Connect with us

ಬಹಿರಂಗ

ಭಾರತೀಯ ಮಹಿಳೆಯರಿಗೆ ಅಂಬೇಡ್ಕರ್ ನೀಡಿದ ಕೊಡುಗೆಗಳು

Published

on


ಒಂದು ಸಮಾಜದ ಅಭಿವೃದ್ಧಿಯು ಆ ಸಮಾಜದ ಮಹಿಳೆಯರು ಎಷ್ಟು ಪ್ರಗತಿ ಹೊಂದಿದ್ದಾರೆ ಎಂಬುದರ ಮೇಲೆ ನಿಂತಿದೆ”. | ಡಾ.ಬಾಬಾಸಾಹೇಬ್ ಅಂಬೇಡ್ಕರ್


  • ನಾಗವಂಶಿ ನಂದಾದೀಪ

ಹಿಳೆಯರ ಕಲ್ಯಾಣ ಮತ್ತು ಉದ್ಧಾರರಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಷ್ಟು ಗಂಭಿರವಾಗಿದ್ದರು ಎಂಬುದಕ್ಕೆ ಈ ಹೇಳಿಕೆಯು ಸಾಕ್ಷಿಯಾಗಿದೆ. ಭಾರತದಲ್ಲಿ Feminism ಅಥವಾ ನಾರಿವಾದ ಎಂಬ ಹೆಸರೇ ಯಾರಿಗೂ ಗೊತ್ತಿರಲಾರದ ಕಾಲದಲ್ಲಿ ಅಂಬೇಡ್ಕರ್ ಅವರು ಮಹಿಳೆಯರ ಕಲ್ಯಾಣ ಹಾಗೂ ಪ್ರಗತಿಗಾಗಿ ಸಂಘರ್ಷವನ್ನು ಮಾಡುತ್ತಿದ್ದರು ಈ ಕಾರಣದಿಂದಲೇ ಇಂದು ಭಾರತೀಯ ಮಹಿಳೆಯರು ಸ್ವಾತಂತ್ರ್ಯ ಹಾಗೂ ಸ್ವಾಭಿಮಾನದಿಂದ ಬದುಕಲು ಸಾದ್ಯವಾಗಿದೆ.

20ನೇ ಶತಮಾನದಲ್ಲಿ ಪಿತ್ರಾರ್ಜಿತ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ ಏಕೈಕ ವ್ಯಕ್ತಿ ಅಂಬೇಡ್ಕರವರಾಗಿದ್ದರು. ಮಹಿಳೆಯರ ವಿಮೋಚನೆಗಾಗಿ, ಅವರ ಹಕ್ಕುಗಳಿಗಾಗಿ ಹಾಗೂ ಅವರು ಸ್ವಾಭಿಮಾನದಿಂದ ಬದುಕಲು ಬಾಬಾಸಾಹೇಬ್ ಅಂಬೇಡ್ಕರ್ ಅವರು ಮಾಡಿದಷ್ಟು ಸಂಘರ್ಷ/ಹೋರಾಟಗಳು ಬೇರೆ ಯಾರೂ ಮಾಡಿಲ್ಲ. ಆದರೇ ವಿಡಂಬನೆ ಎಂದರೆ ಸ್ತ್ರೀಯರಿಗಾಗಿ ಇಷ್ಟೆಲ್ಲ  ಮಾಡಿದರೂ ಭಾರತದಲ್ಲಿ ಅಂಬೇಡ್ಕರ್ ಅವರನ್ನು  ಸ್ತ್ರೀ ಉದ್ಧಾರಕ ಎಂದು ಇಂದಿಗೂ ಗುರುತಿಸುವುದಿಲ್ಲ. ಜನರು ಅವರನ್ನು ಕೇವಲ ದಲಿತರ ನಾಯಕ ಸಂವಿಧಾನ ನಿರ್ಮಾತೃ ಎನ್ನುವಷ್ಟರಲ್ಲಿ ಸೀಮಿತ ಮಾಡಲಾಗಿದೆ.

ಅಂಬೇಡ್ಕರ್ ಅವರು ಮಹಿಳೆಯರಿಗಾಗಿ ನಿಡಿದ ಪ್ರಮುಖ ಕೊಡುಗೆಗಳು

1.ಮಹಿಳೆಯರಿಗಾಗಿ ಶಿಕ್ಷಣದ ವ್ಯವಸ್ಥೆ

ಅಂಬೇಡ್ಕರ್ ಅವರು ಪುರುಷರ ಶಿಕ್ಷಣದ ಜೊತೆಗೆ ಮಹಿಳೆಯರ ಶಿಕ್ಷಣವು ಅಷ್ಟೇ ಮುಖ್ಯ ಎಂದು ಹೇಳುತ್ತಿದ್ದರು. 1913 ರಲ್ಲಿ  ನ್ಯೂಯಾರ್ಕ್ ನಲ್ಲಿ ಒಂದು ಭಾಷಣದಲ್ಲಿ ಮಾತನಾಡುತ್ತಾ. ತಂದೆ-ತಾಯಿಗಳು ಮಕ್ಕಳನ್ನು ಜನ್ಮ ನೀಡುತ್ತಾರೆ, ಕರ್ಮ ನೀಡುವುದಿಲ್ಲ. ತಾಯಿಯು ಮಗುವಿನಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಿ ಮುಂದಿನ ಭವಿಷ್ಯಕ್ಕೆ ದಾರಿ ತೊರಿಸುತ್ತಾಳೆ. ಅದಕ್ಕಾಗಿ ಪುರುಷರ ಜೊತೆಗೆ ಮಹಿಳೆಯರನ್ನು ಕೂಡ ಶಾಲೆಗೆ ಕಳುಹಿಸಿ ಅವರನ್ನು ಶಿಕ್ಷಿತರನ್ನಾಗಿ ಮಾಡಿದರೆ ನಮ್ಮ ಸಮಾಜವು ಪ್ರಗತಿಯ ಪಥದಲ್ಲಿ ಸಾಗುವುದು ಎಂದು ಹೇಳುತ್ತಾರೆ. ಬಾಬಾಸಾಹೇಬರ ಈ ಹೇಳಿಕೆಯು ಇಂದು ನೈಜ ರೂಪ ಪಡೆದುಕೊಂಡಿದೆ. ಶಿಕ್ಷಿತ ಹೆಣ್ಣು ಇಂದು ವಿಮಾನವನ್ನು ಹಾರಿಸುತ್ತಿದ್ದಾಳೆ, ಗಗನಯಾತ್ರಿಯಾಗಿದ್ದಾಳೆ, ದೇಶದ ಪ್ರಧಾನಿ/ರಾಷ್ಟ್ರಪತಿಯಾಗಿ ಕಾಯ೯ನಿವ೯ಹಿಸುತಿದ್ದಾಳೆ.

18 ಜುಲೈ 1927 ರಲ್ಲಿ 3000 ಮಹಿಳೆಯರನ್ನು ಒಳಗೊಂಡ ಒಂದು ಬೃಹತ್ ಮಹಿಳಾ ಸಮಾವೇಶದಲ್ಲಿ ಬಾಬಾಸಾಹೇಬರು ಹೇಳುತ್ತಾರೆ “ನೀವು ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಶಿಕ್ಷಣವು ಪುರುಷರಿಗೆ ಎಷ್ಟು ಅವಶ್ಯಕತೆ ಇದೆಯೋ ಅಷ್ಟೇ ಅವಶ್ಯಕತೆ ಮಹಿಳೆಯರಿಗೂ ಇದೇ ನೀವು ಶಿಕ್ಷಿತರಾದಲ್ಲಿ ಸಮಾಜದ ಪ್ರಗತಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ.”

ಭಾರತದ ಮೊದಲ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ ಮತ್ತು ಫಾತಿಮಾಶೇಖ್ ಅವರ ಕಾರ್ಯವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮುಂದುವರಿಸಿದರು. ಹಾಗೂ ಮಹಿಳೆಯರ ಶಿಕ್ಷಣಕ್ಕಾಗಿ ಅನೇಕ ಹೋರಾಟ ಮತ್ತು ಸಂಘರ್ಷಗಳು ಮಾಡಿದರು. ಮನುಸ್ಮೃತಿಯಲ್ಲಿ ಮಹಿಳೆಯರಿಗೆ ಮೊಸಗಾತಿ೯, ಕಳ್ಳಿ, ನೀಚ ಯೋನಿ ಎಂದು ಕರೆಯಲಾಗಿದೆ ಹಾಗೂ ಶೂದ್ರರ ಹಾಗೆ ಸ್ರೀಯರಿಗೂ ಕೂಡ ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಲಾಗಿದೆ. ಆದರೆ ಅಂಬೇಡ್ಕರ್ ಅವರು ಮಹಿಳೆಯರಿಗಾಗಿ ಶಿಕ್ಷಣದ ದ್ವಾರವನ್ನು ತೆರೆದು ಅವರಿಗೆ ಶಿಕ್ಷಿತರನ್ನಾಗಿ ಮಾಡಿ ಸ್ವಾಭಿಮಾನದಿಂದ ಬದುಕಲು ಕಲಿಸಿದರು.

2. ಮೆಟರ್ನಿಟಿ ರಜೆ

ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು 26 ವಾರಗಳ ಮೆಟರ್ನಿಟಿ ರಜೆಯನ್ನು ಪಡೆಯಬಹುದಾಗಿದೆ ಇದಕ್ಕೆ ಮೂಲಕಾರಣ ಬಾಬಾಸಾಹೇಬ್ ಅಂಬೇಡ್ಕರ್ ಅವರು ಎಂದು ಹೇಳಬಹುದು. 10 ನವೆಂಬರ್ 1938 ರಲ್ಲಿ ಬಾಂಬೆ ಲೆಜಿಸ್ಲೇಟಿವ್ ಅಸೆಂಬ್ಲಿಯಲ್ಲಿ ಮಹಿಳೆಯರ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೆ. ಇದೆ ಸಂದರ್ಭದಲ್ಲಿ ಮಹಿಳೆಯರು ಋತುಸ್ರಾವದ ಸಮಯದಲ್ಲಿ ಅನುಭವಿಸುವ ಕಷ್ಟ ಹಾಗೂ ಅದರಿಂದ ಅನೇಕ ರೋಗಗಳಿಗೆ ಬಲಿಯಾಗುತ್ತಿರುವುದನ್ನು ಬ್ರಿಟಿಷರಲ್ಲಿ ಮನವರಿಕೆ ಮಾಡಿಸುತಾರೆ.

ಮುಂದೆ 1942 ರಲ್ಲಿ ಅಂಬೇಡ್ಕರ್ ಅವರು ‘ಮೆಟರ್ನಿಟಿ ಬಿಲ್’ ಅನ್ನು ತರುತ್ತಾರೆ.  1948 ರಲ್ಲಿ  “Employees state insurance act” ಮುಖಾಂತರ ಮಾತೃತ್ವದ ಅವಕಾಶವನ್ನು ಬಾಬಾಸಾಹೇಬರು ಕಲ್ಪಿಸಿಕೊಡುತ್ತಾರೆ. ವಿಶ್ವದ ಮುಂದುವರೆದ ದೇಶಗಳು ಕೂಡ ಈ ವಿಷಯದ ಮೇಲೆ ಚರ್ಚೆ ಮಾಡಲು ಹಿಂಜರಿಯುತ್ತಿದ್ದ ಸಮಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತದಲ್ಲಿ 1948 ರಲ್ಲಿ ಈ ಕೆಲಸವನ್ನು ಮಾಡಿ ತೋರಿಸಿದರು.  ಅಮೆರಿಕದಲ್ಲಿ 1980 ರಲ್ಲಿ ಅನೇಕ ಹೋರಾಟದ ನಂತರ ಕೊಟಿ೯ನ ಮುಖಾಂತರ ಮಹಿಳೆಯರಿಗೆ ಮೆಟರ್ನಿಟಿ ರಜೆಯನ್ನು ಲಭಿಸಿತು.

3. ಲೈಂಗಿಕ ಸಮಾನತೆ

ಬಾಬಾಸಾಹೇಬರು ಭಾರತದಲ್ಲಿ ಮಹಿಳೆಯರಿಗೆ ಪುರುಷರ ಸರಿ ಸಮಾನ ಅಧಿಕಾರವನ್ನು ನೀಡಿದ್ದಾರೆ. ಸಂವಿಧಾನದ ವಿಧಿ 14 ರಿಂದ 16 ವರೆಗಿನ ವಿಧಿಗಳಲ್ಲಿ ಮಹಿಳೆಯರಿಗೆ ಪುರುಷರ ಸರಿಸಮಾನ ಅಧಿಕಾರವನ್ನು ನೀಡುವ ವ್ಯವಸ್ಥೆಯನ್ನು ಅಂಬೇಡ್ಕರವರು ಮಾಡಿದ್ದಾರೆ. ಬಾಬಾಸಾಹೇಬರ ಪ್ರಕಾರ “ಭಾರತದಲ್ಲಿ ಮಹಿಳೆಯರಿಗೆ ಮಹಿಳೆ ಎನ್ನುವ ಕಾರಣದಿಂದ ಯಾವುದೇ ರೀತಿಯ ಅಧಿಕಾರದಿಂದ ವಂಚಿತರನ್ನಾಗಿ ಮಾಡುವುದಾಗಲಿ ಅಥವಾ ಮಹಿಳೆ ಎಂಬ ಕಾರಣದಿಂದ ಭೇದಭಾವ ಮಾಡುವುದು ಸಂವಿಧಾನದ ಪ್ರಕಾರ ಅಪರಾಧ” ಎಂದು ಹೇಳುತ್ತಾರೆ. ಅದಕ್ಕಾಗಿ ಸಂವಿಧಾನದಲ್ಲಿ ಮಹಿಳೆಯರ ಶೋಷಣೆಯ ವಿರುದ್ಧ ಅನೇಕ ಕಠಿಣ ಕಾನೂನುಗಳನ್ನು ಅಳವಡಿಸಿದ್ದಾರೆ.  ಜೊತೆಗೆ ಮಹಿಳೆ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವುದಕ್ಕಾಗಿ ರಾಜ್ಯಗಳಿಗೆ ವಿಶೇಷ ಸ್ವತಂತ್ರವನ್ನು ಸಂವಿಧಾನದಲ್ಲಿ ನೀಡಿದ್ದಾರೆ.

4. ಮತದಾನದ ಅಧಿಕಾರ

20ನೇ ಶತಮಾನದಲ್ಲಿ ಜಗತ್ತಿನಲ್ಲಿ ಮಹಿಳೆಯರ ಮತಾಧಿಕಾರದ ಸಲುವಾಗಿ ಅನೇಕ ಹೋರಾಟಗಳು ನಡೆಯುತ್ತಿದ್ದವು ಆದರೆ ಭಾರತದಲ್ಲಿ ಅಂತಹ ಯಾವುದೇ ಹೋರಾಟ ನಡೆಯುತ್ತಿರಲಿಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಸಂವಿಧಾನ ಬರೆಯುವ ಅವಕಾಶ ಸಿಕ್ಕಾಗ ಮಹಿಳೆಯರಿಗಾಗಿ ಮತಾಧಿಕಾರದ ಅವಕಾಶವನ್ನು ಕಲ್ಪಿಸಿದರು. ಇಂದು 18 ವರ್ಷ ದಾಟಿದ ಪ್ರತಿಯೊಂದು ಮಹಿಳೆಯೂ ಮತದಾನವನ್ನು ಮಾಡುತ್ತಾಳೆ. ಮನುಸ್ಮೃತಿ ಯಿಂದ ಹಿಡಿದು ಹಿಂದೂಧರ್ಮದ ಕೆಲ ಗ್ರಂಥಗಳಲ್ಲಿ ಮಹಿಳೆಯರಿಗೆ ಎರಡನೇ ದರ್ಜೆಯ ಸ್ಥಾನವನ್ನು ನೀಡಲಾಗಿದೆ. ಮನುಸ್ಮೃತಿಯ ಒಂದು ಶ್ಲೋಕದಲ್ಲಿ ” ಬೆಳಗ್ಗೆ ಇರಲಿ ಮಧ್ಯಾಹ್ನ ಇರಲಿ ಸಾಯಂಕಾಲ ಇರಲಿ ಅಥವಾ ರಾತ್ರಿಯೇ ಆಗಿರಲಿ ಸ್ತ್ರೀಗೆ ಯಾವುದೇ ರೀತಿಯ ಸ್ವತಂತ್ರ ನೀಡಬಾರದು, ಅವಳಿಗೆ ಲೈಂಗಿಕ ಸಂಬಂಧದ ಮುಖಾಂತರ ತನ್ನ ವಶದಲ್ಲಿ ಇಡಬೇಕು.  ಬಾಲ್ಯದಲ್ಲಿ ತಂದೆ ಯೌವನಾವಸ್ಥೆಯಲ್ಲಿ ಗಂಡ ವೃದ್ಯಾಪ್ಯದಲ್ಲಿ ಮಗ ಅವಳನ್ನು ರಕ್ಷಣೆ ಮಾಡಬೇಕು ಏಕೆಂದರೆ ಸ್ತ್ರೀಯು ಸ್ವತಂತ್ರವಾಗುವ ಅಹ೯ತೆ ಹೊಂದಿಲ್ಲ ( ಅಧ್ಯಯ 9, 2:3)

ಆದರೆ ಅಂಬೇಡ್ಕರ್ ಅವರು ಈ ಎಲ್ಲಾ ಗುಲಾಮಗಿರಿಯ ಸಂಕೋಲೆಗಳನ್ನು ಮುರಿದು ಮಹಿಳೆಯರಿಗೆ ಸಮಾನ ಅಧಿಕಾರವನ್ನು ನೀಡಿದರು. ಸ್ವಿಜರ್ಲೆಂಡ್ ಅಂತಹ ದೇಶದಲ್ಲಿ ಮಹಿಳೆಯರಿಗೆ 1970 ರಲ್ಲಿ ಮತದಾನದ ಅಧಿಕಾರವನ್ನು ಸಿಕ್ಕಿತು. ಆದರೆ ಬಾಬಾಸಾಹೇಬರು 1950 ರಲ್ಲಿ ಸಂವಿಧಾನದ ಮೂಲಕ ಮಹಿಳೆಯರಿಗೆ ಮತದಾನದ ಹಕ್ಕನ್ನು ನಿಡಿದರು.

5. ವಿಚ್ಛೇದನ ಮತ್ತು ಆಸ್ತಿಯಲ್ಲಿ ಅಧಿಕಾರ

ಮನುಸ್ಮೃತಿಯಲ್ಲಿ ನಿರಾಕರಣೆ ಮಾಡಿದ ಎಲ್ಲಾ ಹಕ್ಕುಗಳನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಮಹಿಳೆಯರಿಗೆ ನೀಡಿದರು. ಜಾತಿ,ಲಿಂಗ,ಧಾರ್ಮಿಕ ನಿರಪೆಕ್ಷತೆಯನ್ನು ದಾಟಿ ಬಾಬಾಸಾಹೇಬರು ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಮಂಡಿಸಿದರು. ಹಿಂದೂ ಕೋಡ್ ಬಿಲ್ ಮುಖಾಂತರ ಮಹಿಳೆಯರ ಹಿತವನ್ನು ಕಾಪಾಡುವ ಪ್ರಯತ್ನವನ್ನು ಮಾಡಿದರು. ಈ ಹಿಂದೂ ಕೋಡ್ ಬಿಲ್ ನಲ್ಲಿ ಮಹಿಳೆಯರಿಗೆ ನಾಲ್ಕು ರೀತಿಯ ಪ್ರಮುಖ ಅವಕಾಶಗಳನ್ನು ನಿಡಿದ್ದರು.

  1. ಹಿಂದೂ ವಿವಾಹ ಪದ್ಧತಿಯಲ್ಲಿ ಇದ್ದ ಬಹು ವಿವಾಹ ಪದ್ಧತಿಯನ್ನು ಸಮಾಪ್ತಿಗೊಳಿಸಿ ಒಂದೆ ವಿವಾಹ ಪದ್ಧತಿಯನ್ನು ಜಾರಿಗೊಳಿಸುವುದು.
  2. ಮಹಿಳೆಯರಿಗೆ ತಂದೆಯ ಆಸ್ತಿಯಲ್ಲಿ ಅಧಿಕಾರವನ್ನು ನೀಡುವುದು ಮತ್ತು ಮಕ್ಕಳನ್ನು ದತ್ತು ಪಡೆಯುವ ಅಧಿಕಾರವನ್ನು ನೀಡುವುದು.
  3. ಪುರುಷರ ಹಾಗೆಯೇ ಮಹಿಳೆಯರಿಗೂ ವಿಚ್ಛೇದನ ನೀಡುವ ಅಧಿಕಾರ ನಿಡುವುದು. ಹಿಂದೆ ಸಮಾಜದಲ್ಲಿ ಮೊದಲು ಪುರುಷರಷ್ಟೇ ವಿಚ್ಛೇದನವನ್ನು ನೀಡುತ್ತಿದ್ದರು.
  4. ಆಧುನಿಕ ಮತ್ತು ಪ್ರಗತಿಶೀಲ ವಿಚಾರಧಾರೆ ಮುಖಾಂತರ ಸಮಾಜವನ್ನು ಏಕೀಕೃತಗೊಳಿಸಿ ಜಾರಿಗೆ ಸುಂದರ ಸಮಾಜವನ್ನು ಸ್ಥಾಪಿಸುವುದು.

ಆದರೆ ರಾಜೇಂದ್ರ ಪ್ರಸಾದರಂತಹ ಮಹಿಳಾ ವಿರೋಧಿ ವ್ಯಕ್ತಿಯಿಂದಾಗಿ ಹಿಂದೂ ಕೋಡ್ ಬಿಲ್ ಜಾರಿಗೆ ಬರಲಿಲ್ಲ.  ಹಾಗಾಗಿ ನಿರಾಶರಾದ ಅಂಬೇಡ್ಕರ್ ಅವರು 7 ಸೆಪ್ಟೆಂಬರ್ 1951 ರಲ್ಲಿ ತನ್ನ ಮಂತ್ರಿ ಪದವಿಗೆ ರಾಜೀನಾಮೆಯನ್ನು  ನೀಡಿದರು.

6. ಮಹಿಳಾ ವಿರೋಧಿ ಅನಿಷ್ಠ ಪದ್ಧತಿಗಳ ನಿರ್ಮೂಲನೆ

ಅಂಬೇಡ್ಕರ್ ಅವರು ಗುಲಾಮಗಿರಿಯಲ್ಲಿ ಬದುಕುತ್ತಿದ್ದ ಅಸಾಹಯಕ ಮಹಿಳೆಯರಲ್ಲಿ ಪ್ರೇರಣೆ ತುಂಬುವ ಉದ್ದೇಶದಿಂದ ಮಹಿಳೆಯರ  ಶೋಷಣೆಯ ಆಕರಗಳಾದ ಬಾಲ್ಯವಿವಾಹ, ದೇವದಾಸಿ ಪದ್ಧತಿ ಗಳಂಥಹ ಅನಿಷ್ಟ ಪದ್ದತಿಗಳ ವಿರುದ್ಧ ಧ್ವನಿಯೆತ್ತಿದರು. 1928 ರಲ್ಲಿ ಬಾಂಬೆಯಲ್ಲಿ ಮಹಿಳಾ ಕಲ್ಯಾಣಕಾರಿ ಸಂಸ್ಥೆಯನ್ನು ಸ್ಥಾಪಿಸಿದರು.

ಈ ಸಂಸ್ಥೆಯ ಅಧ್ಯಕ್ಷರು ಅಂಬೇಡ್ಕರ್ ಅವರ ಪತ್ನಿ ರಮಾಬಾಯಿಯವರು ಆಗಿದ್ದರು. 20 ಜನವರಿ 1942 ರಲ್ಲಿ ಅಂಬೇಡ್ಕರ್ ಅವರು ಅಖಿಲ ಭಾರತೀಯ ಮಹಿಳಾ ಸಮ್ಮೇಳನವನ್ನು ಆಯೋಜಿಸಿದರು ಈ ಸಮ್ಮೇಳನದಲ್ಲಿ ಸುಮಾರು 25 ಸಾವಿರ ಮಹಿಳೆಯರು ಭಾಗಿಯಾಗಿದ್ದರು. 25 ಡಿಸೆಂಬರ್ 1927 ರಲ್ಲಿ ಬಾಬಾ ಸಾಹೇಬರು ಮನುಸ್ಮೃತಿಯನ್ನು ಸುಟ್ಟಿ ಮಹಿಳಾ ಸ್ವಾಭಿಮಾನವನ್ನು ಪ್ರತಿಷ್ಠಾಪಿಸಿದರು.

(ನಾಗವಂಶಿ ನಂದಾದೀಪ, BAMCEF)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending