ಬಹಿರಂಗ
ಮೇ 04 ; ಮರೆಯಲಿ ಹೇಗೆ..?
- ಜಿ. ಟಿ ಸತ್ಯನಾರಾಯಣ ಕರೂರು
ಇಂದು ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ವೀರಮರಣವಪ್ಪಿದ ದಿನ. ಪ್ರಪಂಚದ ಇತಿಹಾಸದಲ್ಲಿ ಯುದ್ಧ ಒಪ್ಪಂದವೊಂದರಲ್ಲಿ ಕಾಲ ಮಿತಿಯಲ್ಲಿ ಯುದ್ಧ ಖರ್ಚನ್ನು ನೀಡುವ ತನಕ ತನ್ನ ಮಕ್ಕಳನ್ನು ಬ್ರಿಟಿಷ್ ಸೇನೆಗೆ ಒಪ್ಪಿಸಿ ದೇಶ ಪ್ರೇಮ ಮೆರೆದ ಮತ್ತೊಬ್ಬ ರಾಜ ಸಿಗುವುದಿಲ್ಲ.
ಸೋಲೊಪ್ಪಿಕೊಂಡು ಜೀ ಹುಜೂರ್ ಹೇಳಿಕೊಂಡು ಸಿಂಹಾಸನದ ಮೇಲೆ ಮುಂದುವರಿಯುವ ಅವಕಾಶವಿದ್ದರೂ ತಿರಸ್ಕಾರ ಮಾಡಿ ಪಲಾಯನವೂ ಮಾಡದೇ ರಣ ಸೇನಿಯಾಗಿ ಹೋರಾಟದಲ್ಲಿ ಮಡಿದ ಟಿಪ್ಪು ಸಂಚಿಗೆ ಅಂದಿನಿಂದ ಇಂದಿನವರೆಗೂ ಬಲಿಯಾಗುತ್ತಾ ಇದ್ದಾನೆ. ಎಷ್ಟೇ ಸಂಚುಗಳು ಎದುರಾದರೂ ಟಿಪ್ಪು ಮತ್ತೆ ಮತ್ತೆ ತನ್ನ ವೀರತ್ವ ಬದ್ಧತೆ ಮತ್ತು ಆಡಳಿತ ಸುಧಾರಣೆಯಂತ ಹಲವು ಕಾರಣಕ್ಕೆ ಜನ ಮಾನಸದಲ್ಲಿ ಉಳಿದು ಹೋಗಿದ್ದಾನೆ.
ಪ್ರಪಂಚದ ಮೊದಲ ರಾಕೆಟ್ ತಂತ್ರಜ್ಞಾನದ ಪಿತಾಮಹ ಟಿಪ್ಪು ಎನ್ನುವುದು ಅಮೆರಿಕಾದ ನಾಸಾ ವೇ ಒಪ್ಪಿಕೊಂಡು ಅಧಿಕೃತ ಘೋಷಣೆ ಮಾಡಿದೆ. ಬ್ರಿಟಿಷರ ಶತ್ರುಗಳನ್ನ ಸಂಘಟಿಸಿ ಆಧುನಿಕ ತಂತ್ರಜ್ಞಾನ ಮೂಲಕ ಭಾರತೀಯ ಶೌರ್ಯ ಜೋಡಿಸಿ ವಸಹಾತುಶಾಹಿಗೆ ವಿಮೋಚನೆ ಕೊಡಬಹುದು ಎಂಬ ದೂರ ದೃಷ್ಟಿ ಯುದ್ದ ಚತುರ ಟಿಪ್ಪು ತನ್ನ ಬಹುತೇಕ ಬದುಕಿನ ಸಮಯವನ್ನು ಯುದ್ಧ ಭೂಮಿಯಲ್ಲಿ ಕಳೆದರೂ ಆತನ ಆಡಳಿತ ಸುಧಾರಣಾ ಕ್ರಮ ಕಲ್ಯಾಣ ಕರ್ನಾಟಕದ ಭಾಗ ಆಗಿತ್ತು ಎನ್ನುವುದಕ್ಕೆ ಹಲವು ಸಾಕ್ಷಿ ಇವೆ.
ಸರಳ ಹೇಳಬೇಕು ಎಂದರೆ ಈಗ ನಾವು ಸೊಸೈಟಿ ಮೂಲಕ ದೀರ್ಘಾವಧಿ ಮತ್ತು ಅಲ್ಪಾವಧಿ ಸಾಲಗಳನ್ನ ಪಡೆಯುತ್ತೇವೆ. ರೈತರಿಗೆ ಈ ರೀತಿ ಸಾಲ ನೀಡುವ ಯೋಜನೆ ಆರಂಭಿಸಿದ್ದೆ ಟಿಪ್ಪು. ಭೂಮಿಯ ಹಕ್ಕು ಮೇಲ್ಜಾತಿಯವರ ಕೈಲಿ ಇರುವ ಕಾಲದಲ್ಲಿ ರಾಜ್ಯದ ಒಳಗೆ ತನ್ನ ವಿರುದ್ಧ ಕತ್ತಿ ಮಸೆಯುತ್ತಾ ಇದ್ದ ಪಾಳೇಗಾರರ ಸೋಲಿಸಿ ಅವರ ಭೂಮಿಯನ್ನು ಭೂರಹಿತರಿಗೆ ಮುಖ್ಯವಾಗಿ ದಲಿತರಿಗೆ ಹಂಚಿ ಸಾಮಾಜಿಕ ನ್ಯಾಯದಲ್ಲಿ ನಡೆದ ಅತಿ ವಿರಳ ರಾಜ ನಮ್ಮ ಟಿಪ್ಪು. ಈ ಕಾರಣಕ್ಕೆ ಇಂದಿಗೂ ಮೈಸೂರು ಪ್ರಾಂತ್ಯದಲ್ಲಿ ಅತಿ ಹೆಚ್ಚು ದಲಿತರು ಭೂಮಿ ಪಡೆದು ಸ್ವಾತಂತ್ರ್ಯ ಭಾರತ ನೌಕರಶಾಹಿಯಲ್ಲಿ ಸ್ಥಾನ ಮಾನ ಪಡೆದಿದ್ದಾರೆ.
ನಮಗೆ ಇನ್ನೂ ಪರಿಪೂರ್ಣ ಒಂದು ಪರಿಸರ ಪ್ರಜ್ಞೆಯ ರಾಜ್ಯ ಆಡಳಿತ ದಕ್ಕಿಲ್ಲ. ಟಿಪ್ಪು ಆಡಳಿತದಲ್ಲಿ ನೀಡಿರುವ ಸುತ್ತೋಲೆಗಳು ಅಧ್ಯಯನ ಮಾಡಿದರೆ ಮರಗಳ್ಳರಿಗೆ ಸಿಂಹಸ್ವಪ್ನವಾಗುವ ಕಾನೂನು ರಚನೆ ಆಗಿದ್ದು ಅರ್ಥವಾಗುತ್ತದೆ. ಸಂವಿಧಾನ ಜಾರಿಗೆ ಬರುವ 150 ವರ್ಷಗಳ ಮುಂಚೆ ಮಹಿಳಾ ಹಕ್ಕುಗಳ ಬಗ್ಗೆ ದ್ವನಿಯಾಗಿದ್ದ. ಮಲಬಾರ್ ಪ್ರಾಂತ್ಯದಲ್ಲಿ ಬಹುಸಂಖ್ಯಾತರಾದ ಈಡಿಗ( ಈಳಿಗ) ಸಮುದಾಯದ ಹೆಣ್ಣು ಮಕ್ಕಳು ಎದೆ ಮೇಲೆ ಸೆರಗು ಹಾಕಿಕೊಳ್ಳಲು ನೀಡಬೇಕಿದ್ದ ಕರವನ್ನ ನಿಷೇಧಿಸಿ ಅಂತ ದುರುಳ ನೀತಿ ಹಿಂದಿನ ದುಷ್ಟತನ ತಾರತಮ್ಯವನ್ನ ಪಾಲನೆ ಮಾಡುತ್ತಾ ಇದ್ದ ಭೂ ಮಾಲಿಕರು ಮತ್ತು ಪಾಳೇಗಾರರನ್ನ ದಂಡಿಸಿ ಮಹಿಳಾ ಶೋಷಕರ ವಿರುದ್ದ ತಿರುಗಿಬಿದ್ದವ ಟಿಪ್ಪು.
ಟಿಪ್ಪುವಿನ ಕೊನೆಯ ಕ್ಷಣ ತೀವ್ರ ಗಾಯಗೊಂಡ ಟಿಪ್ಪು ನೆಲಕ್ಕೆ ಉರುಳುತ್ತಾನೆ. ಆತನ ಶಿರಸ್ತ್ರಾಣ ಮತ್ತು ಖಡ್ಗ ಕಸಿಯಲು ಬ್ರಿಟಿಷ್ ಸೈನಿಕರು ಮುಂದಾದಾಗ ಟಿಪ್ಪು ಪ್ರತಿರೋಧ ಒಡ್ಡುತ್ತಾನೆ. ಅದೇ ವೀರತ್ವದ ಕೊನೆ ಕ್ಷಣ. ಮರು ಕ್ಷಣವೇ ಟಿಪ್ಪು ಸಾಮಾನ್ಯ ಸೈನಿಕನ ಕೈಲಿ ಪ್ರಾಣ ಬಿಡುತ್ತಾನೆ.
ಯುದ್ಧ ಭೂಮಿಯಲ್ಲಿ ಕನಸಿನಲ್ಲಿ ಸಿಂಹಸ್ವಪ್ನವಾಗಿ ಕಾಡಿದ್ದ ಟಿಪ್ಪು ರಣ ಭೂಮಿಯಲ್ಲಿ ಹಾಗೆ ತೀರಿ ಹೊದ್ದದ್ದು ನಿಜ ಎಂದು ಒಪ್ಪಿಕೊಳ್ಳಲು ಬ್ರಿಟಿಷ್ ಸೇನೆಗೆ ಸಮಯ ಹಿಡಿದಿತ್ತು. ಮಹಾರಾಜರುಗಳು ಬ್ರಿಟಿಷ್ ರ ಅಧೀನ ಅರಸರಾಗಿ ಕಪ್ಪ ಕೊಟ್ಟುಕೊಂಡು ಸಿಂಹಾಸನ ಉಳಿಸಿಕೊಳ್ಳುವ ಕಾಲದಲ್ಲಿ ಟಿಪ್ಪು ಹಾಗೆ ಯುದ್ಧ ಬಯಲಲ್ಲಿ ಕತ್ತಿ ಹಿಡಿದು ಹೋರಾಡಿ ಮರಣ ಹೊಂದಿದ್ದು ಒಂದು ಚರಿತ್ರೆಯಾಗಿ ಅಂದಿಗೂ ಇಂದಿಗೂ ಉಳಿದಿದೆ.
ಟಿಪ್ಪುವಿನ ಬೆನ್ನಿಗೆ ಇರಿದು ಬ್ರಿಟಿಷ್ ಜತೆ ಒಳ ಒಪ್ಪಂದ ಮಾಡಿಕೊಂಡು 1799 ರ ನಾಲ್ಕನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಸೇನೆಯ ರಹಸ್ಯ ಮತ್ತು ಫಿರಂಗಿಗಳಿಗೆ ಎಣ್ಣೆ ಸುರಿದ ಬಸಪ್ಪಶೆಟ್ಟಿ ಮತ್ತು ಮೀರ್ ಸಾಧಿಕ್ ಹೆಸರು ಇಂದಿಗೂ ಮೈಸೂರು ಪ್ರಾಂತ್ಯದಲ್ಲಿ ವ್ಯರ್ಜ್ಯ. ಮಕ್ಕಳಿಗೆ ಈ ಹೆಸರು ಇಂದಿಗೂ ಇಡುವುದಿಲ್ಲ. ಇದು ನೆಲವೊಂದು ಜನಾನುರಾಗಿ ಅರಸನನ್ನು ನೋಡುವ ನೆನೆಯುವ ಪರಿ. ಹೆಂಗಸರು ಲಾವಣಿ ಕಟ್ಟಿ ನೆಲ ಬಿತ್ತುವಾಗ ಉತ್ತುವಾಗ ಹೀಗೆ ಹಾಡುತ್ತಾರೆ. ಅನ್ಯಾಯ ಖಂಡಿಸುವ ಈ ಬಗೆಯೇ ಇದಕ್ಕೆ ಸಾಕ್ಷಿ.
ಬಸಪ್ಪ ಶೆಟ್ಟಿ ಮೀರ್ ಸಾಧಿಕ್
ಮಸಲತ್ತು ಮಾಡ್ಯಾರ
ನಡು ರಾತ್ರಿಲಿ ಫಿರಂಗಿಗೆಲ್ಲ
ಎಣ್ಣೆ ಸುರಿದಾರ
ದಂಡಿಗೆ ಸಂಚು ಹೂಡಿ
ತಾಯ್ಗಂಡರು ಮಸಲತ್ತು ಮಾಡ್ಯಾರೋ
ಟಿಪ್ಪು ನೀ ನೆಲದ ಸರದಾರ
ಹುತಾತ್ಮ ನಿನ್ನ ಸ್ಮರಿಸುವೆವಯ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

-
ದಿನದ ಸುದ್ದಿ4 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ4 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ4 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ4 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ4 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ4 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ4 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ4 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್


