Connect with us

ಬಹಿರಂಗ

ವಸ್ತ್ರ ಸಂಹಿತೆಯ ಇತಿಹಾಸ ಇಂದಿಗೂ ಏಕೆ ಪ್ರಸ್ತುತವಾಗುತ್ತದೆ..?

Published

on

  • ಮೂಲ : ಜಾನಕಿ ನಾಯರ್,ಅನುವಾದ : ನಾ ದಿವಾಕರ

ತ್ತೀಚಿನ ದಿನಗಳಲ್ಲಿ ಚರಿತ್ರೆಯನ್ನು ನೈತಿಕ ವಿಜ್ಞಾನದ ಮಾದರಿಯಲ್ಲಿ ಪುನರ್ ವ್ಯಾಖ್ಯಾನಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಈ ಪ್ರವೃತ್ತಿಯ ಹಿಂದೆ ಕಾಣಬಹುದಾದ ಮೂಲ ಉದ್ದೇಶ ಎಂದರೆ, ಇತಿಹಾಸ ಕಾಲಘಟ್ಟದ ನಾಯಕರನ್ನು ಮತ್ತು ಖಳನಾಯಕರನ್ನು ಗುರುತಿಸುವುದು, ತನ್ಮೂಲಕ ಇಂದಿನ ಸಮಾಜದ ಬಹುಸಂಖ್ಯೆಯ ಜನಸಮೂಹವನ್ನು ಗುರುತಿಸಿ ಅವರನ್ನು ಅಪಮಾನಿಸುವುದು.

ಇಂತಹ ವಿಷಮ ಕಾಲಘಟ್ಟದಲ್ಲಿ ಸೂಕ್ಷ್ಮ ಅಭಿಪ್ರಾಯ ಬೇಧಗಳನ್ನೊಳಗೊಂಡ ಸಾಮಾಜಿಕ ಹಾಗೂ ಸಾಂಸ್ಕೃತಿಕ ಇತಿಹಾಸದ ಪುಟಗಳನ್ನು ಶೋಧಿಸಿ ಬೌದ್ಧಿಕ ಚಿಂತನೆಯ ಕೇಂದ್ರ ಬಿಂದುವನ್ನಾಗಿ ಮಾಡುವ ಅವಶ್ಯಕತೆ ಇದೆ. ಹಿಂದೆಂದಿಗಿಂತಲೂ ಇಂದು ಮಕ್ಕಳ ಚಿಂತನಾ ಕ್ರಮದಲ್ಲಿ ಚಾರಿತ್ರಿಕ ದೃಷ್ಟಿಕೋನವನ್ನು ಬೆಳೆಸಬೇಕಿದೆ. ಹೀಗೆ ಯೋಚಿಸುವ ಮೂಲಕವೇ ಮಕ್ಕಳು ಚರಿತ್ರೆಯನ್ನು ಸಮರ್ಪಕವಾಗಿ ಗ್ರಹಿಸಿ, ಸಹಿಷ್ಣುತೆಯನ್ನು ಬೆಳೆಸಿಕೊಳ್ಳುವುದರ ಮೂಲಕ ಹೊಸ ಮಾದರಿಯ ನಾಗರಿಕತೆಯನ್ನು ರೂಢಿಸಿಕೊಳ್ಳಲು ಸಾಧ್ಯ. ಪ್ರಸ್ತುತ ಸಂದರ್ಭದಲ್ಲಿ ಇದರ ತುರ್ತು ಅವಶ್ಯಕತೆಯೂ ಇರುವುದನ್ನು ನಾವು ಮನಗಾಣಬೇಕಿದೆ.

ಶಾಲಾ ಕೊಠಡಿಯಲ್ಲಿ, ವಿದ್ಯಾರ್ಜನೆಯ ವೇಳೆಯಲ್ಲಿ ಮುಸ್ಲಿಂ ಮಹಿಳೆಯರು ಧರಿಸುವ ಒಂದು ತುಂಡು ವಸ್ತ್ರ ಹಿಜಾಬ್ ನಿರ್ಣಾಯಕವಾಗಿ ಪರಿಣಮಿಸುವುದೇ ಎಂಬ ಪ್ರಶ್ನೆಯೊಂದಿಗೇ ಈ ವಿವಾದದ ಸುತ್ತ ಗಂಭೀರ ಸಾರ್ವಜನಿಕ ಚರ್ಚೆಗಳು ನಡೆಯುತ್ತಿದ್ದು, ಹರೆಯದ ಹೆಣ್ಣುಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡಲಾಗುತ್ತಿರುವ ಸಂದರ್ಭದಲ್ಲಿ ವಸ್ತ್ರಧಾರಣೆಯ ಇತಿಹಾಸವನ್ನು ಶೋಧಿಸುವುದು ಉಪಯುಕ್ತವಾದೀತೇ ? ಯಾವುದೇ ಶೈಕ್ಷಣಿಕ ಪ್ರಯತ್ನಗಳು ಫಲದಾಯಕವಾಗಲು ದೀರ್ಘಕಾಲವೇ ಬೇಕಾಗುವುದರಿಂದ ಈ ಪ್ರಯತ್ನವೇ ಕ್ಷುಲ್ಲಕ ಎನಿಸಬಹುದು. ಆದರೂ 2005-06ರಲ್ಲಿ ಎನ್ಸಿಇಆರ್ಟಿ ಸಿದ್ಧಪಡಿಸಿದ ಒಂಬತ್ತನೆ ತರಗತಿಯ ಪಠ್ಯಗಳಲ್ಲಿ ಕಳೆದ ಎರಡು ಶತಮಾನಗಳ ವಸ್ತ್ರಧಾರಣೆಯ ಇತಿಹಾಸವನ್ನು ಸೇರ್ಪಡಿಸಲಾಗಿತ್ತು. ಆದರೆ 2019ರಲ್ಲಿ ಈ ಪಠ್ಯವನ್ನು ಹಿಂಪಡೆಯಲಾಯಿತು.

ಅಧಿಕಾರ ವ್ಯವಸ್ಥೆಯ ಮಹತ್ವ

ವಸ್ತ್ರಧಾರಣೆಯ ಇತಿಹಾಸವನ್ನು ಬೋಧಿಸುವುದರಿಂದ ಹಲವು ಪರಿಣಾಮಗಳಾಗಬಹುದು. ಇತಿಹಾಸದಲ್ಲಿ ವಸ್ತ್ರ ಸಂಹಿತೆಗಳು ಹೇಗಿದ್ದವು, ಯಾವ ರೀತಿಯ ಪ್ರತಿರೋಧ ವ್ಯಕ್ತವಾಗಿದ್ದವು, ಇದರಿಂದ ಉಂಟಾದ ಪರಿಣಾಮಗಳೇನು ಈ ವಿದ್ಯಮಾನಗಳ ಮಹತ್ವವೇನು ಇವೇ ಮುಂತಾದ ಆಲೋಚನೆಗಳು ವಿದ್ಯಾರ್ಥಿಗಳಲ್ಲಿ ಮೂಡಬಹುದು. ಇಲ್ಲಿ ಮುಖ್ಯವಾದ ಅಂಶವೆಂದರೆ, ವಸ್ತ್ರ ಸಂಹಿತೆ ಎನ್ನುವುದೇ ಅಧಿಕಾರ ವ್ಯವಸ್ಥೆಯನ್ನು ಪ್ರತಿನಿಧಿಸುವ ಮತ್ತು ಸಮರ್ಥಿಸುವ ಒಂದು ಪ್ರಕ್ರಿಯೆಯಾಗಿರುತ್ತದೆ.

ಈ ಅಧಿಕಾರ ವ್ಯವಸ್ಥೆ ವಸಾಹತುಶಾಹಿಯೋ, ಮೇಲ್ಜಾತಿಗಳದೋ, ಧಾರ್ಮಿಕವೋ ಅಥವಾ ಪಿತೃಪ್ರಧಾನ ವ್ಯವಸ್ಥೆಯನ್ನು ಪ್ರತಿನಿಧಿಸುವುದೋ ಎನ್ನುವುದನ್ನು ವಸ್ತ್ರ ಸಂಹಿತೆಗಳು ಬಿಂಬಿಸುತ್ತವೆ. ತಮ್ಮ ಅಧಿಕಾರ ಕೇಂದ್ರಗಳನ್ನು ಬಳಸುವ ಮೂಲಕ ಈ ವ್ಯವಸ್ಥೆಯ ಪ್ರತಿಪಾದಕರು ಪ್ರಭುತ್ವ, ಧಾರ್ಮಿಕ ಸಂಸ್ಥೆಗಳು, ಮೇಲ್ಜಾತಿಯ ಪಾರಮ್ಯ, ಹಿಂಸಾತ್ಮಕ ಮಾರ್ಗಗಳ ಮೂಲಕ ಈ ವ್ಯವಸ್ಥೆಯನ್ನು ಕಾಪಾಡುತ್ತಾರೆ. ಹಲವಾರು ಸಂದರ್ಭಗಳಲ್ಲಿ ಕುಟುಂಬಗಳಲ್ಲಿ ಮುಖ್ಯಸ್ಥರಾಗಿ ಪುರುಷರೇ ನಿರ್ದಿಷ್ಟ್ರ ವಸ್ತ್ರಧಾರಣೆಯನ್ನು ಹೇರುತ್ತಾರೆ. ಈ ಮಾರ್ಗಗಳ ಮುಖಾಂತರವೇ ಸಾಮಾಜಿಕ ಶ್ರೇಣಿಗಳನ್ನು ಕಾಪಿಟ್ಟುಕೊಂಡು, ಶಾಶ್ವತಗೊಳಿಸಲಾಗುತ್ತದೆ.

ಆದರೆ ಈ ವಿಚಾರದಲ್ಲೇ ಕಳೆದ 200 ವರ್ಷಗಳ ಚರಿತ್ರೆ ನಿರ್ಣಾಯಕವಾಗಿ ಕಾಣುತ್ತದೆ. ಚರಿತ್ರೆಯ ಈ ಅವಧಿಯಲ್ಲೇ ಇಂತಹ ಶ್ರೇಣೀಕರಣವನ್ನು ವಿರೋಧಿಸಿ, ಸವಾಲೆಸೆದು ಹೊಸ ವಸ್ತ್ರಧಾರಣೆಯ ಮಾದರಿಗಳನ್ನು ಅನುಸರಿಸುವಲ್ಲಿ ಯಶಸ್ವಿಯಾದ ಹಲವು ಪ್ರಯತ್ನಗಳನ್ನು ಗುರುತಿಸಬಹುದು. ಒಂದು ನಿರ್ದಿಷ್ಟ ಸಮುದಾಯವನ್ನು ದಿಗ್ಬಂಧನಕ್ಕೊಳಪಡಿಸಿ, ಬಹುಸಂಖ್ಯಾತರ ಆಯ್ಕೆಗಳನ್ನೇ ಸ್ವಾಭಾವಿಕೀಕರಣಗೊಳಿಸಿ, ಸಾರ್ವತ್ರೀಕರಿಸಲು ಏಕರೂಪತೆಯ ಪರಿಭಾಷೆಯನ್ನು ಬಳಸಿ ಬಹುಸಂಖ್ಯಾತರ ಆಯ್ಕೆಗಳನ್ನು ಅಲ್ಪಸಂಖ್ಯಾತರ ಮೇಲೆ ಹೇರುವ ಪ್ರಯತ್ನಗಳ ನಡುವೆಯೇ ಈ ಪರಿಹರಿಸಲಾಗದ ಬಿಕ್ಕಟ್ಟನ್ನು ಅರ್ಥಮಾಡಿಕೊಳ್ಳಲು ಈ ಚರಿತ್ರೆಯ ಅವಲೋಕನ ಅವಶ್ಯವಾಗುತ್ತದೆ.

ಹಿಜಾಬ್ ನಿಷೇಧಿಸುವುದೆಂದರೆ ಅದು ಅಲ್ಪಸಂಖ್ಯಾತ ಸಮುದಾಯದ ಮೇಲೆ ಬಹುಸಂಖ್ಯಾತರು ಹೇರುವ ವಸ್ತ್ರ ಸಂಹಿತೆಯೇ ಆಗಿರುತ್ತದೆ. 20ನೆಯ ಶತಮಾನದ ಇತಿಹಾಸವನ್ನೇ ಗಮನಿಸಿದಾಗ, ಬಹುಸಂಖ್ಯೆಯ ಮುಸ್ಲಿಂ ಮಹಿಳೆಯರು ಪಿತೃಪ್ರಧಾನ ವ್ಯವಸ್ಥೆಯ ಪಾರಮ್ಯವನ್ನು ಧಿಕ್ಕರಿಸಿ, ಹಿಜಾಬ್ ತೊಡುವುದನ್ನು ತಿರಸ್ಕರಿಸುವುದನ್ನು ಕಾಣಬಹುದು. ಮಹಿಳಾ ಸಮೂಹ ಹಿಜಾಬ್ ಧರಿಸುವ ಅಥವಾ ಧಿಕ್ಕರಿಸುವ ತಮ್ಮ ನಿರ್ಧಾರವನ್ನು ಚರಿತ್ರೆಯ ಯಾವ ಸಂದರ್ಭದಲ್ಲಿ ಕೈಗೊಂಡಿರುತ್ತಾರೆ ಮತ್ತು ತಮ್ಮ ಆಯ್ಕೆಯನ್ನು ಯಾವ ಸಂದರ್ಭದಲ್ಲಿ ಬಳಸಿರುತ್ತಾರೆ ಮತ್ತು ಅದು ಹೇಗೆ ವ್ಯವಸ್ಥೆಯ ಪಲ್ಲಟಗಳಿಗೆ ಕಾರಣವಾಗಿರುತ್ತದೆ ಎನ್ನುವುದನ್ನು ಅರ್ಥಮಾಡಿಕೊಳ್ಳಲು ಚಾರಿತ್ರಿಕ ಆಲೋಚನೆ ಮುಖ್ಯವಾಗುತ್ತದೆ.

ಸಂಸ್ಕೃತಿ, ಪರಂಪರೆ ಮತ್ತು ಘನತೆಯನ್ನು ಸಂರಕ್ಷಿಸುವ ಹೊಣೆ ಸದಾ ಮಹಿಳೆಯರದ್ದೇ ಆಗಿರುತ್ತದೆ ಎಂದು ಭಾವಿಸಲಾಗುವ ಸಮಾಜದಲ್ಲಿ, ಘನತೆ ಎನ್ನುವುದು ಪುರುಷ ಸಮಾಜದ ಸ್ವತ್ತು ಎಂದು ಪರಿಭಾವಿಸಲಾಗುವ ಸಮಾಜದಲ್ಲಿ, ಈ ಸಂಸ್ಕೃತಿ, ಪರಂಪರೆ ಮತ್ತು ಘನತೆಯನ್ನು ರಕ್ಷಿಸಲು ಅಥವಾ ಕಾಪಾಡಲು ಅಪೇಕ್ಷಿಸುವ ಪುರುಷ ಸಮಾಜವನ್ನು ಧಿಕ್ಕರಿಸಿ ಮಹಿಳೆಯರು ವಸ್ತ್ರಧಾರಣೆಯನ್ನು ಧರಿಸಲು ಅಥವಾ ತಿರಸ್ಕರಿಸಲು ಮುಂದಾದಾಗ ಯಾವ ರೀತಿಯ ಪ್ರಕ್ಷುಬ್ಧತೆ ಉಂಟಾಗುತ್ತದೆ ? ಇದನ್ನು ಅರ್ಥಮಾಡಿಕೊಳ್ಳಲು ಚಾರಿತ್ರಿಕ ಆಲೋಚನೆ ಬೇಕಾಗುತ್ತದೆ.

ವಸ್ತ್ರಧಾರಣೆಯ ಇತಿಹಾಸವನ್ನು ತಿಳಿದುಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಚರಿತ್ರೆಯಲ್ಲಿ ಇಂತಹ ಚರ್ಚೆಗಳು ಹೇಗೆ ಉದ್ಭವಿಸಿದವು, ಹೇಗೆ ನಿವಾರಿಸಲ್ಪಟ್ಟವು ಎಂದು ಗ್ರಹಿಸುವುದು ಸಾಧ್ಯವಾಗುತ್ತದೆ. ಉದಾಹರಣೆಗೆ 19ನೆಯ ಶತಮಾನದಲ್ಲಿ ಉದ್ಭವಿಸಿದ ರುಮಾಲು ಮತ್ತು ಪಾದರಕ್ಷೆಯ ವಿವಾದವನ್ನೇ ಪರಿಗಣಿಸಬಹುದು. 19ನೆಯ ಶತಮಾನದ ಆರಂಭದಲ್ಲಿ ಆಳುವ ದೊರೆ ಅಥವಾ ಸಂಸ್ಥಾನದ ಒಡೆಯರ ಆಸ್ಥಾನವನ್ನು ಪ್ರವೇಶಿಸುವ ಮುನ್ನ ಬ್ರಿಟೀಷ್ ಅಧಿಕಾರಿಗಳಿಗೆ ಭಾರತೀಯ ಶಿಷ್ಟಾಚಾರದಂತೆ ಪಾದರಕ್ಷೆಗಳನ್ನು ಕಳಚಿ ಪ್ರವೇಶಿಸುವುದು ಕಡ್ಡಾಯವಾಗಿತ್ತು.

ಕೆಲವು ಬ್ರಿಟೀಷ್ ಅಧಿಕಾರಿಗಳು ಈ ಭಾರತೀಯ ಸಂಪ್ರದಾಯಕ್ಕೆ ಹೊಂದಿಕೊಂಡಿದ್ದರು. ಆದರೆ 1830ರಲ್ಲಿ ಅಧಿಕೃತ ಸಮಾರಂಭಗಳಲ್ಲಿ ಭಾರತೀಯ ವಸ್ತ್ರಗಳನ್ನು ಧರಿಸುವುದನ್ನು ಯೂರೋಪಿನವರಿಗೆ ನಿಷಿದ್ಧಗೊಳಿಸಲಾಯಿತು. ಇದೇ ವೇಳೆ ಭಾರತೀಯರು ತಮ್ಮ ಸಂಪ್ರದಾಯಗಳಿಗೆ ಮನ್ನಣೆ ನೀಡಿ ಸರ್ಕಾರಿ ಕಚೇರಿಗಳನ್ನು ಪ್ರವೇಶಿಸುವ ಮುನ್ನ ತಮ್ಮ ಪಾದರಕ್ಷೆಗಳನ್ನು ಕಳಚಿಯೇ ಹೋಗಬೇಕಿತ್ತು. ವಸಾಹತೀಕರಣಕ್ಕೊಳಗಾದ ಮೇಲ್ಪದರದ ಗಣ್ಯರಿಗೆ ಇದು ಅಪಮಾನಕರ ಎನಿಸತೊಡಗಿತ್ತು.

ಇದರ ವಿರುದ್ಧ ಧ್ವನಿ ಎತ್ತಿದ ಮನೋಕ್ಜೀ, ಕೋವಾಸ್ಜೀ ಎಂಟೀ ಎಂಬ ಪಾರ್ಸಿ ಸಮುದಾಯದ ವ್ಯಕ್ತಿ ನ್ಯಾಯಾಲಯದಲ್ಲಿ ತಮ್ಮ ಪಾದರಕ್ಷೆಯನ್ನು ಕಳಚಿಡಲು ನಿರಾಕರಿಸಿದರು. “ ಯಾವುದೇ ಪಾರ್ಸಿ ಸಮುದಾಯದ ವ್ಯಕ್ತಿ ಇದ್ದರೂ, ಎಷ್ಟೇ ಉನ್ನತ ವ್ಯಕ್ತಿಯಾಗಿದ್ದರೂ, ಅವರನ್ನು ಭೇಟಿಯಾಗುವಾಗ ನಮ್ಮ ಪಾದರಕ್ಷೆಗಳನ್ನು ಕಳಚಿಡುವ ಪದ್ಧತಿ ನಮ್ಮ ಸಾಮಾಜಿಕ ಒಡನಾಟದಲ್ಲಿ ಇಲ್ಲ ,,,” ಎಂದು ದಾವೆ ಹೂಡಿದ್ದರು. ಪಾದರಕ್ಷೆ ಕೇಂದ್ರಿತ ಗೌರವ ಸಲ್ಲಿಕೆಯ ಈ ನಿಯಮ ಬದಲಾಗಲು 20 ವರ್ಷಗಳೇ ಬೇಕಾದವು.

ಭಾರತದಲ್ಲಿ ಚರ್ಚೆಗಳು

ಬ್ರಿಟೀಷರ ಆಳ್ವಿಕೆಯಲ್ಲಿ ಅನೇಕ ಸಂದರ್ಭಗಳಲ್ಲಿ ಭಾರತದ ಗಣ್ಯವರ್ಗಗಳು ವಸಾಹತುಶಾಹಿಯ ಆದೇಶಗಳನ್ನು ಅಪಮಾನಕರ ಎಂದು ಭಾವಿಸಿ ಧಿಕ್ಕರಿಸಿದ್ದವು. ಏತನ್ಮಧ್ಯೆ ಕೇರಳದ ತಿರುವಂಕೂರು ದೇವಾಲಯದಲ್ಲಿ ಭಾರತೀಯರ ನಡುವೆಯೇ ವಸ್ತ್ರಧಾರಣೆಯ ಸುಧಾರಣೆಗಳ ಬಗ್ಗೆ ಕೂಗು ಎದ್ದಿತ್ತು. ಈ ಸಂಸ್ಥಾನದಲ್ಲಿ ಮಹಿಳೆಯರು ಮತ್ತು ಪುರುಷರೂ ಸಹ ದೇವರ ಸನ್ನಿಧಿಯಲ್ಲಿ ಅಥವಾ ಮೇಲ್ಜಾತಿಯವರ ಎದುರಿನಲ್ಲಿ ತಮ್ಮ ದೇಹದ ಮೇಲ್ಭಾಗವನ್ನು ಮುಚ್ಚಿಕೊಳ್ಳುವಂತಿರಲಿಲ್ಲ. ಇದು ಒಂದು ಸಂಪ್ರದಾಯವಾಗಿ ಬೆಳೆದುಬಂದಿತ್ತು. ಕ್ರೈಸ್ತ ಮಿಷನರಿಗಳ ಕಾರ್ಯಾಚರಣೆಯ ಪರಿಣಾಮವಾಗಿ 1822ರಲ್ಲಿ ವಸ್ತ್ರಧಾರಣೆಯ ಸುಧಾರಣೆಗಳಿಗಾಗಿ ಆಗ್ರಹ ಕೇಳಿಬರತೊಡಗಿತ್ತು.

ಶಾನರ್ (ನಂತರ ನಾಡರ್ ಎಂದು ಕರೆಯಲಾಯಿತು) ಸಮುದಾಯದ ಮಹಿಳೆಯರು ತಮ್ಮ ಎದೆ ಮುಚ್ಚಿಕೊಳ್ಳುವಂತೆ ಉಡುಪು ಧರಿಸಿದ್ದಕ್ಕಾಗಿ ಮೇಲ್ಜಾತಿಯ ನಾಯರ್ ಸಮುದಾಯದ ಪುರುಷರಿಂದ ಸಾರ್ವಜನಿಕ ಸ್ಥಳಗಳಲ್ಲೇ ಆಕ್ರಮಣಕ್ಕೊಳಗಾಗಬೇಕಾಯಿತು. ಈ ಘಟನೆಗಳನ್ನು ಇತಿಹಾಸಕಾರರು ಸ್ತನ ವಸ್ತ್ರ ಗಲಭೆಗಳು ಎಂದೇ ವ್ಯಾಖ್ಯಾನಿಸುತ್ತಾರೆ. 1859ರಲ್ಲಿ ತಿರುವಂಕೂರು ಸರ್ಕಾರವು, ನಾಡರ್ ಸಮುದಾಯದ ಮಹಿಳೆಯರು ತಮ್ಮ ಎದೆ ಮುಚ್ಚಿಕೊಳ್ಳುವಂತೆ ಉಡುಪು ಧರಿಸಬಹುದು ಎಂಬ ಆದೇಶವನ್ನು ಹೊರಡಿಸುವುದರೊಂದಿಗೆ ಈ ವಿವಾದವೂ ಅಂತ್ಯವಾಗಿತ್ತು.

ಶತಮಾನಗಳ ಕಾಲ ತಮ್ಮ ಘನತೆಯಿಂದ ವಂಚಿತರಾಗಿದ್ದ ಮಹಿಳೆಯರು ತಮ್ಮ ಘನತೆಯನ್ನು ಮರಳಿ ಪಡೆಯುವಂತಾಗಿತ್ತು. ಆದರೆ 19ನೆಯ ಶತಮಾನದ ಅಂತ್ಯದವರೆಗೂ ಈ ವಸ್ತ್ರಧಾರಣೆಯ ಸುಧಾರಣಾ ಕ್ರಮಗಳು ಏಕರೂಪವಾಗಿರಲಿಲ್ಲ. ಈ ಸಂದರ್ಭದಲ್ಲೂ ಸಹ ಮಹಿಳೆಯರು, ಮೇಲ್ಜಾತಿಯವರನ್ನೂ ಒಳಗೊಂಡಂತೆ, ತಮ್ಮ ಎದೆ ಭಾಗವನ್ನು ತೆರೆದಿಟ್ಟಟುಕೊಳ್ಳುವುದೇ ಸಂಪ್ರದಾಯವಾಗಿತ್ತು.

ವಿವಾಹಿತ ಮಹಿಳೆಯೊಬ್ಬಳು ಕುಪ್ಪಸವನ್ನು ಧರಿಸಲು ಮುಂದಾದಾಗ, ಆಕೆಯ ಪತಿ ಆಕೆಯನ್ನು ನಿಂದಿಸಿದ್ದೇ ಅಲ್ಲದೆ, ಆಕೆಯ ತಾಯಿಯೂ ಸಹ ಮುಸ್ಲಿಂ ಮಹಿಳೆಯಂತೆ ಕಾಣ ಬಯಸುವ ಮಗಳ ಮೇಲೆ ದೈಹಿಕ ಹಲ್ಲೆ ನಡೆಸಿದ ಒಂದು ಪ್ರಸಂಗವೂ ದಾಖಲಾಗಿದೆ. ಇದಕ್ಕೆ ತದ್ವಿರುದ್ಧವಾಗಿ ಬಂಗಾಲದಲ್ಲಿ 1872ರಿಂದಲೇ ವಸ್ತ್ರಧಾರಣೆಯ ಸುಧಾರಣೆಗಾಗಿ ಕೂಗು ಕೇಳಿಬರುತ್ತದೆ. ಈ ಪ್ರದೇಶದ ಮಹಿಳೆಯರು ಒಳ ಉಡುಪುಗಳನ್ನೂ ಧರಿಸದೆ, ಪಾರದರ್ಶಕವಾದ ತೆಳು ಸೀರೆಯನ್ನೇ ಧರಿಸಬೇಕಾದ ಒಂದು ಸಂಪ್ರದಾಯವನ್ನು ಅನುಸರಿಸಬೇಕಾಗಿದ್ದು, ಈ ಪದ್ಧತಿಯ ವಿರುದ್ಧ ಬಂಗಾಲದಲ್ಲಿ ತೀವ್ರವಾದ ಪ್ರತಿರೋಧ ವ್ಯಕ್ತವಾಗಿತ್ತು.

ಮಹಿಳೆಯರು ಘನತೆಯನ್ನು ಉಳಿಸಿಕೊಳ್ಳುವಂತಹ ಉಡುಪು ಧರಿಸಬೇಕು ಎಂಬ ಆಗ್ರಹವೂ ಕೇಳಿಬಂದಿತ್ತು. ಈ ನಿಟ್ಟಿನಲ್ಲಿ ಜ್ಞಾನದಾನಂದಿನಿ ದೇವಿ ಟಾಗೂರ್ ಎಂಬ ಮಹಿಳೆ ಪ್ರಪ್ರಥಮ ಬಾರಿಗೆ ಪಾರ್ಸಿಗಳ ಶೈಲಿಯಲ್ಲಿ ಸೀರೆ ಉಡುವ ಪದ್ಧತಿಯನ್ನು ಜಾರಿಗೊಳಿಸಿ , ಸೆರಗು ಹೊದ್ದುಕೊಳ್ಳುವ, ಕುಪ್ಪಸ ಧರಿಸುವ, ಸ್ಕರ್ಟ್ ಧರಿಸುವ ಮತ್ತು ಮಹಿಳೆಯರು ಕಾಲುಚೀಲ ಹಾಗೂ ಬೂಟು ಧರಿಸುವ ಒಂದು ಪದ್ಧತಿಗೆ ಚಾಲ್ತಿಇ ನೀಡಿದ್ದರು.

ಹಾಗಾಗಿ ಕಳೆದ ಎರಡು ಶತಮಾನಗಳ ಇತಿಹಾಸವನ್ನೇ ಇಣುಕಿ ನೋಡಿದರೆ, ವಸ್ತ್ರಧಾರಣೆಯ ಶೈಲಿ, ವಿನ್ಯಾಸ ಮತ್ತು ಇದರ ವಿರುದ್ಧ ವ್ಯಕ್ತವಾದ ಪ್ರತಿರೋಧಗಳನ್ನು ಅರ್ಥಮಾಡಿಕೊಳ್ಳುವುದು ಸುಲಭವಾಗುತ್ತದೆ. ಮಹಾತ್ಮ ಗಾಂಧಿ ವಿಧಿಸಿದ ಮತ್ತು ಅನುಸರಿಸಿದ ವಸ್ತ್ರಧಾರಣೆಯ ಪ್ರಯೋಗಗಳನ್ನು ನಮ್ಮ ವಿದ್ಯಾರ್ಥಿ ಸಮುದಾಯ ಅರಿತು ಅರ್ಥಮಾಡಿಕೊಳ್ಳಬೇಡವೇ ? 20 ವರ್ಷಗಳ ಕಾಲ ವಸಾಹತುಶಾಹಿ ಶೈಲಿಯ ಉಡುಪು ಧರಿಸಿ ನಂತರ ತಮ್ಮ ಸಾಂಪ್ರದಾಯಿಕ ಉಡುಪನ್ನು ಧರಿಸಲಾರಂಭಿಸಿದ ಗಾಂಧಿಯ ವಸ್ತ್ರಸಂಹಿತೆಯ ಸಾಂಕೇತಿಕ ಮಹತ್ವವನ್ನು ಅರ್ಥಮಾಡಿಕೊಳ್ಳಬೇಡವೇ ?

ತಮ್ಮ ವ್ಯಕ್ತಿತ್ವವನ್ನು ಬಿಂಬಿಸಿಕೊಳ್ಳಲು ಹಾಗು ಭಾರತದ ಅಧ್ಯಾತ್ಮಿಕತೆ, ಭಾರತೀಯತೆಯನ್ನು ಬಿಂಬಿಸಲು ತಮ್ಮದೇ ಆದ ವಿಶಿಷ್ಟ ವಸ್ತ್ರಧಾರಣೆಯ ಶೈಲಿಗಳನ್ನು ಅನುಸರಿಸಿದ ರಾಮಕೃಷ್ಣ ಪರಮಹಂಸ (ಇವರು ಇಸ್ಲಾಂ ಧರ್ಮವನ್ನು ಅರ್ಥಮಾಡಿಕೊಳ್ಳುವ ಸಲುವಾಗಿ ಇಸ್ಲಾಮಿಕ್ ಉಡುಪು ಧರಿಸಿದ್ದರು), ವಿವೇಕಾನಂದ, ಅರಬಿಂದೋಘೋಷ್, ರವೀಂದ್ರನಾಥ ಟಾಗೂರ್ ಈ ಮಹನೀಯರು ಕ್ರಮಿಸಿದ ಹಾದಿಯನ್ನೇ ಮಹಾತ್ಮ ಗಾಂಧಿ ಸಹ ಅನುಸರಿಸಿದ್ದರು.

ಡಾ ಬಿ ಆರ್ ಅಂಬೇಡ್ಕರ್ ಅವರೂ ಸಹ ಸಾಮಾಜಿಕ ಮುಂಚಲನೆ, ಆಧುನಿಕತೆಯನ್ನು ಬಿಂಬಿಸುವ ರೀತಿಯಲ್ಲಿ ಪಾಶ್ಚಿಮಾತ್ಯ ಬ್ರಿಟೀಷ್ ಮಾದರಿಯ ವಸ್ತ್ರಧಾರಣೆಯನ್ನು ಅನುಸರಿಸುವ ಮೂಲಕ, ಕೆಳಜಾತಿಯವರಿಗೆ ಮೇಲ್ಜಾತಿಯವರು ವಿಧಿಸಿದ್ದ ನಿಯಮಗಳನ್ನು ಉಲ್ಲಂಘಿಸಿದ್ದರು. 1920ರ ಆರಂಭದ ದಿನಗಳಲ್ಲಿ ಕೋಲಾರ ಚಿನ್ನದ ಗಣಿಯ ಹಲವು ಗಣಿ ಕಾರ್ಮಿಕರೂ ಇದೇ ರೀತಿಯ ಪ್ರತಿರೋಧ ವ್ಯಕ್ತಪಡಿಸಿದ್ದರು. ಈ ಇತಿಹಾಸವನ್ನು ನಮ್ಮ ವಿದ್ಯಾರ್ಥಿಗಳು ತಿಳಿದುಕೊಳ್ಳುವುದು ಬೇಡವೇ ?

ಈ ವೈವಿಧ್ಯಮಯ ಪರಸ್ಪರವಿರೋಧಾಭಾಸಗಳನ್ನೊಳಗೊಂಡ ಹಿನ್ನೆಲೆಯೇ ನಮ್ಮ ಪರಂಪರೆಯೂ ಆಗಿದೆ. ಈ ಪರಂಪರೆಯನ್ನು ಇಂದು ಶಾಲಾ ಕೊಠಡಿಗಳೊಳಗೆ, ಚರ್ಚೆಗೊಳಪಡಿಸಬೇಕಿದೆ. ವಾದ ಪ್ರತಿವಾದಗಳನ್ನು ಮಂಡಿಸಬೇಕಿದೆ. ಇನ್ನೂ ಹೆಚ್ಚಿನ ನಾಗರಿಕತೆ ಮತ್ತು ಘನತೆಯನ್ನು ಸಾಧಿಸಲು ಈ ಹೆಜ್ಜೆ ಅನಿವಾರ್ಯವೂ ಆಗಿದೆ.

( ದ ಹಿಂದೂ ಪತ್ರಿಕೆ ,ಮಾರ್ಚ್ 2 2022)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

Published

on

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.

1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)

ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್‌ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.

2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ

ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.

3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)

ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.

4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ

ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.

5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)

ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.

6. ಸಮನ್ವಯದ ದಾರಿ….

ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending