Connect with us

ದಿನದ ಸುದ್ದಿ

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Published

on

  • ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ

90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು.

ಜನಸಾಮಾನ್ಯರ ಅರಿವಿನ-ಪರಿಧಿ ತಿಳಿಗೊಳ್ಳುವುದರ ಮೊದಲೇ ಊಹಿಸಲಾರದಷ್ಟು ಮಟ್ಟಿಗೆ ಇಂದು, ಸ್ವಚ್ಛಂದ ಹಳ್ಳಿ-ಸೊಬಗಿನ ಕೂಡು-ಕುಟುಂಬದ, ಮೈ-ಮನಸ್ಸು ತುಂಬಿದ, ಪರಿಶುದ್ಧ ಜೀವನ ಪ್ರೀತಿ, ಉತ್ಸಾಹ, ಮಮತೆಯನ್ನು ಇನ್ನಿಲ್ಲವಾಗಿಸಿದೆ ಎನಿಸುತ್ತದೆಯಲ್ಲವೆ?

ಹೇಗೆಂದರೆ, ಕಲ್ಪಿಸಿಕೊಂಡರೂ ಕಣ್ಣೆದುರಿಗೆ ತೆರೆದಿಡುವ ಅಮೂಲ್ಯ ಬದುಕು, ಅದೆಷ್ಟು ಬೇಗ ದಿಕ್ಕು-ದೆಸೆಯಿಲ್ಲದೆ ಕಣ್ಣು-ಕಟ್ಟಿದ ಸ್ಪರ್ಧೆಗಿಳಿದ ಕುದುರೆಯಂತೆ ಅಲೆಯುವಂತಾಗಿದೆ! ಅರೆಕ್ಷಣ, ಮೈಮನ ಕಸಿವಿಸಿಗೊಳ್ಳುತ್ತೆ! ಜೀವ ಮರುಗುತ್ತೆ. ಮತ್ತೆ ಮತ್ತೆ ಆ ಬಾಲ್ಯ, ಹಳ್ಳಿ ಬದುಕನ್ನ ಅರಸಿ ಬಯಸುತ್ತೆ! ಜನತೆ, ಹಳ್ಳಿಯಲ್ಲಿನ ಗಿಡ-ಮರ, ಪಶು-ಪಕ್ಷಿ, ಹಳ್ಳ-ಕೊಳ್ಳ, ಬೆಟ್ಟ-ಗುಡ್ಡ ಮುಂತಾದ ಪರಿಸರದ ಸಕಲ ಜೀವಿಗಳೊಂದಿಗೆ ಒಂದಾಗಿ ನಲ್ಮೆಯಿಂದ ಪರಿಶುದ್ಧ ಮನದಿ, ಭೂ ತಾಯಿ, ತಿಳಿ-ನೀಲಿ ಆಗಸ, ಮಳೆ, ಗಾಳಿ, ಬೆಳಕನ್ನ ಇನ್ನಿಲ್ಲದೆ ಅಪ್ಪಿ, ಅತ್ಯಂತ ಸಂತಸ-ಖುಷಿಯಿಂದ, ಇರುವ ಪರಿಸ್ಥಿತಿಗೆ ಒಗ್ಗಿ , ಬದುಕು ರೂಪಿಸಿಕೊಂಡು ಜೀವನೋತ್ಸಾಹ ತಳೆಯುತ್ತಿದ್ದರು.

ನಿಜ ಹೇಳಬೇಕೆಂದರೆ, ಪರಿಸರವೇ ಪಾಠ; ಭೂ ತಾಯಿಯೇ ಹಾಸಿಗೆ; ಆಗಸವೇ ಹೊದಿಕೆಯಾಗಿ, ದುಡಿದ, ದಣಿವರಿದ ಮನದಿ, ಕಣ್ತುಂಬಿ ನೆಮ್ಮದಿಯ ನಿಟ್ಟುಸಿರುಗೈವ ಕ್ಷಣಗಳು ಅದಾಗಿತ್ತು!

ಹಳ್ಳಿಯಲ್ಲಿನ ಆಟೋಟಗಳು, ತಮಾಷೆಯ ಕ್ಷಣಗಳು, ಆಟಿಕೆಗಳು, ಸಾಮಾನುಗಳು, ಹಬ್ಬ-ಹರಿದಿನಗಳು, ಜಾತ್ರೆ-ಸಂತೆಗಳು, ಒಕ್ಕಲು ಸಮಯದ ಸುಗ್ಗಿಯ ಮಧುರ ಕ್ಷಣಗಳು ಇತ್ಯಾದಿ ಜನತೆಯ ಮುಗ್ಧ -ಮನಸ್ಸು ಮತ್ತು ಹೊಳೆವ ಮುಖದಲ್ಲಿ, ನಿಷ್ಕಲ್ಮಶ ಮಂದಹಾಸ ಮೂಡಿಸಿ, ಬೆಲೆ ಕಟ್ಟಲಾಗದ ಖುಷಿಯ ಕ್ಷಣಗಳನ್ನು ಸದಾ ಅವರಲ್ಲಿ ಕಂಗೊಳಿಸುತ್ತಿದ್ದವು.

ಎಲ್ಲರೂ ದುಡಿವವರು; ಎಲ್ಲರೂ ಭಾಗಿಯಾಗುವವರು; ಎಲ್ಲರೊಳಗೊಂದಾಗಿ ಬಾಳುವವರು; ಎಲ್ಲರಲ್ಲೂ ಧನ್ಯತಾ ಭಾವ; ಆದರಣೀಯತೆ, ಪೂಜ್ಯತಾ-ಭಾವ ತುಂಬಿತ್ತು! ಅಂತಃಕರಣೆ, ಕರುಣೆ, ಪ್ರೀತಿ-ವಿಶ್ವಾಸ, ತಕ್ಕಮಟ್ಟಿಗೆ ಮಾನವೀಯತೆ ಬದುಕ-ಪ್ರೀತಿ ಹೆಚ್ಚಿಸಿತ್ತು!

ಈಗಾಗಲೇ, ನಾವು ಯಾವ ಸ್ಥಿತಿ ತಲುಪಿದ್ದೇವೆಂದರೆ: ಶಾಲಾ ರಜೆಯ ದಿನಗಳಲ್ಲಿ, ಈಗಿನ ಮಕ್ಕಳಿಗೆ ಆ ಕಾಲದ ಹಳ್ಳಿಗಳ ಜೀವನ ಪರಿಚಯಿಸಲು ಗೊಟಗೋಡಿಯ ರಾಕ್ ಗಾರ್ಡನ್ – ಹಾವೇರಿ, ಹೆರಿಟೇಜ್ ವಿಲೇಜ್ – ಮಣಿಪಾಲ, ಅಲ್ಲಲ್ಲಿ ಸಾರ್ವಜನಿಕ ಉದ್ಯಾನವನ, ಹಾಗೂ ಇತರೆ ಕೆಲವು ಮ್ಯೂಸಿಯಮ್ ಗಳತ್ತ ಮುಖ ಮಾಡಿಬೇಕೆ ಹೊರತು ನೈಜ ಚಿತ್ರಣ ಪ್ರಸ್ತುತ ಹಳ್ಳಿಗಾಡಿನಲ್ಲೂ ಕಾಣಸಿಗದು! ಸ್ವತಃ ಹಳ್ಳಿಗರೇ ಪರಿತಪಿಸುವ ಸ್ಥಿತಿ.

ಕಾರಣ ಇಷ್ಟೆ: ತಂತ್ರಜ್ಞಾನದ ಆವಿಷ್ಕಾರ ಮತ್ತು ಎಲ್ಲ ಕ್ಷೇತ್ರಗಳಲ್ಲೂ ಹೊಕ್ಕಿರುವ ಅದರ ಗಾಢವಾದ ಛಾಯೆ. ಇಡೀ ‘ಪ್ರಪಂಚವೇ ಒಂದು ಹಳ್ಳಿ’ (Global Village) ಯಾಗಿ ಮಾರ್ಪಟ್ಟಿರುವ ಭಾವನೆ. ವಿಶೇಷವಾಗಿ, ದೂರವಾಣಿ, ಇಂಟರ್ನೆಟ್, ಯುಟ್ಯೂಬ್, ನೇರ ಮೆದುಳಿಗೆ ಕೈ ಹಾಕಿರುವ ಸಾಮಾಜಿಕ ಜಾಲತಾಣಗಳ ಡ್ರಗ್ಸ್ ರೀತಿಯ ಮಾನಸಿಕ ಮೋಹ ಬೆಂಬಿಡದೆ ಇಂದಿನ ಆಧುನಿಕ ಜನತೆಯ ಚಿಂತನಾರ್ಹ ಯೋಚನಾ ಶಕ್ತಿ, ಆರೋಗ್ಯ , ಕೌಟುಂಬಿಕ ಮೌಲ್ಯಗಳು, ಮಾನವೀಯ ಗುಣಗಳು ಹಾಗೂ ಒಟ್ಟಾರೆ ಜೀವನ ಶೈಲಿಯನ್ನೇ ಅಕ್ಷರಸಃ ನುಂಗಿಹಾಕಿವೆ! ಅಲ್ಲದೆ, ಇದು ಇಂದಿನ ಅನಿವಾರ್ಯವೆಂಬಂತೆ ಕಠೋರ ಸನ್ನಿವೇಶ ಹುಟ್ಟುಹಾಕಿವೆ.

ಒಂದೆಡೆ, ‘ಅತೀಯಾದ ಅಮೃತವೂ ವಿಷ’ವೆನ್ನುವಂತೆ, ಹಾಗೂ ಊಟದಲ್ಲಿ ‘ರುಚಿಗೆ ತಕ್ಕಷ್ಟು ಉಪ್ಪಿ’ರುವಂತೆ ಹಲವು ಒಳಿತು-ಕೆಡುಕಗಳ ನಡುವೆ ಎಲ್ಲವೂ ಹಿತಮಿತವಾಗಿ ಬಳಕೆಯಲ್ಲಿದ್ದರೆ ಚೆನ್ನ. ಅಲ್ವೇ? ಮೈ ಮನ ಆರೋಗ್ಯಕರವಾಗಿರುತ್ತೆ; ಜೀವನ ಉತ್ಸಾಹದಿಂದ ಕೂಡಿರುತ್ತೆ.
ಜೊತೆಗೆ, ಇತ್ತೀಚೆಗೆ ಜಗತ್ತಿನೆಲ್ಲೆಡೆ ಭಾರೀ ಸಂಚಲನ ಸೃಷ್ಟಿಸಿರುವ ‘ಕೃತಕ ಬುದ್ಧಿಮತ್ತೆ’ (Artificial Intelligence – AI) ಹಾಗೂ ‘ಬಯೋಚಿಪ್’ ತಂತ್ರಜ್ಞಾನಗಳು. ಈ ಎರಡೂ ತಂತ್ರಜ್ಞಾನಗಳು ಬಹುತೇಕ ಮನುಷ್ಯನನ್ನ ಸಹ ಒಂದು ಸರಕಾಗಿ ನೋಡುವ ದೂರದೃಷ್ಟಿ ಹೊಂದಿವೆ ಎಂದರೆ ತಪ್ಪಾಗಲಿಕ್ಕಿಲ್ಲ! ತೀರ ಇತ್ತೀಚೆಗೆ, ತಂತ್ರಜ್ಞಾನ ಜಗತ್ತಿನ ಹೆಸರಾಂತ ಉದ್ಯಮಿ: ಎಲಾನ್ ಮಸ್ಕ್ ತಮ್ಮ ‘ನ್ಯೂರಾಲಿಂಕ್’ (Neuralink) ಸಂಸ್ಥೆಯ ಮೂಲಕ ಪ್ರಪಂಚದ ಮೊಟ್ಟ ಮೊದಲ ಪ್ರಯತ್ನವಾಗಿ ಆರೋಗ್ಯವಂತ ವ್ಯಕ್ತಿಯೊಬ್ಬರ ಮೆದುಳಿನಲ್ಲಿ ಪ್ರಾಯೋಗಿಕ – ‘ಮೊದಲ ಬಯೋಚಿಪ್’ ಅಳವಡಿಸಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ! ಇದುವರೆಗೂ, ಮೊಬೈಲ್ ನಲ್ಲಿ ಕೇವಲ ‘ಮೆಮೊರಿ ಕಾರ್ಡ್’ ಬಳಸಿ, ಅದರಲ್ಲಿ ಸಂಗ್ರಹಿಸಿದ ಮಾಹಿತಿ ಬೇಕೆಂದಾಗ ಆಲಿಸುವ, ನೋಡುವ ಪರಿಪಾಠದ ಪರಿಚಯವಿದ್ದ ನಮಗೆ, AI ಹಾಗೂ Biochip ತಂತ್ರಜ್ಞಾನಗಳ ಅವತಾರಗಳು ಊಹೆಗೂ ಮೀರಿದ್ದು ಅನ್ಸುತ್ತೆ ಕೂಡ.

ಆಗ, ಜಗತ್ತು ಹೇಗಿರಬೇಡ? ತಂತ್ರಜ್ಞಾನ ತೊರೆದು ಮನುಷ್ಯ, ಜೀವನ ಕಲ್ಪಿಸಿಕೊಳ್ಳಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಅದು, ಕೇವಲ ಮನುಷ್ಯನ ಅವಶ್ಯಕತೆಗಳಿಗೆ ಪೂರಕವಾಗಿರಬೇಕೆ ಹೊರತು; ಆತನನ್ನ ಆಳುವ ಸ್ಥಿತಿ ತಲುಪಬಾರದು! ಮುಂದಿನ ದಿನಗಳಲ್ಲಿ, ಮನುಷ್ಯ ಎದುರಿಸಬಹುದಾದ ಭಯಾನಕ ತಂತ್ರಜ್ಞಾನ ಸಂಕೋಲೆಗಳನ್ನು ಕುರಿತು ಚರ್ಚಿಸುವ ಅಗತ್ಯ ಇಂದಿನ ತುರ್ತು ಅನಿವಾರ್ಯ. ಆದರೆ, ಎಲ್ಲವೂ ಸಲೀಸಾಗಿ ಕೈಗೆಟುಕುವ ಇಂದಿನ ದಿನಗಳಲಿ, ಅತಿಯಾಗಿ ಮಿತಿಮೀರಿರುವ ಅನುಕೂಲಗಳು ಅಮೂಲ್ಯ ಖುಷಿಯ ಕ್ಷಣಗಳನ್ನು ಎಂದಿಗೂ ನೀಡಲಾರವು.

ಬದಲಿಗೆ, ಪ್ರತಿಷ್ಠೆಯ ಹೆಮ್ಮರಗಳಾಗಿ, ಜನತೆ ನಾಲ್ಕು ದಿನದ ಈ ಬಾಳಲಿ ಏನೋ ಬಹುದೊಡ್ಡ ಸಾಧನೆಗೈದವರಂತೆ, ಯಂತ್ರಮಾನವರಂತೆ ಬೀಗುವವರೆ!!? ಮೂಲಭೂತವಾಗಿ, ಮಾನವ ಸಹಿತ ಸಕಲ ಜೀವ-ಸಂಕುಲವೂ ವಾಸಯೋಗ್ಯ ಸ್ವಚ್ಛಂದ ಭೂಮಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಭೂಮಿಯಲ್ಲಿ, ಮಣ್ಣಿನ ಫಲವತ್ತತೆ ಹಾಗೂ ನೀರು ಸಂರಕ್ಷಿಸದೆ; ಗಿಡ-ಮರ ಬೆಳೆಸದೆ; ಹಸಿರು ಹೆಚ್ಚಿಸದೆ, ಮತ್ತು ಪರಿಸರ ಸಮತೋಲನ ಕಾಪಾಡದೆ; ಕೇವಲ ತಂತ್ರಜ್ಞಾನ ತಲೆಯಲಿ ಹೊತ್ತು, ಮನುಷ್ಯ ಉತ್ತಮ ಆಹಾರ, ಆರೋಗ್ಯ ಮತ್ತು ಜೀವನ ಕಟ್ಟಿಕೊಳ್ಳಲು ಎಂದಿಗೂ ಸಾಧ್ಯವಿಲ್ಲ. ಸಮರೋಪಾದಿಯಲ್ಲಿ, ಜನತೆ ಸ್ವ ಇಚ್ಛೆಯಿಂದ ಹಳ್ಳಿ-ಹಳ್ಳಿಗಳಿಂದ, ನಗರಗಳು, ಬೆಟ್ಟ-ಗುಡ್ಡಗಳಲ್ಲೆಡೆ ಬೃಹತ್ ಸಂಖ್ಯೆಯಲ್ಲಿ ಸಸಿಗಳನ್ನ ನೆಟ್ಟು, ಪಾಲನೆ-ಪೋಷಣೆಗೈಯ್ಯುವ ಚಳುವಳಿ ರೂಪದ ಆಂದೋಲನ ದೇಶಾದ್ಯಂತ ಅತ್ಯಂತ ತ್ವರಿತವಾಗಿ ಕೈಗೂಡಬೇಕು. ಈ ನಿಟ್ಟಿನಲ್ಲಿ, ಎಲ್ಲರೂ ಕೈಜೋಡಿಸಬೇಕು.

(ಲೇಖಕರು : ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending