Connect with us

ದಿನದ ಸುದ್ದಿ

ಪತ್ರಿಕೋದ್ಯಮ, ಮಾನವೀಯತೆ ಹಾಗೂ ಸಲ್ಮಾನ್ ರಾವೀ ಎಂಬ ಹೃದಯವಂತ..!

Published

on

  • ಡಿ.ಕೆ. ರಮೇಶ್, ಪತ್ರಕರ್ತರು

ಸುದ್ದಿದಿನ ವಿಶೇಷ : ಒಂದು ಸಂದಿಗ್ಧ ಪರಿಸ್ಥಿತಿಯಲ್ಲಿ ಆ ಘಟನೆಯನ್ನು ತಟಸ್ಥವಾಗಿ ವರದಿ ಮಾಡಿದರೆ ಸಾಕೆ ಅಥವಾ ಆ ಘಟನೆಯಲ್ಲಿ ಸಂಕಷ್ಟಕ್ಕೀಡಾದವರ ಸಹಾಯಕ್ಕೆ ವರದಿಗಾರ/ ಛಾಯಾಗ್ರಾಹಕ ಮುಂದಾಗಬೇಕೆ? ಇದೊಂದು ಜಿಜ್ಞಾಸೆ. ಬಹಳ ಹಿಂದಿನಿಂದಲೂ ಇರುವ ಜಿಜ್ಞಾಸೆ ವರದಿಗಾರ ವರದಿ ಮಾಡಿದರಷ್ಟೇ ಸಾಕು ಅದೇ ಒಂದು ಸಹಾಯ ಎನ್ನುವುದು ಒಂದು ವಾದವಾದರೆ, ಸ್ಥಳದಲ್ಲೇ ಇದ್ದವರು ಸಹಾಯಕ್ಕೆ ಬರಬಹುದಿತ್ತಲ್ಲಾ ಎಂಬುದು ಇನ್ನೊಂದು ವಾದ. ಎರಡೂ ಬಹಳ ಮುಖ್ಯವಾದ ಆಲೋಚನೆಗಳು. ಕೊರೊನಾ ರೀತಿಯ ಸಂಕಷ್ಟದ ಸಂದರ್ಭದಲ್ಲಿ ಪತ್ರಕರ್ತರು ಇಂತಹ ಜಿಜ್ಞಾಸೆಗೆ ಮುಖಾಮುಖಿ ಆಗುವುದು, ಅದಕ್ಕೆ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡುವುದು ಸಹಜ. ಅಂತಹ ಒಬ್ಬ ಪತ್ರಕರ್ತ ಸಲ್ಮಾನ್ ರಾವೀ.

ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://twitter.com/RifatJawaid/status/1260957072281096192?s=20

ರಾವೀ ಅವರ ಕತೆ ಹೇಳುವ ಮುನ್ನ ಘಟನೆಯೊಂದನ್ನು ಇಲ್ಲಿ ಪ್ರಸ್ತಾಪಿಸಿಬಿಡಬೇಕು. ಮೊದಲನೆಯದು ಸೂಡಾನಿನ ಹಸಿವಿನ ದಾರುಣತೆಯನ್ನು ಚಿತ್ರಿಸುತ್ತಿದ್ದ ಕೆವಿನ್ ಕಾರ್ಟರ್ ಎಂಬ ಛಾಯಾಗ್ರಾಹಕನ ಕುರಿತಾದದ್ದು, ಅಸ್ತಿಪಂಜರದಂತಿರುವ ಮಗುವೊಂದು ಮಣ್ಣಿಗೆ ತಲೆ ಆನಿಸಿದೆ.

ಹಿನ್ನೆಲೆಗೆ ರಣಹದ್ದೊಂದು ಕುಳಿತಿದೆ. ಅದನ್ನು ತನ್ನ ಕ್ಯಾಮೆರಾದಲ್ಲಿ ಕಾರ್ಟರ್ ಸೆರೆ ಹಿಡಿಯುತ್ತಾನೆ. ‘ದ ವಲ್ಚರ್ ಅಂಡ್ ದ ಲಿಟಲ್ ಗರ್ಲ್’ ಎಂಬ ಹೆಸರಿನಲ್ಲಿ ಛಾಯಾಚಿತ್ರ ಮನ್ನಣೆ ಪಡೆಯುತ್ತದೆ. ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ಅದನ್ನು ಪ್ರಕಟಿಸಿಸುತ್ತದೆ. ಮುಂದೆ ಆ ಚಿತ್ರಕ್ಕೆ ಪುಲಿಟ್ಜರ್ ಪ್ರಶಸ್ತಿ ಕೂಡ ಸಿಗುತ್ತದೆ. ಅಷ್ಟರಲ್ಲಾಗಲೇ ಅವನ ಕ್ಯಾಮೆರಾ ಅಂತಹ ಹಲವಾರು ಮಕ್ಕಳ ಚಿತ್ರಗಳನ್ನು ಸೆರೆಹಿಡಿಯುತ್ತದೆ. ಆದರೆ ಕಾರ್ಟರ್ ಖಿನ್ನತೆಗೆ ಸರಿಯುತ್ತಾನೆ. ತನ್ನ ಬಾಲ್ಯವನ್ನು ಕಳೆದಿದ್ದ ಪಾರ್ಕ್ ಮೋರ್ ಎಂಬಲ್ಲಿ ಕಡೆಗೊಂದು ದಿನ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಆಗ ಅವನ ವಯಸ್ಸು ಕೇವಲ 33.

ಕೆವಿನ್ ಕಾರ್ಟರ್ ಮತ್ತು ಆತನ ಫೋಟೋಗ್ರಫಿ

ಈಗ ಸಲ್ಮಾನ್ ರಾವೀ ವಿಚಾರಕ್ಕೆ ಬರೋಣ. ದೇಶ ಕಂಡ ಅತ್ಯುತ್ತಮ ಪತ್ರಕರ್ತ, ಸೂಕ್ಷ್ಮ ಮನಸ್ಸಿನ ವರದಿಗಾರ, ಬಿಬಿಸಿ ಹಿಂದಿ ವಾಹಿನಿಗಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ ಎಂಬ ವಿಚಾರಗಳೆಲ್ಲಾ ದೇಶಕ್ಕೆ ಗೊತ್ತಿರುವಂಥದ್ದೇ. ಆದರೆ ಕೊರೊನಾ ಸಂದರ್ಭದಲ್ಲಿ ಅವರು ನಡೆದುಕೊಳ್ಳುತ್ತಿರುವ ರೀತಿಯಿಂದಾಗಿ ಪತ್ರಿಕಾ ಲೋಕ ಎದೆಯುಬ್ಬಿಸುವಂತಾಗಿದೆ. ಜಗತ್ತೇ ಅವರ ಕೆಲಸವನ್ನು ಕೊಂಡಾಡುತ್ತಿದೆ.

ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://twitter.com/salmanravi/status/1261201617522737152?s=19

ಕೊರೊನಾ ದಿಗ್ಬಂಧನದಿಂದಾಗಿ ದೆಹಲಿಯಿಂದ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ಬೀದಿಗೆ ಬಂದಿರುತ್ತಾರೆ. ಅಂತಹ ಒಂದು ಕುಟುಂಬ ಸುಮಾರು 250 ಕಿಮೀ ದೂರದ ತನ್ನೂರಿಗೆ ಮರಳಲು ಸಿದ್ಧವಾಗಿರುತ್ತದೆ. ಕುಟುಂಬದ ಹಿರಿಯ ಮಲಗಿರುವ ಮಗುವನ್ನು ಹೆಗಲಿಗೆ ಆನಿಸಿಕೊಂಡಿದ್ದಾನೆ. ಆತನ ಕಾಲಲ್ಲಿ ಚಪ್ಪಲಿ ಇಲ್ಲ ಎಂಬ ಸಂಗತಿ ಸಲ್ಮಾನ್ ಗಮನಕ್ಕೆ ಬರುತ್ತದೆ.

ಸಲ್ಮಾನ್ ಸಹಜವಾಗಿಯೇ ಆ ವ್ಯಕ್ತಿಗೆ ತನ್ನ ಬೂಟುಗಳನ್ನು ಕೊಡುತ್ತಾರೆ. ಕಾರ್ಮಿಕ ಅದನ್ನು ತೊಡಲು ಹಿಂದೇಟು ಹಾಕಿದಾಗ ‘ಇಲ್ಲ ಇಲ್ಲ ನೀವು ಹಾಕಿಕೊಳ್ಳಬೇಕು. ನೀವು ಕ್ರಮಿಸಬೇಕಾದ ಹಾದಿ ಬಹುದೂರದ್ದು. ನನ್ನದು ಹೇಗೋ ನಡೆಯುತ್ತದೆ’ ಎಂದು ಹೇಳಿ ಆತನಿಗೆ ಶೂ ಹಾಕಿಕೊಳ್ಳಲು ಅನುವು ಮಾಡಿಕೊಟ್ಟು ಮತ್ತೊಬ್ಬ ಕಾರ್ಮಿಕನನ್ನು ಮಾತನಾಡಿಸಲು ಹೋಗುತ್ತಾರೆ.

ಬಾಲಿವುಡ್ ನಟರಿಂದ ಹಿಡಿದು ಜನಸಾಮಾನ್ಯರ ತನಕ ಈ ಘಟನೆ ಗಮನ ಸೆಳೆದಿದೆ. ಘಟನೆಗೆ ಪ್ರತಿಕ್ರಿಯೆ ನೀಡಿರುವ ಆಲಿಯಾ ಭಟ್ ಸಹೋದರಿ ಪೂಜಾ ಭಟ್ ‘ಈ ಘಟನೆ ನನ್ನಲ್ಲಿ ಕಣ್ಣೀರು ತರಿಸಿತು’ ಎಂದಿದ್ದಾರೆ. ಟ್ವಿಟರ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಲ್ಮಾನ್ ಕೆಲಸಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿಯುತ್ತಿದೆ.

ಅಷ್ಟೇ ಆಗಿದ್ದರೆ ಅದೊಂದು ಘಟನೆ ಎಂದು ಸುಮ್ಮನಾಗಬಹುದಿತ್ತು. ಆದರೆ ಸಲ್ಮಾನ್ ಅವರೊಳಗಿನ ಅಂತಃಕರಣ ಆ ಘಟನೆಗೆ ಮಾತ್ರ ಸೀಮಿತವಾಗುವುದಿಲ್ಲ. ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ವಲಸೆ ಕಾರ್ಮಿಕರ ಒಂದು ತಂಡಕ್ಕೆ ಪೊಲೀಸರ ಸಹಾಯ ಪಡೆದು ಫರೀದಾಬಾದಿನ ಶಾಲೆಯೊಂದರಲ್ಲಿ ತಾತ್ಕಾಲಿಕ ವಸತಿ ಕಲ್ಪಿಸುತ್ತಾರೆ ಸಲ್ಮಾನ್. ಈ ಕೆಲಸವೂ ಅಪಾರ ಮೆಚ್ಚುಗೆ ಗಳಿಸಿದೆ.

ಸಲ್ಮಾನ್ ರಾವೀ, ಪತ್ರಕರ್ತ, ಬಿಬಿಸಿ ನ್ಯೂಸ್

ಇನ್ನೊಂದು ಘಟನೆ ಇವೆರಡಕ್ಕೂ ಹೊರತಾದದ್ದು, ಅದು ಭಾರತದಲ್ಲಿಯೇ ನಡೆದದ್ದು. ‘ಸುದ್ದಿ ಇಲ್ಲದಿದ್ದರೆ ಅದನ್ನು ಸೃಷ್ಟಿಸಿದರಾಯಿತು’ ಎಂಬ ಧೋರಣೆಗೆ ಸಂಬಂಧಿಸಿದ್ದು. ಸ್ಥಳ ಘಟನೆ ನಡೆದ ದಿನ ನೆನಪಿಲ್ಲ. ಆದರೆ ಆ ಘಟನೆಯನ್ನು ಮನುಷ್ಯರಾದವರಾರೂ ಮರೆಯಲು ಸಾಧ್ಯ ಇಲ್ಲ. ರೈತನೋ ಮತ್ತಾರೋ ಆತ್ಮಹತ್ಯೆಗೆ ಮುಂದಾಗಿರುತ್ತಾರೆ. ತಡವಾಗಿ ಅಲ್ಲಿಗೆ ಬರುವ ವೀಡಿಯೊಗ್ರಾಫರ್ ಇನ್ನೊಮ್ಮೆ ಬೆಂಕಿ ಹಚ್ಚಿಕೊಳ್ಳುವಂತೆ ಪ್ರೇರೇಪಿಸುತ್ತಾನೆ. ಆತ ಬೆಂಕಿ ಹಚ್ಚಿಕೊಳ್ಳುತ್ತಾನೆ. ಆತನ ಮೈ ಸುಟ್ಟು ಹೋಗುತ್ತದೆ.

ಮೇಲೆ ವಿವರಿಸಿದ ಮೂರೂ ಘಟನೆಗಳು ಪತ್ರಿಕೋದ್ಯಮ, ನೈತಿಕತೆ, ಮಾನವೀಯತೆಯ ಸುತ್ತ ಹೆಣೆದುಕೊಂಡಿರುವಂತಹವು. ಉಳಿದೆರಡು ಘಟನೆಗಳಿಗಿಂತಲೂ ಸಲ್ಮಾನ್ ರಾವೀ ಅವರ ಕೆಲಸಗಳಿಗೆ ಹೆಚ್ಚು ತೂಕ ಇರುವಂತಿದೆ. ಆ ಕಾರಣಕ್ಕೆ ರಾವೀ ಅಂತಹ ಪತ್ರಕರ್ತರ ಸಂಖ್ಯೆ ಹೆಚ್ಚಲಿ ಎಂದು ಹಾರೈಸಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending