ದಿನದ ಸುದ್ದಿ

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.

ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕೊರತೆಯಾಗಬಾರದು. 100 ವಿದ್ಯಾರ್ಥಿಗಳು ವಾಸಿಸುವ ಕಟ್ಟಡಕ್ಕೆ ಬದಲಾಗಿ 400 ವಿದ್ಯಾರ್ಥಿಗಳು ವಾಸ ಮಾಡುವ ಕಟ್ಟಡವನ್ನು ನಿರ್ಮಿಸಬೇಕು ಎಂದರು. ಖಬರಸ್ಥಾನಕ್ಕೆ ಮತ್ತು ಸ್ಮಶಾನಕ್ಕೆ ಜಾಗದ ಅವಶ್ಯಕತೆ ಇದ್ದರೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಅಂಗನವಾಡಿ ಕೇಂದ್ರಗಳನ್ನು ಅಲ್ಪಸಂಖ್ಯಾತರ ಸಮುದಾಯದ ಜನರು ಅಧಿಕವಾಗಿ ವಾಸಿಸುತ್ತಿರುವ ತಾಲ್ಲೂಕುಗಳು ಮತ್ತು ಗ್ರಾಮಗಳಲ್ಲಿ ತೆರೆಯುವುದು, ಇದರಿಂದಾಗಿ ಯೋಜನೆಯ ಪ್ರಯೋಜನೆಗಳು ಅವರುಗಳಿಗೆ ನೇರವಾಗಿ ಸಿಗುತ್ತವೆ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ವಕ್ಫ್ ಬೋರ್ಡ್ ಅಥವಾ ಯಾವುದೇ ಇಲಾಖೆಯ ಅಧೀನದಲ್ಲಿನ ನಿವೇಶನವಿದ್ದರೂ ಗುರುತಿಸಿ ಶಾಲೆ, ಕಾಲೇಜುಗಳ ಕಟ್ಟಡ ನಿರ್ಮಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಇಲಾಖೆಗಳಲ್ಲಿನ ಯೋಜನೆಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು.

ವಿವಿಧ ಇಲಾಖೆಯ ಅನುಪಾಲನಾ ವರದಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಭಕ್ತಮಾರ್ಕಡೇಶ್ವರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು.

ಸಮಾಜದ ಧಾರ್ಮಿಕ ಮುಖಂಡರು ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ವಸತಿ ಶಾಲೆಗೆ ಸೇರಿಸುವಂತಾಗಲು ಪ್ರೇರೇಪಿಸಬೇಕು. ವಸತಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದರ ಜೊತೆಗೆ ಅಗತ್ಯ ಸೌಲಭ್ಯ ಇರುವ ಬಗ್ಗೆ ತಿಳಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಮತ ಹೊಸಗೌಡ್ರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ, ಡಿಡಿಪಿಐ ಕೊಟ್ರೇಶ್, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version