Connect with us

ದಿನದ ಸುದ್ದಿ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ | ಕವಿಯ ಮೇಲೆ ದಾಖಲಿಸಿರುವ ಪ್ರಕರಣವನ್ನು ವಾಪಾಸು ಪಡೆಯಬೇಕು : ಸಿದ್ದರಾಮಯ್ಯ

Published

on

ಸುದ್ದಿದಿನ,ಕಲಬುರಗಿ : ಕಳೆದ ಮೂರು ದಿನದಲ್ಲಿ ನಾಲ್ಕೈದು ಲಕ್ಷ ಮಂದಿ ಕನ್ನಡಿಗರು ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದು ಕನ್ನಡಿಗನಾದ ನನಗೆ ಅತ್ಯಂತ ಸಂತಸದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಕಲಬುರಗಿಯಲ್ಲಿ ಶುಕ್ರವಾರ ನಡೆದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಮ್ಮ ನಾಡಿಗೆ ಯಾವುದೇ ರಾಜ್ಯದಿಂದ ಬರಲಿ, ಯಾವುದೇ ದೇಶದಿಂದ ಬರಲಿ ಮೊದಲು ಅವರು ಇಲ್ಲಿನ ನಾಡು ನುಡಿಯನ್ನು ಗೌರವಿಸಬೇಕು. ಆಗ ಮಾತ್ರ ಅವರನ್ನು ನಮ್ಮವರಂತೆ ಕಾಣಲು ಸಾಧ್ಯ. ಕನ್ನಡಿಗರಾದ ನಾವು ಎಂದಿಗೂ ನಮ್ಮತನವನ್ನು ಮರೆಯದೆ, ಕನ್ನಡ ವಾತಾವರಣವನ್ನು ಸೃಷ್ಟಿಸಿದರೆ ಹೊರಗಿನಿಂದ ಬಂದವರು ಕೂಡ ಇಲ್ಲಿನ ಭಾಷೆಯನ್ನು ಕಲಿಯುತ್ತಾರೆ ಎಂದು ಹೇಳಿದರು.

ಕನ್ನಡ ಕಾವಲು ಸಮಿತಿಯ ಮೊಟ್ಟಮೊದಲ ಅಧ್ಯಕ್ಷನಾಗಿ ವರ್ಷಗಳ ಕಾಲ ನಾಡು ನುಡಿಯ ಸೇವೆ ಮಾಡಿದ್ದೆ. ರಾಜ್ಯಾದ್ಯಂತ ಸಂಚರಿಸಿ ಕನ್ನಡದ ಬೆಳವಣಿಗೆಗಾಗಿ ಸಾಕಷ್ಟು ಶ್ರಮಿಸಿದ್ದೆ. ನಾಡು ನುಡಿಯ ಸೇವೆ ಮಾಡುವುದು ಎಂದರೆ ಹೆತ್ತ ತಾಯಿಯ ಸೇವೆ ಮಾಡಿದಂತೆ ಎಂಬ ನಂಬಿಕೆ ನನ್ನದು.

ಈ ಕಾರಣಕ್ಕಾಗಿಯೇ ಅಂದಿನ ದಿನಗಳು ನೆನಪಾದಾಗೆಲ್ಲ ಹೆಮ್ಮೆ ಎನಿಸುತ್ತದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಕನ್ನಡ ಬಿಟ್ಟು ಬೇರೆ ಯಾವುದೇ ಭಾಷೆಯಲ್ಲಿ ಪತ್ರ ಅಥವಾ ಟಿಪ್ಪಣಿಗಳನ್ನು ತಂದರೂ ಅದಕ್ಕೆ ನಾನು ಸಹಿ ಮಾಡುತ್ತಿರಲಿಲ್ಲ. ನೀವು ಯಾವ ರಾಜ್ಯದಿಂದ ಬಂದಿದ್ದೀರ ನನಗದು ಮುಖ್ಯವಲ್ಲ, ನೀವೀಗ ಕರ್ನಾಟಕದಲ್ಲಿದ್ದೀರ, ನೀವು ನಮ್ಮಂತೆ ಕನ್ನಡಿಗರು, ಕನ್ನಡ ಕಲಿಯಿರಿ ಎಂದು ಅಧಿಕಾರಿಗಳನ್ನು ವಾಪಾಸು ಕಳಿಸುತ್ತಿದ್ದೆ ಎಂದು ನುಡಿದರು.

ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಾಗಬೇಕು. ಈ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಭಾಷೆಯ ವಿಚಾರದಲ್ಲಿ ಉದಾರತೆ ಸಲ್ಲದು. ಭಾಷೆಯ ವಿಚಾರದಲ್ಲಿ ತೋರುವ ಉದಾರತೆಯಿಂದ ಭಾಷೆಯ ಅಸ್ಮಿತೆಗೆ ಧಕ್ಕೆಯಾಗುತ್ತದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಇದನ್ನು ನಾವೇ ಒಪ್ಪದಿದ್ದರೆ ಇತರರು ನಮ್ಮ ಭಾಷೆಯನ್ನು ಹೇಗೆ ಗೌರವಿಸುತ್ತಾರೆ?

ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿ‌ ಮಾತೃಭಾಷೆಯಲ್ಲಿ ಸಿಗುವಂತಾಗಬೇಕು. ಇದು ಭಾಷೆಯ ಉಳಿವಿನ ಹಾಗೂ ಮಗುವಿನ ಮನೋವಿಕಾಸದ ದೃಷ್ಟಿಯಿಂದ ಅತ್ಯಗತ್ಯ. ಸರ್ಕಾರಕ್ಕೆ ಈ ವಿಚಾರದಲ್ಲಿ ಬದ್ಧತೆಯಿರಬೇಕು. ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಯನ್ನೂ ತೆರೆಯುತ್ತೇವೆ, ಕನ್ನಡ ಭಾಷೆಗೂ ಪ್ರಾಮುಖ್ಯತೆ ನೀಡುತ್ತೇವೆ ಎಂದರೆ ಅದು ಎರಡು ದೋಣಿಯ ಮೇಲೆ ಕಾಲಿಟ್ಟಂತೆ ಎಂದು ಎಚ್ಚರಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದೆ. ಆಗ ಮಕ್ಕಳ ಶೈಕ್ಷಣಿಕ ಆಯ್ಕೆಯ ವಿಚಾರವನ್ನು ಅವರ ಪೋಷಕರಿಗೆ ಬಿಡೋಣ ಎಂದು ಮತ್ತೆ ಸುಪ್ರೀಂ ಕೋರ್ಟ್ ಹೇಳಿತು. ಅಂದಿನ ನನ್ನ ನಿಲುವಿಗೆ ನಾನು ಈಗಲೂ ಬದ್ಧನಿದ್ದೇನೆ.

ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸುವ ಬಗ್ಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಾವೆಲ್ಲ ಒಗ್ಗಟ್ಟಾದರೆ ಬದಲಾವಣೆ ಸಾಧ್ಯ ಎಂದು ವಿನಂತಿಸಿದೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಅವರ ಅಭಿಪ್ರಾಯ ಸಂಗ್ರಹಿಸಿ ಸಂವಿಧಾನಕ್ಕೆ ತಿದ್ದುಪಡಿ ತನ್ನಿ ಎಂದು ಪ್ರಧಾನಿಯವರಿಗೂ ಪತ್ರ ಬರೆದೆ. ಆದರೆ ಅವರಿಂದ ಯಾವುದೇ ರೀತಿಯ ಸ್ಪಂದನೆ ವ್ಯಕ್ತವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡ ಮಾಧ್ಯಮದಲ್ಲಿ ಓದಿದ ಪ್ರೊ. ಸಿ.ಎನ್ ಆರ್ ರಾವ್ ಅವರಿಗೆ ಜಗತ್ತಿನ ವಿವಿಧ ದೇಶಗಳ 40ಕ್ಕೂ ಅಧಿಕ ವಿಶ್ವವಿದ್ಯಾಲಯಗಳು ಡಾಕ್ಟರೇಟ್ ನೀಡಿ ಗೌರವಿಸಿವೆ. ಇದು ಮಾತೃಭಾಷೆ ಶಿಕ್ಷಣದ ಸಾಮರ್ಥ್ಯ. ಇದನ್ನು ಎಲ್ಲ ತಂದೆ ತಾಯಂದಿರು ಅರ್ಥ ಮಾಡಿಕೊಂಡು ತಮ್ಮ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲೇ ಸಿಗುವಂತೆ ಮಾಡಬೇಕು.

ಅಭಿವೃದ್ಧಿಯಲ್ಲಿ ಪ್ರಾದೇಶಿಕ ಅಸಮಾನತೆ ದೂರಮಾಡಿ ಹೈದರಾಬಾದ್ ಕರ್ನಾಟಕಕ್ಕೆ ಪ್ರಾದೇಶಿಕ ನ್ಯಾಯ ದೊರಕಿಸಿಕೊಡಬೇಕೆಂದು ನಮ್ಮ‌ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಪರಿಚ್ಚೇದ 371(ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ನೀಡಿತ್ತು. ಈ ಕಾರಣದಿಂದಲೇ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ರಚನೆಯಾಗಿರುವುದು.

ಈಗ ಕಲ್ಯಾಣ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ಬೇಡಿಕೆಯನ್ನು ತಿರಸ್ಕರಿಸಿದವರು, ವಿರೋಧಿಸಿದವರು ಯಾರು ಎನ್ನುವುದನ್ನು ಕೂಡಾ ಮರೆಯಬಾರದು. ನಮ್ಮ ಸರ್ಕಾರ ಈ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಿದ್ದರಿಂದಲೇ ಇಂದು ಉದ್ಯೋಗ ಶಿಕ್ಷಣದಲ್ಲಿ ವಿಶೇಷ ಮೀಸಲಾತಿ ಸಿಗುತ್ತಿದೆ ಎಂದರು.

ಕತೆ, ಕವನ, ನಾಟಕಗಳಂತಹ ಸೃಜನಶೀಲ ಅಭಿವ್ಯಕ್ತಿಯನ್ನು ದಮನಿಸುವ ರಾಜ್ಯ ಸರ್ಕಾರದ ಕ್ರಮವನ್ನು ಸಹಿಸಿಕೊಂಡಿರಲು ಸಾಧ್ಯ ಇಲ್ಲ. ಈ ಹಿನ್ನೆಲೆಯಲ್ಲಿ ಬೀದರ್‌ನ ವಿದ್ಯಾರ್ಥಿಗಳು ಮತ್ತು ಹೆತ್ತವರ ಮೇಲಿನ ಪ್ರಕರಣ ಮಾತ್ರವಲ್ಲ, ಕೊಪ್ಪಳ ಕವಿಯ ಮೇಲೆ ದಾಖಲಿಸಿರುವ ಪ್ರಕರಣವನ್ನು ವಾಪಾಸು ಪಡೆಯಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ಒತ್ತಾಯಿಸಿದರು. ‌

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending