Connect with us

ದಿನದ ಸುದ್ದಿ

ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಕ್ರಮ : ಶಾಸಕ ಪ್ರೊ. ಲಿಂಗಣ್ಣ

Published

on

ಸುದ್ದಿದಿನ,ದಾವಣಗೆರೆ:ರೈತರ ಕೃಷಿ ಚಟುವಟಿಕೆಗೆ ಹಿನ್ನಡೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು ಈಗಾಗಲೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಪ್ರಾರಂಭಿಸಲಾಗಿದೆ, ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರ ಸರಬರಾಜಿಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ರೈತರು ಅನಗತ್ಯವಾಗಿ ಮುಗಿಬಿದ್ದು ಗೊಬ್ಬರ ಖರೀದಿಸಲು ಮುಂದಾಗದೆ, ಅವಶ್ಯವಿರುವಷ್ಟು ಗೊಬ್ಬರ ಮಾತ್ರ ಖರೀದಿಸಬೇಕು ಎಂದು ಮಾಯಕೊಂಡ ಶಾಸಕರು ಹಾಗೂ ಲಿಡಕರ್ ಅಭಿವೃದ್ಧಿ ನಿಗವ್ಮದ ಅಧ್ಯಕ್ಷರಾದ ಪ್ರೊ. ಲಿಂಗಣ್ಣ ಅವರು ಮನವಿ ಮಾಡಿದರು.

ಆನಗೋಡು ರೈತ ಸಂಪರ್ಕ ಕೇಂದ್ರ ಕಛೇರಿಯಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಕಳೆದ ವಾರದಿಂದ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದು ಎಲ್ಲಾ ಭಾಗದ ರೈತರು ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದಾರೆ. ಹೀಗಾಗಿ ರೈತರಿಗೆ ಬಿತ್ತನೆಗೆ ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಕೂಡಲೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡುವಂತೆ ಸೂಚಿಸಿದ್ದರ ಹಿನ್ನೆಲೆಯಲ್ಲಿ ಸೋಮವಾರದಿಂದ ಬೀಜ ವಿತರಣೆ ಪ್ರಾರಂಭಿಸಲಾಗಿದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆಯಿಂದ ಡಿಎಪಿ ಗೊಬ್ಬರದ ಬೆಲೆ ಹೆಚ್ಚಾಗಿದ್ದರೂ, ಕೋವಿಡ್-19ರ ಸಂಕಷ್ಟ ಸಮಯದಲ್ಲಿ ರೈತರಿಗೆ ಕೃಷಿ ಪರಿಕರಗಳನ್ನು ಖರೀದಿಸಲು ಕಷ್ಟವಾಗುತ್ತಿರುವುದನ್ನು ಮನಗಂಡು ಪ್ರಧಾನಿಯವರು ಏರಿಕೆಯಾಗಿದ್ದ ಡಿಎಪಿ ಗೊಬ್ಬರದ ಬೆಲೆಯನ್ನು 1200 ರೂ.ಗಳಿಗೆ ಇಳಿಸಿದ್ದಾರೆ.

ಸಂಸದರು ಸಹ ನಮ್ಮ ಮನವಿಯಂತೆ ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರದ ಕುರಿತು ಕೇಂದ್ರ ರಸಗೊಬ್ಬರ ಮಂತ್ರಿಗಳೊಂದಿಗೆ ಮಾತನಾಡಿ ಜಿಲ್ಲೆಗೆ ಅವಶ್ಯವಿರುವಷ್ಟು ಸರಬರಾಜು ಮಾಡಲು ಕ್ರಮ ಕೈಗೊಂಡಿರುತ್ತಾರೆ. ಆದ್ದರಿಂದ ಯಾವುದೇ ರೈತರು ಅನಗತ್ಯವಾಗಿ ಗೊಬ್ಬರ ಖರೀದಿಗೆ ಮುಂದಾಗಬಾರದು ಹಾಗೂ ಅವಶ್ಯವಿರುವಷ್ಟು ಗೊಬ್ಬರವನ್ನು ಮಾತ್ರ ಖರೀದಿಸಬೇಕು. ಬಿತ್ತನೆ ಬೀಜ ಹಾಗೂ ಗೊಬ್ಬರದ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ದಾವಣಗೆರೆ ಉಪವಿಭಾಗದ ಉಪ ಕೃಷಿ ನಿರ್ದೇಶಕ ತಿಪ್ಪೇಸ್ವಾಮಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಸಹ ರೈತರಿಗೆ ಸಕಾಲದಲ್ಲಿ ಉತ್ತಮ ಗುಣಮಟ್ಟದ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಕ್ರಮ ವಹಿಸಲಾಗಿದೆ.

ಮೆಕ್ಕೇಜೋಳಕ್ಕೆ ಸಾಮಾನ್ಯ ವರ್ಗದ ರೈತರಿಗೆ ಕೆ.ಜಿ.ಗೆ 20ರೂ., ಪ.ಜಾತಿ/ಪ.ಪಂಗಡಗಳ ರೈತರಿಗೆ ಕೆ.ಜಿ.ಗೆ 30 ರೂ., ಶೇಂಗಾಕ್ಕೆ ಸಾಮಾನ್ಯ ವರ್ಗದ ರೈತರಿಗೆ ಕೆ.ಜಿ.ಗೆ 18 ರೂ., ಪ.ಜಾತಿ/ಪ.ಪಂಗಡಗಳ ರೈತರಿಗೆ 27 ರೂ., ತೊಗರಿಗೆ ಸಾಮಾನ್ಯ ವರ್ಗದ ರೈತರಿಗೆ 25 ರೂ. ಪ.ಜಾತಿ/ಪ.ಪಂಗಡಗಳ ರೈತರಿಗೆ 37.50 ರೂ.ಗಳ ಸಹಾಯಧನವಿದ್ದು, ರೈತರು ತಮ್ಮ ಪಹಣಿ ಮತ್ತು ಆಧಾರ್ ಕಾರ್ಡ್ ಅಥವಾ ಪ್ರೂಟ್ಸ್ ನಂಬರ್ ತಿಳಿಸಿ ಈ ಸೌಲಭ್ಯ ಪಡೆಯಲು ಮನವಿ ಮಾಡಿದರು.

ದಾವಣಗೆರೆ ತಾಲ್ಲೂಕಿನಲ್ಲಿ ಸುಮಾರು 29 ರಿಂದ 30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೇಜೋಳ ಬಿತ್ತನೆಯಾಗುತ್ತಿದ್ದು, ರೈತರು ಇತ್ತೀಚಿನ ದಿನಗಳಲ್ಲಿ ಕೇವಲ ಏಕಬೆಳೆ ಪದ್ಧತಿ ಅನುಸರಿಸುತ್ತಿದ್ದಾರೆ. ಈ ಪದ್ಧತಿಯಿಂದ ಲಾಭದಲ್ಲಿ ಇಳಿಕೆಯಲ್ಲದೇ ಮಣ್ಣಿನ ಗುಣಮಟ್ಟ ಹಾನಿಯಾಗುತ್ತಿರುತ್ತದೆ. ಹೀಗಾಗಿ ಬೆಳೆ ಪರಿವರ್ತನೆ ಅಥವಾ ಮೆಕ್ಕೇಜೋಳದಲ್ಲಿ ಕಡ್ಡಾಯವಾಗಿ ದ್ವಿದಳ ಧಾನ್ಯ ಬೆಳೆಗಳಾದ ತೊಗರಿ, ಅವರೆ, ಅಲಸಂದೆ ಬೆಳೆಗಳನ್ನು ಬೆಳೆಯಬೇಕು.

ಇದನ್ನೂ ಓದಿ | ತಂಬಾಕು ಸೇವನೆಯಿಂದ ಕೊರೋನಾ ಸಾಧ್ಯತೆ ಹೆಚ್ಚು : ಡಾ. ವೆಂಕಟೇಶ್

ಇದರಿಂದ ಹೆಚ್ಚುವರಿ ಆದಾಯದ ಜೊತೆಯಲ್ಲಿ ಮಣ್ಣಿನ ಫಲವತ್ತತೆಯನ್ನು ಸಹ ಹೆಚ್ಚಿಸಿಕೊಳ್ಳಬಹುದು. ಈ ಕಾರಣಕ್ಕಾಗಿ ಸಣ್ಣ ರೈತರಿಗೂ ಅನುಕೂಲವಾಗಲೆಂದು ರೈತ ಸಂಪರ್ಕ ಕೇಂದ್ರಗಳಲ್ಲಿ 2 ಕೆಜಿ ತೊಗರಿ ಪ್ಯಾಕೆಟ್‍ಗಳನ್ನು ಸಹ ವ್ಯವಸ್ಥೆ ಮಾಡಿದ್ದು ಇದರ ಲಾಭ ಪಡೆಯಲು ಮನವಿ ಮಾಡಿದರು. ಯಾವುದೇ ರೈತರು ಅನಧಿಕೃತ ಕೃಷಿ ಪರಿಕರ ಮಾರಾಟಗಾರರಿಂದ ಯಾವುದೇ ಕೃಷಿ ಪರಿಕರಗಳನ್ನು ಖರೀದಿಸಬಾರದೆಂಬ ಸೂಚನೆಯನ್ನೂ ಸಹ ನೀಡಿದರು.

ಬಯಲು ಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಣಬೇರು ಜೀವನಮೂರ್ತಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾಂಕ್ರಾಮಿಕ ರೋಗದ ಹಿನ್ನೆಲೆ ರೈತರು ಕೋವಿಡ್-19 ನಿಯಮಗಳನ್ನು ಪಾಲಿಸಿಕೊಂಡು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ರೈತರಿಗೆ ಮನವಿ ಮಾಡಿದರು.

ಸಹಾಯಕ ಕೃಷಿ ನಿರ್ದೇಶಕ ರೇವಣಸಿದ್ದನಗೌಡ ಹೆಚ್.ಕೆ., ಕೃಷಿ ಅಧಿಕಾರಿ ರವಿಕುಮಾರ್, ಸಹಾಯಕ ಕೃಷಿ ಅಧಿಕಾರಿ ಬಿ.ಕೆ. ಚಂದ್ರಪ್ಪ, ಗ್ರಾಮದ ಮುಖಂಡರಾದ ವಸಂತಕುಮಾರ್ ಮತ್ತು ಇತರೆ ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending