ದಿನದ ಸುದ್ದಿ
ಸರಳ ತರಳಬಾಳು ಹುಣ್ಣಿಮೆಯಂದು ಗೋಶಾಲೆ ಪುಣ್ಯಕೋಟಿಗೆ ಅರ್ಪಣೆ

ಸುದ್ದಿದಿನ,ಸಿರಿಗೆರೆ: ಉತ್ಸವಗಳಿಂದ ಸಮಾಜದ ಅಭಿವೃದ್ಧಿ ಮಾಡುವುದಕ್ಕಿಂತ ಉತ್ಸವಗಳ ಸಾರ್ಥಕತೆಯ ನೆನಪಿಗೆ ಸಮಾಜದ ಅಭ್ಯುದಯಕ್ಕೆ ಶ್ರಮಿಸುವ ವಿಶೇಷ ಆಶಯ ಹೊಂದಿ ಆ ಕಾರ್ಯದಲ್ಲಿ ಯಶಸ್ಸು ಗಳಿಸಿದ ಕೀರ್ತಿ ತರಳಬಾಳು ಶ್ರೀ ಜಗದ್ಗುರುವರ್ಯರದು.
ಪರಂಪರೆಗೆ ಮತ್ತು ಅಪಾರ ಶಿಷ್ಯಬಳಗದ ಮನಸ್ಸಿಗೆ ಘಾಸಿ ಮಾಡದಂತೆ ಎಲ್ಲರಿಗೂ ಅನುಕೂಲ ತರುವ ಸರ್ವರೂ ಒಪ್ಟಲೇಬೇಕಾದ ಕಾರ್ಯಕ್ರಮಗಳನ್ನು ಜಾರಿಯ ಅನುಷ್ಠಾನದ ಅಪರೂಪದ ವ್ಯಕ್ತಿತ್ವ ಚಿಂತಕ ಶ್ರೇಷ್ಠರಾದ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರದು.
ನಾಡಿನ ಧಾರ್ಮಿಕ ಸಮಾರಂಭಗಳಿಗೆ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಮಾತೃಸ್ವರೂಪದಂತಹ ಸ್ಥಾನವಿದೆ. ಸಮಾರಂಭದ ಸಾರ್ಥಕತಗೆ ನೂರಾರು ಸಮಾಜ ಮುಖಿ ಕಾರ್ಯಗಳು ಸಾಕ್ಷಿಯಾಗಿವೆ. ಅಂತಹ ಜನಮುಖಿ ಕಾರ್ಯಗಳಲ್ಲಿ ಸಾವಿರಾರು ಕೋಟಿಗಳ ವೆಚ್ಚದಲ್ಲಿ ನೂರಾರು ಕೆರೆಗಳಿಗಳ ಒಡಲಿಗೆ ಗಂಗೆ ಹರಿದು ರೈತರ ನೆಮ್ಮದಿಗೆ ಕಾರಣವಾಗಿರುವುದು ಪ್ರಮುಖವಾದುದು. ಆರು ದಶಕಗಳಿಂದಲೂ ಸರ್ವರ ಜನಾಧರಣೆಯ ಸಮಾರಂಭವಾಗಿ ಆಯಾ ಕಾಲದ ಸಮಸ್ಯೆಗಳಿಗೆ ಸ್ಪಂದಿಸುವ ಮಾನವೀಯತೆಯ ಮಹೋತ್ಸವವಾಗಿದೆ.
ಈ ವರ್ಷದ ತರಳಬಾಳು ಹುಣ್ಣಿಮೆ ಮಹೋತ್ಸವ ಹೊಯ್ಸಳರ ನಾಡಾದ ಹಳೇಬೀಡಿನಲ್ಲಿ ಆಚರಿಸುವ ಶ್ರೀಗಳ ಆಶಯಕ್ಕೆ ಆ ಭಾಗದ ಭಕ್ತರು ತುದಿಗಾಲಲ್ಲಿ ನಿಂತಿದ್ದರು.
ಭೀಕರ ಬರಗಾಲದ ಛಾಯೆಯನ್ನು ಮನಗಂಡು
ಕಾರ್ಯಕ್ರಮಗಳಿಗೆ ಆ ಭಾಗದ ಜ್ವಲಂತ ಸಮಸ್ಯೆಗಳಿಗೆ ತರಳಬಾಳು ಹುಣ್ಣಿಮೆ ಮಹೋತ್ಸವದ ಮೂಲಕ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರೀಗಳು ಹಳೇಬೀಡು ವ್ಯಾಪ್ತಿಯ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸುವ ಯೋಜನೆ ಕಾರ್ಯಪಾಲನೆಯ ನಂತರ ಹುಣ್ಣಿಮೆ ಮಹೋತ್ಸವ ಆಚರಿಸುವ ಅರ್ಥಪೂರ್ಣ ನಿರ್ಧಾರ ಕೈಗೊಂಡು ಆ ನಿಟ್ಟಿನಲ್ಲಿ ಹೆಜ್ಜೆ ಹಾಕಿದರು.
ಪರಂಪರೆಯಂತೆ ಸಾಂಕೇತಿಕವಾಗಿ ಸರಳವಾಗಿ 2019ರ ಫೆಬ್ರುವರಿ 19ರಂದು ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಣೆಯ ಜೊತೆಗೆ ನಾಡಿನ ಗೋವುಗಳ ಪಾಲನೆಗೆ ಅಂದೇ ಗೋಶಾಲೆಯ ಉದ್ಘಾಟಿನೆಯ ಕೈಂಕರ್ಯಕ್ಕೆ ಶ್ರೀ ಜಗದ್ಗುವರ್ಯರು ಮನಸ್ಸು ಮಾಡಿರುವುದು ಅತ್ಯಂತ ಸಂದರ್ಭೋಚಿತವಾದುದಾಗಿದೆ.
ಸದಾ ಜನಮುಖಿ ಕಾರ್ಯಗಳಲ್ಲಿ ಸಂತೃಪ್ತಿ ಕಾಣುವ, ನಿತ್ಯವೂ ರೈತಬಂಧುಗಳ ಉನ್ನತಿಗೆ ಶ್ರಮಿಸುವ ಕನ್ನಡ ನಾಡಿನ ಅಪರೂಪದ ವಿದ್ವತ್ಪೂರ್ಣ, ಸಂತಶ್ರೇಷ್ಟರಾಗಿ ,ರೈತ ಮೆಚ್ಚಿದ ಮಹಾಗುರುವೆಂದೇ ಸುಪ್ರಸಿದ್ಧಿಯಾದ ಪರಮ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರ ನೂರಾರು ಸಮಾಜಮುಖಿ ಸಾಧನೆಗಳಿಗೆ ಮತ್ತೊಂದು ಸೇರ್ಪಡೆ ಎನ್ನುವಂತೆ ತರಳಬಾಳು ಶ್ರೀ ಮಠದ ಸಾವಿರಾರು ಎಕರೆ ಭೂಮಿಯಲ್ಲಿ ಸಕಲ ಸೌಲಭ್ಯಗಳಿಂದ ಕೂಡಿದ ಗೋಶಾಲೆಯ ನಿರ್ಮಾಣದ ತಯಾರಿ ಭರದಿಂದ ಸಾಗಿದೆ.
ಅಕ್ಷರ,ಅನ್ನ,ಆಸರೆ,ಶಿಕ್ಷಣ,
ಉದ್ಯೋಗ,ನ್ಯಾಯದಾನ, ಕನ್ನಡ ಜಾನಪದ ಕಲೆಗಳ ಪುನರುಜ್ಜೀವನ , ಸಾಮಾಜಿಕ ಕಾಳಜಿ,ಪರಿಸರ ರಕ್ಷಣೆ, ಶರಣ ಸಂಸ್ಕೃತಿಯನ್ನು ವಿಶ್ವಕ್ಕೆ ದರ್ಶಸಿದ ಗಣಕ ಋಷಿ ಎಂದೇ ನಾಮದೇಯರಾಗಿರುವ ಶ್ರೀ ಗುರುವರ್ಯರ ಸಾಧನೆಗಳ ಕುರಿತು ಬರೆಯುವುದೆಂದರೆ ಅದು ಸೂರ್ಯನನ್ನು ಕನ್ನಡಯಲ್ಲಿ ಹಿಡಿದಂತೆ..!
ಶ್ರೀಗಳ ದೂರದರ್ಶಿತ್ವ ಹೇಗಿದೆ ಎಂದರೆ. ಈ ವರ್ಷ ಬರದ ಮುನ್ಸೂಚನೆ ಅರಿತ ಶ್ರೀಗಳವರು ಪುಣ್ಯಕೋಟಿ ಉಳಿಸುವ ಅಭಿದಾನಕ್ಕೆ ಕೈ ಹಾಕಿ ಆರು ತಿಂಗಳಿಂದ ಕರ್ತವ್ಯ ಮಗ್ನರಾಗಿ ನೂರಾರು ಲೋಡ್ ಮೇವನ್ನು ಭಕ್ತರ ಮೂಲಕ ಸಂಗ್ರಹಿಸಿ ಕಾಮಧೇನುಗಳ ಸ್ವಾಗತಕ್ಕೆ ಕಾದು ಕುಳಿತಿದ್ದಾರೆ. ಸಿರಿಗೆರೆ ಸಮೀಪದ ಮೇಗಳಹಳ್ಳಿ ಬಳಿ ದೊಡ್ಡ ಕಾವಲೆಂದೇ ಕಲೆಯಲ್ಪಡುವ ಶ್ರೀ ಮಠದ ಒಡೆತನದ ಸಾವಿರಾರು ಎಕರೆ ಭೂ ಪ್ರದೇಶವನ್ನು ಶಿವಕುಮಾರ ವನವನ್ನಾಗಿಸಿ ಹತ್ತಾರು ವನ್ಯಜೀವಿಗಳಿಗೆ ಆಶ್ರಯ ತಾಣವಾಗಿರುವ ಪ್ರದೇಶದಲ್ಲಿ ತರಳಬಾಳು ಗೋಶಾಲೆ ನಿರ್ಮಾಣವಾಗುತ್ತಿದೆ.
ಹೇಗಿರುತ್ತದೆ ಗೋಶಾಲೆ..?
ಕರ್ನಾಟಕದ ಅನೇಕ ಪ್ರದೇಶಗಳು ಪದೇ ಪದೇ ಬರಗಾಲಕ್ಕೆ ತುತ್ತಾಗುವ ಸ್ಥಿತಿ ಇದೆ. ಮನುಷ್ಯರು ಹೇಗಾದರೂ ಬದುಕಿಕೊಳ್ಳುತ್ತಾರೆ. ಆದರೆ ದನಕರುಗಳು ಮೇವು ನೀರಿಲ್ಲದೆ ಕಂಗಾಲಾಗುತ್ತವೆ.
ಚಾಮರಾಜ ನಗರದ ಬಳಿ ಮೇವು ನೀರಿಲ್ಲದೆ ಎಲ್ಲೆಂದರಲ್ಲಿ ದನಕರುಗಳು ಸತ್ತಿರುವ ವರದಿಗಳು ದುಃಖದಾಯಕ ವರದಿಗೆ ಮನನೊಂದ ಶ್ರೀಗಳು
ಸಿರಿಗೆರೆ ಸಮೀಪ ಇರುವ ಶಿವಕುಮಾರ ವನದ1000 ಎಕರೆ ಅರಣ್ಯ ಪ್ರದೇಶದಲ್ಲಿ ಬೃಹತ್ ಗೋಶಾಲೆಯನ್ನು ಆರಂಭಿಸುವ ಯೋಜನೆಯನ್ನು ಶ್ರೀ ತರಳಬಾಳು ಜಗದ್ಗುರು ಡಾ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಸಂಕಲ್ಪಿಸಿದರು.
ಇದೊಂದು ಖಾಯಂ ವ್ಯವಸ್ಥೆಯಾಗಿದ್ದು, ಈ ಕಾರ್ಯಕ್ಕಾಗಿ 2 ಕೋಟಿ ರೂಗಳನ್ನು ಮೀಸಲಿರಿಸಲಾಗಿದೆ. ಈ ಕಾಡಿನಲ್ಲಿ ಹರಿಯುವ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ ಮಾಡಿ ಜಾನುವಾರುಗಳಿಗೆ ನೀರನ್ನು ಒದಗಿಸಲಾಗುವುದಲ್ಲದೆ ಆಧುನಿಕ ತಂತ್ರಜ್ಞಾನವನ್ನು ಬಳಸಿ ಮೇವನ್ನು ಬೆಳೆಸಲಾಗುವುದು. ನೀರನ್ನು ಪಂಪ್ ಮಾಡಲು ಸೋಲಾರ್ ವಿದ್ಯತ್ ಉತ್ಪಾದನೆಯ ಬಗ್ಗೆಯೂ ಚಿಂತಿಸಲಾಗುತ್ತಿದೆ. ಕಾಡಿನಲ್ಲಿರುವ ಮೃಗಗಳಿಂದ ಜಾನುವಾರುಗಳಿಗೆ ತೊಂದರೆ ಆಗದಂತೆ ಬೇಲಿಯನ್ನು ನಿರ್ಮಿಸಲಾಗುವುದು. ರಾಜ್ಯದ ಯಾವುದೇ ಭಾಗದ ರೈತರೂ ಇದರ ಪ್ರಯೋಜನ ಪಡೆಯಬಹುದು.
ರೈತರು ಬಯಸಿದರೆ ಜಾನುವಾರುಗಳನ್ನು ಗೋಶಾಲೆಗೆ ತರಲು ಮಠದಿಂದ ಲಾರಿಯನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಬರ ಪ್ರದೇಶದ ರೈತರು ಇಲ್ಲಿಗೆ ದನಕರುಗಳನ್ನು ತಂದು ಮಳೆಗಾಲ ಬರುವ ತನಕ ಮೇವು ಮತ್ತು ನೀರನ್ನು ಪಡೆದು ಸಾಕಬಹುದು.* *ರಾಸುಗಳೊಂದಿಗೆ ಬರುವ ರೈತರಿಗೂ ಮಠದಿಂದ ಆಹಾರ ಮತ್ತು ವಸತಿಯನ್ನು ನೀಡಲಾಗುವುದು.
ತಮ್ಮ ಭಾಗದಲ್ಲಿ ಮಳೆ ಆರಂಭವಾಗಿ ಮೇವು ನೀರು ದೊರೆಯುವವರೆಗೂ ರೈತರು ಶಿವಕುಮಾರ ವನದಲ್ಲಿ ತನ್ನ ರಾಸುಗಳನ್ನು ಸಾಕಿಕೊಂಡು ಹೋಗಲು ಅನುವು ಮಾಡಿಕೊಡುವುದಾಗಿ ಇಂದು ಗೋಶಾಲೆಯ ಕೆಲಸ ಕಾರ್ಯಗಳನ್ನು ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಿದ ಶ್ರೀ ಜಗದ್ಗುರುವರ್ಯರು ತಿಳಿಸಿದರು.
ಬರಹ : ಬಸವರಾಜ ಸಿರಿಗೆರೆ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭ, 81 ಕೇಂದ್ರಗಳಲ್ಲಿ 22579 ವಿದ್ಯಾರ್ಥಿಗಳು

ಸುದ್ದಿದಿನ,ದಾವಣಗೆರೆ:2024-25 ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಜರುಗಲಿವೆ.
ಹೊಸದಾಗಿ ಒಟ್ಟು 21704 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಇದರಲ್ಲಿ 10587 ಬಾಲಕ, 11117 ಬಾಲಕಿಯರು ಇದ್ದಾರೆ. ಇದಲ್ಲದೇ ಖಾಸಗಿ 194, ಖಾಸಗಿ ಪುನರಾವರ್ತಿತ 41 ಹಾಗೂ ಪುನರಾವರ್ತಿತ 640 ವಿದ್ಯಾರ್ಥಿಗಳು ಸೇರಿ 22579 ವಿದ್ಯಾರ್ಥಿಗಳು ಒಟ್ಟು 81 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವರು.
ಜಿಲ್ಲೆಯಲ್ಲಿ 475 ಪ್ರೌಢಶಾಲೆಗಳಿದ್ದು ಇದರಲ್ಲಿ 135 ಸರ್ಕಾರಿ, 166 ಅನುದಾನಿತ, 169 ಅನುದಾನ ರಹಿತ ಪ್ರೌಢಶಾಲೆಗಳಿವೆ.
ಕೇಂದ್ರಗಳ ವಿವರ; ಚನ್ನಗಿರಿ 16, ದಾವಣಗೆರೆ ಉತ್ತರ 14, ದಾವಣಗೆರೆ ದಕ್ಷಿಣ 17, ಹರಿಹರ 12, ಹೊನ್ನಾಳಿ 11, ಜಗಳೂರು 11 ಸೇರಿ 81 ಕೇಂದ್ರಗಳಿವೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಿದ್ದು ವೆಬ್ ಕಾಸ್ಟಿಂಗ್ ಇರಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಿದ್ಧಾಂತ ಮತ್ತು ಪತ್ರಿಕೋದ್ಯಮ

- ಹರ್ಷಕುಮಾರ್ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್
ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು. ಅವರು ಪತ್ರಿಕೋದ್ಯಮದ ನ್ಯೂಟ್ರಾಲಿಟಿ ಕುರಿತು ಮಾತಾಡುತ್ತಾ, ʼನಾವು ಪತ್ರಕರ್ತರು ನಿಮ್ಮ ರೀತಿ ಯೋಚನೆ ಮಾಡೋದಕ್ಕೆ ಆಗಲ್ಲ. ನಾವು ಯಾವತ್ತೂ ಯಾವುದೇ ಸಿದ್ಧಾಂತಕ್ಕೆ ವಾಲಿಕೊಳ್ಳದೇ ತಟಸ್ಥತೆ ಕಾಪಾಡಬೇಕಾಗುತ್ತದೆʼ ಎಂದು ಹೇಳಿದರು. ʼಅವರ ಜೊತೆ ನಾನು ವಾದಿಸಿದೆ.
ಸರ್, ಸುಳ್ಳನ್ನೇ ಬಂಡವಾಳ ಮಾಡಿಕೊಂಡ ಸಿದ್ಧಾಂತಗಳು ರಾರಾಜಿಸುವಾಗ ಸತ್ಯವನ್ನು ಹುಡುಕಲು ಸಹ ಸಿದ್ಧಾಂತದ ಸಹಾಯ ಬೇಕಾಗುತ್ತದೆ. ಯಾವ ವ್ಯಕ್ತಿಯೂ ಸಿದ್ಧಾಂತದ ಹೊರಗಾಗಿ ಇರಲು ಸಾಧ್ಯವಿಲ್ಲ. ನನಗೆ ಸಿದ್ದಾಂತವೇ ಇಲ್ಲ ಎನ್ನುವ ವ್ಯಕ್ತಿಯನ್ನು ಕೂಡಾ ಅವನಿಗೆ ತಿಳಿದೋ ತಿಳಿಯದೆಯೋ ಒಂದಲ್ಲಾ ಒಂದು ಸಿದ್ದಾಂತ ಇಲ್ಲವೇ ಹಲವು ಸಿದ್ಧಾಂತಗಳು ನಿರ್ದೇಶಿಸುತ್ತಿರುತ್ತವಲ್ಲ.. ʼ ಎಂದ ನನ್ನ ಮಾತಿಗೆ ನಮಗೆ ಪತ್ರಕರ್ತರಿಗೆ ಹಾಗೆ ಯೋಚಿಸಲು ಬರುವುದಿಲ್ಲ. ನೀವು ಎಡ ಪಂಥ ಅಂತೀರಿ, ಅವರು ಬಲಪಂಥ ಅಂತಾರೆ, ನಾವು ಇವೆರಡರ ನಡುವೆ ಸತ್ಯ ಹುಡುಕ್ತೀವಿʼ ಎಂದೆಲ್ಲಾ ಹೇಳಿದರು. ಕೊನೆಗೆ ಯಾರೂ ರಾಜಿಯಾಗಲಿಲ್ಲ.
ಇದಾಗಿ ಹದಿನೈದು ವರ್ಷಗಳ ನಂತರ, 2019ರಲ್ಲಿ ಅದೇ ಪತ್ರಕರ್ತ ಸ್ನೇಹಿತರು ನಮ್ಮ ಜೊತೆ ಕೆಲಸ ಮಾಡುತ್ತಿದ್ದರು. ಅವರು ನರೇಂದ್ರ ಮೋದಿ ಸರ್ಕಾರದ ಆರ್ಥಿಕ ವಂಚನೆಗಳನ್ನು ಅದ್ಭುತ ರೀತಿಯಲ್ಲಿ ಅಂಕಿಅಂಶಗಳ ಸಮೇತ ಬಯಲು ಮಾಡುತ್ತಿದ್ದುದು ಕಂಡು ನನಗೆ ಅಚ್ಚರಿ ಮತ್ತು ಸಂತೋಷವಾಗಿತ್ತು. ಅಂದು ಅವರು ನಿಜಕ್ಕೂ ಸತ್ಯದ ಪರವಾಗಿದ್ದರು. ಆದರೆ ಅವರ ಬರೆಹಗಳನ್ನು ಯಾರಾದರೂ ಬಲಪಂಥೀಯರು ಓದಿದರೆ ಅವರಿಗೆ ಖಂಡಿತಾ ಇವರು ʼಎಡಪಂಥೀಯ ಸಿದ್ಧಾಂತಿʼ, ʼನಗರ ನಕ್ಸಲ್ʼ ಎಂದೆಲ್ಲಾ ಸುಲಭವಾಗಿ ಹಣೆಪಟ್ಟಿ ಕಟ್ಟಬಹುದಿತ್ತು. ಆದರೆ ಆ ಪತ್ರಕರ್ತ ಸ್ನೇಹಿತರು ನಿಜಕ್ಕೂ ಈ ದೇಶದ ಭವಿಷ್ಯದ ಬಗ್ಗೆ ತುಂಬಾ ಆತಂಕಗೊಂಡು, ಕಾಳಜಿಯಿಂದ ಕೆಲಸ ಮಾಡುತ್ತಿದ್ದರು. ಕೊನೆಗೆ ಅವರಿಗೂ ಸಹ ಅವರು ಹಿಂದೆ ಹೇಳಿದ್ದ ರೀತಿಯಲ್ಲಿ ತಟಸ್ಥವಾಗಿ ಪತ್ರಿಕೋದ್ಯಮ ನಡೆಸುವುದು ಸಾಧ್ಯವಿಲ್ಲ ಎಂಬ ಅರಿವಾಗಿರಬಹುದು ಎಂದುಕೊಂಡೆ. ಹೌದು ಪತ್ರಕತ್ರರಾದವರು ಮಾಡಲು ಇರುವ ಬಹಳ ಕೆಲಸಗಳ ನಡುವೆಯೂ ಅವರು ಅದ್ಯತೆಯನ್ನು ಗುರುತಿಸಿಕೊಂಡಿದ್ದರು.
ಪತ್ರಿಕೋದ್ಯಮದ ಬಗ್ಗೆ ಮಾತಾಡುವಾಗ ನಾವು ಒಂದು ಪ್ರಾಥಮಿಕ ಸಂಗತಿಯನ್ನು ತಿಳಿದುಕೊಳ್ಳಬೇಕು. ನಮ್ಮ ದೇಶದಲ್ಲಿ ಪತ್ರಿಕೋದ್ಯಮ ಆರಂಭವಾದ ಸಂದರ್ಭದಲ್ಲಿ ಯಾವೆಲ್ಲಾ ಭಾರತೀಯರು ಪತ್ರಿಕೆಗಳನ್ನು ಹೊರತರುತ್ತಿದ್ದರೋ ಅವರೆಲ್ಲರೂ ಕಟು ಸಿದ್ಧಾಂತಿಗಳಾಗಿದ್ದರು. ಸಾಮ್ರಾಜ್ಯವಾದದ ವಿರುದ್ಧದ ಸಿದ್ದಾಂತ ಅವರೆಲ್ಲರನ್ನು ಮುನ್ನಡೆಸುತ್ತಿತ್ತು. ಬಹುತೇಕ ಅವರೆಲ್ಲರೂ ಸ್ವಾತಂತ್ರ್ಯ ಹೋರಾಟಗಾರರು ಇಲ್ಲವೇ ಸ್ವಾಭಿಮಾನ ಚಳವಳಿಯ ಹೋರಾಟಗಾರರು, ನಾಯಕರು ಆಗಿದ್ದರು. ಅಂತಹ ಸ್ಪಷ್ಟ ಸೈದ್ಧಾಂತಿಕ ಬುನಾದಿಯಿಟ್ಟುಕೊಂಡು ಅವರೆಲ್ಲಾ ಬ್ರಿಟಿಷರ ವಿರುದ್ಧ ಪತ್ರಿಕೋದ್ಯಮ ನಡೆಸದಿದ್ದರೆ ಈ ದೇಶದ ಪತ್ರಿಕೋದ್ಯಮದ ಇತಿಹಾಸ ಅತ್ಯಂತ ಟೊಳ್ಳಾದ, ಬೂಸಾ ಇತಿಹಾಸವಾಗುತ್ತಿತ್ತು.
ಕೆಲ ಬ್ರಿಟಿಷ್ ಪತ್ರಕರ್ತರು ಹೇಗೆ ಬ್ರಿಟಿಷ್ ಅಧಿಕಾರಿಗಳ ಬೆಡ್ ರೂಮ್ ಸ್ಟೋರಿಗಳನ್ನು ಚಪ್ಪರಿಸಿಕೊಂಡು ಅದನ್ನೇ ಪತ್ರಿಕೋದ್ಯಮ ಎಂದು ಬೀಗುತ್ತಿದ್ದರೋ ಅಷ್ಟರಲ್ಲೇ ಭಾರತೀಯ ಪತ್ರಿಕೋದ್ಯಮ ಉಳಿದುಬಿಡುತ್ತಿತ್ತು. ಆದರೆ ಹೀಗೆ ಆಗಲು ಬಿಡದೇ ಉದಾತ್ತ ಧ್ಯೇಯಗಳ ಮೂಲಕ ದೇಶದ ಪತ್ರಿಕೋದ್ಯಮ ಬೆಳೆಸಿದ 19ನೆಯ ಶತಮಾನದ ಅಂತಹ ಧೀಮಂತ ಪತ್ರಕರ್ತರು ಹಲವರು. ಸುರೇಂದ್ರ ನಾಥ್ ಬ್ಯಾನರ್ಜಿ (ಬೆಂಗಾಲಿ ಪತ್ರಿಕೆ- 1879) ಪತ್ರಕರ್ತರಾಗಿ ಕೆಲಸ ಮಾಡುತ್ತಲೇ ಸತ್ಯ ಹೇಳಿದ ಕಾರಣಕ್ಕೆ ಬ್ರಿಟಿಷ್ ಸರ್ಕಾರ ಅವರನ್ನು ವರ್ನಾಕ್ಯುಲರ್ ಪ್ರೆಸ್ ಕಾಯ್ದೆಯ ಅಡಿ ಜೈಲಿಗಟ್ಟಿತ್ತು. ಸಂವಾದ ಕೌಮುದಿ ಎಂಬ ಪತ್ರಿಕೆ ನಡೆಸುತ್ತಿದ್ದ ರಾಜಾರಾಮ ಮೋಹನ್ ರಾಯ್ ಒಬ್ಬ ಸ್ಪಷ್ಟ ವಿಚಾರವಾದಿಯಾಗಿದ್ದರು.
ಅವರು ಈ ದೇಶದ ಅನಿಷ್ಟಗಳ ಕುರಿತೇ ತಮ್ಮ ಪತ್ರಿಕೆಯಲ್ಲಿ ಬರೆಯುತ್ತಾ ಹೋದರು. ಇದೇ ಕೆಲಸವನ್ನು ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ ಆರಂಭಿಸಿದ ಜಂಬೇಕರ್ ಮಾಡಿದರು, ಅವರು ತಮ್ಮ ದರ್ಪಣ್ ಪತ್ರಿಕೆಯ ಮೂಲಕ ಸಾಮಾಜಿಕ ಅನಿಷ್ಟಗಳು ಕುರಿತು ಜಾಗೃತಿ ಮೂಡಿಸಿದರು- ಇವರನ್ನು ಮರಾಠಿ ಪತ್ರಿಕೋದ್ಯಮದ ಪಿತಾಮಹ ಎಂದು ಕರೆಯಲಾಗುತ್ತದೆ. ಬಂಗಾಳದಲ್ಲಿ ಹರೀಶ್ಚಂದ್ರ ರಾಯ್ ಎಂಬುವವರು ಬಂಗದರ್ಶನ್ ಎಂಬ ಪತ್ರಿಕೆ ತಂದರು; ಗುಜರಾತಿಯಲ್ಲಿ ʼಬಾಂಬೆ ಸಮಾಚಾರ್ʼ ಪತ್ರಿಕೆ ಆರಂಭಿಸಿದ ಫರ್ದುನ್ಜಿ ಮರ್ಜ್ ಬಾನ್ ಎಂಬುವವರು ಸಹ ಪತ್ರಿಕೆಯ ಮೂಲಕ ಸಮಾಜ ಸುಧಾರಣೆಗೆ ಒತ್ತು ಕೊಟ್ಟರು. ಇನ್ನು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಬಾಲಗಂಗಾಧರ ತಿಲಕ್ ಕೇಸರಿ ಮತ್ತು ಮರಾಟಾ ಪತ್ರಿಕೆ ಹೊರಡಿಸುತ್ತಿದ್ದರು, ಗಾಂದೀಜಿಯವರು ಆಫ್ರಿಕಾದಲ್ಲಿದ್ದಾಗಲೇ ಇಂಡಿಯನ್ ಒಪಿನಿಯನ್ ಪತ್ರಿಕೆ ನಡೆಸುತ್ತಿದ್ದರೆ, ಭಾರತಕ್ಕೆ ಬಂದ ಮೇಲೆ ಯಂಗ್ ಇಂಡಿಯಾ ಮತ್ತು ಹರಿಜನ್ ಎಂಬ ಪತ್ರಿಕೆಗಳನ್ನು ಹೊರತಂದರು,
ಸುಭಾಷ್ ಚಂದ್ರ ಬೋಸ್ ಅವರು ಸ್ವರಾಜ್ ಪತ್ರಿಕೆಯ ಸಂಪಾದಕರಾಗಿದ್ದರು, ಲಾಲಾ ಲಜಪತ್ ರಾಯ್ ಅವರು ದ ಟ್ರಿಬ್ಯೂನ್ ಎಂಬ ಇಂಗ್ಲಿಷ್ ಪತ್ರಿಕೆ ತಂದರು, ಜೊತೆಗೆ ವಂದೆ ಮಾತರಂ ಎಂಬ ಉರ್ದು ಪತ್ರಿಕೆಯನ್ನೂ ಪ್ರಕಟಿಸುತ್ತಿದ್ದರು- ಇವುಗಳ ಮೂಲಕ ಸ್ವದೇಶಿ ಚಿಂತನೆಯನ್ನು ಅಥವಾ ಸಿದ್ಧಾಂತವನ್ನು ಪ್ರಚುರಪಡಿಸಿದರು, ಹೋಂರೂಲ್ ಚಳವಳಿಯ ಮುಂದಾಳು ಅನಿಬೆಸೆಂಟ್ ಅವರು ನ್ಯೂ ಇಂಡಿಯಾ ಪತ್ರಿಕೆ ತಂದರು, ಇನ್ನು ಮದನ್ ಮೋಹನ್ ಮಾಳವೀಯ ಅವರು ಮೋತಿಲಾಲ್ ನೆಹರೂ ಜೊತೆ ಸೇರಿಕೊಂಡು ದ ಲೀಡರ್ ಎಂಬ ಪತ್ರಿಕೆ ತಂದರೆ, ನಂತರ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯನ್ನೂ ಪುನರುಜ್ಜೀವಗೊಳಿಸಿದರು. ಇನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ʼಅಸ್ಪೃಶ್ಯರಿಗೆ ಈ ದೇಶದಲ್ಲಿ ಪತ್ರಿಕೆಯಿಲ್ಲʼ ಎಂದು ಘೋಷಿಸಿ ಮೊದಲಿಗೆ ಶಾಹು ಮಹಾರಾಜರ ಬೆಂಬಲದಿಂದ ಮೂಕನಾಯಕ ಪತ್ರಿಕೆ (1920) ತಂದರು; ನಂತರ ಬಹಿಷ್ಕೃತ ಭಾರತ (1927), ನಂತರ ಸಮತಾ (1928), ನಂತರ ಜನತಾ (1930) ಹಾಗೂ ಪ್ರಬುದ್ಧ ಭಾರತ (1956) ಪತ್ರಿಕೆಗಳನ್ನು ಹೊರಡಿಸಿ ನಿರಂತರವಾಗಿ ಅವುಗಳಲ್ಲಿ ಬರೆಯುತ್ತಾ ತಾವೊಬ್ಬ ಧೀಮಂತ ಪತ್ರಕರ್ತ ಎಂಬುದನ್ನೂ ನಿರೂಪಿಸಿದ್ದರು.
ಇವರನ್ನೆಲ್ಲಾ ಹೊರಗಿಟ್ಟು ಕೇವಲ ಬ್ರಿಟಿಷರು ತಂದ ಬೆಂಗಾಲ್ ಗೆಜೆಟ್ ನಂತವುಗಳನ್ನು ಮಾತ್ರವೇ ಭಾರತದ ಪತ್ರಿಕೋದ್ಯಮದ ಇತಿಹಾಸ ಎಂದು ಹೇಳಲು ಬರುತ್ತದೆಯೇ? ಈ ದೇಶದ ಪತ್ರಿಕೋದ್ಯಮದ ಇತಿಹಾಸದ ಸೈದ್ಧಾಂತಿಕ ಅಡಿಪಾಯ ಅತ್ಯಂತ ಭದ್ರವಾಗಿತ್ತು ಎಂಬುದಕ್ಕೆ ಇವೆಲ್ಲಾ ಸಾಕ್ಷಿಯಲ್ಲವೆ? ಅಲ್ಲಿ ಎಡಬಿಡಂಗಿತನಕ್ಕೆ, ಸೊ ಕಾಲ್ಡ್ ತಟಸ್ಥತೆಗೆ ಯಾವುದೇ ಅವಕಾಶವಿರಲಿಲ್ಲ. ಈ ದೇಶವನ್ನು ಕಾಡುತ್ತಿದ್ದ ಸಾಮ್ರಾಜ್ಯಶಾಹಿ ಮತ್ತು ಬ್ರಾಹ್ಮಣಶಾಹಿ ಶಕ್ತಿಗಳನ್ನು ನೇರವಾಗಿ ಎದುರಿಸಿಯೇ ಭಾರತದ ಪತ್ರಿಕೋದ್ಯಮ ನಡೆದುಕೊಂಡುಬಂದಿದೆ ಎಂಬುದಕ್ಕೆ ಮೇಲಿನ ಉದಾಹರಣೆಗಳೇ ಸಾಕ್ಷಿ.
ಸ್ವಾತಂತ್ರ್ಯಾನಂತರದಲ್ಲಿ, ನಮ್ಮ ಕರ್ನಾಟಕದಲ್ಲೇ ನಾವು ಯಾರನ್ನೆಲ್ಲಾ ಇಂದು ಧೀಮಂತ ಪತ್ರಕರ್ತರೆಂದು ಪರಿಗಣಿಸಿದ್ದೇವೆಯೋ, ಯಾರನ್ನೆಲ್ಲಾ ಆದರ್ಶ ಎಂದು ನೋಡುತ್ತೇವೆಯೋ ಅವರೆಲ್ಲರೂ ಅತ್ಯಂತ ಸ್ಪಷ್ಟ ಮತ್ತು ದೃಢವಾದ ಸಿದ್ಧಾಂತಿಗಳೇ ಆಗಿದ್ದರು ಎಂಬುದನ್ನು ಮರೆಯಬಾರದು. ಕರ್ನಾಟಕದ ಪತ್ರಿಕೋದ್ಯಮಕ್ಕೇ ಹೊಸ ಮೆರಗು ತಂದು ಸಂಚಲನ ಮೂಡಿಸಿದ ಪಿ. ಲಂಕೇಶ್ ಅವರು ಕಡಿಮೆ ಸಿದ್ಧಾಂತಿಯೇ? ಸ್ಪಷ್ಟ ಸೈದ್ಧಾಂತಿಕ ತಳಹದಿಯ ಪತ್ರಿಕೋದ್ಯಮವೇ ಅವರ ಆಕ್ಟಿವಿಸಂ ಆಗಿತ್ತು ಮಾತ್ರವಲ್ಲ ಪತ್ರಿಕೋದ್ಯಮದ ಮೂಲಕ ಸಾಮಾಜಿಕ ರಾಜಕೀಯ ಬದಲಾವಣೆಯನ್ನೂ ಮಾಡಲು ಸಾಧ್ಯ ಎಂದು ಪಿ ಲಂಕೇಶ್ ಒಂದು ಮಾದರಿಯನ್ನೇ ಸೃಷ್ಟಿಸಿದರು. ಅದು ಸಾಧ್ಯವಾಗಿದ್ದೇ ಅವರ ಕಟಿಬದ್ಧ ಸೈದ್ಧಾಂತಿಕ ನಿಲುವಿನಿಂದ.
ನಾಡು ಕಂಡ ಮತ್ತೊಬ್ಬ ಧೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿ ಕೂಡಾ ಗಟ್ಟಿ ತಾತ್ವಿಕ ನಿಲುವುಗಳ ಮೂಲಕ ನಾಡಿನ ಜನರನ್ನು ತಲುಪಿದರು. ಇನ್ನು 70-80ರ ದಶಕಗಳಲ್ಲಿ ಭಾರತೀಯ ಪತ್ರಿಕೋದ್ಯಮದ ಧೀಮಂತ ಪರಂಪರೆಯಲ್ಲಿ ಸಾಗಿದ ಹಲವಾರು ಕನ್ನಡ ಪತ್ರಿಕೆಗಳಿದ್ದವು- ಸುದ್ದಿ ಸಂಗಾತಿ, ಶೂದ್ರ, ಪಂಚಮ, ಸಮುದಾಯ, ಸಂಕ್ರಮಣ ಮುಂತಾದ ನಿಯತಕಾಲಿಕೆಗಳು ಕನ್ನಡಿಗರ ಅರಿವಿನ ವಿಸ್ತರಣೆಯಲ್ಲಿ ಕಡಿಮೆ ಕೆಲಸ ಮಾಡಿವೆಯೇ? ಹಾಗಾದರೆ ಇವೆಲ್ಲವೂ ಖಚಿತ ಸೈದ್ದಾಂತಿಕತೆಯಿಂದಲೇ ನಡೆಯಲಿಲ್ಲವೇ?
ಇನ್ನು ಕಳೆದ ಕೆಲವು ದಶಕಗಳಲ್ಲಿ, ಅಗ್ನಿ, ಹಾಯ್ ಬೆಂಗಳೂರು, ಗೌರಿ ಲಂಕೇಶ್ ವಾರಪತ್ರಿಗಳೂ ತಮ್ಮ ಛಾಪು ಮೂಡಿಸಿದವು. ಪಿ ಲಂಕೇಶರ ಸ್ಪೂರ್ತಿಯಲ್ಲೇ ದೊಡ್ಡ ದೊಡ್ಡ ಭ್ರಷ್ಟಾಚಾರ ಪ್ರಕರಣಗಳನ್ನು ಅನಾವರಣಗೊಳಿಸಿದವು. ಇದ್ದುದರಲ್ಲಿ ರವಿ ಬೆಳಗರೆ ಎಡಬಿಡಂಗಿಯಾಗಿ ಕ್ರೈಂ, ಸೆಕ್ಸ್ ಗಳನ್ನ ಅಸ್ತ್ರವಾಗಿಸಿಕೊಂಡು ಟ್ಯಾಬ್ಲಾಯ್ಡ್ ಪತ್ರಿಕೋದ್ಯಮವನ್ನು ಹಳ್ಳ ಹಿಡಿಸಿದರೂ ಹಾಯ್ ಬೆಂಗಳೂರು ಸಹ ಅನೇಕ ಬ್ರಷ್ಟಾಚಾರ ಹಗರಣಗಳನ್ನು ಬಯಲು ಮಾಡಿದ್ದು ಸತ್ಯ.
ಯಾವನ್ನು ನಾವು ದಿನಪತ್ರಿಕೆಗಳು ಅಥವಾ ವೃತ್ತ ಪತ್ರಿಕೆಗಳು ಎನ್ನುತ್ತೇವೆಯೋ ಇವುಗಳ ಆದ್ಯತೆ ದಿನನಿತ್ಯದ ಸುದ್ದಿಗಳನ್ನು ಜನರಿಗೆ ತಲುಪುವುದು ಮಾತ್ರವಾಗಿದ್ದ ಕಾರಣ ಬಹಳ ಪತ್ರಿಕೆಗಳಲ್ಲಿ ಸೈದ್ಧಾಂತಿಕತೆ ದೊಡ್ಡ ವಿಷಯವಾಗಲಿಲ್ಲ. ಆದರೆ ಅಂತಹ ಕಡೆಗಳಲ್ಲಿ ಸಹ ದೊಡ್ಡ ದೊಡ್ಡ ಸಿದ್ಧಾಂತಿಗಳು ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿದ್ದರು ಮತ್ತು ತಮ್ಮ ಖಚಿತ ಅಭಿಪ್ರಾಯಗಳನ್ನು ಆ ವೇದಿಕೆಗಳ ಮೂಲಕ ಜನರಿಗೆ ತಲುಪಿಸುತ್ತಾ ಬಂದಿದ್ದರೆಂಬುದನ್ನು ನಾವು ಮರೆಯಕೂಡದು.
ಈಗ ಹೇಳಿ, ನಮ್ಮ ಪತ್ರಿಕೋದ್ಯಮಕ್ಕೆ ಸಿದ್ಧಾಂತ ಬೇಡವೆ, ಪತ್ರಕರ್ತರಾಗಿರುವವರು ಸೈದ್ಧಾಂತಿಕ ಸ್ಪಷ್ಟತೆ ಹೊಂದಿರಬಾರದೆ? ಆಕ್ಟಿವಿಸ್ಟುಗಳು ಪತ್ರಕರ್ತರಾಗುವುದು ಅಪರಾಧವೆ? ಪತ್ರಿಕೋದ್ಯಮ ಆಕ್ಟಿವಿಸಂಗೆ ಪೂರಕವಾಗಿರಬಾರದೆ? ಇಂದು ಬ್ರಾಹ್ಮಣ್ಯದ ದಿಗ್ವಿಜಯ ಮತ್ತೊಮ್ಮೆ ನಿಜವಾಗುವ ಕರಾಳ ಛಾಯೆ ಇಡೀ ದೇಶವನ್ನು ಆವರಿಸಿಕೊಂಡಿರುವಾಗ, ಬಾಬಾಸಾಹೇಬರು ಎಚ್ಚರಿಸಿದ್ದ ಆ ʼಪ್ರತಿಕ್ರಾಂತಿʼ ತನ್ನ ಕಬಂಧಬಾಹುಗಳನ್ನು ಚಾಚಿಕೊಂಡ ಎಲ್ಲವನ್ನೂ ನೊಣೆಯುತ್ತಿರುವಾಗ, ಅಪರಾಧವೇ ಅಧಿಕಾರವಾಗಿ ದೇಶದ ಪ್ರಮುಖ ಸಂಸ್ಥೆಗಳೆಲ್ಲವನ್ನೂ ನುಂಗಿ ನೀರುಕುಡಿದು ತಮ್ಮ ಅಂಕೆಯಲ್ಲಿ ತಂದುಕೊಂಡು ಇಡೀ ದೇಶದ ಜನರಿಗೆ ಕರಾಳತೆ ದರ್ಶನ ಮಾಡುತ್ತಾ ಭ್ರಷ್ಟಾಚಾರದ ವ್ಯಾಖ್ಯಾನವನ್ನೇ ತಿರುಗುಮರುಗು ಮಾಡುತ್ತಿರುವಾಗ ಸೊ ಕಾಲ್ಡ್ ತಟಸ್ಥತೆಯ ಬದನೇಕಾಯಿಯನ್ನು ನೆಚ್ಚಿಕೊಳ್ಳದೇ ನಿರ್ಧಾರಿತ ಜನಾಂದೋಲನಗಳಿಗೆ ಪೂರಕವಾಗಿ ಪತ್ರಿಕೋದ್ಯಮ ಮತ್ತು ಪತ್ರಕರ್ತರಾದವರು ಜೊತೆಗೂಡುವುದು ಬೇಡವೇ?
‘ಬೇಡ’ ಎಂಬ ಅಭಿಪ್ರಾಯ ನಿಮ್ಮದಾಗಿದ್ದರೆ ನಿಮ್ಮ ಬಳಿ ಹೇಳಲು ನನಗೆ ಏನೂ ಉಳಿದಿಲ್ಲ. ನೀವು ನಿಮ್ಮದೇ ಸುಖಾಸನದಲ್ಲಿ ನೆಮ್ಮದಿಯಾಗಿ ಪವಡಿಸಬಹುದು, ನನಗೇನೂ ಅಭ್ಯಂತರವಿಲ್ಲ. (ಬರಹ- ಹರ್ಷಕುಮಾರ್ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
-
ದಿನದ ಸುದ್ದಿ5 days ago
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ
-
ದಿನದ ಸುದ್ದಿ7 days ago
ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ
-
ದಿನದ ಸುದ್ದಿ2 days ago
ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್
-
ದಿನದ ಸುದ್ದಿ5 days ago
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ
-
ದಿನದ ಸುದ್ದಿ2 days ago
ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
-
ದಿನದ ಸುದ್ದಿ4 days ago
ಕವಿತೆ | ಮತ್ತಿನ ಕುಣಿಕೆ
-
ದಿನದ ಸುದ್ದಿ2 days ago
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ