ದಿನದ ಸುದ್ದಿ
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ | ಕವಿಯ ಮೇಲೆ ದಾಖಲಿಸಿರುವ ಪ್ರಕರಣವನ್ನು ವಾಪಾಸು ಪಡೆಯಬೇಕು : ಸಿದ್ದರಾಮಯ್ಯ
ಸುದ್ದಿದಿನ,ಕಲಬುರಗಿ : ಕಳೆದ ಮೂರು ದಿನದಲ್ಲಿ ನಾಲ್ಕೈದು ಲಕ್ಷ ಮಂದಿ ಕನ್ನಡಿಗರು ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದು ಕನ್ನಡಿಗನಾದ ನನಗೆ ಅತ್ಯಂತ ಸಂತಸದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಕಲಬುರಗಿಯಲ್ಲಿ ಶುಕ್ರವಾರ ನಡೆದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಮ್ಮ ನಾಡಿಗೆ ಯಾವುದೇ ರಾಜ್ಯದಿಂದ ಬರಲಿ, ಯಾವುದೇ ದೇಶದಿಂದ ಬರಲಿ ಮೊದಲು ಅವರು ಇಲ್ಲಿನ ನಾಡು ನುಡಿಯನ್ನು ಗೌರವಿಸಬೇಕು. ಆಗ ಮಾತ್ರ ಅವರನ್ನು ನಮ್ಮವರಂತೆ ಕಾಣಲು ಸಾಧ್ಯ. ಕನ್ನಡಿಗರಾದ ನಾವು ಎಂದಿಗೂ ನಮ್ಮತನವನ್ನು ಮರೆಯದೆ, ಕನ್ನಡ ವಾತಾವರಣವನ್ನು ಸೃಷ್ಟಿಸಿದರೆ ಹೊರಗಿನಿಂದ ಬಂದವರು ಕೂಡ ಇಲ್ಲಿನ ಭಾಷೆಯನ್ನು ಕಲಿಯುತ್ತಾರೆ ಎಂದು ಹೇಳಿದರು.
ಕನ್ನಡ ಕಾವಲು ಸಮಿತಿಯ ಮೊಟ್ಟಮೊದಲ ಅಧ್ಯಕ್ಷನಾಗಿ ವರ್ಷಗಳ ಕಾಲ ನಾಡು ನುಡಿಯ ಸೇವೆ ಮಾಡಿದ್ದೆ. ರಾಜ್ಯಾದ್ಯಂತ ಸಂಚರಿಸಿ ಕನ್ನಡದ ಬೆಳವಣಿಗೆಗಾಗಿ ಸಾಕಷ್ಟು ಶ್ರಮಿಸಿದ್ದೆ. ನಾಡು ನುಡಿಯ ಸೇವೆ ಮಾಡುವುದು ಎಂದರೆ ಹೆತ್ತ ತಾಯಿಯ ಸೇವೆ ಮಾಡಿದಂತೆ ಎಂಬ ನಂಬಿಕೆ ನನ್ನದು.
ಈ ಕಾರಣಕ್ಕಾಗಿಯೇ ಅಂದಿನ ದಿನಗಳು ನೆನಪಾದಾಗೆಲ್ಲ ಹೆಮ್ಮೆ ಎನಿಸುತ್ತದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಕನ್ನಡ ಬಿಟ್ಟು ಬೇರೆ ಯಾವುದೇ ಭಾಷೆಯಲ್ಲಿ ಪತ್ರ ಅಥವಾ ಟಿಪ್ಪಣಿಗಳನ್ನು ತಂದರೂ ಅದಕ್ಕೆ ನಾನು ಸಹಿ ಮಾಡುತ್ತಿರಲಿಲ್ಲ. ನೀವು ಯಾವ ರಾಜ್ಯದಿಂದ ಬಂದಿದ್ದೀರ ನನಗದು ಮುಖ್ಯವಲ್ಲ, ನೀವೀಗ ಕರ್ನಾಟಕದಲ್ಲಿದ್ದೀರ, ನೀವು ನಮ್ಮಂತೆ ಕನ್ನಡಿಗರು, ಕನ್ನಡ ಕಲಿಯಿರಿ ಎಂದು ಅಧಿಕಾರಿಗಳನ್ನು ವಾಪಾಸು ಕಳಿಸುತ್ತಿದ್ದೆ ಎಂದು ನುಡಿದರು.
ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಾಗಬೇಕು. ಈ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಭಾಷೆಯ ವಿಚಾರದಲ್ಲಿ ಉದಾರತೆ ಸಲ್ಲದು. ಭಾಷೆಯ ವಿಚಾರದಲ್ಲಿ ತೋರುವ ಉದಾರತೆಯಿಂದ ಭಾಷೆಯ ಅಸ್ಮಿತೆಗೆ ಧಕ್ಕೆಯಾಗುತ್ತದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಇದನ್ನು ನಾವೇ ಒಪ್ಪದಿದ್ದರೆ ಇತರರು ನಮ್ಮ ಭಾಷೆಯನ್ನು ಹೇಗೆ ಗೌರವಿಸುತ್ತಾರೆ?
ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿ ಸಿಗುವಂತಾಗಬೇಕು. ಇದು ಭಾಷೆಯ ಉಳಿವಿನ ಹಾಗೂ ಮಗುವಿನ ಮನೋವಿಕಾಸದ ದೃಷ್ಟಿಯಿಂದ ಅತ್ಯಗತ್ಯ. ಸರ್ಕಾರಕ್ಕೆ ಈ ವಿಚಾರದಲ್ಲಿ ಬದ್ಧತೆಯಿರಬೇಕು. ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯನ್ನೂ ತೆರೆಯುತ್ತೇವೆ, ಕನ್ನಡ ಭಾಷೆಗೂ ಪ್ರಾಮುಖ್ಯತೆ ನೀಡುತ್ತೇವೆ ಎಂದರೆ ಅದು ಎರಡು ದೋಣಿಯ ಮೇಲೆ ಕಾಲಿಟ್ಟಂತೆ ಎಂದು ಎಚ್ಚರಿಸಿದರು.
ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದೆ. ಆಗ ಮಕ್ಕಳ ಶೈಕ್ಷಣಿಕ ಆಯ್ಕೆಯ ವಿಚಾರವನ್ನು ಅವರ ಪೋಷಕರಿಗೆ ಬಿಡೋಣ ಎಂದು ಮತ್ತೆ ಸುಪ್ರೀಂ ಕೋರ್ಟ್ ಹೇಳಿತು. ಅಂದಿನ ನನ್ನ ನಿಲುವಿಗೆ ನಾನು ಈಗಲೂ ಬದ್ಧನಿದ್ದೇನೆ.
ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸುವ ಬಗ್ಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಾವೆಲ್ಲ ಒಗ್ಗಟ್ಟಾದರೆ ಬದಲಾವಣೆ ಸಾಧ್ಯ ಎಂದು ವಿನಂತಿಸಿದೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಅವರ ಅಭಿಪ್ರಾಯ ಸಂಗ್ರಹಿಸಿ ಸಂವಿಧಾನಕ್ಕೆ ತಿದ್ದುಪಡಿ ತನ್ನಿ ಎಂದು ಪ್ರಧಾನಿಯವರಿಗೂ ಪತ್ರ ಬರೆದೆ. ಆದರೆ ಅವರಿಂದ ಯಾವುದೇ ರೀತಿಯ ಸ್ಪಂದನೆ ವ್ಯಕ್ತವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕನ್ನಡ ಮಾಧ್ಯಮದಲ್ಲಿ ಓದಿದ ಪ್ರೊ. ಸಿ.ಎನ್ ಆರ್ ರಾವ್ ಅವರಿಗೆ ಜಗತ್ತಿನ ವಿವಿಧ ದೇಶಗಳ 40ಕ್ಕೂ ಅಧಿಕ ವಿಶ್ವವಿದ್ಯಾಲಯಗಳು ಡಾಕ್ಟರೇಟ್ ನೀಡಿ ಗೌರವಿಸಿವೆ. ಇದು ಮಾತೃಭಾಷೆ ಶಿಕ್ಷಣದ ಸಾಮರ್ಥ್ಯ. ಇದನ್ನು ಎಲ್ಲ ತಂದೆ ತಾಯಂದಿರು ಅರ್ಥ ಮಾಡಿಕೊಂಡು ತಮ್ಮ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲೇ ಸಿಗುವಂತೆ ಮಾಡಬೇಕು.
ಅಭಿವೃದ್ಧಿಯಲ್ಲಿ ಪ್ರಾದೇಶಿಕ ಅಸಮಾನತೆ ದೂರಮಾಡಿ ಹೈದರಾಬಾದ್ ಕರ್ನಾಟಕಕ್ಕೆ ಪ್ರಾದೇಶಿಕ ನ್ಯಾಯ ದೊರಕಿಸಿಕೊಡಬೇಕೆಂದು ನಮ್ಮ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಪರಿಚ್ಚೇದ 371(ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ನೀಡಿತ್ತು. ಈ ಕಾರಣದಿಂದಲೇ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ರಚನೆಯಾಗಿರುವುದು.
ಈಗ ಕಲ್ಯಾಣ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ಬೇಡಿಕೆಯನ್ನು ತಿರಸ್ಕರಿಸಿದವರು, ವಿರೋಧಿಸಿದವರು ಯಾರು ಎನ್ನುವುದನ್ನು ಕೂಡಾ ಮರೆಯಬಾರದು. ನಮ್ಮ ಸರ್ಕಾರ ಈ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಿದ್ದರಿಂದಲೇ ಇಂದು ಉದ್ಯೋಗ ಶಿಕ್ಷಣದಲ್ಲಿ ವಿಶೇಷ ಮೀಸಲಾತಿ ಸಿಗುತ್ತಿದೆ ಎಂದರು.
ಕತೆ, ಕವನ, ನಾಟಕಗಳಂತಹ ಸೃಜನಶೀಲ ಅಭಿವ್ಯಕ್ತಿಯನ್ನು ದಮನಿಸುವ ರಾಜ್ಯ ಸರ್ಕಾರದ ಕ್ರಮವನ್ನು ಸಹಿಸಿಕೊಂಡಿರಲು ಸಾಧ್ಯ ಇಲ್ಲ. ಈ ಹಿನ್ನೆಲೆಯಲ್ಲಿ ಬೀದರ್ನ ವಿದ್ಯಾರ್ಥಿಗಳು ಮತ್ತು ಹೆತ್ತವರ ಮೇಲಿನ ಪ್ರಕರಣ ಮಾತ್ರವಲ್ಲ, ಕೊಪ್ಪಳ ಕವಿಯ ಮೇಲೆ ದಾಖಲಿಸಿರುವ ಪ್ರಕರಣವನ್ನು ವಾಪಾಸು ಪಡೆಯಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ಒತ್ತಾಯಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


