ದಿನದ ಸುದ್ದಿ
ದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
ಸುದ್ದಿದಿನಡೆಸ್ಕ್:ದಾವಣಗೆರೆಮಹಾನಗರದಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ ಮಾಡುವ ಮುನ್ನ ಪೂರ್ವಭಾವಿಯಾಗಿ ಒಂದಿಷ್ಟು ಮಾಹಿತಿಯ ಅಗತ್ಯವಿದೆ. ದಾವಣಗೆರೆ ಅತ್ಯಂತ ನಿಖರವಾಗಿ ಕರ್ನಾಟಕದ ಮಧ್ಯಭಾಗದಲ್ಲಿದೆ. ಅದ್ದರಿಂದ ಈ ನಗರವನ್ನೇ ಕರ್ನಾಟಕ ರಾಜಧಾನಿಯನ್ನಾಗಿ ಮಾಡಬೇಕೆಂಬ ಮಹಾದಾಸೆಯನ್ನು ಕರ್ನಾಟಕ ಏಕೀಕರಣಕ್ಕೂ ಮುಂಚೆಯೇ ಹೊಂದಲಾಗಿತ್ತು ಎಂದು ಜಿಲ್ಲಾ ವಕೀಲರ ಸಂಘ ನಿಕಟಪೂರ್ವ ಅಧ್ಯಕ್ಷರಾದ ಎಲ್.ಎಚ್.ಅರುಣಕುಮಾರ್ ಅವರು ಹೇಳಿದ್ದಾರೆ.
ರಾಷ್ಟ್ರನಾಯಕರಾದ ಎಸ್.ನಿಜಲಿಂಗಪ್ಪ, ಖ್ಯಾತ ಪತ್ರಕರ್ತ, ಲೇಖಕ, ಕನ್ನಡಾಭಿಮಾನಿ ಪಾಟೀಲ್ ಪುಟ್ಟಪ್ಪನವರೂ ಸೇರಿದಂತೆ ಅನೇಕ ಮಹನೀಯರು ದಾವಣಗೆರೆಯನ್ನು ರಾಜಧಾನಿಯಾಗಿ ಮಾಡಬೇಕೆಂಬ ಆಸೆಯನ್ನು ಹೊಂದಿದ್ದರು. ಆದರೆ, ಕಾರಣಾಂತರಗಳಿಂದ ದಾವಣಗೆರೆ ನಗರಕ್ಕೆ ರಾಜಧಾನಿಯಾಗುವ ಅವಕಾಶ ಲಭ್ಯವಾಗದೇ ಹೋದದ್ದು ದುರಾದೃಷ್ಠರಕ ಸಂಗತಿ ಎಂದೇ ಹೇಳಬಹುದು ಎಂದಿದ್ದಾರೆ.
ದಾವಣಗೆರೆ ನಗರ ಭೋಗೋಳಿಕವಾಗಿ ತುಂಬ ಆಯಕಟ್ಟಿನ ಸ್ಥಳದಲ್ಲಿದ್ದು, ಬೆಂಗಳೂರು, ಮುಂಬಯಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಹಗಲು ರಾತ್ರಿ ವಿವಿಧ ಬಗೆಯ ರೈಲುಗಳ ಸೌಲಭ್ಯವಿದೆ. ವಿಫುಲ ಸಂಖ್ಯೆಯ ವಿವಿಧ ಭಾಗಗಳನ್ನು ತ್ವರಿತವಾಗಿ ಸಂಪರ್ಕಿಸುವ ಅತ್ಯುತ್ತಮ ಸರ್ಕಾರಿ ಹಾಗೂ ಖಾಸಗಿ ಬಸ್ಸುಗಳ ಸಂಚಾರ ವ್ಯವಸ್ಥೆ ಇದೆ. ಇದಲ್ಲದೇ ಮಾದರಿ ಎನಿಸುವ ಹೈಟೆಕ್ ಬಸ್ ನಿಲ್ದಾಣವಿದೆ.
ಇದಲ್ಲದೇ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಸಿಮೆಂಟ್ ರಸ್ತೆಗಳು ಸೇರಿದಂತೆ ಅಧುನಿಕ ನಾಗರೀಕ ಸೌಲಭ್ಯಗಳು ನಗರಕ್ಕೆ ದೊರಕಿವೆ. ಹಚ್ಚ ಹಸಿರಿನ ವಾತಾವರಣ, ನಿರಂತರ ನೀರು ಪೂರೈಕೆಯ ಜಲಸಿರಿ ಯೋಜನೆ, ಅಧಿಕ ಸಂಖ್ಯೆಯ ಉದ್ಯಾನವನಗಳು ನಗರದ ಶೋಭೆಯನ್ನು ಹೆಚ್ಚಿಸಿವೆ. ಬಗೆಬಗೆಯ ಊಟ ಉಪಹಾರ ಮಂದಿರಗಳು, ಸುಸಜ್ಜಿತ ವಸತಿ ಗೃಹಗಳು ಎಲ್ಲೆಡೆ ಇವೆ.
ಶೈಕ್ಷಣಿಕೆ ರಂಗದಲ್ಲಿ ದಾವಣಗೆರೆ ನಗರ ಅಪಾರ ಪ್ರಗತಿ ಸಾಧಿಸಿದ್ದು, ಅಕ್ಸ್ಫರ್ಡ್ ಎನ್ನುವ ಖ್ಯಾತಿಯೂ ನಗರಕ್ಕುಂಟು. ಇಲ್ಲಿ ಎರಡು ವಿಶ್ವವಿದ್ಯಾನಿಲಯಗಳು, ಮುಖ್ಯವಾಗಿ ಎರಡು ಕಾನೂನು ಕಾಲೇಜುಗಳು ಸೇರಿದಂತೆ ಎಲ್ಲಾ ಬಗೆಯ ಶಿಕ್ಷಣ ನೀಡುವ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಿವೆ.
ಇನ್ನು ಬಹುಮುಖ್ಯವಾಗಿ, ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿ ಅಂದು ದಾವಣಗೆರೆ ಕಂದಾಯ ಉಪ ವಿಭಾಗವಾಗಿದ್ದ ದಿನಗಳಲ್ಲಿ, ಈ ನಗರದಿಂದ ವಕೀಲರಾದ ಹೆಚ್.ಸಿದ್ದವೀರಪ್ಪನವರು ಹಾಗೂ ಚಿತ್ರದುರ್ಗದಲ್ಲಿ ಅಂದು ವಕೀಲರಾಗಿದ್ದ ಎಸ್.ನಿಜಲಿಂಗಪ್ಪನವರು, ಭಾರತದ ಸಂವಿಧಾನ ರಚನಾ ಸಭೆಯಲ್ಲಿ ಸದಸ್ಯರಾಗಿ, ದೇಶದ ಸಂವಿಧಾನ ರಚನೆಯಲ್ಲ ಮಹತ್ವದ ಕೊಡುಗೆ ನೀಡಿದ್ದಾರೆ.
ದಾವಣಗೆರೆ ನಗರದಲ್ಲಿ ಪೊಲೀಸ್ ಮಹಾ ನಿರೀಕ್ಷಕರ (ಐಜಿಪಿ) ಕಚೇರಿ, ಅಭಿಯೋಜನಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ಇರುವುದಲ್ಲದೇ, ನಗರಕ್ಕೆ ಲಗತ್ತಾಗಿ ಪ್ರಾದೇಶಿ ನ್ಯಾಯ ವಿಜ್ಞಾನ ಪ್ರಯೋಗ ಶಾಲೆಯೂ ಇದೆ. ಈ ನಗರದಿಂದ ಈ ಜಿಲ್ಲೆಯ ವಿವಿಧ ತಾಲೂಕುಗಳಿಂದ ಹಾಗೂ ನೆರೆಯ ಜಿಲ್ಲೆಯ ಇತರೆ ಪ್ರದೇಶಗಳಿಂದ ಸಾಕಷ್ಟು ಸಂಖ್ಯೆಯ ಕೇಸುಗಳು ಬೆಂಗಳೂರಿನ ಹೈಕೋರ್ಟಿನಲ್ಲಿವೆ. ಕಕ್ಷಿದಾರರಿಗೆ ಮತ್ತು ಸಾರ್ವಜನಿಕರಿಗೆ ಮತ್ತೆ ಮತ್ತೆ ಬೆಂಗಳೂರಿಗೆ ಹೋಗಿ ಬರುವುದು ತ್ರಾಸದಾಯಕವೂ ಸಮಯ ಹಾಗೂ ಹಣದ ಪ್ರಶ್ನೆಯೂ ಉದ್ಭವಿಸುತ್ತದೆ. ಈ ಎಲ್ಲಾ ಕಾರಣಗಳಿಂದ ದಾವಣಗೆರೆ ನಗರದಲ್ಲಿ ರಾಜ್ಯ ಹೈಕೋರ್ಟಿನ ಸಂಚಾರಿ ಪೀಠವನ್ನು ಸ್ಥಾಪಿಸುವುದು ಅಗತ್ಯ ಮಾತ್ರವಲ್ಲದೇ ಅನಿವಾರ್ಯವೂ ಹೌದು ಎನ್ನಲೇ ಬೇಕಾಗಿದೆ ಎಂದಿದ್ದಾರೆ.
ನಮ್ಮ ನಗರಕ್ಕೆ ಸಂಚಾರಿ ಹೈಕೋರ್ಟ್ ಪೀಠದ ಬೇಡಿಕೆ ಅತ್ಯಂತ ನ್ಯಾಯೋಚಿತವಾಗಿದೆ. ಇದೊಂದು ಸಾರ್ವಜನಿಕ ಹಿತಾಸಕ್ತಿಯ ಸಂಗತಿ ಎಂದು ಎಲ್ಲರೂ ಮನಗಾಣಬೇಕಿದೆ. ವಾಣಿಜ್ಯ ವ್ಯಾಪಾರಿ ಸಂಘಗಳು, ಕೇಂದ್ರ, ರಾಜ್ಯ, ಬ್ಯಾಂಕಿಂಗ್ ಹಾಗೂ ಖಾಸಗಿ ನೌಕರರ ಸಂಘಟನೆಗಳು, ದಲಿತ, ರೈತ, ಕಾರ್ಮಿಕ ಸಂಘಟನೆಗಳಲ್ಲದೇ ಎಲ್ಲಾ ಪ್ರಗತಿ ಪರ ಮತ್ತು ಕನ್ನಡ ಪರ ಸಂಘಟನೆಗಳು ಈ ವಿಷಯದಲ್ಲಿ ಧ್ವನಿಗೂಡಿಸಬೇಕಾಗಿದೆ. ಒಂದು ರೀತಿಯಲ್ಲಿ ಹೇಳುವುದಾದರೆ, ಸಮಾನ ಮನಸ್ಕ ವೇದಿಕೆಯ ಮೂಲಕ ನಗರದಲ್ಲಿ ಸಂಚಾರಿ ಪೀಠ ಸ್ಥಾಪನೆಗೆ ಇದು ಸೂಕ್ತ ಸಮಯವಾಗಿದ್ದು, ಈಗ ದೊರಕಿರುವ ಅವಕಾಶದ ಲಾಭ ಪಡೆಯಬೇಕಾಗಿದೆ.
ಸಂಚಾರಿ ಪೀಠ ಸ್ಥಾಪನೆಯಿಂದ ಇಲ್ಲಿಯ ಪ್ರತಿಭಾವಂತ ಹಾಗೂ ಉದಯೋನ್ಮುಖ ವಕೀಲರುಗಳಿಗೆ ಮತ್ತು ಈ ಭಾಗದ ಕಾನೂನು ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ವಕೀಲರ ಅನುಭವಕ್ಕೆ ಹೊಸ ಆಯಾಮ ದೊರೆಯಲಿದೆ. ಸಂಚಾರಿ ಹೈಕೋರ್ಟ್ ಪೀಠದಲ್ಲಿ ಕಾರ್ಯನಿರ್ವಹಿಸಬಲ್ಲ ಹಿರಿಯ ಹಾಗೂ ಅನುಭವಿ ವಕೀಲರು ನಗರದಲ್ಲಿ ಮತ್ತು ಈ ಜಿಲ್ಲೆಯ ನ್ಯಾಯಾಲಯಗಳಲ್ಲಿ ಇದ್ದಾರೆ ಎಂಬುದು ಗಮನಾರ್ಹ.
ಈ ಸಂಚಾರಿ ಪೀಠದ ವ್ಯಾಪ್ತಿಗೆ ದಾವಣಗೆರೆ, ಚಿತ್ರದುರ್ಗ, ವಿಜಯನಗರ ಶಿವಮೊಗ್ಗ ಹಾಗೂ ಹಾವೇರಿ ಜಿಲ್ಲೆಗಳನ್ನು ತರಬಹುದಾಗಿದೆ. ಈ ಎಲ್ಲಾ ಜಿಲ್ಲೆಗಳ ವಕೀಲರ ಸಂಘಗಳು, ವಕೀಲ ಮಿತ್ರರು ಈ ಮನವಿ, ಪ್ರಸ್ತಾವನೆಗೆ ಸಕ್ರಿಯವಾಗಿ ಸ್ಪಂದಿಸಲಿದ್ದಾರೆ ಎನ್ನುವ ಗಾಢ ವಿಶ್ವಾಸವಿದೆ.
ಜಿಲ್ಲಾ ನ್ಯಾಯಾಲಯದಲ್ಲಿರುವ ನ್ಯಾಯಾಲಯಗಳು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಹೊಸ ಕಟ್ಟಡಕ್ಕೆ ಮುಂಬರುವ ದಿನಗಳಲ್ಲಿ ಸ್ಥಳಾಂತರವಾಗುವುದರಿಂದ ಹಾಲಿ ದೇವರಾಜ ಅರಸು ಬಡಾವಣೆಯಲ್ಲಿರುವ ಕಟ್ಟಡವನ್ನು ಸಂಚಾರಿ ಪೀಠಕ್ಕಾಗಿ ಬಳಸಿಕೊಳ್ಳಬಹುದಾಗಿದೆ.
ರಾಜ್ಯದಲ್ಲಿ ಇನ್ನೊಂದು ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸುವ ವಿಚಾರ ಸರ್ಕಾರದ ಮಟ್ಟದಲ್ಲಿ ಮುನ್ನಲೆಗೆ ಬಂದಿರುವುದರಿಂದ ಈಗ ನಗರದಲ್ಲಿ ಒಂದು ಸಂಘಟಿತ ಹಾಗೂ ವ್ಯವಸ್ಥಿತ ಹೋರಾಟದ ತುರ್ತು ಅಗತ್ಯವಿದೆ.
ಬನ್ನಿ, ನಾವು, ನೀವೆಲ್ಲರೂ ಈ ನ್ಯಾಯೋಚಿತ ಬೇಡಿಕೆಗೆ ಹಾಗೂ ಮನವಿಗೆ ಧ್ವನಿಯಾಗೋಣ, ಒಂದು ಸಮಾನ ಮನಸ್ಕ ವೇದಿಕೆಯನ್ನು ರಚಿಸಿಕೊಂಡು, ಸಲಹೆ, ಸೂಚನೆಗಳ ಬಗ್ಗೆ ವಿವರವಾಗಿ ಚರ್ಚಿಸಿ ಈ ನಿಟ್ಟಿನಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾಗೋಣ.
1993ರಲ್ಲಿ ಚಿರಂಜೀವಿ ಸಿಂಗ್ ಸಮಿತಿ ಕೂಡ ಹರಿಹರ- ದಾವಣಗೆರೆ ಜೋಡಿ ನಗರಗಳನ್ನು ರಾಜ್ಯದ ದ್ವಿತೀಯ ರಾಜಧಾನಿಯಾಗಿ ಅಭಿವೃದ್ಧಿಪಡಿಸು-ವಂತೆ ಶಿಫಾರಸು ಮಾಡಿತ್ತು. ಆಡಳಿತ ವಿಕೇಂದ್ರೀಕರಣ ಹಾಗೂ ಸಮತೋಲ-ನಾಭಿವೃದ್ಧಿಯ ಅಗತ್ಯವನ್ನು ಸಮಿತಿ ಒತ್ತಿ ಹೇಳಿತ್ತು’ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


