Connect with us

ದಿನದ ಸುದ್ದಿ

ಕೋವಿಡ್ ನಂತರದ ಭಾರತ

Published

on

  • ಕೇಸರಿ ಹರವೂ

‘ಕೋರೋನಾದೊಂದಿಗೆ ಬದುಕುವುದನ್ನು ಕಲಿಯಿರಿ’ ಎನ್ನುವ ಸಂದೇಶ ನಮ್ಮ ಪ್ರಭುತ್ವದಿಂದ ರವಾನೆಯಾಗಿದೆ. ಇದರರ್ಥ ಕೋರೋನಾ ನಮ್ಮಲ್ಲಿ ಇನ್ನೂ ಒಂದಷ್ಟು ಕಾಲ ಕಾಡುತ್ತಲೇ ಇರುತ್ತದೆ ಎಂದು. ಇದು ಜಾಗತಿಕವಾಗಿಯೂ ನಿಜ. ಹಾಗಾಗಿ ನಮ್ಮಲ್ಲೂ ನಿಜ. ಆದರೆ ಅನೇಕ ರಾಷ್ಟ್ರಗಳು, ವಿಜ್ಞಾನಿಗಳು ಇದನ್ನು ಹೇಳಿ ಹಲವು ವಾರಗಳೇ ಆದವು. ನಮ್ಮ ದೇಶ ಈಗ ಹೇಳುವುದಕ್ಕೆ ಕೆಲವು ಕಾರಣಗಳಿವೆ.

ಈ ಸಂದೇಶ ನಾವು ಕೋರೋನಾವನ್ನು ಪೂರ್ತಿಯಾಗಿ ಹಿಮ್ಮೆಟ್ಟಿಸುವಲ್ಲಿ, ಸೋಂಕು ತಡೆಯುವಲ್ಲಿ ವಿಫಲರಾಗಿದ್ದೇವೆ ಎಂದೂ ಹೇಳುತ್ತದೆ. ನಮ್ಮಲ್ಲಿ ಸೋಂಕು ತೀರಾ ಕಡಿಮೆ ಪ್ರಮಾಣದಲ್ಲಿ ಇದ್ದಾಗಲೇ ಎಂಟು ವಾರಗಳ ಕಾಲ ಲಾಕ್ಡೌನ್ ಹೇರಿ ಕಾಲಹರಣ ಮಾಡಲಾಯಿತು. ಈಗ ಸೋಂಕು exponential ಆಗಿ ಹರಡುವುದಕ್ಕೆ ಆರಂಭವಾಗಿದೆ.

ನಿಜಕ್ಕೂ ಲಾಕ್ಡೌನ್ ಅವಶ್ಯ ಎಂದು ವೈಜ್ಞಾನಿಕವಾಗಿ ಎನಿಸಿದ್ದರೆ ಅದನ್ನು ಈಗ ಜಾರಿಗೊಳಿಸಬೇಕಿತ್ತು. ಈಗಲೂ ಅದು ದೇಶದಾದ್ಯಂತ ಬೇಕಿಲ್ಲ ಎಂದೇ ಹಲವು ತಜ್ಞರು ಹೇಳುತ್ತಾರೆ. ಆದರೆ ನಾವು ಇನ್ನಷ್ಟು ದಿನ ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸುವುದು ಸಾಧ್ಯವೇ ಇಲ್ಲದಂತಾ ಪರಿಸ್ಥಿತಿಯಲ್ಲಿ ಸಮುದಾಯ ಹರಡುವಿಕೆಗೆ ತಯಾರಾಗಿ ಲಾಕ್ಡೌನ್ ಅನ್ನು ಕ್ರಮೇಣ ಸಡಿಲಿಸಲು ಆರಂಭಿಸಿದ್ದೇವೆ.

ಪ್ರಭುತ್ವ ಈಗ ಹೇಳಿರುವ ಈ ಹೇಳಿಕೆ ನಮ್ಮನ್ನು ಈ ಎಂಟು ವಾರಗಳ ಲಾಕ್ಡೌನಿನಲ್ಲಿ ದೇಶದಲ್ಲಿ ನಡೆದ ವಿದ್ಯಮಾನಗಳನ್ನು ಮತ್ತೊಮ್ಮೆ ನೋಡಲು ತೊಡಗಿಸುತ್ತದೆ. ಈ ನೋಟ ನಮ್ಮ ದೇಶ ಇನ್ನುಮುಂದೆ ಹೇಗೆ ಸಾಗುತ್ತದೆ ಎನ್ನುವುದಕ್ಕೆ ಕೆಲವು ಸುಳಿವುಗಳನ್ನೂ ಕೊಡುತ್ತದೆ.

ಲಾಕ್ಡೌನಿನ ಮೂಲ ಉದ್ದೇಶವನ್ನು ಸಾಕಷ್ಟು ವಿಫಲಗೊಳಿಸಿದ್ದರೂ, ಪ್ರಭುತ್ವ ತನ್ನ ಕೆಲವು ಉದ್ದೇಶಗಳನ್ನು ಈಡೇರಿಸಿಕೊಂಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧೀ ಹೋರಾಟದ ಕಾವನ್ನು ಬಹುತೇಕ ತಣ್ಣಗಾಗಿಸುವಲ್ಲಿ ಅದು ಸಫಲವಾಗಿದೆ. ಹೋರಾಟ ತನ್ನ ಉಚ್ಛ್ರಾಯ ಸ್ಥಿತಿಯಲ್ಲಿದ್ದು, ಜಗತ್ತಿನಾದ್ಯಂತ ಪೌರತ್ವ ತಿದ್ದುಪಡಿಯ ವಿರುದ್ಧ ದನಿಯೆದ್ದಿದ್ದಾಗ, ಆ ಮುಜುಗರದಿಂದ ತಪ್ಪಿಸಿಕೊಳ್ಳಲು ಹೆಣಗುತ್ತಿದ್ದ ಪ್ರಭುತ್ವ ಪ್ರತಿಯೊಬ್ಬರಲ್ಲೂ ಮಹಾಮಾರಿಯ ಸಾಂಕ್ರಾಮಿಕದ ಆತಂಕದ ವಾತಾವರಣವನ್ನು ಹುಟ್ಟಿಹಾಕಿತು. ಲಾಕ್ಡೌನ್ ಒಂದೇ ಪರಿಹಾರ ಎಂದು ಅದನ್ನು ಹೇರಿ, ಪರ ಮತ್ತು ವಿರೋಧಿಗಳೆಲ್ಲರೂ ಸಹಕರಿಸುವಂತೆ ಮಾಡುವಲ್ಲಿ ಅದು ಯಶಸ್ವಿಯಾಯಿತು. ಮತ್ತೊಮ್ಮೆ ದೇಶದಲ್ಲಿ ಆ ಮಟ್ಟಕ್ಕೆ ಕಾವು ಏರಲು ದೊಡ್ಡ ಸಂಕಲ್ಪ ಮತ್ತು ಸಮಯ ಎರಡೂ ಬೇಕು.

ಸೋಂಕು ಹರಡುವಿಕೆಗೆ ಮುಸ್ಲಿಮರೇ ಮುಖ್ಯ ಕಾರಣ ಎಂದು ಜನರ ಮನಸ್ಸಿನಲ್ಲಿ ಯಶಸ್ವಿಯಾಗಿ ಬಿತ್ತಿ ತನ್ನ ಮುಸ್ಲಿಂ ವಿರೋಧೀ ನೀತಿಯನ್ನು ಅದು ಸಮರ್ಥಿಸಿಕೊಂಡಿದೆ. ಇದು ತನ್ನ ದೀರ್ಘಕಾಲದ ನೀತಿಗಳಲ್ಲಿ ಒಂದು. ಕೊರೋನಾ ಇದನ್ನು ಸುಲಭದಲ್ಲಿ ಸಾಧ್ಯವಾಗಿಸಿದ್ದು ಆ ನೀತಿಗೆ ಒದಗಿಬಂದ ದೊಡ್ಡ ಲಾಭ. ಇಂದು ಮಾವಿನ ಫಸಲು ಕೊಳ್ಳುವ ವರ್ತಕರಿಂದ ಹಿಡಿದು, ಬೇರೆಬೇರೇ ಕಸುಬುಗಳಿಗೆ ಹಳ್ಳಿಗಳಿಗೆ ಬರುತ್ತಿದ್ದ ಮುಸ್ಲಿಮರನ್ನು ಜನ ಕಾಣುತ್ತಿರುವ ರೀತಿಯೇ ಬೇರೆಯಾಗಿದೆ. ಸಾಮಾಜಿಕ ಅಂತರದ ಪರಾಕಾಷ್ಟೆ ಇದು.

ಪರಿಷ್ಕೃತ ಕರಡು ಕಾರ್ಮಿಕ ನೀತಿ ಲೋಕಸಭೆಯಲ್ಲಿ ಮಂಡನೆಯಾಗಿತ್ತು. ಬಲಪಂಥೀಯ ಬಿಎಮ್ಮೆಸ್’ನಿಂದ ಹಿಡಿದು ಎಲ್ಲ ಕಾರ್ಮಿಕ ಸಂಘಟನೆಗಳಿಂದ ಈ ನೀತಿಗೆ ದೊಡ್ಡ ವಿರೋಧವಿದ್ದು, ಅದು ಪಾಸ್ ಆಗುವುದು ಅತ್ಯಂತ ಕಠಿಣವಾಗಿತ್ತು. ಲಾಕ್ಡನ್ ಸಡಿಲಗೊಳಿಸುತ್ತಿರುವ ಈ ಸಂದರ್ಭದಲ್ಲಿ ಕಾರ್ಮಿಕರನ್ನು ಹೇಗೆ ನಡೆಸಿಕೊಳ್ಳುತ್ತಿವೆ ದೇಶದ ಮತ್ತು ರಾಜ್ಯಗಳ ಪ್ರಭುತ್ವಗಳು ಎನ್ನುವುದು ನಮ್ಮ ಕಣ್ಣಮುಂದೆಯೇ ಇದೆ.

ಇನ್ನೂ ಮೇಲಾಗಿ, ಆರು ರಾಜ್ಯಗಳು ಕಾರ್ಮಿಕ ಹಕ್ಕುಗಳನ್ನು ಮೂರು ವರ್ಷಗಳ ಕಾಲ ಅಮಾನತಿನಲ್ಲಿಟ್ಟಿವೆ. ಕಾರ್ಮಿಕರ ಎಲ್ಲ ಹಕ್ಕುಗಳನ್ನೂ, ಇದ್ದ ಅಲ್ಪ ಭದ್ರತೆಯನ್ನೂ ಒಂದೇ ಏಟಲ್ಲಿ ತೊಡೆದುಹಾಕುವಂತೆ ಮಾಡಿತು ಈ ಕೊರೋನಾ. ಆರ್ಥಿಕತೆಯ ಚೇತರಿಕೆಗಾಗಿ ಈ ಕ್ರಮ ಅತ್ಯಗತ್ಯ ಎಂದು ಬಿಂಬಿಸುವ ಪ್ರಯತ್ನ ನೇರವಾಗಿ ಕಾಣುತ್ತದೆ.

ಇದು ನಮ್ಮ ಕಾರ್ಪೊರೇಟ್ ಧಣಿಗಳಿಗೆ ಬಹುದೊಡ್ಡ ಕೊಡುಗೆಯಾಗಿ ಬರಲಿದೆ. ಬಹಳ ಹಿಂದಿನಿಂದಲೇ ಕೆಲವು ಅನುಕೂಲಕರ ವಾತಾರಣಗಳನ್ನು ಬಯಸಿದ್ದ ಕಾರ್ಪೋರೇಟುಗಳಿಗೆ ಈಗ ಲೀಲಾಜಾಲವಾಗಿ ತಮ್ಮ ಕಾರ್ಮಿಕ ನೀತಿಗಳನ್ನು ಬದಲಿಸಿಕೊಂಡು ಲಾಭ ಬಡಿಯುವ ಅವಕಾಶ ಒದಗಿ ಬಂದಿದೆ. ಈ ಲಾಭ ನಮ್ಮ ಪರಿಸರ, ಭೂಬಳಕೆ, ಕಾರ್ಮಿಕ ನೀತಿ, ಮಾನವ ಸಂಬಂಧಗಳ ಮೇಲೆ ದೊಡ್ಡ ವ್ಯತಿರಿಕ್ತ ಪರಿಣಾಮ ಬೀರಲಿದೆ. ಜನರ ಅನುಭವದಲ್ಲಿದ್ದ ಅಲ್ಪಸ್ವಲ್ಪ ಸಂಪನ್ಮೂಲಗಳೂ ಕಾರ್ಪೊರೇಟ್ಗಳ ಪಾಲಾಗಲಿದ್ದು, ನಾವು ಕಾರ್ಪೊರೇಟ್ಗಳ ಮುಂದೆ ಇನ್ನಷ್ಟು ಕೈಚಾಚಿ ಬದುಕುವ ಅನಿವಾರ್ಯತೆಯನ್ನು ಸೃಷ್ಟಿಸುತ್ತದೆ.

‘ಕೋರೋನಾ ನಮಗೆ ಪಾಠ ಕಲಿಸಿದೆ. ಜಾಗತೀಕರಣ, ಬಂಡವಾಳಶಾಹೀ ಅರ್ಥವ್ಯವಸ್ಥೆ ಎಲ್ಲಕ್ಕೂ ಉತ್ತರವಲ್ಲ ಎನ್ನುವುದನ್ನು ಜಗತ್ತು ಕಲಿತಿದೆ. ನಮ್ಮ ಜಗತ್ತು ಸಮಾಜಸ್ನೇಹಿಯಾಗಿ, ಪರಿಸರ ಸ್ನೇಹಿಯಾಗಿ ಬದಲಾಗಲಿದೆ’ ಎನ್ನುವ ಆಶಾವಾದ ಕೆಲವರದು. ಆದರೆ, ಕಾರ್ಮಿಕರ ಹಕ್ಕುಗಳನ್ನು ಅಮಾನತಿನಲ್ಲಿಟ್ಟಿರುವ ಕ್ರಮವೊಂದೇ ಸಾಕು ಕೋವಿಡ್ ನಂತರದ ಆರ್ಥಿಕತೆ ಅದಕ್ಕೆ ತದ್ವಿರುದ್ಧವಾಗಿ ತಯಾರಾಗುವುದಕ್ಕೆ. ಕೊರೋನಾದಂಥಾ ಸಾಂಕ್ರಾಮಿಕವನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರಗಳಿಗೆ ಶಕ್ತಿ ಸಾಲುವುದಿಲ್ಲ, ಖಾಸಗೀ ವ್ಯವಸ್ಥೆಯೂ ದೊಡ್ಡದಾಗಿ ಸಜ್ಜುಗೊಳ್ಳಬೇಕು ಎನ್ನುವ ಹೊಸ ವಾದ ಹುಟ್ಟಲಿದೆ.

ಆ ವಾದವನ್ನು ನಮ್ಮ ಪ್ರಭುತ್ವಗಳೂ ಒಪ್ಪಿಕೊಳ್ಳುತ್ತವೆ. ಅದೇ ಕಾರಣಕ್ಕಾಗಿ ಅಲ್ಲದಿದ್ದರೂ ತಮ್ಮ ಅನುಕೂಲಕ್ಕಾಗಿ ಶಕ್ತಿಕೇಂದ್ರಗಳು ಒಪ್ಪುತ್ತವೆ. ಅಲ್ಲಿಂದ ಮುಂದೆ ಖಾಸಗೀ ಶಿಕ್ಷಣ, ಆರೋಗ್ಯ ಸೇವೆ, ಸಂಪರ್ಕ, ಸಾಗಣೆ, ಆಹಾರ ಸರಬರಾಜು ಎಲ್ಲ ಕ್ಷೇತ್ರಗಳಿಗೂ ಇದು ವಿಸ್ತರಿಸುತ್ತದೆ. ಇವೆಲ್ಲವೂ ಇನ್ನಷ್ಟು ವಿಸ್ತರಣೆಯಾಗಲಿವೆ ಮತ್ತು ದುಬಾರಿಯಾಗಲಿವೆ. ಸಾವಿರ ಕಿಮೀ ಗಟ್ಟಲೆ ನಡೆಯುವವರು, ರೈಲಿನ ಕೆಳಗೆ ಸಾಯುವ ಗುಂಪುಗಳು ಸಾಮಾನ್ಯವಾಗಲಿವೆ.

ಇವೆಲ್ಲವನ್ನೂ ಪ್ರಭುತ್ವ ಜನತೆಗೆ ಒಪ್ಪಿಸಿ ಮುನ್ನಡೆಯುತ್ತಿರಬೇಕಾಗುತ್ತದೆ. ಹಾಗಾದರೆ ಏನು ಮಾಡಬೇಕು? ಸರ್ಜಿಕಲ್ ಸ್ಟ್ರೈಕ್, ಪುಲ್ವಾಮಾ, ಮುಂತಾದವು ಈಗ ಸಾಲುವುದಿಲ್ಲ. ದೇಶದ ಗಡಿಗಳನ್ನು ರಕ್ಷಿಸುವ ಜೊತೆಗೆ ಕಳಕೊಂಡ ಆಕ್ರಮಿತ ಪ್ರದೇಶಗಳನ್ನು ಮತ್ತೆ ವಶಮಾಡಿಕೊಳ್ಳಬೇಕು. ದೇಶಭಕ್ತರು ಯಾರೂ ಇದನ್ನು ಬೇಡ ಎನ್ನಲಾರರು. ಬದಲಿಗೆ ಒಕ್ಕೊರಳಿನಿಂದ ಜೈ ಎಂದೇ ಅಂದಾರು.

ಈಗಾಗಲೇ ಗೂಗಲ್ ತನ್ನ ಮ್ಯಾಪಿನಲ್ಲಿ LOC ಅಳಿಸಿಹಾಕಿದೆ. ಅದರ ಹಿಂದಿನ ಒತ್ತಡ ಏನಿರಬಹುದು ಲೆಕ್ಕ ಹಾಕಿ. ಭಾರತೀಯರಾದ ನಮಗೆ ಇದು ಅತ್ಯಂತ ಸ್ವಾಗತಾರ್ಹ ವಿಚಾರ. ನಮ್ಮ ಹವಾಮಾನ ಇಲಾಖೆ POKಯ ಪೂರ್ಣ ಹವಾಮಾನ ವರದಿಯನ್ನು ಕೊಡಲು ಶುರು ಮಾಡಿದೆ. ಯುದ್ಧ ಸಾಮಗ್ರಿಗಳ ಹೊಸ ಒಪ್ಪಂದಗಳು ನಮ್ಮಲ್ಲಿ ಆಗ್ತಿವೆ. ಯುದ್ಧೋನ್ಮಾದವನ್ನು ಉಣಬಡಿಸಲು ಪ್ರಯತ್ನ ನಡೆಯುತ್ತಿದೆಯೇ? ಅಥವಾ ಯುದ್ಧಕ್ಕೇ ತಯಾರಿ ನಡೆಯುತ್ತಿದೆಯೇ? ಯೋಚಿಸಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending