ಬಹಿರಂಗ
‘ಹಿಂದೂ ಧರ್ಮ,ಅಸ್ಪೃಶ್ಯತೆ, ಗೋಮಾಂಸ ಸೇವನೆ ಮತ್ತು ರಾಜಕೀಯ’ದ ಬಗ್ಗೆ ಸ್ವಾಮಿ ವಿವೇಕಾನಂದರ ಚಿಂತನೆಗಳು..!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/01/Vivekananda-suddidina-1009.jpg&description=‘ಹಿಂದೂ ಧರ್ಮ,ಅಸ್ಪೃಶ್ಯತೆ, ಗೋಮಾಂಸ ಸೇವನೆ ಮತ್ತು ರಾಜಕೀಯ’ದ ಬಗ್ಗೆ ಸ್ವಾಮಿ ವಿವೇಕಾನಂದರ ಚಿಂತನೆಗಳು..!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/01/Vivekananda-suddidina-1009.jpg&description=‘ಹಿಂದೂ ಧರ್ಮ,ಅಸ್ಪೃಶ್ಯತೆ, ಗೋಮಾಂಸ ಸೇವನೆ ಮತ್ತು ರಾಜಕೀಯ’ದ ಬಗ್ಗೆ ಸ್ವಾಮಿ ವಿವೇಕಾನಂದರ ಚಿಂತನೆಗಳು..!', 'pinterestShare', 'width=750,height=350'); return false;" title="Pin This Post">
- ಹಿಂದೂ ಧರ್ಮ, ಪೌರೋಹಿತ್ಯ, ಅಸ್ಪೃಶ್ಯತೆ, ಆಹಾರ, ಗೋಮಾಂಸ ಸೇವನೆ ಮತ್ತು ರಾಜಕೀಯದ ಬಗ್ಗೆ ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಅವರ ಜನ್ಮದಿನವಾದ ಇಂದು (ಜ.12) ಮನನ ಮಾಡಿಕೊಳ್ಳೋಣ.
–ದಿನೇಶ್ ಅಮೀನ್ ಮಟ್ಟು
- ಹಿಂದೂ ಧರ್ಮ
ಸ್ವಾಮಿ ವಿವೇಕಾನಂದರು ಎಂದೂ ತಾವೊಬ್ಬ ಹಿಂದೂ ಎಂದಾಗಲಿ, ಹಿಂದೂ ಸನ್ಯಾಸಿಯೆಂದಾಗಲಿ ಹೇಳಿಕೊಳ್ಳಲಿಲ್ಲ. ಅವರಿಗೆ ಹಿಂದೂ ಎನ್ನುವ ಶಬ್ದದ ಬಗ್ಗೆಯೇ ಭಿನ್ನಾಭಿಪ್ರಾಯ ಇತ್ತು. ಮೂಲಭೂತವಾಗಿ ಹಿಂದುತ್ವದ ವ್ಯಾಖ್ಯಾನವನ್ನೇ ತಪ್ಪಾಗಿ ಮಾಡಲಾಗಿದೆ ಎಂದು ಅವರು ಹೇಳುತ್ತಿದ್ದರು.
ಸಿಂಧೂ ನದಿಯ ಆಚೆದಡದಲ್ಲಿರುವವರೆಲ್ಲರೂ ಹಿಂದೂಗಳು. ಅದರಲ್ಲಿ ಮುಸ್ಲಿಮ್, ಕ್ರಿಶ್ಚಿಯನ್, ಬೌದ್ಧರು ಸೇರಿದಂತೆ ಎಲ್ಲ ಧರ್ಮದವರೂ ಇದ್ದರು. ಪರ್ಷಿಯನರು ಮೂಲ ಸಿಂಧೂವನ್ನು ಅಪಭ್ರಂಶಗೊಳಿಸಿ ಹಿಂದೂ ಕರೆದರು. ಮುಸ್ಲಿಮ್ ಅರಸರ ಆಳ್ವಿಕೆಯ ಕಾಲದಲ್ಲಿ ಹಿಂದೂಗಳೆನಿಸಿಕೊಂಡವರು ಬಹಿರಂಗವಾಗಿ ತಮ್ಮನ್ನು ಹಿಂದೂಗಳೆಂದು ಕರೆಸಿಕೊಂಡರು ಎಂದು ಸ್ವತ: ವಿವೇಕಾನಂದರೇ ಹೇಳಿಕೊಂಡಿದ್ದಾರೆ. ಅವರ ಪ್ರಕಾರ ಹಿಂದೂಗಳು ತಮ್ಮನ್ನು ವೇದಾಂತಿಗಳು ಎಂದು ಕರೆದುಕೊಳ್ಳಬೇಕು.
ವಿವೇಕಾನಂದರ ಧರ್ಮದ ವ್ಯಾಖ್ಯಾನವೇ ಬೇರೆ ಇತ್ತು. “ದೇವರು ಬಂದು ಭೂಮಂಡಲವನ್ನು ಸೃಷ್ಟಿಸಿದ, ಅಂದಿನಿಂದ ಕಾಲ ಸ್ಥಬ್ಧವಾಗಿದೆ ಎನ್ನುವುದೆಲ್ಲ ಸುಳ್ಳು, ದೇವರು ಎನ್ನುವವನ ಅಸ್ತಿತ್ವ ಪ್ರತಿಯೊಬ್ಬನಿಗೂ ಹೃದಯದ ಮೂಲಕ ಅರಿವಾಗುವಂತಹದ್ದು. ಇದಕ್ಕಿಂತಲೂ ಮುಖ್ಯವಾದುದು ಭೂಮಂಡಲದ ಎಲ್ಲ ಜೀವಿಗಳ ಹೃದಯದಲ್ಲಿ ದೇವರಿದ್ದಾನೆ ಎಂಬ ಅರಿವು. ವ್ಯತ್ಯಾಸ ಇರುವುದು ಅದರ ಅಭಿವ್ಯಕ್ತಿಯ ರೂಪಗಳಲ್ಲಿ ಮಾತ್ರ. ದೇವರು ಎಲ್ಲ ಮನುಷ್ಯರೊಳಗೆ ಇರುತ್ತಾನೆ.ಮನುಷ್ಯನೊಳಗಿನ ದೈವತ್ವವನ್ನು ಕಂಡುಕೊಳ್ಳುವುದೇ ಧರ್ಮ” ಎಂದು ವಿವೇಕಾನಂದ ಹೇಳಿದ್ದರು.
ಅದಕ್ಕಾಗಿ ಅವರು ದರಿದ್ರರಲ್ಲಿ ಬಡವರಲ್ಲಿ ರೋಗಿಗಳಲ್ಲಿ, ನಿರ್ಗತಿಕರಲ್ಲಿ ದೇವರನ್ನು ಕಾಣು ಎಂದು ಹೇಳಿದ್ದರು. ನಾವು ಈಗ ಬಡತನ ಎನ್ನುವುದು ಪೂರ್ವಜನ್ಮದ ಪಾಪದ ಫಲ, ಅದೊಂದು ಅಪರಾಧ ಎಂದು ತಿಳಿದುಕೊಂಡವರ ಕಾಲದಲ್ಲಿದ್ದೇವೆ.
ದೇವರು ಎನ್ನುವುದು ಪ್ರೀತಿ, ಎಲ್ಲವನ್ನು ದೇವರು ಎಂದು ಭಾವಿಸುವ ಮೂಲಕ ದೇವರಪೂಜೆ ಮಾಡಬಹುದು. ವಿವೇಕಾನಂದರು ಪ್ರತಿಪಾದಿಸಿದ ಹಿಂದುತ್ವದಲ್ಲಿ ಜಾತಿ,ಸಂಕೇತ, ಆಚರಣೆ, ಪೂಜೆಯ ಸ್ಥಳ ಮತ್ತು ವಿಧಾನಗಳು ಇರಲಿಲ್ಲ. ಮೂರ್ತಿಪೂಜೆಗೆ ಅವರ ಸಹಮತ ಇರಲಿಲ್ಲ. ಒಮ್ಮೆ ಅವರು ಅಲ್ಮೋರದಲ್ಲಿರುವ ಮಾಯಾವತಿ ಆಶ್ರಮಕ್ಕೆ ಹೋಗಿದ್ದರು.
ಅಲ್ಲಿ ಗೋಡೆಯ ಮೇಲಿದ್ದ ರಾಮಕೃಷ್ಣ ಪರಮಹಂಸರ ಚಿತ್ರ ನೋಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಗುರುಗಳ ದೈಹಿಕ ಚಹರೆಯ ಮೂಲಕ ಅವರನ್ನು ನಾನು ನೆನಪಲ್ಲಿಟ್ಟುಕೊಳ್ಳುವುದು ಬೇಕಾಗಿಲ್ಲ. ಅವರ ಆದರ್ಶಗಳ ಪಾಲನೆ ಮತ್ತು ಪ್ರಚಾರದ ಮೂಲಕ ಅವರನ್ನು ನೆನಪಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದ್ದರು.
ಧರ್ಮ ಎನ್ನುವುದು ಬಾಯಿ ಮಾತಲ್ಲ, ನಂಬಿಕೆಯೂ ಅಲ್ಲ, ಸಿದ್ಧಾಂತವೂ ಅಲ್ಲ, ಅದೊಂದು ಕೋಮುವಾದಿ ಭಾವನೆಯೂ ಅಲ್ಲ. ಧರ್ಮ ಎನ್ನುವುದು ಕೋಮುಗಳಲ್ಲಿ ಇಲ್ಲವೆ ಸಂಘಗಳಲ್ಲಿ ಬಾಳಲಾರದು. ಆತ್ಮನಿಗೂ, ದೇವರಿಗೂ ಇರುವ ಸಂಬಂಧ ಇದು. ಇದಕ್ಕೆ ಸಾಂಘಿಕ ರೂಪ ಕೊಟ್ಟಕೂಡಲೇ ಅದು ವ್ಯಾಪಾರವಾಗುವುದು. ಯಾವ ಧರ್ಮದಲ್ಲಿ ವ್ಯಾಪಾರದ ಗುಣಗಳಿರುವುದೋ ಅಲ್ಲಿ ಆಧ್ಯಾತ್ಮಿಕತೆ ನಾಶವಾಗುವುದು.
ಧರ್ಮ ಎನ್ನುವುದು ದೇವಾಲಯ ಕಟ್ಟುವುದರಲ್ಲಿ ಇಲ್ಲ, ಅಥವಾ ಸಾಮಾಜಿಕ ಪೂಜೆಗೆ ಹೋಗುವುದರಲ್ಲಿ ಇಲ್ಲ. ಅದು ಧರ್ಮಗ್ರಂಥಗಳಲ್ಲಿ ಇಲ್ಲ. ಉಪವಾಸದಲ್ಲಿಯೂ ಅಲ್ಲ. ಧರ್ಮವೆಂದರೆ ಸಾಕ್ಷಾತ್ಕಾರ. ಒಂದು ಕಣದಷ್ಟು ಧರ್ಮಾನುಷ್ಠಾನ ಮತ್ತು ಆತ್ಮ ಸಾಕ್ಷಾತ್ಕಾರ ಒಂದು ಮಣ ಮಾತಿಗಿಂತ ಮತ್ತು ಒಣ ಹೆಮ್ಮೆಗಿಂತ ಮೇಲು.
ಪುರೋಹಿತಷಾಹಿ ಬಗ್ಗೆ ವಿವೇಕಾನಂದರಷ್ಟು ಕಟುವಾಗಿ ಮಾತಾಡಿದ ಇನ್ನೊಬ್ಬ ಧಾರ್ಮಿಕ ನಾಯಕನಿಲ್ಲ.ಒಮ್ಮೊಮ್ಮೆ ಅವರ ಮಾತುಗಳು ಪೆರಿಯಾರ್ ಅವರಿಗಿಂತಲೂ ತೀಕ್ಷ್ಣವಾಗಿರುತ್ತಿತ್ತು. ನೀಚರು, ಕುತಂತ್ರಿಗಳಾಗಿರುವ ಪುರೋಹಿತರು ಎಲ್ಲ ವಿಧದ ಮೂಢನಂಬಿಕೆಗಳನ್ನು ವೇದ ಮತ್ತು ಹಿಂದೂ ಧರ್ಮದ ಸಾರ ಎಂದು ಬೋಧಿಸುತ್ತಾರೆ. ಈ ಮೋಸಗಾರರು ಅಥವಾ ಅವರ ತಾತಮುತ್ತಾತರಾಗಲಿ ಕಳೆದ ನಾನೂರು ತಲೆಮಾರುಗಳಿಂದಲೂ ವೇದದ ಒಂದು ಭಾಗವನ್ನೂ ನೋಡಿಲ್ಲ. ಕಲಿಯುಗದಲ್ಲಿ ಬ್ರಾಹ್ಮಣ ವೇಷದಲ್ಲಿರುವ ಈ ರಾಕ್ಷಸರಿಂದ ಮುಗ್ಧ ಜನರನ್ನು ಆ ದೇವರೇ ಕಾಪಾಡಬೇಕು.
ಪುರೋಹಿತರ ಹೃದಯ ಎಂದಿಗೂ ವಿಶಾಲವಾಗುವುದಿಲ್ಲ, ಅವರು ತಿದ್ದಿಕೊಳ್ಳುವುದಿಲ್ಲ. ಶತಶತಮಾನಗಳಿಂದ ಬಂದ ಮೂಢ ನಂಬಿಕೆ ಮತ್ತು ದಬ್ಬಾಳಿಕೆಯ ಸಂತಾನ ಅವರು. ಅವರು ಪ್ರಗತಿಗೆ ವಿರುದ್ಧವಾಗಿರುವವರು. ಮೊದಲು ಪುರೋಹಿತಷಾಹಿಯನ್ನು ಬೇರು ಸಹಿತ ಕಿತ್ತೊಗೆಯಿರಿ. ಬನ್ನಿ ಮನುಷ್ಯರಾಗಿ, ಸಂಕುಚಿತ ಬಿಲಗಳಿಂದ ಹೊರಗೆ ಬನ್ನಿ, ಕಣ್ಣು ಬಿಟ್ಟು ಹೊರಗೆ ನೋಡಿ, ಮನುಷ್ಯರನ್ನು ಪ್ರೀತಿಸಿ, ದೇಶವನ್ನು ಪ್ರೀತಿಸಿ, ಉನ್ನತವಾದ ಕೆಲಸಗಳಿಗಾಗಿ ಹೋರಾಡಿ.
ಪ್ರಪಂಚದ ಯಾವ ಧರ್ಮವೂ ಹಿಂದೂ ಧರ್ಮದಷ್ಟು ಭವ್ಯವಾಣಿಯಲ್ಲಿ ಮನುಷ್ಯತ್ವದ ಘನತೆ ಗೌರವಗಳ ಬಗ್ಗೆ ಬೋಧನೆ ಮಾಡಿಲ್ಲ. ಪ್ರಪಂಚದ ಯಾವ ಧರ್ಮವೂ ದೀನದಲಿತರ ಕುತ್ತಿಗೆಯನ್ನು ಹಿಂದೂ ಧರ್ಮದಷ್ಟು ಕ್ರೂರವಾಗಿ ತುಳಿಯುವುದಿಲ್ಲ. ತಪ್ಪು ಹಿಂದೂ ಧರ್ಮದಲ್ಲ , ಅಲ್ಲಿರುವ ಸಂಪ್ರದಾಯ ಶರಣರದ್ದು, ಪುರೋಹಿತರದ್ದು. ಪಾರಮಾರ್ಥಿಕ ಮತ್ತು ವ್ಯಾವಹಾರಿಕ ಎಂದು ನಾನಾ ಬಗೆಯ ಕ್ರೂರ ಸಾಧನೆಗಳನ್ನು ಸೃಷ್ಟಿಸುವ ಠಕ್ಕರದ್ದು.
ನನ್ನ ದೃಷ್ಟಿಯಲ್ಲಿ ಗ್ರಂಥಗಳು ಒಳ್ಳೆಯದಕ್ಕಿಂತ ಹೆಚ್ಚು ಕೆಟ್ಟದ್ದನ್ನು ಮಾಡಿವೆ. ಮತಾಂಧತೆ, ಅನ್ಯಧರ್ಮಿಯರನ್ನು ಹಿಂಸಿಸುವುದು, ಮೂಢನಂಬಿಕೆ, ಕಂದಾಚಾರ, ಕಪಟಾಚಾರಕ್ಕೆಲ್ಲ ಈ ಧರ್ಮಗ್ರಂಥಗಳು ಕಾರಣ. ಎಲ್ಲಿಯ ವರೆಗೆ ಧರ್ಮ ಎಲ್ಲೊ ಕೆಲವು ಆರಿಸಿದ ವ್ಯಕ್ತಿಗಳ ಕೈಯಲ್ಲಿ ಅಥವಾ ಕೆಲವು ಪುರೋಹಿತರ ಕೈಯಲ್ಲಿ ಇರುತ್ತೋ ಆಗ ಧರ್ಮ, ದೇವಸ್ಥಾನ, ಚರ್ಚ್, ಮಸೀದಿ, ಶಾಸ್ತ್ರ, ಮೂಢನಂಬಿಕೆಗಳ ಸುತ್ತ ಗಿರಕಿ ಹೊಡೆಯುತ್ತಿರುತ್ತದೆ. ಯಾವಾಗ ನಾವು ನಿಜವಾದ ಆಧ್ಯಾತ್ಮಿಕ ಸಮಷ್ಠಿ ಭಾವನೆಗೆ ಬರುವೆವೋ ಆಗ ಮಾತ್ರ ಧರ್ಮ ಸತ್ಯವಾಗುವುದು, ಬದುಕಿರುವುದು. ಅದು ನಮ್ಮ ಸ್ವಭಾವದಲ್ಲಿ, ನಡತೆಯಲ್ಲಿ, ಕಾರ್ಯದಲ್ಲಿ ವ್ಯಕ್ತವಾಗಬೇಕು. (3-14)
2. ಅಸ್ಪೃಶ್ಯತೆ
‘ನಾನೇ ಶುದ್ಧ ಉಳಿದವರೆಲ್ಲರೂ ಅಶುದ್ಧ’ ಎಂದು ಹೇಳುವುದು ಮೃಗೀಯವಾದ ರಾಕ್ಷಸ ಧರ್ಮ. ನರಕ ಸದೃಶವಾದ ಧರ್ಮ. ಭರತ ಖಂಡದಲ್ಲಿ ಧರ್ಮವೇನಾದರೂ ಉಳಿದುಕೊಂಡಿದೆ ಎಂದು ತಿಳಿದುಕೊಂಡಿದ್ಧಿರೇನು? ಜ್ಞಾನ, ಭಕ್ತಿ, ಯೋಗಗಳ ಮಾರ್ಗಗಳೆಲ್ಲ ಹೋಯಿತು. ಈಗ ಉಳಿದಿರುವುದು ಒಂದೇ ಧರ್ಮ. ಅದು ‘ಮುಟ್ಟಬೇಡ, ಮುಟ್ಟಬೇಡ ಎಂಬುದು.
ಪ್ರಪಂಚವೆಲ್ಲ ಮೈಲಿಗೆ ನಾನೊಬ್ಬನೇ ಮಡಿ, ಅಹಾ ಎಂತಹ ತಿಳಿಯಾದ ಬ್ರಹ್ಮಜ್ಞಾನ.ಇಂದಿನ ಹಿಂದೂ ಧರ್ಮ ಜ್ಞಾನ ಮಾರ್ಗವೂ ಅಲ್ಲ, ಭಕ್ತಿ ಮಾರ್ಗವೂ ಅಲ್ಲ. ಅದರ ಧರ್ಮವೇ ಅಸ್ಪೃಶ್ಯತೆ. ಎಲ್ಲರಲ್ಲಿಯೂ ಒಂದೇ ಆತ್ಮವನ್ನು ನೋಡಬೇಕೆಂಬ ಉಪದೇಶ ಗ್ರಂಥಗಳಲ್ಲಿಯೂ ಉಳಿದಿದೆ. ಹಸಿದವನಿಗೆ ಒಂದು ತುತ್ತನ್ನು ಕೊಡದವರು ಮೋಕ್ಷವನ್ನು ಹೇಗೆ ಕೊಟ್ಟಾರು? ಮತ್ತೊಬ್ಬರ ಉಸಿರಿನ ಸೋಕಿನಿಂದಲೇ ಇವರು ಪಾಪಿಗಳಾಗುವುದಿದ್ದರೆ ಇನ್ನೊಬ್ಬರನ್ನು ಹೇಗೆ ಶುದ್ಧಿ ಮಾಡಿಯಾರು. ಅಸ್ಪೃಶ್ಯತೆ ಎನ್ನುವುದು ಒಂದು ಮನೋರೋಗ. ಈ ರೋಗ ಗುಣವಾಗದೆ ಹಿಂದೂ ಧರ್ಮ ಉದ್ಧಾರವಾಗಲಾರದು.
ಸಮಾನತೆಯ ಭಾವವನ್ನು ಯಾವುದಾದರೂ ಒಂದು ಧರ್ಮ ಪಾಲಿಸುತ್ತಾ ಬಂದಿದ್ದರೆ ಅದು ಇಸ್ಲಾಂ ಧರ್ಮ. ವೇದಾಂತ ತತ್ವಗಳು ಎಷ್ಟೊಂದು ವಿಚಾರಪೂರ್ಣವಾಗಿದ್ದರೂ ಅದು ವಿಶ್ವದ ಮಾನವ ವರ್ಗದ ಬಹುಮಂದಿಗೆ ತಲುಪಬೇಕಾದರೆ ಇಸ್ಲಾಂಧರ್ಮದ ಅನುಷ್ಠಾನದ ಮಾದರಿಯನ್ನು ಅನುಸರಿಸಬೇಕಾಗುತ್ತದೆ. ನಮ್ಮ ಮಾತೃಭೂಮಿಯಲ್ಲಿ ಹಿಂದೂ ಮತ್ತು ಮುಸಲ್ಮಾನ ಧರ್ಮಗಳೆರಡೂ ಮಿಲನವಾಗಬೇಕು, ವೇದಾಂತದ ಮೆದುಳು ಮತ್ತು ಇಸ್ಲಾಮಿನ ದೇಹ ಇದೊಂದೇ ನಮ್ಮ ಪುರೋಗಮನಕ್ಕೆ ಹಾದಿ. ನನ್ನ ಕಣ್ಣಿಗೆ ಇಂದಿನ ಗೊಂದಲ ಮತ್ತು ತಿಕ್ಕಾಟದಿಂದ ವೇದಾಂತದ ಮೆದುಳು ಮತ್ತು ಇಸ್ಲಾಮಿನ ದೇಹದಿಂದ ಕೂಡಿದ ತೇಜೋಮಯವಾದ, ಅಜೇಯವಾದ ಮುಂದಿನ ನಿಷ್ಕಳಂಕ ಭಾರತದ ಉದಯ ಕಾಣುತ್ತಿದೆ.
ಪ್ರತಿಯೊಬ್ಬರು ಒಂದೇ ಧರ್ಮಕ್ಕೆ ಸೇರಿ ಒಂದೇ ಮಾರ್ಗವನ್ನು ಅನುಸರಿಸುವ ದುರ್ದಿನ ಪ್ರಪಂಚಕ್ಕೆ ಬಾರದಿರಲಿ, ಆಗ ಧರ್ಮ ಮತ್ತು ಆಧ್ಯಾತ್ಮ ಎರಡೂ ನಾಶವಾಗುವುದು. ವೈವಿಧ್ಯವೇ ಜೀವನದ ರಹಸ್ಯ. ಇದು ನಾಶವಾದರೆ ಸೃಷ್ಟಿನಾಶವಾಗುವುದು. ನನ್ನ ಧರ್ಮ ಎನ್ನುವುದು ಎಂದೂ ಇರಲಿಲ್ಲ. ಯಾವಾಗಲೂ ಇರುವುದು ಒಂದೇ ಧರ್ಮ. ಈ ಧರ್ಮವೇ ಹಲವು ದೇಶಗಳಲ್ಲಿ ಹಲವು ರೀತಿಗಳಲ್ಲಿ ವ್ಯಕ್ತವಾಗುತ್ತಾ ಹೋಗುವುದು. ಆದ್ದರಿಂದ ನಾವು ಎಲ್ಲ ಧರ್ಮಗಳಿಗೂ ಗೌರವವನ್ನು ತೋರಬೇಕು. ಸಾಧ್ಯವಾದ ಮಟ್ಟಿಗೆ ಎಲ್ಲವನ್ನೂ ಸ್ವೀಕರಿಸಬೇಕು. ಸ್ವಾಮಿ ವಿವೇಕಾನಂದರ ಎಷ್ಟೋ ವಿಚಾರಗಳನ್ನು ಓದಿದರೆ ಅವರೊಬ್ಬ ನಾಸ್ತಿಕನೂ ಇರಬಹುದೇನೋ ಎಂಬ ಸಂಶಯವೂ ಬಾರದೆ ಇರದು.
3. ಆಹಾರ
ನಮ್ಮ ಆಹಾರ ಪದ್ದತಿಯ ಬಗ್ಗೆ ವಿವೇಕಾನಂದರು ದೀರ್ಘವಾಗಿ ಮಾತನಾಡಿದ್ದಾರೆ. ನಿನಗಿಷ್ಟವಾದ ಮೀನು-ಮಾಂಸ ತಿನ್ನು. ಈ ದೇಶವೆಲ್ಲ ಒಂದೇ ಬಗೆಯ ತರಕಾರಿಯಲ್ಲಿ ಜೀವಿಸುವ, ಅಜೀರ್ಣದಿಂದ ನರಳುವ ಬಾಬಾಜಿಗಳಿಂದ ತುಂಬಿಹೋಗಿವೆ. ಸತ್ವಗುಣದ ಚಿಹ್ನೆಯೇ ಇಲ್ಲ. ಬರೀ ತಮಸ್ಸು. ನಗುಮುಖ, ಅಭಯೋತ್ಸಾಹ, ತೃಪ್ತಿ, ಉತ್ಕಟ, ಕ್ರಿಯಾಶೀಲತೆ ಇವೆಲ್ಲ ಸತ್ವಗುಣದ ಪರಿಣಾಮ. ಸೋಮಾರಿತನ, ಆಲಸ್ಯ, ಉತ್ಕಟ ಮೋಹ, ನಿದ್ದೆ ಎಲ್ಲವೂ ತಾಮಸ ಚಿಹ್ನೆಗಳು. ನಮಗಿಂದು ಬೇಕಾಗಿರುವುದು ಸತ್ವಗುಣಿಗಳು. ದೇಶದ ಜನರಿಗೆ ಅನ್ನ, ಬಟ್ಟೆ, ಉದ್ಯೋಗ ಬೇಕು. ದೇಶ ಜಾಗೃತಗೊಳ್ಳಬೇಕು, ಚಟುವಟಿಕೆಯಿಂದ ಇರುವಂತೆ ಪ್ರೇರೇಪಿಸಬೇಕು. ಇಲ್ಲದಿದ್ದರೆ ಅವರು ಮತ್ತಷ್ಟು ಜಡವಾಗಿ, ಮರ ಕಲ್ಲುಗಳಂತಾಗುತ್ತಾರೆ, ಆದ್ದರಿಂದ ಹೆಚ್ಚು ಮಾಂಸ, ಮೀಣು ತಿನ್ನಬೇಕೆಂದು ನಾನು ಹೇಳುತ್ತಿದ್ದೇನೆ.
ಪ್ರಾಣಿಗಳನ್ನು ಕೊಲ್ಲುವುದು ಖಂಡಿತವಾಗಿಯೂ ಕೆಟ್ಟದ್ದು. ಆದರೆ ರಸಾಯನಶಾಸ್ತ್ರದ ಅಭಿವೃದ್ಧಿಯೊಂದಿಗೆ ಎಲ್ಲಿಯ ವರೆಗೆ ಸಸ್ಯಾಹಾರ ಮನುಷ್ಯನ ದೇಹದ ಎಲ್ಲ ಅವಶ್ಯಕತೆಗಳನ್ನು ಪೂರೈಸುವುದಿಲ್ಲವೋ ಅಲ್ಲಿಯ ವರೆಗೆ ಮಾಂಸವನ್ನು ತಿನ್ನದೆ ವಿಧಿ ಇಲ್ಲ. ಉತ್ತಮ ಮತ್ತು ಪೌಷ್ಠಿಕಾಂಶದಿಂದ ಕೂಡಿದ ಆಹಾರ ಏನೆಲ್ಲ ಮಾಡಬಲ್ಲದು ಎಂಬುದಕ್ಕೆ ಜಪಾನ್ ದೇಶವೇ ಉದಾಹರಣೆ (7-125) ಹಿಂದೂ ಮತ್ತು ಚೀನಿಯರನ್ನು ನೋಡಿ ಅವರು ದೈಹಿಕವಾಗಿ ಎಷ್ಟೊಂದು ಬಡವಾಗಿದ್ದಾರೆ, ಅವರು ಮಾಂಸ ತಿನ್ನುವುದಿಲ್ಲ.
ಅಕ್ಕಿ ಮತ್ತು ಸಿಕ್ಕಿದ ತರಕಾರಿ ತಿಂದು ಜೀವಿಸುತ್ತಿದ್ದಾರೆ. ಹಿಂದೆ ಜಪಾನಿಯರೂ ಇದೇ ಸ್ಥಿತಿಯಲ್ಲಿದ್ದರು. ಅವರು ಮಾಂಸಹಾರ ಪ್ರಾರಂಭಿಸಿದ ನಂತರ ಆ ದೇಶದ ಚರಿತ್ರೆಯೇ ಬದಲಾಗಿ ಹೋಯಿತು. ಎಲ್ಲಿಯವರೆಗೆ ಸಮಾಜದಲ್ಲಿ ಶಕ್ತಿಶಾಲಿಗೆ ಜಯವೆಂಬುದು ಇರುತ್ತೋ ಅಲ್ಲಿಯ ವರೆಗೆ ಮಾಂಸಾಹಾರಿಗಳಾಗಿರಬೇಕು. ಇಲ್ಲದೆ ಇದ್ದರೆ ದುರ್ಬಲರು ಬಲಾಢ್ಯರ ಪಾದದ ಅಡಿಗೆ ಸಿಕ್ಕಿ ನಾಶವಾಗುತ್ತಾರೆ. ಎಲ್ಲೋ ಕೆಲವರಿಗೆ ಶಾಖಾಹಾರದಿಂದ ಪ್ರಯೋಜನವನ್ನು ಹೇಳಿದರಷ್ಟೇ ಸಾಲದು. ಒಂದು ದೇಶವನ್ನು ಮತ್ತೊಂದು ದೇಶದೊಂದಿಗೆ ಹೋಲಿಸಿ ನಿರ್ಣಯಕ್ಕೆ ಬನ್ನಿ.
4. ಗೋಮಾಂಸ
ಭಾರತದಲ್ಲಿ ಹಿಂದೆ ದನದ ಮಾಂಸ ತಿನ್ನದ ಬ್ರಾಹ್ಮಣ ಬ್ರಾಹ್ಮಣನಾಗಿ ಉಳಿಯುತ್ತಿರಲಿಲ್ಲ. ಸನ್ಯಾಸಿ, ರಾಜ, ಮಹಾತ್ಮರು ಮನೆಗೆ ಬಂದರೆ ಗೌರವಾರ್ಥವಾಗಿ ಅತ್ಯುತ್ತಮ ಗೂಳಿಯನ್ನು ಕೊಂದು ಅಡಿಗೆ ಮಾಡುತ್ತಿದ್ದರು. ಎಂದು ವೇದದಲ್ಲಿದೆ. ನಮ್ಮದು ಕೃಷಿಪ್ರಧಾನ ದೇಶ. ಅತ್ಯುತ್ತಮ ಎತ್ತುಗಳನ್ನು ಕೊಂದರೆ ಕಾಲಕ್ರಮೇಣ ದನದ ಜಾತಿಯೇನಾಶವಾಗುವುದೆಂದು ತಿಳಿದು, ಗೋಹತ್ಯೆ ಮಹಾಪಾಪವೆಂದು ನಿರ್ಬಂಧ ಹೇರಲಾಯಿತು.
ಈಗ ನಾನು ಕೇವಲ ಮಾಂಸವನ್ನು ಮಾತ್ರ ತಿಂದು ಜೀವಿಸುತ್ತಿದ್ದೇನೆ ಎಂದು 1897ರ ಏಪ್ರಿಲ್ 28ರಂದು ವಿವೇಕಾನಂದರು ಶ್ರೀಮತಿ ಹೆಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.ನಮ್ಮ ದೇಶದ ಜನರಿಗೆ ಸತ್ಯವಾದ ಧರ್ಮವನ್ನು ಅನುಸರಿಸಿ ಸಾಧನೆ ಮಾಡುವಷ್ಟು ಶಕ್ತಿಯಾದರೂ ಉಳಿದಿದೆಯೇ? ತಾವು ಸಾತ್ವಿಕರೆಂದು ತಮ್ಮಲ್ಲಿ ತಾವೇ ಹೆಮ್ಮೆ ಪಡುವುದೊಂದೇ ಅವರಿಗಿರುವುದು.
ಯಾವ ಮನುಷ್ಯ ಕೊಂಚವೂ ಶ್ರಮಪಡದೆ ಕೇವಲ ಹರಿನಾಮವನ್ನು ಜಪಿಸುತ್ತಾ ಕೊಠಡಿಯ ಬಾಗಿಲು ಮುಚ್ಚಿಕೊಂಡು ಕುಳಿತಿರುವನೋ, ಯಾರು ಸ್ವತ: ತನ್ನ ಕಣ್ಣುಗಳೆದರೇ ಇತರರಿಗೆ ಆಗುತ್ತಿರುವ ಅನ್ಯಾಯ-ಅತ್ಯಾಚಾರಗಳನ್ನು ನೋಡಿಯೂ ಮೌನವಾಗಿ ಉದಾಸೀನದಿಂದ ಇರುವನೋ, ಅಂತಹ ಸಾತ್ವಿಕ ಮನುಷ್ಯನಿಂದ ಏನು ಪ್ರಯೋಜನ?
ಒಂದು ದೇಶದ ಜನರಿಗೆ ತಮ್ಮ ಹಸಿವನ್ನು ಹಿಂಗಿಸಲು ಸಾಕಷ್ಟು ಆಹಾರ ಇಲ್ಲದೆ ಇದ್ದಾಗ ಹೇಗೆ ತಾನೆ ಧರ್ಮದಲ್ಲಿ ಸಾಧನೆ ಮಾಡಬಲ್ಲರು? ಭೋಗದ ಆಸೆ ಆಕಾಂಕ್ಷೆ ತುಂಬಿದ ಮನಸ್ಸಿಗೆ ಕೊಂಚವೂ ತೃಪ್ತಿ ಸಿಗದೆ ಇರುವಾಗ ಆ ದೇಶದ ಜನರಿಗೆ ತ್ಯಾಗಬುದ್ದಿ ಹೇಗೆ ತಾನೆ ಬರಲು ಸಾಧ್ಯ?
5. ರಾಜಕೀಯ
ಧರ್ಮವನ್ನು, ಧಾರ್ಮಿಕ ಸಂಕೇತಗಳನ್ನು, ಧಾರ್ಮಿಕ ಪುರುಷರನ್ನು ರಾಜಕೀಯವಾಗಿ ಬಳಸುವುದು ಹೊಸತೇನಲ್ಲ. ಇತಿಹಾಸ ಪುರುಷರು, ಧಾರ್ಮಿಕ ನಾಯಕರು ಮತ್ತು ಸಮಾಜ ಸುಧಾರಕರನ್ನು ಎಲ್ಲ ರಾಜಕೀಯ ಪಕ್ಷಗಳು ಬಳಸುತ್ತಾ ಬಂದಿವೆ. ರಾಜಕೀಯ ಚರ್ಚೆ, ಹೋರಾಟಗಳಲ್ಲಿ ಇವರ ವಿಚಾರಗಳು ಬಳಕೆಯಾಗಿವೆ. ಗಾಂಧೀಜಿ, ಅಂಬೇಡ್ಕರ್, ಜ್ಯೋತಿಬಾ ಪುಲೆ, ಪೆರಿಯಾರ್ ಮಾತ್ರವಲ್ಲ, ಬುದ್ಧ, ಬಸವಣ್ಣನವರನ್ನು ರಾಜಕಾರಣಿಗಳು ಬಿಟ್ಟಿಲ್ಲ. ಎಡಪಕ್ಷಗಳು ಕೂಡಾ ಈಶ್ವರ ಚಂದ್ರ ವಿದ್ಯಾಸಾಗರ ಮತ್ತು ಠ್ಯಾಗೋರ್ ಅವರನ್ನು ಚುನಾವಣಾ ಭಿತ್ತಿಪತ್ರಗಳಲ್ಲಿ ಬಳಸಿಕೊಂಡಿವೆ.
ಆದರೆ ಬಳಕೆಮಾಡಿಕೊಳ್ಳಬಹುದು, ಆದರೆ ದುರ್ಬಳಕೆ ಆಗಬಾರದು. ವಿವೇಕಾನಂದರ ವಿಚಾರಗಳನ್ನು ಓದಿದರೆ ಅವರು ಕೇವಲ ಧಾರ್ಮಿಕ ನಾಯಕರೆಂದು ಅನಿಸುವುದಿಲ್ಲ. ರೋಮ್ಯಾನ್ ರೊಲಂಡ್ ಸೇರಿದಂತೆ ವಿವೇಕಾನಂದರ ಬಗ್ಗೆ ಬರೆದವರೆಲ್ಲರೂ ಅವರ ಚಿಂತನೆಗಳನ್ನು ಧಾರ್ಮಿಕ, ಆಧ್ಯಾತ್ಮಿಕ ದುರ್ಬೀನ್ ಗಳಲ್ಲಿಯೇ ನೋಡಿದ್ದಾರೆ. ಆದರೆ ಅವರು ಧರ್ಮವನ್ನು ಸಾಧನವನ್ನಾಗಿ ಬಳಸಿಕೊಂಡು ರಾಜಕೀಯ ಹೋರಾಟ ಮಾಡಿರುವುದನ್ನು ಯಾರೂ ಗುರುತಿಸುವುದಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ7 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ5 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

