ದಿನದ ಸುದ್ದಿ
ಐದು ಸಾವಿರ ಶಾಲೆಗಳ ದುರಸ್ತಿಗೆ ಕ್ರಮ : ಮುರುಗೇಶ ನಿರಾಣಿ
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಐದು ಸಾವಿರ ಶಾಲೆಗಳ ದುರಸ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದು, ತ್ವರಿತಗತಿಯಲ್ಲಿ ಕಾರ್ಯ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ ಹೇಳಿದ್ದಾರೆ.
ಕಲಬುರಗಿ ಜಿಲ್ಲೆ ಮಾತೋಳಿ ಗ್ರಾಮದಲ್ಲಿಂದು ಮಳೆಯಿಂದ ಮನೆ ಹಾನಿಯಾದ ಸಂತ್ರಸ್ತರಿಗೆ ಪರಿಹಾರ ವಿತರಿಸಿ ಮಾತನಾಡಿದ ಅವರು, ಶಾಲೆ ಕಟ್ಟಡ ಸುಸ್ಥಿರ ಕುರಿತು ಒಂದು ವಾರದೊಳಗೆ ಲೋಕೋಪಯೋಗಿ ಇಲಾಖೆಯಿಂದ ದೃಢೀಕರಣ ಪತ್ರ ಪಡೆಯಲು ಶಿಕ್ಷಣಾಧಿಕಾರಿಗೆ ಸೂಚಿಸಲಾಗಿದೆ ಎಂದರು. ಮಳೆ ಹಿನ್ನೆಲೆಯಲ್ಲಿ ಉತ್ತಮ ಸ್ಥಿತಿಯಲ್ಲಿರುವ ಶಾಲೆಗಳಿಗೆ ರಜೆ ನೀಡಲ್ಲ. ಕಟ್ಟಡ ಶಿಥಿಲಾವಸ್ಥೆ ಇರುವ ಶಾಲೆಗಳಿಗೆ ರಜೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಪ್ರವಾಹ ಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕು
ಪ್ರವಾಹ ಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಕೈಗಾರಿಕೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಲಬುರಗಿಯಲ್ಲಿಂದು ಪ್ರಗತಿ ಪರಿಶೀಲನೆ ನಡೆಸಿದ ಅವರು, ಮಹಾರಾಷ್ಟ್ರದ ಉಜನಿ ಜಲಾಶಯದ ಅಧಿಕಾರಿಗಳು ಮತ್ತು ಅಲ್ಲಿನ ಜಿಲ್ಲಾಧಿಕಾರಿಗಳೊಂದಿಗೆ ಸತತ ಸಂಪರ್ಕ ಸಾಧಿಸಿ, ಭೀಮಾ ನದಿಗೆ ಬಿಡುವ ನೀರಿನ ಮಾಹಿತಿ ಪಡೆದು ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಮಹಾರಾಷ್ಟ್ರದ ಸಚಿವರೊಂದಿಗೆ ಸಭೆ ನಡೆಸಿ ಸಮನ್ವಯ ಸಾಧಿಸಿದ ಪರಿಣಾಮ ಕಳೆದ ಮೂರು ವರ್ಷದಲ್ಲಿ ಕೃಷ್ಣಾ ನೀರಾವರಿ ವಲಯದಲ್ಲಿ ಪ್ರವಾಹ ಸಮಸ್ಯೆ ಕಾಣುತ್ತಿಲ್ಲ ಎಂದು ಅವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243