ಅಂತರಂಗ
ಕಪ್ಪು-ಬಿಳಿ ಅಮೆರಿಕನ್ನರ ನಡುವಿನ ಅಸಮಾನತೆ
- ನಾಗರಾಜ ನಂಜುಂಡಯ್ಯ
1983 ರಿಂದ 2016 ರ ನಡುವೆ, ಕಪ್ಪು ಅಮೆರಿಕನ್ನರ ಕುಟುಂಬದ ಸರಾಸರಿ ಸಂಪತ್ತು ಅರ್ಧಕ್ಕಿಂತಲೂ ಹೆಚ್ಚು ಇಳಿಕೆಯನ್ನು ಕಂಡಿದೆ. ಆದರೆ, ಇದೇ ಸಮಯದಲ್ಲಿ ಬಿಳಿ ಅಮೆರಿಕನ್ ಕುಟುಂಬದ ಸರಾಸರಿ ಸಂಪತ್ತು, ಶೇ.33 ರಷ್ಟು ಹೆಚ್ಚಾಗಿದೆ. 2017ರಲ್ಲಿ ಪ್ಯೂ (ಪಿ.ಇ.ಡಬ್ಲ್ಯೂ) ಅಧ್ಯಯನ ಸರಾಸರಿ ಬಿಳಿಯ ಕುಟುಂಬಗಳ ಆದಾಯ ಕರಿಯ ಕುಟುಂಬಗಳ ಆದಾಯದ 10 ಪಟ್ಟು ಎಂದಿದೆ. ಈ ಹಿನ್ನೆಲೆಯಲ್ಲಿ ಗುಲಾಮಗಿರಿ ಪ್ರಾರಂಭವಾಗಿ 400 ವರ್ಷಗಳ ಆಚರಣೆಯ ಸುತ್ತ ಈ ಕುರಿತು ತೀವ್ರ ರಾಜಕೀಯ ಚರ್ಚೆ ಆರಂಭವಾಗಿದೆ. 2014ರಲ್ಲೇ 250 ವರ್ಷಗಳ ಗುಲಾಮಗಿರಿಗೆ ಕರಿಯರಿಗೆ ಪರಿಹಾರ ಒದಗಿಸಬೇಕು ಎಂದು ವಾದಿಸುವ ತಾ ನೆಹಿಸಿ ಕೋಟ್ಸ್ ಎನ್ನುವವರ ವರದಿ ಪ್ರಕಟವಾಯಿತು. ಡೆಮೊಕ್ರಾಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಸೆನೆಟರ್ ಕೊರಿ ಬುಕರ್ ಕರಿಯರಿಗೆ ಪರಿಹಾರ ಒದಗಿಸುವ ಬಗ್ಗೆ ಒಂದು ಮಸೂದೆಯನ್ನು ಮಂಡಿಸಿದ್ದಾರೆ. ಇತರ ಡೆಮೊಕ್ರಾಟಿಕ್ ಅಧ್ಯಕ್ಷೀಯ ಅಭ್ಯರ್ಥಿಗಳಾದ ಎಲಿಜಬೆತ್ ವಾರೆನ್ ಮತ್ತು ಬರ್ನಿ ಸ್ಯಾಂಡರ್ಸ್ ಅದನ್ನು ಬೆಂಬಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿಕೊಂಡಿದ್ದಾರೆ.
ನಾನೂರು ವರ್ಷಗಳ ಹಿಂದೆ, ಅಂದರೆ, 1619ರ ಆಗಸ್ಟ್ ತಿಂಗಳಲ್ಲಿ 20 ಸೆರೆಯಾಳುಗಳನ್ನು ಹೊತ್ತ ಹಡಗು ಆಫ್ರ್ರಿಕಾದಿಂದ ವರ್ಜೀನಿಯಾದ ಹಡಗುದಾಣದಲ್ಲಿ ಬಂದು ನಿಂತಿತು. ಮುಂದೆ ಇದೇ ಅಮೆರಿಕಾದ ಗುಲಾಮಗಿರಿಯ ಉಗಮಕ್ಕೆ ಕಾರಣವಾಯಿತು. ಆದರೆ, 1620 ರಲ್ಲಿ “ಮೇ” ಫ್ಲವರ್” ಹಡಗಿನಲ್ಲಿ, ಬಂದಿಳಿದ 102 ಪ್ರಯಾಣಿಕರ ಆಗಮನವನ್ನೇ ಈಗಲೂ ಯುಎಸ್ ನ ಗುಲಾಮಗಿರಿ ಪದ್ದತಿಯ ಆರಂಭವೆಂದೇ ಬಹಳಷ್ಟು ಅಮೆರಿಕನ್ನರಿಗೆ ಪರಿಚಯಿಸಲಾಗಿದೆ. ಆದರೆ, ಇದಕ್ಕೆ ಒಂದು ವರ್ಷದ ಹಿಂದೆಯೇ 20 ಆಪ್ರಿಕನ್ನರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಅಪಹರಿಸಿ ತಂದು, ಅಂದು ಅಮೆರಿಕಾವನ್ನು ವಸಾಹತು ಮಾಡಿಕೊಂಡಿದ್ದ ಬ್ರಿಟಿಷರಿಗೆ ಒಪ್ಪಿಸಿದ್ದೇ ಗುಲಾಮ ಪದ್ದತಿಗೆ ಮೂಲ ಕಾರಣವಾಯಿತು ಎಂಬುದು ವಾಸ್ತವತೆ.
ಅಮೆರಿಕಾದ ಬಂಡವಾಳಶಾಹಿ ಆರ್ಥಿಕತೆಯ ಸೃಷ್ಟಿಗೆ ಗುಲಾಮರ ಶ್ರಮವೇ ಬೆನ್ನೆಲುಬು ಎಂದರೆ ಅತಿಶಯೋಕ್ತಿಯಾಗಲಾರದು. ಇಂದು ಅಮೆರಿಕಾವು ವಿಶ್ವದ ಪ್ರಮುಖ ಆರ್ಥಿಕತೆಯಾಗಿ ಬೆಳೆಯಲು ಮತ್ತು ಉಳಿಯಲು ಅವಕಾಶ ಮಾಡಿಕೊಟ್ಟಿದ್ದೆ ಈ ಗುಲಾಮರ ಶ್ರಮ. ಆದರೆ, ಈ ಆಫ್ರಿಕನ್ ಗುಲಾಮ ಕಾರ್ಮಿಕರಿಗೆ ಅವರ ಪಾಲಿನ ಸಂಪತ್ತನ್ನು ಮಾತ್ರ ಸೂಕ್ತವಾಗಿ ಇಲ್ಲಿಯವರೆವಿಗೂ ಪಾವತಿಸಲೇ ಇಲ್ಲವೆಂಬುದು ಕೂಡ ಅಷ್ಟೆ ಸತ್ಯ. ಆದಾಗ್ಯೂ, ಅಮೆರಿಕದ ಆರ್ಥಿಕತೆ, ಈಗಲೂ ಹೆಚ್ಚಾಗಿ ಇವರ ಕೆಲಸದ ಮೇಲೆಯೇ ಹೆಚ್ಚಾಗಿ ಅವಲಂಬಿತವಾಗಿದೆ ಎಂಬುದು ವಾಸ್ತವ.
ಪ್ರಸ್ತುತ ಸಂಪತ್ತಿನ ವಿಭಜನೆಯಲ್ಲಿ ಅಪಾರ ಜನಾಂಗೀಯ ಅಸಮಾನತೆಯನ್ನು ಕಾಣಬಹುದು. ಕಳೆದ ನಾಲ್ಕು ವರ್ಷಗಳಿಂದೀಚೆಗೆ ಈ ಸಂಪತ್ತಿನ ಜನಾಂಗೀಯ ವ್ಯತ್ಯಾಸ ಮತ್ತಷ್ಟು ಹೆಚ್ಚಾಗಿರುವುದು ಮತ್ತು ಅದರ ಮುಂದುವರಿದ ಪ್ರವೃತ್ತಿಗಳು ಅಸಮಾನತೆಯ ಅಂತರದ ವಿಸ್ತರಣೆಯನ್ನು ಇನ್ನೂ ಪ್ರತಿಬಿಂಬಿಸುತ್ತಲೇ ಇವೆ.
ಶೇ.37 ಕರಿಯ ಕುಟುಂಬಗಳ ಸಂಪತ್ತು ನಕಾರಾತ್ಮಕ !
ಜನವರಿ 15, 2019 ರಂದು ಡಾ. ಮಾರ್ಟಿನ್ ಲೂಥರ್ ಕಿಂಗ್( ಜೂನಿಯರ್)ರವರ 90 ನೇ ಜನ್ಮ ದಿನದ ಪ್ರಯುಕ್ತ “ಇನ್ಸ್ಟಿಟ್ಯೂಟ್ ಫಾರ್ ಪಾಲಿಸಿ ಸ್ಟಡೀಸ್” ನಡೆಸಿದ ಒಂದು ಸಮೀಕ್ಷೆಯ ವರದಿಯು ” ಅಮೆರಿಕದ ಸಂಪತ್ತು ಬಿಳಿ ಅಮೆರಿಕನ್ನರ ಕುಟುಂಬಗಳಲ್ಲಿ ಹೇಗೆ ಹೆಚ್ಚು ಸಾಂದ್ರೀಕರಿಸಿದೆ ಮತ್ತು ಕಪ್ಪು ಆಪ್ರಿಕನ್ ಕುಟುಂಬಗಳ ಸಂಪತ್ತಿನ ಪಾಲನ್ನು ಹೇಗೆ ವಂಚಿಸಲಾಗಿದೆ” ಎಂಬ ವಾಸ್ತವ ಚಿತ್ರಣವನ್ನು ಹೊರ ಹಾಕಿದೆ.
ಮಾರ್ಟಿನ್ ಲೂಥರ್ ಕಿಂಗ್ (ಜೂನಿಯರ್) ಕರಿಯರ ಮಾನವೀಯ ಹಕ್ಕುಗಳಿಗಾಗಿ ಜೀವನ ಪಯರ್ಂತ ಹೋರಾಟ ನಡೆಸಿದವರು. ಕೊನೆಗೆ ಇವರು ಕೊಲ್ಲಲ್ಪಟ್ಟರು. ಕರಿಯರ ವಿರುದ್ದ ಕ್ರೌರ್ಯಕ್ಕೆ ಮಾರ್ಟಿನ್ನರ ಕೊಲೆ ಕನ್ನಡಿ ಹಿಡಿದ ಹಾಗೆ.
ವಸಾಹತುಶಾಹಿಯಿಂದ ವಿಮುಕ್ತಿಗೊಂಡು ಯು.ಎಸ್. ಹೊಸದಾಗಿ ಸ್ಥಾಪನೆಯಾದ ನಂತರ, ಸುಮಾರು 250 ವರ್ಷಗಳ ಕಾಲ ಅವ್ಯಾಹತವಾಗಿ ನಡೆದಿದ್ದ ಗುಲಾಮಗಿರಿಯು ಅಧಿಕೃತವಾಗಿ 1865ರಲ್ಲಿ ಕೊನೆಗೊಂಡಿತು. ಆದರೆ ಕರಿಯರ ವಿರುದ್ಧ ಅಸಮಾನತೆಯ ಆಚರಣೆಯ ಕ್ರೌರ್ಯಗಳನ್ನು – ಜಿಮ್ ಕ್ರೌ ಕಾನೂನು, ರೆಡ್ ಲೈನಿಂಗ್ ಹಾಗೂ ವ್ಯಾಪಕ ಬಂಧÀನಗಳು – ಮುಂತಾದ ಅನೇಕ ಸಾರ್ವಜನಿಕ ನೀತಿಗಳ ಮೂಲಕ ಮುಂದುವರಿಸಲಾಯಿತು.
1983 ರಿಂದ 2016 ರ ನಡುವೆ, ಕಪ್ಪು ಅಮೆರಿಕನ್ನರ ಕುಟುಂಬದ ಸರಾಸರಿ ಸಂಪತ್ತು ಅರ್ಧಕ್ಕಿಂತಲೂ ಹೆಚ್ಚು ಇಳಿಕೆಯನ್ನು ಕಂಡಿದೆ. ಆದರೆ, ಇದೇ ಸಮಯದಲ್ಲಿ ಬಿಳಿ ಅಮೆರಿಕನ್ ಕುಟುಂಬದ ಸರಾಸರಿ ಸಂಪತ್ತು, ಶೇ.33 ರಷ್ಟು ಹೆಚ್ಚಾಗಿರುವುದನ್ನು ಈ ವರದಿ ದಾಖಲಿಸಿದೆ. ಇದು ಆಪ್ರಿಕನ್ ಅಮೆರಿಕನ್ ರಿಂದ ಮತ್ತು ಇತರೆ ದೇಶಗಳಿಂದ ವಲಸೆ ಬಂದು ನೆಲೆಸಿರುವ ಬಡ ಕಾರ್ಮಿಕರ ಶ್ರಮದಿಂದ ಯುಎಸ್ ನ ಆರ್ಥಿಕ ಅಭಿವೃದ್ಧಿ ವೃದ್ದಿಯಾಗುತ್ತಿರುವುದನ್ನು ಪ್ರತಿ ಬಿಂಬಿಸುತ್ತದೆ ಎಂದು ವರದಿಯು ಪ್ರಸ್ತಾಪಿಸಿದೆ. ಕಪ್ಪು ಅಮೆರಿಕನ್ನರ ಸಂಪತ್ತು ಕುಸಿಯುತ್ತಿರುವ ಈ ವರ್ಷಗಳಲ್ಲೇ, ಒಂದು ಕೋಟಿ ಡಾಲರುಗಳಿಗಿಂತ ಹೆಚ್ಚು ಸಂಪತ್ತು ಇರುವ ಕುಟುಂಬಗಳ ಸಂಖ್ಯೆ 8.56 ಪಟ್ಟು ಹೆಚ್ಚಳವಾಗಿದೆ. ಇದರ ಪರಿಣಾಮದಿಂದಾಗಿ, ಇನ್ನೊಂದು ತುದಿಯಲ್ಲಿ ಈಗ ಶೇ.37 ರಷ್ಟು ಕಪ್ಪು ಕುಟುಂಬಗಳ ಸರಾಸರಿ ಸಂಪತ್ತು ಶೂನ್ಯ ಅಥವಾ ನಕಾರಾತ್ಮಕವಾಗಿದೆ (ಅಂದರೆ ಅವರ ಆಸ್ತಿಗಿಂತ ಹೆಚ್ಚು ಸಾಲ ಇದೆ) ಎನ್ನಲಾಗಿದೆ. ಶೇ.15 ರಷ್ಟು ಬಿಳಿ ಅಮೆರಿಕನ್ನರ ಕುಟಂಬಗಳು ಮಾತ್ರ ಈ ಸ್ಥಿತಿಯಲ್ಲಿವೆ.
ಸಂಪತ್ತಿನ ಈ ವಿಷಮ ಜನಾಂಗೀಯ ವಿಭಜನೆಯು ಎಲ್ಲಾ ಅಮೆರಿಕನ್ನರ ಮೇಲೆ ಹಾಗೂ ಒಟ್ಟಾರೆ ಯಾಗಿ ಅಮೆರಿಕಾದ ಆರ್ಥಿಕತೆಯ ಮೇಲೆಯೂ ಗಾಡವಾದ ದುಷ್ಪರಿಣಾಮ ಬೀರಿದೆ. ಕಪ್ಪು ಜನಸಂಖ್ಯೆ ಹೆಚ್ಚಾದಂತೆ ಅಮೆರಿಕದ ಕುಟುಂಬಗಳ ಸರಾಸರಿ ಸಂಪತ್ತು ಕೂಡ ಕುಸಿದಿದೆ. 1983ರಲ್ಲಿ 84,111 ಡಾಲರ್ ಇದ್ದ ಸರಾಸರಿ ಸಂಪತ್ತು 2016ರಲ್ಲಿ 81,704 ಡಾಲರಿಗೆ ಕುಸಿದಿದೆ. 1983ರಲ್ಲಿ 6 ಅಮೆರಿಕನ್ ಕುಟುಂಬಗಳಲ್ಲಿ 1 ಕುಟುಂಬ ನಕಾರಾತ್ಮಕ ಸಂಪತ್ತು ಅನುಭವಿಸುತ್ತಿದ್ದು, 2016ರಲ್ಲಿ 5 ಕುಟುಂಬಗಳಲ್ಲಿ 1 ಕುಟುಂಬ ಆ ಸ್ಥಿತಿಯಲ್ಲಿದೆ. ಹಾಗೆಯೇ, ಕರಿಯರ ಸಂಪತ್ತಿನ ಸವೆತದ ಸುತ್ತ ಅನೇಕ ರೀತಿಯ ಚರ್ಚೆಗಳು ನಡೆಯುತ್ತಿವೆ. ಈ ಚರ್ಚೆಗಳು ಕರಿಯರ ಸೋಮಾರಿತನ, ಶಿಕ್ಷಣದಲ್ಲಿ ಹಿಂದುಳಿದಿರುವಿಕೆ ಮತ್ತು ನಿರಾಸಕ್ತಿ, ಕೆಲಸದ ಮತ್ತು ಇತರ ನೈತಿಕತೆಯ ಅಭಾವದ ಸುತ್ತ ಗಿರಕಿ ಹೊಡೆಯುತ್ತವೆ. ಅಂದರೆ ಜಗತ್ತಿನ ಎಲ್ಲೆಡೆಗೆ ಆಗುವಂತೆ ದಮನಿತರ ಶೋಚನೀಯ ಪರಿಸ್ಥಿತಿಗೆ ಅವರೇ ಕಾರಣ ಎನ್ನುವ ಸಾಮಾನ್ಯ ಉಳ್ಳವರ ಕಥನ. ಇದು ಮಿಥ್ಯೆ ಎಂದು ಹಲವು ಅಧ್ಯಯನಗಳು ತೋರಿಸುತ್ತವೆ. ಕಾಲೇಜು ಶಿಕ್ಷಣ ಪಡೆದ ಕರಿಯ ಕುಟುಂಬಗಳು ಹೈಸ್ಕೂಲ್ ಶಿಕ್ಷಣ ಪಡೆದ ಬಿಳಿಯ ಕುಟುಂಬಗಳಿಗಿಂತ ಕಡಿಮೆ ಸರಾಸರಿ ಸಂಪತ್ತು ಹೊಂದಿವೆ. ಏಕ-ಪೋಷಕ ಬಿಳಿ ಕುಟುಂಬಗಳು, ಕರಿಯ ದ್ವಿ-ಪೋಷಕ ಕುಟುಂಬಕ್ಕಿಂತ ಎರಡು ಪಟ್ಟು ಹೆಚ್ಚು ಶ್ರೀಮಂತರಾಗಿದ್ದಾರೆ.
ಒಟ್ಟಾರೆಯಾಗಿ, ಕರಿಯ-ಬಿಳಿಯ ಕುಟುಂಬಗಳ ಸಂಪತ್ತಿನ ಅಂತರ ಕರಿಯರ ವೈಯಕ್ತಿಕ ಗುಣಲಕ್ಷಣಗಳಿಂದಾಗಿ ಅಲ್ಲ. ಗುಲಾಮಗಿರಿ ಪ್ರಾರಂಭವಾಗಿ 400 ವರ್ಷಗಳಲ್ಲಿ ಕರಿಯ ಅಮೆರಿಕನ್ನರಿಗೆ ಸಂಪನ್ಮೂಲಗಳನ್ನು ನಿರಂತರವಾಗಿ ನಿರಾಕರಿಸಿರುವುದು ಕಾರಣ ಎಂದು ಈ ವರದಿಯಲ್ಲಿ ಗುರುತಿಸಿಲಾಗಿದೆ. ಮೊದಲ ಗುಲಾಮರನ್ನು ಆಪ್ರಿಕಾದಿಂದ ಒತ್ತಾಯಪೂರ್ವಕವಾಗಿ ಅಪಹರಿಸಿಕೊಂಡು ಬಂದದ್ದು, ಅವರಿಂದ ಅಮ್ಯೂಲ್ಯವಾದ ಶ್ರಮವನ್ನು ಉಚಿತವಾಗಿ ಮಾಡಿಸಿಕೊಳ್ಳಲೆಂದೆ’ ಎಂದು ಇನ್ಸ್ಟಿಟ್ಯೂಟ್ ಫಾರ್ ಪಾಲಿಸಿ ಸ್ಟಡೀಸ್ ತನ್ನ ವರದಿಯಲ್ಲಿ ಒತ್ತಿ ಹೇಳಿದೆ. ಉದ್ಯೋಗ, ಆದಾಯ, ಮನೆ ಮಾಲಿಕತ್ವ, ಷೇರ್ ಮಾಲಿಕತ್ವ, ಉದ್ಯಮ ಶೀಲತೆ ಮತ್ತು ಇತರೆ ಎಲ್ಲಾ ಆರ್ಥಿಕ ಸೂಚಕಗಳು ಸಂಪತ್ತಿನ ವಿಷಮ ಜನಾಂಗೀಯ ವಿಭಜನೆಯನ್ನು ಸ್ಪಷ್ಟವಾಗಿ ತೋರಿಸುತ್ತವೆ.
ಈ ಜನಾಂಗೀಯ ವಿಭಜನೆಯನ್ನು ನಿಜವಾದ ಅರ್ಥದಲ್ಲಿ ನಿವಾರಿಸಲು, ಐತಿಹಾಸಿಕವಾಗಿ ಬಿಳಿ ಅಮೆರಿಕನ್ ಸಮುದಾಯಗಳು ಸ್ವಾಧೀನ ಪಡಿಸಿಕೊಂಡಿರುವ ಬೃಹತ್ ಸಂಪತ್ತಿನ್ನಷ್ಟೇ ದೊಡ್ಡ ಪ್ರಮಾಣದಲ್ಲಿ ಕರಿಯ ಸಮುದಾಯಗಳಿಗೆ ಪರಿಹಾರ ಒದಗಿಸಬೇಕು ಅಥವಾ ಸಂಪತ್ತಿನ ವರ್ಗಾವಣೆ/ಹೂಡಿಕೆ ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲರನ್ನೂ ಒಳಗೊಂಡ ಆಮೂಲಾಗ್ರ ಸಂರಚನಾತ್ಮಕ ಬದಲಾವಣೆಯ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕೆ ದೃಢವಾದ ರಾಜಕೀಯ ಇಚ್ಛಾಶÀಕ್ತಿ ಇರಬೇಕಾಗುತ್ತದೆ. ಆಗ ಮಾತ್ರ ಆಫ್ರಿಕನ್ ಅಮೆರಿಕನ್ ರಿಗೆ ಅಂತಿಮವಾಗಿ ನ್ಯಾಯ ಒದಗಿಸಲು ಸಾಧ್ಯ. 400 ವರ್ಷಗಳ ಗುಲಾಮಗಿರಿಯ ಪರಿಣಾಮಗಳನ್ನು ತಾತ್ಕಾಲಿಕ ಬ್ಯಾಂಡ್-ಏಡ್ ಗಳು ನಿವಾರಿಸಲು ಸಾಧ್ಯವಿಲ್ಲ, ಎಂದು ವರದಿ ಹೇಳುತ್ತದೆ. “ಈ ದೇಶದಲ್ಲಿ ಅಮೆರಿಕನ್ನರು ಎಂದರೆ ಬಿಳಿಯರು ಮಾತ್ರ, ಉಳಿದವರು ಗುಲಾಮರು ಅಷ್ಟೇ” ಎಂಬ ಪ್ರಸಿದ್ಧ ಕರಿಯ ಲೇಖಕಿ ಟೋನಿ ಮಾರಿಸನ್ ಅವರ ಮಾತು ಸದ್ಯಕ್ಕಂತೂ ಸತ್ಯವೆನಿಸುತ್ತದೆ.
ಈ ಹಿನ್ನೆಲೆಯಲ್ಲಿ ಗುಲಾಮಗಿರಿಯ ಪ್ರಾರಂಭವಾಗಿ 400 ವರ್ಷಗಳ ಆಚರಣೆಯ ಸುತ್ತ ಈ ಕುರಿತು ತೀವ್ರ ರಾಜಕೀಯ ಚರ್ಚೆ ಆರಂಭವಾಗಿದೆ. 2014ರಲ್ಲೇ 250 ವರ್ಷಗಳ ಗುಲಾಮಗಿರಿಗೆ ಕರಿಯರಿಗೆ ಪರಿಹಾರ ಒದಗಿಸಬೇಕು ಎಂದು ವಾದಿಸುವ ತಾ ನೆಹಿಸಿ ಕೋಟ್ಸ್ ಎನ್ನುವವರ ವರದಿ ಪ್ರಕಟವಾಯಿತು. 2017ರಲ್ಲಿ ಪ್ಯೂ (ಪಿ.ಇ.ಡಬ್ಲ್ಯೂ) ಅಧ್ಯಯನ ಸರಾಸರಿ ಬಿಳಿಯ ಕುಟುಂಬಗಳ ಆದಾಯ ಕರಿಯ ಕುಟುಂಬಗಳ ಆದಾಯದ 10 ಪಟ್ಟು ಎಂದಿದೆ. ಡೆಮೊಕ್ರಾಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಸೆನೆಟರ್ ಕೊರಿ ಬುಕರ್ ಕರಿಯರಿಗೆ ಪರಿಹಾರ ಒದಗಿಸುವ ಬಗ್ಗೆ ಒಂದು ಮಸೂದೆಯನ್ನು ಮಂಡಿಸಿದ್ದಾರೆ. ಇತರ ಡೆಮೊಕ್ರಾಟಿಕ್ ಅಧ್ಯಕ್ಷೀಯ ಅಭ್ಯರ್ಥಿಗಳಾದ ಎಲಿಜಬೆತ್ ವಾರೆನ್ ಮತ್ತು ಬರ್ನಿ ಸ್ಯಾಂಡರ್ಸ್ ಅದನ್ನು ಬೆಂಬಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿಕೊಂಡಿದ್ದಾರೆ.
ಅಮೆರಿಕದ ಗುಲಾಮಗಿರಿಯ ಸ್ಥೂಲ ಚರಿತ್ರೆ
1619 : ವರ್ಜೀನಿಯಾಕ್ಕೆ 20 ಆಫ್ರಿಕರನ್ನು ಹೊತ್ತ ಹಡಗಿನ ಆಗಮನ; ಡಚ್ ವ್ಯಾಪಾರಿಯಿಂದ ಅವರನ್ನು ಗುಲಾಮರಾಗಿ ಮಾರಾಟ; ಗುಲಾಮಗಿರಿಯ ಆರಂಭ.
1619-1810 : ಆಫ್ರಿಕನ್ನರನ್ನು ಅಪಹರಿಸಿ ಅಟ್ಲಾಂಟಿಕ್ ಸಾಗರದ ಮೇಲೆ ಹಡಗಿನಲ್ಲಿ ಸಾಗಾಣಿಕೆ ಮಾಡಿ ಗುಲಾಮರಾಗಿ ಅಮೆರಿಕದಲ್ಲಿ ಮಾರಾಟ ಮಾಡುವ ವಾಪಾರ ಮುಂದುವರೆಯಿತು. 1700 ರಲ್ಲಿ ಹತ್ತು ಸಾವಿರದಷ್ಟಿದ್ದ ಗುಲಾಮರ ಸಂಖ್ಯೆ, 1760 ಹೊತ್ತಿಗೆ 2 ಲಕ್ಷಕ್ಕೆ ಹತ್ತಿರವಾಗಿ, 1810ರ ಹೊತ್ತಿಗೆ 3 ಲಕ್ಷ ದಾಟಿತ್ತು.
1661 : ಮೇರಿಲ್ಯಾಂಡಿನಲ್ಲಿ ಕರಿಯ ಗುಲಾಮರು ಮತ್ತು ಬಿಳಿಯರ ನಡುವೆ ಮದುವೆ ನಿಷೇಧಿಸುವ ಮೊದಲ ಕಾನೂನು: ಮುಂದೆ ಇಂತಹ ಕಾನೂನುಗಳು ಹೆಚ್ಚಿನ ಉತ್ತರ ಅಮೆರಿಕದ ಬ್ರ್ರಿಟಿಷ್ ವಸಾಹತುಗಳಲ್ಲಿ ಬಂದವು.
1960ರಲ್ಲೂ ಇನ್ನೂ ಯು.ಎಸ್. ನ 20 ರಾಜ್ಯಗಳಲ್ಲಿ ಇಂತಹ ಕಾನೂನುಗಳು ಇದ್ದವು. 2000ದಲ್ಲಿ ಅಲಬಾಮಾ ಇಂತಹ ಕಾನೂನು ತೆಗೆದು ಹಾಕಿದ ಕೊನೆಯ ರಾಜ್ಯವಾಯಿತು.
1776-1790 : ‘ಮಾನವರೆಲ್ಲ ಹುಟ್ಟಿನಿಂದ ಸಮಾನರು’ ಎಂದ ಅಮೆರಿಕನ್ ಸ್ವಾತಂತ್ರ್ಯ ಘೋಷಣೆ ಕರಿಯ ಗುಲಾಮರಿಗೆ ¯ಗಾವಾಗಲಿಲ್ಲ. ಗುಲಾಮರ ಸಾಗಾಣಿಕೆ ಮುಂದುವರೆಯಿತು, ಅದರಲ್ಲೂ ವಿಶೇಷವಾಗಿ ದಕ್ಷಿಣದ ಹತ್ತಿ ಬೆಳೆಯುವ ಪ್ರಾಂತ್ಯಗಳಲ್ಲಿ ದೊಡ್ಡ ಸಂಖ್ಯೆಯ ಕರಿಯ ಗುಲಾಮರನ್ನು ನೆಲೆಸಲಾಯಿತು. 1790 ಜನಗಣತಿಯ ಪ್ರಕಾರ ಇಂತಹ 3 ಪ್ರಾಂತ್ಯಗ¼ಲ್ಲಿ ಕರಿಯ ಗುಲಾಮರ ಸಂಖ್ಯೆ 18 ಲಕ್ಷ ದಾಟಿತ್ತು. ಆ ಪ್ರಾಂತ್ಯಗಳ ಒಟ್ಟು ಜನಸಂಖ್ಯೆಯ ಅರ್ಧಕ್ಕಿಂತಲೂ ಹೆಚ್ಚಿತ್ತು.
1808 : 18ನೇ ಶತಮಾನದಲ್ಲಿ ಬ್ರಿಟಿಷರು ನಡೆಸಿದ ವ್ಯಾಪಕ ಆಫ್ರಿಕನ್ ಗುಲಾಮರ ವ್ಯಾಪಾರದಲ್ಲಿ 6 ಲಕ್ಷ ಕರಿಯರನ್ನು ಅಮೆರಿಕಾಕ್ಕೆ ಸಾಗಿಸಲಾಯತು. 1808ರಲ್ಲಿ ಗುಲಾಮರ ವ್ಯಾಪಾರವನ್ನು (ಗುಲಾಮಗಿರಿಯನ್ನಲ್ಲ, ಗುಲಾಮರ ವ್ಯಾಪಾರವನ್ನು ಮಾತ್ರ) ನಿಷೇಧಿಸುವ ವರೆಗೆ ಅದು ಭಾರಿ ಪ್ರಮಾಣದಲ್ಲಿ ಮುಂದುವರೆಯಿತು.
1860 : ಕರಿಯ ಗುಲಾಮರು ಮತ್ತು ಅವರ ಸಂತತಿಯೆಲ್ಲಾ ಸೇರಿ 1860ರ ಜನಗಣತಿಯ ಹೊತ್ತಿಗೆ ಕರಿಯರ ಸಂಖ್ಯೆ 40 ಲಕ್ಷಕ್ಕೆ (ಒಟ್ಟು ಜನಸಂಖ್ಯೆಯ ಶೇ. 13) ಏರಿತ್ತು.
1865-68 : ಅಮೆರಿಕದ ಆಂತರಿಕ ಯುದ್ಧದಲ್ಲಿ ಗುಲಾಮಗಿರಿ ಸಹ ಒಂದು ವಿಷಯವಾಗಿತ್ತು. ಆದರೆ ಅದೇ ಮುಖ್ಯವಾಗಿರಲಿಲ್ಲ. ದಕ್ಷಿಣದ ಪ್ರಾಂತ್ಯಗಳ ಪ್ರತ್ಯೇಕತೆ ಮುಖ್ಯ ವಿಷಯವಾಗಿತ್ತು. ಆದರೆ ಯುದ್ಧ ನಂತರ ಕರಿಯರ ಮೇಲಿದ್ದ ಹಲವು ನಿರ್ಬಂಧಗಳನ್ನು ಸಡಿಲಿಸಲಾಯಿತು. ಅಮೆರಿಕದಲ್ಲಿ ಆಗ ನೆಲೆಸಿದ್ದ ಮತ್ತು ಅಲ್ಲೇ ಹುಟ್ಟಿದ್ದ ಕರಿಯರಿಗೆ ನಾಗರಿಕ ಹಕ್ಕು ಕೊಡಲಾಯಿತು.
1870–1964 : ಜಿಮ್ ಕ್ರೋ ಕಾನೂನುಗಳು ಎಂದು ಕರೆಯಲಾಗುವ ಕಾನೂನುಗಳು ಹೆಚ್ಚಿನ ದಕ್ಷಿಣದ ಪ್ರಾಂತ್ಯಗಳಲ್ಲಿ ಜಾರಿಗೆ ಬಂತು. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಕರಿಯರು ಮತ್ತು ಬಿಳಿಯರು ಒಟ್ಟಿಗೆ ಇರುವಂತಿಲ್ಲ ಎಂಬುದು ಈ ಕಾನೂನುಗಳ ಸಾರಾಂಶ. ಇದರ ಪ್ರಕಾರವೇ ಸಾರ್ವಜನಿಕ ಸಾರಿಗೆಯಲ್ಲಿ, ಹೊಟೆಲುಗಳಲ್ಲಿ ಎಲ್ಲೆಲ್ಲೂ ಕರಿಯರನ್ನು ಪ್ರತ್ಯೇಕಿಸಲಾಗಿತ್ತು. ಇಂತಹ ಒಂದಲ್ಲ ಒಂದು ಕಾನೂನು ಒಂದಲ್ಲ ಒಂದು ಪ್ರಾಂತ್ಯದಲ್ಲಿ 1964ರವರೆಗೂ ಜಾರಿಯಲ್ಲಿದ್ದವು. 1958ರಲ್ಲಷ್ಟೇ ಯು.ಎಸ್. ಮಿಲಿಟರಿಯಲ್ಲಿ ಕರಿಯರ ಪ್ರತ್ಯೇಕ ಘಟಕಗಳನ್ನು ವಿಸರ್ಜಿಸಲಾಯಿತು. ಹಲವು ದಕ್ಷಿಣದ ಪ್ರಾಂತ್ಯಗಳಲ್ಲಿ ಒಂದಲ್ಲ ಒಂದು ಕಾರಣ ಕೊಟ್ಟು ಕರಿಯರ ಮತದಾನದ ಹಕ್ಕನ್ನು ಮೊಟಕುಗೊಳಿಸಲಾಗುತ್ತಿತ್ತು. ಈಗಲೂ ಅದು ಕೆಲವು ಪ್ರಾಂತ್ಯಗಳಲ್ಲಿ ಹೊಸ ರೂಪಗಳಲ್ಲಿ ಮುಂದುವರೆದಿದೆ.
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243




