ಬಹಿರಂಗ
ಆರೆಸ್ಸೆಸ್ ಗೆ ಅಂಬೇಡ್ಕರ್ ಕೃತಿಗಳನ್ನು ಓದಿಸುವ ಧೈರ್ಯವಿದೆಯಾ?
- ಹರ್ಷಕುಮಾರ್ ಕುಗ್ವೆ
ಈ ದೇಶದ ಸಾವಿರಾರು ವರ್ಷಗಳ ಇತಿಹಾಸದಲ್ಲಿ ಸಮಾಜದ ಜಾತಿ- ಲಿಂಗ ತಾರತಮ್ಯವನ್ನು ಹೋಗಲಾಡಿಸಲು ಬುದ್ಧ, ಬಸವ, ಫುಲೆ, ಶಾಹು, ಅಂಬೇಡ್ಕರ್ ಪೆರಿಯಾರ್ ಹೀಗೆ ಅದೆಷ್ಟೋ ದಾರ್ಶನಿಕರು ತಮ್ಮ ಬದುಕುಗಳನ್ನೇ ಸಮರ್ಪಿಸಿದ್ದಾರೆ. ಆದರೂ ಈ ದೇಶದ ವೈದಿಕಶಾಹಿಯನ್ನು ಸೋಲಿಸಲು ಸಾಧ್ಯವಾಗದೇ ಅದು ಮತ್ತಷ್ಟು ಬಲಗೊಳ್ಳುತ್ತಲೇ ಹೋಗಿದೆ, ಅದು ತನ್ನ ಕಬಂಧ ಬಾಹುಗಳನ್ನು ಮೈಲುದ್ದಕ್ಕೆ ಬೆಳೆಸಿಕೊಂಡು ಚಾಚಿಕೊಳ್ಳುತ್ತಾ ಎಲ್ಲವನ್ನೂ ತೆಕ್ಕೆಗೆ ತೆಗೆದುಕೊಳ್ಳುತ್ತಲೇ ಇದೆ. ಇದಕ್ಕೆ ವೈದಿಕಶಾಹಿ ಎಲ್ಲಾ ಕಾಲದಲ್ಲಿ ದಮನದ ತಂತ್ರವನ್ನು ಬಳಸಿದ್ದರೆ ಸಾಧ್ಯವಾಗುತ್ತಿರಲಿಲ್ಲ. ಬದಲಿಗೆ ಅದು ವಂಚನೆ-ನಯವಂಚನೆಯ ತಂತ್ರಗಳನ್ನು ಬಳಸಿರುವುದು ಪ್ರಮುಖ ಕಾರಣ ಎನಿಸುತ್ತದೆ. ಕೌಟಿಲ್ಲ ಹೇಳಿದ್ದ ರಾಜನೀತಿಯ ಚತುರೋಪಾಯಗಳಾದ ಸಾಮ, ದಾನ, ಭೇದ ಮತ್ತು ದಂಡ ಇವುಗಳನ್ನು ಪ್ರತಿ ಹಂತದಲ್ಲಿಯೂ ಅತ್ಯಂತ ಪರಿಣಾಮಕಾರಿಯಾಗಿ ವೈದಿಕಶಾಹಿ ಬಳಸಿಕೊಂಡಿರುವುದರಲ್ಲೇ ಅದರ ಯಶಸ್ಸನ್ನು ಕಾಣಬಹುದು.
ಮೊನ್ನೆ ನವೆಂಬರ್ 24ರಂದು ಬೆಂಗಳೂರಿನ ಆರ್ ವಿ ಕಾಲೇಜಿನಲ್ಲಿ ಬಿಜೆಪಿ ಆಚರಿಸಿದ ಸಂವಿಧಾನ ದಿನಾಚರಣೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಬಿ ಎಲ್ ಸಂತೋಷ್ ಆಡಿರುವ ಮಾತುಗಳನ್ನು ಮತ್ತು ಕೆಲ ದಲಿತ ಬಂಧುಗಳು ಆ ಮಾತುಗಳನ್ನು ಸೆಲೆಬ್ರೇಟ್ ಮಾಡಿರುವುದನ್ನು ನೋಡಿದಾಗ ವೈದಿಕಶಾಹಿ ನಡೆಸುವ ಈ ಕುಟಿಲ ಚಾಣಾಕ್ಷತನದ ಬಗ್ಗೆ ಯೋಚಿಸುವಂತಾಯಿತು.
ಬಿ ಎಲ್ ಸಂತೋ಼ಷ್ ಆಡಿರುವ ಮಾತುಗಳನ್ನು ಕೇಳಿದರೆ ಸಹಜವಾಗಿ ಈ ದೇಶದ ಸಂವಿಧಾನದ ಬಗ್ಗೆ ಮತ್ತು ಅಂಬೇಡ್ಕರ್ ಬಗ್ಗೆ ಅಭಿಮಾನ ಇರುವ ಯಾರೇ ಆದರೂ ಕ್ಲೀನ್ ಬೋಲ್ಡ್ ಆಗಿಬಿಡುತ್ತಾರೆ. ವಾಹ್ ಎಂತಾ realization! ಅದೂ ಆರೆಸ್ಸೆಸ್ಸಿಗನ ಬಾಯಿಯಲ್ಲಿ ಅಂಬೇಡ್ಕರ್ ಕೊಂಡಾಟದ ಮಾತುಗಳು! ಎನಿಸಿಬಿಡುತ್ತವೆ. ಆದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು, ಅವರ ಆಶಯ ಕನಸುಗಳನ್ನು ಅರ್ಥ ಮಾಡಿಕೊಂಡ ಯಾರಿಗೇ ಈ ವೈದಿಕಶಾಹಿ ಸಂತೋ಼ಷನ ಮಾತುಗಳು ಖುಷಿಗೊಳಿಸುವುದಿಲ್ಲ, ಆಕ್ರೋಶ ತರಿಸುತ್ತವೆ. ಕಾರಣವೇನೆಂದರೆ, ಯಾವ ವೈದಿಕಶಾಹಿಯನ್ನು ಹಿಮ್ಮೆಟ್ಟಿಸಲು ಬಾಬಾಸಾಹೇಬರು ತಮ್ಮ ಬದುಕಿನುದ್ದಕ್ಕೂ ಶ್ರಮಪಟ್ಟರೋ; ಯಾವ ವೈದಿಕಶಾಹಿಯ ಹುನ್ನಾರಗಳನ್ನು ತಮ್ಮ ಬರೆಹಗಳಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟರೋ; ಯಾವ ವೈದಿಕಶಾಹಿಯ ಹತಾರಗಳನ್ನು ಕಾಂಗ್ರೆಸ್ ಮತ್ತು ಮಹಾತ್ಮ ಗಾಂಧಿಯಲ್ಲೂ ಕಂಡು ಅಂಬೇಡ್ಕರ್ ಕೆಂಡಾಮಂಡಲವಾಗಿದ್ದರೋ; ಯಾವ ವೈದಿಕಶಾಹಿಯ ಹಿಡಿತದಿಂದ ತನ್ನ ಸಮುದಾಯವನ್ನು ಮಾತ್ರವಲ್ಲ ಇಡೀ ಭರತಖಂಡವನ್ನು ಬಿಡುಗಡೆಗೊಳಿಸಲು ಇಚ್ಚಿಸಿದ್ದರೋ: ಯಾವ ವೈದಿಕಶಾಹಿಯ ಹಿಡಿತದಿಂದ ಜನರನ್ನು ತಪ್ಪಿಸಲು ವೈದಿಕ ಹಿಂದೂ ಧರ್ಮವನ್ನು ತ್ಯಜಿಸಿ ಸಮತೆಯ ಬೌದ್ಧ ಧರ್ಮಕ್ಕೆ ಮತಾಂತರಗೊಂಡರೋ; ಯಾವ ವೈದಿಕಶಾಹಿಯನ್ನು ಎದುರಿಸಲು ತನ್ನ ಅನುಯಾಯಿಗಳಿಗೆ “ಹಿಂದೂ ದೇವರುಗಳಾದ ರಾಮ, ವಿಷ್ಣು, ಮೊದಲಾದ ದೇವರುಗಳನ್ನು ನಾನು ಪೂಜಿಸುವುದಿಲ್ಲ” ಎಂಬ ಪ್ರತಿಜ್ಞೆಯನ್ನು ಬೋಧಿಸಿದ್ದರೋ; ಯಾವ ವೈದಿಕಶಾಹಿಯ ಸಂಪೂರ್ಣ ನಾಶವನ್ನು ಅಂಬೇಡ್ಕರ್ ಬಯಸಿದ್ದರೋ ಅದೇ ವೈದಿಕಶಾಹಿಯು ಅಂಬೇಡ್ಕರ್ ಅವರನ್ನು ದಿಢೀರನೆ ಇನ್ನಿಲ್ಲದಂತೆ ಹೊಗಳಲು, ಕೊಂಡಾಡಲು ಶುರುಮಾಡಿದೆ! ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಮತ್ತು ಅವರು ರಚಿಸಿದ ಸಂವಿಧಾನವನ್ನು ನರನಾಡಿಗಳಲ್ಲಿ ವೈದಿಕಶಾಹಿ ಚಿಂತನೆ ಮತ್ತು ಹುನ್ನಾರಗಳನ್ನೇ ಹೊಂದಿರುವ ಬಿ ಎಲ್ ಸಂತೋ಼ಷ್ ಕೊಂಡಾಡಿದ್ದನ್ನು ಕಂಡು “ಓ ವೈದಿಕಶಾಹಿಯ ಮನಪರಿವರ್ತನೆ ಆಗುತ್ತಿದೆ” ಎಂದುಕೊಳ್ಳೋಣವೇ? “ಅಂಬೇಡ್ಕರ್ ಕುರಿತು ಆರೆಸ್ಸೆಸ್ ತನ್ನ ಅಭಿಪ್ರಾಯ ಬದಲಿಸಿಕೊಳ್ಳುತ್ತಿದೆ” ಎಂದು ಭ್ರಮಿಸಿ ಸಂಭ್ರಮ ಪಡೋಣವೇ?
ಹಲವರುಷಗಳ ಹಿಂದೆ ಇದೇ ಆರೆಸ್ಸೆಸ್ ಪಾಳಯದಲ್ಲಿ ಬೆಳೆದ ಅರುಣ್ ಶೌರಿ ಎಂಬಾತ ತನ್ನ “Worshipping false gods” ಕೃತಿಯಲ್ಲಿ ಅಂಬೇಡ್ಕರ್ ಒಬ್ಬ ಪೊಳ್ಳು ದೇವರು ಎಂದು ಜರಿದು ಅಪಮಾನಿಸಿದ್ದ. ಒಂದೆರಡು ವರ್ಷಗಳ ಹಿಂದೆ ಜರ್ಮನಿಯ ಯೂನಿವರ್ಸಿಟಿಯೊಂದರಲ್ಲಿರುವ ಬಾಲಗಂಗಾಧರ ಎಂಬ ಅವಿವೇಕಿಯಂತೂ ಅಂಬೇಡ್ಕರ್ ಒಬ್ಬ ಈಡಿಯಟ್ ಎಂದು ಹೇಳಿ ಬೆತ್ತಲಾಗಿದ್ದ, ಎರಡೇ ವರ್ಷದ ಹಿಂದೆ ಉತ್ತರ ಕನ್ನಡವನ್ನು ಪ್ರತಿನಿಧಿಸುವ ಆರೆಸ್ಸೆಸ್ ಚಿಂತನೆಯ ಮುಠ್ಠಾಳ ಸಂಸದನೊಬ್ಬ ಸಂವಿಧಾನವನ್ನೇ ಬದಲಿಸುತ್ತೇನೆ ಎಂದು ಹೇಳಿ ಕೊನೆಗೆ ಸಂಸತ್ತಿನಲ್ಲೇ ಕ್ಷಮಾಪಣೆ ಕೇಳಿದ್ದ. ಅರೆ, ಇವರೆಲ್ಲರೂ ಈ ಕ್ಷಣದಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಆರೆಸ್ಸೆಸ್ಸಿನ ನಿಕಟವರ್ತಿಗಳೇ. ಈಗ ಅದೇ ಆರೆಸ್ಸೆಸ್ಸಿನ ಬಿ ಎಲ್ ಸಂತೋ಼ಷ ಅಂಬೇಡ್ಕರ್ ಅವರನ್ನು ಅರ್ಥ ಮಾಡಿಕೊಂಡರೇನೇ ಸಂವಿಧಾನ ಅರ್ಥಮಾಡಿಕೊಳ್ಳಲು ಸಾಧ್ಯ ಎನ್ನುತ್ತಾನೆ! ಮಾತ್ರವಲ್ಲ “ಸಂವಿಧಾನ ಕೊಟ್ಟಿರುವ ಮೀಸಲಾತಿ ಇದೆಯಲ್ಲಾ ಅದು ನಾವು ಕೊಟ್ಟಿರುವ ಕೊಡುಗೆಯಲ್ಲ ಬದಲಿಗೆ ದಲಿತರನ್ನು ವಂಚಿಸಿದ ದೊಡ್ಡ ವರ್ಗವೊಂದು ಮಾಡಿಕೊಳ್ಳುತ್ತಿರುವ ಪ್ರಾಯಶ್ಚಿತ್ತ ಎನ್ನುತ್ತಾನೆ! ಎಂತಹಾ ದಾರ್ಶನಿಕ ಮಾತು!! ಇದರಲ್ಲಿನ ತರ್ಕವೇನೋ ಸರಿಯಾಗಿದೆ. ಆದರೆ ಆತ ಮುಂದುವರಿದು ‘ದಲಿತರನ್ನು ಶೂದ್ರರನ್ನು ಈ ದೇಶದಲ್ಲಿ ವಂಚಿಸಿರುವುದು ಬಹುದೊಡ್ಡ ವರ್ಗ ಎಂಬ ಹಸಿಹಸಿ ಸುಳ್ಳು ಹೇಳುತ್ತಾನೆ. ವಾಸ್ತವದಲ್ಲಿ ಇಡೀ ದೇಶದ ಬಹುದೊಡ್ಡ ವರ್ಗವನ್ನು ಅವಕಾಶಗಳನ್ನು ಚಾರಿತ್ರಿಕವಾಗಿ ವಂಚಿಸಿಕೊಂಡು ಬಂದಿದ್ದು ಈ ದೇಶ ಜನಸಂಖ್ಯೆ ಕೇವಲ 3-4 % ಇರುವ ಜನವರ್ಗ ಎಂಬ ಕಟು ಸತ್ಯವನ್ನು ಬೇಕೆಂದೇ ಮರೆಮಾಚುತ್ತಾನೆ.
ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಮಿಲ್ಲರ್ ಆಯೋಗದ ಅನುಸಾರವಾಗಿ ದಲಿತ-ಹಿಂದುಳಿತ ವರ್ಗಗಳ ಬಹುಸಂಖ್ಯಾತರಿಗೆ ಮೀಸಲಾತಿ ನೀಡಿದಾಗ ಅಂಡುಸುಟ್ಟ ಬೆಕ್ಕಿನಂತೆ ಆಡಿದ ಜನವರ್ಗ ಯಾವುದಾಗಿತ್ತು? ಅದು ಬಹದೊಡ್ಡ ವರ್ಗವೋ ಕೇವಲ ಬ್ರಾಹ್ಮಣ ಜಾತಿಯೋ? ಇದೇ ಕಾರಣಕ್ಕೆ ರಾಜೀನಾಮೆ ನೀಡಿದ್ದ ಇಂಜಿನಿಯರ್ ಸರ್ ಎಂ ವಿಶ್ವೇಶ್ವರಯ್ಯ ಅವರ ತಲೆಯಲ್ಲಿದ್ದ ಜಾತಿಭೂತ ಯಾವುದಾಗಿತ್ತು? ಆದರೆ ಅತ್ಯಾಶ್ಚರ್ಯ ಎಂಬಂತೆ ಈಗ ಈ ಆರೆಸ್ಸೆಸ್ಸಿಗ ಮೀಸಲಾತಿಯ ಸಮರ್ಥನೆಗೆ ನಿಂತಿದ್ದಾನೆ ಎಂದರೆ ಅದು ಮನಪರಿವರ್ತನೆ? ಈಗ ನೋಡಿ. ಮೀಸಲಾತಿ ವಿರುದ್ಧವಾಗಿ ಇಡೀ ದೇಶವನ್ನು ಎತ್ತಿ ಕಟ್ಟುತ್ತಿದ ಶೇಕಡಾ ಮೂರ್ನಾಲ್ಕು ಶೇಕಡಾ ಇರುವ ಜನರಿಗೆ ಕಳೆದ ವರ್ಷದಿಂದ 10% ಮೀಸಲಾತಿ ಸಿಗತೊಡಗಿದೆ. ಇಷ್ಟೂ ವರ್ಷಗಳ ಕಾಲ ಮೀಸಲಾತಿ ಎಂದರೇ ಉರಿದು ಬೀಳುತ್ತಿದ್ದವರು ಈಗ ತಮ್ಮ ಜನಸಂಖ್ಯೆಗಿಂತಲೂ ಎರಡು ಮೂರು ಪಟ್ಟು ಮೀಸಲಾತಿ ಪಡೆದುಕೊಳ್ಳುತ್ತಿದ್ದಂತೆ ಮೀಸಲಾತಿಯನ್ನು ಕೊಂಡಾಡತೊಡಗಿದ್ದಾರೆ! ತಿಳಿಯಿತಲ್ಲ ಈ ಮನಪರಿವರ್ತನೆಯ ಹಿಂದಿನ ಹಕೀಕತ್ತು? ದೇಶದಲ್ಲಿ ನಡೆಯುವ ಮನಪರಿವರ್ತನೆಗಳ ಹಿಂದೆ ಅಡಗಿರುವ ಸ್ವಾರ್ಥವೇನು ಎಂದು ಅರಿಯದೇ ಹೋದರೆ ವೈದಿಕಶಾಹಿ ತೋಡುವ ಖೆಡ್ಡಾದಲ್ಲಿ ಬಿದ್ದು ಹೊರಳಾಡಬೇಕಾಗುತ್ತದೆ ಅಷ್ಟೇ.
ಈಗ ಮೀಸಲಾತಿಯನ್ನೂ, ಅಂಬೇಡ್ಕರ್ ಅವರನ್ನೂ ಹಾಡಿ ಹೊಗಳುತ್ತಿರುವ ಬಿ ಎಲ್ ಸಂತೋ಼ಷ್ ಮತ್ತು ಅವನ ಚೇಲಾ ಬಾಲಾಗಳಿಗೆ ನಾವು ಕೆಲವೊಂದಿಷ್ಟು ಪ್ರಶ್ನೆಗಳನ್ನು ಕೇಳೋಣ. ಉತ್ತರಿಸುವ ಪ್ರಾಮಾಣಿಕತೆ ತೋರುತ್ತಾರೋ ನೋಡೋಣ.
- ನವೆಂಬರ್ 24ರಂದು ನೀವು ಹಮ್ಮಿಕೊಂಡ ಸಂವಿಧಾನ ದಿನಾಚರಣೆಯ ವಾರದ ಮೊದಲು ನೀವು ಪ್ರಚುರಪಡಿಸಿದ ಭಿತ್ತಿಪತ್ರದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿತ್ರ ಇರಲಿಲ್ಲ. ಬದಲಾಗಿ ಸಂವಿಧಾನಕ್ಕೆ ಸಂಬಂಧವೇ ಇಲ್ಲದ ಶ್ಯಾಮ್ ಪ್ರಸಾದ್ ಮುಖರ್ಜಿಯ ಫೋಟೋ ಇತ್ತು. ಅಂಬೇಡ್ಕರ್ ವಾದಿಗಳು ನೀವು ಅಂಬೇಡ್ಕರ್ ಅವರಿಗೆ ಮಾಡಿದ ಅಪಮಾನದ ಬಗ್ಗೆ ಆಕ್ಷೇಪ ಎತ್ತಿದ ಕೂಡಲೇ ಬದಲಿಸಿದಿರಿ. ಈ ಮೊದಲು ಬಾಬಾಸಾಹೇಬರಿಗೆ ನೀವು ಮಾಡಿದ ಅಪಮಾನಕ್ಕೆ ನಿಜವಾದ ಕಾರಣ ಏನು?
- 1991ರಲ್ಲಿ ಮಂಡಲ್ ಆಯೋಗದ ವರದಿಯನ್ನು ವಿ ಪಿ ಸಿಂಗ್ ಜಾರಿಗೊಳಿಸಲು ಯತ್ನಿಸಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಿದ ನಂತರ ವಿ ಪಿ ಸಿಂಗ್ ಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂತೆಗೆದುಕೊಂಡಿತ್ತು. ನಂತರ ಇಡೀ ದೇಶದಾದ್ಯಂತ ಎಬಿವಿಪಿ ಮೂಲಕ ಮಂಡಲ್-ಕಮಂಡಲ್ ಎಂದು ಘೋಷಿಸಿ ವ್ಯಾಪಕ ಹಿಂಸೆಯನ್ನು ಬಿಜೆಪಿ ನಡೆಸಿತ್ತು. ಮೀಸಲಾತಿ ಎಂದರೆ ಮೇಲ್ಜಾತಿಗಳ ಪ್ರಾಯಶ್ಚಿತ್ತ ಎನ್ನುತ್ತಿರುವ ನೀವು ಈ ಹಿಂದೆ ನಡೆಸಿರುವ ಮೀಸಲಾತಿ ವಿರೋಧಿ ಹಿಂಸೆಗೂ ಪ್ರಾಯಶ್ಚಿತ್ತ ಪಟ್ಟುಕೊಳ್ಳುವಿರಾ?
- ಮೋಹನ್ ಭಾಗ್ವತ್ ಮೊನ್ನೆ ಮೊನ್ನೆಯಷ್ಟೇ ಮೀಸಲಾತಿ ಬಗ್ಗೆ ಚರ್ಚೆಯಾಗಬೇಕು ಎಂದ. ಎಲ್ಲಿಯವರೆಗೆ ಈ ದೇಶದಲ್ಲಿ ಅಸಮಾನತೆ, ವಂಚನೆ ಇರುತ್ತದೆಯೋ ಅಲ್ಲಿಯವರೆಗೂ ಮೀಸಲಾತಿಯ ಬೇಕೇ ಬೇಡವೇ ಎಂಬ ಚರ್ಚೆ ಅನಗತ್ಯ. ಆದರೆ ಚರ್ಚೆ ಬೇಕು ಎನ್ನುವು ಆರೆಸ್ಸೆಸ್ ಮುಖಂಡರಿಗೆ ಯಾವ ಪ್ರಾಯಶ್ಚಿತ್ತ ಮಾಡುತ್ತೀರಿ?
- ಮೀಸಲಾತಿ ಎಂಬುದು ಅಂಬೇಡ್ಕರ್ ತಮಗಾದ ಅಪಮಾನದ ಕಾರಣಕ್ಕೆ ಸಂವಿಧಾನದಲ್ಲಿ ಸೇರಿಸಿದ್ದು ಎಂದಿದ್ದೀರಿ. ಇದಕ್ಕಿಂತ ಅಸಂಬದ್ಧವಾದ ಬೇರಿಲ್ಲ. ಈ ದೇಶದ ಇತಿಹಾಸವನ್ನು ಸಮಗ್ರವಾಗಿ ಅಧ್ಯಯನ ಮಾಡಿ, ದೇಶದ ನಾನಾ ಜಾತಿ ವರ್ಗಗಳ ವಿಕಾಸವನ್ನು, ಅವು ತುಳಿತಕ್ಕೊಳಗಾದ ಬಗೆಯನ್ನು ದಾಖಲಿಸಿದ ಬೆರಳೆಣಿಕೆಯಷ್ಟು ವಿದ್ವಾಂಸರಲ್ಲಿ ಅಂಬೇಡ್ಕರ್ ಕೂಡಾ ಒಬ್ಬರು. ಸಂವಿಧಾನದಲ್ಲಿ ಮೀಸಲಾತಿ ಸೇರಿಸಲು ಸಮಾಜದ ಬಗ್ಗೆ ಅಂಬೇಡ್ಕರ್ ಅವರಿಗೆ ಇದ್ದ ಸಮಾಜದ ಮತ್ತು ಚರಿತ್ರೆಯ ಅವಗಾಹನೆ ಹಾಗೂ ಈ ದೇಶವನ್ನು ಸಮಾಜವಾದಿ ಹಾದಿಯಲ್ಲಿ ಕಟ್ಟಬೇಕು ಈ ಮೂಲಕ ಎಲ್ಲಾ ವಂಚಿತ ಸಮುದಾಯಗಳು ನ್ಯಾಯ ಪಡೆಯಬೇಕು ಎಂಬ ಅದಮ್ಯ ಆಶೆಯೇ ಪ್ರಮುಖ ಕಾರಣ. ಇದನ್ನು ಬೇಕೆಂದೇ ಮರೆಮಾಚುವ ಪ್ರಯತ್ನ ಮಾಡುತ್ತಿದ್ದೀರಲ್ಲವೇ?
- ಮೇಲ್ಜಾತಿಗಳಿಗೆ 10% ಮೀಸಲಾತಿ ಸಿಕ್ಕಿದ ಮೇಲೆ ಮೀಸಲಾತಿಯ ಬಗ್ಗೆ ವರಸೆಯನ್ನೇ ಬದಲಿಸಿಕೊಳ್ಳುತ್ತಿರುವ ನೀವು ದೇಶದ ಪ್ರಮುಖ ಉದ್ಯೋಗ ಕ್ಷೇತ್ರವಾದ ಖಾಸಗಿ ಕ್ಷೇತ್ರಕ್ಕೆ ಮೀಸಲಾತಿ ವಿಸ್ತರಣೆ ಬಗ್ಗೆ ನಿಮ್ಮ ಅಭಿಪ್ರಾಯ ಏನೆಂದು ಹೇಳಿ. ಖಾಸಗಿ ಕ್ಷೇತ್ರ ಹೇಗೂ ಪ್ರಮುಖವಾಗಿ ಮೇಲ್ಜಾತಿ “ಪ್ರತಿಭೆಗಳ” ಹಿಡಿತದಲ್ಲೇ ಇರೋದರಿಂದ ಅಲ್ಲಿ ಮೀಸಲಾತಿ ಬೇಡ ಎಂದು ನಿಮ್ಮ ಅಭಿಪ್ರಾಯವಾಗಿದ್ದರೆ ಸ್ಪಷ್ಟಪಡಿಸಿ. ಹೀಗಲ್ಲಾ ಖಾಸಗಿ ಕ್ಷೇತ್ರದಲ್ಲಿಯೂ ಮೇಲ್ಜಾತಿ ಜನರಿಗೆ ಪ್ರಾಯಶ್ಚಿತ್ತ ಬೇಕು ಎಂದು ನೀವು ಪ್ರಾಮಾಣಿಕವಾಗಿ ಒಪ್ಪುವುದೇ ಆದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಖಾಸಗಿ ರಂಗದಲ್ಲಿ ಮೀಸಲಾತಿ ಜಾರಿಗೆ ತಿರುವ ಒತ್ತಾಯವನ್ನು ಯಾವಾಗ ಹಾಕುತ್ತೀರಿ ತಿಳಿಸಿ.
- ಅಂಬೇಡ್ಕರ್ ಅವರನ್ನು ನೀವು ಅರ್ಥ ಮಾಡಿಕೊಳ್ಳಲು ಶುರು ಮಾಡಿದ್ದು ತೀರಾ ಇತ್ತೀಚೆಗೆ ಎಂದು ಹೇಳಿದ್ದೀರಿ. ಸಂತೋಷ. ಅಂಬೇಡ್ಕರ್ ಅವರು ಹಿಂದೂ ಧರ್ಮದ ಕುರಿತು ಖಚಿತ ನಿರ್ಧಾರಗಳಿಗೆ ಬಂದಿದ್ದರು. ಉದಾಹರಣೆಗೆ ಹಿಂದೂ ಧರ್ಮದಲ್ಲಿ ಪ್ರಜಾಪ್ರಭುತ್ವಕ್ಕೆ ಅವಕಾಶವಿಲ್ಲ. ಹಿಂದೂ ಧರ್ಮ ಜಾತಿಗಳಿಂದ ನಿರ್ಮಿಲ್ಪಟ್ಟ ಮೆಟ್ಟಿಲುಗಳಿಲ್ಲ ಉಪ್ಪರಿಗೆ ಮನೆ ಎಂದು ಹೇಳಿದ್ದರು. ಇಲ್ಲಿ ಜಾತಿಜಾತಿಗಳ ನಡುವೆ ಸಹೋದರತೆಗೆ ಅವಕಾಶವಿಲ್ಲ, ಸ್ವಾತಂತ್ರ್ಯ, ಸಮಾನತೆಗಳೂ ಇಲ್ಲ. ಹೀಗಾಗಿ ಹಿಂದೂ ಧರ್ಮದ ಈ ಚೌಕಟ್ಟಿನಿಂದ ಹೊರಬರದೇ ತಳಸಮುದಾಯಗಳಿಗೆ ಬಿಡುಗಡೆ ಇಲ್ಲ ಎಂದು ಖಚಿತವಾಗಿ ಹೇಳಿದ್ದರು. ಫಿಲಾಸಫಿ ಆಫ್ ಹಿಂದೂಯಿಸಂ ನಲ್ಲಿ ಹಿಂದೂ ಧರ್ಮ ಯಾವುದರ ತಳಹದಿಯ ಮೇಲೆ ನಿಂತಿದೆ ಎಂದು ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ ಅಂಬೇಡ್ಕರ್. ಹಿಂದೂ ಧರ್ಮದ ಕುರಿತ ಅಂಬೇಡ್ಕರ್ ಅವರ ಈ ಖಚಿತ ಮತ್ತು ದಿಟ್ಟ ಅಭಿಪ್ರಾಯಗಳ ಕುರಿತು ನಿಮ್ಮ ಖಚಿತ ಅಭಿಪ್ರಾಯವೇನು?
- ಹಿಂದೂ ರಾಷ್ಟ್ರದ ಸ್ಥಾಪನೆ ಈ ದೇಶದ ದಲಿತರಿಗೆ-ಶೂದ್ರರಿಗೆ, ಬಹುಜನರ ಪಾಲಿಗೆ ಕಟ್ಟುವ ಸಮಾಧಿ ಎಂಬುದು ಅಂಬೇಡ್ಕರ್ ಅವರ ಅಭಿಪ್ರಾಯವಾಗಿತ್ತು. ನೀವಿದನ್ನು ಒಪ್ಪುತ್ತೀರಾ?
- ಕಾಶ್ಮೀರದ ಕುರಿತಂತೆ ಅಂಬೇಡ್ಕರ್ 1951ರಲ್ಲಿ ಸ್ಪಷ್ಟವಾಗಿ ತಿಳಿಸುತ್ತಾ, ಕಾಶ್ಮೀರಿಗಳ ಜನಾಭಿಪ್ರಾಯ ಸಂಗ್ರಹಿಸುವುದೇ ಏಕೈಕ ಪರಿಹಾರ ಮಾರ್ಗ ಎಂದು ಹೇಳಿದ್ದರು. ಅಂಬೇಡ್ಕರ್ ಅವರು ಎಲ್ಲಿಯೂ ಆರ್ಟಿಕಲ್ 370 ರದ್ದಾಗಬೇಕು ಎಂದು ಹೇಳಿದ ದಾಖಲೆ ಇಲ್ಲ ಕಾಶ್ಮೀರ ಸಮಸ್ಯೆಗೆ ಅಂಬೇಡ್ಕರ್ ತಿಳಿಸಿದ್ದ ಪರಿಹಾರ ಮಾರ್ಗವನ್ನು ನೀವು ಒಪ್ಪಿಕೊಳ್ಳುತ್ತೀರಾ? ಸಾಧ್ಯವಿಲ್ಲ ಅಲ್ಲವೇ?
- ನಿಮ್ಮ ಆರೆಸ್ಸೆಸ್- ಬಿಜೆಪಿ ಕಾರ್ಯಕರ್ತರಿಗೆ ಅಂಬೇಡ್ಕರ್ ಅವರ “ಫಿಲಾಸಫಿ ಆಫ್ ಹಿಂದೂಯಿಸಂ” “ಆನ್ಹಿಲೇಶನ್ ಆಫ್ ಕ್ಯಾಸ್ಟ್” “ಬುದ್ಧ ಅಂಡ್ ಹಿಸ್ ದಮ್ಮ” ಇವುಗಳನ್ನು ಓದಿಸುವ ಧೈರ್ಯ ನಿಮಗಿದೆಯೇ? ಅಥವಾ ಕಾಂಗ್ರೆಸ್ ಬಗ್ಗೆ ಅಂಬೇಡ್ಕರ್ ಅವರಿಗಿದ್ದ ಅಸಮಾಧನವನ್ನು ಮಾತ್ರ ಸೆಲೆಕ್ಟಿವ್ ಆಗಿ ಉಣಬಡಿಸುತ್ತಾ ನಿಮ್ಮ ಅಜೆಂಡಾವನ್ನಷ್ಟೇ ಈಡೇರಿಸಿಕೊಳ್ಳುತ್ತೀರೋ?
ಈ ಪ್ರಶ್ನೆಗಳಿಗೆ ಬಿ ಎಲ್ ಸಂತೋ಼ಷ್ ಆಗಲೀ, ಕಾರ್ಪೊರೇಟ್ ಚೆಡ್ಡಿ ಮೋಹನ್ ದಾಸ್ ಪೈ ಆಗಲೀ ಇನ್ನಾರೇ ಆರೆಸ್ಸೆಸ್ ಪಂಡಿತರಾಗಲೀ ಪ್ರಾಮಾಣಿಕವಾಗಿ ಉತ್ತರಿಸುತ್ತಾರೆ ಎಂಬ ಭ್ರಮೆ ಇಲ್ಲ. ಆದರೆ ಇವರ ಬಂಡವಾಳ ಬಯಲು ಮಾಡಲು ಈ ಪ್ರಶ್ನೆಗಳ ಜೊತೆಗೆ ಇನ್ನಷ್ಟು ಇಂತದೇ ಪ್ರಶ್ನೆಗಳು ಇವರ ಮುಖಕ್ಕೆ ಹಿಡಿಯಬೇಕು.
ಒಂದು ಕಡೆಯಲ್ಲಿ ಮುಂದೊಮ್ಮೆ ಬಾಬಾಸಾಹೇಬರಂತೆಯೇ ನೊಂದು ಬೆಂದು ಛಲದಿಂದ ಓದುತ್ತಿದ್ದ, ಬದುಕಿದ್ದರೆ ಮುಂದೆ ಪ್ರಕಾಶಮಾನವಾಗಿದ್ದ ಬೆಳಗಲಿದ್ದ ರೋಹಿತ್ ವೇಮುಲನಂಹವರನ್ನು ಆತ್ಮಹ್ಯತ್ಯೆಗೆ ತಳ್ಳುವುದು, ನಂತರ ಅವನು ಭಯೋತ್ಪಾದಕ ಎಂಬಂತೆ ಬಿಂಬಿಸುವುದು ಹಾಗೆಯೇ ಡಾ. ಆನಂದ್ ತೇಲ್ತುಂಬ್ಡೆ, ಡಾ. ಸತ್ಯನಾರಾಯಣ ಅವರಂತಹ ಅಂಬೇಡ್ಕರ್ ವಾದಿ ವಿದ್ವಾಂಸರನ್ನು ಸುಳ್ಳು ಕೇಸುಗಳಲ್ಲಿ ಫಿಟ್ ಮಾಡುವುದು, ಅವರನ್ನು ಅರ್ಬನ್ ನಕ್ಸಲ್ ಎಂದು ಹಣೆಪಟ್ಟಿ ಹಚ್ಚುವುದು, ಈ ಮೂಲಕ ಇಂತಹ ಅಂಬೇಡ್ಕರ್ ವಾದಿ ಮೇಧಾವಿಗಳು ದೇಶದ ತಳಸಮುದಾಯಗಳಲ್ಲಿ ಅಂಬೇಡ್ಕರ್ ಚಿಂತನೆಗಳನ್ನು ಬಿತ್ತುತ್ತಿರುವುದನ್ನು ತಡೆಯುವ, ಧ್ವನಿಗಳನ್ನು ಹತ್ತಿಕ್ಕುವ ದಂಡೋಪಾಯವನ್ನು ಬಳಸುತ್ತಲೇ ಮತ್ತೊಂದು ಕಡೆಯಲ್ಲಿ ಉಪಾಯದಿಂದ, ನಯವಂಚಕತನದಿಂದ, ದುಡ್ಡು ಮತ್ತು ಹುದ್ದೆಗಳ ಆಮಿಷದ ಮೂಲಕ ದಲಿತ ಮುಖಂಡರನ್ನು ಆಪೋಶನ ತೆಗೆದುಕೊಳ್ಳುವ “ಸಾಮ-ದಾನ” ಇಲ್ಲವೇ ತಳಸಮುದಾಯಗಳನ್ನು ಒಬ್ಬರ ಮೇಲೆ ಮತ್ತೊಬ್ಬರನ್ನು ಎತ್ತಿಕಟ್ಟಿ ನಡೆಡಸುವ “ಭೇದ” ನೀತಿಯನ್ನು ಪ್ರಯೋಗಿಸಿ ವೈದಿಕ ಹಿತಾಸಕ್ತಿ ಕಾಪಾಡುವುದು… ಇದೇ ಈ ದೇಶ ಸಾವಿರಾರು ವರ್ಷಗಳಿಂದ ಮತ್ತೆ ಮತ್ತೆ ಮೋಸಹೋಗಲು ಕಾರಣವಾಗಿರುವುದು.
ಹೀಗಾಗಿಯೇ ಅಂಬೇಡ್ಕರ್ ಅವರನ್ನೇ ಆಪೋಶನ ತೆಗೆದುಕೊಳ್ಳುತ್ತಿರುವಾಗ ಅಂಬೇಡ್ಕರ್ ಅವರ ಮೇಲಿನ ಅಭಿಮಾನ ಪ್ರೀತಿ ಮಾತ್ರ ಸಾಲುವುದಿಲ್ಲ. ವಂಚಕ ಜಾಲಗಳು ಹೊಂಚು ಹಾಕುತ್ತಿರುವಾಗ ಅಂಬೇಡ್ಕರ್ ರಥವನ್ನು ಮುಂದಕ್ಕೆ ಒಯ್ಯುವುದು ಮತ್ತೂ ಕಠಿಣವಾಗಿದೆ ಎಂಬ ಅರಿವಿನಲ್ಲಿ ಅಂಬೇಡ್ಕರ್ ಅವರು ಕನಸಿದ್ದ ಭಾರತವನ್ನು ನಾವೂ ಕನಸಬೇಕಿದೆ, ಅಂಬೇಡ್ಕರ್ ಆಶಿಸಿದ್ದ ಸಮತೆ-ಕರುಣೆ-ಪ್ರಜ್ಞೆಗಳು ನಮ್ಮೊಳಗೆ ಇಳಿಯಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ2 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ


