಲಿ ಸಾಧನೆ ಮಾಡಬಲ್ಲರು? ಭೋಗದ ಆಸೆ ಆಕಾಂಕ್ಷೆ ತುಂಬಿದ ಮನಸ್ಸಿಗೆ ಕೊಂಚವೂ ತೃಪ್ತಿ ಸಿಗದೆ ಇರುವಾಗ ಆ ದೇಶದ ಜನರಿಗೆ ತ್ಯಾಗಬುದ್ದಿ ಹೇಗೆ ತಾನೆ ಬರಲು ಸಾಧ್ಯ?

5. ರಾಜಕೀಯ

ಧರ್ಮವನ್ನು, ಧಾರ್ಮಿಕ ಸಂಕೇತಗಳನ್ನು, ಧಾರ್ಮಿಕ ಪುರುಷರನ್ನು ರಾಜಕೀಯವಾಗಿ ಬಳಸುವುದು ಹೊಸತೇನಲ್ಲ. ಇತಿಹಾಸ ಪುರುಷರು, ಧಾರ್ಮಿಕ ನಾಯಕರು ಮತ್ತು ಸಮಾಜ ಸುಧಾರಕರನ್ನು ಎಲ್ಲ ರಾಜಕೀಯ ಪಕ್ಷಗಳು ಬಳಸುತ್ತಾ ಬಂದಿವೆ. ರಾಜಕೀಯ ಚರ್ಚೆ, ಹೋರಾಟಗಳಲ್ಲಿ ಇವರ ವಿಚಾರಗಳು ಬಳಕೆಯಾಗಿವೆ. ಗಾಂಧೀಜಿ, ಅಂಬೇಡ್ಕರ್, ಜ್ಯೋತಿಬಾ ಪುಲೆ, ಪೆರಿಯಾರ್ ಮಾತ್ರವಲ್ಲ, ಬುದ್ಧ, ಬಸವಣ್ಣನವರನ್ನು ರಾಜಕಾರಣಿಗಳು ಬಿಟ್ಟಿಲ್ಲ. ಎಡಪಕ್ಷಗಳು ಕೂಡಾ ಈಶ್ವರ ಚಂದ್ರ ವಿದ್ಯಾಸಾಗರ ಮತ್ತು ಠ್ಯಾಗೋರ್ ಅವರನ್ನು ಚುನಾವಣಾ ಭಿತ್ತಿಪತ್ರಗಳಲ್ಲಿ ಬಳಸಿಕೊಂಡಿವೆ.

ಆದರೆ ಬಳಕೆಮಾಡಿಕೊಳ್ಳಬಹುದು, ಆದರೆ ದುರ್ಬಳಕೆ ಆಗಬಾರದು. ವಿವೇಕಾನಂದರ ವಿಚಾರಗಳನ್ನು ಓದಿದರೆ ಅವರು ಕೇವಲ ಧಾರ್ಮಿಕ ನಾಯಕರೆಂದು ಅನಿಸುವುದಿಲ್ಲ. ರೋಮ್ಯಾನ್ ರೊಲಂಡ್ ಸೇರಿದಂತೆ ವಿವೇಕಾನಂದರ ಬಗ್ಗೆ ಬರೆದವರೆಲ್ಲರೂ ಅವರ ಚಿಂತನೆಗಳನ್ನು ಧಾರ್ಮಿಕ, ಆಧ್ಯಾತ್ಮಿಕ ದುರ್ಬೀನ್ ಗಳಲ್ಲಿಯೇ ನೋಡಿದ್ದಾರೆ. ಆದರೆ ಅವರು ಧರ್ಮವನ್ನು ಸಾಧನವನ್ನಾಗಿ ಬಳಸಿಕೊಂಡು ರಾಜಕೀಯ ಹೋರಾಟ ಮಾಡಿರುವುದನ್ನು ಯಾರೂ ಗುರುತಿಸುವುದಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

Published

on

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್‌ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಲ್ಲಿ ಸೇರಿದ ಎಸ್‌ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು  ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.

ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್‌ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್‌ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್‌ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending