ಬಹಿರಂಗ
‘ಹಿಂದೂ ಧರ್ಮ,ಅಸ್ಪೃಶ್ಯತೆ, ಗೋಮಾಂಸ ಸೇವನೆ ಮತ್ತು ರಾಜಕೀಯ’ದ ಬಗ್ಗೆ ಸ್ವಾಮಿ ವಿವೇಕಾನಂದರ ಚಿಂತನೆಗಳು..!
- ಹಿಂದೂ ಧರ್ಮ, ಪೌರೋಹಿತ್ಯ, ಅಸ್ಪೃಶ್ಯತೆ, ಆಹಾರ, ಗೋಮಾಂಸ ಸೇವನೆ ಮತ್ತು ರಾಜಕೀಯದ ಬಗ್ಗೆ ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಅವರ ಜನ್ಮದಿನವಾದ ಇಂದು (ಜ.12) ಮನನ ಮಾಡಿಕೊಳ್ಳೋಣ.
–ದಿನೇಶ್ ಅಮೀನ್ ಮಟ್ಟು
- ಹಿಂದೂ ಧರ್ಮ
ಸ್ವಾಮಿ ವಿವೇಕಾನಂದರು ಎಂದೂ ತಾವೊಬ್ಬ ಹಿಂದೂ ಎಂದಾಗಲಿ, ಹಿಂದೂ ಸನ್ಯಾಸಿಯೆಂದಾಗಲಿ ಹೇಳಿಕೊಳ್ಳಲಿಲ್ಲ. ಅವರಿಗೆ ಹಿಂದೂ ಎನ್ನುವ ಶಬ್ದದ ಬಗ್ಗೆಯೇ ಭಿನ್ನಾಭಿಪ್ರಾಯ ಇತ್ತು. ಮೂಲಭೂತವಾಗಿ ಹಿಂದುತ್ವದ ವ್ಯಾಖ್ಯಾನವನ್ನೇ ತಪ್ಪಾಗಿ ಮಾಡಲಾಗಿದೆ ಎಂದು ಅವರು ಹೇಳುತ್ತಿದ್ದರು.
ಸಿಂಧೂ ನದಿಯ ಆಚೆದಡದಲ್ಲಿರುವವರೆಲ್ಲರೂ ಹಿಂದೂಗಳು. ಅದರಲ್ಲಿ ಮುಸ್ಲಿಮ್, ಕ್ರಿಶ್ಚಿಯನ್, ಬೌದ್ಧರು ಸೇರಿದಂತೆ ಎಲ್ಲ ಧರ್ಮದವರೂ ಇದ್ದರು. ಪರ್ಷಿಯನರು ಮೂಲ ಸಿಂಧೂವನ್ನು ಅಪಭ್ರಂಶಗೊಳಿಸಿ ಹಿಂದೂ ಕರೆದರು. ಮುಸ್ಲಿಮ್ ಅರಸರ ಆಳ್ವಿಕೆಯ ಕಾಲದಲ್ಲಿ ಹಿಂದೂಗಳೆನಿಸಿಕೊಂಡವರು ಬಹಿರಂಗವಾಗಿ ತಮ್ಮನ್ನು ಹಿಂದೂಗಳೆಂದು ಕರೆಸಿಕೊಂಡರು ಎಂದು ಸ್ವತ: ವಿವೇಕಾನಂದರೇ ಹೇಳಿಕೊಂಡಿದ್ದಾರೆ. ಅವರ ಪ್ರಕಾರ ಹಿಂದೂಗಳು ತಮ್ಮನ್ನು ವೇದಾಂತಿಗಳು ಎಂದು ಕರೆದುಕೊಳ್ಳಬೇಕು.
ವಿವೇಕಾನಂದರ ಧರ್ಮದ ವ್ಯಾಖ್ಯಾನವೇ ಬೇರೆ ಇತ್ತು. “ದೇವರು ಬಂದು ಭೂಮಂಡಲವನ್ನು ಸೃಷ್ಟಿಸಿದ, ಅಂದಿನಿಂದ ಕಾಲ ಸ್ಥಬ್ಧವಾಗಿದೆ ಎನ್ನುವುದೆಲ್ಲ ಸುಳ್ಳು, ದೇವರು ಎನ್ನುವವನ ಅಸ್ತಿತ್ವ ಪ್ರತಿಯೊಬ್ಬನಿಗೂ ಹೃದಯದ ಮೂಲಕ ಅರಿವಾಗುವಂತಹದ್ದು. ಇದಕ್ಕಿಂತಲೂ ಮುಖ್ಯವಾದುದು ಭೂಮಂಡಲದ ಎಲ್ಲ ಜೀವಿಗಳ ಹೃದಯದಲ್ಲಿ ದೇವರಿದ್ದಾನೆ ಎಂಬ ಅರಿವು. ವ್ಯತ್ಯಾಸ ಇರುವುದು ಅದರ ಅಭಿವ್ಯಕ್ತಿಯ ರೂಪಗಳಲ್ಲಿ ಮಾತ್ರ. ದೇವರು ಎಲ್ಲ ಮನುಷ್ಯರೊಳಗೆ ಇರುತ್ತಾನೆ.ಮನುಷ್ಯನೊಳಗಿನ ದೈವತ್ವವನ್ನು ಕಂಡುಕೊಳ್ಳುವುದೇ ಧರ್ಮ” ಎಂದು ವಿವೇಕಾನಂದ ಹೇಳಿದ್ದರು.
ಅದಕ್ಕಾಗಿ ಅವರು ದರಿದ್ರರಲ್ಲಿ ಬಡವರಲ್ಲಿ ರೋಗಿಗಳಲ್ಲಿ, ನಿರ್ಗತಿಕರಲ್ಲಿ ದೇವರನ್ನು ಕಾಣು ಎಂದು ಹೇಳಿದ್ದರು. ನಾವು ಈಗ ಬಡತನ ಎನ್ನುವುದು ಪೂರ್ವಜನ್ಮದ ಪಾಪದ ಫಲ, ಅದೊಂದು ಅಪರಾಧ ಎಂದು ತಿಳಿದುಕೊಂಡವರ ಕಾಲದಲ್ಲಿದ್ದೇವೆ.
ದೇವರು ಎನ್ನುವುದು ಪ್ರೀತಿ, ಎಲ್ಲವನ್ನು ದೇವರು ಎಂದು ಭಾವಿಸುವ ಮೂಲಕ ದೇವರಪೂಜೆ ಮಾಡಬಹುದು. ವಿವೇಕಾನಂದರು ಪ್ರತಿಪಾದಿಸಿದ ಹಿಂದುತ್ವದಲ್ಲಿ ಜಾತಿ,ಸಂಕೇತ, ಆಚರಣೆ, ಪೂಜೆಯ ಸ್ಥಳ ಮತ್ತು ವಿಧಾನಗಳು ಇರಲಿಲ್ಲ. ಮೂರ್ತಿಪೂಜೆಗೆ ಅವರ ಸಹಮತ ಇರಲಿಲ್ಲ. ಒಮ್ಮೆ ಅವರು ಅಲ್ಮೋರದಲ್ಲಿರುವ ಮಾಯಾವತಿ ಆಶ್ರಮಕ್ಕೆ ಹೋಗಿದ್ದರು.
ಅಲ್ಲಿ ಗೋಡೆಯ ಮೇಲಿದ್ದ ರಾಮಕೃಷ್ಣ ಪರಮಹಂಸರ ಚಿತ್ರ ನೋಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಗುರುಗಳ ದೈಹಿಕ ಚಹರೆಯ ಮೂಲಕ ಅವರನ್ನು ನಾನು ನೆನಪಲ್ಲಿಟ್ಟುಕೊಳ್ಳುವುದು ಬೇಕಾಗಿಲ್ಲ. ಅವರ ಆದರ್ಶಗಳ ಪಾಲನೆ ಮತ್ತು ಪ್ರಚಾರದ ಮೂಲಕ ಅವರನ್ನು ನೆನಪಲ್ಲಿಟ್ಟುಕೊಳ್ಳಬೇಕು ಎಂದು ಅವರು ಹೇಳಿದ್ದರು.
ಧರ್ಮ ಎನ್ನುವುದು ಬಾಯಿ ಮಾತಲ್ಲ, ನಂಬಿಕೆಯೂ ಅಲ್ಲ, ಸಿದ್ಧಾಂತವೂ ಅಲ್ಲ, ಅದೊಂದು ಕೋಮುವಾದಿ ಭಾವನೆಯೂ ಅಲ್ಲ. ಧರ್ಮ ಎನ್ನುವುದು ಕೋಮುಗಳಲ್ಲಿ ಇಲ್ಲವೆ ಸಂಘಗಳಲ್ಲಿ ಬಾಳಲಾರದು. ಆತ್ಮನಿಗೂ, ದೇವರಿಗೂ ಇರುವ ಸಂಬಂಧ ಇದು. ಇದಕ್ಕೆ ಸಾಂಘಿಕ ರೂಪ ಕೊಟ್ಟಕೂಡಲೇ ಅದು ವ್ಯಾಪಾರವಾಗುವುದು. ಯಾವ ಧರ್ಮದಲ್ಲಿ ವ್ಯಾಪಾರದ ಗುಣಗಳಿರುವುದೋ ಅಲ್ಲಿ ಆಧ್ಯಾತ್ಮಿಕತೆ ನಾಶವಾಗುವುದು.
ಧರ್ಮ ಎನ್ನುವುದು ದೇವಾಲಯ ಕಟ್ಟುವುದರಲ್ಲಿ ಇಲ್ಲ, ಅಥವಾ ಸಾಮಾಜಿಕ ಪೂಜೆಗೆ ಹೋಗುವುದರಲ್ಲಿ ಇಲ್ಲ. ಅದು ಧರ್ಮಗ್ರಂಥಗಳಲ್ಲಿ ಇಲ್ಲ. ಉಪವಾಸದಲ್ಲಿಯೂ ಅಲ್ಲ. ಧರ್ಮವೆಂದರೆ ಸಾಕ್ಷಾತ್ಕಾರ. ಒಂದು ಕಣದಷ್ಟು ಧರ್ಮಾನುಷ್ಠಾನ ಮತ್ತು ಆತ್ಮ ಸಾಕ್ಷಾತ್ಕಾರ ಒಂದು ಮಣ ಮಾತಿಗಿಂತ ಮತ್ತು ಒಣ ಹೆಮ್ಮೆಗಿಂತ ಮೇಲು.
ಪುರೋಹಿತಷಾಹಿ ಬಗ್ಗೆ ವಿವೇಕಾನಂದರಷ್ಟು ಕಟುವಾಗಿ ಮಾತಾಡಿದ ಇನ್ನೊಬ್ಬ ಧಾರ್ಮಿಕ ನಾಯಕನಿಲ್ಲ.ಒಮ್ಮೊಮ್ಮೆ ಅವರ ಮಾತುಗಳು ಪೆರಿಯಾರ್ ಅವರಿಗಿಂತಲೂ ತೀಕ್ಷ್ಣವಾಗಿರುತ್ತಿತ್ತು. ನೀಚರು, ಕುತಂತ್ರಿಗಳಾಗಿರುವ ಪುರೋಹಿತರು ಎಲ್ಲ ವಿಧದ ಮೂಢನಂಬಿಕೆಗಳನ್ನು ವೇದ ಮತ್ತು ಹಿಂದೂ ಧರ್ಮದ ಸಾರ ಎಂದು ಬೋಧಿಸುತ್ತಾರೆ. ಈ ಮೋಸಗಾರರು ಅಥವಾ ಅವರ ತಾತಮುತ್ತಾತರಾಗಲಿ ಕಳೆದ ನಾನೂರು ತಲೆಮಾರುಗಳಿಂದಲೂ ವೇದದ ಒಂದು ಭಾಗವನ್ನೂ ನೋಡಿಲ್ಲ. ಕಲಿಯುಗದಲ್ಲಿ ಬ್ರಾಹ್ಮಣ ವೇಷದಲ್ಲಿರುವ ಈ ರಾಕ್ಷಸರಿಂದ ಮುಗ್ಧ ಜನರನ್ನು ಆ ದೇವರೇ ಕಾಪಾಡಬೇಕು.
ಪುರೋಹಿತರ ಹೃದಯ ಎಂದಿಗೂ ವಿಶಾಲವಾಗುವುದಿಲ್ಲ, ಅವರು ತಿದ್ದಿಕೊಳ್ಳುವುದಿಲ್ಲ. ಶತಶತಮಾನಗಳಿಂದ ಬಂದ ಮೂಢ ನಂಬಿಕೆ ಮತ್ತು ದಬ್ಬಾಳಿಕೆಯ ಸಂತಾನ ಅವರು. ಅವರು ಪ್ರಗತಿಗೆ ವಿರುದ್ಧವಾಗಿರುವವರು. ಮೊದಲು ಪುರೋಹಿತಷಾಹಿಯನ್ನು ಬೇರು ಸಹಿತ ಕಿತ್ತೊಗೆಯಿರಿ. ಬನ್ನಿ ಮನುಷ್ಯರಾಗಿ, ಸಂಕುಚಿತ ಬಿಲಗಳಿಂದ ಹೊರಗೆ ಬನ್ನಿ, ಕಣ್ಣು ಬಿಟ್ಟು ಹೊರಗೆ ನೋಡಿ, ಮನುಷ್ಯರನ್ನು ಪ್ರೀತಿಸಿ, ದೇಶವನ್ನು ಪ್ರೀತಿಸಿ, ಉನ್ನತವಾದ ಕೆಲಸಗಳಿಗಾಗಿ ಹೋರಾಡಿ.
ಪ್ರಪಂಚದ ಯಾವ ಧರ್ಮವೂ ಹಿಂದೂ ಧರ್ಮದಷ್ಟು ಭವ್ಯವಾಣಿಯಲ್ಲಿ ಮನುಷ್ಯತ್ವದ ಘನತೆ ಗೌರವಗಳ ಬಗ್ಗೆ ಬೋಧನೆ ಮಾಡಿಲ್ಲ. ಪ್ರಪಂಚದ ಯಾವ ಧರ್ಮವೂ ದೀನದಲಿತರ ಕುತ್ತಿಗೆಯನ್ನು ಹಿಂದೂ ಧರ್ಮದಷ್ಟು ಕ್ರೂರವಾಗಿ ತುಳಿಯುವುದಿಲ್ಲ. ತಪ್ಪು ಹಿಂದೂ ಧರ್ಮದಲ್ಲ , ಅಲ್ಲಿರುವ ಸಂಪ್ರದಾಯ ಶರಣರದ್ದು, ಪುರೋಹಿತರದ್ದು. ಪಾರಮಾರ್ಥಿಕ ಮತ್ತು ವ್ಯಾವಹಾರಿಕ ಎಂದು ನಾನಾ ಬಗೆಯ ಕ್ರೂರ ಸಾಧನೆಗಳನ್ನು ಸೃಷ್ಟಿಸುವ ಠಕ್ಕರದ್ದು.
ನನ್ನ ದೃಷ್ಟಿಯಲ್ಲಿ ಗ್ರಂಥಗಳು ಒಳ್ಳೆಯದಕ್ಕಿಂತ ಹೆಚ್ಚು ಕೆಟ್ಟದ್ದನ್ನು ಮಾಡಿವೆ. ಮತಾಂಧತೆ, ಅನ್ಯಧರ್ಮಿಯರನ್ನು ಹಿಂಸಿಸುವುದು, ಮೂಢನಂಬಿಕೆ, ಕಂದಾಚಾರ, ಕಪಟಾಚಾರಕ್ಕೆಲ್ಲ ಈ ಧರ್ಮಗ್ರಂಥಗಳು ಕಾರಣ. ಎಲ್ಲಿಯ ವರೆಗೆ ಧರ್ಮ ಎಲ್ಲೊ ಕೆಲವು ಆರಿಸಿದ ವ್ಯಕ್ತಿಗಳ ಕೈಯಲ್ಲಿ ಅಥವಾ ಕೆಲವು ಪುರೋಹಿತರ ಕೈಯಲ್ಲಿ ಇರುತ್ತೋ ಆಗ ಧರ್ಮ, ದೇವಸ್ಥಾನ, ಚರ್ಚ್, ಮಸೀದಿ, ಶಾಸ್ತ್ರ, ಮೂಢನಂಬಿಕೆಗಳ ಸುತ್ತ ಗಿರಕಿ ಹೊಡೆಯುತ್ತಿರುತ್ತದೆ. ಯಾವಾಗ ನಾವು ನಿಜವಾದ ಆಧ್ಯಾತ್ಮಿಕ ಸಮಷ್ಠಿ ಭಾವನೆಗೆ ಬರುವೆವೋ ಆಗ ಮಾತ್ರ ಧರ್ಮ ಸತ್ಯವಾಗುವುದು, ಬದುಕಿರುವುದು. ಅದು ನಮ್ಮ ಸ್ವಭಾವದಲ್ಲಿ, ನಡತೆಯಲ್ಲಿ, ಕಾರ್ಯದಲ್ಲಿ ವ್ಯಕ್ತವಾಗಬೇಕು. (3-14)
2. ಅಸ್ಪೃಶ್ಯತೆ
‘ನಾನೇ ಶುದ್ಧ ಉಳಿದವರೆಲ್ಲರೂ ಅಶುದ್ಧ’ ಎಂದು ಹೇಳುವುದು ಮೃಗೀಯವಾದ ರಾಕ್ಷಸ ಧರ್ಮ. ನರಕ ಸದೃಶವಾದ ಧರ್ಮ. ಭರತ ಖಂಡದಲ್ಲಿ ಧರ್ಮವೇನಾದರೂ ಉಳಿದುಕೊಂಡಿದೆ ಎಂದು ತಿಳಿದುಕೊಂಡಿದ್ಧಿರೇನು? ಜ್ಞಾನ, ಭಕ್ತಿ, ಯೋಗಗಳ ಮಾರ್ಗಗಳೆಲ್ಲ ಹೋಯಿತು. ಈಗ ಉಳಿದಿರುವುದು ಒಂದೇ ಧರ್ಮ. ಅದು ‘ಮುಟ್ಟಬೇಡ, ಮುಟ್ಟಬೇಡ ಎಂಬುದು.
ಪ್ರಪಂಚವೆಲ್ಲ ಮೈಲಿಗೆ ನಾನೊಬ್ಬನೇ ಮಡಿ, ಅಹಾ ಎಂತಹ ತಿಳಿಯಾದ ಬ್ರಹ್ಮಜ್ಞಾನ.ಇಂದಿನ ಹಿಂದೂ ಧರ್ಮ ಜ್ಞಾನ ಮಾರ್ಗವೂ ಅಲ್ಲ, ಭಕ್ತಿ ಮಾರ್ಗವೂ ಅಲ್ಲ. ಅದರ ಧರ್ಮವೇ ಅಸ್ಪೃಶ್ಯತೆ. ಎಲ್ಲರಲ್ಲಿಯೂ ಒಂದೇ ಆತ್ಮವನ್ನು ನೋಡಬೇಕೆಂಬ ಉಪದೇಶ ಗ್ರಂಥಗಳಲ್ಲಿಯೂ ಉಳಿದಿದೆ. ಹಸಿದವನಿಗೆ ಒಂದು ತುತ್ತನ್ನು ಕೊಡದವರು ಮೋಕ್ಷವನ್ನು ಹೇಗೆ ಕೊಟ್ಟಾರು? ಮತ್ತೊಬ್ಬರ ಉಸಿರಿನ ಸೋಕಿನಿಂದಲೇ ಇವರು ಪಾಪಿಗಳಾಗುವುದಿದ್ದರೆ ಇನ್ನೊಬ್ಬರನ್ನು ಹೇಗೆ ಶುದ್ಧಿ ಮಾಡಿಯಾರು. ಅಸ್ಪೃಶ್ಯತೆ ಎನ್ನುವುದು ಒಂದು ಮನೋರೋಗ. ಈ ರೋಗ ಗುಣವಾಗದೆ ಹಿಂದೂ ಧರ್ಮ ಉದ್ಧಾರವಾಗಲಾರದು.
ಸಮಾನತೆಯ ಭಾವವನ್ನು ಯಾವುದಾದರೂ ಒಂದು ಧರ್ಮ ಪಾಲಿಸುತ್ತಾ ಬಂದಿದ್ದರೆ ಅದು ಇಸ್ಲಾಂ ಧರ್ಮ. ವೇದಾಂತ ತತ್ವಗಳು ಎಷ್ಟೊಂದು ವಿಚಾರಪೂರ್ಣವಾಗಿದ್ದರೂ ಅದು ವಿಶ್ವದ ಮಾನವ ವರ್ಗದ ಬಹುಮಂದಿಗೆ ತಲುಪಬೇಕಾದರೆ ಇಸ್ಲಾಂಧರ್ಮದ ಅನುಷ್ಠಾನದ ಮಾದರಿಯನ್ನು ಅನುಸರಿಸಬೇಕಾಗುತ್ತದೆ. ನಮ್ಮ ಮಾತೃಭೂಮಿಯಲ್ಲಿ ಹಿಂದೂ ಮತ್ತು ಮುಸಲ್ಮಾನ ಧರ್ಮಗಳೆರಡೂ ಮಿಲನವಾಗಬೇಕು, ವೇದಾಂತದ ಮೆದುಳು ಮತ್ತು ಇಸ್ಲಾಮಿನ ದೇಹ ಇದೊಂದೇ ನಮ್ಮ ಪುರೋಗಮನಕ್ಕೆ ಹಾದಿ. ನನ್ನ ಕಣ್ಣಿಗೆ ಇಂದಿನ ಗೊಂದಲ ಮತ್ತು ತಿಕ್ಕಾಟದಿಂದ ವೇದಾಂತದ ಮೆದುಳು ಮತ್ತು ಇಸ್ಲಾಮಿನ ದೇಹದಿಂದ ಕೂಡಿದ ತೇಜೋಮಯವಾದ, ಅಜೇಯವಾದ ಮುಂದಿನ ನಿಷ್ಕಳಂಕ ಭಾರತದ ಉದಯ ಕಾಣುತ್ತಿದೆ.
ಪ್ರತಿಯೊಬ್ಬರು ಒಂದೇ ಧರ್ಮಕ್ಕೆ ಸೇರಿ ಒಂದೇ ಮಾರ್ಗವನ್ನು ಅನುಸರಿಸುವ ದುರ್ದಿನ ಪ್ರಪಂಚಕ್ಕೆ ಬಾರದಿರಲಿ, ಆಗ ಧರ್ಮ ಮತ್ತು ಆಧ್ಯಾತ್ಮ ಎರಡೂ ನಾಶವಾಗುವುದು. ವೈವಿಧ್ಯವೇ ಜೀವನದ ರಹಸ್ಯ. ಇದು ನಾಶವಾದರೆ ಸೃಷ್ಟಿನಾಶವಾಗುವುದು. ನನ್ನ ಧರ್ಮ ಎನ್ನುವುದು ಎಂದೂ ಇರಲಿಲ್ಲ. ಯಾವಾಗಲೂ ಇರುವುದು ಒಂದೇ ಧರ್ಮ. ಈ ಧರ್ಮವೇ ಹಲವು ದೇಶಗಳಲ್ಲಿ ಹಲವು ರೀತಿಗಳಲ್ಲಿ ವ್ಯಕ್ತವಾಗುತ್ತಾ ಹೋಗುವುದು. ಆದ್ದರಿಂದ ನಾವು ಎಲ್ಲ ಧರ್ಮಗಳಿಗೂ ಗೌರವವನ್ನು ತೋರಬೇಕು. ಸಾಧ್ಯವಾದ ಮಟ್ಟಿಗೆ ಎಲ್ಲವನ್ನೂ ಸ್ವೀಕರಿಸಬೇಕು. ಸ್ವಾಮಿ ವಿವೇಕಾನಂದರ ಎಷ್ಟೋ ವಿಚಾರಗಳನ್ನು ಓದಿದರೆ ಅವರೊಬ್ಬ ನಾಸ್ತಿಕನೂ ಇರಬಹುದೇನೋ ಎಂಬ ಸಂಶಯವೂ ಬಾರದೆ ಇರದು.
3. ಆಹಾರ
ನಮ್ಮ ಆಹಾರ ಪದ್ದತಿಯ ಬಗ್ಗೆ ವಿವೇಕಾನಂದರು ದೀರ್ಘವಾಗಿ ಮಾತನಾಡಿದ್ದಾರೆ. ನಿನಗಿಷ್ಟವಾದ ಮೀನು-ಮಾಂಸ ತಿನ್ನು. ಈ ದೇಶವೆಲ್ಲ ಒಂದೇ ಬಗೆಯ ತರಕಾರಿಯಲ್ಲಿ ಜೀವಿಸುವ, ಅಜೀರ್ಣದಿಂದ ನರಳುವ ಬಾಬಾಜಿಗಳಿಂದ ತುಂಬಿಹೋಗಿವೆ. ಸತ್ವಗುಣದ ಚಿಹ್ನೆಯೇ ಇಲ್ಲ. ಬರೀ ತಮಸ್ಸು. ನಗುಮುಖ, ಅಭಯೋತ್ಸಾಹ, ತೃಪ್ತಿ, ಉತ್ಕಟ, ಕ್ರಿಯಾಶೀಲತೆ ಇವೆಲ್ಲ ಸತ್ವಗುಣದ ಪರಿಣಾಮ. ಸೋಮಾರಿತನ, ಆಲಸ್ಯ, ಉತ್ಕಟ ಮೋಹ, ನಿದ್ದೆ ಎಲ್ಲವೂ ತಾಮಸ ಚಿಹ್ನೆಗಳು. ನಮಗಿಂದು ಬೇಕಾಗಿರುವುದು ಸತ್ವಗುಣಿಗಳು. ದೇಶದ ಜನರಿಗೆ ಅನ್ನ, ಬಟ್ಟೆ, ಉದ್ಯೋಗ ಬೇಕು. ದೇಶ ಜಾಗೃತಗೊಳ್ಳಬೇಕು, ಚಟುವಟಿಕೆಯಿಂದ ಇರುವಂತೆ ಪ್ರೇರೇಪಿಸಬೇಕು. ಇಲ್ಲದಿದ್ದರೆ ಅವರು ಮತ್ತಷ್ಟು ಜಡವಾಗಿ, ಮರ ಕಲ್ಲುಗಳಂತಾಗುತ್ತಾರೆ, ಆದ್ದರಿಂದ ಹೆಚ್ಚು ಮಾಂಸ, ಮೀಣು ತಿನ್ನಬೇಕೆಂದು ನಾನು ಹೇಳುತ್ತಿದ್ದೇನೆ.
ಪ್ರಾಣಿಗಳನ್ನು ಕೊಲ್ಲುವುದು ಖಂಡಿತವಾಗಿಯೂ ಕೆಟ್ಟದ್ದು. ಆದರೆ ರಸಾಯನಶಾಸ್ತ್ರದ ಅಭಿವೃದ್ಧಿಯೊಂದಿಗೆ ಎಲ್ಲಿಯ ವರೆಗೆ ಸಸ್ಯಾಹಾರ ಮನುಷ್ಯನ ದೇಹದ ಎಲ್ಲ ಅವಶ್ಯಕತೆಗಳನ್ನು ಪೂರೈಸುವುದಿಲ್ಲವೋ ಅಲ್ಲಿಯ ವರೆಗೆ ಮಾಂಸವನ್ನು ತಿನ್ನದೆ ವಿಧಿ ಇಲ್ಲ. ಉತ್ತಮ ಮತ್ತು ಪೌಷ್ಠಿಕಾಂಶದಿಂದ ಕೂಡಿದ ಆಹಾರ ಏನೆಲ್ಲ ಮಾಡಬಲ್ಲದು ಎಂಬುದಕ್ಕೆ ಜಪಾನ್ ದೇಶವೇ ಉದಾಹರಣೆ (7-125) ಹಿಂದೂ ಮತ್ತು ಚೀನಿಯರನ್ನು ನೋಡಿ ಅವರು ದೈಹಿಕವಾಗಿ ಎಷ್ಟೊಂದು ಬಡವಾಗಿದ್ದಾರೆ, ಅವರು ಮಾಂಸ ತಿನ್ನುವುದಿಲ್ಲ.
ಅಕ್ಕಿ ಮತ್ತು ಸಿಕ್ಕಿದ ತರಕಾರಿ ತಿಂದು ಜೀವಿಸುತ್ತಿದ್ದಾರೆ. ಹಿಂದೆ ಜಪಾನಿಯರೂ ಇದೇ ಸ್ಥಿತಿಯಲ್ಲಿದ್ದರು. ಅವರು ಮಾಂಸಹಾರ ಪ್ರಾರಂಭಿಸಿದ ನಂತರ ಆ ದೇಶದ ಚರಿತ್ರೆಯೇ ಬದಲಾಗಿ ಹೋಯಿತು. ಎಲ್ಲಿಯವರೆಗೆ ಸಮಾಜದಲ್ಲಿ ಶಕ್ತಿಶಾಲಿಗೆ ಜಯವೆಂಬುದು ಇರುತ್ತೋ ಅಲ್ಲಿಯ ವರೆಗೆ ಮಾಂಸಾಹಾರಿಗಳಾಗಿರಬೇಕು. ಇಲ್ಲದೆ ಇದ್ದರೆ ದುರ್ಬಲರು ಬಲಾಢ್ಯರ ಪಾದದ ಅಡಿಗೆ ಸಿಕ್ಕಿ ನಾಶವಾಗುತ್ತಾರೆ. ಎಲ್ಲೋ ಕೆಲವರಿಗೆ ಶಾಖಾಹಾರದಿಂದ ಪ್ರಯೋಜನವನ್ನು ಹೇಳಿದರಷ್ಟೇ ಸಾಲದು. ಒಂದು ದೇಶವನ್ನು ಮತ್ತೊಂದು ದೇಶದೊಂದಿಗೆ ಹೋಲಿಸಿ ನಿರ್ಣಯಕ್ಕೆ ಬನ್ನಿ.
4. ಗೋಮಾಂಸ
ಭಾರತದಲ್ಲಿ ಹಿಂದೆ ದನದ ಮಾಂಸ ತಿನ್ನದ ಬ್ರಾಹ್ಮಣ ಬ್ರಾಹ್ಮಣನಾಗಿ ಉಳಿಯುತ್ತಿರಲಿಲ್ಲ. ಸನ್ಯಾಸಿ, ರಾಜ, ಮಹಾತ್ಮರು ಮನೆಗೆ ಬಂದರೆ ಗೌರವಾರ್ಥವಾಗಿ ಅತ್ಯುತ್ತಮ ಗೂಳಿಯನ್ನು ಕೊಂದು ಅಡಿಗೆ ಮಾಡುತ್ತಿದ್ದರು. ಎಂದು ವೇದದಲ್ಲಿದೆ. ನಮ್ಮದು ಕೃಷಿಪ್ರಧಾನ ದೇಶ. ಅತ್ಯುತ್ತಮ ಎತ್ತುಗಳನ್ನು ಕೊಂದರೆ ಕಾಲಕ್ರಮೇಣ ದನದ ಜಾತಿಯೇನಾಶವಾಗುವುದೆಂದು ತಿಳಿದು, ಗೋಹತ್ಯೆ ಮಹಾಪಾಪವೆಂದು ನಿರ್ಬಂಧ ಹೇರಲಾಯಿತು.
ಈಗ ನಾನು ಕೇವಲ ಮಾಂಸವನ್ನು ಮಾತ್ರ ತಿಂದು ಜೀವಿಸುತ್ತಿದ್ದೇನೆ ಎಂದು 1897ರ ಏಪ್ರಿಲ್ 28ರಂದು ವಿವೇಕಾನಂದರು ಶ್ರೀಮತಿ ಹೆಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.ನಮ್ಮ ದೇಶದ ಜನರಿಗೆ ಸತ್ಯವಾದ ಧರ್ಮವನ್ನು ಅನುಸರಿಸಿ ಸಾಧನೆ ಮಾಡುವಷ್ಟು ಶಕ್ತಿಯಾದರೂ ಉಳಿದಿದೆಯೇ? ತಾವು ಸಾತ್ವಿಕರೆಂದು ತಮ್ಮಲ್ಲಿ ತಾವೇ ಹೆಮ್ಮೆ ಪಡುವುದೊಂದೇ ಅವರಿಗಿರುವುದು.
ಯಾವ ಮನುಷ್ಯ ಕೊಂಚವೂ ಶ್ರಮಪಡದೆ ಕೇವಲ ಹರಿನಾಮವನ್ನು ಜಪಿಸುತ್ತಾ ಕೊಠಡಿಯ ಬಾಗಿಲು ಮುಚ್ಚಿಕೊಂಡು ಕುಳಿತಿರುವನೋ, ಯಾರು ಸ್ವತ: ತನ್ನ ಕಣ್ಣುಗಳೆದರೇ ಇತರರಿಗೆ ಆಗುತ್ತಿರುವ ಅನ್ಯಾಯ-ಅತ್ಯಾಚಾರಗಳನ್ನು ನೋಡಿಯೂ ಮೌನವಾಗಿ ಉದಾಸೀನದಿಂದ ಇರುವನೋ, ಅಂತಹ ಸಾತ್ವಿಕ ಮನುಷ್ಯನಿಂದ ಏನು ಪ್ರಯೋಜನ?
ಒಂದು ದೇಶದ ಜನರಿಗೆ ತಮ್ಮ ಹಸಿವನ್ನು ಹಿಂಗಿಸಲು ಸಾಕಷ್ಟು ಆಹಾರ ಇಲ್ಲದೆ ಇದ್ದಾಗ ಹೇಗೆ ತಾನೆ ಧರ್ಮದಲ್ಲಿ ಸಾಧನೆ ಮಾಡಬಲ್ಲರು? ಭೋಗದ ಆಸೆ ಆಕಾಂಕ್ಷೆ ತುಂಬಿದ ಮನಸ್ಸಿಗೆ ಕೊಂಚವೂ ತೃಪ್ತಿ ಸಿಗದೆ ಇರುವಾಗ ಆ ದೇಶದ ಜನರಿಗೆ ತ್ಯಾಗಬುದ್ದಿ ಹೇಗೆ ತಾನೆ ಬರಲು ಸಾಧ್ಯ?
5. ರಾಜಕೀಯ
ಧರ್ಮವನ್ನು, ಧಾರ್ಮಿಕ ಸಂಕೇತಗಳನ್ನು, ಧಾರ್ಮಿಕ ಪುರುಷರನ್ನು ರಾಜಕೀಯವಾಗಿ ಬಳಸುವುದು ಹೊಸತೇನಲ್ಲ. ಇತಿಹಾಸ ಪುರುಷರು, ಧಾರ್ಮಿಕ ನಾಯಕರು ಮತ್ತು ಸಮಾಜ ಸುಧಾರಕರನ್ನು ಎಲ್ಲ ರಾಜಕೀಯ ಪಕ್ಷಗಳು ಬಳಸುತ್ತಾ ಬಂದಿವೆ. ರಾಜಕೀಯ ಚರ್ಚೆ, ಹೋರಾಟಗಳಲ್ಲಿ ಇವರ ವಿಚಾರಗಳು ಬಳಕೆಯಾಗಿವೆ. ಗಾಂಧೀಜಿ, ಅಂಬೇಡ್ಕರ್, ಜ್ಯೋತಿಬಾ ಪುಲೆ, ಪೆರಿಯಾರ್ ಮಾತ್ರವಲ್ಲ, ಬುದ್ಧ, ಬಸವಣ್ಣನವರನ್ನು ರಾಜಕಾರಣಿಗಳು ಬಿಟ್ಟಿಲ್ಲ. ಎಡಪಕ್ಷಗಳು ಕೂಡಾ ಈಶ್ವರ ಚಂದ್ರ ವಿದ್ಯಾಸಾಗರ ಮತ್ತು ಠ್ಯಾಗೋರ್ ಅವರನ್ನು ಚುನಾವಣಾ ಭಿತ್ತಿಪತ್ರಗಳಲ್ಲಿ ಬಳಸಿಕೊಂಡಿವೆ.
ಆದರೆ ಬಳಕೆಮಾಡಿಕೊಳ್ಳಬಹುದು, ಆದರೆ ದುರ್ಬಳಕೆ ಆಗಬಾರದು. ವಿವೇಕಾನಂದರ ವಿಚಾರಗಳನ್ನು ಓದಿದರೆ ಅವರು ಕೇವಲ ಧಾರ್ಮಿಕ ನಾಯಕರೆಂದು ಅನಿಸುವುದಿಲ್ಲ. ರೋಮ್ಯಾನ್ ರೊಲಂಡ್ ಸೇರಿದಂತೆ ವಿವೇಕಾನಂದರ ಬಗ್ಗೆ ಬರೆದವರೆಲ್ಲರೂ ಅವರ ಚಿಂತನೆಗಳನ್ನು ಧಾರ್ಮಿಕ, ಆಧ್ಯಾತ್ಮಿಕ ದುರ್ಬೀನ್ ಗಳಲ್ಲಿಯೇ ನೋಡಿದ್ದಾರೆ. ಆದರೆ ಅವರು ಧರ್ಮವನ್ನು ಸಾಧನವನ್ನಾಗಿ ಬಳಸಿಕೊಂಡು ರಾಜಕೀಯ ಹೋರಾಟ ಮಾಡಿರುವುದನ್ನು ಯಾರೂ ಗುರುತಿಸುವುದಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
~ಗೋವರ್ಧನ ನವಿಲೇಹಾಳು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್ಗೆ ಸಂತೋಷದ ಸುದ್ದಿಯಾದರೂ, ಎಸ್ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.
ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.
ಸಮರ್ಥ್ ಶಾಮನೂರು ಅವರ ಮುಂದಿನ ನಡೆ
ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.
ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.
ಬಿಜೆಪಿಯ ಮುಂದಿನ ಸವಾಲುಗಳು
ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.
ಎಸ್ಡಿಪಿಐ ಮುಂದಿನ ಸವಾಲು
ಎಸ್ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.
ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.
ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.
ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ4 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ4 days agoಕವಿತೆ | ದೇವರ ಹೂವು
-
ದಿನದ ಸುದ್ದಿ6 days agoಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ2 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ3 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

