ದಿನದ ಸುದ್ದಿ
ಸಾವಿರ ಹೂವ್ವ ಎದೆಹನಿ ಬೇಕು..!
- ಹಿರಿಯೂರು ಪ್ರಕಾಶ್
ಕನ್ನಡ ಚಿತ್ರರಂಗವನ್ನು ಡ್ರಗ್ ರಂಗಕ್ಕೆ ಸಮೀಕರಿಸಿ ನಿತ್ಯವೂ ಬಿತ್ತರಿಸುತ್ತಿರುವ ಕೆಟ್ಟ ಸಾಂಬ್ರಾಣಿ ಹೊಗೆಯಂತಿರುವ ಹಸಿ ,ಬಿಸಿ, ಕಸಿ ಸುದ್ದಿ ವೀರರ ಅಬ್ಬರದ ಗಬ್ಬುನಾತದ ನಡುವೆ ಕನ್ನಡ ಚಿತ್ರರಂಗಕ್ಕೆ ತನ್ನದೇ ಆದ ರೀತಿಯಲ್ಲಿ ಪ್ರಬುದ್ಧವಾದ ಸೇವೆಸಲ್ಲಿಸಿ ಕನ್ನಡಿಗರೆಲ್ಲರ ಮನೆಮಾತಾಗಿ ಹೋಗಿದ್ದ ಮಾಗಿದ ಸ್ಫುರದ್ರೂಫಿ ನಟನೊಬ್ಬನ ಜನ್ಮದಿನವನ್ನು ನೆನಪು ಮಾಡಿಕೊಳ್ಳುವ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚಿದೆ.
ಇಂದಿನ ಜನಾಂಗಕ್ಕೆ ಸ್ಯಾಂಡಲ್ ವುಡ್ ಎಂದರೆ ಡ್ರಗ್ಮಾಫ಼ಿಯಾ ಎಂದು ಪರಿಚಯಿಸುತ್ತಾ ತನ್ಮೂಲಕ ಸಾಮಾನ್ಯ ಜ್ಞಾನ ಕ್ಷೇತ್ರಕ್ಕೆ ಅದಮ್ಯ ಸೇವೆ ಸಲ್ಲಿಸುತ್ತಿರುವ ಅಪೂರ್ವ ದೃಶ್ಯ ಮಾಧ್ಯಮಗಳ ಘನಕಾರ್ಯದ ಈ ಹೊತ್ತಿನಲ್ಲಿ ಕನ್ನಡ ಚಿತ್ರರಂಗವೆಂದರೆ ಅನೇಕ ಪ್ರತಿಭೆಗಳ ಗಣಿಯೂ ಹೌದೆಂಬ ವಾಸ್ತವವನ್ನು ಕನ್ನಡದ ಪ್ರತಿಭಾನ್ವಿತ ನಟ ಡಾ. ವಿಷ್ಣುವರ್ಧನ್ ರವರ ಎಪ್ಪತ್ತನೇ ಜನ್ಮದಿನವನ್ನು ಆಚರಿಸುವ ಮೂಲಕ ಸಾದರ ಪಡಿಸುವ ಅಗತ್ಯವಿದೆ.
ಬಹುಶಃ ಕನ್ನಡ ಚಿತ್ರರಂಗದಲ್ಲಿ ವರನಟ, ಮೇರುನಟ ಡಾ. ರಾಜ್ ಕುಮಾರ್ ರವರ ನಂತರ ತಮ್ಮ ವೈವಿಧ್ಯಮಯ ಪಾತ್ರಗಳ ಮೂಲಕ, ಸಧಭಿರುಚಿಯ ಚಿತ್ರಗಳ ಮೂಲಕ ಜನಮಾನಸದಲ್ಲಿ ಆಳವಾಗಿ ಬೇರೂರಿರುವ ನಾಯಕ ನಟನೆಂದರೆ ಅದು ನಿಸ್ಸಂದೇಹವಾಗಿ ಡಾ. ವಿಷ್ಣುವರ್ಧನ್. ಅವರು ನಮ್ಮೊಂದಿಗಿದ್ದಿದ್ದರೆ ಇಂದು ತಮ್ಮ ಎಪ್ಪತ್ತನೇ ವಸಂತದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದರು. ಆದರೆ ಕಲಾವಿದರ ಅದೃಷ್ಟವೆಂದರೆ ಅವರು ನಮ್ಮೊಂದಿಗಿಲ್ಲ ಎನ್ನುವುದು ಕೇವಲ ಭೌತಿಕವಾಗಿ ನಮ್ಮೊಡನಿಲ್ಲವೆಂದು ಅರ್ಥವೇ ಹೊರತು ಅವರ ಕಲಾಸೇವೆಯ ಮೂಲಕ ಅವರು ಜನರ ಹೃನ್ಮನಗಳಲ್ಲಿ ಶಾಶ್ವತವಾಗಿ ಬೇರೂರಿರುತ್ತಾರೆ. ಈ ಮಾತಿಗೆ ಡಾ. ವಿಷ್ಣುವರ್ಧನ್ ಒಂದು ಸ್ಪಷ್ಟ ಉದಾಹರಣೆ.
ಒಮ್ಮೆ ವಿಷ್ಣುವರ್ಧನ್ ರವರ ಭಾವಚಿತ್ರವನ್ನು ದಿಟ್ಟಿಸಿ ನೋಡಿ ! ನಿಷ್ಕಳಂಕತೆ ನಿಚ್ಚಳವಾಗಿ ತುಂಬಿರುವ ಅವರ ಕಂಗಳಲ್ಲಿ ಏನೋ ಒಂಥರಾ ಕಾಂತಿಯಿದೆ, ಅವರ ಮುಖದಲ್ಲಿ ತೇಜಸ್ಸಿದೆ, ಆ ಮುಗುಳುನಗೆಯಲ್ಲಿ ಮುಗ್ಧತೆ ತುಂಬಿದೆ, ಆ ನೋಟದಲ್ಲಿ ಮುಗ್ಧ ಬಾಲಕನ ಅಮಾಯಕತನವಿದೆ. ಅವರ ವ್ಯಕ್ತಿತ್ವದಲ್ಲಿ ಆಕರ್ಷಣೆಯಿದೆ, ನುಡಿಯಲ್ಲಿ ಧೃಡತೆಯಿದೆ, ಸವಿ ಜೇನಿದೆ, ನಡೆಯಲ್ಲಿ ಆತ್ಮವಿಶ್ವಾಸವಿದೆ, ನಕ್ಕರೆ ಹಾಲು ಸಕ್ಕರೆಯಿದೆ, ಕರದಲ್ಲಿ ಕಡಗವಿದೆ, ಅವರ ಬಗ್ಗೆ ಬರೆಯಲು ಹೊರಟರೆ ಕಾದಂಬರಿಯೇ ಆಗುವಂತಿದೆ. ಎಲ್ಲಕ್ಕಿಂತ ಮುಖ್ಯವಾಗಿ ಇಡೀ ಮಾನವ ಕುಲವನ್ನು ಅದರಲ್ಲೂ ವಿಶೇಷವಾಗಿ ಹೆಣ್ಣು ಕುಲವನ್ನು ಗೌರವದಿಂದ ಕಾಣುವ ಸಹೃದತೆಯ ಗುಣವಿದೆ… ಇಷ್ಟೆಲ್ಲಾ ಅಪರೂಪದ ಅಂಶಗಳಿರುವ “ಗುಣವಂತ”ನಾದ “ಹೃದಯವಂತ” ನಿಗೆ ಇಂದು ಎಪ್ಪತ್ತರ ಜನ್ಮದಿನದ ಸಂಭ್ರಮ.
ಬರೋಬ್ಬರಿ 48 ವರ್ಷಗಳ ಹಿಂದೆ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ‘ನಾಗರ ಹಾವು’ ಎಂಬ ಎವರ್ ಗ್ರೀನ್ ಚಿತ್ರವೊಂದು ಕನ್ನಡಕ್ಕೊಬ್ಬ ಸ್ಫುರಧ್ರೂಪಿ, ಹಾಗೂ ಪ್ರತಿಭಾವಂತ ನಟನನ್ನು ಪರಿಚಯಿಸಿತು. “ವಂಶವೃಕ್ಷ ” ವೆಂಬ ಕಪ್ಪುಬಿಳುಪು ಚಿತ್ರದಲ್ಲಿ ಅಲ್ಲೆಲ್ಲೋ ಹಾಗೆ ಬಂದು ಹೀಗೆ ಹೋಗಿದ್ದ ಸಂಪತ್ ಕುಮಾರ್ ಎಂಬ ಹುಡುಗನನ್ನು ‘ ವಿಷ್ಣುವರ್ಧನ’ ಎಂಬ ಐತಿಹಾಸಿಕ ಹೆಸರಿನಿಂದ ನಾಮಕರಣ ಮಾಡಿ ತನ್ಮೂಲಕ ಒಂದು ಅಪರೂಪದ ಕೊಡುಗೆಯನ್ನು ಚಿತ್ರರಂಗಕ್ಕೆ ಕೊಡುತ್ತಿದ್ದೇನೆಂದು ಅಂದು ನಿರ್ದೇಶಕ ಪುಟ್ಟಣ್ಣ ಕಣಗಾಲ್ ಕೂಡಾ ಊಹಿಸಿರಲಿಲ್ಲವೇನೋ ?
ರೋಷ- ಆವೇಶದ, ಬೆಂಕಿಯುಗುಳುವ ಕಂಗಳ, ಕೆದರಿದ ಉದ್ದ ಕೂದಲಿನ, ಸಿಡಿಲಿನಂತಹಾ ಮಾತುಗಳ, ಯಾರಿಗೂ ಕೇರ್ ಮಾಡದ ಚಿತ್ರದುರ್ಗದ ರಾಮಾಚಾರಿಯ ಕ್ಯಾರೆಕ್ಟರ್ ಅಂದು ಚಿತ್ರ ಬಿಡುಗಡೆಯಾದ ರಾತ್ರೋರಾತ್ರಿ ಸಮಸ್ತ ಯುವ ಪಡೆಯ , ಪಡ್ಡೆ ಹೈದರ ಪಾಲಿನ ಆಂಗ್ರೀ ಯಂಗ್ ಮ್ಯಾನ್ ಆಗಿ, ಅನ್ಯಾಯದ ವಿರುದ್ಧದ ಪ್ರತಿಭಟನೆಯ ಐಕಾನ್ ಆಗಿ ಉದ್ಭವಿಸಿ , ಆನಂತರ ಸಾಹಸಸಿಂಹ ವಿಷ್ಣುವರ್ಧನ್ ಎಂದು ರೂಪಾಂತರಗೊಂಡು ಕನ್ನಡ ಚಿತ್ರರಂಗದಲ್ಲಿ ಅನೇಕ ಸಧಭಿರುಚಿಯ ಚಿತ್ರಗಳಲ್ಲಿ ತನ್ನ ಹೃದಯಂಗಮ ಹಾಗೂ ಆಕರ್ಷಕ ಶೈಲಿಯ ನಟನೆಯಿಂದ ಒಬ್ಬ ಮಾಗಿದ, ಮನಮುಟ್ಟುವ ಅಭಿನಯದ ಪರಿಪಕ್ವ ಕಲಾವಿದ ವಿಷ್ಣುವರ್ಧನ್ ಆಗಿ ಮನೆಮಾತಾಗಿದ್ದು ಗಂಧದಗುಡಿಯ ಮನೆಮನೆ ಕಥೆ .
ನಾಗರಹಾವಿನಿಂದ ಆಪ್ತರಕ್ಷಕನ ವರೆಗೆ ಭರ್ತಿ ಇನ್ನೂರು ಚಿತ್ರಗಳಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿ ತನ್ನ ಅರವತ್ತರ ಪ್ರಾಯದಲ್ಲೇ ಅಕಾಲ ಮರಣಕ್ಕೆ ತುತ್ತಾದ ವಿಷ್ಣು ಚಿತ್ರರಂಗದ ದಾದಾ ನೇ ಆಗಿದ್ದರು . ಅವರು ನಟಿಸಿದ ಬಹುತೇಕ ಚಿತ್ರಗಳಲ್ಲಿ ಉತ್ತಮ ಕಥೆ, ಸಂಗೀತ, ಸಂದೇಶ, ಅಭಿನಯ, ಭಾವೈಕ್ಯತೆ …ಎಲ್ಲವೂ ಇರುತ್ತಿತ್ತು. ಅದು ಶ್ರೀಸಾಮಾನ್ಯನಿಗೂ ಥಟ್ಟನೇ ಮನಮುಟ್ಟುವಂತೆ ಇದ್ದಿದರಿಂದಾಗಿಯೇ ಅವರಿಗೆ ಅಣ್ಣಾವ್ರಂತೆ ಜನಪ್ರಿಯತೆ ದೊರೆಯಲು ಸಾಧ್ಯವಾಯಿತು.
ಮೂಲತಃ ಸಂಸ್ಕಾರವಂತರಾಗಿದ್ದ ಅವರನ್ನು ಆಗಾಗ್ಗೆ ಒಬ್ಬ ವಿವಾದಾಸ್ಪದ ನಟನನ್ನಾಗಿಸಿದ ಕೀರ್ತಿ ನಮ್ಮ ಅಂದಿನ ಕೆಲವು ಮಾಧ್ಯಮಗಳಿಗೆ ಸಲ್ಲಬೇಕು. ಉಗುರಲ್ಲಿ ಹೋಗುವಂತಹ ಸುದ್ದಿಗಳನ್ನು ವರ್ಣರಂಜಿತ ಕೊಡಲಿಯಿಂದ ಕೆತ್ತಿ ಕೆತ್ತಿ ವಿಷ್ಣುವನ್ನು ತಾನೊಲ್ಲದ ವಿವಾದಗಳ ಕೂಪಕ್ಕೆ ತಳ್ಳಿ ಅದರ ಮಸಿಯನ್ನು ಯಾರ್ಯಾರಿಗೋ ಬಳಿಯಲು ನೋಡಿ ಕೈ ಸುಟ್ಟುಕೊಂಡಿದ್ದು ಈಗ ಇತಿಹಾಸ. ತೆರೆಯ ಮೇಲೆ ನಾಯಕನಾಗಿ ಮಿಂಚಿದ್ದ ವಿಷ್ಣು ಅದೇಕೋ ನಿಜ ಬದುಕಿನ ಹೋರಾಟದಲ್ಲಿ ವಿಮುಖರಾಗಿ ಸದಾ ಅಂತರ್ಮುಖಿಯಾಗಿಯೇ ಇರಲು ಬಯಸುತ್ತಿದ್ದರು.
ಹೀಗಾಗಿಯೇ ಅವರು ಯಾವುದೇ ಹೋರಾಟದ ನಾಯಕತ್ವದಿಂದ, ಮುಜುಗರದ ಹೇಳಿಕೆಗಳಿಂದ ಅಂತರವನ್ನು ಕಾಯ್ದುಕೊಂಡಿರುತ್ತಿದ್ದರು. ಅದರಲ್ಲೂ ತಮ್ಮ ಜೀವನದ ಕೊನೆಯ ದಿನಗಳಲ್ಲಿ ಒಮ್ಮೊಮ್ಮೆ ಸಂತನಂತೆಯೇ ಮಾತನಾಡುತ್ತಾ, ಕೆಲವೊಮ್ಮೆ ಕಳೆದುಕೊಂಡ ಏನನ್ನೋ ಅರಸುವಂತಹ ಬಾಲಕನಂತೆ , ದೈವೀಕ ಪ್ರತಿನಿಧಿಯಂತೆ ಭಾಸವಾಗುತ್ತಿದ್ದರು.
ಅದೇನೇ ಇರಲಿ, ಇಂದಿನ ಸಂತಸದ ಸಂಗತಿಯೆಂದರೆ ವಿಷ್ಣು ಗತಿಸಿ ಹತ್ತು ವರ್ಷಗಳ ನಂತರವಾದರೂ ಅವರ ಅಭಿಮಾನಿಗಳ ಕುಟುಂಬದ ಬಹು ಬೇಡಿಕೆಯ ಸ್ಮಾರಕ ನಿರ್ಮಾಣಕ್ಕೆ ಮೊನ್ನೆ ಚಾಲನೆ ಸಿಕ್ಕಿರುವುದು !. ಕನ್ನಡ ಚಿತ್ರರಂಗಕ್ಕೆ ವಿಷ್ಣುವರ್ಧನ್ ರವರ ಕೊಡುಗೆಯನ್ನು, ಕಲಾಸೇವೆಯನ್ನು ಪರಿಗಣಿಸಿ ಅವರ ಸ್ಮಾರಕ ನಿರ್ಮಾಣಕ್ಕಾಗಿ ಅವರ ನೆಚ್ಚಿನ ಮೈಸೂರು ಬಳಿಯಲ್ಲಿಯೇ ಅದರ ಶಂಕುಸ್ಥಾಪನೆಯಾಗಿರುವುದು ಹಾಗೂ ಇದಕ್ಕಾಗಿ ಸರ್ಕಾರ ಹನ್ನೊಂದು ಕೋಟಿ ಹಣ ತೆಗೆದಿಟ್ಟಿರುವುದು ಅಭಿಮಾನಿಗಳ ಖುಷಿಗೆ ಕಾರಣವಾಗಿದೆ. ಈ ಕಾರ್ಯ ಆದಷ್ಟು ಬೇಗನೇ ಪೂರ್ಣವಾಗಲಿ.
” ಸಾವಿರ ಹೂವ್ವಿನ ಎದೆಹನಿ ಬೇಕು ಜೇನಿನ ಗೂಡಾಗಲು, ಸಾವಿರ ಭಾವ ಸ್ಪಂದಿಸಬೇಕು ಕನ್ನಡ ನಾಡಾಗಲು” ಎಂಬ ಸುಂದರ ಸಾಲುಗಳಂತೆ ಸಾವಿರ ಹೃದಯಗಳು ಮನದುಂಬಿ ಹಾರೈಸಬೇಕಿಂದು ವಿಷ್ಣುವರ್ಧನ್ ರವರ ಜನ್ಮದಿನವಾಗಲು..!
ಚಾಮುಂಡಿ ತಾಯಾಣೆ ಮುಂದಿನ ಜನ್ಮದಲ್ಲೂ ಹುಟ್ಟೋದು ಇಲ್ಲೇನೇ ” ಎಂದು ತಮ್ಮ ಕೊನೆ ಚಿತ್ರದಲ್ಲಿ ವಿಷ್ಣು ಅಂದುಕೊಂಡಂತೆ ತಾಯಿ ಚಾಮುಂಡಿ ಅವರನ್ನು ಮತ್ತೇ ಕರುನಾಡಿನ ಮಣ್ಣಲ್ಲೇ ಜನ್ಮ ನೀಡಲಿ ಎಂಬ ಅಭಿಮಾನಪೂರ್ವಕ ಪ್ರಾರ್ಥನೆಯೊಂದಿಗೆ
ಕಲೆಯನ್ನು, ಕಲಾವಿದರನ್ನು, ಮತ್ತು ಕನ್ನಡವನ್ನು ಮನದಾಳದಿಂದ ಪ್ರೀತಿಸುವ ಎಲ್ಲ ಸಹೃದಯರ ಪರವಾಗಿ ಅಭಿನಯ ಭಾರ್ಗವ ಡಾ. ವಿಷ್ಣುವರ್ಧನ್ ರವರಿಗೆ 70 ನೇ ‘ವರ್ಷ’ ದ ಹುಟ್ಟುಹಬ್ಬದ ಶುಭಾಶಯಗಳು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.
ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ2 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

