ದಿನದ ಸುದ್ದಿ
ಕೋವಿಡ್ ಮಾರ್ಗಸೂಚಿ ಪಾಲಿಸದ ವ್ಯಾಪಾರ-ವಹಿವಾಟು ನಡೆಸುವ ಮಾಲೀಕರ ವಿರುದ್ದ ಕಠಿಣ ಕ್ರಮ : ಡಿಸಿ ಮಹಾಂತೇಶ ಬೀಳಗಿ
ಸುದ್ದಿದಿನ,ದಾವಣಗೆರೆ:ದೊಡ್ಡ ದೊಡ್ಡ ಅಂಗಡಿಗಳು, ವ್ಯಾಪಾರ ವಹಿವಾಟು ಕೇಂದ್ರಗಳು, ಮದುವೆ ಮಂಟಪಗಳು, ಎಪಿಎಂಸಿ ಮಾರುಕಟ್ಟೆ, ಥಿಯೇಟರ್, ವಸತಿ ಶಾಲೆಗಳು ಸೇರಿದಂತೆ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.
ಗುರುವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವ್ಯಾಪಾರ ವಹಿವಾಟು, ಕಲ್ಯಾಣ ಮಂಟಪ, ಶೈಕ್ಷಣಿಕ ಸಂಸ್ಥೆ ಒಟ್ಟಾರೆ ಆರ್ಥಿಕ ಚಟುವಟಿಕೆ ನಡೆಸುವ ಮಾಲೀಕರುಗಳಿಗೆ ಕೋವಿಡ್ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಸರಣೆ ಕುರಿತು ತಿಳಿಸಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈ ರೀತಿ ಜನ ಸೇರುವ ಅಂಗಡಿಗಳು, ಕೇಂದ್ರಗಳನ್ನೇ ‘ಸೂಪರ್ ಸ್ಪ್ರೆಡರ್’ ಎಂದು ಕರೆಯಲಾಗುತ್ತಿದ್ದು, ಇಲ್ಲಿ ನಿಯಂತ್ರಣ ಅಗತ್ಯವಾಗಿದೆ. ಆದ ಕಾರಣ ಈ ವಹಿವಾಟು, ಕೇಂದ್ರಗಳ ಮಾಲೀಕರು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕೆಂದರು.
ಕಳೆದ ಸಾಲಿನ ಮಾರ್ಚ್ ಮಾಹೆಯಲ್ಲಿ ಕೇವಲ 02 ಪ್ರಕರಣಗಳಿದ್ದು ಮಾರ್ಚ್ 23 ಕ್ಕೆ ಲಾಕ್ಡೌನ್ ತಯಾರಿಯಾಗಿತ್ತು. ಜೊತೆಗೆ ಜನರು ಅತ್ಯಂತ ಎಚ್ಚರಿಕೆಯಿಂದ ಇದ್ದರು. ಆದರೆ ಪ್ರಸ್ತುತ 156 ಪ್ರಕರಣಗಳಿದ್ದರೂ ಜನರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಉಡಾಫೆಯಿಂದ ಎಲ್ಲಿ ಬೇಕೆಂದರಲ್ಲಿ ಓಡಾಡುತ್ತಿದ್ದು, ಮಾಸ್ಕ್ ಧರಿಸುತ್ತಿಲ್ಲ, ಅಂತರ ಕಾಪಾಡುತ್ತಿಲ್ಲ.
ಪರಿಸ್ಥಿತಿ ಇಂದು ಅತ್ಯಂತ ಗಂಭೀರವಾಗಿದೆ. ಕೋವಿಡ್ ವೈರಾಣು ರೂಪಾಂತರಗೊಂಡಿದ್ದು ಎರಡನೇ ಅಲೆಯಲ್ಲಿ ವೈರಾಣು ಅತ್ಯಂತ ವೇಗವಾಗಿ ಹರಡುತ್ತಿದೆಯಾದ್ದರಿಂದ ಯಾರೂ ಕೋವಿಡ್ನ್ನು ಹಗುರವಾಗಿ ತೆಗೆದುಕೊಳ್ಳಬಾರದು. ವ್ಯಾಪಾರ, ವಹಿವಾಟು, ಮದುವೆ ಮನೆ, ಶೈಕ್ಷಣಿಕ ಸಂಸ್ಥೆಗಳಲ್ಲಿ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದಾರೆ. ಜನ ಸಾಯ್ತಾ ಇದ್ದರೂ ಜನರು ಮೈಮರೆತಿರುವುದು ಸಲ್ಲದು.
ಈ ಹಿನ್ನಲೆಯಲ್ಲಿ ವ್ಯಾಪಾರ ವಹಿವಾಟು ಮಾಡುವ ಎಲ್ಲ ಆರ್ಥಿಕ ಚಟುವಟಿಕೆಯ ಕೇಂದ್ರಗಳು ಮತ್ತು ಶೈಕ್ಷಣಿಕ ಸಂಸ್ಥೆಯವರು ಸರ್ಕಾರದ ಕೋವಿಡ್ ಸಮುಚಿತ ವರ್ತನೆಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಜಿಲ್ಲಾಡಳಿತಕ್ಕೆ ಸಹಕರಿಸಬೇಕು. ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಂತೂ ಖಚಿತವಾಗಿದ್ದು, ಉಲ್ಲಂಘನೆ ಮಾಡಿದವರ ವಿರುದ್ದ ಕಾಯ್ದೆ, ನಿಯಮಗಳನ್ವಯ ಅತ್ಯಂತ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಕಳೆದ ಸಾಲಿನ ಮಾರ್ಚ್ 4 ರಿಂದ ಕೋವಿಡ್ ನಿಯಂತ್ರಣ ಚಟುವಟಿಕೆಯನ್ನು ಸರ್ಕಾರ ಅತ್ಯಂತ ಕಟ್ಟುನಿಟ್ಟಾಗಿ ಆರಂಭಿಸಿದ್ದು, ಇಲ್ಲಿಯವರೆಗೆ ಮುಂದುವರೆದಿದೆ. ಇದುವರೆಗೆ 27605 ಪಾಸಿಟಿವ್ ಪ್ರಕರಣ ಬಂದಿದ್ದು, ಒಟ್ಟು 264 ಸಾವು ಸಂಭವಿಸಿದೆ. ಕಳೆದ ಆಗಸ್ಟ್ನಲ್ಲಿ ಅತಿ ಹೆಚ್ಚು ಪಾಸಿಟಿವಿಟಿ ದರ ಅಂದರೆ ಶೇ16.30 ಇತ್ತು. ಸೋಂಕು ಹರಡುವ ಕೊಂಡಿ ತುಂಡು ಮಾಡುವ ಕಾರ್ಯವನ್ನು ಮಾಡುತ್ತಾ ಬಂದಿದ್ದು, ಈ ಮಾರ್ಚ್ನಲ್ಲಿ ಪಾಸಿಟಿವಿಟಿ ದರ 0.29 ಇದೆ. ಪ್ರಸ್ತುತ 160 ಪಾಸಿಟಿವ್ ಪ್ರಕರಣ ಇದ್ದು ಇದರಲ್ಲಿ ದಾವಣಗೆರೆ ತಾಲ್ಲೂಕಿನದ್ದೇ 124 ಪ್ರಕರಣ ಇದೆ ಹಾಗೂ ನಗರದ್ದೇ 106 ಪ್ರಕರಣ ಇದ್ದು ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕಿದೆ.
ಎಲ್ಲ ಖಾಸಗಿ ಆಸ್ಪತ್ರೆ, ಕ್ಲಿನಿಕ್ಗಳು ಐಎಲ್ಐ ಮತ್ತು ಎಸ್ಎಆರ್ಐ ಪ್ರಕರಣಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಕಳುಹಿಸಬೇಕು. ಹಾಗೂ ಎಲ್ಲ ಹೋಟೆಲ್, ಛತ್ರ, ವಸತಿ ಶಾಲೆ ಸೇರಿದಂತೆ ಹೆಚ್ಚು ಜನರು ಕೆಲಸ ಮಾಡುವ ಅಂಗಡಿಗಳು, ಹೋಟೆಲ್, ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಕೋವಿಡ್ ಪರೀಕ್ಷೆ ಮಾಡಿಸಬೇಕೆಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಕೋವಿಡ್ ನಿಯಂತ್ರಣ ಹಿನ್ನೆಲೆಯ ಸರ್ಕಾರದ ಮಾರ್ಗಸೂಚಿಗಳನ್ನು ನಿರ್ಲಕ್ಷಿಸುತ್ತಿರುವುದು ಸರಿಯಲ್ಲ. ಸ್ವಯಂ ನಿಯಂತ್ರಣ ಇಂದು ಅತಿ ಮುಖ್ಯವಾಗಿದೆ. ವೈಯಕ್ತಿಕವಾಗಿ ಕೋವಿಡ್ ವಿರುದ್ದ ಹೋರಾಡಬೇಕಿರುವ ಇಂದಿನ ಸ್ಥಿತಿಯಲ್ಲಿ ವ್ಯಾಪಾರು ವಹಿವಾಟು ಇತರೆ ಸಂಸ್ಥೆಗಳು ಸಹಕರಿಸಬೇಕು.
ಕೋವಿಡ್ ಬಗ್ಗೆ ಎಲ್ಲರಲ್ಲಿ ಜಾಗೃತಿ ಇದ್ದು, ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಮ ನಿಶ್ಚಿತ ಎಂದ ಅವರು ಕೋವಿಡ್ ನಿಯಮಗ ಪರಿಣಾಮಕಾರಿ ಜಾರಿಗೆ ಶೀಘ್ರದಲ್ಲೇ ವಾರ್ಡುವಾರು ಮಾರ್ಷಲ್ಗಳನ್ನು ನೇಮಕ ಮಾಡಿ ಮಾಸ್ಕ್ ಧರಿಸದಿದ್ದರೆ ರೂ.250, ನಿಗದಿತ ಜನರಿಗಿಂತ ಹೆಚ್ಚು ಸೇರಿದರೆ ಹಾಲ್, ಮಂದಿರಗಳ ಮಾಲೀಕರಿಗೆ, ಆಯೋಜಕರಿಗೆ ರೂ.5 ರಿಂದ 10 ಸಾವಿರ ದಂಡ ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕ್ರಮ ವಹಿಸಲಾಗುವುದು ಎಂದ ಎಚ್ಚರಿಕೆ ನೀಡಿದರು.
ಮೊನ್ನೆವರೆಗೆ ಸಿಂಗಲ್ ಡಿಜಿಟ್ನಲ್ಲಿದ್ದ ಪ್ರಕರಣ ಇಂದು ಡಬಲ್ ಡಿಜಿಟ್ ಆಗಿದ್ದು ಮೂರಂಕಿಗೆ ತಲುಪುವ ಸಮಯ ದೂರವಿಲ್ಲ. ಆದ ಕಾರಣ ಎಲ್ಲರೂ ಎಚ್ಚೆತ್ತುಕೊಂಡು ಕೋವಿಡ್ ನಿಯಮ ಪಾಲಿಸಬೇಕು ಎಂದರು.
ಜಿ.ಪಂ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್ ಮಾತನಾಡಿ, ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ ಹಾಗೂ ಸಾವುಗಳೂ ಸಂಭವಿಸುತ್ತಿವೆ. ಮಧ್ಯ ಕರ್ನಾಟಕದಲ್ಲಿ ಇನ್ನೂ ಅಷ್ಟು ಪ್ರಕರಣ ಇಲ್ಲ. ಮೊದಲನೇ ನಮಗೆ ಸೂಚನೆ ಸಿಕ್ಕಿದೆ.
ಹಾಗಾಗಿ ನಾವೆಲ್ಲ ಎಚ್ಚೆತ್ತಕೊಳ್ಳಬೇಕು. ಕೇವಲ ವ್ಯಾಪಾರ ವಹಿವಾಟು, ಕೆಲಸದ ಸ್ಥಳಗಳಲ್ಲಿ ಮಾತ್ರವಲ್ಲ ಮನೆಗಳಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ರೂಪಾಂತರಿ ವೈರಾಣು ವೇಗವಾಗಿ ಹರಡುತ್ತಿದ್ದು, ಸ್ವಯಂ ನಿಯಂತ್ರಣದಲ್ಲಿ ನಮ್ಮ ಪಾತ್ರ ದೊಡ್ಡದಿದೆ ಎಂದರು.
ಜಿಲ್ಲಾಧಿಕಾರಿಗಳು ಮಾತನಾಡಿ, ಕಲ್ಯಾಣ ಮಂಟಪದ್ಲಿ 200 ಕ್ಕಿಂತ ಹೆಚ್ಚು ಜನ ಸೇರಿದ್ರೆ ಮಂಟಪದ ಮಾಲೀಕರು, ಹೆಣ್ಣು ಮತ್ತು ಗಂಡಿನ ಕಡೆಯವರಿಂದ ಸಹ ದಂಡವನ್ನು ಪಾಲಿಕೆಯವರು ಮಾಡುತ್ತಾರೆ. ಜನ ಸೇರುವಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮಾರ್ಷಲ್ ನೇಮಕ ಮಾಡಲಾಗುವುದು.
ಸೂಪರ್ ಸ್ಪ್ರೆಡರ್ಗಳಾದ ಕಲ್ಯಾಣ ಮಂಟಪ, ವಸತಿ ಶಾಲೆ, ಅಂಗಡಿಗಳಲ್ಲಿ, ಥಿಯೇಟರ್ ಇತರೆಡೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಕೆಪಿಎಂಇ ಅಡಿ ಬರುವ ಎಲ್ಲ ಖಾಸಗಿ ಆಸ್ಪತ್ರೆ ಕ್ಲಿನಿಕ್ನವರು ಕೆಮ್ಮು, ಶೀತ ಜ್ವರ ಇದ್ದರೆ ಕೋವಿಡ್ ಟೆಸ್ಟ್ ಆದರೆ ಮಾತ್ರ ಚಿಕಿತ್ಸೆ ಎಂದು ಕಡ್ಡಾಯಗೊಳಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಕೇಂದ್ರಗಳಲ್ಲಿ ಫಿವರ್ ಕ್ಲಿನಿಕ್ ಇದ್ದು ಅಲ್ಲಿಗೆ ಕಳುಹಿಸಬೇಕು.
ಹಾಗೂ ಆರ್ಥಿಕ ಚಟುವಟಿಕೆ ನಡೆಸುವವರು ಸರ್ಕಾರ ಹೊರಡಿಸಿರುವ ಎಸ್ಓಪಿ ಪ್ರಕಾರ ಕಾರ್ಯ ನಿರ್ವಹಿಸಬೇಕು. ನಿರ್ಲಕ್ಷ್ಯ ಭಾವ ಸಲ್ಲದು. ಏಪ್ರಿಲ್ 1 ರಿಂದ 45 ವರ್ಷ ತುಂಬಿದವರೆಲ್ಲ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಹಳೇ ದಾವಣಗೆರೆ ಭಾಗದಲ್ಲೇ ಹೆಚ್ಚು ಪ್ರಕರಣಗಳು ಇತ್ತು. ಇಲ್ಲಿಯ ಜನರೇ ಲಸಿಕೆಗೆ ಮುಂದಾಗುತ್ತಿಲ್ಲ. ಅಲ್ಲಿನ ಸ್ಥಳೀಯ ನಾಯಕರು ಲಸಿಕೆ ಪಡೆಯಲು ಜನರ ಮನವೊಲಸಿಬೇಕು ಎಂದರು.
ವಿವಿಧ ಕಲ್ಯಾಣ ಮಂಟಪಗಳ ಮಾಲೀಕರು ಜನರಿಗೆ ನಿಯಮಗಳನ್ನು ತಿಳಿಸಿ ಹೇಳಿದರೂ ಕೇಳುತ್ತಿಲ್ಲವೆಂದಾಗ ಡಿಸಿ, ನಿಮ್ಮ ವಿರುದ್ದ ಕ್ರಮ ಕೈಗೊಳ್ಳುತ್ತೇವೆ. ನೀವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ಪಕ್ಷ ಸಹಾಯ ಬೇಕಾದಲ್ಲಿ ಎಸ್ಪಿ ಹಾಗೂ ಪಾಲಿಕೆ ಸಹಾಯ ಪಡೆದುಕೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಹೆಚ್ಓ ಡಾ.ನಾಗರಾಜ್, ಜಿಲ್ಲಾ ವರ್ತಕರ ಸಂಘದ, ಐಎಂಎ, ಛೇಂಬರ್ ಆಫ್ ಕಾಮರ್ಸ್, ಸಿನೆಮಾ ಥಿಯೇಟರ್, ವಸತಿ ಶಾಲೆಗಳ, ಬಟ್ಟೆ ಅಂಗಡಿಗಳ ಸಂಘ, ಎಪಿಎಂಸಿ ವರ್ತಕರ ಸಂಘದ, ಲಿಕ್ಕರ್ ಮತ್ತು ವೈನ್ಸಂಘದ, ಬೀದಿ ಬದಿ ವ್ಯಾಪಾರಿಗಳ ಸಂಘ ಸೇರಿದಂತೆ ವಿವಿಧ ರೀತಿಯ ಆರ್ಥಿಕ ಚಟುವಟಿಕೆ ಮಾಡುವಂತಹ ಸಂಸ್ಥೆಗಳ ಸಂಘಗಳ ಪದಾಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

