ಬಹಿರಂಗ
ಸಂವಿಧಾನ ಸಭೆಯಲ್ಲಿ ಅಂಬೇಡ್ಕರರು ಮಾಡಿದ ಸಮಾರೋಪ ಭಾಷಣ
ಭಾರತದ ಸ್ವಾತಂತ್ರ್ಯಕ್ಕೆ ಏನಾಗಲಿದೆ? 26ನೇ ಜನವರಿ 1950ರಂದು, ಭಾರತವು ಸಂಪೂರ್ಣ ಸ್ವತಂತ್ರ ರಾಷ್ಟ್ರವಾಗಲಿದೆ. ಆದರೆ ಅದರ ಸ್ವಾತಂತ್ರ್ಯಕ್ಕೆ ಏನಾಗಲಿದೆ? ಅದು ತನ್ನ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲಿದೆಯೇ? ಅಥವಾ ಅದು ತನ್ನ ಸ್ವಾತಂತ್ರ್ಯವನ್ನು ಮತ್ತೊಮ್ಮೆ ಕಳೆದುಕೊಳ್ಳಲಿದೆಯೇ? ಇದು ನನ್ನ ಮನಸ್ಸಿನಲ್ಲಿ ಮೂಡಿದ ಮೊದಲ ವಿಷಯವಾಗಿರುತ್ತದೆ.
ಭಾರತವು ಹಿಂದೆಂದೂ ಸ್ವತಂತ್ರವಾಗಿರಲಿಲ್ಲವೆಂದು ಇದರ ಅರ್ಥವಲ್ಲ. ಅದು ತನ್ನ ಸ್ವಾತಂತ್ರ್ಯವನ್ನು ಮಧ್ಯೆ ಕಳೆದುಕೊಂಡಿತ್ತು. ಅದು ಎರಡನೆಯ ಬಾರಿಗೆ ತನ್ನ ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತದೆಯೇ?
ಈ ಆಲೋಚನೆಯೇ ಭವಿಷ್ಯದ ಬಗ್ಗೆ ನನ್ನನ್ನು ಕಳವಳಗೊಳ್ಳು ವಂತೆ ಮಾಡಿದೆ. ಭಾರತವು ತನ್ನ ಸ್ವಾತಂತ್ರ್ಯವನ್ನು ಹಿಂದೊಮ್ಮೆ ಕಳೆದುಕೊಂಡಿತ್ತೆಂಬ ಸಂಗತಿಯು ನನ್ನ ಮನಸ್ಸಿನ ಕ್ಷೋಭೆಗೆ ಕಾರಣ. ತನ್ನವರದೇ ಆದ ವಿಶ್ವಾಸಘಾತುಕದಿಂದ ಹಾಗೂ ದೇಶದ್ರೋಹಿಗಳಿಂದ ಸ್ವಾತಂತ್ರ್ಯವನ್ನು ಕಳೆದುಕೊಂಡಿತು ಎಂಬುವುದು ನನ್ನ ಮನಸ್ಸಿನ ಕ್ಷೋಭೆಗೆ ಮುಖ್ಯ ಕಾರಣವಾಗಿದೆ.
ಸಿಂಧ್ ಪ್ರಾಂತ್ಯದ ಮೇಲೆ ಮೊಹಮ್ಮದ್ ಬಿನ್ ಖಾಸಿಂ ದಂಡೆತ್ತಿ ಬಂದಾಗ ಅವನ ವಿರುದ್ಧ ಯುದ್ಧ ಘೋಷಣೆ ಮಾಡಬೇಕಿದ್ದ ಧಾರ್ ಅರಸನ ಸೈನಿಕ ಕಮಾಂಡರುಗಳು ಮೊಹಮದ್ ಬಿನ್ ಖಾಸಿಂ ಕಡೆಯ ಏಜೆಂಟರುಗಳು ಕೊಟ್ಟ ಲಂಚವನ್ನು ಸ್ವೀಕರಿಸಿ ರಾಜನ ಪರವಾಗಿ ಯುದ್ಧ ಮಾಡದೆ ಹೋದ ಉದಾಹರಣೆ ನನ್ನ ಮುಂದೆ ಇದೆ. ಭಾರತದ ಮೇಲೆ ಯುದ್ಧ ಮಾಡಲು ಮೊಹಮ್ಮದ್ ಘೋರಿ ಯನ್ನು ಭಾರತೀಯನೇ ಆಗಿದ್ದ ಜೈಚಂದರ್ ಎಂಬುವವನು ಸ್ವಾಗತಿ ಸಿದ್ದು, ಮತ್ತು ಪೃಥ್ವಿರಾಜನ ವಿರುದ್ಧ ಯುದ್ಧ ಮಾಡುವಂತೆ ಪ್ರೇರೇಪಿ ಸಿದ್ದು ಮತ್ತು ಆ ಯುದ್ಧದಲ್ಲಿ ತಾನು ಹಾಗೂ ಸೋಲಂಕಿಯ ರಾಜರು ಗಳು ಸಹಾಯ ಮಾಡುವುದಾಗಿ ಹೇಳಿದಂತಹ ಉದಾಹರಣೆಗಳು ನನ್ನ ಮುಂದೆ ಇವೆ.
ಶಿವಾಜಿ ಮಹಾರಾಜನು ಹಿಂದೂಗಳ ವಿಮೋಚನೆ ಗಾಗಿ ಯುದ್ಧ ಮಾಡುತ್ತಿದ್ದಾಗ, ಇತರೆ ಮರಾಠಾ ರಾಜರುಗಳು ಮತ್ತು ರಜಪೂತ್ ರಾಜರುಗಳು ಮೊಘಲ್ ಚಕ್ರವರ್ತಿಗಳ ಪರವಾಗಿ ಯುದ್ಧ ಮಾಡುತ್ತಿದ್ದರು. ಬ್ರಿಟಿಷರು ಸಿಖ್ ರಾಜರುಗಳ ಆಡಳಿತವನ್ನು ಧ್ವಂಸ ಮಾಡಬೇಕೆಂದು ಪ್ರಯತ್ನಿಸುತ್ತಿದ್ದಾಗ, ಸಿಖ್ ರಾಜರುಗಳ ಸೇನೆಯ ಮುಖ್ಯ ಕಮಾಂಡರ್ ಆದ ಗುಲಾಬ್ಸಿಂಗನು ಪ್ರೇಕ್ಷಕನಂತೆ ಮೌನ ವಹಿಸಿ ಕುಳಿತಿದ್ದನು. ಅವನು ಸಿಖ್ ಸಾಮ್ರಾಜ್ಯದ ರಕ್ಷಣೆಗಾಗಿ ಕಿಂಚಿತ್ತೂ ಸಹಾಯ ಮಾಡಲಿಲ್ಲ.
1857ರಲ್ಲಿ ಭಾರತದಾದ್ಯಂತ, ಬ್ರಿಟೀಷರ ವಿರುದ್ಧ, ಸ್ವಾತಂತ್ರ್ಯಕ್ಕಾಗಿ ಯುದ್ಧವನ್ನು ಘೋಸಿದಾಗ, ಸಿಖ್ ಸಮುದಾಯ ಆ ಘಟನೆಯನ್ನು ಕೇವಲ ಪ್ರೇಕ್ಷಕರಂತೆ ನಿಂತು ನೋಡಿದ ಉದಾಹರಣೆ ನನ್ನ ಮುಂದೆ ಇದೆ.
ಇತಿಹಾಸ ಮರುಕಳಿಸುತ್ತದೆಯೇ? ಈ ವಿಷಯವೇ ನನ್ನ ಕಳವಳಕ್ಕೆ ಮುಖ್ಯ ಕಾರಣವಾಗಿದೆ. ನಮ್ಮ ಹಿಂದಿನ ವೈರಿಗಳಾದ ಜಾತಿ-ಪಂಗಡ ಗಳ ಜೊತೆಗೆ ಇನ್ನು ಮುಂದೆ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ಪಂಗಡಗಳು ಸೇರಿಕೊಳ್ಳಲಿವೆ. ಭಾರತೀಯರು ತಮ್ಮ ಜಾತಿ, ಪಂಗಡಗ ಳನ್ನು ಬದಿಗೊತ್ತಿ ರಾಷ್ಟ್ರ ಮುಖ್ಯ ಎನ್ನುವರೋ, ಅಥವಾ ರಾಷ್ಟ್ರವನ್ನು ಬದಿಗೊತ್ತಿ ಜಾತಿ-ಪಂಗಡಗಳು ಮುಖ್ಯ ಎನ್ನುವರೋ, ನನಗೆ ಗೊತ್ತಿಲ್ಲ. ಆದರೆ ಇಷ್ಟಂತೂ ಸತ್ಯ. ದೇಶದಲ್ಲಿನ ರಾಜಕೀಯ ಪಕ್ಷಗಳು ಜಾತಿ ಪಂಗಡಗಳನ್ನೇ ಪ್ರಧಾನವಾಗಿ ಮಾಡಿಕೊಂಡರೆ ದೇಶದ ಸ್ವಾತಂತ್ರ್ಯಕ್ಕೆ ಗಂಡಾಂತರ ಒದಗುತ್ತದೆ ಮತ್ತು ನಮ್ಮ ಸ್ವಾತಂತ್ರ್ಯವನ್ನು ಎರಡನೆಯ ಬಾರಿಗೆ ಮತ್ತು ಶಾಶ್ವತವಾಗಿ ಕಳೆದುಕೊಳ್ಳುವ ಪ್ರಸಂಗ ಒದಗಬಹುದು.
ಇಂತಹ ಸಂಭಾವ್ಯ ಘಟನೆಯ ವಿರುದ್ಧ ನಾವು ದೃಢಸಂಕಲ್ಪದಿಂದ ಎಚ್ಚರ ವಹಿಸಬೇಕು. ನಮ್ಮ ಕಟ್ಟ ಕಡೆಯ ರಕ್ತದ ತೊಟ್ಟನ್ನು ಹರಿಸಿಯಾ ದರೂ, ದೇಶದ ಸ್ವಾತಂತ್ರ್ಯವನ್ನು ರಕ್ಷಿಸುತ್ತೇವೆ, ಎಂದು ನಾವು ಪ್ರತಿಜ್ಞೆಯನ್ನು ಕೈಗೊಳ್ಳಬೇಕಿದೆ.
26 ನೇ ಜನವರಿ 1950ರಂದು ಭಾರತವು ಸ್ವತಂತ್ರ ಗಣರಾಜ್ಯ ವಾಗಲಿದೆ. ಅಂದರೆ ಅದರ ಅರ್ಥ, ಆ ದಿನದಿಂದ ಭಾರತವು ತನ್ನ ಜನತೆುಂದ, ತನ್ನ ಜನರಿಗಾಗಿ, ತನ್ನ ಜನರಿಗೋಸ್ಕರ ಸರ್ಕಾರವನ್ನು ರೂಪಿಸಿಕೊಳ್ಳಲಿದೆ. ಇದೇ ವಿಷಯ ಮತ್ತೊಮ್ಮೆ ನನ್ನ ಮನಸ್ಸಿಗೆ ಬರುತ್ತಿದೆ. ಸಂವಿಧಾನವು ತನ್ನ ಪ್ರಜಾಸತ್ತಾತ್ಮಕ ಲಕ್ಷಣಗಳನ್ನು ಉಳಿಸಿ ಕೊಳ್ಳುತ್ತದೆಯೇ? ಅದು ಉಳಿಸಿಕೊಳ್ಳುತ್ತದೆಯೇ ಅಥವಾ ಮತ್ತೊಮ್ಮೆ ಕಳೆದುಕೊಳ್ಳುತ್ತದೆಯೇ? ಈ ಎರಡನೆಯ ವಿಚಾರವು ನನ್ನ ಮೊದಲನೆಯ ಪ್ರಶ್ನೆಯಷ್ಟೇ ನನಗೆ ಕಳವಳಕಾರಿಯಾಗಿದೆ.
ಭಾರತಕ್ಕೆ `ಪ್ರಜಾಪ್ರಭುತ್ವ’ ಎಂದರೆ ಏನು ಎಂಬುದು ತಿಳಿದಿರಲಿಲ್ಲ ಎಂದು ಹೇಳಲು ಬರುವುದಿಲ್ಲ. ಭಾರತವು ಒಂದಾನೊಂದು ಕಾಲಕ್ಕೆ ಅನೇಕ ಗಣರಾಜ್ಯಗಳನ್ನು ಹಾಗೂ ಅನೇಕ ರಾಜ-ಮಹಾರಾಜರುಗಳನ್ನು ಹೊಂದಿತ್ತು. ಇಂತಹ ಮಹಾರಾಜರುಗಳಲ್ಲಿ ಕೆಲವರು ಚುನಾಯಿತರಾಗು ತ್ತಿದ್ದರು ಅಥವಾ ಅವರು ಸೀಮಿತ ಅಧಿಕಾರ ಹೊಂದಿರುತ್ತಿದ್ದರು. ಆದರೆ ಅವರು ಎಂದೂ ನಿರಂಕುಶ ಪ್ರಭುಗಳಾಗಿರಲಿಲ್ಲ. ಭಾರತಕ್ಕೆ ಸಂಸತ್ತುಗಳು ಅಥವಾ ಸಂಸತ್ತುಗಳಲ್ಲಿ ನಡೆಯಬೇಕಾದ ವಿಧಿ ವಿಧಾನ ಗಳು ತಿಳಿದಿರಲಿಲ್ಲ ಎಂದಲ್ಲ.
ಬೌದ್ಧ ಭಿಕ್ಷು ಸಂಘಗಳ ರಚನೆಯನ್ನು ಅಧ್ಯಯನ ಮಾಡಿದರೆ, ನಮ್ಮಲ್ಲಿ ಸಂಘಗಳಿಗೆ ಪರ್ಯಾಯವಾಗಿ ಸಂಸತ್ತುಗಳು ಇದ್ದವು ಮತ್ತು ಅಂತಹ ಸಂಘಗಳು ಎಂದರೆ ಸಂಸತ್ತುಗಳೇ ಅಲ್ಲದೆ ಬೇರೆ ಏನೂ ಅಲ್ಲ ಎಂಬುದು ವೇದ್ಯವಾಗುತ್ತದೆ. ಅಂತಹ ಸಂಘಗಳು ಆಧುನಿಕ ಯುಗದಲ್ಲಿನ ಸಂಸತ್ತುಗಳು ಯಾವ ವಿಧಿ-ವಿಧಾನಗಳನ್ನು ಅನುಸರಿಸಿಕೊಂಡು ರಚನೆಯಾಗಿವೆಯೋ ಅಂತಹ ವಿಧಿ-ವಿಧಾನಗಳ ಮೇಲೆ ಸಂಘಗಳು ಕಾರ್ಯ ನಿರ್ವಹಿಸುತ್ತಿದ್ದವು. ಅವುಗಳಲ್ಲಿ ಆಸನಗಳ ಏರ್ಪಾಡು, ನಿರ್ಣಯಗಳನ್ನು ಕೈಗೊಳ್ಳಲು ಇದ್ದ ನಿಯಮಗಳು, ಕೋರಮ್, ಸಚೇತಕರು, ಮತಗಳ ಎಣಿಕೆ, ಮತ ಚೀಟಿಗಳ ಮೂಲಕ ಮತದಾನ, ಛೀಮಾರಿ ನಿರ್ಣಯ, ನಿಯಂತ್ರಿ ಸುವ ವಿಧಾನ, ಪೂರ್ವ ನ್ಯಾಯ ಇತ್ಯಾದಿ ಇದ್ದುದನ್ನು ನೋಡ ಬಹುದು. ಬುದ್ಧನು ಸಂಘಗಳ ಸಭೆಗಳ ನಿರ್ವಹಣೆಗಾಗಿ ಅನುಸರಿಸುತ್ತಿದ್ದ ಈ ಸಂಸದೀಯ ವಿಧಿ ವಿಧಾನಗಳನ್ನು, ತನ್ನ ಕಾಲಕ್ಕೆ ತನ್ನ ದೇಶದಲ್ಲಿದ್ದ ರಾಜಕೀಯ ಸಭೆಗಳಿಂದ ಅಥವಾ ರಾಜಕೀಯ ಪರಿಷತ್ಗಳಿಂದ, ತೆಗೆದುಕೊಂಡಿರಬೇಕೆಂದು ಕಂಡುಬರುತ್ತದೆ.
ಈ ಪ್ರಜಾಪ್ರಭುತ್ವ ಪದ್ದತಿಯನ್ನು ಭಾರತವು ಕಳೆದುಕೊಂಡಿತು. ಅದು ಎರಡನೇ ಬಾರಿಗೆ ಕಳೆದುಕೊಳ್ಳಲಿದೆಯೇ? ನನಗೆ ಗೊತ್ತಿಲ್ಲ. ಆದರೆ ಭಾರತದಂತಹ ದೇಶದಲ್ಲಿ ಪ್ರಜಾಪ್ರಭುತ್ವ ಪದ್ಧತಿಯು ಬಹಳ ಕಾಲದಿಂದ ಬಳಕೆಯಲ್ಲಿ ಇಲ್ಲದಿದ್ದ ಕಾರಣ ಈ ಪ್ರಜಾಪ್ರಭುತ್ವ ವ್ಯವಸ್ಥೆ ಹೊಸದೆನಿಸಬಹುದು ಮತ್ತು ಪ್ರಜಾಪ್ರಭುತ್ವ ಮರೆಯಾಗಿ ಸರ್ವಾಧಿಕಾರಕ್ಕೆ ಎಡೆ ಮಾಡಿಕೊಡುವ ಅಪಾಯವುಂಟು. ಈಗ ಹೊಸದಾಗಿ ಜನ್ಮ ತಳೆದ ಪ್ರಜಾಪ್ರಭುತ್ವ ತನ್ನ ಸ್ವರೂಪವನ್ನು ಉಳಿಸಿಕೊಳ್ಳದೇ ಅದರ ಜಾಗದಲ್ಲಿ ಸರ್ವಾಧಿಕಾರಕ್ಕೆ ಅವಕಾಶ ಮಾಡಿಕೊಡುವ ಸಂಭವ ವುಂಟು. ರಾಜಕೀಯದಲ್ಲಿ ಇಂಥÀ ಭೂಕಂಪವೇನಾದರೂ ನಡೆದಿದ್ದೆಯಾ ದರೆ ನನ್ನ ಎರಡನೇ ಅನುಮಾನವು ವಾಸ್ತವವಾಗುವ ಸಾಧ್ಯತೆಯುಂಟು.
ಪ್ರಜಾಪ್ರಭುತ್ವವನ್ನು ಅದರ ಸ್ವರೂಪವನ್ನಷ್ಟೇ ಅಲ್ಕದೆ, ಅದರ ತತ್ವವನ್ನು ಉಳಿಸಿಕೊಳ್ಳಬೇಕಾದರೆ ನಾವು ಏನು ಮಾಡಬೇಕು? ನನ್ನ ಅಭಿಪ್ರಾಯದ ಪ್ರಕಾರ, ನಮ್ಮ ಸಾಮಾಜಿಕ ಮತ್ತು ಆರ್ಥಿಕ ಉದ್ದೇಶಗ ಳನ್ನು ಈಡೇರಿಸಿಕೊಳ್ಳಲು ಸಂವಿಧಾನದ ವಿಧಾನಗಳನ್ನೇ ಅನುಸರಿಸ ಬೇಕಾಗುತ್ತದೆ. ಅಂದರೆ ನಾವು ಕ್ರಾಂತೀಯ ರಕ್ತಪಾತ ಮಾರ್ಗವನ್ನು ಕೈಬಿಡಬೇಕಾಗುತ್ತದೆ. ಅಂದರೆ ನಾವು ಶಿಸ್ತುಭಂಗ, ಅಸಹಕಾರ ಮತ್ತು ಸತ್ಯಾಗ್ರಹ ಈ ಮಾರ್ಗಗಳನ್ನು ಬಿಡಬೇಕಾಗುತ್ತದೆ. ಸಾಮಾಜಿಕ ಮತ್ತು ಆರ್ಥಿಕ ಉದ್ದೇಶಗಳ ಈಡೇರಿಕೆಗೆ ಸಂವಿಧಾನ ಸಮ್ಮತ ಮಾರ್ಗಗಳ ಅವಕಾಶವಿಲ್ಲದಿದ್ದ ಸಂದರ್ಭದಲ್ಲಿ ಸಂವಿಧಾನ ಬಾಹಿರವಾದ ಮಾರ್ಗ ಗಳನ್ನು ಅನುಸರಿಸುವುದು ಬಹಳಷ್ಟು ಸಮರ್ಥನೀಯವಾಗಿತ್ತು.
ಆದರೆ ಎಲ್ಲಿ ಸಂವಿಧಾನದ ಸಮ್ಮತ ಮಾರ್ಗಗಳಿಗೆ ಅವಕಾಶವಿರುತ್ತದೆಯೋ, ಅಲ್ಲಿ ಸಂವಿಧಾನ ಬಾಹಿರವಾದ ಮಾರ್ಗಗಳಿಗೆ ಸಮರ್ಥನೆ ಇರುವು ದಿಲ್ಲ. ಈ ಮಾರ್ಗಗಳು ಅರಾಜಕತೆಯ ಧರ್ಮಗ್ರಂಥದ ನೀತಿ ಸೂತ್ರ ಗಳಾಗಿದ್ದು, ಇವುಗಳನ್ನು ಎಷ್ಟು ಬೇಗ ತೊರೆಯುತ್ತೇವೆಯೋ, ರಾಷ್ಟ್ರಕ್ಕೆ ಅಷ್ಟೂ ಕ್ಷೇಮ.
ಎರಡನೆಯದಾಗಿ ಜಾನ್ ಸ್ಪೋರಟ್ ಮಿಲ್ ಪ್ರಜಾಪ್ರಭುತ್ವವನ್ನು ಕುರಿತು ಹೇಳಿದ್ದ ಎಚ್ಚರಿಕೆ ಮಾತನ್ನು ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಇರುವವರೆಲ್ಲರೂ ಗಮನಿಸಬೇಕಾಗುತ್ತದೆ. ಅಂದರೆ “ಎಂತಹ ಮಹಾನ್ ವ್ಯಕ್ತಿಯೇ ಆಗಿದ್ದರೂ ಅವನ ಪಾದದಡಿಯಲ್ಲಿ ತಮ್ಮ ಸ್ವಾತಂತ್ರ್ಯವನ್ನು ಎಸೆಯಬಾರದು. ಅಥವಾ ತಮ್ಮ ಯಾವುದೇ ಸಂಸ್ಥೆಗಳನ್ನು ಬುಡ ಮೇಲು ಮಾಡಲು ಅನುಕೂಲವಾಗುವ ಹಾಗೆ, ಅವರಿಗೆ ಅಧಿಕಾರವನ್ನು ಕೊಡಲೂಬಾರದು” ದೇಶಕ್ಕೆ ಜೀವಮಾನವೆಲ್ಲಾ ಸೇವೆ ಸಲ್ಲಿಸಿದ ಯಾವುದೇ ಮಹಾನ್ ವ್ಯಕ್ತಿಗೆ ಋಣಿಯಾಗಿರುವುದರಲ್ಲಿ ತಪ್ಪೇನೂ ಇಲ್ಲ, ಆದರೆ ಋಣಿಯಾಗಿರುವುದಕ್ಕೂ ಕೆಲವು ಮಿತಿಗಳಿರುತ್ತವೆ.
ಐರಿಷ್ ರಾಷ್ಟ್ರಪ್ರೇಮಿಯಾದ ಡೇನಿಲ್ ಓ ಕನ್ನೋಲ್ ಎಂಬುವವನು ಹೇಳಿ ದಂತೆ, “ಯಾವೊಬ್ಬ ವ್ಯಕ್ತಿಯು ತನ್ನ ಗೌರವವನ್ನು ಕಳೆದು ಕೊಂಡು ಮತ್ತೊಬ್ಬನಿಗೆ ಋಣಿ ಯಾಗಿರಬಾರದು. ಯಾವೊಬ್ಬ ಮಹಿಳೆಯು ತನ್ನ ಪಾವಿತ್ರ್ಯತೆ ಯನ್ನು ಬಲಿಗೊಟ್ಟು ಕೃತಜ್ಞತೆಯನ್ನು ತೋರಿಸಬೇಕಿಲ್ಲ. ಅದೇ ರೀತಿಯಲ್ಲಿ ಯಾವ ರಾಷ್ಟ್ರವೂ ತನ್ನ ಸ್ವಾತಂತ್ರ್ಯವನ್ನು ಬಲಿಗೊಟ್ಟು ಕೃತಜ್ಞವಾಗಿರ ಬೇಕಿಲ್ಲ”. ಈ ಎಚ್ಚರಿಕೆಯ ಮಾತು, ಇತರೆ ಯಾವುದೇ ದೇಶಕ್ಕಿಂತ ಭಾರತದ ಸಂದರ್ಭದಲ್ಲಿ ಹೆಚ್ಚು ಅಗತ್ಯವಾಗಿರುತ್ತದೆ.
ಭಾರತದಲ್ಲಿ ಭಕ್ತಿಪಂಥ ಅಥವಾ ವ್ಯಕ್ತಿಪೂಜೆ ರಾಜಕೀಯದಲ್ಲಿ ಮಹತ್ವದ ಪಾತ್ರಗಳನ್ನು ವಹಿಸುತ್ತಿವೆ. ಈ ವಿಷಯದಲ್ಲಿ ಪ್ರಪಂಚದ ಯಾವುದೇ ರಾಷ್ಟ್ರವು ಇದಕ್ಕೆ ಸರಿಸಾಟಿಯಾಗಲಾರದು. ಧಾರ್ಮಿಕವಾಗಿ ಭಕ್ತಿಯು ಆತ್ಮದ ಮೋಕ್ಷಕ್ಕೆ ದಾರಿ ಮಾಡಿಕೊಡಬಹುದು. ಆದರೆ ರಾಜಕೀಯದಲ್ಲಿನ ಭಕ್ತಿ ಅಥವಾ ವ್ಯಕ್ತಿ ಪೂಜೆಯು, ಖಂಡಿತವಾಗಿಯೂ, ಅವನತಿಗೆ ಮತ್ತು ನಿರಂಕುಶ ಪ್ರಭುತ್ವದ ಉದಯಕ್ಕೆ, ದಾರಿ ಮಾಡಿ ಕೊಡುತ್ತದೆ.
ಮೂರನೆಯದಾಗಿ ನಾವು ಮಾಡಬೇಕಾದುದು ಎಂದರೆ, ಕೇವಲ ರಾಜಕೀಯ ಪ್ರಜಾಪ್ರಭುತ್ವದಿಂದ ತೃಪ್ತಿ ಹೊಂದಿ ಸಮ್ಮನಾಗ ಬಾರದು. ನಾವು ನಮಗೆ ದೊರೆತ ಈ ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾ ಜಿಕ ಪ್ರಜಾಪ್ರಭುತ್ವವನ್ನಾಗಿಯೂ ಮಾಡಬೇಕು. ರಾಜಕೀಯ ಪ್ರಜಾಪ್ರಭು ತ್ವಕ್ಕೆ ಸಾಮಾಜಿಕ ಪ್ರಜಾಪ್ರಭುತ್ವವು ಬುನಾದಿಯಾಗಿರದಿದ್ದರೆ ರಾಜಕೀಯ ಪ್ರಭುತ್ವಕ್ಕೆ ಉಳಿಗಾಲವಿಲ್ಲ. ಹಾಗಾದರೆ, ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಏನು? ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಅದೊಂದು ಜೀವನ ಪದ್ಧತಿ. ಸ್ವಾತಂತ್ರ್ಯ, ಸಮಾನತೆ ಮತ್ತು ಬ್ರಾತೃತ್ವ ಆದ ಈ ತ್ರಿವಳಿಗಳಲ್ಲಿ ಒಂದೊಂದನ್ನು ಪ್ರತ್ಯೇಕವೆಂದು ಪರಿಗಣಿಸು ವಂತಿಲ್ಲ. ಅವು ಒಂದಕ್ಕೊಂದು ಪೂರಕವಾಗಿರುತ್ತವೆ. ಅವುಗಳನ್ನು ಪ್ರತ್ಯೇಕಿಸುವು ದೆಂದರೆ ಪ್ರಜಾಪ್ರಭುತ್ವದ ಉದ್ದೇಶವು ವಿಫಲವಾಗುತ್ತದೆ.
ಸ್ವಾತಂತ್ರ್ಯ ವನ್ನು, ಸಮಾನತೆಯಿಂದ ಪ್ರತ್ಯೇಕಿಸಲು ಬರುವುದಿಲ್ಲ. ಸಮಾನತೆಯನ್ನು ಸ್ವಾತಂತ್ರ್ಯದಿಂದ ಪ್ರತ್ಯೇಕಿಸಲು ಬರುವುದಿಲ್ಲ. ಹಾಗೆಯೇ ಸ್ವಾತಂತ್ರ್ಯ ಮತ್ತು ಸಮಾನತೆಯನ್ನು, ಭ್ರಾತೃತ್ವದಿಂದ ಪ್ರತ್ಯೇಕಿಸಲೂ ಬರುವುದಿಲ್ಲ. ಸ್ವಾತಂತ್ರ್ಯತೆ ಇಲ್ಲದ ಸಮಾನತೆಯು ವ್ಯಕ್ತಿಗತ ಸ್ವಾತಂತ್ರ್ಯವನ್ನು ನಾಶ ಗೊಳಿಸುತ್ತದೆ.
ಭ್ರಾತೃತ್ವವಿಲ್ಲದೆ ಸ್ವಾತಂತ್ರ್ಯ ಮತ್ತು ಸಮಾನತೆಗಳು ಸುಸೂತ್ರವಾಗಿ ನಡೆಯುವಂತಿಲ್ಲ. ಇವುಗಳನ್ನು ಜಾರಿಗೆ ತರಲು ಬಲಪ್ರಯೋಗ ಅಗತ್ಯವಾದೀತು! ಭಾರತೀಯ ಸಮಾಜದಲ್ಲಿ ಈ ಎರಡೂ ಸಂಗತಿಗಳು ಸಂಪೂರ್ಣ ಅಭಾವವಿದೆ ಎಂಬ ವಾಸ್ತವವನ್ನು ನಾವು ಒಪ್ಪಿಕೊಳ್ಳ ಬೇಕು. ಅಂತಹ ಎರಡು ಸಂಗತಿಗಳಲ್ಲಿ ಸಮಾನತೆ ಎಂಬುವುದೂ ಒಂದು. ಸಾಮಾಜಿಕ ಸ್ಥರದ ಮಟ್ಟಿಗೆ ಹೇಳಬೇಕಾದರೆ, ಭಾರತದಲ್ಲಿ ಸಾಮಾಜಿಕ ವ್ಯವಸ್ಥೆಯು ಅಸಮಾನತೆಯ ಶ್ರೇಣಿಗಳ ಮೇಲೆ ನಿಂತಿದೆ. ಅಂದರೆ ಕೆಲವರು ಮೇಲು ಮತ್ತು ಕೆಲವರು ಕೀಳು ಎಂಬ ಅರ್ಥದಲ್ಲಿ. ಆರ್ಥಿಕ ಸ್ಥರದಲ್ಲಿ ಹೇಳಬೇಕೆಂದರೆ, ನಮ್ಮ ಸಮಾಜದಲ್ಲಿ ಹೆಚ್ಚಿನ ಜನ ಕಡು ಬಡತನದಲ್ಲಿದ್ದರೆ, ಕೆಲವರಲ್ಲಿ ಮಾತ್ರ ಶ್ರೀಮಂತಿಕೆ ತುಂಬಿದೆ.
ಜನೆವರಿ 26, 1950ರಂದು ನಾವು ಇಂತಹ ಪರಸ್ಪರ ವೈರುಧ್ಯಗಳಿರುವ ಒಂದು ಹೊಸ ವ್ಯವಸ್ಥೆಗೆ ಪ್ರವೇಶಿಸುತ್ತಿದ್ದೇವೆ. ರಾಜ ಕೀಯ ಜೀವನದಲ್ಲಿ ನಾವು ಸಮಾನತೆಯನ್ನು ಹೊಂದಿದ್ದೇವೆ. ಆದರೆ, ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರದಲ್ಲಿ ನಾವು ಅಸಮಾನತೆಯನ್ನು ಹೊಂದಲಿದ್ದೇವೆ. ರಾಜಕೀಯದಲ್ಲಿ ಒಬ್ಬ ವ್ಯಕ್ತಿಗೆ ಒಂದು ಮತ ಮತ್ತು ಒಂದು ಮತದ ಮೌಲ್ಯ ಒಂದು ಎಂಬ ತತ್ವವನ್ನು ಸ್ವೀಕರಿಸಿದ್ದೇವೆ. ಆದರೆ ಸಾಮಾಜಿಕ ಮತ್ತು ಆರ್ಥಿಕ ಜೀವನದಲ್ಲಿ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆುಂದಾಗಿ ಪ್ರತಿಯೊಬ್ಬ ವ್ಯಕ್ತಿಗೂ ಒಂದು ಮತ, ಒಂದು ಮೌಲ್ಯ ಎಂಬ ತತ್ವವನ್ನು ನಿರಾಕರಿಸಿದ್ದೇವೆ.
ಸಮಾಜದಲ್ಲಿ ಇಂತಹ ವೈರುಧ್ಯಗಳನ್ನು ಒಳಗೊಂಡ ಜೀವನವನ್ನು ನಾವು ಎಲ್ಲಿಯ ವರೆಗೆ ಮುಂದುವರೆಸಲು ಸಾಧ್ಯ? ನಮ್ಮ ಸಾಮಾಜಿಕ ಮತ್ತು ಆರ್ಥಿಕ ಜೀವನದಲ್ಲಿ ಎಲ್ಲಿಯ ವರೆಗೂ ನಾವು ಸಮಾನತೆಯನ್ನು ನಿರಾಕರಿಸಲು ಸಾಧ್ಯ? ನಾವು ಈ ನಿರಾಕರಣೆಯನ್ನು ಹೀಗೆಯೇ ಮುಂದುವರೆಸಿದ್ದಾ ದರೆ ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಒಡ್ಡಿದಂತಾಗುತ್ತದೆ. ನಾವು ಈ ವೈರುಧ್ಯಗಳನ್ನು ಆದಷ್ಟು ಬೇಗ ನಿವಾರಿಸಬೇಕಿರುತ್ತದೆ. ಇಲ್ಲವಾದರೆ ಯಾರು ಅಸಮಾನತೆಯಿಂದ ನರಳುತ್ತಿರುವರೋ ಅವರು, ಯಾವ ಪ್ರಜಾಪ್ರಭುತ್ವಕ್ಕಾಗಿ ಈ ಸಂವಿಧಾನ ಸಭೆ ಪ್ರಯತ್ನಿಸಿತೋ, ಆ ರಾಜಕೀಯ ಪ್ರಜಾಪ್ರಭುತ್ವದ ಕಟ್ಟಡವನ್ನೇ ಧ್ವಂಸಗೊಳಿಸುತ್ತಾರೆ.
ನಾವು ಸಾಮಾಜಿಕವಾಗಿ ಮತ್ತು ಮಾನಸಿಕವಾಗಿ ಒಂದು ರಾಷ್ಟ್ರವಾಗಿಲ್ಲ ಎಂಬುದನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳು ತ್ತೇವೆಯೋ ಅಷ್ಟೂ ಒಳ್ಳೆಯದು. ಆಗ ಮಾತ್ರ ನಾವು ರಾಷ್ಟ್ರವಾಗುವ ಅಗತ್ಯತೆಯನ್ನು ಕಂಡುಕೊಳ್ಳುತ್ತೇವೆ ಹಾಗೂ ಅಂತಹ ಒಂದು ಉದ್ದೇಶದ ಈಡೇರಿಕೆಗಾಗಿ ನಾವು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಗಂಭೀರವಾಗಿ ಯೋಚಿಸುತ್ತೇವೆ. ಈ ಗುರಿಯ ಈಡೇರಿಕೆಯು ಅಷ್ಟು ಸುಲಭದ್ದಾಗಿರುವುದಿಲ್ಲ. ಅಮೇರಿಕಾ ಸಂಸ್ಥಾನಕ್ಕಿಂತ ಭಾರತದಲ್ಲಿ ಅಸಂಖ್ಯಾತ ಜಾತಿಗಳು ಇವೆ. ಜಾತಿಗಳು ರಾಷ್ಟ್ರದ ಕಲ್ಪನೆಗೆ ವಿರೋಧ ವಾದವುಗಳು. ಮೊದಲನೆಯದಾಗಿ ಸಾಮಾಜಿಕ ಜೀವನದಲ್ಲಿ ಇವು ಪ್ರತ್ಯೇಕತೆಯನ್ನು ತರುತ್ತವೆ. ಇವು ರಾಷ್ಟ್ರ ವಿರೋಧಿಗಳೂ ಕೂಡ. ಯಾಕೆಂದರೆ ಜಾತಿ ಮತ್ತು ಜಾತಿಗಳ ನಡುವೆ ಅಸೂಯೆ ಮತ್ತು ದ್ವೇಷ ಭಾವನೆಗಳನ್ನು ಉಂಟು ಮಾಡುತ್ತವೆ.
ನಾವು ವಾಸ್ತವವಾಗಿ ಒಂದು ರಾಷ್ಟ್ರವಾಗಬೇಕೆಂದು ಬಯಸುವುದಾದರೆ ಈ ಎಲ್ಲಾ ತೊಂದರೆಗಳನ್ನು ನಿವಾರಿಸಿಕೊಳ್ಳಬೇಕಾಗುತ್ತದೆ. ಯಾಕೆಂದರೆ, ಒಂದು ರಾಷ್ಟ್ರ ಎಂಬುದು ಅಸ್ತಿತ್ವದಲ್ಲಿದ್ದರೆ, ಭ್ರಾತೃತ್ವವು ವಾಸ್ತವವಾಗುತ್ತದೆ. ಭ್ರಾತೃತ್ವವಿಲ್ಲದೆ ಸಮಾನತೆ ಮತ್ತು ಸ್ವಾತಂತ್ರ್ಯ ಎಂಬುವುದು ಕೇವಲ ಬಣ್ಣ ಬಳಿದಂತೆಯೇ.
ನಮ್ಮ ಮುಂದಿರುವ ಕರ್ತವ್ಯಗಳ ಸಂಬಂಧದಲ್ಲಿ ಇವು ನನ್ನ ಚಿಂತನೆಗಳಾಗಿರುತ್ತವೆ ಅಷ್ಟೇ. ಕೆಲವರಿಗೆ, ಇವಾವು ಸಂತೋಷವನ್ನು ಉಂಟು ಮಾಡಿರಲಿಕ್ಕಿಲ್ಲ. ಆದರೆ ನಮ್ಮ ದೇಶದಲ್ಲಿ ರಾಜಕೀಯ ಅಧಿಕಾರ ಬಹಳ ಕಾಲದಿಂದ ಕೆಲವರ ಸ್ವತ್ತಾಗಿದ್ದು ಬಹುಸಂಖ್ಯಾತರು ಪ್ರಾಣಿಗಳಂತೆ ಹಾಗೂ ಪಶುಗಳಂತೆ ಜೀವಿಸುತ್ತಿದ್ದಾರೆ ಎಂಬುವುದನ್ನು ಒತ್ತಿ ಹೇಳಬೇಕಿಲ್ಲ. ಅಧಿಕಾರವು ಕೆಲವೇ ಕೆಲವರ ಸ್ವತ್ತಾಗಿರುವ ಕಾರಣ ಬಹು ಸಂಖ್ಯಾತರಿಗೆ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳುವ ಅವಕಾಶವು ಇಲ್ಲದಂತಾಗಿದೆ. ಇಷ್ಟೇ ಅಲ್ಲದೇ ಜೀವನದ ಮಹತ್ವದ ಬಗೆಗಿನ ಅವರ ಆಸಕ್ತಿಯು ಉಡುಗಿ ಹೋಗುವಂತಾಗಿದೆ.
ತುಳಿತಕ್ಕೆ ಒಳಗಾದ ಈ ಜನರು ಇವರ ಆಡಳಿತಕ್ಕೆ ಬೇಸತ್ತಿದ್ದಾರೆ ಮತ್ತು ತಮ್ಮನ್ನು ತಾವೇ ಆಳಿಕೊಳ್ಳುವ ತವಕದಲ್ಲಿದ್ದಾರೆ. ದಲಿತ ವರ್ಗಗಳಲ್ಲಿ ಆತ್ಮಾವಲೋಕನದ ಸಲುವಾಗಿ ಉಮ್ಮಳಿಸುತ್ತಿರುವ ಉತ್ಕಟವಾದ ಆಕಾಂಕ್ಷೆಯು ವರ್ಗ ಸಂಘರ್ಷದಲ್ಲಿ ಪರಿಣಮಿಸದಂತೆ ನಾವು ಎಚ್ಚರ ವಹಿಸಬೇಕಾಗುತ್ತದೆ. ಹಾಗೇನಾದರೂ ಆಗಿದ್ದೆ ಆದರೆ, ರಾಷ್ಟ್ರ ಇಬ್ಬಾಗವಾದಂತೆಯೇ. ಅಂತಹದೊಂದು ದಿನ ಬಂದಿದ್ದೇ ಆದರೆ ಅದು ಘೋರ ದುರಂತ ದಿನವಾಗುತ್ತದೆ. ಯಾಕೆಂದರೆ ಅಬ್ರಹಾಂ ಲಿಂಕನ್ ಹೇಳಿರುವ ಹಾಗೆ ಯಾವ ಮನೆ ಇಬ್ಭಾಗವಾಗುತ್ತದೋ ಆ ಮನೆಗೆ ಉಳಿಗಾಲವಿಲ್ಲ.
ಸ್ವಾತಂತ್ರ್ಯವು ವಾಸ್ತವಾಗಿ ಸಂತೋಷ ಉಂಟು ಮಾಡುವ ಸಂಗತಿ. ಆದರೆ ಈ ಸ್ವಾತಂತ್ರ್ಯವು ನಮ್ಮ ಮೇಲೆ ಹೆಚ್ಚು ಜವಾಬ್ದಾರಿಗ ಳನ್ನು ಹೊರೆಸಿದೆ ಎಂಬುವುದನ್ನು ಮರೆಯದಿರೋಣ. ಸ್ವಾತಂತ್ರ್ಯದ ಮೂಲಕ, ಪ್ರತಿಯೊಂದು ತಪ್ಪು ಎಸಗಿದಾಗ ಬ್ರಿಟೀಷರ ಕಡೆಗೆ ಬೆರಳು ಮಾಡಿ ತೋರಿಸುತ್ತಿದ್ದಂತಹ ಅವಕಾಶವನ್ನು ಕಳೆದುಕೊಂಡಿದ್ದೇವೆ. ಇನ್ನು ಮುಂದೆ ಏನಾದರೂ ತಪ್ಪಾದಾಗ ನಾವು ನಮ್ಮನ್ನು ಬಿಟ್ಟು ಬೇರೆ ಯಾರನ್ನೂ ಆಪಾದಿಸಿ ಹೇಳುವಂತಿಲ್ಲ. ತಪ್ಪುಗಳು ಸಂಭವಿಸುವ ಬಹು ದೊಡ್ಡ ಅಪಾಯವಿದೆ.
–ಡಾ. ಬಿ.ಆರ್.ಅಂಬೇಡ್ಕರ್
(ಸಂವಿಧಾನ ಸಭೆಯಲ್ಲಿ ಡಾ. ಅಂಬೇಡ್ಕರರು ಮಾಡಿದ ಸಮಾರೋಪ ಭಾಷಣದ ಆಯ್ದ ಭಾಗ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
~ಗೋವರ್ಧನ ನವಿಲೇಹಾಳು
ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.
ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ; ಎಚ್ಚರಿಕೆಯೂ ಹೌದು.
ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಎಲೆಕ್ಟ್ರಾಲ್ ಬಾಂಡ್ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.
ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.
ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.
ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್ಗಳಾಗಿ ಪರಿವರ್ತಿಸುತ್ತದೆ.
ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.
ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ
ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್ಲೈನ್ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.
ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.
ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.
ಸುದ್ದಿದಿನ | ವಾಟ್ಸಾಪ್ | 9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

-
ದಿನದ ಸುದ್ದಿ4 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ3 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ3 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ3 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ2 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ2 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ


