Connect with us

ರಾಜಕೀಯ

ಉತ್ತರ ಪ್ರದೇಶ ಚುನಾವಣಾ ಫಲಿತಾಂಶ ಕುರಿತ ವಾಸ್ತವ ನೆಲೆಯ ವಿಶ್ಲೇಷಣೆ

Published

on


ದೀರ್ಘಕಾಲಿಕ ರಾಜಕೀಯ ವಿದ್ಯಮಾನದ ಅನಾವರಣ

ಹಿಂದೂ ಬಹುಸಂಖ್ಯಾವಾದಕ್ಕೆ ರಾಜಕೀಯ ಭೂಮಿಕೆಯಾಗಿ ಉತ್ತರಪ್ರದೇಶ ಸಿದ್ಧ


  • ಮೂಲ : ಅಸೀಮ್‌ ಅಲಿ (ದ ಹಿಂದೂ 11 ಮಾರ್ಚ್‌ 22), ಅನುವಾದ : ನಾ ದಿವಾಕರ

ತ್ತರಪ್ರದೇಶ ಒಂದು ಹೊಸ ರಾಜಕೀಯ ಶಕೆಯನ್ನು ಪ್ರವೇಶಿಸಿದೆ. ಮೂರನೆ ಎರಡರಷ್ಟು ಬಹುಮತ ಪಡೆಯುವ ಮೂಲಕ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, ಕಳೆದ ಮೂರು ದಶಕಗಳಲ್ಲಿ ಮರಳಿ ಅಧಿಕಾರ ಪಡೆದ ಪ್ರಪ್ರಥಮ ಪಕ್ಷವಾಗಿ ಹೊರಹೊಮ್ಮಿದೆ. ತನ್ನ ಮುಸ್ಲಿಂ-ಯಾದವ ಮತಬ್ಯಾಂಕನ್ನು ದಾಟಿ ತನ್ನದೇ ಆದ ಮತದಾರ ವಲಯವನ್ನು ಸೃಷ್ಟಿಸಿಕೊಳ್ಳುವ ಸಮಾಜವಾದಿ ಪಕ್ಷದ ಪ್ರಯತ್ನ ವಿಫಲವಾಗಿದೆ. ಕಾಂಗ್ರೆಸ್ ಮತ್ತು ಬಹುಜನ ಸಮಾಜ ಪಕ್ಷ ಸಂಪೂರ್ಣ ಅವನತಿಯತ್ತ ಸಾಗಿವೆ.

ಪ್ರಧಾನ ನಿರೂಪಣೆಯ ಜನಾದೇಶ

ಬಿಜೆಪಿ ಗಳಿಸಿರುವ ಸ್ಥಾನಗಳ ಸಂಖ್ಯೆ ನಿರೀಕ್ಷೆಯನ್ನು ಮೀರಿದ್ದರೂ ಪಕ್ಷದ ಗೆಲುವು ಅನಿರೀಕ್ಷಿತವೇನೂ ಆಗಿರಲಿಲ್ಲ. ಯಾವುದೇ ಅಲೆಯ ಪ್ರಭಾವ ಇಲ್ಲದೆಯೇ ಈ ಚುನಾವಣೆಗಳು ನಡೆದಿದ್ದವು. ಮಾಧ್ಯಮಗಳ ಚುನಾವಣಾ ವರದಿಗಳಲ್ಲೂ ಸಹ ಆಡಳಿತ ವಿರೋಧಿ ಧೋರಣೆಯಾಗಲೀ, ಸರ್ಕಾರದ ಪರವಾದ ಧೋರಣೆಯಾಗಲೀ ಕಂಡುಬಂದಿರಲಿಲ್ಲ. ಆದರೂ ಬಿಜೆಪಿ ಸಾಧಿಸಿರುವ ಅಭೂತಪೂರ್ವ ಗೆಲುವಿಗೆ ಕಾರಣಗಳೇನು ಎನ್ನುವುದು ಚರ್ಚೆಗೊಳಗಾಗಬೇಕಿದೆ.

ಯಾವುದೇ ರಾಜಕೀಯ ಜನಾದೇಶವನ್ನು ಆಳಕ್ಕಿಳಿದು ವಿಸಂಕೇತಿಸುವುದು ಸಂಕೀರ್ಣವಾದ ಕೆಲಸ. ಒಂದು ಕೆಲವು ರಾಜಕೀಯ ತಜ್ಞರು ಈ ಚುನಾವಣೆಗಳ ಫಲಿತಾಂಶವನ್ನು ಯೋಗಿ ಆದಿತ್ಯನಾಥ್‌ ಆಳ್ವಿಕೆಯ ಸಾಧನೆಗಳ ಫಲ ಎಂದೇ ವ್ಯಾಖ್ಯಾನಿಸಿದ್ದಾರೆ. ಜನಕಲ್ಯಾಣ ಯೋಜನೆಗಳ ಅನುಷ್ಟಾನ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಿರುವುದೇ ಕಾರಣ ಎಂದೂ ಹೇಳಲಾಗುತ್ತದೆ.

ಇನ್ನು ಕೆಲವು ವಿಶ್ಲೇಷಕರು, ಬಿಜೆಪಿಯ ಸಂಘಟನಾತ್ಮಕ ರಚನೆ ಮತ್ತು ಮಾಧ್ಯಮಗಳ ನಿರ್ವಹಣೆಯೇ ಈ ಗೆಲುವಿಗೆ ಕಾರಣ ಎಂದು ಅಭಿಪ್ರಾಯಪಡುತ್ತಾರೆ. ಈ ಎರಡೂ ಅಭಿಪ್ರಾಯಗಳಲ್ಲಿ ಸತ್ಯಾಂಶವಿದೆ. ಆದರೂ ಈ ವಿಶ್ಲೇಷಣೆಗಳಲ್ಲಿ , ಉತ್ತರಪ್ರದೇಶದ ಜನಾದೇಶದ ಹಿಂದಿರುವ ಸೈದ್ಧಾಂತಿಕ ಶಕ್ತಿಯನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ. ಈ ಸೈದ್ಧಾಂತಿಕ ಶಕ್ತಿಯೇ ಹಿಂದೂ ಬಹುಸಂಖ್ಯಾವಾದ. ಹಿಂದೂ ಬಹುಸಂಖ್ಯಾವಾದವೇ ಬಿಜೆಪಿಯ ಚುನಾವಣಾ ಪ್ರಚಾರದ ಪ್ರಧಾನ ನಿರೂಪಣೆ ಎಂದು ಹೇಳಬಹುದು. ಉಳಿದೆಲ್ಲಾ ನಿರೂಪಣೆಗಳೂ ಸಹ ಈ ಪ್ರಧಾನ ನಿರೂಪಣೆಗೆ ಪೂರಕವಾಗಿಯೇ ಕಂಡುಬರುತ್ತದೆ.

ಕಳೆದ ಒಂದು ದಶಕದ ಅವಧಿಯಲ್ಲಿ ಬಿಜೆಪಿ ಕ್ರೋಢೀಕರಿಸಿದ್ದ, ಧೃವೀಕರಿಸಿದ್ದ ಹಿಂದೂ ಮತದಾರರ ಸಾಮಾಜಿಕ ಮೈತ್ರಿಯನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳುವುದು ಬಿಜೆಪಿಯ ಪಾಲಿಗೆ ಸವಾಲಿನ ಪ್ರಶ್ನೆಯಾಗಿತ್ತು. ಮೇಲ್ಜಾತಿ ಸಮುದಾಯಗಳು, ಯಾದವರನ್ನು ಹೊರತುಪಡಿಸಿದ ಹಿಂದುಳಿದ ಜಾತಿಗಳು, ಜಾಟವರನ್ನು ಹೊರತುಪಡಿಸಿದ ದಲಿತ ಸಮುದಾಯ ಈ ಮೈತ್ರಿಕೂಟದಲ್ಲಿ ಪ್ರಮುಖವಾಗಿದ್ದವು.

ಹಿಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ ಉಂಟುಮಾಡಿದ್ದ ಅನೇಕ ರೀತಿಯ ಸಾರ್ವಜನಿಕರ ಅಸಮಾಧಾನಗಳು ಹೊಗೆಯಾಡುತ್ತಿದ್ದುದು ಪಕ್ಷಕ್ಕೆ ಪ್ರಮುಖ ಸವಾಲಾಗಿತ್ತು. ಇವುಗಳಲ್ಲಿ ಪ್ರಧಾನವಾಗಿ ನಿರುದ್ಯೋಗದ ಬವಣೆ, ಬೆಲೆ ಏರಿಕೆ, ಸ್ಥಗಿತಗೊಂಡಿದ್ದ ಆದಾಯದ ಮೂಲಗಳು, ಗ್ರಾಮೀಣ ಬಿಕ್ಕಟ್ಟು, ಕೋವಿದ್‌ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಉಂಟಾಗಿದ್ದ ಹಲವು ದುರಂತಗಳು, ಲಾಕ್‌ ಡೌನ್‌ ದುಷ್ಪರಿಣಾಮಗಳು ಯೋಗಿ ಸರ್ಕಾರದ ಸುಗಮ ಹಾದಿಗೆ ಅಡ್ಡಿಯಾಗುವ ಸಾಧ್ಯತೆಗಳಿದ್ದವು.

ಸರ್ಕಾರದ ಈ ಎಲ್ಲ ವೈಫಲ್ಯಗಳನ್ನೂ ಮೀರಿ ಯೋಗಿ ಸರ್ಕಾರದ ಉಚಿತ ಪಡಿತರ ನೀಡುವ ಯೋಜನೆ ಫಲಕಾರಿಯಾಗಿದೆ ಎಂದು ಹೇಳುವುದು ಬಹುಶಃ ಭೋಳೆತನದ ಮಾತಾಗುತ್ತದೆ. ಉಚಿತವಾಗಿ ನೀಡಲಾಗುವ ಆಹಾರ ಧಾನ್ಯಗಳನ್ನು ಒದಗಿಸುವ ಪದ್ಧತಿಗೆ ಭಾರತದ ಮತದಾರರು ಕಳೆದ ಐವತ್ತು ವರ್ಷಗಳಿಂದಲೂ ಒಗ್ಗಿಹೋಗಿರುವುದರಿಂದ, 21ನೆಯ ಶತಮಾನದ ಮೂರನೆಯ ದಶಕದಲ್ಲಿ ಮತದಾರರು ಈ ಯೋಜನೆಗಳಿಂದ ಭ್ರಮಾಧೀನರಾಗುತ್ತಾರೆ ಎಂದು ನಂಬುವುದು ಕಷ್ಟವಾದೀತು.

ಜನಕಲ್ಯಾಣಯೋಜನೆಯನ್ನೂ ಮೀರಿದ ಸಂಗತಿ

ಅನೇಕ ಜನಪರ ಕಲ್ಯಾಣ ಯೋಜನೆಗಳಡಿ ನೇರ ನಗದು ಪಾವತಿ ಮಾಡುವ ಪದ್ಧತಿ, ಉದಾಹರಣೆಗೆ ರೈತರ ಆದಾಯ ಬೆಂಬಲ, ಶೌಚಾಲಯ ನಿರ್ಮಾಣ, ವಸತಿ ಯೋಜನೆ, ಶಾಲಾ ಬ್ಯಾಗುಗಳು ಇತ್ಯಾದಿ,, ಒಂದು ಪ್ರಬಲ ಅಸ್ತ್ರವಾಗಿಯೇ ಕಾಣುತ್ತದೆ. ಆದರೆ ಚುನಾವಣೆಯ ಮತದಾನದ ಏರುಪೇರುಗಳನ್ನು ವಿಶ್ಲೇಷಿಸುವ ಸಂದರ್ಭದಲ್ಲಿ ಇಲ್ಲಿಯೂ ಸಹ ವಿಶ್ಲೇಷಕರು ಎಚ್ಚರಿಕೆಯಿಂದ ಹೆಜ್ಜೆಯಿಡಬೇಕಾಗುತ್ತದೆ.

ಏಕೆಂದರೆ ಇತ್ತೀಚೆಗೆ ನಡೆದ ಹರಿಯಾಣ, ಮಹಾರಾಷ್ಟ್ರ ಮತ್ತ್ ಜಾರ್ಖಂಡ್‌ ಚುನಾವಣೆಗಳಲ್ಲಿ ಈ ಕಲ್ಯಾಣ ಯೋಜನೆಗಳ ನೇರ ನಗದು ಪಾವತಿ ಬಿಜೆಪಿಯನ್ನು ಅಧಿಕಾರಕ್ಕೆ ತರಲಿಲ್ಲ. ಅಲ್ಲಿ ಬಿಜೆಪಿ ಮತದಾರರ ಅವಕೃಪೆಯನ್ನು ಎದುರಿಸಬೇಕಾಯಿತು. ಎರಡನೆಯದಾಗಿ, ಚುನಾವಣಾ ಸಮೀಕ್ಷೆಗಳಾಗಲೀ, ಮಾಧ್ಯಮಗಳ ವರದಿಗಳಾಗಲೀ ಈ ರೀತಿಯ ಬೃಹತ್‌ ಪ್ರಮಾಣದ ಜನಾದೇಶಕ್ಕೆ ಪೂರಕವಾದ ಜನೋತ್ಸಾಹವನ್ನು ಬಿಂಬಿಸಿರಲಿಲ್ಲ. ಚುನಾವಣೆಗಳಿಗೆ ಎರಡು ತಿಂಗಳ ಮುಂಚೆ ನಡೆಸಲಾದ ಸಮೀಕ್ಷೆಗಳಲ್ಲೂ ಸಹ ಸಾರ್ವಜನಿಕ ಅಭಿಪ್ರಾಯಗಳು ಅಸ್ಪಷ್ಟತೆಯಿಂದಲೇ ಕೂಡಿದ್ದವು.

ಸಮೀಕ್ಷೆಗೊಳಪಟ್ಟ ಮೂರನೆ ಎರಡರಷ್ಟು ಮತದಾರರು ಸರ್ಕಾರದ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಕೆಲವೇ ಸಂಖ್ಯೆಯ ಜನ ಯೋಗಿ ಸರ್ಕಾರ ಮರಳಿ ಅಧಿಕಾರಕ್ಕೆ ಬರುವಂತೆ ಆಶಿಸಿದ್ದರು. ಹಾಗಾಗಿಯೇ ಇಲ್ಲಿ ಮತ್ತಾವುದೋ ಅಂಶ ಪ್ರಧಾನವಾಗಿರುವುದನ್ನು ಗುರುತಿಸಬೇಕಿದೆ. ಇಲ್ಲಿ ನಿರ್ಣಾಯಕವಾಗಿ ಕಾಣುವುದು ಹಿಂದುತ್ವ ಬಹುಸಂಖ್ಯಾವಾದ. ಈ ಬಹುಸಂಖ್ಯಾವಾದವೇ, ಯಾದವರು ಮತ್ತು ಜಾಟವರನ್ನು ಹೊರತುಪಡಿಸಿ, ಬಿಜೆಪಿ ಮತ್ತು ಹಿಂದೂ ಮತದಾರರ, ನಡುವೆ ಭಾವನಾತ್ಮಕವಾದ ಸೇತುವೆಯನ್ನು ನಿರ್ಮಿಸಿದೆ.

ಉತ್ತರ ಪ್ರದೇಶದ ಹಿಂದೂ ಮತದಾರರಲ್ಲಿ ಒಂದು ಸಮಾನ ಪ್ರಜ್ಞೆಯನ್ನು ಗುರುತಿಸಬಹುದು ಎಂದು ಯೋಗೇಂದ್ರ ಯಾದವ್‌ ತಮ್ಮ ಸಮೀಕ್ಷೆಯಲ್ಲಿ ಹೇಳಿದ್ದುದನ್ನು ಸ್ಮರಿಸಬಹುದು. ಈ ಸಮಾನ ಪ್ರಜ್ಞೆಯ ಮೂಲವನ್ನು ಯಾದವ್‌ ಅವರು ಹಿಂದೂ-ಮುಸ್ಲಿಂ ವಿಭಜನೆಯಲ್ಲಿ ಗುರುತಿಸುತ್ತಾರೆ. ಈ ಪ್ರಜ್ಞೆಯ ಪ್ರಭಾವದಿಂದಲೇ ಜನರು ತಮ್ಮ ಭೌತಿಕ ಸಂಕಷ್ಟಗಳನ್ನೂ ಬದಿಗೆ ಸರಿಸಿ , ರಾಜ್ಯ ಸರ್ಕಾರದ ದುರಾಡಳಿತವನ್ನೂ ಲೆಕ್ಕಿಸದೆ “ ತಮ್ಮವರ” ಪರ ವಹಿಸಿ ಮತ ಚಲಾಯಿಸಿದ್ದಾರೆ.

ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ಸಂಘರ್ಷ

ಉತ್ತರಪ್ರದೇಶ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ಏರ್ಪಟ್ಟಿದ್ದ ಸೈದ್ಧಾಂತಿಕ ಸಂಘರ್ಷ ಮೂಲತಃ ಯಾದವೇತರ ಹಿಂದುಳಿದ ವರ್ಗಗಳ ಮತದಾರರ ಸುತ್ತಲೂ ಹೆಣೆಯಲ್ಪಟ್ಟಿತ್ತು. ಉಳಿದ ಮತದಾರರಾದ ಮೇಲ್ಜಾತಿಗಳು, ಮುಸ್ಲಿಮರು, ಯಾದವರು ಮತ್ತು ಜಾಟರು ತಮ್ಮದೇ ಆದ ಪ್ರಭಾವಿ ವಲಯದಲ್ಲಿ ಗುರುತಿಸಿಕೊಂಡಿದ್ದರಿಂದ, ಹಿಂದುಳಿದ ವರ್ಗಗಳ ಮತದಾರರೇ ಚುನಾವಣೆಯಲ್ಲಿ ನಿರ್ಣಾಯಕರಾಗಿದ್ದರು.

ಕೊಂಚ ಮಟ್ಟಿಗೆ ಜಾಟವರನ್ನು ಹೊರತುಪಡಿಸಿದ ದಲಿತ ಮತದಾರರೂ ನಿರ್ಣಾಯಕರಾಗಿದ್ದರು. ಈ ಮತದಾರ ವಲಯವನ್ನೇ ಅಖಿಲೇಶ್‌ ಯಾದವ್‌ ಹೆಚ್ಚಾಗಿ ಅವಲಂಬಿಸಿದ್ದರು. ಹಕ್ಕು ಮತ್ತು ಸಮಾನ ಪ್ರಾತಿನಿಧ್ಯ ಈ ಎರಡು ಮಂಡಲ್‌ ರಾಜಕಾರಣದ ಮೂಲ ಧಾತುಗಳನ್ನು ಅವಲಂಬಿಸಿದ್ದ ಅಖಿಲೇಶ್‌ ಯಾದವ್‌ ಹಿಂದುಳಿದ ವರ್ಗಗಳ ಕ್ರಾಂತಿಯ ಭರವಸೆಯನ್ನೂ ನೀಡಿದ್ದರು.

ಆದರೆ ಸಮಾಜವಾದಿ ಪಕ್ಷದ ಮಂಡಲ್‌ ರಾಜಕಾರಣದ ಪ್ರಭಾವಕ್ಕೆ ಹಿಂದುಳಿದ ವರ್ಗಗಳ ಮತದಾರರು ಬಲಿಯಾಗದಂತೆ ಬಿಜೆಪಿ ತಡೆಗಟ್ಟಿದ್ದಾದರೂ ಹೇಗೆ ? ಅಥವಾ ಹಿಂದುಳಿದ ವರ್ಗಗಳ ಮತದಾರರು ತಮ್ಮ ಮಂಡಲ್‌ ರಾಜಕಾರಣಕ್ಕೂ ವಿಮುಖರಾಗಿ, ಹಿಂದೂ ರಾಜಕೀಯ ಅಸ್ಮಿತೆಯನ್ನು ಅಪ್ಪಿಕೊಳ್ಳುವಂತೆ ಮಾಡುವ ನಿಟ್ಟಿನಲ್ಲಿ ಹಿಂದೂ ಬಹುಸಂಖ್ಯಾವಾದ ಯಶಸ್ವಿಯಾದದ್ದಾದರೂ ಹೇಗೆ ? ಇಲ್ಲಿ ಎರಡು ಅಂಶಗಳನ್ನು ಪರಿಶೀಲಿಸಬೇಕಾಗುತ್ತದೆ.

ಮೊದಲನೆಯದಾಗಿ, ಹಿಂದುಳಿದ ವರ್ಗಗಳಲ್ಲಿ ಭೌತಿಕ ಸುರಕ್ಷತೆಯ ಭರವಸೆಯನ್ನು ಉಂಟುಮಾಡಿದ್ದು. ಬುಲ್ಡೋಜರ್‌ಗಳು ಮತ್ತು ಎನ್ಕೌಂಟರ್‌ಗಳ ಸಂಕೇತಗಳ ಮೂಲಕ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿದ್ದು. ಹಿಂದೂ ಪ್ರಭಾವಳಿಯಲ್ಲಿರುವ ಹಿಂದುಳಿದ ವರ್ಗಗಳಲ್ಲಿ ತಾವು ಯಾದವ್‌ ಮತ್ತು ಮುಸ್ಲಿಂ ಕ್ರಿಮಿನಲ್‌ಗಳಿಂದ ಸುರಕ್ಷಿತವಾಗಿದ್ದೇವೆ ಎಂಬ ಭಾವನೆ ಮೂಡಿಸಿದ್ದು.

ಕೋಮುವಾದಿ ಪೂರ್ವಗ್ರಹಗಳಿಗೆ ಸುರಕ್ಷತೆಯ ಹೊದಿಕೆಯನ್ನು ನೀಡುವ ಪ್ರಕ್ರಿಯೆ ಉತ್ತರಪ್ರದೇಶದಲ್ಲಿ ಪರಾಕಾಷ್ಠೆ ತಲುಪಿತ್ತು. ಮುಖ್ತಾರ್‌ ಅನ್ಸಾರಿ ಮತ್ತು ಅತೀಕ್‌ ಅಹಮದ್‌ ಅವರಂತಹ ಮುಸ್ಲಿಂ ಬಲಾಢ್ಯರನ್ನು ಮಾಫಿಯಾದೊಡನೆ ಬೆಸೆಯುವ ಪ್ರಕ್ರಿಯೆ ಒಂದೆಡೆಯಾದರೆ ಮತ್ತೊಂದೆಡೆ ಸಿಎಎ ವಿರೋಧಿ ಹೋರಾಟಗಾರರನ್ನು ದಂಗೆಕೋರರೊಂದಿಗೂ, ಲವ್‌ ಜಿಹಾದ್‌ ಆರೋಪಿಗಳು ಮತ್ತು ಗೋವು ಕಳ್ಳಸಾಗಾಣಿಕೆದಾರರನ್ನು ಸಮಾಜಘಾತುಕ ಶಕ್ತಿಗಳೊಂದಿಗೂ ಬೆಸೆಯುವುದರಲ್ಲಿ ಯೋಗಿ ಸರ್ಕಾರ ಯಶಸ್ವಿಯಾಗಿತ್ತು.

ಉದಾಹರಣೆಗೆ 2018-20ರ ಅವಧಿಯಲ್ಲಿ ಉತ್ತರಪ್ರದೇಶ ಸರ್ಕಾರ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲ್ಪಟ್ಟಿರುವ ಮೂರನೆ ಒಂದರಷ್ಟು ಆರೋಪಿಗಳು ಗೋವು ಕಳ್ಳಸಾಗಾಣಿಕೆಯ ಆರೋಪವನ್ನೇ ಎದುರಿಸುತ್ತಿದ್ದಾರೆ. ಈ ರೀತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ಎಂದರೆ ಸಮಾಜದ ಸುರಕ್ಷತೆಯ ದೃಷ್ಟಿಯಿಂದ ಮುಸ್ಲಿಮರೇ ಅಪಾಯಕಾರಿ ಎಂದು ಬಿಂಬಿಸುವುದರಲ್ಲಿ , ಹಾಗೆಯೇ ಈ ಅಪಾಯವನ್ನು ಮಟ್ಟಹಾಕುವ ನಿಟ್ಟಿನಲ್ಲೂ ಸರ್ಕಾರ ಸಕ್ರಿಯವಾಗಿದೆ ಎಂದು ಪ್ರದರ್ಶಿಸುವಲ್ಲಿ ಯೋಗಿ ಸರ್ಕಾರ ಯಶಸ್ವಿಯಾಗಿದೆ. ಮೇಲ್ನೋಟಕ್ಕೆ ಹಿಂದೂ ಮುಸ್ಲಿಂ ಘರ್ಷಣೆಯು ಕಾಣುತ್ತಿಲ್ಲ ಎಂದು ಹಲವು ಪತ್ರಿಕಾ ವರದಿಗಾರರು ವರದಿ ಮಾಡಿದ್ದರೂ, ಆಂತರಿಕವಾಗಿ ಮತದಾರರ ನಡುವೆ ಆಳವಾಗಿ ಬೇರೂರಿರುವ ಕೋಮು ಭಾವನೆಗಳನ್ನು ಅಲ್ಲಗಳೆಯಲಾಗುವುದಿಲ್ಲ.

ಆರ್ಥಿಕ ಸುಭದ್ರತೆ

ಇಲ್ಲಿ ಗಮನಿಸಬೇಕಾದ ಎರಡನೆಯ ಅಂಶವೆಂದರೆ, ಹಿಂದುಳಿದ ಜಾತಿಗಳಿಗೆ ಒಂದು ರೀತಿಯ ಆರ್ಥಿಕ ಸುರಕ್ಷತೆಯನ್ನು, ಯಾವುದೇ ಜಾತಿ ಅಸ್ಮಿತೆಗಳನ್ನು ಸೂಚಿಸದೆಯೇ ಒದಗಿಸಿರುವುದು. ಆರ್ಥಿಕ ಸುರಕ್ಷತೆಯನ್ನು ಒದಗಿಸುವ ತಂತ್ರಗಾರಿಕೆಯು ರಾಜಕೀಯವಾಗಿ ನಿರ್ಣಾಯಕವಾಗುವಷ್ಟೇ ಅದನ್ನು ಜನರಿಗೆ ತಲುಪಿಸುವ ವಿಧಾನಗಳೂ ನಿರ್ಣಾಯಕವಾಗುತ್ತವೆ.

ಉತ್ತರಪ್ರದೇಶದ ರಾಜಕಾರಣದಲ್ಲಿ ಮಂಡಲ್‌ ಮತ್ತು ದಲಿತ ರಾಜಕಾರಣವು ಹೆಚ್ಚು ಪ್ರಬಲವಾಗುತ್ತಿದ್ದರೂ ಮೂಲತಃ ಸಾರ್ವಜನಿಕ ಸವಲತ್ತುಗಳನ್ನು ಜನರಿಗೆ ತಲುಪುವಂತೆ ಮಾಡಲು ಜಾತಿ ಧೃವೀಕರಣವನ್ನು ಬಳಸಿಕೊಳ್ಳಲಾಗುತ್ತಿದೆ. ಬಿಜೆಪಿ ಸರ್ಕಾರ ಜಾರಿಗೊಳಿಸಿದ ಕಲ್ಯಾಣ ಯೋಜನೆಗಳು ಯೋಜನಾಬದ್ಧವಾಗಿದ್ದುದೇ ಅಲ್ಲದೆ ಸಾರ್ವತ್ರಿಕತೆಯನ್ನು ಪಡೆದುಕೊಂಡಿದ್ದವು.

ನೇರ ನಗದು ವರ್ಗಾವಣೆಯ ಮಾರ್ಗವನ್ನು ಅನುಸರಿಸುವ ಮೂಲಕ ಮಧ್ಯವರ್ತಿಗಳ ಕಾಟದಿಂದ ಫಲಾನುಭವಿಗಳು ಮುಕ್ತರಾಗಿದ್ದರು. ಇದು ಸಹಜವಾಗಿಯೇ ಜಾತಿ ಅಸ್ಮಿತೆಗಳ ರಾಜಕೀಯ ಲಕ್ಷಣಗಳನ್ನು ಶಿಥಿಲವಾಗಿಸುತ್ತದೆ. ಈ ರೀತಿಯ ಜನೋಪಯೋಗಿ ರಾಜಕಾರಣ ಹಿಂದೂ ಬಹುಸಂಖ್ಯಾವಾದಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುವುದರಿಂದ ದಲಿತರು ಮತ್ತು ಹಿಂದುಳಿದ ಜಾತಿಗಳು ಕ್ರಮೇಣ ರಾಜಕೀಯವಾಗಿ ಹಿಂದೂಗಳಾಗಿಯೇ ಗುರುತಿಸಿಕೊಳ್ಳುವಂತಾಗುತ್ತದೆ.

ಈ ಹಿಂದೂ ಬಹುಸಂಖ್ಯಾವಾದವನ್ನು ಸೋಲಿಸುವಲ್ಲಿ ಸಮಾಜವಾದಿ ಪಕ್ಷದ ಮಂಡಲ್‌ ತಂತ್ರಗಾರಿಕೆ ಏಕೆ ವಿಫಲವಾಯಿತು ಎಂದೂ ಯೋಚಿಸಬೇಕಾಗಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಒಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಂಡಲ್‌ ರಾಜಕಾರಣವನ್ನು ಪುನರುಜ್ಜೀವನಗೊಳಿಸುವುದು ಬೃಹತ್‌ ಸವಾಲಾಗಿ ಪರಿಣಮಿಸುತ್ತದೆ.

ಚುನಾವಣೆಗಳಿಗೂ ಮುನ್ನ ಸಮಾಜವಾದಿ ಪಕ್ಷವು ಬಿಜೆಪಿಯ ಪ್ರಮುಖ ಹಿಂದುಳಿದ ಜಾತಿಯ ಸ್ವಾಮಿ ಪ್ರಸಾದ್‌ ಮೌರ್ಯ ಮತ್ತು ದಾರಾ ಸಿಂಗ್‌ ಚೌಹಾಣ್‌ ಮುಂತಾದ ನಾಯಕರನ್ನು ತನ್ನೆಡೆಗೆ ಸೆಳೆಯಲು ಯಶಸ್ವಿಯಾಗಿತ್ತು. ಯೋಗಿ ಆಡಳಿತದಲ್ಲಿ ಹಿಂದುಳಿದ ಜಾತಿಗಳು ಅಸಮಧಾನವನ್ನು ಹೊಂದಿವೆ ಎಂದು ನಿರೂಪಿಸುವ ತಂತ್ರ ಇದಾಗಿತ್ತು, ತನ್ಮೂಲಕ ಹಿಂದುಳಿದ ಜಾತಿಗಳ ಹಕ್ಕೊತ್ತಾಯಗಳನ್ನೇ ಚುನಾವಣೆಯ ಕೇಂದ್ರ ವಸ್ತುವನ್ನಾಗಿಸಲು ಸಮಾಜವಾದಿ ಪಕ್ಷ ಪ್ರಯತ್ನಿಸಿತ್ತು.

ಆದರೆ ಈ ಬಹುತೇಕ ನಾಯಕರು ತಮ್ಮ ಸಮುದಾಯದ ಮೇಲೆ ಹೆಚ್ಚಿನ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಈ ನಾಯಕರ ಅವಕಾಶವಾದಿತನ ಮತ್ತು ವ್ಯಾವಹಾರಿಕ ಧೋರಣೆಯ ಪರಿಣಾಮ, ಸೈದ್ಧಾಂತಿಕ ನೆಲೆಗಳು ಲೆಕ್ಕಕ್ಕೆ ಬರದಂತಾಯಿತು. ಸಮಾಜವಾದಿ ಪಕ್ಷದ ಈ ಪ್ರಯತ್ನಗಳು ಬಹಳ ತಡವಾಗಿ ನಡೆಯಿತು ಎನ್ನುವುದನ್ನೂ ಗಮನಿಸಬೇಕು.

ಒಂದು ಪರ್ಯಾಯದ ರಚನೆಯತ್ತ

ಮಂಡಲ್‌ ರಾಜಕಾರಣವನ್ನು ಪುನಶ್ಚೇತನಗೊಳಿಸಿ, ಪುನರುಜ್ಜೀವನಗೊಳಿಸುವುದೆಂದರೆ ಅದಕ್ಕೆ ದೀರ್ಘ ಕಾಲಿಕ ಸಂಘಟನಾತ್ಮಕ ಹಾಗೂ ಸೈದ್ಧಾಂತಿಕ ಪುನರ್‌ ನಿರ್ಮಾಣದ ಅವಶ್ಯಕತೆ ಇದೆ. ಈ ಮಾರ್ಗದಲ್ಲೇ ಹಿಂದುತ್ವದ ನಮ್ಯ ಸ್ವರೂಪವನ್ನು ಎದುರಿಸಲು ಸಾಧ್ಯವಾದೀತು.

ಬಿಜೆಪಿ ತನ್ನ ಹಿಂದೂ ಬಹುಸಂಖ್ಯಾವಾದದ ಪ್ರಚಾರವನ್ನು ವರ್ಷದುದ್ದಕ್ಕೂ ನಡೆಸುತ್ತಿರುತ್ತದೆ. ಪ್ರತಿ ವರ್ಷವೂ ನವೀಕರಿಸುತ್ತಿರುತ್ತದೆ. ಇದಕ್ಕೆ ಪೂರಕವಾದ ಸಂಘಟನಾತ್ಮಕ ಶಕ್ತಿಯೊಂದಿಗೇ ಸ್ನೇಹಪರ ಮಾಧ್ಯಮಗಳೂ ಸಹ ಇರುತ್ತವೆ. ಕೇವಲ ಮೂರು ತಿಂಗಳ ಕಾಲ ಬದುಕುಳಿಯುವ ಯಾವುದೇ ಪರ್ಯಾಯ ಸೈದ್ಧಾಂತಿಕ ನೆಲೆಗಳು ಈ ಸವಾಲನ್ನು ಎದುರಿಸಲು ಸಾಧ್ಯವಾಗುವುದಿಲ್ಲ.

ಯೋಗಿ ಆದಿತ್ಯನಾಥ್‌ ಕಳೆದ ಚುನಾವಣೆಗಳನ್ನು 80:20 ಅನುಪಾತದಲ್ಲಿ ಎದುರಿಸಿ ಗೆಲುವು ಸಾಧಿಸಿದ್ದಾರೆ. ಇದು ನೇರವಾಗಿಯೇ ಹಿಂದೂ:ಮುಸ್ಲಿಂ ರಾಜಕಾರಣವನ್ನು ಪ್ರತಿನಿಧಿಸುತ್ತದೆ. ಹಿಂದಿರುಗಿ ನೋಡಿದಾಗ ಈ ತಾತ್ವಿಕ ಚೌಕಟ್ಟು ವಾಸ್ತವ ಎನ್ನುವುದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ. ಮುಸಲ್ಮಾನರು ಎಂದಿನಂತೆ ಸಮಾಜವಾದಿ ಪಕ್ಷದ ಬೆನ್ನೆಲುಬಾಗಿದ್ದರು.

ಆದರೆ ಬಿಜೆಪಿ ಬಹುಸಂಖ್ಯೆಯ ಹಿಂದೂಗಳನ್ನು ತನ್ನೆಡೆಗೆ ಸೆಳೆದಿತ್ತು. ಕಳೆದ ಮೂರು ಚುನಾವಣೆಗಳಿಂದಲೂ ಬಿಜೆಪಿ ರಚಿಸುತ್ತಿರುವ ಹಿಂದೂ ರಾಜಕೀಯ ಬಹುಸಂಖ್ಯೆ ಈ ಚುನಾವಣೆಗಳ ಮೂಲಕ ದೀರ್ಘ ಕಾಲ ಉಳಿಯುವ ಒಂದು ವಿದ್ಯಮಾನವಾಗಿ ಗೋಚರಿಸಿದೆ. ಗುಜರಾತ್‌ನಂತೆಯೇ ಉತ್ತರಪ್ರದೇಶವೂ ಈಗ ಬಿಜೆಪಿ ಪ್ರಭಾವಕ್ಕೊಳಗಾದ ರಾಜ್ಯವಾಗಿದೆ. ಇಲ್ಲಿನ ರಾಜಕೀಯ ಸಾಮಾನ್ಯ ಪ್ರಜ್ಞೆಯಲ್ಲಿ ಹಿಂದೂ ಬಹುಸಂಖ್ಯಾವಾದ ಆಳವಾಗಿ ಬೇರೂರಿದೆ.

(ಲೇಖಕರು ರಾಜಕೀಯ ಸಂಶೋಧಕ ಹಾಗೂ ಅಂಕಣಕಾರ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಸಿದ್ಧಾಂತ ಮತ್ತು ಪತ್ರಿಕೋದ್ಯಮ

Published

on

  • ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್

ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು. ಅವರು ಪತ್ರಿಕೋದ್ಯಮದ ನ್ಯೂಟ್ರಾಲಿಟಿ ಕುರಿತು ಮಾತಾಡುತ್ತಾ, ʼನಾವು ಪತ್ರಕರ್ತರು ನಿಮ್ಮ ರೀತಿ ಯೋಚನೆ ಮಾಡೋದಕ್ಕೆ ಆಗಲ್ಲ. ನಾವು ಯಾವತ್ತೂ ಯಾವುದೇ ಸಿದ್ಧಾಂತಕ್ಕೆ ವಾಲಿಕೊಳ್ಳದೇ ತಟಸ್ಥತೆ ಕಾಪಾಡಬೇಕಾಗುತ್ತದೆʼ ಎಂದು ಹೇಳಿದರು. ʼಅವರ ಜೊತೆ ನಾನು ವಾದಿಸಿದೆ.

ಸರ್, ಸುಳ್ಳನ್ನೇ ಬಂಡವಾಳ ಮಾಡಿಕೊಂಡ ಸಿದ್ಧಾಂತಗಳು ರಾರಾಜಿಸುವಾಗ ಸತ್ಯವನ್ನು ಹುಡುಕಲು ಸಹ ಸಿದ್ಧಾಂತದ ಸಹಾಯ ಬೇಕಾಗುತ್ತದೆ. ಯಾವ ವ್ಯಕ್ತಿಯೂ ಸಿದ್ಧಾಂತದ ಹೊರಗಾಗಿ ಇರಲು ಸಾಧ್ಯವಿಲ್ಲ. ನನಗೆ ಸಿದ್ದಾಂತವೇ ಇಲ್ಲ ಎನ್ನುವ ವ್ಯಕ್ತಿಯನ್ನು ಕೂಡಾ ಅವನಿಗೆ ತಿಳಿದೋ ತಿಳಿಯದೆಯೋ ಒಂದಲ್ಲಾ ಒಂದು ಸಿದ್ದಾಂತ ಇಲ್ಲವೇ ಹಲವು ಸಿದ್ಧಾಂತಗಳು ನಿರ್ದೇಶಿಸುತ್ತಿರುತ್ತವಲ್ಲ.. ʼ ಎಂದ ನನ್ನ ಮಾತಿಗೆ ನಮಗೆ ಪತ್ರಕರ್ತರಿಗೆ ಹಾಗೆ ಯೋಚಿಸಲು ಬರುವುದಿಲ್ಲ. ನೀವು ಎಡ ಪಂಥ ಅಂತೀರಿ, ಅವರು ಬಲಪಂಥ ಅಂತಾರೆ, ನಾವು ಇವೆರಡರ ನಡುವೆ ಸತ್ಯ ಹುಡುಕ್ತೀವಿʼ ಎಂದೆಲ್ಲಾ ಹೇಳಿದರು. ಕೊನೆಗೆ ಯಾರೂ ರಾಜಿಯಾಗಲಿಲ್ಲ.

ಇದಾಗಿ ಹದಿನೈದು ವರ್ಷಗಳ ನಂತರ, 2019ರಲ್ಲಿ ಅದೇ ಪತ್ರಕರ್ತ ಸ್ನೇಹಿತರು ನಮ್ಮ ಜೊತೆ ಕೆಲಸ ಮಾಡುತ್ತಿದ್ದರು. ಅವರು ನರೇಂದ್ರ ಮೋದಿ ಸರ್ಕಾರದ ಆರ್ಥಿಕ ವಂಚನೆಗಳನ್ನು ಅದ್ಭುತ ರೀತಿಯಲ್ಲಿ ಅಂಕಿಅಂಶಗಳ ಸಮೇತ ಬಯಲು ಮಾಡುತ್ತಿದ್ದುದು ಕಂಡು ನನಗೆ ಅಚ್ಚರಿ ಮತ್ತು ಸಂತೋಷವಾಗಿತ್ತು. ಅಂದು ಅವರು ನಿಜಕ್ಕೂ ಸತ್ಯದ ಪರವಾಗಿದ್ದರು. ಆದರೆ ಅವರ ಬರೆಹಗಳನ್ನು ಯಾರಾದರೂ ಬಲಪಂಥೀಯರು ಓದಿದರೆ ಅವರಿಗೆ ಖಂಡಿತಾ ಇವರು ʼಎಡಪಂಥೀಯ ಸಿದ್ಧಾಂತಿʼ, ʼನಗರ ನಕ್ಸಲ್ʼ ಎಂದೆಲ್ಲಾ ಸುಲಭವಾಗಿ ಹಣೆಪಟ್ಟಿ ಕಟ್ಟಬಹುದಿತ್ತು. ಆದರೆ ಆ ಪತ್ರಕರ್ತ ಸ್ನೇಹಿತರು ನಿಜಕ್ಕೂ ಈ ದೇಶದ ಭವಿಷ್ಯದ ಬಗ್ಗೆ ತುಂಬಾ ಆತಂಕಗೊಂಡು, ಕಾಳಜಿಯಿಂದ ಕೆಲಸ ಮಾಡುತ್ತಿದ್ದರು. ಕೊನೆಗೆ ಅವರಿಗೂ ಸಹ ಅವರು ಹಿಂದೆ ಹೇಳಿದ್ದ ರೀತಿಯಲ್ಲಿ ತಟಸ್ಥವಾಗಿ ಪತ್ರಿಕೋದ್ಯಮ ನಡೆಸುವುದು ಸಾಧ್ಯವಿಲ್ಲ ಎಂಬ ಅರಿವಾಗಿರಬಹುದು ಎಂದುಕೊಂಡೆ. ಹೌದು ಪತ್ರಕತ್ರರಾದವರು ಮಾಡಲು ಇರುವ ಬಹಳ ಕೆಲಸಗಳ ನಡುವೆಯೂ ಅವರು ಅದ್ಯತೆಯನ್ನು ಗುರುತಿಸಿಕೊಂಡಿದ್ದರು.

ಪತ್ರಿಕೋದ್ಯಮದ ಬಗ್ಗೆ ಮಾತಾಡುವಾಗ ನಾವು ಒಂದು ಪ್ರಾಥಮಿಕ ಸಂಗತಿಯನ್ನು ತಿಳಿದುಕೊಳ್ಳಬೇಕು. ನಮ್ಮ ದೇಶದಲ್ಲಿ ಪತ್ರಿಕೋದ್ಯಮ ಆರಂಭವಾದ ಸಂದರ್ಭದಲ್ಲಿ ಯಾವೆಲ್ಲಾ ಭಾರತೀಯರು ಪತ್ರಿಕೆಗಳನ್ನು ಹೊರತರುತ್ತಿದ್ದರೋ ಅವರೆಲ್ಲರೂ ಕಟು ಸಿದ್ಧಾಂತಿಗಳಾಗಿದ್ದರು. ಸಾಮ್ರಾಜ್ಯವಾದದ ವಿರುದ್ಧದ ಸಿದ್ದಾಂತ ಅವರೆಲ್ಲರನ್ನು ಮುನ್ನಡೆಸುತ್ತಿತ್ತು. ಬಹುತೇಕ ಅವರೆಲ್ಲರೂ ಸ್ವಾತಂತ್ರ್ಯ ಹೋರಾಟಗಾರರು ಇಲ್ಲವೇ ಸ್ವಾಭಿಮಾನ ಚಳವಳಿಯ ಹೋರಾಟಗಾರರು, ನಾಯಕರು ಆಗಿದ್ದರು. ಅಂತಹ ಸ್ಪಷ್ಟ ಸೈದ್ಧಾಂತಿಕ ಬುನಾದಿಯಿಟ್ಟುಕೊಂಡು ಅವರೆಲ್ಲಾ ಬ್ರಿಟಿಷರ ವಿರುದ್ಧ ಪತ್ರಿಕೋದ್ಯಮ ನಡೆಸದಿದ್ದರೆ ಈ ದೇಶದ ಪತ್ರಿಕೋದ್ಯಮದ ಇತಿಹಾಸ ಅತ್ಯಂತ ಟೊಳ್ಳಾದ, ಬೂಸಾ ಇತಿಹಾಸವಾಗುತ್ತಿತ್ತು.

ಕೆಲ ಬ್ರಿಟಿಷ್ ಪತ್ರಕರ್ತರು ಹೇಗೆ ಬ್ರಿಟಿಷ್ ಅಧಿಕಾರಿಗಳ ಬೆಡ್ ರೂಮ್ ಸ್ಟೋರಿಗಳನ್ನು ಚಪ್ಪರಿಸಿಕೊಂಡು ಅದನ್ನೇ ಪತ್ರಿಕೋದ್ಯಮ ಎಂದು ಬೀಗುತ್ತಿದ್ದರೋ ಅಷ್ಟರಲ್ಲೇ ಭಾರತೀಯ ಪತ್ರಿಕೋದ್ಯಮ ಉಳಿದುಬಿಡುತ್ತಿತ್ತು. ಆದರೆ ಹೀಗೆ ಆಗಲು ಬಿಡದೇ ಉದಾತ್ತ ಧ್ಯೇಯಗಳ ಮೂಲಕ ದೇಶದ ಪತ್ರಿಕೋದ್ಯಮ ಬೆಳೆಸಿದ 19ನೆಯ ಶತಮಾನದ ಅಂತಹ ಧೀಮಂತ ಪತ್ರಕರ್ತರು ಹಲವರು. ಸುರೇಂದ್ರ ನಾಥ್ ಬ್ಯಾನರ್ಜಿ (ಬೆಂಗಾಲಿ ಪತ್ರಿಕೆ- 1879) ಪತ್ರಕರ್ತರಾಗಿ ಕೆಲಸ ಮಾಡುತ್ತಲೇ ಸತ್ಯ ಹೇಳಿದ ಕಾರಣಕ್ಕೆ ಬ್ರಿಟಿಷ್ ಸರ್ಕಾರ ಅವರನ್ನು ವರ್ನಾಕ್ಯುಲರ್ ಪ್ರೆಸ್ ಕಾಯ್ದೆಯ ಅಡಿ ಜೈಲಿಗಟ್ಟಿತ್ತು. ಸಂವಾದ ಕೌಮುದಿ ಎಂಬ ಪತ್ರಿಕೆ ನಡೆಸುತ್ತಿದ್ದ ರಾಜಾರಾಮ ಮೋಹನ್ ರಾಯ್ ಒಬ್ಬ ಸ್ಪಷ್ಟ ವಿಚಾರವಾದಿಯಾಗಿದ್ದರು.

ಅವರು ಈ ದೇಶದ ಅನಿಷ್ಟಗಳ ಕುರಿತೇ ತಮ್ಮ ಪತ್ರಿಕೆಯಲ್ಲಿ ಬರೆಯುತ್ತಾ ಹೋದರು. ಇದೇ ಕೆಲಸವನ್ನು ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ ಆರಂಭಿಸಿದ ಜಂಬೇಕರ್ ಮಾಡಿದರು, ಅವರು ತಮ್ಮ ದರ್ಪಣ್ ಪತ್ರಿಕೆಯ ಮೂಲಕ ಸಾಮಾಜಿಕ ಅನಿಷ್ಟಗಳು ಕುರಿತು ಜಾಗೃತಿ ಮೂಡಿಸಿದರು- ಇವರನ್ನು ಮರಾಠಿ ಪತ್ರಿಕೋದ್ಯಮದ ಪಿತಾಮಹ ಎಂದು ಕರೆಯಲಾಗುತ್ತದೆ. ಬಂಗಾಳದಲ್ಲಿ ಹರೀಶ್ಚಂದ್ರ ರಾಯ್ ಎಂಬುವವರು ಬಂಗದರ್ಶನ್ ಎಂಬ ಪತ್ರಿಕೆ ತಂದರು; ಗುಜರಾತಿಯಲ್ಲಿ ʼಬಾಂಬೆ ಸಮಾಚಾರ್ʼ ಪತ್ರಿಕೆ ಆರಂಭಿಸಿದ ಫರ್ದುನ್ಜಿ ಮರ್ಜ್ ಬಾನ್ ಎಂಬುವವರು ಸಹ ಪತ್ರಿಕೆಯ ಮೂಲಕ ಸಮಾಜ ಸುಧಾರಣೆಗೆ ಒತ್ತು ಕೊಟ್ಟರು. ಇನ್ನು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಬಾಲಗಂಗಾಧರ ತಿಲಕ್ ಕೇಸರಿ ಮತ್ತು ಮರಾಟಾ ಪತ್ರಿಕೆ ಹೊರಡಿಸುತ್ತಿದ್ದರು, ಗಾಂದೀಜಿಯವರು ಆಫ್ರಿಕಾದಲ್ಲಿದ್ದಾಗಲೇ ಇಂಡಿಯನ್ ಒಪಿನಿಯನ್ ಪತ್ರಿಕೆ ನಡೆಸುತ್ತಿದ್ದರೆ, ಭಾರತಕ್ಕೆ ಬಂದ ಮೇಲೆ ಯಂಗ್ ಇಂಡಿಯಾ ಮತ್ತು ಹರಿಜನ್ ಎಂಬ ಪತ್ರಿಕೆಗಳನ್ನು ಹೊರತಂದರು,

ಸುಭಾಷ್ ಚಂದ್ರ ಬೋಸ್ ಅವರು ಸ್ವರಾಜ್ ಪತ್ರಿಕೆಯ ಸಂಪಾದಕರಾಗಿದ್ದರು, ಲಾಲಾ ಲಜಪತ್ ರಾಯ್ ಅವರು ದ ಟ್ರಿಬ್ಯೂನ್ ಎಂಬ ಇಂಗ್ಲಿಷ್ ಪತ್ರಿಕೆ ತಂದರು, ಜೊತೆಗೆ ವಂದೆ ಮಾತರಂ ಎಂಬ ಉರ್ದು ಪತ್ರಿಕೆಯನ್ನೂ ಪ್ರಕಟಿಸುತ್ತಿದ್ದರು- ಇವುಗಳ ಮೂಲಕ ಸ್ವದೇಶಿ ಚಿಂತನೆಯನ್ನು ಅಥವಾ ಸಿದ್ಧಾಂತವನ್ನು ಪ್ರಚುರಪಡಿಸಿದರು, ಹೋಂರೂಲ್ ಚಳವಳಿಯ ಮುಂದಾಳು ಅನಿಬೆಸೆಂಟ್ ಅವರು ನ್ಯೂ ಇಂಡಿಯಾ ಪತ್ರಿಕೆ ತಂದರು, ಇನ್ನು ಮದನ್ ಮೋಹನ್ ಮಾಳವೀಯ ಅವರು ಮೋತಿಲಾಲ್ ನೆಹರೂ ಜೊತೆ ಸೇರಿಕೊಂಡು ದ ಲೀಡರ್ ಎಂಬ ಪತ್ರಿಕೆ ತಂದರೆ, ನಂತರ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯನ್ನೂ ಪುನರುಜ್ಜೀವಗೊಳಿಸಿದರು. ಇನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ʼಅಸ್ಪೃಶ್ಯರಿಗೆ ಈ ದೇಶದಲ್ಲಿ ಪತ್ರಿಕೆಯಿಲ್ಲʼ ಎಂದು ಘೋಷಿಸಿ ಮೊದಲಿಗೆ ಶಾಹು ಮಹಾರಾಜರ ಬೆಂಬಲದಿಂದ ಮೂಕನಾಯಕ ಪತ್ರಿಕೆ (1920) ತಂದರು; ನಂತರ ಬಹಿಷ್ಕೃತ ಭಾರತ (1927), ನಂತರ ಸಮತಾ (1928), ನಂತರ ಜನತಾ (1930) ಹಾಗೂ ಪ್ರಬುದ್ಧ ಭಾರತ (1956) ಪತ್ರಿಕೆಗಳನ್ನು ಹೊರಡಿಸಿ ನಿರಂತರವಾಗಿ ಅವುಗಳಲ್ಲಿ ಬರೆಯುತ್ತಾ ತಾವೊಬ್ಬ ಧೀಮಂತ ಪತ್ರಕರ್ತ ಎಂಬುದನ್ನೂ ನಿರೂಪಿಸಿದ್ದರು.

ಇವರನ್ನೆಲ್ಲಾ ಹೊರಗಿಟ್ಟು ಕೇವಲ ಬ್ರಿಟಿಷರು ತಂದ ಬೆಂಗಾಲ್ ಗೆಜೆಟ್ ನಂತವುಗಳನ್ನು ಮಾತ್ರವೇ ಭಾರತದ ಪತ್ರಿಕೋದ್ಯಮದ ಇತಿಹಾಸ ಎಂದು ಹೇಳಲು ಬರುತ್ತದೆಯೇ? ಈ ದೇಶದ ಪತ್ರಿಕೋದ್ಯಮದ ಇತಿಹಾಸದ ಸೈದ್ಧಾಂತಿಕ ಅಡಿಪಾಯ ಅತ್ಯಂತ ಭದ್ರವಾಗಿತ್ತು ಎಂಬುದಕ್ಕೆ ಇವೆಲ್ಲಾ ಸಾಕ್ಷಿಯಲ್ಲವೆ? ಅಲ್ಲಿ ಎಡಬಿಡಂಗಿತನಕ್ಕೆ, ಸೊ ಕಾಲ್ಡ್ ತಟಸ್ಥತೆಗೆ ಯಾವುದೇ ಅವಕಾಶವಿರಲಿಲ್ಲ. ಈ ದೇಶವನ್ನು ಕಾಡುತ್ತಿದ್ದ ಸಾಮ್ರಾಜ್ಯಶಾಹಿ ಮತ್ತು ಬ್ರಾಹ್ಮಣಶಾಹಿ ಶಕ್ತಿಗಳನ್ನು ನೇರವಾಗಿ ಎದುರಿಸಿಯೇ ಭಾರತದ ಪತ್ರಿಕೋದ್ಯಮ ನಡೆದುಕೊಂಡುಬಂದಿದೆ ಎಂಬುದಕ್ಕೆ ಮೇಲಿನ ಉದಾಹರಣೆಗಳೇ ಸಾಕ್ಷಿ.

ಸ್ವಾತಂತ್ರ್ಯಾನಂತರದಲ್ಲಿ, ನಮ್ಮ ಕರ್ನಾಟಕದಲ್ಲೇ ನಾವು ಯಾರನ್ನೆಲ್ಲಾ ಇಂದು ಧೀಮಂತ ಪತ್ರಕರ್ತರೆಂದು ಪರಿಗಣಿಸಿದ್ದೇವೆಯೋ, ಯಾರನ್ನೆಲ್ಲಾ ಆದರ್ಶ ಎಂದು ನೋಡುತ್ತೇವೆಯೋ ಅವರೆಲ್ಲರೂ ಅತ್ಯಂತ ಸ್ಪಷ್ಟ ಮತ್ತು ದೃಢವಾದ ಸಿದ್ಧಾಂತಿಗಳೇ ಆಗಿದ್ದರು ಎಂಬುದನ್ನು ಮರೆಯಬಾರದು. ಕರ್ನಾಟಕದ ಪತ್ರಿಕೋದ್ಯಮಕ್ಕೇ ಹೊಸ ಮೆರಗು ತಂದು ಸಂಚಲನ ಮೂಡಿಸಿದ ಪಿ. ಲಂಕೇಶ್ ಅವರು ಕಡಿಮೆ ಸಿದ್ಧಾಂತಿಯೇ? ಸ್ಪಷ್ಟ ಸೈದ್ಧಾಂತಿಕ ತಳಹದಿಯ ಪತ್ರಿಕೋದ್ಯಮವೇ ಅವರ ಆಕ್ಟಿವಿಸಂ ಆಗಿತ್ತು ಮಾತ್ರವಲ್ಲ ಪತ್ರಿಕೋದ್ಯಮದ ಮೂಲಕ ಸಾಮಾಜಿಕ ರಾಜಕೀಯ ಬದಲಾವಣೆಯನ್ನೂ ಮಾಡಲು ಸಾಧ್ಯ ಎಂದು ಪಿ ಲಂಕೇಶ್ ಒಂದು ಮಾದರಿಯನ್ನೇ ಸೃಷ್ಟಿಸಿದರು. ಅದು ಸಾಧ್ಯವಾಗಿದ್ದೇ ಅವರ ಕಟಿಬದ್ಧ ಸೈದ್ಧಾಂತಿಕ ನಿಲುವಿನಿಂದ.

ನಾಡು ಕಂಡ ಮತ್ತೊಬ್ಬ ಧೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿ ಕೂಡಾ ಗಟ್ಟಿ ತಾತ್ವಿಕ ನಿಲುವುಗಳ ಮೂಲಕ ನಾಡಿನ ಜನರನ್ನು ತಲುಪಿದರು. ಇನ್ನು 70-80ರ ದಶಕಗಳಲ್ಲಿ ಭಾರತೀಯ ಪತ್ರಿಕೋದ್ಯಮದ ಧೀಮಂತ ಪರಂಪರೆಯಲ್ಲಿ ಸಾಗಿದ ಹಲವಾರು ಕನ್ನಡ ಪತ್ರಿಕೆಗಳಿದ್ದವು- ಸುದ್ದಿ ಸಂಗಾತಿ, ಶೂದ್ರ, ಪಂಚಮ, ಸಮುದಾಯ, ಸಂಕ್ರಮಣ ಮುಂತಾದ ನಿಯತಕಾಲಿಕೆಗಳು ಕನ್ನಡಿಗರ ಅರಿವಿನ ವಿಸ್ತರಣೆಯಲ್ಲಿ ಕಡಿಮೆ ಕೆಲಸ ಮಾಡಿವೆಯೇ? ಹಾಗಾದರೆ ಇವೆಲ್ಲವೂ ಖಚಿತ ಸೈದ್ದಾಂತಿಕತೆಯಿಂದಲೇ ನಡೆಯಲಿಲ್ಲವೇ?

ಇನ್ನು ಕಳೆದ ಕೆಲವು ದಶಕಗಳಲ್ಲಿ, ಅಗ್ನಿ, ಹಾಯ್ ಬೆಂಗಳೂರು, ಗೌರಿ ಲಂಕೇಶ್ ವಾರಪತ್ರಿಗಳೂ ತಮ್ಮ ಛಾಪು ಮೂಡಿಸಿದವು. ಪಿ ಲಂಕೇಶರ ಸ್ಪೂರ್ತಿಯಲ್ಲೇ ದೊಡ್ಡ ದೊಡ್ಡ ಭ್ರಷ್ಟಾಚಾರ ಪ್ರಕರಣಗಳನ್ನು ಅನಾವರಣಗೊಳಿಸಿದವು. ಇದ್ದುದರಲ್ಲಿ ರವಿ ಬೆಳಗರೆ ಎಡಬಿಡಂಗಿಯಾಗಿ ಕ್ರೈಂ, ಸೆಕ್ಸ್ ಗಳನ್ನ ಅಸ್ತ್ರವಾಗಿಸಿಕೊಂಡು ಟ್ಯಾಬ್ಲಾಯ್ಡ್ ಪತ್ರಿಕೋದ್ಯಮವನ್ನು ಹಳ್ಳ ಹಿಡಿಸಿದರೂ ಹಾಯ್ ಬೆಂಗಳೂರು ಸಹ ಅನೇಕ ಬ್ರಷ್ಟಾಚಾರ ಹಗರಣಗಳನ್ನು ಬಯಲು ಮಾಡಿದ್ದು ಸತ್ಯ.

ಯಾವನ್ನು ನಾವು ದಿನಪತ್ರಿಕೆಗಳು ಅಥವಾ ವೃತ್ತ ಪತ್ರಿಕೆಗಳು ಎನ್ನುತ್ತೇವೆಯೋ ಇವುಗಳ ಆದ್ಯತೆ ದಿನನಿತ್ಯದ ಸುದ್ದಿಗಳನ್ನು ಜನರಿಗೆ ತಲುಪುವುದು ಮಾತ್ರವಾಗಿದ್ದ ಕಾರಣ ಬಹಳ ಪತ್ರಿಕೆಗಳಲ್ಲಿ ಸೈದ್ಧಾಂತಿಕತೆ ದೊಡ್ಡ ವಿಷಯವಾಗಲಿಲ್ಲ. ಆದರೆ ಅಂತಹ ಕಡೆಗಳಲ್ಲಿ ಸಹ ದೊಡ್ಡ ದೊಡ್ಡ ಸಿದ್ಧಾಂತಿಗಳು ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿದ್ದರು ಮತ್ತು ತಮ್ಮ ಖಚಿತ ಅಭಿಪ್ರಾಯಗಳನ್ನು ಆ ವೇದಿಕೆಗಳ ಮೂಲಕ ಜನರಿಗೆ ತಲುಪಿಸುತ್ತಾ ಬಂದಿದ್ದರೆಂಬುದನ್ನು ನಾವು ಮರೆಯಕೂಡದು.

ಈಗ ಹೇಳಿ, ನಮ್ಮ ಪತ್ರಿಕೋದ್ಯಮಕ್ಕೆ ಸಿದ್ಧಾಂತ ಬೇಡವೆ, ಪತ್ರಕರ್ತರಾಗಿರುವವರು ಸೈದ್ಧಾಂತಿಕ ಸ್ಪಷ್ಟತೆ ಹೊಂದಿರಬಾರದೆ? ಆಕ್ಟಿವಿಸ್ಟುಗಳು ಪತ್ರಕರ್ತರಾಗುವುದು ಅಪರಾಧವೆ? ಪತ್ರಿಕೋದ್ಯಮ ಆಕ್ಟಿವಿಸಂಗೆ ಪೂರಕವಾಗಿರಬಾರದೆ? ಇಂದು ಬ್ರಾಹ್ಮಣ್ಯದ ದಿಗ್ವಿಜಯ ಮತ್ತೊಮ್ಮೆ ನಿಜವಾಗುವ ಕರಾಳ ಛಾಯೆ ಇಡೀ ದೇಶವನ್ನು ಆವರಿಸಿಕೊಂಡಿರುವಾಗ, ಬಾಬಾಸಾಹೇಬರು ಎಚ್ಚರಿಸಿದ್ದ ಆ ʼಪ್ರತಿಕ್ರಾಂತಿʼ ತನ್ನ ಕಬಂಧಬಾಹುಗಳನ್ನು ಚಾಚಿಕೊಂಡ ಎಲ್ಲವನ್ನೂ ನೊಣೆಯುತ್ತಿರುವಾಗ, ಅಪರಾಧವೇ ಅಧಿಕಾರವಾಗಿ ದೇಶದ ಪ್ರಮುಖ ಸಂಸ್ಥೆಗಳೆಲ್ಲವನ್ನೂ ನುಂಗಿ ನೀರುಕುಡಿದು ತಮ್ಮ ಅಂಕೆಯಲ್ಲಿ ತಂದುಕೊಂಡು ಇಡೀ ದೇಶದ ಜನರಿಗೆ ಕರಾಳತೆ ದರ್ಶನ ಮಾಡುತ್ತಾ ಭ್ರಷ್ಟಾಚಾರದ ವ್ಯಾಖ್ಯಾನವನ್ನೇ ತಿರುಗುಮರುಗು ಮಾಡುತ್ತಿರುವಾಗ ಸೊ ಕಾಲ್ಡ್ ತಟಸ್ಥತೆಯ ಬದನೇಕಾಯಿಯನ್ನು ನೆಚ್ಚಿಕೊಳ್ಳದೇ ನಿರ್ಧಾರಿತ ಜನಾಂದೋಲನಗಳಿಗೆ ಪೂರಕವಾಗಿ ಪತ್ರಿಕೋದ್ಯಮ ಮತ್ತು ಪತ್ರಕರ್ತರಾದವರು ಜೊತೆಗೂಡುವುದು ಬೇಡವೇ?

‘ಬೇಡ’ ಎಂಬ ಅಭಿಪ್ರಾಯ ನಿಮ್ಮದಾಗಿದ್ದರೆ ನಿಮ್ಮ ಬಳಿ ಹೇಳಲು ನನಗೆ ಏನೂ ಉಳಿದಿಲ್ಲ. ನೀವು ನಿಮ್ಮದೇ ಸುಖಾಸನದಲ್ಲಿ ನೆಮ್ಮದಿಯಾಗಿ ಪವಡಿಸಬಹುದು, ನನಗೇನೂ ಅಭ್ಯಂತರವಿಲ್ಲ. (ಬರಹ- ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಬುಧವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವಮೊಗ್ಗ ಹಾಲು ಒಕ್ಕೂಟದಿಂದ ಬೇರ್ಪಡಿಸಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಒಳಗೊಂಡ ಮೆಗಾ ಡೈರಿ ಆರಂಭಿಸಲು ನನ್ನ ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿಯಲ್ಲಿ ಭೂಮಿ ಖರೀದಿಸಿದ್ದೇವೆ. ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಿ ಡೈರಿ ಆರಂಭಿಸಿದರೆ ಈ ಭಾಗದ ರೈತರು ಆರ್ಥಿಕವಾಗಿ ಸಬಲರಾಗಲಿದ್ದಾರೆ ಎಂದು ಸದನದ ಗಮನ ಸೆಳೆದರು.

ಹೈನುಗಾರಿಕೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಸಬ್ಸಿಡಿ ಕೊಡುವುದನ್ನು ಶೇ.75ರಷ್ಟು ಹೆಚ್ಚಳ ಮಾಡಿದರೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದರು.

ಮಧ್ಯ ಕರ್ನಾಟಕದ ಕೇಂದ್ರ ಬಿಂದು, ಹಿಂದುಳಿದ ಜಿಲ್ಲೆ ದಾವಣಗೆರೆ. ಅದರಲ್ಲೂ ಅತೀ ಹಿಂದುಳಿದ ಮೀಸಲು ಕ್ಷೇತ್ರ ಮಾಯಕೊಂಡ. ಸಿರಿಗೆರೆ ತರಳಬಾಳು ಜಗದ್ಗುರುಗಳ ಹೋರಾಟದ ಫಲವಾಗಿ ನನ್ನ ಕ್ಷೇತ್ರದಲ್ಲಿ 22 ಕೆರೆಗಳ ಯೋಜನೆ ಜಾರಿಗೊಂಡು ಎಲ್ ಅಂಡ್ ಟಿ ಕಂಪನಿ ಕಾಮಗಾರಿ ನಡೆಸಿತ್ತು. ಕಳಪೆ ಕಾಮಗಾರಿಯಿಂದ 100 ಹಳ್ಳಿಗಳಿಗೆ ಕುಡಿಯುವ ನೀರು, ನೀರಾವರಿ ಕಲ್ಪಿಸಬೇಕೆಂಬ ಉದ್ದೇಶ ಈಡೇರಿಲ್ಲ. ಪುನಃ ಹೊಸ ಪೈಪ್‌ಲೈನ್ ಕಾಮಗಾರಿಗೆ ಹಣ ನೀಡಿ ಕಾಮಗಾರಿ ಆರಂಭಿಸುವAತೆ ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಕೂಡಲೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ನನ್ನ ಕ್ಷೇತ್ರದಲ್ಲಿ ಹೆಚ್ಚು ಗುಡ್ಡಗಾಡು ಪ್ರದೇಶ ಹೊಂದಿದ್ದು, ಈ ಪ್ರದೇಶಗಳಲ್ಲಿ ಅತೀ ಹೆಚ್ಚು ಕೆರೆಗಳನ್ನು ನಿರ್ಮಾಣ ಮಾಡಿದರೆ ಜನಜಾನುವಾರುಗಳಿಗೆ ಕುಡಿಯುವ ನೀರು, ಅಂತರ್ಜಲ ಮಟ್ಟ ವೃದ್ಧಿಗೆ ಅನುಕೂಲವಾಗುತ್ತದೆ. ಅಲ್ಲದೇ ಬ್ರಿಟಿಷರು ನಿರ್ಮಿಸಿದ ಕೆರೆ ಇದೆ. ಅದನ್ನು ಜೀರ್ಣೋದ್ಧಾರ ಮಾಡಿದರೆ ಇಡೀ ಪಕ್ಷಿ ಸಂಕುಲ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದು ಸದನ ಗಮನ ಸೆಳೆದರು.

ಎಸ್ಸಿ-ಎಸ್ಟಿ ಅಭಿವೃದ್ಧಿ ನಿಗಮಗಳಿಗೆ ಅನೇಕ ಸೌಲಭ್ಯ ಒದಗಿಸಲು ಅನುದಾನದ ಕೊರತೆ ಇದೆ. ಹೆಚ್ಚಿನ ಅನುದಾನ ನೀಡಬೇಕು. ಎಸ್ಸಿ-ಎಸ್ಟಿ ಸಮುದಾಯ ಆರ್ಥಿಕವಾಗಿ ಸಬಲರಾಗಲು ಭೂಒಡೆತನ ಯೋಜನೆ ಜಾರಿಗೊಳಿಸಿದ್ದು, ಕ್ಷೇತ್ರಕ್ಕೆ ಕೇವಲ ಒಂದೇ ಕೊಟ್ಟರೆ ಸಾಧ್ಯವಾಗುವುದಿಲ್ಲ. ಇದಕ್ಕೆ ಹೆಚ್ಚು ಒತ್ತು ಕೊಡಬೇಕು. ಖಾಸಗಿ ಕಾಲೇಜುಗಳಲ್ಲಿ ಡಿಪ್ಲೊಮಾ, ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್ನಲ್ಲಿ ಅಭ್ಯಾಸ ಮಾಡುವ ಎಸ್ಸಿ-ಎಸ್ಟಿ ಮಕ್ಕಳಿಗೆ 2013-18ರಲ್ಲಿ ಹಾಸ್ಟೆಲ್ ಸೌಲಭ್ಯ ಇತ್ತು, ಈಗ ಇಲ್ಲ. ಕೂಡಲೇ ಈ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.

ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಹಗಲು ದರೋಡೆ ಮಾಡಲಾಗುತ್ತಿದೆ. ಹೊರ ಗುತ್ತಿಗೆ ತೆಗೆದು ನೇರವಾಗಿ ನೇಮಕಾತಿ ಮಾಡಿಕೊಂಡರೆ ಅವರ ಬದುಕು ಉಜ್ವಲವಾಗುತ್ತದೆ. ಶೋಷಿತ ಸಮುದಾಯಗಳಿಗೆ ತ್ವರಿತ ನ್ಯಾಯ ಒದಗಿಸಲು ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ರಾಜ್ಯದಲ್ಲಿ 33 ವಿಶೇಷ ಪೊಲೀಸ್ ಠಾಣೆ ತೆರೆಯಲು ಕ್ರಮ, ಅಲ್ಲದೇ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ 2 ಕೋಟಿ ಮೀಸಲು, ಅದರಂತೆ ಒಬಿಸಿ, ಅಲ್ಪಸಂಖ್ಯಾತರಿಗೂ 2 ಕೋಟಿ ಮೀಸಲಿಡುವ ಮೂಲಕ ರೈತರು, ಕಾಯಕ ಜೀವಿಗಳು, ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್‌ಸಿಪಿ-ಎಸ್‌ಟಿಪಿ ಯೋಜನೆಯಡಿ 48,018 ಕೋಟಿ ರೂ. ಬಜೆಟ್‌ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.


  • ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ
    ಮಳೆಗಾಲದಲ್ಲಿ ತುಂಗಾ ಜಲಾಯಶದಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸಿ ಅಪರ್ ಭದ್ರಾ ಯೋಜನೆ ನೀರು ನೀಡುವ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಿಗೆ ಅನುಕೂಲವಾಗಲಿದೆ. ಇಲ್ಲದಿದ್ದರೆ, ನಮ್ಮ ಭಾಗದ ರೈತರಿಗೆ ಅನಾನುಕೂಲವಾಗಲಿದೆ. ಕೂಡಲೇ ಸರ್ಕಾರ ಈ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು. ರಾಗಿ, ಭತ್ತ, ತೊಗರಿ ಬೆಂಬಲ ಬೆಲೆಯಡಿ ಖರೀದಿಸಿದಂತೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್ ಪಾರ್ಸಿ ಧರ್ಮದವರಿಗೆ 75% ಸ್ಥಾನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 25% ಸ್ಥಾನಗಳು ಮೀಸಲಾಗಿವೆ.ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಆಧಾರದ ಮೇಲೆ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://sevasindhuservices.karnataka.gov.in/

ಪ್ರವೇಶ ಪಡೆಯಲು ಅರ್ಹತೆಗಳು

  • 05 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಪೋಷಕರ ಆದಾಯದ ಮಿತಿ ಎಸ್.ಸಿ/ಎಸ್.ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ
  • 1 ಲಕ್ಷ ರೂ.ಗಳು ಮತ್ತು ಅಲ್ಪಸಂಖ್ಯಾತರಿಗೆ 2.5ಲಕ್ಷ ರೂ.ಗಳು ಮತ್ತು ಹಿಂದುಳಿದ ವರ್ಗದವರಿಗೆ 44500/- ರೂ.ಗಳಿಗೆ ಮೀರಿರಬಾರದು.

ವಸತಿ ಶಾಲೆಯಲ್ಲಿ ದೊರೆಯುವ ಸೌಲಭ್ಯಗಳು

  • ಆಯ್ಕೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ 12 ತರಗತಿಯವರೆಗೆ ಉಚಿತ ಶಿಕ್ಷಣ.
  • ಉಚಿತ ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್, ಹಾಸಿಗೆ ಹೊದಿಕೆ ಜೊತೆಗೆ ಉತ್ತಮ ಮೂಲ ಸೌಲಭ್ಯ ಒದಗಿಸಲಾಗುವುದು.
  • ಸುಸಜ್ಜಿತ ಕೊಠಡಿ ಹಾಗೂ ವಸತಿ ನಿಲಯಗಳು, ವಿದ್ಯುತ್ ವ್ಯವಸ್ಥೆ, 24×7 ಬಿಸಿ ನೀರಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ.
  • ನುರಿತ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಭೋದನೆ, ಪ್ರತಿ ವಿಷಯಕ್ಕೆ ಸುಸಜ್ಜಿತ ಪ್ರಯೋಗಾಲಯ ಸೌಲಭ್ಯ ಹಾಗೂ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಇದೆ.
  • ಉಚಿತ ವಸತಿ ಮತ್ತು ಭೋಜನ ವ್ಯವಸ್ಥೆ ಇದೆ. ಜೊತೆಗೆ 24×7 CCTV ನಿರೀಕ್ಷಣೆಯಲ್ಲಿ ಇರುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending