Connect with us

ಲೈಫ್ ಸ್ಟೈಲ್

ದೂರವಿರಲಿ ಗೋಮಾತೆ ಕೆಚ್ಚಲು ಬಾವೆಂಬ ಮಹಾಕಿಚ್ಚಿಂದ..!

Published

on

  • ಡಾ.ಎನ್.ಬಿ.ಶ್ರೀಧರ, ಶಿವಮೊಗ್ಗ

ಚನಕಾರರ ನುಡಿಯಂತೆ “ಮನದೊಳಗಿನ ಕಿಚ್ಚು ತನ್ನ ಮನೆಯ ಸುಡದಲ್ಲದೇ ನೆರೆ ಮನೆಯ ಸುಡದು” ಆದರೆ ಕೆಚ್ಚಲ ಬಾವಿನಿಂದ ಆ ರಾಸಿನ ಕೆಚ್ಚಲು ಮಾತ್ರವಲ್ಲದೇ ಹೈನುಗಾರನ ಜೀವನವನ್ನು ಬುಡಮೇಲು ಮಾಡಬಹುದು.

ಹೈನುಗಾರರಿಗೆ ವೈದ್ಯರನ್ನು ಅತಿ ತುರ್ತಾಗಿ ಕರೆಯುವ ಕೆಲವು ಸಂದರ್ಭಗಳಿರುತ್ತವೆ. ಅವುಗಳಲ್ಲಿ ಕಷ್ಟಕರ ಹೆರಿಗೆ, ತೀವ್ರರೀತಿಯ ಹೊಟ್ಟೆ ಉಬ್ಬರ, ವಿಷಪ್ರಾಶನ, ಬೆಂಕಿ ಅನಾಹುತ, ರಸ್ತೆ ಅಪಘಾತ ಇತ್ಯಾದಿ. ಈ ಪಟ್ಟಿಗೆ ಕೆಚ್ಚಲು ಬಾವು ಕೂಡಾ ಸೇರುತ್ತದೆ!!. ಕೆಚ್ಚಲು ಬಾವು ಬಂದಿರುವುದನ್ನು ಕಂಡುಕೊಳ್ಳುವುದು ತುಂಬಾ ಸುಲಭ.

ಕೆಚ್ಚಲನ್ನು ನೋಡಿದರೆ ಸಾಕು ಹೇಳಿಬಿಡಬಹುದು. ಆದರೆ ಚಿಕಿತ್ಸೆ ಅಷ್ಟೇ ಕ್ಲಿಷ್ಟ. “ಪ್ರಾರಂಭಿಕ ಹಂತದಲ್ಲಿ ಕೂಡಲೇ ಸೂಕ್ತ ಚಿಕಿತ್ಸೆ ನೀಡಿದರೆ ಮಾತ್ರ ಗುಣವಾಗುವ ಸಾಧ್ಯತೆ ಇದೆ” ಎನ್ನತ್ತಾರೆ ಬಹುತೇಕ ತಜ್ಞರು. ಒಂದು ಸಲ ಕೆಚ್ಚಲು ಗಟ್ಟಿಯಾದರೆ ಅದನ್ನು ಸರಿ ಪಡಿಸುವುದು ಅಸಾಧ್ಯ.

ಹಾಲು ಕೊಡುವ ಹಸುವಿನ ಕೆಚ್ಚಲಿನ ಉರಿಯೂತವೇ ಕೆಚ್ಚಲುಬಾವು. ಇದರಲ್ಲಿ ಒಂದು ಅಥವಾ ಹೆಚ್ಚು ಮೊಲೆಗಳು ಕಾಯಿಲೆಗೆ ಒಳಗಾಗಬಹುದು. ಅನೇಕ ಜಾತಿಯ ಸೂಕ್ಷ್ಮಾಣು ಜೀವಿಗಳಿಂದ ಈ ರೋಗವು ದನ ಮತ್ತು ಎಮ್ಮೆ ಆಡುಗಳಲ್ಲಿ ಕಂಡುಬ೦ದರೂ ಹೆಚ್ಚು ಹಾಲು ಕೊಡುವ ಮಿಶ್ರತಳಿ ಹಸುಗಳಲ್ಲಿ ಇದರ ತೀವ್ರತೆ ಹೆಚ್ಚು.

ಕೆಚ್ಚಲು ಬಾವು ಬರಲು ಕಾರಣಗಳೇನು?

ಸದಾ ಗಲೀಜಿನಿಂದ ಕೂಡಿದ ಕೊಟ್ಟಿಗೆ, ಹಾಲು ಕರೆಯುವ ಪಾತ್ರೆಗಳು, ಹಾಲು ಕರೆಯುವ ವ್ಯಕ್ತಿ ಮೂಲಕ ರೋಗ ಹರಡುತ್ತದೆ. ರೋಗದಿಂದ ನರಳುತ್ತಿರುವ ರಾಸುಗಳು, ಮೊಲೆ ತೊಟ್ಟುಗಳ ಗಾಯ, ಕಲುಷಿತ ಹಾಲು ಕರೆಯುವ ಯಂತ್ರ ಇವೆಲ್ಲ ರೋಗಾಣುಗಳ ಮೂಲಗಳು.

ರೋಗಾಣುಗಳು ಮೊಲೆ ತೊಟ್ಟುಗಳ ಮೂಲಕ ಕೆಚ್ಚಲಿನೊಳಗೆ ಪ್ರವೇಶ ಪಡೆದು ತೀವ್ರಗತಿಯಲ್ಲಿ ಅಲ್ಲಿಯೇ ವೃದ್ಧಿ ಹೊಂದಿ ಹಾಲು ಉತ್ಪಾದಿಸುವ ಗ್ರಂಥಿಗಳನ್ನು ಹಾಳು ಮಾಡುತ್ತವೆ. ಹಾಲು ಅಮೃತಕ್ಕೆ ಸಮಾನ ಎಂದು ಹೇಳುತ್ತೇವೆ, ಹಾಲು ಇಷ್ಟಪಡದ ವ್ಯಕ್ತಿಗಳು ವಿರಳ. ಅದರಂತೆ ಸೂಕ್ಷ್ಮಾಣು ಜೀವಿಗಳು ಸಹಾ ಕೆಚ್ಚಲಿನ ಹಾಲಿನ ಮಾಧ್ಯಮವನ್ನು ಬಳಸಿಕೊಂಡು ತೀವೃಗತಿಯಲ್ಲಿ ಬೆಳೆಯುತ್ತವೆ. ಇದರಿಂದಾಗಿ ಬಾವು ಕಾಣಿಸಿಕೊಳ್ಳುತ್ತದೆ. ಇದೇ ಕೆಚ್ಚಲು ಬಾವು.

ಲಕ್ಷಣಗಳಾವುವು?

ಅತಿ ತೀವ್ರತರದ ಕೆಚ್ಚಲುಬಾವು ಉಂಟಾದರೆ ಕೆಲವೇ ಗಂಟೆಗಳಲ್ಲಿ ಕೆಚ್ಚಲು ಊದಿಕೊಂಡು ಕೆಂಪಾಗುತ್ತದೆ. ತೀವ್ರ ಜ್ವರ, ಮೇವು ನೀರು ಬಿಡುವುದು, ಕೆಚ್ಚಲು ಮುಟ್ಟಿದರೆ ನೋವಿನಿಂದ ಕಾಲು ಎತ್ತುವುದು ಅಥವಾ ಕಾಲು ಜಾಡಿಸುವುದು ಇತ್ಯಾದಿ ಪ್ರಮುಖ ಲಕ್ಷಣಗಳು. ಹಿಂಡಿದರೆ ನೀರಿನಂತಹ ದ್ರವ ಅಥವಾ ಮೊಸರಿನಂಥ ಹಾಲು ಬರುತ್ತದೆ.

ಒಟ್ಟಾರೆ ಹಾಲಿನ ಪ್ರಮಾಣ ಬಹಳ ಕಡಿಮೆ ಇರುವುದು. ಅತ್ಯಂತ ಶೀಘ್ರದಲ್ಲಿ ಸೂಕ್ತ ಚಿಕಿತ್ಸೆ ದೊರೆಯದಿದ್ದರೆ ಆ ಭಾಗದ ಕೆಚ್ಚಲು ಗಟ್ಟಿಯಾಗಬಹುದು. ಒಮ್ಮೊಮ್ಮೆ ರೋಗಕಾರಕ ಬ್ಯಾಕ್ಟೀರಿಯಾಗಳು ಉತ್ಪಾದಿಸಿದ ವಿಷದ ನಂಜು ರಕ್ತಕ್ಕೆ ಸೇರಿ ಹಸು ಸಾವಿಗೀಡಾಗಲೂಬಹುದು.

ಕೆಲವೊಮ್ಮೆ ಹಿಂಡಿದೊಡನೆ ರಕ್ತ ಮಿಶ್ರಿತ ಹಾಲು ಕರೆಯುತ್ತವೆ. ಇದಕ್ಕೆ ಹಾಲು ಕರೆಯುವ ಮೊಲೆಗಳನ್ನು ಅತೀಯಾಗಿ ಜಗ್ಗುವುದು, ಅಥವಾ ರಾಸುಗಳು ಮಲಗಿದಾಗ ದೇಹದ ಒತ್ತಡ ಕೆಚ್ಚಲಿನ ರಕ್ತ ನಾಳಗಳ ಮೇಲೆ ಬಿದ್ದಾಗ ರಕ್ತ ನಾಳಗಳು ಒಡೆದು ಹಾಲಿನಲ್ಲಿ ರಕ್ತ ಬರುತ್ತದೆ.

“ಕರುಹಾಕಿದ ಪ್ರಾರಂಭದಲ್ಲಿ ಕೆಲವೊಮ್ಮೆ ದೇಹದಲ್ಲಿ ಆಗುವ ಹಾರ‍್ಮೋನುಗಳ ವ್ಯತ್ಯಾಸದಿಂದ ಕೆಚ್ಚಲಿನ ರಕ್ತನಾಳಗಳು ಒಡೆದು ಹಾಲಿನಲ್ಲಿ ರಕ್ತ ಕಾಣಿಸಿಕೊಳ್ಳುತ್ತದೆ. ಇದು ಸಹಜ ಕ್ರಿಯೆಯಾಗಿದ್ದು ನಾಲ್ಕೈದು ದಿನಗಳಲ್ಲಿ ಸರಿಯಾಗುತ್ತದೆ. ಆಗದಿದ್ದರೆ ತಜ್ಞ ಪಶುವೈದ್ಯರನ್ನು ಕರೆದು ಚಿಕಿತ್ಸೆ ಕೊಡಿಸಬೇಕು.

ಚಿಕಿತ್ಸೆ ಏನು? ಹೇಗೆ?

ಕೆಚ್ಚಲು ಬಾವಿನ ಲಕ್ಷಣಗಳು ಕಂಡು ಬಂದರೆ ಕೂಡಲೇ ತಜ್ಞ ಪಶುವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಕೊಡಿಸುವುದು ಅತ್ಯಗತ್ಯ. ‘‘ಸಲೀಸಾಗಿ ಹಾಲು ಕೊಡುವ ಹಸುಗಳು ಹಾಲು ಕರೆಯುವಾಗ ನೋವಿನಿಂದ ಕಾಲು ಎತ್ತಿದರೆ, ಹಾಲಿನ ಬಣ್ಣ ಬದಲಾದರೆ ತಡಮಾಡುವುದಿಲ್ಲ.

ಸಂಪೂರ್ಣ ಹಾಲು ಕರೆದು ನಮ್ಮ ಮನೆಯಲ್ಲಿಯೇ ಇಟ್ಟುಕೊಂಡ ಮಲೆಗೇರಿಸುವ ಟ್ಯೂಬ್ ಏರಿಸಿ, ತಕ್ಷಣ ಪಶುವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಕೊಡಿಸುತ್ತೇವೆ. ಹಾಗಾಗಿ ಕೆಚ್ಚಲು ಬಾವು ಬೇಗ ವಾಸಿಯಾಗುತ್ತದೆ’’ ಎನ್ನುತ್ತಾರೆ 20 ವರ್ಷಗಳಿಂದ ಹೈನುಗಾರಿಕೆಯಲ್ಲಿ ತೊಡಗಿದ ಸೈದೂರಿನ ದಯಾನಂದರವರು.

ಈ ಕಾಯಿಲೆ ತಡೆಯುವ ಬಗೆ ಹೇಗೆ?

ಕೊಟ್ಟಿಗೆಯ ಸ್ವಚ್ಛತೆ, ಹಾಲು ಕರೆಯುವರ ಸ್ವಚ್ಚತೆ ಹಾಗೂ ಹಾಲುಕರೆಯುವ ಪಾತ್ರೆಗಳ ಸ್ವಚ್ಚತೆ ಕಾಪಾಡಿಕೊಳ್ಳುವುದು ಬಹು ಮುಖ್ಯ. ನಿಗಧಿಪಡಿಸಿದ ಕಾಲಕ್ಕೆ ಹಾಲು ಕರೆಯುವುದು ಹಾಗೂ ಕೊಟ್ಟಿಗೆ ಹಸಿ ಇರದಂತೆ ನೋಡಿಕೊಳ್ಳವುದು ಸಹ ಅಷ್ಟೇ ಮುಖ್ಯ.

“ನಾವು ಕೊಟ್ಟಿಗೆ ನೆಲ ಸ್ವಚ್ಚಗೊಳಿಸಲು ಹಾಗೂ ರಾಸುಗಳ ಮೈತೊಳೆಯಲು ಪ್ರೆಶರ್ ಪಂಪ ಬಳಸುತ್ತೇವೆ. ಹಾಗಾಗಿ ನಾಲ್ಕೈದು ವರ್ಷಗಳಿಂದ ನಮ್ಮ ರಾಸುಗಳಿಗೆ ಕೆಚ್ಚಲು ಬಾವು ಬಂದಿಲ್ಲ” ಎನ್ನುತ್ತಾರೆ ಹತ್ತಾರು ವರ್ಷಗಳಿಂದ ನೂರೆಂಟು ಹಸುಗಳನ್ನು ಸಾಕಿದ ಶಿರಸಿಯ ಶ್ರೀಮತಿ ವೇದಾವತಿ ಹೆಗಡೆಯವರು.

ಹಾಲು ಕರೆಯುವಾಗ ಉಗುರು ಬೆಚ್ಚಗಿನ ಶುದ್ಧ ನೀರಿನಲ್ಲಿ ಕೆಚ್ಚಲು ಹಾಗೂ ಮೊಲೆಗಳನ್ನು ತೊಳೆಯಬೇಕು. ಹಾಲು ಹಿಂಡಿದ ನಂತರ ಶುದ್ಧ ನೀರಿನಿಂದ ತೊಳೆದು ಕ್ರಿಮಿನಾಶಕ ಔಷಧಿಯಲ್ಲಿ ಮೊಲೆಗಳನ್ನು ಅದ್ದುವುದರಿಂದ ಕೆಚ್ಚಲು ಬಾವು ತಡೆಗಟ್ಟಬಹುದು. ಹಾಲು ಕರೆದಾದ ಒಂದರಿಂದರಿಂದ ಒಂದುವರೆ ಗಂಟೆಯ ಕಾಲ ಮೊಲೆತೊಟ್ಟುಗಳ ರಂದ್ರ ತೆರೆದಿರುತ್ತದೆ.

ಈ ಸಂದರ್ಭದಲ್ಲಿ ರಾಸುಗಳು ಮಲಗಿದರೆ ರೋಗಾಣುಗಳು ಮೊಲೆ ತೊಟ್ಟಗಳ ತೆರೆದ ರಂದ್ರಗಳ ಮೂಲಕ ಕೆಚ್ಚಲಿಗೆ ಪ್ರವೇಶ ಪಡೆಯುವುದರಿಂದ ಕೆಚ್ಚಲು ಬಾವು ಬರುತ್ತದೆ. ಕಾರಣ ರಾಸುಗಳು ತಕ್ಷಣ ಮಲಗದಂತೆ ತಡೆಯಲು ಹಾಲುಕರೆದ ನಂತರ ಮೇವು ಹಾಕುವುದು ಅಥವಾ ಓಡಾಡಲು ಕೊಟ್ಟಿಗೆಯ ಹೊರಗೆ ಬಿಡುವುದು ಒಳ್ಳೆಯದು.

ಮಶಿನಿನಿಂದ ಹಾಲು ಕರೆಯುವವರು ಇನ್ನೂ ಹುಶಾರಾಗಿರಬೇಕು, ಏಕೆಂದರೆ ಒಂದು ಹಸುವಿಗೆ ಬಂದ ಕೆಚ್ಚಲು ಬಾವು ಉಳಿದೆಲ್ಲಾ ಹಸುಗಳಿಗೆ ಹರಡುವ ಸಾಧ್ಯತೆ ಇದೆ ಎನ್ನುತ್ತಾರೆ ಶ್ರೀ ಸೀತಾರಾಮ ಹೆಗಡೆ, ನೀರ್ನಳ್ಳಿ, ಸಿರಸಿ.
ಮಂದ ಸ್ವರೂಪದ ಕೆಚ್ಚಲು ಬಾವನ್ನು ಪತ್ತೆ ಹಚ್ಚಿ ಅದಕ್ಕೆ ಚಿಕಿತ್ಸೆ ಮಾಡಿ ಅದು ಬರದಂತೆ ಚಿಕಿತ್ಸೆ ಮಾಡಿದರೆ ಅದರಿಂದ ತೀವ್ರ ಸ್ವರೂಪದ ಕೆಚ್ಚಲು ಬಾವು ಬರುವುದಿಲ್ಲ.

ಕೆಚ್ಚಲು ಬಾವು ಬಂದು ಕೆಚ್ಚಲು ಗಟ್ಟಿಯಾದ ನಂತರ ಚಿಕಿತ್ಸೆಗೆ ಓಡಾಡುವ ಬದಲು ಮಂದ ಸ್ವರೂಪದ ಕೆಚ್ಚಲು ಬಾವನ್ನು ಸರಳವಾದ “ಸರ್ಫ಼್ ಕೆಚ್ಚಲು ಬಾವು ಪರೀಕ್ಷೆ”ಯಿಂದ ಮೊದಲೇ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ಕೊಡಿಸುವುದು ಕೆಚ್ಚಲುಬಾವು ತಡೆಯುವಲ್ಲಿ ಒಂದು ಮಹತ್ತರ ಹೆಜ್ಜೆಯಾಗಬಲ್ಲದು.

ಏನಿದು ಸರ್ಫ಼್ ಕೆಚ್ಚಲು ಬಾವು ಪರೀಕ್ಷೆ?

ಈ ವಿಧಾನ ರೈತರೇ ಸುಲಭವಾಗಿ ಅವರ ಮನೆಯಲ್ಲೇ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ಮಂದ ಸ್ವರೂಪದ ಕೆಚ್ಚಲು ಬಾವನ್ನು ಪತ್ತೆ ಮಾಡಬಹುದು. ಅದಕ್ಕೆ ಬೇಕಾದ ಸಾಮಗ್ರಿಗಳು ಇಷ್ಟೆ. ರೂ: 2 ಕ್ಕೆ ಸಿಗುವ 12 ಗ್ರಾಂನ ಸರ್ಫ್ ಪೌಡರ್, 400 ಮಿಲಿ ನೀರು, ಒಂದು ಚಮಚ ಅಥವಾ ಪ್ಲಾಸ್ಟಿಕ್ ಬಾಟಲಿಯ ಮುಚ್ಚಳ. ಮತ್ತೇನೂ ಇಲ್ಲ. ಈ ಕೆಚ್ಚಲು ಬಾವು ಪತ್ತೆಯ ವಿಧಾನ ಬಹಳ ಸುಲಭ. ಸರ್ಫ್ ಕೆಚ್ಚಲು ಬಾವು ಪತ್ತೆ ವಿಧಾನ ಹೀಗಿದೆ;

1) ಮೊದಲು ಶೇ 3 ರ ಸರ್ಫ್ ದ್ರಾವಣ ತಯಾರಿಸಿಕೊಳ್ಳಬೇಕು. ಇದನ್ನು ತಯಾರಿಸುವುದೂ ಸುಲಭ. ಅರ್ಧ ಲೀಟರ್ ನೀರಿನ ಬಾಟಲಿ ತೆಗೆದುಕೊಂಡು ಅದರಲ್ಲಿ ನೂರು ಮಿಲಿ ನೀರು ತೆಗೆದರೆ 400 ಮಿಲಿ ಆಗುತ್ತದೆ. ಇದರಲ್ಲಿ ರೂ: 2 ಕ್ಕೆ ಸಿಗುವ 12 ಗ್ರಾಂ ನ ಸರ್ಫ್ ಪೌಡರ್ ಅನ್ನು ಮಿಶ್ರಣ ಮಾಡಬೇಕು. ಈ ದ್ರಾವಣವನ್ನು ಸುಮಾರು 100 ಆಕಳುಗಳ ಕೆಚ್ಚಲು ಬಾವು ಪರೀಕ್ಷೆ ಮಾಡಲು 3 ತಿಂಗಳವರೆಗೆ ಬಳಸಬಹುದು.

2) ಆಕಳಿನಿಂದ 10-15 ಮಿಲಿ ಹಾಲನ್ನು ಕರೆದು ಬಾಟಲಿಯ ಮುಚ್ಚಳ ಅಥವಾ ಅಗಲವಾದ ಚಮಚದಲ್ಲಿ ಅಥವಾ ಟೀ ಕಪ್‍ನಲ್ಲಿ ಹಾಕಿಕೊಳ್ಳಬೇಕು.

3) ಇದಕ್ಕೆ ಸಮ ಪ್ರಮಾಣದಲ್ಲಿ (10-15 ಮಿಲಿ) ಸರ್ಫ್ ದ್ರಾವಣವನ್ನು ಹಾಕಬೇಕು. ನಂತರ 10-15 ಸೆಕೆಂಡ್‍ವರೆಗೆ ನಿಧಾನವಾಗಿ ಮಿಶ್ರಣ ಮಾಡಬೇಕು.

4) ನಂತರ ಮಿಶ್ರಣ ಮಡ್ಡಿಯಾದರೆ ಅಥವಾ ಲೋಳೆಯ ತರವಾದರೆ ಆ ಕೆಚ್ಚಲಿಗೆ ಕೆಚ್ಚಲು ಬಾವು ಇದೆ ಎಂದು ಅರ್ಥ. ಇಲ್ಲದೇ ಇದು ತಿಳಿಯಾಗಿದ್ದರೆ ಕೆಚ್ಚಲು ಬಾವು ಇಲ್ಲ ಎಂದರ್ಥ.

5) ಈ ಸುಲಭವಾದ ಪದ್ದತಿಯಿಂದ ರೈತರು ಕೆಚ್ಚಲು ಬಾವನ್ನು ಸುಲಭವಾಗಿ ಪತ್ತೆ ಹಚ್ಚಿ ಚಿಕಿತ್ಸೆ ಕೊಡಿಸಬಹುದು.

ಲೇಖನವನ್ನು ಈ ಕೆಳಗಿನಂತೆ ಸರಳೀಕರಿಸಬಹುದು.

ಕೆಚ್ಚಲು ಬಾವು ಮಹಾ ಮಾರಿ. ಇದನ್ನು ಬರದಂತೆ ತಡೆಯುವುದು ಬಹಳ ಮುಖ್ಯ.ಬಂದ ನಂತರ ಚಿಕಿತ್ಸೆ ಬಹಳ ಕಷ್ಟ.ಗೋವು ಅತ್ಯಂತ ನೋವಿನ ದಿನಗಳಲ್ಲಿ ಕಳೆಯುತ್ತದೆ. ಕೆಚ್ಚಲು ಬಾವನ್ನು ಸರಿಯಾಗಿ ನಿರ್ವಹಿಸದೇ ಗೋವು ನೋವು ಅನುಭವಿಸಿದರೆ ಇದನ್ನು “ಗೋಹಿಂಸೆ” ಎನ್ನಬಹುದು. ಕಾರಣ ಇದರಲ್ಲಿ ರಾಜಿ ಬೇಡವೇ ಬೇಡ.

ಹಾಲು ಕರೆದು ಆದ ಕೂಡಲೇ ಆಕಳನ್ನು 1-2 ಗಂಟೆ ಮಲಗಲು ಬಿಡಲೇ ಬಾರದು. ಈ ಸಂದರ್ಭದಲ್ಲಿ ಮೊಲೆಯ ರಂದ್ರಗಳು ಮುಚ್ಚುತ್ತಾ ಇರುತ್ತವೆ. ಹಾಲು ಕರೆದ ತಕ್ಷಣ ಹಸುವಿನ ಗಮನವನ್ನು ಬೇರೆಡೆ ಸೆಳೆಯಲು ಅದಕ್ಕೆ ಹಿಂಡಿ ಹುಲ್ಲು ನೀಡುವ ಅಭ್ಯಾಸ ಮಾಡಿದರೆ ಅದು ಮಲಗಲಾರದು. ಇದು ರಾತ್ರಿ ಮತ್ತು ಹಗಲು ಎರಡೂ ಹೊತ್ತು ಸಾಧ್ಯ.

ಹಾಲು ನಂತರ ಹಿಂಡಿ ಹುಲ್ಲು ಹಾಕಿದ 2-3ಗಂಟೆ ನಂತರ ಜಾನುವಾರನ್ನು ಸ್ವಲ್ಪ ಹೊತ್ತು ಹೊರಗೆ ಓಡಾಡಲು ಬಿಡಲೇ ಬೇಕು. ಮಲೆನಾಡಿನ ಭಾಗದ ರೈತರು ದನ ಓಡಾಡಲು ಪ್ರತಿ ದನಕ್ಕೆ ಕನೀಷ್ಟ200 ಚದರ ಅಡಿ ಸ್ಥಳ ಹೊಂದಿಸಿಕೊಳ್ಳಲೇಬೇಕು. ಜಾನುವಾರು ಯಾವಾಗಲೂ ಓಡಾಡಿಕೊಂಡಿರುವ ಪ್ರಾಣಿ. ಅದೂ ಓಡಾಡಿ ಕೊಂಡಿರಲಿ. ಸ್ಥಳ ಇಲ್ಲ ಎಂಬ ಸಬೂಬು ಬೇಡ. ಸ್ಥಳ ಇಲ್ಲದಿದ್ದರೆ ಜಾನುವಾರು ಸಾಕಲು ಪ್ರಶಸ್ಥವಲ್ಲ ಎಂಬುದು ಅರಿಯಿರಿ.

ಕೊಟ್ಟಿಗೆಯಲ್ಲಿ ಸ್ವಚ್ಚತೆ ಕಾಪಾಡಿ. ರಬ್ಬರ್ ಮ್ಯಾಟ್ ಬಳಸಿ. ಹಾಲು ಕರೆದ ನಂತ ಪೊಟ್ಯಾಸಿಯಂ ಪರಮ್ಯಾಂಗನೇಟ್ ದ್ರಾವಣ,ಡೆಟ್ಟಾಲ್,ಲೈಫ಼್ ಬಾಯ್ ಅಥವಾ ಇನ್ಯಾವುದೇ ಕ್ರಿಮಿನಾಶಕದ ದ್ರಾವಣ ಬಳಸಿ ಕೆಚ್ಚಲುಗಳ ಸ್ವಚ್ಚತೆ ಕಾಪಾಡಿ.

ಆಕಳಿಗೆ ನಿಯಮಿತವಾಗಿ ಉತ್ತಮ ಗುಣಮಟ್ಟದ ಖನಿಜ ಮಿಶ್ರಣ, ಹಾಲಿನ ಇಳುವರಿಗೆ ಅನುಸಾರವಾಗಿ ಸಮತೋಲಿತ ಪಶುಅಹಾರ, ನೀಡಿ.

ಪ್ರತಿ15ದಿನಕ್ಕೊಮ್ಮೆ ಸುಲಭವಾದ “ಸರ್ಫ಼್ ಕೆಚ್ಚಲು ಬಾವು ಪರೀಕ್ಷೆ” ಯನ್ನು ಮಾಡಿ,ಮಂದ ಸ್ವರೂಪದ ಕೆಚ್ಚಲು ಬಾವು ಪತ್ತೆಯಾದರೆ ಅದನ್ನು ತಜ್ಞ ಪಶುವೈದ್ಯರಿಂದ ಚಿಕಿತ್ಸೆ ಮಾಡಿಸಿ.
ಹೀಗಿದ್ದಲ್ಲಿ ಮಾತ್ರ ಕೆಚ್ಚಲು ಬಾವೆಂಬ ಮಹಾಮಾರಿಯಿಂದ ಹೈನುರಾಸುಗಳನ್ನು ಬಚಾವು ಮಾಡಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending