ದಿನದ ಸುದ್ದಿ
ಕೋವಿಡ್ ಮಾರ್ಗಸೂಚಿ ಪಾಲಿಸದ ವ್ಯಾಪಾರ-ವಹಿವಾಟು ನಡೆಸುವ ಮಾಲೀಕರ ವಿರುದ್ದ ಕಠಿಣ ಕ್ರಮ : ಡಿಸಿ ಮಹಾಂತೇಶ ಬೀಳಗಿ
ಸುದ್ದಿದಿನ,ದಾವಣಗೆರೆ:ದೊಡ್ಡ ದೊಡ್ಡ ಅಂಗಡಿಗಳು, ವ್ಯಾಪಾರ ವಹಿವಾಟು ಕೇಂದ್ರಗಳು, ಮದುವೆ ಮಂಟಪಗಳು, ಎಪಿಎಂಸಿ ಮಾರುಕಟ್ಟೆ, ಥಿಯೇಟರ್, ವಸತಿ ಶಾಲೆಗಳು ಸೇರಿದಂತೆ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.
ಗುರುವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವ್ಯಾಪಾರ ವಹಿವಾಟು, ಕಲ್ಯಾಣ ಮಂಟಪ, ಶೈಕ್ಷಣಿಕ ಸಂಸ್ಥೆ ಒಟ್ಟಾರೆ ಆರ್ಥಿಕ ಚಟುವಟಿಕೆ ನಡೆಸುವ ಮಾಲೀಕರುಗಳಿಗೆ ಕೋವಿಡ್ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಸರಣೆ ಕುರಿತು ತಿಳಿಸಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈ ರೀತಿ ಜನ ಸೇರುವ ಅಂಗಡಿಗಳು, ಕೇಂದ್ರಗಳನ್ನೇ ‘ಸೂಪರ್ ಸ್ಪ್ರೆಡರ್’ ಎಂದು ಕರೆಯಲಾಗುತ್ತಿದ್ದು, ಇಲ್ಲಿ ನಿಯಂತ್ರಣ ಅಗತ್ಯವಾಗಿದೆ. ಆದ ಕಾರಣ ಈ ವಹಿವಾಟು, ಕೇಂದ್ರಗಳ ಮಾಲೀಕರು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕೆಂದರು.
ಕಳೆದ ಸಾಲಿನ ಮಾರ್ಚ್ ಮಾಹೆಯಲ್ಲಿ ಕೇವಲ 02 ಪ್ರಕರಣಗಳಿದ್ದು ಮಾರ್ಚ್ 23 ಕ್ಕೆ ಲಾಕ್ಡೌನ್ ತಯಾರಿಯಾಗಿತ್ತು. ಜೊತೆಗೆ ಜನರು ಅತ್ಯಂತ ಎಚ್ಚರಿಕೆಯಿಂದ ಇದ್ದರು. ಆದರೆ ಪ್ರಸ್ತುತ 156 ಪ್ರಕರಣಗಳಿದ್ದರೂ ಜನರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಉಡಾಫೆಯಿಂದ ಎಲ್ಲಿ ಬೇಕೆಂದರಲ್ಲಿ ಓಡಾಡುತ್ತಿದ್ದು, ಮಾಸ್ಕ್ ಧರಿಸುತ್ತಿಲ್ಲ, ಅಂತರ ಕಾಪಾಡುತ್ತಿಲ್ಲ.
ಪರಿಸ್ಥಿತಿ ಇಂದು ಅತ್ಯಂತ ಗಂಭೀರವಾಗಿದೆ. ಕೋವಿಡ್ ವೈರಾಣು ರೂಪಾಂತರಗೊಂಡಿದ್ದು ಎರಡನೇ ಅಲೆಯಲ್ಲಿ ವೈರಾಣು ಅತ್ಯಂತ ವೇಗವಾಗಿ ಹರಡುತ್ತಿದೆಯಾದ್ದರಿಂದ ಯಾರೂ ಕೋವಿಡ್ನ್ನು ಹಗುರವಾಗಿ ತೆಗೆದುಕೊಳ್ಳಬಾರದು. ವ್ಯಾಪಾರ, ವಹಿವಾಟು, ಮದುವೆ ಮನೆ, ಶೈಕ್ಷಣಿಕ ಸಂಸ್ಥೆಗಳಲ್ಲಿ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದಾರೆ. ಜನ ಸಾಯ್ತಾ ಇದ್ದರೂ ಜನರು ಮೈಮರೆತಿರುವುದು ಸಲ್ಲದು.
ಈ ಹಿನ್ನಲೆಯಲ್ಲಿ ವ್ಯಾಪಾರ ವಹಿವಾಟು ಮಾಡುವ ಎಲ್ಲ ಆರ್ಥಿಕ ಚಟುವಟಿಕೆಯ ಕೇಂದ್ರಗಳು ಮತ್ತು ಶೈಕ್ಷಣಿಕ ಸಂಸ್ಥೆಯವರು ಸರ್ಕಾರದ ಕೋವಿಡ್ ಸಮುಚಿತ ವರ್ತನೆಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಜಿಲ್ಲಾಡಳಿತಕ್ಕೆ ಸಹಕರಿಸಬೇಕು. ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಂತೂ ಖಚಿತವಾಗಿದ್ದು, ಉಲ್ಲಂಘನೆ ಮಾಡಿದವರ ವಿರುದ್ದ ಕಾಯ್ದೆ, ನಿಯಮಗಳನ್ವಯ ಅತ್ಯಂತ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಕಳೆದ ಸಾಲಿನ ಮಾರ್ಚ್ 4 ರಿಂದ ಕೋವಿಡ್ ನಿಯಂತ್ರಣ ಚಟುವಟಿಕೆಯನ್ನು ಸರ್ಕಾರ ಅತ್ಯಂತ ಕಟ್ಟುನಿಟ್ಟಾಗಿ ಆರಂಭಿಸಿದ್ದು, ಇಲ್ಲಿಯವರೆಗೆ ಮುಂದುವರೆದಿದೆ. ಇದುವರೆಗೆ 27605 ಪಾಸಿಟಿವ್ ಪ್ರಕರಣ ಬಂದಿದ್ದು, ಒಟ್ಟು 264 ಸಾವು ಸಂಭವಿಸಿದೆ. ಕಳೆದ ಆಗಸ್ಟ್ನಲ್ಲಿ ಅತಿ ಹೆಚ್ಚು ಪಾಸಿಟಿವಿಟಿ ದರ ಅಂದರೆ ಶೇ16.30 ಇತ್ತು. ಸೋಂಕು ಹರಡುವ ಕೊಂಡಿ ತುಂಡು ಮಾಡುವ ಕಾರ್ಯವನ್ನು ಮಾಡುತ್ತಾ ಬಂದಿದ್ದು, ಈ ಮಾರ್ಚ್ನಲ್ಲಿ ಪಾಸಿಟಿವಿಟಿ ದರ 0.29 ಇದೆ. ಪ್ರಸ್ತುತ 160 ಪಾಸಿಟಿವ್ ಪ್ರಕರಣ ಇದ್ದು ಇದರಲ್ಲಿ ದಾವಣಗೆರೆ ತಾಲ್ಲೂಕಿನದ್ದೇ 124 ಪ್ರಕರಣ ಇದೆ ಹಾಗೂ ನಗರದ್ದೇ 106 ಪ್ರಕರಣ ಇದ್ದು ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕಿದೆ.
ಎಲ್ಲ ಖಾಸಗಿ ಆಸ್ಪತ್ರೆ, ಕ್ಲಿನಿಕ್ಗಳು ಐಎಲ್ಐ ಮತ್ತು ಎಸ್ಎಆರ್ಐ ಪ್ರಕರಣಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಕಳುಹಿಸಬೇಕು. ಹಾಗೂ ಎಲ್ಲ ಹೋಟೆಲ್, ಛತ್ರ, ವಸತಿ ಶಾಲೆ ಸೇರಿದಂತೆ ಹೆಚ್ಚು ಜನರು ಕೆಲಸ ಮಾಡುವ ಅಂಗಡಿಗಳು, ಹೋಟೆಲ್, ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಕೋವಿಡ್ ಪರೀಕ್ಷೆ ಮಾಡಿಸಬೇಕೆಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಕೋವಿಡ್ ನಿಯಂತ್ರಣ ಹಿನ್ನೆಲೆಯ ಸರ್ಕಾರದ ಮಾರ್ಗಸೂಚಿಗಳನ್ನು ನಿರ್ಲಕ್ಷಿಸುತ್ತಿರುವುದು ಸರಿಯಲ್ಲ. ಸ್ವಯಂ ನಿಯಂತ್ರಣ ಇಂದು ಅತಿ ಮುಖ್ಯವಾಗಿದೆ. ವೈಯಕ್ತಿಕವಾಗಿ ಕೋವಿಡ್ ವಿರುದ್ದ ಹೋರಾಡಬೇಕಿರುವ ಇಂದಿನ ಸ್ಥಿತಿಯಲ್ಲಿ ವ್ಯಾಪಾರು ವಹಿವಾಟು ಇತರೆ ಸಂಸ್ಥೆಗಳು ಸಹಕರಿಸಬೇಕು.
ಕೋವಿಡ್ ಬಗ್ಗೆ ಎಲ್ಲರಲ್ಲಿ ಜಾಗೃತಿ ಇದ್ದು, ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಮ ನಿಶ್ಚಿತ ಎಂದ ಅವರು ಕೋವಿಡ್ ನಿಯಮಗ ಪರಿಣಾಮಕಾರಿ ಜಾರಿಗೆ ಶೀಘ್ರದಲ್ಲೇ ವಾರ್ಡುವಾರು ಮಾರ್ಷಲ್ಗಳನ್ನು ನೇಮಕ ಮಾಡಿ ಮಾಸ್ಕ್ ಧರಿಸದಿದ್ದರೆ ರೂ.250, ನಿಗದಿತ ಜನರಿಗಿಂತ ಹೆಚ್ಚು ಸೇರಿದರೆ ಹಾಲ್, ಮಂದಿರಗಳ ಮಾಲೀಕರಿಗೆ, ಆಯೋಜಕರಿಗೆ ರೂ.5 ರಿಂದ 10 ಸಾವಿರ ದಂಡ ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕ್ರಮ ವಹಿಸಲಾಗುವುದು ಎಂದ ಎಚ್ಚರಿಕೆ ನೀಡಿದರು.
ಮೊನ್ನೆವರೆಗೆ ಸಿಂಗಲ್ ಡಿಜಿಟ್ನಲ್ಲಿದ್ದ ಪ್ರಕರಣ ಇಂದು ಡಬಲ್ ಡಿಜಿಟ್ ಆಗಿದ್ದು ಮೂರಂಕಿಗೆ ತಲುಪುವ ಸಮಯ ದೂರವಿಲ್ಲ. ಆದ ಕಾರಣ ಎಲ್ಲರೂ ಎಚ್ಚೆತ್ತುಕೊಂಡು ಕೋವಿಡ್ ನಿಯಮ ಪಾಲಿಸಬೇಕು ಎಂದರು.
ಜಿ.ಪಂ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್ ಮಾತನಾಡಿ, ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ ಹಾಗೂ ಸಾವುಗಳೂ ಸಂಭವಿಸುತ್ತಿವೆ. ಮಧ್ಯ ಕರ್ನಾಟಕದಲ್ಲಿ ಇನ್ನೂ ಅಷ್ಟು ಪ್ರಕರಣ ಇಲ್ಲ. ಮೊದಲನೇ ನಮಗೆ ಸೂಚನೆ ಸಿಕ್ಕಿದೆ.
ಹಾಗಾಗಿ ನಾವೆಲ್ಲ ಎಚ್ಚೆತ್ತಕೊಳ್ಳಬೇಕು. ಕೇವಲ ವ್ಯಾಪಾರ ವಹಿವಾಟು, ಕೆಲಸದ ಸ್ಥಳಗಳಲ್ಲಿ ಮಾತ್ರವಲ್ಲ ಮನೆಗಳಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ರೂಪಾಂತರಿ ವೈರಾಣು ವೇಗವಾಗಿ ಹರಡುತ್ತಿದ್ದು, ಸ್ವಯಂ ನಿಯಂತ್ರಣದಲ್ಲಿ ನಮ್ಮ ಪಾತ್ರ ದೊಡ್ಡದಿದೆ ಎಂದರು.
ಜಿಲ್ಲಾಧಿಕಾರಿಗಳು ಮಾತನಾಡಿ, ಕಲ್ಯಾಣ ಮಂಟಪದ್ಲಿ 200 ಕ್ಕಿಂತ ಹೆಚ್ಚು ಜನ ಸೇರಿದ್ರೆ ಮಂಟಪದ ಮಾಲೀಕರು, ಹೆಣ್ಣು ಮತ್ತು ಗಂಡಿನ ಕಡೆಯವರಿಂದ ಸಹ ದಂಡವನ್ನು ಪಾಲಿಕೆಯವರು ಮಾಡುತ್ತಾರೆ. ಜನ ಸೇರುವಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮಾರ್ಷಲ್ ನೇಮಕ ಮಾಡಲಾಗುವುದು.
ಸೂಪರ್ ಸ್ಪ್ರೆಡರ್ಗಳಾದ ಕಲ್ಯಾಣ ಮಂಟಪ, ವಸತಿ ಶಾಲೆ, ಅಂಗಡಿಗಳಲ್ಲಿ, ಥಿಯೇಟರ್ ಇತರೆಡೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಕೆಪಿಎಂಇ ಅಡಿ ಬರುವ ಎಲ್ಲ ಖಾಸಗಿ ಆಸ್ಪತ್ರೆ ಕ್ಲಿನಿಕ್ನವರು ಕೆಮ್ಮು, ಶೀತ ಜ್ವರ ಇದ್ದರೆ ಕೋವಿಡ್ ಟೆಸ್ಟ್ ಆದರೆ ಮಾತ್ರ ಚಿಕಿತ್ಸೆ ಎಂದು ಕಡ್ಡಾಯಗೊಳಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಕೇಂದ್ರಗಳಲ್ಲಿ ಫಿವರ್ ಕ್ಲಿನಿಕ್ ಇದ್ದು ಅಲ್ಲಿಗೆ ಕಳುಹಿಸಬೇಕು.
ಹಾಗೂ ಆರ್ಥಿಕ ಚಟುವಟಿಕೆ ನಡೆಸುವವರು ಸರ್ಕಾರ ಹೊರಡಿಸಿರುವ ಎಸ್ಓಪಿ ಪ್ರಕಾರ ಕಾರ್ಯ ನಿರ್ವಹಿಸಬೇಕು. ನಿರ್ಲಕ್ಷ್ಯ ಭಾವ ಸಲ್ಲದು. ಏಪ್ರಿಲ್ 1 ರಿಂದ 45 ವರ್ಷ ತುಂಬಿದವರೆಲ್ಲ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಹಳೇ ದಾವಣಗೆರೆ ಭಾಗದಲ್ಲೇ ಹೆಚ್ಚು ಪ್ರಕರಣಗಳು ಇತ್ತು. ಇಲ್ಲಿಯ ಜನರೇ ಲಸಿಕೆಗೆ ಮುಂದಾಗುತ್ತಿಲ್ಲ. ಅಲ್ಲಿನ ಸ್ಥಳೀಯ ನಾಯಕರು ಲಸಿಕೆ ಪಡೆಯಲು ಜನರ ಮನವೊಲಸಿಬೇಕು ಎಂದರು.
ವಿವಿಧ ಕಲ್ಯಾಣ ಮಂಟಪಗಳ ಮಾಲೀಕರು ಜನರಿಗೆ ನಿಯಮಗಳನ್ನು ತಿಳಿಸಿ ಹೇಳಿದರೂ ಕೇಳುತ್ತಿಲ್ಲವೆಂದಾಗ ಡಿಸಿ, ನಿಮ್ಮ ವಿರುದ್ದ ಕ್ರಮ ಕೈಗೊಳ್ಳುತ್ತೇವೆ. ನೀವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ಪಕ್ಷ ಸಹಾಯ ಬೇಕಾದಲ್ಲಿ ಎಸ್ಪಿ ಹಾಗೂ ಪಾಲಿಕೆ ಸಹಾಯ ಪಡೆದುಕೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಹೆಚ್ಓ ಡಾ.ನಾಗರಾಜ್, ಜಿಲ್ಲಾ ವರ್ತಕರ ಸಂಘದ, ಐಎಂಎ, ಛೇಂಬರ್ ಆಫ್ ಕಾಮರ್ಸ್, ಸಿನೆಮಾ ಥಿಯೇಟರ್, ವಸತಿ ಶಾಲೆಗಳ, ಬಟ್ಟೆ ಅಂಗಡಿಗಳ ಸಂಘ, ಎಪಿಎಂಸಿ ವರ್ತಕರ ಸಂಘದ, ಲಿಕ್ಕರ್ ಮತ್ತು ವೈನ್ಸಂಘದ, ಬೀದಿ ಬದಿ ವ್ಯಾಪಾರಿಗಳ ಸಂಘ ಸೇರಿದಂತೆ ವಿವಿಧ ರೀತಿಯ ಆರ್ಥಿಕ ಚಟುವಟಿಕೆ ಮಾಡುವಂತಹ ಸಂಸ್ಥೆಗಳ ಸಂಘಗಳ ಪದಾಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ23 hours agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ20 hours agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ2 days agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ2 days agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

