Connect with us

ದಿನದ ಸುದ್ದಿ

ಯಾರ ವಿರುದ್ಧ ದನಿ ಎತ್ತಬೇಕು ಸಂಸದರೇ..?

Published

on

  • ನಾ ದಿವಾಕರ

ಮುಂಬಯಿಯಲ್ಲಿರುವ ಡಾ ಬಿ ಆರ್ ಅಂಬೇಡ್ಕರ್ ಅವರ ರಾಜಗೃಹದ ಮೇಲೆ ಇತ್ತೀಚೆಗೆ ನಡೆದ ಆಕ್ರಮಣ ಬದಲಾಗುತ್ತಿರುವ ಭಾರತದ ಸೂಚನೆಯನ್ನು ನೀಡುತ್ತಿದೆ. ಈ ಕುರಿತು ಸ್ವಲ್ಪ ತಡವಾದರೂ ಮೌನ ಮುರಿದಿರುವ ದಲಿತ ಪ್ರತಿನಿಧಿಗಳು ತಮ್ಮ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸಂಸದರಾದ ಸನ್ಮಾನ್ಯ ಶ್ರೀನಿವಾಸ ಪ್ರಸಾದ್ ಅವರು ಈ ದಾಳಿಯನ್ನು ಖಂಡಿಸಿದ್ದು “ ಅಂಬೇಡ್ಕರ್ ಮನೆ ಮೇಲೆ ಕಲ್ಲು ತೂರಿ ವಿಧ್ವಂಸಕ ಕೃತ್ಯ ಎಸಗಿರುವ ವಿಚಾರದಲ್ಲಿ ದಲಿತೇತರ ರಾಜಕಾರಣಿಗಳು ಮತ್ತು ಸಂಘ ಸಂಸ್ಥೆಗಳು ದನಿ ಎತ್ತದಿರುವುದು ಶೋಚನೀಯ ” (ಪ್ರವಾ 14-7-20) ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ದಲಿತರ ಮೇಲೆ ಯಾವುದೇ ರೀತಿಯ ದಾಳಿ ನಡೆದಾಗಲೂ ಈ ವಿಷಾದ ಇದ್ದೇ ಇರುತ್ತದೆ.

ಊನ, ಖೈರ್ಲಾಂಜಿ, ಕಂಬಾಲಪಲ್ಲಿ ನಡೆದಾಗಲೇ ಎಷ್ಟೋ ದಲಿತೇತರ ಸಂಘಟನೆಗಳು ಮೌನಕ್ಕೆ ಶರಣಾಗಿದ್ದವು. ಇಲ್ಲಿ ಯಾರು ಪ್ರತಿಭಟಿಸಬೇಕು ಎನ್ನುವುದಕ್ಕಿಂತಲೂ ಯಾವ ಶಕ್ತಿಗಳ ವಿರುದ್ಧ ದನಿ ಎತ್ತಬೇಕು ಎನ್ನುವುದು ಮುಖ್ಯವಾಗುತ್ತದೆ.

ಇದೇ ಪತ್ರಿಕಾಗೋಷ್ಠಿಯಲ್ಲಿ ಮಾನ್ಯ ಶ್ರೀನಿವಾಸ್ ಪ್ರಸಾದ್ ಅವರು ಈ ಕೃತ್ಯದ ಹಿಂದೆ ಕೆಲವು “ಕಿಡಿಗೇಡಿಗಳನ್ನು” ಗುರುತಿಸಿದ್ದಾರೆ. ಹಾಗಾಗಿ ದಲಿತ ಸಂಘಟನೆಗಳು ಪುರಾವೆ ಇಲ್ಲದೆ ಯಾರ ಮೇಲೂ ಆರೋಪ ಮಾಡಕೂಡದು, ರಾಜಕೀಯ ಬೆರೆಸಬಾರದು ಎಂದೂ ಹೇಳಿದ್ದಾರೆ. ಇದು ಸರಿಯೇ. ಈ ದೇಶದಲ್ಲಿ ಶಂಕಿತರನ್ನು ಗುರುತಿಸಲೂ ಅಸ್ಮಿತೆಗಳು ಮುಖ್ಯವಾಗುತ್ತವೆ.

ರಾಜಗೃಹದ ಮೇಲೆ ನಡೆದ ದಾಳಿಯಲ್ಲಿ ಅಲ್ಪಸಂಖ್ಯಾತರು ಯಾರಾದರೂ ಇದ್ದಿದ್ದರೆ “ ಪುರಾವೆ ಇಲ್ಲದೆ ಆರೋಪ ಮಾಡಕೂಡದು” ಎನ್ನುವ ಉಪದೇಶ ಬರುತ್ತಿರಲಿಲ್ಲ. ಶಂಕಿತರು, ಉಗ್ರರು, ಕಿಡಿಗೇಡಿಗಳು, ದುಷ್ಕರ್ಮಿಗಳು, ಮಾನಸಿಕ ಅಸ್ವಸ್ಥರು, ತಿಳಿಗೇಡಿಗಳು ಈ ಎಲ್ಲ ಪದಗಳೂ ಸಾಪೇಕ್ಷ ನೆಲೆಯಲ್ಲಿ ರಾಜಕೀಯ ಅನುಕೂಲತೆಗೆ ತಕ್ಕಂತೆ ಬಳಕೆಯಾಗುತ್ತಿರುವುದನ್ನು ದಶಕಗಳಿಂದ ಗಮನಿಸುತ್ತಲೇ ಬಂದಿದ್ದೇವೆ.

ಇರಲಿ, ರಾಜಗೃಹದ ಮೇಲೆ ದಾಳಿ ನಡೆಸಿದವರು ಯಾರು ಎನ್ನುವುದು ವ್ಯಕ್ತಿಗತ ಪ್ರಶ್ನೆ. ಅಪರಾಧಿಗಳಿಗೆ ಶಿಕ್ಷೆಯಾಗುವುದೋ ಇಲ್ಲವೋ ಕಾದು ನೋಡೋಣ. ಆದರೆ ರಾಜಗೃಹದ ಘಟನೆ ಏಕಾಏಕಿ ನಡೆದ ವಿಕ್ಷಿಪ್ತ ಘಟನೆ ಅಲ್ಲ ಎನ್ನುವುದು ಸಂಸದರ ಗಮನಕ್ಕೆ ಬರಬೇಕಿತ್ತಲ್ಲವೇ ? ದಲಿತೇತರ ರಾಜಕಾರಣಿಗಳು, ಸಂಘಟನೆಗಳು ಈ ಘಟನೆಯನ್ನು ಖಂಡಿಸಿಲ್ಲ , ನಿಜ.

ಇದೇನೂ ಅಚ್ಚರಿಯ ವಿಚಾರ ಅಲ್ಲ. ರಾಜಗೃಹ ಬಾಬ್ರಿ ಮಸೀದಿಯಂತೆ, ರಾಮಮಂದಿರಂತೆ ಮತಗಳಿಕೆಯ ಸ್ಥಾವರ ಅಲ್ಲ. ಅದು ದಲಿತ ಸಮುದಾಯದ ಅಸ್ಮಿತೆಯನ್ನು ಬಿಂಬಿಸುವ ಸ್ಥಾವರ. ಈ ಅಸ್ಮಿತೆಯ ಮೇಲೆ ದಾಳಿ ನಡೆದಾಗ ದಲಿತ ರಾಜಕಾರಣಿಗಳಾದರೂ ಎಲ್ಲಿದ್ದಾರೆ ? ಕರ್ನಾಟಕದ ದಲಿತ ಸಂಸದರ ಮತ್ತು ಶಾಸಕರ ಒಕ್ಕೊರಲ ದನಿ ಏಕೆ ಕೇಳಿಸಿಯೇ ಇಲ್ಲ.

ಈ ದಾಳಿ ಏಕೆ ನಡೆದಿದೆ, ಅಂಬೇಡ್ಕರ್, ಪೆರಿಯಾರ್ ಮೇಲೆ ಈ ರೀತಿಯ ದಾಳಿ ಏಕೆ ನಡೆಯುತ್ತಿದೆ ಎನ್ನುವುದು ನುರಿತ ರಾಜಕಾರಣಿಯಾದ ಮಾನ್ಯ ಶ್ರೀನಿವಾಸಪ್ರಸಾದ್ ಅವರಿಗೆ ತಿಳಿದಿರಬೇಕಲ್ಲವೇ ? ಈ ದೇಶದ ಮತೀಯ ಮೂಲಭೂತವಾದಿಗಳಿಗೆ ಪ್ರೇರಣೆ ನೀಡುವ ಒಂದು ಸಿದ್ಧಾಂತ ಮತ್ತು ತತ್ವವನ್ನು ಅಪ್ಪಿಕೊಂಡು, ಈ ಮತೀಯ ಶಕ್ತಿಗಳು ನಿರಂತರವಾಗಿ ಭಾರತದ ಶೋಷಿತ, ದಮನಿತ ಜನಸಮುದಾಯಗಳ ಮೇಲೆ ನಡೆಸುತ್ತಿರುವ ದಾಳಿಯನ್ನು “ಕಿಡಿಗೇಡಿಗಳ” ಕೃತ್ಯ ಎಂದು ಬಣ್ಣಿಸುವುದರ ಔಚಿತ್ಯವನ್ನು ಪ್ರಶ್ನಿಸಲೇಬೇಕಾಗುತ್ತದೆ.

ರಾಜಗೃಹದ ಮೇಲಿನ ದಾಳಿಗೂ, ತಮಿಳುನಾಡಿನಲ್ಲಿ ಪೆರಿಯಾರ್ ಅಂಬೇಡ್ಕರ್ ಗ್ರಂಥಾಲಯದ ಮೇಲೆ ನಡೆದ ದಾಳಿಗೂ, ಹಲವೆಡೆ ಅಂಬೇಡ್ಕರ್ ಪ್ರತಿಮೆಗಳ ಮೇಲೆ ನಡೆಯುತ್ತಿರುವ ದಾಳಿಗೂ ಮತ್ತು ಅಂಬೇಡ್ಕರ್ ಅವರ ಸಾಂವಿಧಾನಿಕ ಮೌಲ್ಯಗಳ ವಿರುದ್ಧ ಆಡಳಿತ ನೀತಿಗಳನ್ನು ಜಾರಿಗೊಳಿಸುತ್ತಿರುವುದಕ್ಕೂ ಪರಸ್ಪರ ಸಂಬಂಧ ಇರುವುದನ್ನು ಮಾನ್ಯ ಶ್ರೀನಿವಾಸ ಪ್ರಸಾದ್ ಅವರಿಗೆ ತಿಳಿಸಿ ಹೇಳಬೇಕಿಲ್ಲ. ಅಲ್ಲವೇ ?

ತಮ್ಮ ಅಂತರಂಗದ ಅವ್ಯಕ್ತ ಭಾವನೆಯನ್ನು ರಾಜಕೀಯ ಅನಿವಾರ್ಯಗಳಿಂದ ಅದುಮಿಟ್ಟು ಮಾತನಾಡುವುದು ಹಿರಿಯ ನಾಯಕರಿಗೆ ಶೋಭೆ ತರುವಂತಹುದಲ್ಲ . ಅಂಬೇಡ್ಕರ್ ಆರಾಧನೆಗೊಳಗಾದಷ್ಟೇ ದಾಳಿಗೂ ಒಳಗಾಗುತ್ತಿರುವುದನ್ನು ಕಳೆದ ಹಲವು ದಶಕಗಳಿಂದ ನೋಡುತ್ತಲೇ ಇದ್ದೇವೆ.

ಪ್ರತಿಯೊಬ್ಬ ದಲಿತ ವ್ಯಕ್ತಿಯ ಮೇಲೆ ನಡೆಯುವ ದೌರ್ಜನ್ಯ, ಅತ್ಯಾಚಾರ, ಹಲ್ಲೆ, ಆಕ್ರಮಣವೂ ಸಹ ಅಂಬೇಡ್ಕರ್ ಪ್ರತಿಪಾದಿಸಿದ ದಲಿತ ಅಸ್ಮಿತೆಯ ಮೇಲಿನ ದಾಳಿಯೇ ಅಲ್ಲವೇ ? ಇಂತಹ ಅಮಾನುಷ ದಾಳಿಗಳಿಗೆ ದಲಿತ ರಾಜಕಾರಣಿಗಳು ಹೇಗೆ ಸ್ಪಂದಿಸಿದ್ದಾರೆ ? ಇತ್ತೀಚಿನ ಇತಿಹಾಸದ ಪುಟಗಳನ್ನು ತಿರುವಿಹಾಕಿದರೆ ನಿರಾಸೆ ಮೂಡುತ್ತದೆ. ಅಧಿಕಾರ ರಾಜಕಾರಣ ಮತ್ತು ರಾಜಕೀಯ ಅವಕಾಶವಾದ, ಅಸ್ಮಿತೆಗಳನ್ನು ನುಂಗಿ ವ್ಯಕ್ತಿಗತ ಅಸ್ತಿತ್ವವನ್ನು ಕಾಪಾಡಿಕೊಳ್ಳುವ ನೆಲೆಗಳಾಗಿ ರೂಪುಗೊಂಡು ದಶಕಗಳೇ ಕಳೆದಿವೆ.

ಈ ರಾಜಕಾರಣದ ರಾಡಿಯಲ್ಲಿ ನಿಂತು ವಾಸ್ತವಕ್ಕೆ ಬೆನ್ನು ತಿರುಗಿಸಿ ಅನುಕಂಪದ ಮಾತುಗಳನ್ನಾಡುವುದು ಬೇಕಿಲ್ಲ. ಅಂಬೇಡ್ಕರ್ ಅವರಿಗಾಗಲೀ, ದಲಿತ ಸಮುದಾಯಗಳಿಗಾಗಲೀ ಅನುಕಂಪ, ಮರುಕ ಅಗತ್ಯವಿಲ್ಲ. ಇದು ಶತಮಾನಗಳಿಂದಲೂ ವ್ಯಕ್ತವಾಗುತ್ತಲೇ ಇದೆ. ಈಗ ಬೇಕಿರುವುದು ಸಾಮಾಜಿಕ ಘನತೆ.

ಅಂಬೇಡ್ಕರ್ ಅವರನ್ನು ಪ್ರತಿನಿಧಿಸುವ ಸ್ಥಾವರಗಳ ಮೇಲಿನ ದಾಳಿಗಳು ಈ ಘನತೆಯನ್ನು ಪ್ರಶ್ನಿಸುವ ಒಂದು ವಿಧಾನ ಎನ್ನುವುದನ್ನು ಹೇಳಬೇಕಿಲ್ಲ. ಇದು ಅಸ್ಮಿತೆಯ ಪ್ರಶ್ನೆ. ಅಸ್ತಿತ್ವದ ಪ್ರಶ್ನೆ. ದಲಿತ ಅಸ್ಮಿತೆಯನ್ನು ನುಂಗಿಹಾಕಿ ತನ್ನದೇ ಆದ ಸಾಮ್ರಾಜ್ಯವನ್ನು ನಿರ್ಮಿಸಲು ಸಜ್ಜಾಗುತ್ತಿರುವ ಮತೀಯ ಶಕ್ತಿಗಳ ಮಡಿಲಲ್ಲಿ ಕುಳಿತು ನ್ಯಾಯ ಕೇಳುವುದು, ತೋಳದ ಬೆನ್ನ ಮೇಲೇರಿ ಸಿಂಹದ ಬಳಿ ನ್ಯಾಯ ಕೇಳಿದಂತಾಗುವುದಿಲ್ಲವೇ ? ಸಂಸದರೇ ಯೋಚಿಸಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending