ರಾಜಕೀಯ
ಉತ್ತರ ಪ್ರದೇಶ ಚುನಾವಣಾ ಫಲಿತಾಂಶ ಕುರಿತ ವಾಸ್ತವ ನೆಲೆಯ ವಿಶ್ಲೇಷಣೆ
ದೀರ್ಘಕಾಲಿಕ ರಾಜಕೀಯ ವಿದ್ಯಮಾನದ ಅನಾವರಣ
ಹಿಂದೂ ಬಹುಸಂಖ್ಯಾವಾದಕ್ಕೆ ರಾಜಕೀಯ ಭೂಮಿಕೆಯಾಗಿ ಉತ್ತರಪ್ರದೇಶ ಸಿದ್ಧ
- ಮೂಲ : ಅಸೀಮ್ ಅಲಿ (ದ ಹಿಂದೂ 11 ಮಾರ್ಚ್ 22), ಅನುವಾದ : ನಾ ದಿವಾಕರ
ಉತ್ತರಪ್ರದೇಶ ಒಂದು ಹೊಸ ರಾಜಕೀಯ ಶಕೆಯನ್ನು ಪ್ರವೇಶಿಸಿದೆ. ಮೂರನೆ ಎರಡರಷ್ಟು ಬಹುಮತ ಪಡೆಯುವ ಮೂಲಕ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, ಕಳೆದ ಮೂರು ದಶಕಗಳಲ್ಲಿ ಮರಳಿ ಅಧಿಕಾರ ಪಡೆದ ಪ್ರಪ್ರಥಮ ಪಕ್ಷವಾಗಿ ಹೊರಹೊಮ್ಮಿದೆ. ತನ್ನ ಮುಸ್ಲಿಂ-ಯಾದವ ಮತಬ್ಯಾಂಕನ್ನು ದಾಟಿ ತನ್ನದೇ ಆದ ಮತದಾರ ವಲಯವನ್ನು ಸೃಷ್ಟಿಸಿಕೊಳ್ಳುವ ಸಮಾಜವಾದಿ ಪಕ್ಷದ ಪ್ರಯತ್ನ ವಿಫಲವಾಗಿದೆ. ಕಾಂಗ್ರೆಸ್ ಮತ್ತು ಬಹುಜನ ಸಮಾಜ ಪಕ್ಷ ಸಂಪೂರ್ಣ ಅವನತಿಯತ್ತ ಸಾಗಿವೆ.
ಪ್ರಧಾನ ನಿರೂಪಣೆಯ ಜನಾದೇಶ
ಬಿಜೆಪಿ ಗಳಿಸಿರುವ ಸ್ಥಾನಗಳ ಸಂಖ್ಯೆ ನಿರೀಕ್ಷೆಯನ್ನು ಮೀರಿದ್ದರೂ ಪಕ್ಷದ ಗೆಲುವು ಅನಿರೀಕ್ಷಿತವೇನೂ ಆಗಿರಲಿಲ್ಲ. ಯಾವುದೇ ಅಲೆಯ ಪ್ರಭಾವ ಇಲ್ಲದೆಯೇ ಈ ಚುನಾವಣೆಗಳು ನಡೆದಿದ್ದವು. ಮಾಧ್ಯಮಗಳ ಚುನಾವಣಾ ವರದಿಗಳಲ್ಲೂ ಸಹ ಆಡಳಿತ ವಿರೋಧಿ ಧೋರಣೆಯಾಗಲೀ, ಸರ್ಕಾರದ ಪರವಾದ ಧೋರಣೆಯಾಗಲೀ ಕಂಡುಬಂದಿರಲಿಲ್ಲ. ಆದರೂ ಬಿಜೆಪಿ ಸಾಧಿಸಿರುವ ಅಭೂತಪೂರ್ವ ಗೆಲುವಿಗೆ ಕಾರಣಗಳೇನು ಎನ್ನುವುದು ಚರ್ಚೆಗೊಳಗಾಗಬೇಕಿದೆ.
ಯಾವುದೇ ರಾಜಕೀಯ ಜನಾದೇಶವನ್ನು ಆಳಕ್ಕಿಳಿದು ವಿಸಂಕೇತಿಸುವುದು ಸಂಕೀರ್ಣವಾದ ಕೆಲಸ. ಒಂದು ಕೆಲವು ರಾಜಕೀಯ ತಜ್ಞರು ಈ ಚುನಾವಣೆಗಳ ಫಲಿತಾಂಶವನ್ನು ಯೋಗಿ ಆದಿತ್ಯನಾಥ್ ಆಳ್ವಿಕೆಯ ಸಾಧನೆಗಳ ಫಲ ಎಂದೇ ವ್ಯಾಖ್ಯಾನಿಸಿದ್ದಾರೆ. ಜನಕಲ್ಯಾಣ ಯೋಜನೆಗಳ ಅನುಷ್ಟಾನ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಿರುವುದೇ ಕಾರಣ ಎಂದೂ ಹೇಳಲಾಗುತ್ತದೆ.
ಇನ್ನು ಕೆಲವು ವಿಶ್ಲೇಷಕರು, ಬಿಜೆಪಿಯ ಸಂಘಟನಾತ್ಮಕ ರಚನೆ ಮತ್ತು ಮಾಧ್ಯಮಗಳ ನಿರ್ವಹಣೆಯೇ ಈ ಗೆಲುವಿಗೆ ಕಾರಣ ಎಂದು ಅಭಿಪ್ರಾಯಪಡುತ್ತಾರೆ. ಈ ಎರಡೂ ಅಭಿಪ್ರಾಯಗಳಲ್ಲಿ ಸತ್ಯಾಂಶವಿದೆ. ಆದರೂ ಈ ವಿಶ್ಲೇಷಣೆಗಳಲ್ಲಿ , ಉತ್ತರಪ್ರದೇಶದ ಜನಾದೇಶದ ಹಿಂದಿರುವ ಸೈದ್ಧಾಂತಿಕ ಶಕ್ತಿಯನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ. ಈ ಸೈದ್ಧಾಂತಿಕ ಶಕ್ತಿಯೇ ಹಿಂದೂ ಬಹುಸಂಖ್ಯಾವಾದ. ಹಿಂದೂ ಬಹುಸಂಖ್ಯಾವಾದವೇ ಬಿಜೆಪಿಯ ಚುನಾವಣಾ ಪ್ರಚಾರದ ಪ್ರಧಾನ ನಿರೂಪಣೆ ಎಂದು ಹೇಳಬಹುದು. ಉಳಿದೆಲ್ಲಾ ನಿರೂಪಣೆಗಳೂ ಸಹ ಈ ಪ್ರಧಾನ ನಿರೂಪಣೆಗೆ ಪೂರಕವಾಗಿಯೇ ಕಂಡುಬರುತ್ತದೆ.
ಕಳೆದ ಒಂದು ದಶಕದ ಅವಧಿಯಲ್ಲಿ ಬಿಜೆಪಿ ಕ್ರೋಢೀಕರಿಸಿದ್ದ, ಧೃವೀಕರಿಸಿದ್ದ ಹಿಂದೂ ಮತದಾರರ ಸಾಮಾಜಿಕ ಮೈತ್ರಿಯನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳುವುದು ಬಿಜೆಪಿಯ ಪಾಲಿಗೆ ಸವಾಲಿನ ಪ್ರಶ್ನೆಯಾಗಿತ್ತು. ಮೇಲ್ಜಾತಿ ಸಮುದಾಯಗಳು, ಯಾದವರನ್ನು ಹೊರತುಪಡಿಸಿದ ಹಿಂದುಳಿದ ಜಾತಿಗಳು, ಜಾಟವರನ್ನು ಹೊರತುಪಡಿಸಿದ ದಲಿತ ಸಮುದಾಯ ಈ ಮೈತ್ರಿಕೂಟದಲ್ಲಿ ಪ್ರಮುಖವಾಗಿದ್ದವು.
ಹಿಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ ಉಂಟುಮಾಡಿದ್ದ ಅನೇಕ ರೀತಿಯ ಸಾರ್ವಜನಿಕರ ಅಸಮಾಧಾನಗಳು ಹೊಗೆಯಾಡುತ್ತಿದ್ದುದು ಪಕ್ಷಕ್ಕೆ ಪ್ರಮುಖ ಸವಾಲಾಗಿತ್ತು. ಇವುಗಳಲ್ಲಿ ಪ್ರಧಾನವಾಗಿ ನಿರುದ್ಯೋಗದ ಬವಣೆ, ಬೆಲೆ ಏರಿಕೆ, ಸ್ಥಗಿತಗೊಂಡಿದ್ದ ಆದಾಯದ ಮೂಲಗಳು, ಗ್ರಾಮೀಣ ಬಿಕ್ಕಟ್ಟು, ಕೋವಿದ್ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಉಂಟಾಗಿದ್ದ ಹಲವು ದುರಂತಗಳು, ಲಾಕ್ ಡೌನ್ ದುಷ್ಪರಿಣಾಮಗಳು ಯೋಗಿ ಸರ್ಕಾರದ ಸುಗಮ ಹಾದಿಗೆ ಅಡ್ಡಿಯಾಗುವ ಸಾಧ್ಯತೆಗಳಿದ್ದವು.
ಸರ್ಕಾರದ ಈ ಎಲ್ಲ ವೈಫಲ್ಯಗಳನ್ನೂ ಮೀರಿ ಯೋಗಿ ಸರ್ಕಾರದ ಉಚಿತ ಪಡಿತರ ನೀಡುವ ಯೋಜನೆ ಫಲಕಾರಿಯಾಗಿದೆ ಎಂದು ಹೇಳುವುದು ಬಹುಶಃ ಭೋಳೆತನದ ಮಾತಾಗುತ್ತದೆ. ಉಚಿತವಾಗಿ ನೀಡಲಾಗುವ ಆಹಾರ ಧಾನ್ಯಗಳನ್ನು ಒದಗಿಸುವ ಪದ್ಧತಿಗೆ ಭಾರತದ ಮತದಾರರು ಕಳೆದ ಐವತ್ತು ವರ್ಷಗಳಿಂದಲೂ ಒಗ್ಗಿಹೋಗಿರುವುದರಿಂದ, 21ನೆಯ ಶತಮಾನದ ಮೂರನೆಯ ದಶಕದಲ್ಲಿ ಮತದಾರರು ಈ ಯೋಜನೆಗಳಿಂದ ಭ್ರಮಾಧೀನರಾಗುತ್ತಾರೆ ಎಂದು ನಂಬುವುದು ಕಷ್ಟವಾದೀತು.
ಜನಕಲ್ಯಾಣಯೋಜನೆಯನ್ನೂ ಮೀರಿದ ಸಂಗತಿ
ಅನೇಕ ಜನಪರ ಕಲ್ಯಾಣ ಯೋಜನೆಗಳಡಿ ನೇರ ನಗದು ಪಾವತಿ ಮಾಡುವ ಪದ್ಧತಿ, ಉದಾಹರಣೆಗೆ ರೈತರ ಆದಾಯ ಬೆಂಬಲ, ಶೌಚಾಲಯ ನಿರ್ಮಾಣ, ವಸತಿ ಯೋಜನೆ, ಶಾಲಾ ಬ್ಯಾಗುಗಳು ಇತ್ಯಾದಿ,, ಒಂದು ಪ್ರಬಲ ಅಸ್ತ್ರವಾಗಿಯೇ ಕಾಣುತ್ತದೆ. ಆದರೆ ಚುನಾವಣೆಯ ಮತದಾನದ ಏರುಪೇರುಗಳನ್ನು ವಿಶ್ಲೇಷಿಸುವ ಸಂದರ್ಭದಲ್ಲಿ ಇಲ್ಲಿಯೂ ಸಹ ವಿಶ್ಲೇಷಕರು ಎಚ್ಚರಿಕೆಯಿಂದ ಹೆಜ್ಜೆಯಿಡಬೇಕಾಗುತ್ತದೆ.
ಏಕೆಂದರೆ ಇತ್ತೀಚೆಗೆ ನಡೆದ ಹರಿಯಾಣ, ಮಹಾರಾಷ್ಟ್ರ ಮತ್ತ್ ಜಾರ್ಖಂಡ್ ಚುನಾವಣೆಗಳಲ್ಲಿ ಈ ಕಲ್ಯಾಣ ಯೋಜನೆಗಳ ನೇರ ನಗದು ಪಾವತಿ ಬಿಜೆಪಿಯನ್ನು ಅಧಿಕಾರಕ್ಕೆ ತರಲಿಲ್ಲ. ಅಲ್ಲಿ ಬಿಜೆಪಿ ಮತದಾರರ ಅವಕೃಪೆಯನ್ನು ಎದುರಿಸಬೇಕಾಯಿತು. ಎರಡನೆಯದಾಗಿ, ಚುನಾವಣಾ ಸಮೀಕ್ಷೆಗಳಾಗಲೀ, ಮಾಧ್ಯಮಗಳ ವರದಿಗಳಾಗಲೀ ಈ ರೀತಿಯ ಬೃಹತ್ ಪ್ರಮಾಣದ ಜನಾದೇಶಕ್ಕೆ ಪೂರಕವಾದ ಜನೋತ್ಸಾಹವನ್ನು ಬಿಂಬಿಸಿರಲಿಲ್ಲ. ಚುನಾವಣೆಗಳಿಗೆ ಎರಡು ತಿಂಗಳ ಮುಂಚೆ ನಡೆಸಲಾದ ಸಮೀಕ್ಷೆಗಳಲ್ಲೂ ಸಹ ಸಾರ್ವಜನಿಕ ಅಭಿಪ್ರಾಯಗಳು ಅಸ್ಪಷ್ಟತೆಯಿಂದಲೇ ಕೂಡಿದ್ದವು.
ಸಮೀಕ್ಷೆಗೊಳಪಟ್ಟ ಮೂರನೆ ಎರಡರಷ್ಟು ಮತದಾರರು ಸರ್ಕಾರದ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಕೆಲವೇ ಸಂಖ್ಯೆಯ ಜನ ಯೋಗಿ ಸರ್ಕಾರ ಮರಳಿ ಅಧಿಕಾರಕ್ಕೆ ಬರುವಂತೆ ಆಶಿಸಿದ್ದರು. ಹಾಗಾಗಿಯೇ ಇಲ್ಲಿ ಮತ್ತಾವುದೋ ಅಂಶ ಪ್ರಧಾನವಾಗಿರುವುದನ್ನು ಗುರುತಿಸಬೇಕಿದೆ. ಇಲ್ಲಿ ನಿರ್ಣಾಯಕವಾಗಿ ಕಾಣುವುದು ಹಿಂದುತ್ವ ಬಹುಸಂಖ್ಯಾವಾದ. ಈ ಬಹುಸಂಖ್ಯಾವಾದವೇ, ಯಾದವರು ಮತ್ತು ಜಾಟವರನ್ನು ಹೊರತುಪಡಿಸಿ, ಬಿಜೆಪಿ ಮತ್ತು ಹಿಂದೂ ಮತದಾರರ, ನಡುವೆ ಭಾವನಾತ್ಮಕವಾದ ಸೇತುವೆಯನ್ನು ನಿರ್ಮಿಸಿದೆ.
ಉತ್ತರ ಪ್ರದೇಶದ ಹಿಂದೂ ಮತದಾರರಲ್ಲಿ ಒಂದು ಸಮಾನ ಪ್ರಜ್ಞೆಯನ್ನು ಗುರುತಿಸಬಹುದು ಎಂದು ಯೋಗೇಂದ್ರ ಯಾದವ್ ತಮ್ಮ ಸಮೀಕ್ಷೆಯಲ್ಲಿ ಹೇಳಿದ್ದುದನ್ನು ಸ್ಮರಿಸಬಹುದು. ಈ ಸಮಾನ ಪ್ರಜ್ಞೆಯ ಮೂಲವನ್ನು ಯಾದವ್ ಅವರು ಹಿಂದೂ-ಮುಸ್ಲಿಂ ವಿಭಜನೆಯಲ್ಲಿ ಗುರುತಿಸುತ್ತಾರೆ. ಈ ಪ್ರಜ್ಞೆಯ ಪ್ರಭಾವದಿಂದಲೇ ಜನರು ತಮ್ಮ ಭೌತಿಕ ಸಂಕಷ್ಟಗಳನ್ನೂ ಬದಿಗೆ ಸರಿಸಿ , ರಾಜ್ಯ ಸರ್ಕಾರದ ದುರಾಡಳಿತವನ್ನೂ ಲೆಕ್ಕಿಸದೆ “ ತಮ್ಮವರ” ಪರ ವಹಿಸಿ ಮತ ಚಲಾಯಿಸಿದ್ದಾರೆ.
ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ಸಂಘರ್ಷ
ಉತ್ತರಪ್ರದೇಶ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ಏರ್ಪಟ್ಟಿದ್ದ ಸೈದ್ಧಾಂತಿಕ ಸಂಘರ್ಷ ಮೂಲತಃ ಯಾದವೇತರ ಹಿಂದುಳಿದ ವರ್ಗಗಳ ಮತದಾರರ ಸುತ್ತಲೂ ಹೆಣೆಯಲ್ಪಟ್ಟಿತ್ತು. ಉಳಿದ ಮತದಾರರಾದ ಮೇಲ್ಜಾತಿಗಳು, ಮುಸ್ಲಿಮರು, ಯಾದವರು ಮತ್ತು ಜಾಟರು ತಮ್ಮದೇ ಆದ ಪ್ರಭಾವಿ ವಲಯದಲ್ಲಿ ಗುರುತಿಸಿಕೊಂಡಿದ್ದರಿಂದ, ಹಿಂದುಳಿದ ವರ್ಗಗಳ ಮತದಾರರೇ ಚುನಾವಣೆಯಲ್ಲಿ ನಿರ್ಣಾಯಕರಾಗಿದ್ದರು.
ಕೊಂಚ ಮಟ್ಟಿಗೆ ಜಾಟವರನ್ನು ಹೊರತುಪಡಿಸಿದ ದಲಿತ ಮತದಾರರೂ ನಿರ್ಣಾಯಕರಾಗಿದ್ದರು. ಈ ಮತದಾರ ವಲಯವನ್ನೇ ಅಖಿಲೇಶ್ ಯಾದವ್ ಹೆಚ್ಚಾಗಿ ಅವಲಂಬಿಸಿದ್ದರು. ಹಕ್ಕು ಮತ್ತು ಸಮಾನ ಪ್ರಾತಿನಿಧ್ಯ ಈ ಎರಡು ಮಂಡಲ್ ರಾಜಕಾರಣದ ಮೂಲ ಧಾತುಗಳನ್ನು ಅವಲಂಬಿಸಿದ್ದ ಅಖಿಲೇಶ್ ಯಾದವ್ ಹಿಂದುಳಿದ ವರ್ಗಗಳ ಕ್ರಾಂತಿಯ ಭರವಸೆಯನ್ನೂ ನೀಡಿದ್ದರು.
ಆದರೆ ಸಮಾಜವಾದಿ ಪಕ್ಷದ ಮಂಡಲ್ ರಾಜಕಾರಣದ ಪ್ರಭಾವಕ್ಕೆ ಹಿಂದುಳಿದ ವರ್ಗಗಳ ಮತದಾರರು ಬಲಿಯಾಗದಂತೆ ಬಿಜೆಪಿ ತಡೆಗಟ್ಟಿದ್ದಾದರೂ ಹೇಗೆ ? ಅಥವಾ ಹಿಂದುಳಿದ ವರ್ಗಗಳ ಮತದಾರರು ತಮ್ಮ ಮಂಡಲ್ ರಾಜಕಾರಣಕ್ಕೂ ವಿಮುಖರಾಗಿ, ಹಿಂದೂ ರಾಜಕೀಯ ಅಸ್ಮಿತೆಯನ್ನು ಅಪ್ಪಿಕೊಳ್ಳುವಂತೆ ಮಾಡುವ ನಿಟ್ಟಿನಲ್ಲಿ ಹಿಂದೂ ಬಹುಸಂಖ್ಯಾವಾದ ಯಶಸ್ವಿಯಾದದ್ದಾದರೂ ಹೇಗೆ ? ಇಲ್ಲಿ ಎರಡು ಅಂಶಗಳನ್ನು ಪರಿಶೀಲಿಸಬೇಕಾಗುತ್ತದೆ.
ಮೊದಲನೆಯದಾಗಿ, ಹಿಂದುಳಿದ ವರ್ಗಗಳಲ್ಲಿ ಭೌತಿಕ ಸುರಕ್ಷತೆಯ ಭರವಸೆಯನ್ನು ಉಂಟುಮಾಡಿದ್ದು. ಬುಲ್ಡೋಜರ್ಗಳು ಮತ್ತು ಎನ್ಕೌಂಟರ್ಗಳ ಸಂಕೇತಗಳ ಮೂಲಕ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿದ್ದು. ಹಿಂದೂ ಪ್ರಭಾವಳಿಯಲ್ಲಿರುವ ಹಿಂದುಳಿದ ವರ್ಗಗಳಲ್ಲಿ ತಾವು ಯಾದವ್ ಮತ್ತು ಮುಸ್ಲಿಂ ಕ್ರಿಮಿನಲ್ಗಳಿಂದ ಸುರಕ್ಷಿತವಾಗಿದ್ದೇವೆ ಎಂಬ ಭಾವನೆ ಮೂಡಿಸಿದ್ದು.
ಕೋಮುವಾದಿ ಪೂರ್ವಗ್ರಹಗಳಿಗೆ ಸುರಕ್ಷತೆಯ ಹೊದಿಕೆಯನ್ನು ನೀಡುವ ಪ್ರಕ್ರಿಯೆ ಉತ್ತರಪ್ರದೇಶದಲ್ಲಿ ಪರಾಕಾಷ್ಠೆ ತಲುಪಿತ್ತು. ಮುಖ್ತಾರ್ ಅನ್ಸಾರಿ ಮತ್ತು ಅತೀಕ್ ಅಹಮದ್ ಅವರಂತಹ ಮುಸ್ಲಿಂ ಬಲಾಢ್ಯರನ್ನು ಮಾಫಿಯಾದೊಡನೆ ಬೆಸೆಯುವ ಪ್ರಕ್ರಿಯೆ ಒಂದೆಡೆಯಾದರೆ ಮತ್ತೊಂದೆಡೆ ಸಿಎಎ ವಿರೋಧಿ ಹೋರಾಟಗಾರರನ್ನು ದಂಗೆಕೋರರೊಂದಿಗೂ, ಲವ್ ಜಿಹಾದ್ ಆರೋಪಿಗಳು ಮತ್ತು ಗೋವು ಕಳ್ಳಸಾಗಾಣಿಕೆದಾರರನ್ನು ಸಮಾಜಘಾತುಕ ಶಕ್ತಿಗಳೊಂದಿಗೂ ಬೆಸೆಯುವುದರಲ್ಲಿ ಯೋಗಿ ಸರ್ಕಾರ ಯಶಸ್ವಿಯಾಗಿತ್ತು.
ಉದಾಹರಣೆಗೆ 2018-20ರ ಅವಧಿಯಲ್ಲಿ ಉತ್ತರಪ್ರದೇಶ ಸರ್ಕಾರ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲ್ಪಟ್ಟಿರುವ ಮೂರನೆ ಒಂದರಷ್ಟು ಆರೋಪಿಗಳು ಗೋವು ಕಳ್ಳಸಾಗಾಣಿಕೆಯ ಆರೋಪವನ್ನೇ ಎದುರಿಸುತ್ತಿದ್ದಾರೆ. ಈ ರೀತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ಎಂದರೆ ಸಮಾಜದ ಸುರಕ್ಷತೆಯ ದೃಷ್ಟಿಯಿಂದ ಮುಸ್ಲಿಮರೇ ಅಪಾಯಕಾರಿ ಎಂದು ಬಿಂಬಿಸುವುದರಲ್ಲಿ , ಹಾಗೆಯೇ ಈ ಅಪಾಯವನ್ನು ಮಟ್ಟಹಾಕುವ ನಿಟ್ಟಿನಲ್ಲೂ ಸರ್ಕಾರ ಸಕ್ರಿಯವಾಗಿದೆ ಎಂದು ಪ್ರದರ್ಶಿಸುವಲ್ಲಿ ಯೋಗಿ ಸರ್ಕಾರ ಯಶಸ್ವಿಯಾಗಿದೆ. ಮೇಲ್ನೋಟಕ್ಕೆ ಹಿಂದೂ ಮುಸ್ಲಿಂ ಘರ್ಷಣೆಯು ಕಾಣುತ್ತಿಲ್ಲ ಎಂದು ಹಲವು ಪತ್ರಿಕಾ ವರದಿಗಾರರು ವರದಿ ಮಾಡಿದ್ದರೂ, ಆಂತರಿಕವಾಗಿ ಮತದಾರರ ನಡುವೆ ಆಳವಾಗಿ ಬೇರೂರಿರುವ ಕೋಮು ಭಾವನೆಗಳನ್ನು ಅಲ್ಲಗಳೆಯಲಾಗುವುದಿಲ್ಲ.
ಆರ್ಥಿಕ ಸುಭದ್ರತೆ
ಇಲ್ಲಿ ಗಮನಿಸಬೇಕಾದ ಎರಡನೆಯ ಅಂಶವೆಂದರೆ, ಹಿಂದುಳಿದ ಜಾತಿಗಳಿಗೆ ಒಂದು ರೀತಿಯ ಆರ್ಥಿಕ ಸುರಕ್ಷತೆಯನ್ನು, ಯಾವುದೇ ಜಾತಿ ಅಸ್ಮಿತೆಗಳನ್ನು ಸೂಚಿಸದೆಯೇ ಒದಗಿಸಿರುವುದು. ಆರ್ಥಿಕ ಸುರಕ್ಷತೆಯನ್ನು ಒದಗಿಸುವ ತಂತ್ರಗಾರಿಕೆಯು ರಾಜಕೀಯವಾಗಿ ನಿರ್ಣಾಯಕವಾಗುವಷ್ಟೇ ಅದನ್ನು ಜನರಿಗೆ ತಲುಪಿಸುವ ವಿಧಾನಗಳೂ ನಿರ್ಣಾಯಕವಾಗುತ್ತವೆ.
ಉತ್ತರಪ್ರದೇಶದ ರಾಜಕಾರಣದಲ್ಲಿ ಮಂಡಲ್ ಮತ್ತು ದಲಿತ ರಾಜಕಾರಣವು ಹೆಚ್ಚು ಪ್ರಬಲವಾಗುತ್ತಿದ್ದರೂ ಮೂಲತಃ ಸಾರ್ವಜನಿಕ ಸವಲತ್ತುಗಳನ್ನು ಜನರಿಗೆ ತಲುಪುವಂತೆ ಮಾಡಲು ಜಾತಿ ಧೃವೀಕರಣವನ್ನು ಬಳಸಿಕೊಳ್ಳಲಾಗುತ್ತಿದೆ. ಬಿಜೆಪಿ ಸರ್ಕಾರ ಜಾರಿಗೊಳಿಸಿದ ಕಲ್ಯಾಣ ಯೋಜನೆಗಳು ಯೋಜನಾಬದ್ಧವಾಗಿದ್ದುದೇ ಅಲ್ಲದೆ ಸಾರ್ವತ್ರಿಕತೆಯನ್ನು ಪಡೆದುಕೊಂಡಿದ್ದವು.
ನೇರ ನಗದು ವರ್ಗಾವಣೆಯ ಮಾರ್ಗವನ್ನು ಅನುಸರಿಸುವ ಮೂಲಕ ಮಧ್ಯವರ್ತಿಗಳ ಕಾಟದಿಂದ ಫಲಾನುಭವಿಗಳು ಮುಕ್ತರಾಗಿದ್ದರು. ಇದು ಸಹಜವಾಗಿಯೇ ಜಾತಿ ಅಸ್ಮಿತೆಗಳ ರಾಜಕೀಯ ಲಕ್ಷಣಗಳನ್ನು ಶಿಥಿಲವಾಗಿಸುತ್ತದೆ. ಈ ರೀತಿಯ ಜನೋಪಯೋಗಿ ರಾಜಕಾರಣ ಹಿಂದೂ ಬಹುಸಂಖ್ಯಾವಾದಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುವುದರಿಂದ ದಲಿತರು ಮತ್ತು ಹಿಂದುಳಿದ ಜಾತಿಗಳು ಕ್ರಮೇಣ ರಾಜಕೀಯವಾಗಿ ಹಿಂದೂಗಳಾಗಿಯೇ ಗುರುತಿಸಿಕೊಳ್ಳುವಂತಾಗುತ್ತದೆ.
ಈ ಹಿಂದೂ ಬಹುಸಂಖ್ಯಾವಾದವನ್ನು ಸೋಲಿಸುವಲ್ಲಿ ಸಮಾಜವಾದಿ ಪಕ್ಷದ ಮಂಡಲ್ ತಂತ್ರಗಾರಿಕೆ ಏಕೆ ವಿಫಲವಾಯಿತು ಎಂದೂ ಯೋಚಿಸಬೇಕಾಗಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಒಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಂಡಲ್ ರಾಜಕಾರಣವನ್ನು ಪುನರುಜ್ಜೀವನಗೊಳಿಸುವುದು ಬೃಹತ್ ಸವಾಲಾಗಿ ಪರಿಣಮಿಸುತ್ತದೆ.
ಚುನಾವಣೆಗಳಿಗೂ ಮುನ್ನ ಸಮಾಜವಾದಿ ಪಕ್ಷವು ಬಿಜೆಪಿಯ ಪ್ರಮುಖ ಹಿಂದುಳಿದ ಜಾತಿಯ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ದಾರಾ ಸಿಂಗ್ ಚೌಹಾಣ್ ಮುಂತಾದ ನಾಯಕರನ್ನು ತನ್ನೆಡೆಗೆ ಸೆಳೆಯಲು ಯಶಸ್ವಿಯಾಗಿತ್ತು. ಯೋಗಿ ಆಡಳಿತದಲ್ಲಿ ಹಿಂದುಳಿದ ಜಾತಿಗಳು ಅಸಮಧಾನವನ್ನು ಹೊಂದಿವೆ ಎಂದು ನಿರೂಪಿಸುವ ತಂತ್ರ ಇದಾಗಿತ್ತು, ತನ್ಮೂಲಕ ಹಿಂದುಳಿದ ಜಾತಿಗಳ ಹಕ್ಕೊತ್ತಾಯಗಳನ್ನೇ ಚುನಾವಣೆಯ ಕೇಂದ್ರ ವಸ್ತುವನ್ನಾಗಿಸಲು ಸಮಾಜವಾದಿ ಪಕ್ಷ ಪ್ರಯತ್ನಿಸಿತ್ತು.
ಆದರೆ ಈ ಬಹುತೇಕ ನಾಯಕರು ತಮ್ಮ ಸಮುದಾಯದ ಮೇಲೆ ಹೆಚ್ಚಿನ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಈ ನಾಯಕರ ಅವಕಾಶವಾದಿತನ ಮತ್ತು ವ್ಯಾವಹಾರಿಕ ಧೋರಣೆಯ ಪರಿಣಾಮ, ಸೈದ್ಧಾಂತಿಕ ನೆಲೆಗಳು ಲೆಕ್ಕಕ್ಕೆ ಬರದಂತಾಯಿತು. ಸಮಾಜವಾದಿ ಪಕ್ಷದ ಈ ಪ್ರಯತ್ನಗಳು ಬಹಳ ತಡವಾಗಿ ನಡೆಯಿತು ಎನ್ನುವುದನ್ನೂ ಗಮನಿಸಬೇಕು.
ಒಂದು ಪರ್ಯಾಯದ ರಚನೆಯತ್ತ
ಮಂಡಲ್ ರಾಜಕಾರಣವನ್ನು ಪುನಶ್ಚೇತನಗೊಳಿಸಿ, ಪುನರುಜ್ಜೀವನಗೊಳಿಸುವುದೆಂದರೆ ಅದಕ್ಕೆ ದೀರ್ಘ ಕಾಲಿಕ ಸಂಘಟನಾತ್ಮಕ ಹಾಗೂ ಸೈದ್ಧಾಂತಿಕ ಪುನರ್ ನಿರ್ಮಾಣದ ಅವಶ್ಯಕತೆ ಇದೆ. ಈ ಮಾರ್ಗದಲ್ಲೇ ಹಿಂದುತ್ವದ ನಮ್ಯ ಸ್ವರೂಪವನ್ನು ಎದುರಿಸಲು ಸಾಧ್ಯವಾದೀತು.
ಬಿಜೆಪಿ ತನ್ನ ಹಿಂದೂ ಬಹುಸಂಖ್ಯಾವಾದದ ಪ್ರಚಾರವನ್ನು ವರ್ಷದುದ್ದಕ್ಕೂ ನಡೆಸುತ್ತಿರುತ್ತದೆ. ಪ್ರತಿ ವರ್ಷವೂ ನವೀಕರಿಸುತ್ತಿರುತ್ತದೆ. ಇದಕ್ಕೆ ಪೂರಕವಾದ ಸಂಘಟನಾತ್ಮಕ ಶಕ್ತಿಯೊಂದಿಗೇ ಸ್ನೇಹಪರ ಮಾಧ್ಯಮಗಳೂ ಸಹ ಇರುತ್ತವೆ. ಕೇವಲ ಮೂರು ತಿಂಗಳ ಕಾಲ ಬದುಕುಳಿಯುವ ಯಾವುದೇ ಪರ್ಯಾಯ ಸೈದ್ಧಾಂತಿಕ ನೆಲೆಗಳು ಈ ಸವಾಲನ್ನು ಎದುರಿಸಲು ಸಾಧ್ಯವಾಗುವುದಿಲ್ಲ.
ಯೋಗಿ ಆದಿತ್ಯನಾಥ್ ಕಳೆದ ಚುನಾವಣೆಗಳನ್ನು 80:20 ಅನುಪಾತದಲ್ಲಿ ಎದುರಿಸಿ ಗೆಲುವು ಸಾಧಿಸಿದ್ದಾರೆ. ಇದು ನೇರವಾಗಿಯೇ ಹಿಂದೂ:ಮುಸ್ಲಿಂ ರಾಜಕಾರಣವನ್ನು ಪ್ರತಿನಿಧಿಸುತ್ತದೆ. ಹಿಂದಿರುಗಿ ನೋಡಿದಾಗ ಈ ತಾತ್ವಿಕ ಚೌಕಟ್ಟು ವಾಸ್ತವ ಎನ್ನುವುದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ. ಮುಸಲ್ಮಾನರು ಎಂದಿನಂತೆ ಸಮಾಜವಾದಿ ಪಕ್ಷದ ಬೆನ್ನೆಲುಬಾಗಿದ್ದರು.
ಆದರೆ ಬಿಜೆಪಿ ಬಹುಸಂಖ್ಯೆಯ ಹಿಂದೂಗಳನ್ನು ತನ್ನೆಡೆಗೆ ಸೆಳೆದಿತ್ತು. ಕಳೆದ ಮೂರು ಚುನಾವಣೆಗಳಿಂದಲೂ ಬಿಜೆಪಿ ರಚಿಸುತ್ತಿರುವ ಹಿಂದೂ ರಾಜಕೀಯ ಬಹುಸಂಖ್ಯೆ ಈ ಚುನಾವಣೆಗಳ ಮೂಲಕ ದೀರ್ಘ ಕಾಲ ಉಳಿಯುವ ಒಂದು ವಿದ್ಯಮಾನವಾಗಿ ಗೋಚರಿಸಿದೆ. ಗುಜರಾತ್ನಂತೆಯೇ ಉತ್ತರಪ್ರದೇಶವೂ ಈಗ ಬಿಜೆಪಿ ಪ್ರಭಾವಕ್ಕೊಳಗಾದ ರಾಜ್ಯವಾಗಿದೆ. ಇಲ್ಲಿನ ರಾಜಕೀಯ ಸಾಮಾನ್ಯ ಪ್ರಜ್ಞೆಯಲ್ಲಿ ಹಿಂದೂ ಬಹುಸಂಖ್ಯಾವಾದ ಆಳವಾಗಿ ಬೇರೂರಿದೆ.
(ಲೇಖಕರು ರಾಜಕೀಯ ಸಂಶೋಧಕ ಹಾಗೂ ಅಂಕಣಕಾರ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
~ಗೋವರ್ಧನ ನವಿಲೇಹಾಳು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್ಗೆ ಸಂತೋಷದ ಸುದ್ದಿಯಾದರೂ, ಎಸ್ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.
ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.
ಸಮರ್ಥ್ ಶಾಮನೂರು ಅವರ ಮುಂದಿನ ನಡೆ
ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.
ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.
ಬಿಜೆಪಿಯ ಮುಂದಿನ ಸವಾಲುಗಳು
ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.
ಎಸ್ಡಿಪಿಐ ಮುಂದಿನ ಸವಾಲು
ಎಸ್ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.
ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.
ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.
ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.
ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’ ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು. ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.
ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್ಸಿ ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.
ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
-
ಅಂಕಣ3 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ6 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ2 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ23 hours agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ1 day agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ1 day agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

