Connect with us

ದಿನದ ಸುದ್ದಿ

ದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ

Published

on

ಸುದ್ದಿದಿನಡೆಸ್ಕ್:ದಾವಣಗೆರೆಮಹಾನಗರದಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ ಮಾಡುವ ಮುನ್ನ ಪೂರ್ವಭಾವಿಯಾಗಿ ಒಂದಿಷ್ಟು ಮಾಹಿತಿಯ ಅಗತ್ಯವಿದೆ. ದಾವಣಗೆರೆ ಅತ್ಯಂತ ನಿಖರವಾಗಿ ಕರ್ನಾಟಕದ ಮಧ್ಯಭಾಗದಲ್ಲಿದೆ. ಅದ್ದರಿಂದ ಈ ನಗರವನ್ನೇ ಕರ್ನಾಟಕ ರಾಜಧಾನಿಯನ್ನಾಗಿ ಮಾಡಬೇಕೆಂಬ ಮಹಾದಾಸೆಯನ್ನು ಕರ್ನಾಟಕ ಏಕೀಕರಣಕ್ಕೂ ಮುಂಚೆಯೇ ಹೊಂದಲಾಗಿತ್ತು ಎಂದು ಜಿಲ್ಲಾ ವಕೀಲರ ಸಂಘ ನಿಕಟಪೂರ್ವ ಅಧ್ಯಕ್ಷರಾದ ಎಲ್.ಎಚ್.ಅರುಣಕುಮಾರ್ ಅವರು ಹೇಳಿದ್ದಾರೆ.

ರಾಷ್ಟ್ರನಾಯಕರಾದ ಎಸ್.ನಿಜಲಿಂಗಪ್ಪ, ಖ್ಯಾತ ಪತ್ರಕರ್ತ, ಲೇಖಕ, ಕನ್ನಡಾಭಿಮಾನಿ ಪಾಟೀಲ್ ಪುಟ್ಟಪ್ಪನವರೂ ಸೇರಿದಂತೆ ಅನೇಕ ಮಹನೀಯರು ದಾವಣಗೆರೆಯನ್ನು ರಾಜಧಾನಿಯಾಗಿ ಮಾಡಬೇಕೆಂಬ ಆಸೆಯನ್ನು ಹೊಂದಿದ್ದರು. ಆದರೆ, ಕಾರಣಾಂತರಗಳಿಂದ ದಾವಣಗೆರೆ ನಗರಕ್ಕೆ ರಾಜಧಾನಿಯಾಗುವ ಅವಕಾಶ ಲಭ್ಯವಾಗದೇ ಹೋದದ್ದು ದುರಾದೃಷ್ಠರಕ ಸಂಗತಿ ಎಂದೇ ಹೇಳಬಹುದು ಎಂದಿದ್ದಾರೆ.

ದಾವಣಗೆರೆ ನಗರ ಭೋಗೋಳಿಕವಾಗಿ ತುಂಬ ಆಯಕಟ್ಟಿನ ಸ್ಥಳದಲ್ಲಿದ್ದು, ಬೆಂಗಳೂರು, ಮುಂಬಯಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಹಗಲು ರಾತ್ರಿ ವಿವಿಧ ಬಗೆಯ ರೈಲುಗಳ ಸೌಲಭ್ಯವಿದೆ. ವಿಫುಲ ಸಂಖ್ಯೆಯ ವಿವಿಧ ಭಾಗಗಳನ್ನು ತ್ವರಿತವಾಗಿ ಸಂಪರ್ಕಿಸುವ ಅತ್ಯುತ್ತಮ ಸರ್ಕಾರಿ ಹಾಗೂ ಖಾಸಗಿ ಬಸ್ಸುಗಳ ಸಂಚಾರ ವ್ಯವಸ್ಥೆ ಇದೆ. ಇದಲ್ಲದೇ ಮಾದರಿ ಎನಿಸುವ ಹೈಟೆಕ್ ಬಸ್ ನಿಲ್ದಾಣವಿದೆ.

ಇದಲ್ಲದೇ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಸಿಮೆಂಟ್ ರಸ್ತೆಗಳು ಸೇರಿದಂತೆ ಅಧುನಿಕ ನಾಗರೀಕ ಸೌಲಭ್ಯಗಳು ನಗರಕ್ಕೆ ದೊರಕಿವೆ. ಹಚ್ಚ ಹಸಿರಿನ ವಾತಾವರಣ, ನಿರಂತರ ನೀರು ಪೂರೈಕೆಯ ಜಲಸಿರಿ ಯೋಜನೆ, ಅಧಿಕ ಸಂಖ್ಯೆಯ ಉದ್ಯಾನವನಗಳು ನಗರದ ಶೋಭೆಯನ್ನು ಹೆಚ್ಚಿಸಿವೆ. ಬಗೆಬಗೆಯ ಊಟ ಉಪಹಾರ ಮಂದಿರಗಳು, ಸುಸಜ್ಜಿತ ವಸತಿ ಗೃಹಗಳು ಎಲ್ಲೆಡೆ ಇವೆ.

ಶೈಕ್ಷಣಿಕೆ ರಂಗದಲ್ಲಿ ದಾವಣಗೆರೆ ನಗರ ಅಪಾರ ಪ್ರಗತಿ ಸಾಧಿಸಿದ್ದು, ಅಕ್ಸ್‌ಫರ್ಡ್ ಎನ್ನುವ ಖ್ಯಾತಿಯೂ ನಗರಕ್ಕುಂಟು. ಇಲ್ಲಿ ಎರಡು ವಿಶ್ವವಿದ್ಯಾನಿಲಯಗಳು, ಮುಖ್ಯವಾಗಿ ಎರಡು ಕಾನೂನು ಕಾಲೇಜುಗಳು ಸೇರಿದಂತೆ ಎಲ್ಲಾ ಬಗೆಯ ಶಿಕ್ಷಣ ನೀಡುವ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಿವೆ.

ಇನ್ನು ಬಹುಮುಖ್ಯವಾಗಿ, ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿ ಅಂದು ದಾವಣಗೆರೆ ಕಂದಾಯ ಉಪ ವಿಭಾಗವಾಗಿದ್ದ ದಿನಗಳಲ್ಲಿ, ಈ ನಗರದಿಂದ ವಕೀಲರಾದ ಹೆಚ್.ಸಿದ್ದವೀರಪ್ಪನವರು ಹಾಗೂ ಚಿತ್ರದುರ್ಗದಲ್ಲಿ ಅಂದು ವಕೀಲರಾಗಿದ್ದ ಎಸ್.ನಿಜಲಿಂಗಪ್ಪನವರು, ಭಾರತದ ಸಂವಿಧಾನ ರಚನಾ ಸಭೆಯಲ್ಲಿ ಸದಸ್ಯರಾಗಿ, ದೇಶದ ಸಂವಿಧಾನ ರಚನೆಯಲ್ಲ ಮಹತ್ವದ ಕೊಡುಗೆ ನೀಡಿದ್ದಾರೆ.

ದಾವಣಗೆರೆ ನಗರದಲ್ಲಿ ಪೊಲೀಸ್ ಮಹಾ ನಿರೀಕ್ಷಕರ (ಐಜಿಪಿ) ಕಚೇರಿ, ಅಭಿಯೋಜನಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ಇರುವುದಲ್ಲದೇ, ನಗರಕ್ಕೆ ಲಗತ್ತಾಗಿ ಪ್ರಾದೇಶಿ ನ್ಯಾಯ ವಿಜ್ಞಾನ ಪ್ರಯೋಗ ಶಾಲೆಯೂ ಇದೆ. ಈ ನಗರದಿಂದ ಈ ಜಿಲ್ಲೆಯ ವಿವಿಧ ತಾಲೂಕುಗಳಿಂದ ಹಾಗೂ ನೆರೆಯ ಜಿಲ್ಲೆಯ ಇತರೆ ಪ್ರದೇಶಗಳಿಂದ ಸಾಕಷ್ಟು ಸಂಖ್ಯೆಯ ಕೇಸುಗಳು ಬೆಂಗಳೂರಿನ ಹೈಕೋರ್ಟಿನಲ್ಲಿವೆ. ಕಕ್ಷಿದಾರರಿಗೆ ಮತ್ತು ಸಾರ್ವಜನಿಕರಿಗೆ ಮತ್ತೆ ಮತ್ತೆ ಬೆಂಗಳೂರಿಗೆ ಹೋಗಿ ಬರುವುದು ತ್ರಾಸದಾಯಕವೂ ಸಮಯ ಹಾಗೂ ಹಣದ ಪ್ರಶ್ನೆಯೂ ಉದ್ಭವಿಸುತ್ತದೆ. ಈ ಎಲ್ಲಾ ಕಾರಣಗಳಿಂದ ದಾವಣಗೆರೆ ನಗರದಲ್ಲಿ ರಾಜ್ಯ ಹೈಕೋರ್ಟಿನ ಸಂಚಾರಿ ಪೀಠವನ್ನು ಸ್ಥಾಪಿಸುವುದು ಅಗತ್ಯ ಮಾತ್ರವಲ್ಲದೇ ಅನಿವಾರ್ಯವೂ ಹೌದು ಎನ್ನಲೇ ಬೇಕಾಗಿದೆ ಎಂದಿದ್ದಾರೆ.

ನಮ್ಮ ನಗರಕ್ಕೆ ಸಂಚಾರಿ ಹೈಕೋರ್ಟ್ ಪೀಠದ ಬೇಡಿಕೆ ಅತ್ಯಂತ ನ್ಯಾಯೋಚಿತವಾಗಿದೆ. ಇದೊಂದು ಸಾರ್ವಜನಿಕ ಹಿತಾಸಕ್ತಿಯ ಸಂಗತಿ ಎಂದು ಎಲ್ಲರೂ ಮನಗಾಣಬೇಕಿದೆ. ವಾಣಿಜ್ಯ ವ್ಯಾಪಾರಿ ಸಂಘಗಳು, ಕೇಂದ್ರ, ರಾಜ್ಯ, ಬ್ಯಾಂಕಿಂಗ್ ಹಾಗೂ ಖಾಸಗಿ ನೌಕರರ ಸಂಘಟನೆಗಳು, ದಲಿತ, ರೈತ, ಕಾರ್ಮಿಕ ಸಂಘಟನೆಗಳಲ್ಲದೇ ಎಲ್ಲಾ ಪ್ರಗತಿ ಪರ ಮತ್ತು ಕನ್ನಡ ಪರ ಸಂಘಟನೆಗಳು ಈ ವಿಷಯದಲ್ಲಿ ಧ್ವನಿಗೂಡಿಸಬೇಕಾಗಿದೆ. ಒಂದು ರೀತಿಯಲ್ಲಿ ಹೇಳುವುದಾದರೆ, ಸಮಾನ ಮನಸ್ಕ ವೇದಿಕೆಯ ಮೂಲಕ ನಗರದಲ್ಲಿ ಸಂಚಾರಿ ಪೀಠ ಸ್ಥಾಪನೆಗೆ ಇದು ಸೂಕ್ತ ಸಮಯವಾಗಿದ್ದು, ಈಗ ದೊರಕಿರುವ ಅವಕಾಶದ ಲಾಭ ಪಡೆಯಬೇಕಾಗಿದೆ.

ಸಂಚಾರಿ ಪೀಠ ಸ್ಥಾಪನೆಯಿಂದ ಇಲ್ಲಿಯ ಪ್ರತಿಭಾವಂತ ಹಾಗೂ ಉದಯೋನ್ಮುಖ ವಕೀಲರುಗಳಿಗೆ ಮತ್ತು ಈ ಭಾಗದ ಕಾನೂನು ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ವಕೀಲರ ಅನುಭವಕ್ಕೆ ಹೊಸ ಆಯಾಮ ದೊರೆಯಲಿದೆ. ಸಂಚಾರಿ ಹೈಕೋರ್ಟ್ ಪೀಠದಲ್ಲಿ ಕಾರ್ಯನಿರ್ವಹಿಸಬಲ್ಲ ಹಿರಿಯ ಹಾಗೂ ಅನುಭವಿ ವಕೀಲರು ನಗರದಲ್ಲಿ ಮತ್ತು ಈ ಜಿಲ್ಲೆಯ ನ್ಯಾಯಾಲಯಗಳಲ್ಲಿ ಇದ್ದಾರೆ ಎಂಬುದು ಗಮನಾರ್ಹ.

ಈ ಸಂಚಾರಿ ಪೀಠದ ವ್ಯಾಪ್ತಿಗೆ ದಾವಣಗೆರೆ, ಚಿತ್ರದುರ್ಗ, ವಿಜಯನಗರ ಶಿವಮೊಗ್ಗ ಹಾಗೂ ಹಾವೇರಿ ಜಿಲ್ಲೆಗಳನ್ನು ತರಬಹುದಾಗಿದೆ. ಈ ಎಲ್ಲಾ ಜಿಲ್ಲೆಗಳ ವಕೀಲರ ಸಂಘಗಳು, ವಕೀಲ ಮಿತ್ರರು ಈ ಮನವಿ, ಪ್ರಸ್ತಾವನೆಗೆ ಸಕ್ರಿಯವಾಗಿ ಸ್ಪಂದಿಸಲಿದ್ದಾರೆ ಎನ್ನುವ ಗಾಢ ವಿಶ್ವಾಸವಿದೆ.
ಜಿಲ್ಲಾ ನ್ಯಾಯಾಲಯದಲ್ಲಿರುವ ನ್ಯಾಯಾಲಯಗಳು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಹೊಸ ಕಟ್ಟಡಕ್ಕೆ ಮುಂಬರುವ ದಿನಗಳಲ್ಲಿ ಸ್ಥಳಾಂತರವಾಗುವುದರಿಂದ ಹಾಲಿ ದೇವರಾಜ ಅರಸು ಬಡಾವಣೆಯಲ್ಲಿರುವ ಕಟ್ಟಡವನ್ನು ಸಂಚಾರಿ ಪೀಠಕ್ಕಾಗಿ ಬಳಸಿಕೊಳ್ಳಬಹುದಾಗಿದೆ.

ರಾಜ್ಯದಲ್ಲಿ ಇನ್ನೊಂದು ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸುವ ವಿಚಾರ ಸರ್ಕಾರದ ಮಟ್ಟದಲ್ಲಿ ಮುನ್ನಲೆಗೆ ಬಂದಿರುವುದರಿಂದ ಈಗ ನಗರದಲ್ಲಿ ಒಂದು ಸಂಘಟಿತ ಹಾಗೂ ವ್ಯವಸ್ಥಿತ ಹೋರಾಟದ ತುರ್ತು ಅಗತ್ಯವಿದೆ.
ಬನ್ನಿ, ನಾವು, ನೀವೆಲ್ಲರೂ ಈ ನ್ಯಾಯೋಚಿತ ಬೇಡಿಕೆಗೆ ಹಾಗೂ ಮನವಿಗೆ ಧ್ವನಿಯಾಗೋಣ, ಒಂದು ಸಮಾನ ಮನಸ್ಕ ವೇದಿಕೆಯನ್ನು ರಚಿಸಿಕೊಂಡು, ಸಲಹೆ, ಸೂಚನೆಗಳ ಬಗ್ಗೆ ವಿವರವಾಗಿ ಚರ್ಚಿಸಿ ಈ ನಿಟ್ಟಿನಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾಗೋಣ.

1993ರಲ್ಲಿ ಚಿರಂಜೀವಿ ಸಿಂಗ್ ಸಮಿತಿ ಕೂಡ ಹರಿಹರ- ದಾವಣಗೆರೆ ಜೋಡಿ ನಗರಗಳನ್ನು ರಾಜ್ಯದ ದ್ವಿತೀಯ ರಾಜಧಾನಿಯಾಗಿ ಅಭಿವೃದ್ಧಿಪಡಿಸು-ವಂತೆ ಶಿಫಾರಸು ಮಾಡಿತ್ತು. ಆಡಳಿತ ವಿಕೇಂದ್ರೀಕರಣ ಹಾಗೂ ಸಮತೋಲ-ನಾಭಿವೃದ್ಧಿಯ ಅಗತ್ಯವನ್ನು ಸಮಿತಿ ಒತ್ತಿ ಹೇಳಿತ್ತು’ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

Published

on

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.

ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.

ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್‍ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.

ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್‍ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending