ದಿನದ ಸುದ್ದಿ
ಕೇಂದ್ರ ಬಜೆಟ್ | ಕೆಲವು ಕುತೂಹಲಕರ ಅಂಕಿಅಂಶಗಳು ಮತ್ತು ನಮ್ಮ ದೇಶದ ರಿಪೋರ್ಟ್ ಕಾರ್ಡ್..!
- ವಿವೇಕಾನಂದ. ಹೆಚ್. ಕೆ
ಇದು ಪಕ್ಷಾತೀವಾಗಿ ದೇಶದ ವಾಸ್ತವ ಪರಿಸ್ಥಿತಿ.
ಭಾರತ ಸರ್ಕಾರದ ಬಳಿ ಇರುವ ಚಿನ್ನದ ಸಂಗ್ರಹ ಸುಮಾರು 600 ಟನ್.ಅಮೆರಿಕ ಸರ್ಕಾರದ ಬಳಿ ಇರುವ ಚಿನ್ನದ ಸಂಗ್ರಹ ಸುಮಾರು 6000 ಟನ್.
ಭಾರತ ಇಲ್ಲಿಯವರೆಗೆ ಒಲಿಂಪಿಕ್ಸ್ ಕ್ರೀಡೆಗಳಲ್ಲಿ ಗೆದ್ದ ಒಟ್ಟು ಪದಕಗಳು ಸುಮಾರು 28.ಅಮೆರಿಕ ಗೆದ್ದ ಒಟ್ಟು ಪದಕಗಳು ಸುಮಾರು 2250.
ಭಾರತದ ಒಟ್ಟು ಬಜೆಟ್ ಗಾತ್ರ ಸುಮಾರು 30 ಲಕ್ಷ ಕೋಟಿ.ಅಮೆರಿಕದ ಬಜೆಟ್ ಗಾತ್ರ ಸುಮಾರು 375 ಲಕ್ಷ ಕೋಟಿ.ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆ ಚೀನಾದ ಬಜೆಟ್ ಸುಮಾರು 100 ಲಕ್ಷ ಕೋಟಿ.ಅಮೆರಿಕದ ರಕ್ಷಣಾ ಬಜೆಟ್ ಸುಮಾರು 150 ಲಕ್ಷ ಕೋಟಿ.ಭಾರತದ ರಕ್ಷಣಾ ಬಜೆಟ್ ಸುಮಾರು 6/8 ಲಕ್ಷ ಕೋಟಿ.
ಭಾರತದ ಜನಸಂಖ್ಯೆ ಸುಮಾರು 128 ಕೋಟಿ.
ಅಮೆರಿಕದ ಜನಸಂಖ್ಯೆ ಸುಮಾರು 32 ಕೋಟಿ.
ವಿಸ್ತೀರ್ಣದಲ್ಲಿಯೂ ಅಮೆರಿಕ ಭಾರತಕ್ಕಿಂತ ಬಹಳ ದೊಡ್ಡದಾಗಿದೆ.ತಲಾ ಆದಾಯದ ವ್ಯತ್ಯಾಸವಂತೂ ಅಜಗಜಾಂತರವಿದೆ.ಭಾರತದ ನಿಜವಾದ ಆದಾಯ 22 ಲಕ್ಷ ಕೋಟಿಗಳು ಮಾತ್ರ. ಉಳಿದ 8 ಲಕ್ಷ ಸಾಲ ಮತ್ತು ಇತರ ಮೂಲಗಳು.ಅಂದರೆ ನಮ್ಮ ಈಗಿನ ಸ್ಥಿತಿ ಮತ್ತು ಸಾಗಬೇಕಾದ ಹಾದಿಯ ಒಂದು ಕಲ್ಪನೆ ಮಾಡಿಕೊಳ್ಳಿ.
ಇಲ್ಲಿ ಇನ್ನೂ ಒಂದು ಮುಖ್ಯ ವಿಷಯವಿದೆ. ಅಮೆರಿಕ ಬಜೆಟ್ ನ ಬಹುಪಾಲು ಸದುಪಯೋಗವಾಗುತ್ತದೆ. ಆದರೆ ನಮ್ಮ ದೇಶದಲ್ಲಿ ಭ್ರಷ್ಟಾಚಾರ ತುಂಬಾ ಇರುವುದರಿಂದ ಇರುವ ಹಣದ ಬಹುಪಾಲು ದುರುಪಯೋಗವಾಗುತ್ತದೆ ಅಥವಾ ವ್ಯರ್ಥವಾಗುತ್ತದೆ. ಇದು ಮತ್ತೊಂದು ಹೊಡೆತ.
ಬಜೆಟ್ ಗಳು ಮತ್ತು ನಮ್ಮ ದೇಶದ ಅಭಿವೃದ್ಧಿ
ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಸ್ವಾತಂತ್ರ್ಯ ನಂತರ ಇಲ್ಲಿಯವರೆಗೂ ಸುಮಾರು 70 ಕ್ಕಿಂತ ಹೆಚ್ಚು ವಾರ್ಷಿಕ ಬಜೆಟ್ ಗಳನ್ನು ಮಂಡಿಸಿವೆ. ಪಂಚವಾರ್ಷಿಕ ಯೋಜನೆಗಳು ಮತ್ತು ಅದನ್ನು ಮೇಲ್ವಿಚಾರಣೆ ಮಾಡುವ ನೀತಿ ಆಯೋಗ ಸಹ ಇದೆ. ಅಪಾರ ಪ್ರಮಾಣದ ಎಲ್ಲಾ ದರ್ಜೆಯ ಆಡಳಿತ ಯಂತ್ರ ಸಹ ಕೆಲಸ ಮಾಡುತ್ತಲೇ ಇದೆ.
ಯಾವ ಸರ್ಕಾರಗಳು ಸಹ ಸಾಮಾನ್ಯವಾಗಿ ಜನರಿಗೆ ತೊಂದರೆ ಕೊಡುವ ಅಥವಾ ಜನರನ್ನು ನಾಶ ಮಾಡುವ ಯೋಜನೆಗಳನ್ನು ರೂಪಿಸುವುದಿಲ್ಲ. ಬಹಳ ಜನರಿಗೆ ಒಳ್ಳೆಯದಾಗಲಿ ಎಂಬ ಆಶಯವನ್ನೇ ಹೊಂದಿರುತ್ತವೆ.
1950 ಮತ್ತು 2020 ರ ನಡುವೆ ಭಾರತದ ಅಭಿವೃದ್ಧಿ ಸುಮಾರಾಗಿ ಆಗಿದೆ. ವಿಶ್ವ ಸಮುದಾಯ ಕೂಡಾ ತಂತ್ರಜ್ಞಾನದ ಸಹಾಯದಿಂದ ಪ್ರಗತಿಯ ಪಥದಲ್ಲಿದೆ.
ಭಾರತದ ಮಟ್ಟಿಗೆ ಅಭಿವೃದ್ಧಿ ಸಮಾನಾಂತರವಾಗಿಲ್ಲ ಮತ್ತು ಸಮಾಧಾನಕರವಾಗಿಲ್ಲ. ದೇಶದ ಶೇಕಡಾ 50% ಗೂ ಹೆಚ್ಚು ಜನ ತಾವು ಇಷ್ಟಪಟ್ಟ ದೈನಂದಿನ ಊಟ ಬಟ್ಟೆ ವಾಸ ಮಕ್ಕಳ ಯೋಗಕ್ಷೇಮ ಮತ್ತು ಸಾಧಾರಣ ಆರೋಗ್ಯ ವ್ಯವಸ್ಥೆ ಮಾಡಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ.
ಇದನ್ನು ನಾವು ಪಕ್ಷಾತೀತವಾಗಿ ಮತ್ತು ನಿಷ್ಪಕ್ಷಪಾತವಾಗಿ ಭಾರತದ ನಿಜವಾದ ಹಿತಾಸಕ್ತಿಯಿಂದ ನೋಡಬೇಕು. ಯಾವುದೋ ಪಕ್ಷದ ವಕ್ತಾರರಂತೆ ಒಬ್ಬರಿಗೊಬ್ಬರು ಆಪಾದನೆ ಮಾಡುತ್ತಾ ಕೆಸರೆರಚಾಟ ಮಾಡಿದರೆ ಸತ್ಯ ಮತ್ತು ವಾಸ್ತವ ಮರೆಯಾಗಿ ಕೇವಲ ಒಣ ಚರ್ಚೆ ಮತ್ತು ಅಂಕಿಅಂಶಗಳು ಮಹತ್ವ ಪಡೆಯುತ್ತವೆ.
ಸರ್ಕಾರ ಘೋಷಿಸುವ ಯಾವುದೇ ಯೋಜನೆಗಳು ಜಾರಿಯಾಗುವುದು ನಮ್ಮ ಸರ್ಕಾರಿ ಆಡಳಿತ ಯಂತ್ರದ ಮುಖಾಂತರ. ಅದು ಈಗಾಗಲೇ ಕಿಲುಬು ಹಿಡಿದಿದೆ. ಅದನ್ನು ಸರಿ ಮಾಡದೆ ಯಾವ ಯೋಜನೆ ಘೋಷಿಸಿದರು ಸಂಪೂರ್ಣ ಉಪಯೋಗ ಆಗುವುದಿಲ್ಲ. ಅದನ್ನು ಸರಿ ದಾರಿಗೆ ತರಲು ರಾಜಕಾರಣಿಗಳು ಹೆಚ್ಚಿನ ಮಹತ್ವ ನೀಡುತ್ತಿಲ್ಲ.
ಇಲ್ಲಿ ಇನ್ನೊಂದು ಆಶ್ಚರ್ಯಕರ ವಿಷಯವಿದೆ. ಆದಾಯ ತೆರಿಗೆ ವಿನಾಯಿತಿ, ವಸ್ತು ಮತ್ತು ಸೇವೆಗಳ ತೆರಿಗೆ ಹೆಚ್ಚಳ, ಸರ್ಕಾರಿ ನೌಕರರ ಸಂಬಳ ಹೆಚ್ಚಳ ಇನ್ನೂ ಮುಂತಾದ ಯೋಜನೆಗಳು ಚಾಚೂ ತಪ್ಪದೆ ಅಥವಾ ಅದಕ್ಕಿಂತ ಹೆಚ್ಚಾಗಿಯೇ ಸಂಪೂರ್ಣ ಜಾರಿಯಾಗುತ್ತದೆ. ಕಾರಣ ಈ ಯೋಜನೆಗಳು ಈಗಾಗಲೇ ವಿದ್ಯಾವಂತರಾಗಿರುವ ಮತ್ತು ವ್ಯವಸ್ಥೆಯ ಮೇಲೆ ನಿಯಂತ್ರಣ ಹೊಂದಿರುವ ಜನಗಳು ಇವುಗಳನ್ನು ಸ್ವತಃ ಅಥವಾ ಮಧ್ಯವರ್ತಿಗಳ ಮುಖಾಂತರ ಜಾರಿಯಾದ ಮಧ್ಯರಾತ್ರಿಯಿಂದಲೇ ಲಾಭ ಪಡೆದುಕೊಳ್ಳುತ್ತಾರೆ.
ಆದರೆ, ಇನ್ನೂ ಕೆಲವು ಯೋಜನೆಗಳು ಇವೆ. ಉದಾಹರಣೆಗೆ ಗರೀಬೀ ಹಠವೋ, ನರೇಗಾ, ಆಹಾರ ಭದ್ರತೆ, ಬೇಟಿ ಬಚಾವೋ ಬೇಟಿ ಪಡಾವೋ , ಸ್ವಚ್ಛ ಭಾರತ್, ಆಯುಷ್ಮಾನ್ ಮುಂತಾದ ಯೋಜನೆಗಳು ಅದರ ನಿಜ ರೂಪದಲ್ಲಿ ಜನರಿಗೆ ತಲುಪುವುದು ತುಂಬಾ ಕಷ್ಟವಿದೆ.
ಜನರಲ್ಲಿ ಇರುವ ಅಜ್ಞಾನ ಬಡತನ ದಾಖಲೆ ಮತ್ತು ಮಾಹಿತಿಯ ಕೊರತೆ, ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತ, ರಾಜಕಾರಣಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷತನ ಮತ್ತು ಸೋಮಾರಿತನ, ಅಸೂಯೆ ಮುಂತಾದ ಕಾರಣಗಳು ಇವುಗಳನ್ನು ಜಾರಿಯಾಗಲು ಬಿಡುವುದಿಲ್ಲ.
ಪಾರ್ಲಿಮೆಂಟ್ ಅಥವಾ ವಿಧಾನಸೌದದಲ್ಲಿ ಅಂಕಿಅಂಶಗಳ ಸರ್ಕಸ್ ಮಾಡುತ್ತಾ ಬಜೆಟ್ ಮಂಡಿಸುವುದು ಮತ್ತು ಅದರ ಪರ ವಿರೋಧದ ಚರ್ಚೆಗಳಿಗಿಂತ,ಅದರ ಅನುಷ್ಠಾನ ಮತ್ತು ವಾಸ್ತವ ಫಲಿತಾಂಶಗಳ ಬಗ್ಗೆ ಹೆಚ್ಚಿನ ಗಮನ ಹರಿಸಿದರೆ ನಿಜವಾದ ಮತ್ತು ಸಮಾನವಾದ ಅಭಿವೃದ್ಧಿ ಸಾಧ್ಯ. ಇಲ್ಲದಿದ್ದರೆ ಪ್ರತಿ ಸರ್ಕಾರಗಳ ಪ್ರತಿ ಬಜೆಟ್ ಕೇವಲ ಸಾಂಕೇತಿಕ ಶಾಸ್ತ್ರವಾಗುತ್ತದೆ. ಚುನಾವಣಾ ರಾಜಕೀಯದ ನಾಟಕಗಳಾಗುತ್ತವೆ. ಇದು ಎಲ್ಲಾ ಪಕ್ಷಗಳ ಎಲ್ಲಾ ಸರ್ಕಾರಗಳಿಗೂ ಸಮನಾಗಿ ಅನ್ವಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

