ದಿನದ ಸುದ್ದಿ
ಎಕ್ಸ್ರೇ, ಸಿಟಿ ಸ್ಕ್ಯಾನ್ಗೆ ಹೆಚ್ಚಿನ ದರ ವಸೂಲಿ ಮಾಡಿದರೆ ಕ್ರಮ ; ಖಾಸಗಿ ವೈದ್ಯಕೀಯ ಸಂಸ್ಥೆಗಳ ಮೇಲೆ ದಂಡ ಪ್ರಹಾರ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸೋಂಕು ತಪಾಸಣೆ ಕುರಿತಂತೆ ಎಕ್ಸ್ರೇ, ಸಿಟಿ ಸ್ಕ್ಯಾನ್, ಎಂಆರ್ಐ ಸ್ಕ್ಯಾನ್ ಮುಂತಾದ ಸೇವೆಯನ್ನು ನೀಡಲು ಸರ್ಕಾರ ನಿಗದಿಪಡಿಸಿದ ದರಕ್ಕಿಂತಲೂ ಹೆಚ್ಚಿನ ದರವನ್ನು ಸಾರ್ವಜನಿಕರಿಂದ ವಸೂಲಿ ಮಾಡಿದ ದಾವಣಗೆರೆ ನಗರದ ವಿವಿಧ ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ 10 ರಿಂದ 50 ಸಾವಿರ ರೂ. ವರೆಗೆ ದಂಡ ವಿಧಿಸಿ, ದಂಡ ಮೊತ್ತವನ್ನು 10 ದಿನಗಳ ಒಳಗಾಗಿ ಸಂಗ್ರಹಿಸಿ ಸರ್ಕಾರಕ್ಕೆ ಜಮಾ ಮಾಡುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಿದರು.
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಿ (ಕೆಪಿಎಂಇ) ಕಾಯ್ದೆ ಅನುಷ್ಠಾನ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದ ಸಂದರ್ಭದಲ್ಲಿ, ಸಾರ್ವಜನಿಕರಿಗೆ ಆರ್ಥಿಕವಾಗಿ ಹೊರೆಯಾಗಬಾರದು ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳು ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು, ಸಾರ್ವಜನಿಕರಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡಬಾರದು ಎಂಬ ಉದ್ದೇಶದಿಂದ ಎಕ್ಸ್ರೇ, ಸಿಟಿ ಸ್ಕ್ಯಾನ್ ಸೇರಿದಂತೆ ವಿವಿಧ ವೈದ್ಯಕೀಯ ಸೇವೆಗಳಿಗೆ ದರವನ್ನು ನಿಗದಿಪಡಿಸಿ ಆದೇಶ ಹೊರಡಿಸಿತ್ತು.
ಆದರೆ ಸರ್ಕಾರ ನೀಡಿದ ಸೂಚನೆ ಹಾಗೂ ಆದೇಶ ಉಲ್ಲಂಘಿಸಿ, ವಿವಿಧ ಖಾಸಗಿ ಸಂಸ್ಥೆಗಳು ಹೆಚ್ಚಿನ ದರ ವಿಧಿಸಿರುವುದು ಕಂಡುಬಂದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವ್ಯಾಪ್ತಿಯಲ್ಲಿ ಬರುವ ವಿಕಿರಣ ಸುರಕ್ಷತಾ ನಿರ್ದೇಶನಾಲಯ ಕಚೇರಿಯಿಂದ ಕಳೆದ ಸೆಪ್ಟಂಬರ್ 03 ರಂದು ವಿವಿಧ ಅಧಿಕಾರಿಗಳ ತಂಡವು ನಗರದ ವಿವಿಧ ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಆಕಸ್ಮಿಕ ಭೇಟಿ ನೀಡಿ, ತಪಾಸಣೆ ನಡೆಸಿ, ವರದಿಯನ್ನು ಸಲ್ಲಿಸಿದ್ದು, ಈ ವರದಿಯನುಸಾರ ಹಲವು ಸಂಸ್ಥೆಗಳು ಸರ್ಕಾರದ ಸೂಚನೆಯನ್ನು ಉಲ್ಲಂಘಿಸಿರುವುದು ಕಂಡುಬಂದಿದೆ.
ಹೀಗಾಗಿ ಸರ್ಕಾರದ ನಿರ್ದೇಶನದಂತೆ ಅಂತಹ ಸಂಸ್ಥೆಗಳಿಗೆ ದಂಡ ವಿಧಿಸಲಾಗಿದೆ. ಕಾನೂನು ಎಲ್ಲರಿಗೂ ಒಂದೇ, ಅದನ್ನು ಜಾರಿಗೊಳಿಸುವ ಸಲುವಾಗಿಯೇ ನಾನು ಇದ್ದೇನೆ, ಎಲ್ಲವನ್ನೂ ತಿಳಿದವರೇ ಕಾನೂನು ಉಲ್ಲಂಘಿಸುವುದು ಸರಿಯಲ್ಲ, ಕೋವಿಡ್ ಸಂದರ್ಭದಲ್ಲಿ ಮೊದಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಡವರು, ಸಾರ್ವಜನಿಕರಿಂದ ನಿಯಮ ಬಾಹಿರವಾಗಿ ಖಾಸಗಿ ವೈದ್ಯಕೀಯ ಸಂಸ್ಥೆಗಳು ಹಣ ಲೂಟಿ ಮಾಡುವುದನ್ನು ಸಹಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಿ (ಕೆಪಿಎಂಇ) ಕಾಯ್ದೆ ಅನುಷ್ಠಾನದ ನೋಡಲ್ ಅಧಿಕಾರಿ ಡಾ. ರೇಣುಕಾರಾಧ್ಯ ಅವರು, ತಪಾಸಣಾ ವರದಿಯನ್ನು ಸಭೆಯಲ್ಲಿ ಮಂಡಿಸಿದರು. ನಗರದ ಹೆಗಡೆ ಡಯಾಗ್ನೋಸ್ಟಿಕ್ಸ್ ಸೆಂಟರ್ ಎಕ್ಸ್ರೆ ಮೊಬೈಲ್, ಎಕ್ಸ್ರೇ ಫಿಕ್ಸ್ಡ್ ಹಾಗೂ ಸಿಟಿ ಸ್ಕ್ಯಾನ್ ಉಪಕರಣ ಬಳಕೆಗೆ ಎಇಆರ್ಬಿ ಮಾನ್ಯತೆ ಹೊಂದಿರುವ ಪರವಾನಗಿ ಹೊಂದಿಲ್ಲದ ಕಾರಣ ನೋಟಿಸ್ ಜಾರಿಗೊಳಿಸಿ, ಸೀಜ್ ಮಾಡಲಾಗಿತ್ತು, ಆದರೆ ಅವರು ನಿಗದಿತ ಪ್ರಾಧಿಕಾರದ ಅನುಮತಿ ಪಡೆಯದೆ, ಸಂಸ್ಥೆಯನ್ನು ತೆರೆದು, ಸೇವೆ ಪುನರಾರಂಭಿಸಿರುವುದು ಕಂಡುಬಂದಿದೆ.
ಅಲ್ಲದೆ ಎದೆಯ ಎಕ್ಸ್ರೇ ಹಾಗೂ ಹೆಚ್ಆರ್ಸಿಟಿ ಸ್ಕ್ಯಾನ್ಗೆ ಎಪಿಎಲ್, ಬಿಪಿಎಲ್ ಸೇರಿದಂತೆ ಎಲ್ಲ ವರ್ಗದವರಿಗೂ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರ ವಸೂಲಿ ಮಾಡಿರುವುದು ಬಿಲ್ ಬುಕ್ನಿಂದ ಸಾಬೀತಾಗಿದೆ ಎಂದರು. ಇದಕ್ಕೆ ಜಿಲ್ಲಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕಾನೂನು ಉಲ್ಲಂಘಿಸುವವರಿಗೆ ತಕ್ಕ ಪಾಠ ಕಲಿಸಬೇಕಿದೆ.
ಹೀಗಾಗಿ ಹೆಗಡೆ ಡಯಾಗ್ನೋಸ್ಟಿಕ್ಸ್ ಸೆಂಟರ್ ಅವರಿಗೆ 50 ಸಾವಿರ ರೂ. ದಂಡ ವಿಧಿಸಬೇಕು, ಈ ಸಂಸ್ಥೆಯ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಿಸುವಂತೆ ಸೂಚನೆ ನೀಡಿದರು. ಅಲ್ಲದೆ ದಂಡ ಪಾವತಿಯವರೆಗೂ ಕೆಪಿಎಂಇ ಅಥವಾ ಪಿಸಿ&ಪಿಎನ್ಡಿಟಿ ನಡಿ ಸಲ್ಲಿಸಿರುವ ಯಾವುದೇ ಮನವಿಯನ್ನು ಪುರಸ್ಕರಿಸಬಾರದು ಎಂದು ಸೂಚನೆ ನೀಡಿದರು.
ಅದೇ ರೀತಿ ನಗರದಲ್ಲಿರುವ ಸೌಖ್ಯದ ಆಸ್ಪತ್ರೆಯು ಎದೆಯ ಎಕ್ಸ್ರೇ ಸೇವೆಗಾಗಿ ರೂ. 250 ರ ಬದಲಿಗೆ 400 ರೂ. ವರೆಗೂ ಶುಲ್ಕ ವಸೂಲಿ ಮಾಡಿರುವುದು, ಬಿಲ್ ಬುಕ್ನಿಂದ ಸಾಬೀತಾಗಿದೆ, ಈ ಸಂಸ್ಥೆಗೆ 10 ಸಾವಿರ ರೂ. ದಂಡವನ್ನು ವಿಧಿಸಲಾಯಿತು.
ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಹೆಚ್ಆರ್ಸಿಟಿ ಸ್ಕ್ಯಾನ್ಗಾಗಿ ಎಪಿಎಲ್, ಬಿಪಿಎಲ್ ಎನ್ನದೆ ಎಲ್ಲ ವರ್ಗದ ಸಾರ್ವಜನಿಕರಿಂದ 2500 ರೂ. ಗಳಿಂದ 3000 ರೂ. ವರೆಗೂ ವಸೂಲಿ ಮಾಡಿದೆ, ಅಲ್ಲದೆ ಸಿಟಿ ಸ್ಕ್ಯಾನ್ಗೂ ಕೂಡ ಹೆಚ್ಚಿನ ದರ ವಸೂಲಿ ಮಾಡಿರುವುದು ಸಾಬೀತಾಗಿದೆ. ಈ ಸಂಸ್ಥೆಗೂ 50 ಸಾವಿರ ರೂ. ದಂಡವನ್ನು ವಿಧಿಸಲಾಯಿತು.
ನಗರದ ಸಿಟಿ ಹೈಟೆಕ್ ಇಮೇಜಿಂಗ್ ಸರ್ವೀಸ್ ಪ್ರೈ.ಲಿ. ಈ ಸಂಸ್ಥೆಯು ಕೂಡ ಹೆಚ್ಆರ್ಸಿಟಿ ಸ್ಕ್ಯಾನ್ಗಾಗಿ ಎಪಿಎಲ್, ಬಿಪಿಎಲ್ ಎನ್ನದೆ ಎಲ್ಲ ವರ್ಗದ ಸಾರ್ವಜನಿಕರಿಂದ 2500 ರೂ. ಗಳಿಂದ 5000 ರೂ. ವರೆಗೂ ವಸೂಲಿ ಮಾಡಿದೆ, ಅಲ್ಲದೆ ಸಿಟಿ ಸ್ಕ್ಯಾನ್ಗೂ ಕೂಡ ಹೆಚ್ಚಿನ ದರ ವಸೂಲಿ ಮಾಡಿರುವುದು ಸಾಬೀತಾಗಿರುವುದರಿಂದ ಈ ಸಂಸ್ಥೆಗೂ 50 ಸಾವಿ ರೂ. ದಂಡ ವಿಧಿಸಿದರು.
ನಗರದ ಸಿಟಿ ಸೆಂಟ್ರಲ್ ಹಾಸ್ಪಿಟಲ್ ಸಂಸ್ಥೆಯು ಕೋವಿಡ್ ರೋಗಿಗಳಿಂದ ಎದೆಯ ಎಕ್ಸ್ರೇ ಸೇವೆಗಾಗಿ 750 ರೂ. ವರೆಗೂ ಶುಲ್ಕ ವಸೂಲಿ ಮಾಡಿರುವುದು ಬಿಲ್ ಪ್ರತಿಯಿಂದ ಸಾಬೀತಾಗಿದ್ದು, ಈ ಸಂಸ್ಥೆಗೆ 25 ಸಾವಿರ ರೂ. ದಂಡ ವಿಧಿಸಲಾಯಿತು.
ದಂಡದ ಮೊತ್ತವನ್ನು ಸಂಬಂಧಪಟ್ಟ ಸಂಸ್ಥೆಯವರಿಂದ 10 ದಿನಗಳ ಒಳಗಾಗಿ ವಸೂಲಿ ಮಾಡಿ, ಸರ್ಕಾರದ ಖಾತೆಗೆ ಜಮಾ ಮಾಡಬೇಕು. ದಂಡದ ಮೊತ್ತವನ್ನು ಪಾವತಿಸುವವರೆಗೂ ಸಂಬಂಧಪಟ್ಟ ಸಂಸ್ಥೆಯ ಕೆಪಿಎಂಇ ಅಥವಾ ಪಿಸಿ&ಪಿಎನ್ಡಿಟಿ ನಡಿ ಸಲ್ಲಿಸಿರುವ ಯಾವುದೇ ಮನವಿಯನ್ನು ಪುರಸ್ಕರಿಸಬಾರದು. ಅಧಿಕಾರಿಗಳು 20 ದಿನಗಳ ಬಳಿಕ ಮತ್ತೊಮ್ಮೆ ಎಲ್ಲ ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಆಕಸ್ಮಿಕ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು.
ಆಗಲೂ ಸಂಸ್ಥೆಯಿಂದ ಹೆಚ್ಚಿನ ದರ ವಸೂಲಿ ಹಾಗೂ ನಿಯಮ ಉಲ್ಲಂಘನೆ ನಡೆಯುತ್ತಿರುವುದು ಕಂಡುಬಂದಲ್ಲಿ, ಅಂತಹ ಸಂಸ್ಥೆಯನ್ನು ಸೀಜ್ ಮಾಡಿ, ವರದಿ ಸಲ್ಲಿಸಬೇಕು. ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಖಾಸಗಿ ಆಸ್ಪತ್ರೆಗಳು ನಿಗದಿತ ಮಾರ್ಗಸೂಚಿಯಂತೆ ವೈದ್ಯಕೀಯ ತ್ಯಾಜ್ಯದ ವಿಲೇವಾರಿಗಾಗಿ ಸರ್ಕಾರ ನಿಗದಿಪಡಿಸಿರುವ ದರದಂತೆ ಮೊತ್ತವನ್ನು ಸಂಬಂಧಪಟ್ಟವರಿಗೆ ಪಾವತಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರಾಜ್ ಅವರು ಮಾತನಾಡಿ, ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಿ (ಕೆಪಿಎಂಇ) ಕಾಯ್ದೆಯನ್ವಯ ಪ್ರತಿಯೊಂದ ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಸಂಸ್ಥೆಗಳು ನೊಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಒಂದು ವೇಳೆ ನೊಂದಣಿ ಮಾಡಿಕೊಳ್ಳದೆ, ಕಾಯ್ದೆಯನ್ನು ಉಲ್ಲಂಘಿಸಿ, ವೈದ್ಯಕೀಯ ಸೇವೆ ನೀಡುವ ಸಂಸ್ಥೆಗಳ ವಿರುದ್ಧ ಕಾನೂನು ರಿತ್ಯಾ ಕ್ರಮ ಜರುಗಿಸಲಾಗುವುದು.
ಸರ್ಕಾರದ ಸೂಚನೆಯಂತೆ ಪ್ರತಿಯೊಂದು ಖಾಸಗಿ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳು ತಮ್ಮಲ್ಲಿ ಸೇವೆ ಸಲ್ಲಿಸುವ ವೈದ್ಯರು, ತಜ್ಞರು, ಸರ್ಕಾರಿ ವೈದ್ಯರು ಸೇವೆ ನೀಡುತ್ತಿದ್ದಲ್ಲಿ ಅವರ ವಿವರ, ಕಟ್ಟಡ ನಕ್ಷೆ ಮುಂತಾದ ವಿವರಗಳ ಚೆಕ್ಲಿಸ್ಟ್ ಅನ್ನು ಆರೋಗ್ಯ ಇಲಾಖೆಗೆ ಕೂಡಲೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್ ದಾನಮ್ಮನವರ್, ಡಿಹೆಚ್ಒ ಡಾ. ನಾಗರಾಜ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಐಎಂಎ ಅಧ್ಯಕ್ಷ ಡಾ. ಸೋಮಶೇಖರ್ ಸೇರಿದಂತೆ ವಿವಿಧ ಖಾಸಗಿ ವೈದ್ಯಕೀಯ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


