ಬಹಿರಂಗ
ಸಂವಿಧಾನ ಸಭೆಯಲ್ಲಿ ಅಂಬೇಡ್ಕರರು ಮಾಡಿದ ಸಮಾರೋಪ ಭಾಷಣ
ಭಾರತದ ಸ್ವಾತಂತ್ರ್ಯಕ್ಕೆ ಏನಾಗಲಿದೆ? 26ನೇ ಜನವರಿ 1950ರಂದು, ಭಾರತವು ಸಂಪೂರ್ಣ ಸ್ವತಂತ್ರ ರಾಷ್ಟ್ರವಾಗಲಿದೆ. ಆದರೆ ಅದರ ಸ್ವಾತಂತ್ರ್ಯಕ್ಕೆ ಏನಾಗಲಿದೆ? ಅದು ತನ್ನ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲಿದೆಯೇ? ಅಥವಾ ಅದು ತನ್ನ ಸ್ವಾತಂತ್ರ್ಯವನ್ನು ಮತ್ತೊಮ್ಮೆ ಕಳೆದುಕೊಳ್ಳಲಿದೆಯೇ? ಇದು ನನ್ನ ಮನಸ್ಸಿನಲ್ಲಿ ಮೂಡಿದ ಮೊದಲ ವಿಷಯವಾಗಿರುತ್ತದೆ.
ಭಾರತವು ಹಿಂದೆಂದೂ ಸ್ವತಂತ್ರವಾಗಿರಲಿಲ್ಲವೆಂದು ಇದರ ಅರ್ಥವಲ್ಲ. ಅದು ತನ್ನ ಸ್ವಾತಂತ್ರ್ಯವನ್ನು ಮಧ್ಯೆ ಕಳೆದುಕೊಂಡಿತ್ತು. ಅದು ಎರಡನೆಯ ಬಾರಿಗೆ ತನ್ನ ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತದೆಯೇ?
ಈ ಆಲೋಚನೆಯೇ ಭವಿಷ್ಯದ ಬಗ್ಗೆ ನನ್ನನ್ನು ಕಳವಳಗೊಳ್ಳು ವಂತೆ ಮಾಡಿದೆ. ಭಾರತವು ತನ್ನ ಸ್ವಾತಂತ್ರ್ಯವನ್ನು ಹಿಂದೊಮ್ಮೆ ಕಳೆದುಕೊಂಡಿತ್ತೆಂಬ ಸಂಗತಿಯು ನನ್ನ ಮನಸ್ಸಿನ ಕ್ಷೋಭೆಗೆ ಕಾರಣ. ತನ್ನವರದೇ ಆದ ವಿಶ್ವಾಸಘಾತುಕದಿಂದ ಹಾಗೂ ದೇಶದ್ರೋಹಿಗಳಿಂದ ಸ್ವಾತಂತ್ರ್ಯವನ್ನು ಕಳೆದುಕೊಂಡಿತು ಎಂಬುವುದು ನನ್ನ ಮನಸ್ಸಿನ ಕ್ಷೋಭೆಗೆ ಮುಖ್ಯ ಕಾರಣವಾಗಿದೆ.
ಸಿಂಧ್ ಪ್ರಾಂತ್ಯದ ಮೇಲೆ ಮೊಹಮ್ಮದ್ ಬಿನ್ ಖಾಸಿಂ ದಂಡೆತ್ತಿ ಬಂದಾಗ ಅವನ ವಿರುದ್ಧ ಯುದ್ಧ ಘೋಷಣೆ ಮಾಡಬೇಕಿದ್ದ ಧಾರ್ ಅರಸನ ಸೈನಿಕ ಕಮಾಂಡರುಗಳು ಮೊಹಮದ್ ಬಿನ್ ಖಾಸಿಂ ಕಡೆಯ ಏಜೆಂಟರುಗಳು ಕೊಟ್ಟ ಲಂಚವನ್ನು ಸ್ವೀಕರಿಸಿ ರಾಜನ ಪರವಾಗಿ ಯುದ್ಧ ಮಾಡದೆ ಹೋದ ಉದಾಹರಣೆ ನನ್ನ ಮುಂದೆ ಇದೆ. ಭಾರತದ ಮೇಲೆ ಯುದ್ಧ ಮಾಡಲು ಮೊಹಮ್ಮದ್ ಘೋರಿ ಯನ್ನು ಭಾರತೀಯನೇ ಆಗಿದ್ದ ಜೈಚಂದರ್ ಎಂಬುವವನು ಸ್ವಾಗತಿ ಸಿದ್ದು, ಮತ್ತು ಪೃಥ್ವಿರಾಜನ ವಿರುದ್ಧ ಯುದ್ಧ ಮಾಡುವಂತೆ ಪ್ರೇರೇಪಿ ಸಿದ್ದು ಮತ್ತು ಆ ಯುದ್ಧದಲ್ಲಿ ತಾನು ಹಾಗೂ ಸೋಲಂಕಿಯ ರಾಜರು ಗಳು ಸಹಾಯ ಮಾಡುವುದಾಗಿ ಹೇಳಿದಂತಹ ಉದಾಹರಣೆಗಳು ನನ್ನ ಮುಂದೆ ಇವೆ.
ಶಿವಾಜಿ ಮಹಾರಾಜನು ಹಿಂದೂಗಳ ವಿಮೋಚನೆ ಗಾಗಿ ಯುದ್ಧ ಮಾಡುತ್ತಿದ್ದಾಗ, ಇತರೆ ಮರಾಠಾ ರಾಜರುಗಳು ಮತ್ತು ರಜಪೂತ್ ರಾಜರುಗಳು ಮೊಘಲ್ ಚಕ್ರವರ್ತಿಗಳ ಪರವಾಗಿ ಯುದ್ಧ ಮಾಡುತ್ತಿದ್ದರು. ಬ್ರಿಟಿಷರು ಸಿಖ್ ರಾಜರುಗಳ ಆಡಳಿತವನ್ನು ಧ್ವಂಸ ಮಾಡಬೇಕೆಂದು ಪ್ರಯತ್ನಿಸುತ್ತಿದ್ದಾಗ, ಸಿಖ್ ರಾಜರುಗಳ ಸೇನೆಯ ಮುಖ್ಯ ಕಮಾಂಡರ್ ಆದ ಗುಲಾಬ್ಸಿಂಗನು ಪ್ರೇಕ್ಷಕನಂತೆ ಮೌನ ವಹಿಸಿ ಕುಳಿತಿದ್ದನು. ಅವನು ಸಿಖ್ ಸಾಮ್ರಾಜ್ಯದ ರಕ್ಷಣೆಗಾಗಿ ಕಿಂಚಿತ್ತೂ ಸಹಾಯ ಮಾಡಲಿಲ್ಲ.
1857ರಲ್ಲಿ ಭಾರತದಾದ್ಯಂತ, ಬ್ರಿಟೀಷರ ವಿರುದ್ಧ, ಸ್ವಾತಂತ್ರ್ಯಕ್ಕಾಗಿ ಯುದ್ಧವನ್ನು ಘೋಸಿದಾಗ, ಸಿಖ್ ಸಮುದಾಯ ಆ ಘಟನೆಯನ್ನು ಕೇವಲ ಪ್ರೇಕ್ಷಕರಂತೆ ನಿಂತು ನೋಡಿದ ಉದಾಹರಣೆ ನನ್ನ ಮುಂದೆ ಇದೆ.
ಇತಿಹಾಸ ಮರುಕಳಿಸುತ್ತದೆಯೇ? ಈ ವಿಷಯವೇ ನನ್ನ ಕಳವಳಕ್ಕೆ ಮುಖ್ಯ ಕಾರಣವಾಗಿದೆ. ನಮ್ಮ ಹಿಂದಿನ ವೈರಿಗಳಾದ ಜಾತಿ-ಪಂಗಡ ಗಳ ಜೊತೆಗೆ ಇನ್ನು ಮುಂದೆ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ಪಂಗಡಗಳು ಸೇರಿಕೊಳ್ಳಲಿವೆ. ಭಾರತೀಯರು ತಮ್ಮ ಜಾತಿ, ಪಂಗಡಗ ಳನ್ನು ಬದಿಗೊತ್ತಿ ರಾಷ್ಟ್ರ ಮುಖ್ಯ ಎನ್ನುವರೋ, ಅಥವಾ ರಾಷ್ಟ್ರವನ್ನು ಬದಿಗೊತ್ತಿ ಜಾತಿ-ಪಂಗಡಗಳು ಮುಖ್ಯ ಎನ್ನುವರೋ, ನನಗೆ ಗೊತ್ತಿಲ್ಲ. ಆದರೆ ಇಷ್ಟಂತೂ ಸತ್ಯ. ದೇಶದಲ್ಲಿನ ರಾಜಕೀಯ ಪಕ್ಷಗಳು ಜಾತಿ ಪಂಗಡಗಳನ್ನೇ ಪ್ರಧಾನವಾಗಿ ಮಾಡಿಕೊಂಡರೆ ದೇಶದ ಸ್ವಾತಂತ್ರ್ಯಕ್ಕೆ ಗಂಡಾಂತರ ಒದಗುತ್ತದೆ ಮತ್ತು ನಮ್ಮ ಸ್ವಾತಂತ್ರ್ಯವನ್ನು ಎರಡನೆಯ ಬಾರಿಗೆ ಮತ್ತು ಶಾಶ್ವತವಾಗಿ ಕಳೆದುಕೊಳ್ಳುವ ಪ್ರಸಂಗ ಒದಗಬಹುದು.
ಇಂತಹ ಸಂಭಾವ್ಯ ಘಟನೆಯ ವಿರುದ್ಧ ನಾವು ದೃಢಸಂಕಲ್ಪದಿಂದ ಎಚ್ಚರ ವಹಿಸಬೇಕು. ನಮ್ಮ ಕಟ್ಟ ಕಡೆಯ ರಕ್ತದ ತೊಟ್ಟನ್ನು ಹರಿಸಿಯಾ ದರೂ, ದೇಶದ ಸ್ವಾತಂತ್ರ್ಯವನ್ನು ರಕ್ಷಿಸುತ್ತೇವೆ, ಎಂದು ನಾವು ಪ್ರತಿಜ್ಞೆಯನ್ನು ಕೈಗೊಳ್ಳಬೇಕಿದೆ.
26 ನೇ ಜನವರಿ 1950ರಂದು ಭಾರತವು ಸ್ವತಂತ್ರ ಗಣರಾಜ್ಯ ವಾಗಲಿದೆ. ಅಂದರೆ ಅದರ ಅರ್ಥ, ಆ ದಿನದಿಂದ ಭಾರತವು ತನ್ನ ಜನತೆುಂದ, ತನ್ನ ಜನರಿಗಾಗಿ, ತನ್ನ ಜನರಿಗೋಸ್ಕರ ಸರ್ಕಾರವನ್ನು ರೂಪಿಸಿಕೊಳ್ಳಲಿದೆ. ಇದೇ ವಿಷಯ ಮತ್ತೊಮ್ಮೆ ನನ್ನ ಮನಸ್ಸಿಗೆ ಬರುತ್ತಿದೆ. ಸಂವಿಧಾನವು ತನ್ನ ಪ್ರಜಾಸತ್ತಾತ್ಮಕ ಲಕ್ಷಣಗಳನ್ನು ಉಳಿಸಿ ಕೊಳ್ಳುತ್ತದೆಯೇ? ಅದು ಉಳಿಸಿಕೊಳ್ಳುತ್ತದೆಯೇ ಅಥವಾ ಮತ್ತೊಮ್ಮೆ ಕಳೆದುಕೊಳ್ಳುತ್ತದೆಯೇ? ಈ ಎರಡನೆಯ ವಿಚಾರವು ನನ್ನ ಮೊದಲನೆಯ ಪ್ರಶ್ನೆಯಷ್ಟೇ ನನಗೆ ಕಳವಳಕಾರಿಯಾಗಿದೆ.
ಭಾರತಕ್ಕೆ `ಪ್ರಜಾಪ್ರಭುತ್ವ’ ಎಂದರೆ ಏನು ಎಂಬುದು ತಿಳಿದಿರಲಿಲ್ಲ ಎಂದು ಹೇಳಲು ಬರುವುದಿಲ್ಲ. ಭಾರತವು ಒಂದಾನೊಂದು ಕಾಲಕ್ಕೆ ಅನೇಕ ಗಣರಾಜ್ಯಗಳನ್ನು ಹಾಗೂ ಅನೇಕ ರಾಜ-ಮಹಾರಾಜರುಗಳನ್ನು ಹೊಂದಿತ್ತು. ಇಂತಹ ಮಹಾರಾಜರುಗಳಲ್ಲಿ ಕೆಲವರು ಚುನಾಯಿತರಾಗು ತ್ತಿದ್ದರು ಅಥವಾ ಅವರು ಸೀಮಿತ ಅಧಿಕಾರ ಹೊಂದಿರುತ್ತಿದ್ದರು. ಆದರೆ ಅವರು ಎಂದೂ ನಿರಂಕುಶ ಪ್ರಭುಗಳಾಗಿರಲಿಲ್ಲ. ಭಾರತಕ್ಕೆ ಸಂಸತ್ತುಗಳು ಅಥವಾ ಸಂಸತ್ತುಗಳಲ್ಲಿ ನಡೆಯಬೇಕಾದ ವಿಧಿ ವಿಧಾನ ಗಳು ತಿಳಿದಿರಲಿಲ್ಲ ಎಂದಲ್ಲ.
ಬೌದ್ಧ ಭಿಕ್ಷು ಸಂಘಗಳ ರಚನೆಯನ್ನು ಅಧ್ಯಯನ ಮಾಡಿದರೆ, ನಮ್ಮಲ್ಲಿ ಸಂಘಗಳಿಗೆ ಪರ್ಯಾಯವಾಗಿ ಸಂಸತ್ತುಗಳು ಇದ್ದವು ಮತ್ತು ಅಂತಹ ಸಂಘಗಳು ಎಂದರೆ ಸಂಸತ್ತುಗಳೇ ಅಲ್ಲದೆ ಬೇರೆ ಏನೂ ಅಲ್ಲ ಎಂಬುದು ವೇದ್ಯವಾಗುತ್ತದೆ. ಅಂತಹ ಸಂಘಗಳು ಆಧುನಿಕ ಯುಗದಲ್ಲಿನ ಸಂಸತ್ತುಗಳು ಯಾವ ವಿಧಿ-ವಿಧಾನಗಳನ್ನು ಅನುಸರಿಸಿಕೊಂಡು ರಚನೆಯಾಗಿವೆಯೋ ಅಂತಹ ವಿಧಿ-ವಿಧಾನಗಳ ಮೇಲೆ ಸಂಘಗಳು ಕಾರ್ಯ ನಿರ್ವಹಿಸುತ್ತಿದ್ದವು. ಅವುಗಳಲ್ಲಿ ಆಸನಗಳ ಏರ್ಪಾಡು, ನಿರ್ಣಯಗಳನ್ನು ಕೈಗೊಳ್ಳಲು ಇದ್ದ ನಿಯಮಗಳು, ಕೋರಮ್, ಸಚೇತಕರು, ಮತಗಳ ಎಣಿಕೆ, ಮತ ಚೀಟಿಗಳ ಮೂಲಕ ಮತದಾನ, ಛೀಮಾರಿ ನಿರ್ಣಯ, ನಿಯಂತ್ರಿ ಸುವ ವಿಧಾನ, ಪೂರ್ವ ನ್ಯಾಯ ಇತ್ಯಾದಿ ಇದ್ದುದನ್ನು ನೋಡ ಬಹುದು. ಬುದ್ಧನು ಸಂಘಗಳ ಸಭೆಗಳ ನಿರ್ವಹಣೆಗಾಗಿ ಅನುಸರಿಸುತ್ತಿದ್ದ ಈ ಸಂಸದೀಯ ವಿಧಿ ವಿಧಾನಗಳನ್ನು, ತನ್ನ ಕಾಲಕ್ಕೆ ತನ್ನ ದೇಶದಲ್ಲಿದ್ದ ರಾಜಕೀಯ ಸಭೆಗಳಿಂದ ಅಥವಾ ರಾಜಕೀಯ ಪರಿಷತ್ಗಳಿಂದ, ತೆಗೆದುಕೊಂಡಿರಬೇಕೆಂದು ಕಂಡುಬರುತ್ತದೆ.
ಈ ಪ್ರಜಾಪ್ರಭುತ್ವ ಪದ್ದತಿಯನ್ನು ಭಾರತವು ಕಳೆದುಕೊಂಡಿತು. ಅದು ಎರಡನೇ ಬಾರಿಗೆ ಕಳೆದುಕೊಳ್ಳಲಿದೆಯೇ? ನನಗೆ ಗೊತ್ತಿಲ್ಲ. ಆದರೆ ಭಾರತದಂತಹ ದೇಶದಲ್ಲಿ ಪ್ರಜಾಪ್ರಭುತ್ವ ಪದ್ಧತಿಯು ಬಹಳ ಕಾಲದಿಂದ ಬಳಕೆಯಲ್ಲಿ ಇಲ್ಲದಿದ್ದ ಕಾರಣ ಈ ಪ್ರಜಾಪ್ರಭುತ್ವ ವ್ಯವಸ್ಥೆ ಹೊಸದೆನಿಸಬಹುದು ಮತ್ತು ಪ್ರಜಾಪ್ರಭುತ್ವ ಮರೆಯಾಗಿ ಸರ್ವಾಧಿಕಾರಕ್ಕೆ ಎಡೆ ಮಾಡಿಕೊಡುವ ಅಪಾಯವುಂಟು. ಈಗ ಹೊಸದಾಗಿ ಜನ್ಮ ತಳೆದ ಪ್ರಜಾಪ್ರಭುತ್ವ ತನ್ನ ಸ್ವರೂಪವನ್ನು ಉಳಿಸಿಕೊಳ್ಳದೇ ಅದರ ಜಾಗದಲ್ಲಿ ಸರ್ವಾಧಿಕಾರಕ್ಕೆ ಅವಕಾಶ ಮಾಡಿಕೊಡುವ ಸಂಭವ ವುಂಟು. ರಾಜಕೀಯದಲ್ಲಿ ಇಂಥÀ ಭೂಕಂಪವೇನಾದರೂ ನಡೆದಿದ್ದೆಯಾ ದರೆ ನನ್ನ ಎರಡನೇ ಅನುಮಾನವು ವಾಸ್ತವವಾಗುವ ಸಾಧ್ಯತೆಯುಂಟು.
ಪ್ರಜಾಪ್ರಭುತ್ವವನ್ನು ಅದರ ಸ್ವರೂಪವನ್ನಷ್ಟೇ ಅಲ್ಕದೆ, ಅದರ ತತ್ವವನ್ನು ಉಳಿಸಿಕೊಳ್ಳಬೇಕಾದರೆ ನಾವು ಏನು ಮಾಡಬೇಕು? ನನ್ನ ಅಭಿಪ್ರಾಯದ ಪ್ರಕಾರ, ನಮ್ಮ ಸಾಮಾಜಿಕ ಮತ್ತು ಆರ್ಥಿಕ ಉದ್ದೇಶಗ ಳನ್ನು ಈಡೇರಿಸಿಕೊಳ್ಳಲು ಸಂವಿಧಾನದ ವಿಧಾನಗಳನ್ನೇ ಅನುಸರಿಸ ಬೇಕಾಗುತ್ತದೆ. ಅಂದರೆ ನಾವು ಕ್ರಾಂತೀಯ ರಕ್ತಪಾತ ಮಾರ್ಗವನ್ನು ಕೈಬಿಡಬೇಕಾಗುತ್ತದೆ. ಅಂದರೆ ನಾವು ಶಿಸ್ತುಭಂಗ, ಅಸಹಕಾರ ಮತ್ತು ಸತ್ಯಾಗ್ರಹ ಈ ಮಾರ್ಗಗಳನ್ನು ಬಿಡಬೇಕಾಗುತ್ತದೆ. ಸಾಮಾಜಿಕ ಮತ್ತು ಆರ್ಥಿಕ ಉದ್ದೇಶಗಳ ಈಡೇರಿಕೆಗೆ ಸಂವಿಧಾನ ಸಮ್ಮತ ಮಾರ್ಗಗಳ ಅವಕಾಶವಿಲ್ಲದಿದ್ದ ಸಂದರ್ಭದಲ್ಲಿ ಸಂವಿಧಾನ ಬಾಹಿರವಾದ ಮಾರ್ಗ ಗಳನ್ನು ಅನುಸರಿಸುವುದು ಬಹಳಷ್ಟು ಸಮರ್ಥನೀಯವಾಗಿತ್ತು.
ಆದರೆ ಎಲ್ಲಿ ಸಂವಿಧಾನದ ಸಮ್ಮತ ಮಾರ್ಗಗಳಿಗೆ ಅವಕಾಶವಿರುತ್ತದೆಯೋ, ಅಲ್ಲಿ ಸಂವಿಧಾನ ಬಾಹಿರವಾದ ಮಾರ್ಗಗಳಿಗೆ ಸಮರ್ಥನೆ ಇರುವು ದಿಲ್ಲ. ಈ ಮಾರ್ಗಗಳು ಅರಾಜಕತೆಯ ಧರ್ಮಗ್ರಂಥದ ನೀತಿ ಸೂತ್ರ ಗಳಾಗಿದ್ದು, ಇವುಗಳನ್ನು ಎಷ್ಟು ಬೇಗ ತೊರೆಯುತ್ತೇವೆಯೋ, ರಾಷ್ಟ್ರಕ್ಕೆ ಅಷ್ಟೂ ಕ್ಷೇಮ.
ಎರಡನೆಯದಾಗಿ ಜಾನ್ ಸ್ಪೋರಟ್ ಮಿಲ್ ಪ್ರಜಾಪ್ರಭುತ್ವವನ್ನು ಕುರಿತು ಹೇಳಿದ್ದ ಎಚ್ಚರಿಕೆ ಮಾತನ್ನು ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಇರುವವರೆಲ್ಲರೂ ಗಮನಿಸಬೇಕಾಗುತ್ತದೆ. ಅಂದರೆ “ಎಂತಹ ಮಹಾನ್ ವ್ಯಕ್ತಿಯೇ ಆಗಿದ್ದರೂ ಅವನ ಪಾದದಡಿಯಲ್ಲಿ ತಮ್ಮ ಸ್ವಾತಂತ್ರ್ಯವನ್ನು ಎಸೆಯಬಾರದು. ಅಥವಾ ತಮ್ಮ ಯಾವುದೇ ಸಂಸ್ಥೆಗಳನ್ನು ಬುಡ ಮೇಲು ಮಾಡಲು ಅನುಕೂಲವಾಗುವ ಹಾಗೆ, ಅವರಿಗೆ ಅಧಿಕಾರವನ್ನು ಕೊಡಲೂಬಾರದು” ದೇಶಕ್ಕೆ ಜೀವಮಾನವೆಲ್ಲಾ ಸೇವೆ ಸಲ್ಲಿಸಿದ ಯಾವುದೇ ಮಹಾನ್ ವ್ಯಕ್ತಿಗೆ ಋಣಿಯಾಗಿರುವುದರಲ್ಲಿ ತಪ್ಪೇನೂ ಇಲ್ಲ, ಆದರೆ ಋಣಿಯಾಗಿರುವುದಕ್ಕೂ ಕೆಲವು ಮಿತಿಗಳಿರುತ್ತವೆ.
ಐರಿಷ್ ರಾಷ್ಟ್ರಪ್ರೇಮಿಯಾದ ಡೇನಿಲ್ ಓ ಕನ್ನೋಲ್ ಎಂಬುವವನು ಹೇಳಿ ದಂತೆ, “ಯಾವೊಬ್ಬ ವ್ಯಕ್ತಿಯು ತನ್ನ ಗೌರವವನ್ನು ಕಳೆದು ಕೊಂಡು ಮತ್ತೊಬ್ಬನಿಗೆ ಋಣಿ ಯಾಗಿರಬಾರದು. ಯಾವೊಬ್ಬ ಮಹಿಳೆಯು ತನ್ನ ಪಾವಿತ್ರ್ಯತೆ ಯನ್ನು ಬಲಿಗೊಟ್ಟು ಕೃತಜ್ಞತೆಯನ್ನು ತೋರಿಸಬೇಕಿಲ್ಲ. ಅದೇ ರೀತಿಯಲ್ಲಿ ಯಾವ ರಾಷ್ಟ್ರವೂ ತನ್ನ ಸ್ವಾತಂತ್ರ್ಯವನ್ನು ಬಲಿಗೊಟ್ಟು ಕೃತಜ್ಞವಾಗಿರ ಬೇಕಿಲ್ಲ”. ಈ ಎಚ್ಚರಿಕೆಯ ಮಾತು, ಇತರೆ ಯಾವುದೇ ದೇಶಕ್ಕಿಂತ ಭಾರತದ ಸಂದರ್ಭದಲ್ಲಿ ಹೆಚ್ಚು ಅಗತ್ಯವಾಗಿರುತ್ತದೆ.
ಭಾರತದಲ್ಲಿ ಭಕ್ತಿಪಂಥ ಅಥವಾ ವ್ಯಕ್ತಿಪೂಜೆ ರಾಜಕೀಯದಲ್ಲಿ ಮಹತ್ವದ ಪಾತ್ರಗಳನ್ನು ವಹಿಸುತ್ತಿವೆ. ಈ ವಿಷಯದಲ್ಲಿ ಪ್ರಪಂಚದ ಯಾವುದೇ ರಾಷ್ಟ್ರವು ಇದಕ್ಕೆ ಸರಿಸಾಟಿಯಾಗಲಾರದು. ಧಾರ್ಮಿಕವಾಗಿ ಭಕ್ತಿಯು ಆತ್ಮದ ಮೋಕ್ಷಕ್ಕೆ ದಾರಿ ಮಾಡಿಕೊಡಬಹುದು. ಆದರೆ ರಾಜಕೀಯದಲ್ಲಿನ ಭಕ್ತಿ ಅಥವಾ ವ್ಯಕ್ತಿ ಪೂಜೆಯು, ಖಂಡಿತವಾಗಿಯೂ, ಅವನತಿಗೆ ಮತ್ತು ನಿರಂಕುಶ ಪ್ರಭುತ್ವದ ಉದಯಕ್ಕೆ, ದಾರಿ ಮಾಡಿ ಕೊಡುತ್ತದೆ.
ಮೂರನೆಯದಾಗಿ ನಾವು ಮಾಡಬೇಕಾದುದು ಎಂದರೆ, ಕೇವಲ ರಾಜಕೀಯ ಪ್ರಜಾಪ್ರಭುತ್ವದಿಂದ ತೃಪ್ತಿ ಹೊಂದಿ ಸಮ್ಮನಾಗ ಬಾರದು. ನಾವು ನಮಗೆ ದೊರೆತ ಈ ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾ ಜಿಕ ಪ್ರಜಾಪ್ರಭುತ್ವವನ್ನಾಗಿಯೂ ಮಾಡಬೇಕು. ರಾಜಕೀಯ ಪ್ರಜಾಪ್ರಭು ತ್ವಕ್ಕೆ ಸಾಮಾಜಿಕ ಪ್ರಜಾಪ್ರಭುತ್ವವು ಬುನಾದಿಯಾಗಿರದಿದ್ದರೆ ರಾಜಕೀಯ ಪ್ರಭುತ್ವಕ್ಕೆ ಉಳಿಗಾಲವಿಲ್ಲ. ಹಾಗಾದರೆ, ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಏನು? ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಅದೊಂದು ಜೀವನ ಪದ್ಧತಿ. ಸ್ವಾತಂತ್ರ್ಯ, ಸಮಾನತೆ ಮತ್ತು ಬ್ರಾತೃತ್ವ ಆದ ಈ ತ್ರಿವಳಿಗಳಲ್ಲಿ ಒಂದೊಂದನ್ನು ಪ್ರತ್ಯೇಕವೆಂದು ಪರಿಗಣಿಸು ವಂತಿಲ್ಲ. ಅವು ಒಂದಕ್ಕೊಂದು ಪೂರಕವಾಗಿರುತ್ತವೆ. ಅವುಗಳನ್ನು ಪ್ರತ್ಯೇಕಿಸುವು ದೆಂದರೆ ಪ್ರಜಾಪ್ರಭುತ್ವದ ಉದ್ದೇಶವು ವಿಫಲವಾಗುತ್ತದೆ.
ಸ್ವಾತಂತ್ರ್ಯ ವನ್ನು, ಸಮಾನತೆಯಿಂದ ಪ್ರತ್ಯೇಕಿಸಲು ಬರುವುದಿಲ್ಲ. ಸಮಾನತೆಯನ್ನು ಸ್ವಾತಂತ್ರ್ಯದಿಂದ ಪ್ರತ್ಯೇಕಿಸಲು ಬರುವುದಿಲ್ಲ. ಹಾಗೆಯೇ ಸ್ವಾತಂತ್ರ್ಯ ಮತ್ತು ಸಮಾನತೆಯನ್ನು, ಭ್ರಾತೃತ್ವದಿಂದ ಪ್ರತ್ಯೇಕಿಸಲೂ ಬರುವುದಿಲ್ಲ. ಸ್ವಾತಂತ್ರ್ಯತೆ ಇಲ್ಲದ ಸಮಾನತೆಯು ವ್ಯಕ್ತಿಗತ ಸ್ವಾತಂತ್ರ್ಯವನ್ನು ನಾಶ ಗೊಳಿಸುತ್ತದೆ.
ಭ್ರಾತೃತ್ವವಿಲ್ಲದೆ ಸ್ವಾತಂತ್ರ್ಯ ಮತ್ತು ಸಮಾನತೆಗಳು ಸುಸೂತ್ರವಾಗಿ ನಡೆಯುವಂತಿಲ್ಲ. ಇವುಗಳನ್ನು ಜಾರಿಗೆ ತರಲು ಬಲಪ್ರಯೋಗ ಅಗತ್ಯವಾದೀತು! ಭಾರತೀಯ ಸಮಾಜದಲ್ಲಿ ಈ ಎರಡೂ ಸಂಗತಿಗಳು ಸಂಪೂರ್ಣ ಅಭಾವವಿದೆ ಎಂಬ ವಾಸ್ತವವನ್ನು ನಾವು ಒಪ್ಪಿಕೊಳ್ಳ ಬೇಕು. ಅಂತಹ ಎರಡು ಸಂಗತಿಗಳಲ್ಲಿ ಸಮಾನತೆ ಎಂಬುವುದೂ ಒಂದು. ಸಾಮಾಜಿಕ ಸ್ಥರದ ಮಟ್ಟಿಗೆ ಹೇಳಬೇಕಾದರೆ, ಭಾರತದಲ್ಲಿ ಸಾಮಾಜಿಕ ವ್ಯವಸ್ಥೆಯು ಅಸಮಾನತೆಯ ಶ್ರೇಣಿಗಳ ಮೇಲೆ ನಿಂತಿದೆ. ಅಂದರೆ ಕೆಲವರು ಮೇಲು ಮತ್ತು ಕೆಲವರು ಕೀಳು ಎಂಬ ಅರ್ಥದಲ್ಲಿ. ಆರ್ಥಿಕ ಸ್ಥರದಲ್ಲಿ ಹೇಳಬೇಕೆಂದರೆ, ನಮ್ಮ ಸಮಾಜದಲ್ಲಿ ಹೆಚ್ಚಿನ ಜನ ಕಡು ಬಡತನದಲ್ಲಿದ್ದರೆ, ಕೆಲವರಲ್ಲಿ ಮಾತ್ರ ಶ್ರೀಮಂತಿಕೆ ತುಂಬಿದೆ.
ಜನೆವರಿ 26, 1950ರಂದು ನಾವು ಇಂತಹ ಪರಸ್ಪರ ವೈರುಧ್ಯಗಳಿರುವ ಒಂದು ಹೊಸ ವ್ಯವಸ್ಥೆಗೆ ಪ್ರವೇಶಿಸುತ್ತಿದ್ದೇವೆ. ರಾಜ ಕೀಯ ಜೀವನದಲ್ಲಿ ನಾವು ಸಮಾನತೆಯನ್ನು ಹೊಂದಿದ್ದೇವೆ. ಆದರೆ, ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರದಲ್ಲಿ ನಾವು ಅಸಮಾನತೆಯನ್ನು ಹೊಂದಲಿದ್ದೇವೆ. ರಾಜಕೀಯದಲ್ಲಿ ಒಬ್ಬ ವ್ಯಕ್ತಿಗೆ ಒಂದು ಮತ ಮತ್ತು ಒಂದು ಮತದ ಮೌಲ್ಯ ಒಂದು ಎಂಬ ತತ್ವವನ್ನು ಸ್ವೀಕರಿಸಿದ್ದೇವೆ. ಆದರೆ ಸಾಮಾಜಿಕ ಮತ್ತು ಆರ್ಥಿಕ ಜೀವನದಲ್ಲಿ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆುಂದಾಗಿ ಪ್ರತಿಯೊಬ್ಬ ವ್ಯಕ್ತಿಗೂ ಒಂದು ಮತ, ಒಂದು ಮೌಲ್ಯ ಎಂಬ ತತ್ವವನ್ನು ನಿರಾಕರಿಸಿದ್ದೇವೆ.
ಸಮಾಜದಲ್ಲಿ ಇಂತಹ ವೈರುಧ್ಯಗಳನ್ನು ಒಳಗೊಂಡ ಜೀವನವನ್ನು ನಾವು ಎಲ್ಲಿಯ ವರೆಗೆ ಮುಂದುವರೆಸಲು ಸಾಧ್ಯ? ನಮ್ಮ ಸಾಮಾಜಿಕ ಮತ್ತು ಆರ್ಥಿಕ ಜೀವನದಲ್ಲಿ ಎಲ್ಲಿಯ ವರೆಗೂ ನಾವು ಸಮಾನತೆಯನ್ನು ನಿರಾಕರಿಸಲು ಸಾಧ್ಯ? ನಾವು ಈ ನಿರಾಕರಣೆಯನ್ನು ಹೀಗೆಯೇ ಮುಂದುವರೆಸಿದ್ದಾ ದರೆ ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಒಡ್ಡಿದಂತಾಗುತ್ತದೆ. ನಾವು ಈ ವೈರುಧ್ಯಗಳನ್ನು ಆದಷ್ಟು ಬೇಗ ನಿವಾರಿಸಬೇಕಿರುತ್ತದೆ. ಇಲ್ಲವಾದರೆ ಯಾರು ಅಸಮಾನತೆಯಿಂದ ನರಳುತ್ತಿರುವರೋ ಅವರು, ಯಾವ ಪ್ರಜಾಪ್ರಭುತ್ವಕ್ಕಾಗಿ ಈ ಸಂವಿಧಾನ ಸಭೆ ಪ್ರಯತ್ನಿಸಿತೋ, ಆ ರಾಜಕೀಯ ಪ್ರಜಾಪ್ರಭುತ್ವದ ಕಟ್ಟಡವನ್ನೇ ಧ್ವಂಸಗೊಳಿಸುತ್ತಾರೆ.
ನಾವು ಸಾಮಾಜಿಕವಾಗಿ ಮತ್ತು ಮಾನಸಿಕವಾಗಿ ಒಂದು ರಾಷ್ಟ್ರವಾಗಿಲ್ಲ ಎಂಬುದನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳು ತ್ತೇವೆಯೋ ಅಷ್ಟೂ ಒಳ್ಳೆಯದು. ಆಗ ಮಾತ್ರ ನಾವು ರಾಷ್ಟ್ರವಾಗುವ ಅಗತ್ಯತೆಯನ್ನು ಕಂಡುಕೊಳ್ಳುತ್ತೇವೆ ಹಾಗೂ ಅಂತಹ ಒಂದು ಉದ್ದೇಶದ ಈಡೇರಿಕೆಗಾಗಿ ನಾವು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಗಂಭೀರವಾಗಿ ಯೋಚಿಸುತ್ತೇವೆ. ಈ ಗುರಿಯ ಈಡೇರಿಕೆಯು ಅಷ್ಟು ಸುಲಭದ್ದಾಗಿರುವುದಿಲ್ಲ. ಅಮೇರಿಕಾ ಸಂಸ್ಥಾನಕ್ಕಿಂತ ಭಾರತದಲ್ಲಿ ಅಸಂಖ್ಯಾತ ಜಾತಿಗಳು ಇವೆ. ಜಾತಿಗಳು ರಾಷ್ಟ್ರದ ಕಲ್ಪನೆಗೆ ವಿರೋಧ ವಾದವುಗಳು. ಮೊದಲನೆಯದಾಗಿ ಸಾಮಾಜಿಕ ಜೀವನದಲ್ಲಿ ಇವು ಪ್ರತ್ಯೇಕತೆಯನ್ನು ತರುತ್ತವೆ. ಇವು ರಾಷ್ಟ್ರ ವಿರೋಧಿಗಳೂ ಕೂಡ. ಯಾಕೆಂದರೆ ಜಾತಿ ಮತ್ತು ಜಾತಿಗಳ ನಡುವೆ ಅಸೂಯೆ ಮತ್ತು ದ್ವೇಷ ಭಾವನೆಗಳನ್ನು ಉಂಟು ಮಾಡುತ್ತವೆ.
ನಾವು ವಾಸ್ತವವಾಗಿ ಒಂದು ರಾಷ್ಟ್ರವಾಗಬೇಕೆಂದು ಬಯಸುವುದಾದರೆ ಈ ಎಲ್ಲಾ ತೊಂದರೆಗಳನ್ನು ನಿವಾರಿಸಿಕೊಳ್ಳಬೇಕಾಗುತ್ತದೆ. ಯಾಕೆಂದರೆ, ಒಂದು ರಾಷ್ಟ್ರ ಎಂಬುದು ಅಸ್ತಿತ್ವದಲ್ಲಿದ್ದರೆ, ಭ್ರಾತೃತ್ವವು ವಾಸ್ತವವಾಗುತ್ತದೆ. ಭ್ರಾತೃತ್ವವಿಲ್ಲದೆ ಸಮಾನತೆ ಮತ್ತು ಸ್ವಾತಂತ್ರ್ಯ ಎಂಬುವುದು ಕೇವಲ ಬಣ್ಣ ಬಳಿದಂತೆಯೇ.
ನಮ್ಮ ಮುಂದಿರುವ ಕರ್ತವ್ಯಗಳ ಸಂಬಂಧದಲ್ಲಿ ಇವು ನನ್ನ ಚಿಂತನೆಗಳಾಗಿರುತ್ತವೆ ಅಷ್ಟೇ. ಕೆಲವರಿಗೆ, ಇವಾವು ಸಂತೋಷವನ್ನು ಉಂಟು ಮಾಡಿರಲಿಕ್ಕಿಲ್ಲ. ಆದರೆ ನಮ್ಮ ದೇಶದಲ್ಲಿ ರಾಜಕೀಯ ಅಧಿಕಾರ ಬಹಳ ಕಾಲದಿಂದ ಕೆಲವರ ಸ್ವತ್ತಾಗಿದ್ದು ಬಹುಸಂಖ್ಯಾತರು ಪ್ರಾಣಿಗಳಂತೆ ಹಾಗೂ ಪಶುಗಳಂತೆ ಜೀವಿಸುತ್ತಿದ್ದಾರೆ ಎಂಬುವುದನ್ನು ಒತ್ತಿ ಹೇಳಬೇಕಿಲ್ಲ. ಅಧಿಕಾರವು ಕೆಲವೇ ಕೆಲವರ ಸ್ವತ್ತಾಗಿರುವ ಕಾರಣ ಬಹು ಸಂಖ್ಯಾತರಿಗೆ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳುವ ಅವಕಾಶವು ಇಲ್ಲದಂತಾಗಿದೆ. ಇಷ್ಟೇ ಅಲ್ಲದೇ ಜೀವನದ ಮಹತ್ವದ ಬಗೆಗಿನ ಅವರ ಆಸಕ್ತಿಯು ಉಡುಗಿ ಹೋಗುವಂತಾಗಿದೆ.
ತುಳಿತಕ್ಕೆ ಒಳಗಾದ ಈ ಜನರು ಇವರ ಆಡಳಿತಕ್ಕೆ ಬೇಸತ್ತಿದ್ದಾರೆ ಮತ್ತು ತಮ್ಮನ್ನು ತಾವೇ ಆಳಿಕೊಳ್ಳುವ ತವಕದಲ್ಲಿದ್ದಾರೆ. ದಲಿತ ವರ್ಗಗಳಲ್ಲಿ ಆತ್ಮಾವಲೋಕನದ ಸಲುವಾಗಿ ಉಮ್ಮಳಿಸುತ್ತಿರುವ ಉತ್ಕಟವಾದ ಆಕಾಂಕ್ಷೆಯು ವರ್ಗ ಸಂಘರ್ಷದಲ್ಲಿ ಪರಿಣಮಿಸದಂತೆ ನಾವು ಎಚ್ಚರ ವಹಿಸಬೇಕಾಗುತ್ತದೆ. ಹಾಗೇನಾದರೂ ಆಗಿದ್ದೆ ಆದರೆ, ರಾಷ್ಟ್ರ ಇಬ್ಬಾಗವಾದಂತೆಯೇ. ಅಂತಹದೊಂದು ದಿನ ಬಂದಿದ್ದೇ ಆದರೆ ಅದು ಘೋರ ದುರಂತ ದಿನವಾಗುತ್ತದೆ. ಯಾಕೆಂದರೆ ಅಬ್ರಹಾಂ ಲಿಂಕನ್ ಹೇಳಿರುವ ಹಾಗೆ ಯಾವ ಮನೆ ಇಬ್ಭಾಗವಾಗುತ್ತದೋ ಆ ಮನೆಗೆ ಉಳಿಗಾಲವಿಲ್ಲ.
ಸ್ವಾತಂತ್ರ್ಯವು ವಾಸ್ತವಾಗಿ ಸಂತೋಷ ಉಂಟು ಮಾಡುವ ಸಂಗತಿ. ಆದರೆ ಈ ಸ್ವಾತಂತ್ರ್ಯವು ನಮ್ಮ ಮೇಲೆ ಹೆಚ್ಚು ಜವಾಬ್ದಾರಿಗ ಳನ್ನು ಹೊರೆಸಿದೆ ಎಂಬುವುದನ್ನು ಮರೆಯದಿರೋಣ. ಸ್ವಾತಂತ್ರ್ಯದ ಮೂಲಕ, ಪ್ರತಿಯೊಂದು ತಪ್ಪು ಎಸಗಿದಾಗ ಬ್ರಿಟೀಷರ ಕಡೆಗೆ ಬೆರಳು ಮಾಡಿ ತೋರಿಸುತ್ತಿದ್ದಂತಹ ಅವಕಾಶವನ್ನು ಕಳೆದುಕೊಂಡಿದ್ದೇವೆ. ಇನ್ನು ಮುಂದೆ ಏನಾದರೂ ತಪ್ಪಾದಾಗ ನಾವು ನಮ್ಮನ್ನು ಬಿಟ್ಟು ಬೇರೆ ಯಾರನ್ನೂ ಆಪಾದಿಸಿ ಹೇಳುವಂತಿಲ್ಲ. ತಪ್ಪುಗಳು ಸಂಭವಿಸುವ ಬಹು ದೊಡ್ಡ ಅಪಾಯವಿದೆ.
–ಡಾ. ಬಿ.ಆರ್.ಅಂಬೇಡ್ಕರ್
(ಸಂವಿಧಾನ ಸಭೆಯಲ್ಲಿ ಡಾ. ಅಂಬೇಡ್ಕರರು ಮಾಡಿದ ಸಮಾರೋಪ ಭಾಷಣದ ಆಯ್ದ ಭಾಗ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ2 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


