Connect with us

ದಿನದ ಸುದ್ದಿ

ಭಾರತ- ಅಮೆರಿಕ ವ್ಯಾಪಾರ ಸಂಬಂಧಗಳು : ಅವರ ಸ್ವರಕ್ಷಣಾತ್ಮಕ ನೀತಿಗಳಿಗೆ ನಮ್ಮ ಸಂತೋಷದ ಸ್ವೀಕೃತಿ?

Published

on

  • ಮೇರಿಕಾ ತನ್ನ ಸ್ವರಕ್ಷಣಾತ್ಮಕ ನೀತಿಯನ್ನು ಈಗ ಆರ್ಥಿಕವಾಗಿ ಬಲಗೊಳ್ಳುತ್ತಿರುವ ದೇಶಗಳು ತಾವೇ ಸಂತೋಷದಿಂದ ಒಪ್ಪುವಂತೆ ಅವರ ಮನವೊಲಿಸುವ ಹೊಸದೊಂದು ಕಾರ್ಯತಂತ್ರಕ್ಕಿಳಿದಿದೆ. ಈ ನಿಟ್ಟಿನಲ್ಲಿ ಚೀನಾದೊಂದಿಗೆ ಅದರ ಆಟ ನಡೆಯಲಿಲ್ಲ. ಅದು ಬಗ್ಗಲಿಲ್ಲ ಮಾತ್ರವಲ್ಲ ಅದು ಅಮೇರಿಕಾದ ಸಾಲು ಸಾಲು ರಫ್ತುಗಳ ಮೇಲೆ ಹೆಚ್ಚಿನ ಆಮದು ಸುಂಕ ವಿಧಿಸಿದೆ. ಆದರೆ ಯಾವ ಪ್ರತೀಕಾರಾತ್ಮಕ ಕ್ರಮಗಳನ್ನೂ ಕೈಗೊಳ್ಳದೆ ಒಪ್ಪಿಕೊಳ್ಳುವಂತೆ ಮತ್ತು ಅದರ ಜೊತೆಯಲ್ಲಿ, ಸಾಧ್ಯವಾದರೆ, ಆಮದು ಸುಂಕವನ್ನು ತಗ್ಗಿಸುವಂತೆ ಭಾರತದ ಮನವೊಲಿಸುವ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಿರುವಂತೆ ಕಾಣುತ್ತದೆ. ಇರಾನಿನಿಂದ ತೈಲ ಕೊಳ್ಳಕೂಡದು, ತನ್ನ ತುಟ್ಟಿಯಾದ ತೈಲವನ್ನು ಕೊಳ್ಳಬೇಕು ಎಂಬ ಅಮೇರಿಕದ ತಗಾದೆಗೆ ಮೋದಿ ಸರ್ಕಾರವು, ಚೀನಾದಂತಲ್ಲದೆ, ಸಂಪೂರ್ಣವಾಗಿ ತಲೆಬಾಗಿದೆ.

ತ್ತೊಂಭತ್ತನೇ ಶತಮಾನದ ಕೊನೆಯ ಮತ್ತು ಇಪ್ಪತ್ತನೇ ಶತಮಾನದ ಆದಿ ಭಾಗದ ಅವಧಿಯಲ್ಲಿ, ಆಗ ಬಲ ಹೊಂದುತ್ತಿದ್ದ ಯೂರೋಪಿನ ದೇಶಗಳಿಗೆ ಮತ್ತು ಅಮೇರಿಕಾಗೆ ಹೋಲಿಸಿದರೆ, ಬಂಡವಾಳಶಾಹಿ ಜಗತ್ತಿನ ಅಂದಿನ ದಿಗ್ಗಜ ಎನಿಸಿದ್ದ ಬ್ರಿಟನ್ನಿನ ಚಾಲ್ತಿ ಖಾತೆಯು ಕೊರತೆಯಲ್ಲಿತ್ತು. ನಿಜ ಸಂಗತಿಯೆಂದರೆ, ಇಂತಹ ಕೊರತೆ ಮುಂಚೂಣಿ ದೇಶದ ಸ್ವಭಾವವೇ ಆಗಿದೆ. ಏಕೆಂದರೆ, ಅಂತಾರಾಷ್ಟ್ರೀಯ ಕರೆನ್ಸಿ ವಿನಿಮಯ ಸಂಬಂಧಿತವಾಗಿ ಆ ಮುಂಚೂಣಿ ದೇಶವು ವ್ಯಾವಹಾರಿಕ ದೃಷ್ಟಿಯಿಂದ ಇತರೆ ದೇಶಗಳ ಬೆಳವಣಿಗೆಗೆ ಅವಕಾಶ ಕಲ್ಪಿಸುವ ಅವಶ್ಯಕತೆಯಿಂದಾಗಿ, ಆ ದೇಶದ ಚಾಲ್ತಿ ಖಾತೆಯಲ್ಲಿ ಕೊರತೆ ಉಂಟಾಗುತ್ತಿತ್ತು.

ಅದೇ ರೀತಿಯಲ್ಲಿ, ಈಗ ಬಲಗೊಳ್ಳುತ್ತಿರುವ ದೇಶಗಳಿಗೆ ಹೋಲಿಸಿದರೆ, ಇಂದಿನ ಬಲಾಢ್ಯ ಅರ್ಥವ್ಯವಸ್ಥೆ ಎನಿಸಿರುವ ಅಮೇರಿಕಾದ ಚಾಲ್ತಿ ಖಾತೆಯು ಕೊರತೆಯಲ್ಲಿದೆ. ಅದು ಸ್ವಾಭಾವಿಕವೇ. ಆದರೆ, ಅಂದಿನ ಬ್ರಿಟನ್ ಮತ್ತು ಇಂದಿನ ಬಲಾಢ್ಯ ಅಮೇರಿಕಾ ದೇಶಗಳ ಚಾಲ್ತಿ ಖಾತೆಯ ಕೊರತೆಗಳಲ್ಲಿ ಒಂದು ವ್ಯತ್ಯಾಸವಿದೆ. ಯಾವ ದೇಶಗಳೊಂದಿಗೆ ಬ್ರಿಟನ್ನಿನ ಚಾಲ್ತಿ ಖಾತೆ ಕೊರತೆಯಲ್ಲಿತ್ತೊ ಆ ದೇಶಗಳಿಗೇ ಬ್ರಿಟನ್ ಬಂಡವಾಳವನ್ನು ಒದಗಿಸಿಯೂ ತನ್ನ ಚಾಲ್ತಿ ಖಾತೆಯ ಕೊರತೆಯನ್ನು ನಿಭಾಯಿಸಿಕೊಳ್ಳುತ್ತಿತ್ತು.

ಹೇಗೆಂದರೆ, ಬ್ರಿಟನ್ ತನ್ನ ಅಧೀನದಲ್ಲಿದ್ದ ವಸಾಹತು ದೇಶಗಳಿಗೆ ಅಲ್ಲಿನ ಉದ್ದಿಮೆಗಳು ನಾಶಗೊಳ್ಳುವಂತಹ ರಫ್ತುಗಳ ಮೂಲಕ ತನ್ನ ಚಾಲ್ತಿ ಖಾತೆಯಲ್ಲಿ ಹೆಚ್ಚುವರಿ ಉಳಿಯುವಂತೆ ನೋಡಿಕೊಳ್ಳುತ್ತಿತ್ತು ಮತ್ತು ಆ ವಸಾಹತು ದೇಶಗಳ ಬರುವ ರಫ್ತು ಹೆಚ್ಚುವರಿಯನ್ನು ಬಿಟ್ಟಿಯಾಗಿ ಲಪಟಾಯಿಸಿಕೊಂಡು ತಾನು ಮಾಡಬೇಕಾದ ಪಾವತಿಗಳನ್ನು ಇತ್ಯರ್ಥಮಾಡಿಕೊಳ್ಳುತ್ತಿತ್ತು. ಈ ರೀತಿಯಲ್ಲಿ, ಬ್ರಿಟನ್ ಆಗ ಬಲಗೊಳ್ಳುತ್ತಿದ್ದ ದೇಶಗಳೊಂದಿಗಿನ ತನ್ನ ಬಂಡವಾಳ ಖಾತೆ ಮತ್ತು ಚಾಲ್ತಿ ಖಾತೆಯ ಕೊರತೆಗಳನ್ನು ಸರಿದೂಗಿಸಿಕೊಂಡು ತನಗೆ ವ್ಯಾಪಾರದ ಶಿಲ್ಕು ಸಮಸ್ಯೆ ಉಂಟಾಗದಂತೆ ನೋಡಿಕೊಂಡಿತು.

ಅಂತಹ ಸಾಧ್ಯತೆಗಳು ಅಮೇರಿಕದ ಪಾಲಿಗೆ ಲಭ್ಯವಿಲ್ಲ. ಹಿಂದೆ ವಸಾಹತುಗಳಾಗಿದ್ದ ದೇಶಗಳಿಂದ, ಬೌದ್ಧಿಕ ಆಸ್ತಿ ಹಕ್ಕು ಮತ್ತು ಅಂತಹ ಹಕ್ಕುಸ್ವಾಮ್ಯಗಳ ಮೂಲಕ ಅಮೇರಿಕಾ ಈಗ ತನ್ನ ಚಾಲ್ತಿ ಖಾತೆಯಲ್ಲಿ ಹೆಚ್ಚುವರಿ ಉಳಿಯುವಂತೆ ನೋಡಿಕೊಳ್ಳುತ್ತಿದೆ. ಆದರೂ, ಅದರ ವ್ಯಾಪಾರ ಶಿಲ್ಕು ಚುಕ್ತಾ ಮಾಡಿಕೊಳ್ಳಲು ಇದಿಷ್ಟೇ ಗಳಿಕೆ ಎಟುಕುವುದಿಲ್ಲ. ವಸಾಹತೀಕರಣವು ರಾಜಕೀಯವಾಗಿ ಕೊನೆಗೊಂಡಿದ್ದರಿಂದಾಗಿ, ಹಿಂದೆ ವಸಾಹತುಗಳಾಗಿದ್ದ ದೇಶಗಳಿಂದ ಬಿಟ್ಟಿಯಾಗಿ ಹಣ ಮಾಡಿಕೊಳ್ಳುತ್ತಿದ್ದ ರೀತಿಯಲ್ಲಿ ಬಲಿಷ್ಟ ಬಂಡವಾಳಶಾಹಿ ದೇಶಗಳಿಗೆ ಬಿಟ್ಟಿ ಹಣ ಗಳಿಸುವುದು ಈಗ ಅಸಾಧ್ಯವಾಗಿದೆ.

ಹಾಗಾಗಿ, ತನ್ನ ವ್ಯಾಪಾರ ಶಿಲ್ಕು ಬಗೆಹರಿಸಿಕೊಳ್ಳುವ ಸಲುವಾಗಿ ಗತ್ಯಂತರವಿಲ್ಲದೆ ಬಹಳ ವರ್ಷಗಳಿಂದ ಅಮೇರಿಕಾ ಹೊರ ದೇಶಗಳಿಂದ ಸಾಲ ಪಡೆಯುತ್ತಿದೆ. ವಿಶ್ವದ ಅತ್ಯಂತ ಬಲಶಾಲಿ ಬಂಡವಾಳಶಾಹಿ ದೇಶ ಎನಿಸಿರುವ ಅಮೇರಿಕಾ ಈಗ ಅತಿ ದೊಡ್ಡ ಸಾಲಗಾರನೂ ಆಗಿದೆ. ಇಂತಹ ಒಂದು ಪರಿಸ್ಥಿತಿ ಬಂಡವಾಳಶಾಹಿ ಇತಿಹಾಸದಲ್ಲಿ ಸೃಷ್ಠಿಯಾಗಿರುವುದು ಇದೇ ಮೊದಲು. ಹಾಗಾಗಿ, ಹೊರ ದೇಶಗಳಿಂದ ಮಿತಿ ಇಲ್ಲದೇ ಪಡೆಯುತ್ತಿದ್ದ ಸಾಲಗಳ ಮೇಲೆ ಅಮೇರಿಕಾ ಈಗ ಕಡಿವಾಣ ಹಾಕಬಯಸಿದೆ.

ಜೊತೆಗೆ, ಬೇರೆ ದೇಶಗಳಲ್ಲಿ ಉದ್ದಿಮೆಗಳನ್ನು ನಾಶಗೊಳ್ಳುವಂತಹ ರಫ್ತುಗಳ ಮೂಲಕ ತನ್ನ ಆಂತರಿಕ ಆರ್ಥಿಕ ಚಟುವಟಿಕೆಗಳನ್ನು ಪೋಷಿಸಿಕೊಳ್ಳುವುದೂ ಅಮೇರಿಕಕ್ಕೆ ಸಾಧ್ಯವಿಲ್ಲವಾಗಿದೆ. ಹಿಂದೊಮ್ಮೆ ಅತ್ಯಂತ ಬಲಶಾಲಿ ವಸಾಹತುಶಾಹಿ ಶಕ್ತಿ ಎನಿಸಿದ್ದ ಬ್ರಿಟನ್ ಅಂತಹ ಉದ್ದಿಮೆಗಳ ನಾಶದ ರಫ್ತುಗಳನ್ನು ಬೇಕಾದಷ್ಟು ಮಾಡಬಹುದಿತ್ತು ಏಕೆಂದರೆ, ಅದರ ವಸಾಹತು ಮಾರುಕಟ್ಟೆಗಳು ಅದರ ಹತೋಟಿಯಲ್ಲಿದ್ದು ಅದಕ್ಕೆ ಸುಲಭವಾಗಿ ಒದಗುತ್ತಿದ್ದವು. ಆದರೆ, ಅಮೇರಿಕಾಗೆ ಸುಲಭವಾಗಿ ಒದಗುವ ಅಂತಹ ವಸಾಹತು ಮಾರುಕಟ್ಟೆಗಳು ಇಲ್ಲ.

ತನ್ನ ಆಂತರಿಕ ಆರ್ಥಿಕ ಚಟುವಟಿಕೆಗಳ ಮಂದ ಗತಿ ಮತ್ತು ಏರುತ್ತಿರುವ ಹೊರಗಿನ ಸಾಲದ ಹೊರೆಯ ಸನ್ನಿವೇಶದಲ್ಲಿ ಅಮೇರಿಕಾ ಸ್ವರಕ್ಷಣಾತ್ಮಕ ವ್ಯಾಪಾರ ನೀತಿಗಳನ್ನು ಅಳವಡಿಸಿಕೊಳ್ಳುವ ಹೊಸದೊಂದು ಸಾಹಸದಲ್ಲಿ ತೊಡಗಿದೆ. ತನ್ನ ಈ ಸ್ವರಕ್ಷಣಾತ್ಮಕ ನೀತಿಯನ್ನು ಈಗ ಬಲಗೊಳ್ಳುತ್ತಿರುವ ದೇಶಗಳು ತಾವೇ ಸಂತೋಷದಿಂದ ಒಪ್ಪುವಂತೆ ಅವರ ಮನವೊಲಿಸುವ ಕಾರ್ಯತಂತ್ರವದು.

ಅಮೇರಿಕಾ ಈ ನಿಟ್ಟಿನಲ್ಲಿ ಚೀನಾದ ಮನವೊಲಿಸಲು ಪ್ರಯತ್ನಿಸಿತು. ಇಂತಹ ಪ್ರಯತ್ನಗಳ ಮೂಲಕ ಮಂದ ಗತಿಯಲ್ಲಿರುವ ತನ್ನ ಆರ್ಥಿಕ ಚಟುವಟಿಕೆಗಳನ್ನು ಚುರುಕುಗೊಳಿಸುವ ಮತ್ತು ತನ್ನ ವ್ಯಾಪಾರ ಶಿಲ್ಕು ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಭಾರದ ಹೊರೆಯನ್ನು ಇತರ ದೇಶಗಳು ಹೊರುವಂತೆ ಮಾಡಬಹುದು ಎಂದು ಅಮೇರಿಕಾ ಆಶಿಸಿದೆ. ಆದರೆ, ಚೀನಾದೊಂದಿಗೆ ಅದರ ಆಟ ನಡೆಯಲಿಲ್ಲ. ಚೀನಾ ಬಗ್ಗಲಿಲ್ಲ ಮಾತ್ರವಲ್ಲ ಅದು ಅಮೇರಿಕಾದ ಸಾಲು ಸಾಲು ರಫ್ತುಗಳ ಮೇಲೆ ಹೆಚ್ಚಿನ ಆಮದು ಸುಂಕ ವಿಧಿಸಿದೆ.

ತನ್ನ ಈ ಸ್ವರಕ್ಷಣಾತ್ಮಕ ನೀತಿಯನ್ನು ಯಾವ ಪ್ರತೀಕಾರಾತ್ಮಕ ಕ್ರಮಗಳನ್ನೂ ಕೈಗೊಳ್ಳದೆ ಒಪ್ಪಿಕೊಳ್ಳುವಂತೆ ಮತ್ತು ಅದರ ಜೊತೆಯಲ್ಲಿ, ಸಾಧ್ಯವಾದರೆ, ಆಮದು ಸುಂಕವನ್ನು ತಗ್ಗಿಸುವಂತೆ ಭಾರತದ ಮನವೊಲಿಸಲು ಅಮೇರಿಕಾ ಪ್ರಯತ್ನಿಸುತ್ತಿದೆ. ಜೊತೆಗೆ, ಏಷ್ಯಾದ ದೇಶಗಳಿಂದ ಕಳೆದ ಹತ್ತು ಹದಿನೈದು ವರ್ಷಗಳಿಂದ ಭಾರತವು ಹೆಚ್ಚು ಹೆಚ್ಚಾಗಿ ತರಿಸಿಕೊಳ್ಳುತ್ತಿರುವ ಆಮದು ವಸ್ತುಗಳನ್ನು ತನ್ನಿಂದಲೇ ಆಮದು ಮಾಡಿಕೊಳ್ಳುವಂತೆಯೂ ಭಾರತದ ಮನವೊಲಿಸುತ್ತಿದೆ. ಅಮೇರಿಕವು ಏಷ್ಯಾದ ದೇಶಗಳ ರಫ್ತುಗಳನ್ನು ಪಲ್ಲಟಗೊಳಿಸಿ ತನ್ನ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆಗೆ ಸುಲಭ ಪ್ರವೇಶ ದೊರಕಿಸಿಕೊಳ್ಳುವ ಮೂಲಕ ಭಾರತದೊಂದಿಗಿನ ವ್ಯಾಪಾರದ ಶಿಲ್ಕು ಗಾತ್ರವನ್ನು ತಗ್ಗಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಈ ಉದ್ದೇಶಕ್ಕಾಗಿ, ಅಮೇರಿಕಾದ ಒಂದು ತಂಡವು ಶೀಘ್ರದಲ್ಲೇ ಭಾರತಕ್ಕೆ ಬರಲಿದೆ.

ಈ ಸಂಬಂಧವಾಗಿ, ಭಾರತದೊಂದಿಗೆ ಅಮೇರಿಕಾಗೆ ಎರಡು ಸಮಸ್ಯೆಗಳಿವೆ. ಮೊದಲನೆಯದು, ಮಾರಾಟದ ಸರಕುಗಳ ಶಿಲ್ಕು ಭಾರತಕ್ಕೆ ಅನುಕೂಲಕರವಾಗಿವೆ. ಎರಡನೆಯದು, ಬೌದ್ಧಿಕ ಆಸ್ತಿ ಹಕ್ಕುಸ್ವಾಮ್ಯದ ಭಾರತದ ವ್ಯವಸ್ಥೆ ಅಮೇರಿಕಕ್ಕೆ ಅನುಕೂಲಕರವಾಗಿಲ್ಲ.

ಭಾರತವು ಅಮೇರಿಕಾಗೆ ಮಾರಿದ ಸರಕು ಸಾಮಗ್ರಿಗಳಿಂದಾಗಿ 2017ರಲ್ಲಿ ವ್ಯಾಪಾರದ ಶಿಲ್ಕು 27.3 ಬಿಲಿಯನ್ ಡಾಲರ್‌ನಷ್ಟು ಮೊತ್ತವು ಭಾರತದ ಪರವಾಗಿತ್ತು. 2018ರಲ್ಲಿ ಅದು ಸುಮಾರು ನಾಲ್ಕು ಬಿಲಿಯನ್ ಡಾಲರ್‌ನಷ್ಟು ಇಳಿದಿದೆ. ಕಾರಣ, ಮೆರಿಕಾದ ಸರಕುಗಳಿಗೆ ಭಾರತವು ಬೇಡಿಕೆಯ ಹೆಚ್ಚಳವಾಗಿದೆ, ಮುಖ್ಯವಾಗಿ, ಇಂಧನ ಮತ್ತು ನಾಗರಿಕ ವಿಮಾನಗಳನ್ನು ಅಮೇರಿಕಾದಿಂದ ಆಮದು ಮಾಡಿಕೊಂಡಿದೆ. ಆದಾಗ್ಯೂ, ಭಾರತದ ವ್ಯಾಪಾರದ ಶಿಲ್ಕು ಮೊತ್ತವು ಗಣನೀಯವೇ. ಈ ಅಂತರವನ್ನು ಅಮೇರಿಕಾ ತಗ್ಗಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

ಒಂದು ದಶಕದ ಹಿಂದೆ ಭಾರತದ ಆಮದುಗಳ ಪಾಲಿನಲ್ಲಿ ಅಮೇರಿಕಾದ ಭಾಗ 8.5% ಇತ್ತು. ಈಗ ಅದು 5.7%ಗೆ ಇಳಿದಿದೆ. ಇದೇ ಅವಧಿಯಲ್ಲಿ, ಭಾರತದ ಆಮದುಗಳ ಪಾಲಿನಲ್ಲಿ ಚೀನಾದ ಭಾಗ 11% ಗಿಂತಲೂ ಕಡಿಮೆ ಇದ್ದದ್ದು ಈಗ 16%ಗೆ ಏರಿದೆ. ಅಂದರೆ, ಭಾರತದ ಆಮದುಗಳು ಏಷ್ಯನ್ ಮೂಲಗಳತ್ತ ಹೊರಳಿವೆ. ಅದನ್ನು ಬದಲಿಸಲು ಅಮೇರಿಕಾ ಪ್ರಯತ್ನಿಸುತ್ತಿದೆ.

ಭಾರತವು ಆಮದು ಮಾಡಿಕೊಳ್ಳುತ್ತಿರುವ ಸೇಬು, ಬಾದಾಮಿ ಮುಂತಾದ ಪದಾರ್ಥಗಳ ಬಗ್ಗೆ ತನ್ನ ಮನೋಭಾವವನ್ನು ಬದಲಿಸಿಕೊಳ್ಳಬೇಕೆಂದು ಕಳೆದ ದಶಕದುದ್ದಕ್ಕೂ ಅಮೇರಿಕಾ ಒತ್ತಾಯಿಸಿದೆ. ಅದೇ ರೀತಿಯಲ್ಲಿ, ಭಾರತವು ವ್ಯಾಪಾರದ ಜಿಎಸ್‌ಪಿ ಕಾರ್ಯಕ್ರಮದ(ಆದ್ಯತೆಗಳ ಸಾಮಾನ್ಯಗೊಳಿಸಿದ ವ್ಯವಸ್ಥೆ-ಅಮೆರಿಕಾದ ಆಮದು ಸುಂಕಗಳಲ್ಲಿ ರಿಯಾಯ್ತಿ ಪಡೆವ ವ್ಯವಸ್ಥೆ) ಅಡಿಯಲ್ಲಿ ಮಾಡುತ್ತಿರುವ ರಫ್ತಿನ ಪಟ್ಟಿಯಿಂದ ಅನೇಕ ಐಟಂಗಳನ್ನು ತೆಗೆದು ಹಾಕಲಾಗಿದೆ. ಜೊತೆಯಲ್ಲಿ, ಇರಾನಿನಿಂದ ತೈಲ ಕೊಳ್ಳಕೂಡದು ಎಂದು ಅಮೇರಿಕ ಹೇರಿದ ಒತ್ತಡದಿಂದಾಗಿ, ಇರಾನಿನಿಂದ ಆಮದಾಗುತ್ತಿದ್ದ ತೈಲದ ಒಂದು ಭಾಗವು ಅಮೇರಿಕಾದ ಪಾಲಾಗಲಿದೆ.

ಇರಾನಿನಿಂದ ತೈಲ ಕೊಳ್ಳಕೂಡದು ಎಂಬ ಅಮೇರಿಕದ ತಗಾದೆಗೆ ಮೋದಿ ಸರ್ಕಾರವು, ಚೀನಾದಂತಲ್ಲದೆ, ಸಂಪೂರ್ಣವಾಗಿ ತಲೆಬಾಗಿದೆ. ಇರಾನಿನ ತೈಲದ ಬೆಲೆ ಅಗ್ಗವಾಗಿದೆ. ಅಮೇರಿಕದ ತೈಲದ ಬೆಲೆ ತುಟ್ಟಿಯಾಗಿದೆ. ಭಾರತಕ್ಕೆ ಮಾರುವ ತೈಲದ ಬೆಲೆ ಅಗ್ಗವಾಗಿರುವುದಿಲ್ಲ ಎಂಬುದನ್ನು ಅಮೇರಿಕಾ ಸ್ಪಷ್ಟಪಡಿಸಿದೆ. ಆದರೂ ಅಮೇರಿಕಾದ ಒತ್ತಡಕ್ಕೆ ಮೋದಿ ಸರ್ಕಾರ ತಲೆಬಾಗಿದೆ. ಹಾಗಾಗಿ, ಮೋದಿ ಸರ್ಕಾರವು, ತುಟ್ಟಿ ಬೆಲೆಯಲ್ಲಿ ತೈಲ ಕೊಳ್ಳುವಂತೆ ಯಾರೂ ನಮ್ಮ ಕೈ ತಿರುಚಲಾಗದು ಎಂಬ ಭಾರತದ ಹೆಮ್ಮೆಯ ನಿಲುವನ್ನು ಸ್ವಲ್ಪವೂ ಸಂಕೋಚವಿಲ್ಲದೆ ಮಣ್ಣು ಪಾಲು ಮಾಡಿದೆ. ಭಾರತದ ಹಿತದೃಷ್ಟಿಯಿಂದ ನೋಡಿದಾಗ ಇವೆಲ್ಲವುಗಳಿಗೂ ಪ್ರಾಮುಖ್ಯತೆ ಇದೆಯಾದರೂ, ಅಮೇರಿಕಾದ ಹಿತದೃಷ್ಟಿಯಿಂದ ನೋಡಿದಾಗ ಅವು ನಗಣ್ಯ ಎನಿಸುತ್ತವೆ.

ಭಾರತದ ಮೇಲೆ ಅಮೇರಿಕಾ ಒತ್ತಡ ಹೇರುತ್ತಿರುವ ಇನ್ನೊಂದು ವಿಷಯವೆಂದರೆ ಕೃಷಿ ವಲಯ. ಅಕ್ಕಿ, ಗೋಧಿ ಮುಂತಾದ ಧಾನ್ಯಗಳಿಗೆ ಭಾರತವು ವಿಶ್ವ ವ್ಯಾಪಾರ ಸಂಸ್ಥೆಯ ಅನುಮತಿಗಿಂತಲೂ ಹೆಚ್ಚಿನ ಸಬ್ಸಿಡಿ ಕೊಡುತ್ತಿದೆ ಎಂಬುದು ಅಮೇರಿಕಾದ ಬಹಳ ವರ್ಷಗಳ ಆಕ್ಷೇಪಣೆ. ವಿಶ್ವ ವ್ಯಾಪಾರ ಸಂಸ್ಥೆಯು 1995ರಲ್ಲಿ ಆರಂಭವಾದ ಸಮಯದಲ್ಲಿ ಅಮೇರಿಕಾ ಕೃಷಿಗೆ ಕೊಟ್ಟದ್ದ 61 ಬಿಲಿಯನ್ ಡಾಲರ್ ಸಬ್ಸಿಡಿ ಮೊತ್ತವು 2016ರಲ್ಲಿ 135 ಬಿಲಿಯನ್ ಡಾಲರ್‌ಗೆ ಏರಿದೆ.

ಅಮೇರಿಕಾದ ಈ ನಿಲುವು ಸ್ವೀಕಾರಾರ್ಹ, ಆದರೆ, ಬಹು ದೊಡ್ಡ ಸಂಖ್ಯೆಯ ಬಡ ಮತ್ತು ನಿರ್ಗತಿಕ ರೈತರಿಗೆ ಭಾರತ ಕೊಡುವ ಸಣ್ಣ ಮೊತ್ತದ ಸಬ್ಸಿಡಿ ಸ್ವೀಕಾರಾರ್ಹವಲ್ಲ. ಏಕೆಂದರೆ ಅದು ಬೆಲೆಗಳ ವಿರೂಪಕ್ಕೆ ಕಾರಣವಾಗುತ್ತದೆಯಂತೆ. ಅಮೇರಿಕಾದಲ್ಲಿ ರೈತರ ಸಂಖ್ಯೆ ಬಹಳ ಕಡಿಮೆ ಇರುವುದರಿಂದ ಅವರಿಗೇ ನೇರವಾಗಿ ಸಬ್ಸಿಡಿ ಕೊಡುವುದರಿಂದ ಬೆಲೆಗಳ ವಿರೂಪ ಇರುವುದಿಲ್ಲ ಎಂಬ ವಾದ ಮಂಡಿಸಲಾಗಿದೆ. ವಾಸ್ತವವಾಗಿ, ಅಮೇರಿಕಾದ ಈ ಬೃಹತ್ ಗಾತ್ರದ ಸಬ್ಸಿಡಿಯು ಜಾಗತಿಕ ಮಾರುಕಟ್ಟೆಯನ್ನು ವಶಪಡಿಸಿಕೊಳ್ಳಲು ಬಳಕೆಯಾಗುತ್ತಿದೆ. ಆದರೆ, ಭಾರತದ ಲಕ್ಷ ಲಕ್ಷ ಮಂದಿ ಬಡ ರೈತರಿಗೆ ಸಬ್ಸಿಡಿಯನ್ನು ವರಮಾನ ಬೆಂಬಲವಾಗಿ ಕೊಡಲಾಗದು; ಅವರಿಗೆ ಬೆಲೆ ಬೆಂಬಲ ರೂಪದಲ್ಲಿ ಸಬ್ಸಿಡಿ ಕೊಡಬೇಕಾಗುತ್ತದೆ. ಅಮೇರಿಕಾ ಕರಾರುವಾಕ್ಕಾಗಿ ಆಕ್ಷೇಪಿಸುತ್ತಿರುವುದು ಇದನ್ನೇ.

ಭಾರತದಲ್ಲಿ ಬೌದ್ಧಿಕ ಆಸ್ತಿಯ ಹಕ್ಕುಗಳಿಗನುಗುಣವಾಗಿ ರೂಪುಗೊಳಿಸಿ ಜಾರಿಗೆ ತಂದಿರುವ ಪೇಟೆಂಟ್ ಕಾಯ್ದೆಯು ಜಿನೆರಿಕ್ ಔಷದಿ ವಲಯಕ್ಕೆ ಒಂದು ಹೊಡೆತವಾಗಿ ಪರಿಣಮಿಸಿದೆ. ಈ ಪೇಟೆಂಟ್ ಕಾಯ್ದೆಯು ಜಾರಿಗೆ ಬರುವ ಮುನ್ನ ಅಸ್ತಿತ್ವದಲ್ಲಿದ್ದ ಭಾರತೀಯ ಪೇಟೆಂಟ್ ಕಾಯ್ದೆಯು ಒಂದು ಮಾದರಿ ಶಾಸನವಾಗಿತ್ತು. ಅದು, ತಂತ್ರಜ್ಞಾನದ ಮೇಲೆ ಮುಂದುವರೆದ ದೇಶಗಳು ಹೊಂದಿದ್ದ ಏಕಸ್ವಾಮ್ಯವನ್ನು ತಕ್ಕಮಟ್ಟಿಗೆ ಮುರಿದಿತ್ತು.

ಆದರೆ, ಈ ಕಾಯ್ದೆಯನ್ನು ಟ್ರಿಪ್ಸ್(ಬೌದ್ಧಿಕ ಆಸ್ತಿ ಹಕ್ಕುಗಳಿಗೆ ಸಂಬಂಧಪಟ್ಟ ಒಪ್ಪಂದ)ಗೆ ಹೊಂದಿಸುವ ಸಲುವಾಗಿ, ಅಂದರೆ, ಒಂದು ಔಷಧಿಯ ಉತ್ಪಾದನಾ ಪ್ರಕ್ರಿಯೆಗೆ ಬದಲಾಗಿ ಆ ಔಷಧಿಗೇ ಪೇಟೆಂಟ್ ಕೊಡುವ ಸಲುವಾಗಿ ಹಿಂದಿನ ಕಾಯ್ದೆಯನ್ನು ಕೈ ಬಿಡಲಾಗಿತ್ತು. ಈ ಬದಲಾವಣೆಯಿಂದಲೂ ತೃಪ್ತಿಯಾಗದ ಅಮೇರಿಕವು ಆಗಿನಿಂದಲೂ ಜಿನೆರಿಕ್ ಔಷದಿ ತಯಾರಿಕೆಯನ್ನು ಕೈಬಿಡುವಂತೆ ಭಾರತದ ಮೇಲೆ ವ್ಯವಸ್ಥಿತವಾಗಿ ಒತ್ತಡ ಹೇರುತ್ತಲೇ ಇದೆ. ಭಾರತಕ್ಕೆ ಭೇಟಿ ಕೊಡಲಿರುವ ಅಮೇರಿಕಾದ ವ್ಯಾಪಾರ ನಿಯೋಗವು ಈ ಒತ್ತಡವನ್ನು ಮುಂದುವರೆಸಲಿದೆ.

ಅಮೇರಿಕಾದ ಇಂತಹ ನಿಲುವುಗಳು, ಮುಕ್ತ ವ್ಯಾಪಾರ ಕುರಿತ ತರ್ಕ ನಿಂತಿರುವುದೇ ವಸಾಹತುವಾದದ ಅಸ್ತಿತ್ವದ ಮೇಲೆ ಎಂಬುದನ್ನು ಪ್ರದರ್ಶಿಸುತ್ತಿವೆ. ವಸಾಹತುವಾದವು ಉತ್ತುಂಗದಲ್ಲಿದ್ದಾಗ ಮುಕ್ತ ವ್ಯಾಪಾರದ ಬಗ್ಗೆ ಢಾಂಬಿಕವಾಗಿದ್ದರೂ ನಡೆಯುತ್ತಿತ್ತು, ಏಕೆಂದರೆ, ಮಾರಾಟವಾಗದೇ ಉಳಿದ ಸರಕುಗಳನ್ನು ವಸಾಹತುಗಳಲ್ಲಿ ಹೇಗಾದರೂ ಮಾರಬಹುದಿತ್ತು. ಮುಕ್ತ ವ್ಯಾಪಾರವು ಒಳ್ಳೆಯದಾಗಿಯೇ ಕಂಡಿತ್ತು ಏಕೆಂದರೆ, ಅದರಿಂದ ಮುಂದುವರೆದ ಯಾವುದೇ ದೇಶವು ಹಾನಿಗೊಳಗಾಗಲಿಲ್ಲ.

ಮುಕ್ತ ವ್ಯಾಪಾರವು ಎಂದೂ ಸಂಪೂರ್ಣವಾಗಿ ಮುಕ್ತವಾಗಿ ಇರಲೇ ಇಲ್ಲ. ಆದರೆ, ಮುಂಚೂಣಿಯ ದೇಶವು ತನಗೆ ಅನಾನುಕೂಲವಾಗದ ರೀತಿಯಲ್ಲಿ ಮುಕ್ತ ವ್ಯಾಪಾರ ಪದ್ಧತಿಯನ್ನು ಜಾರಿಯಲ್ಲಿಟ್ಟಿತ್ತು. ಅದು ಉತ್ಪಾದಿಸಿದ ಹೆಚ್ಚುವರಿ ಸರಕುಗಳು ರಫ್ತಾಗುತ್ತಿದ್ದ ವಸಾಹತುಗಳು ಲೆಕ್ಕಕ್ಕೇ ಇರಲಿಲ್ಲ. ಆದರೆ, ವಸಾಹತುವಾದವು ಇಲ್ಲದಿರುವಾಗ ಈ ವಾದವೂ ಕುಸಿದು ಬೀಳುತ್ತದೆ. ಕಳೆದ ಹಲವಾರು ವರ್ಷಗಳಿಂದ ವಿಶ್ವವು ಏಗುತ್ತಿರುವುದು ಈ ಪರಿಸ್ಥಿತಿಯೊಂದಿಗೇ.

ಅಮೇರಿಕಾದ ಸ್ವರಕ್ಷಣಾತ್ಮಕ ವ್ಯಾಪಾರ ನೀತಿಗಳನ್ನು ಚೀನಾ ಮತ್ತು ಭಾರತದಂತಹ ದೇಶಗಳು ತಾವೇ ಸಂತೋಷದಿಂದ ಒಪ್ಪಿಕೊಂಡರೆ ಅದು ಜಾಗತಿಕ ಅರ್ಥವ್ಯವಸ್ಥೆಯಲ್ಲಿ ಒಟ್ಟಾರೆ ಬೇಡಿಕೆಯನ್ನು ಹೆಚ್ಚಿಸುವ ಭಾರವನ್ನು ತಾವೇ ಹೊರುವುದು ಎಂದಾಗುತ್ತದೆ. ಆದರೆ ಒಟ್ಟಾರೆ ಬೇಡಿಕೆಯನ್ನು ಹೆಚ್ಚಿಸುವ ಉದ್ದೇಶಕ್ಕಾಗಿ ಈ ದೇಶಗಳು ತಮ್ಮ ತಮ್ಮ ಪ್ರಭುತ್ವದ ಶಕ್ತಿಯನ್ನೂ ಬಳಸಿಕೊಳ್ಳಲಾರವು. ಏಕೆಂದರೆ, ಅವು ವಿತ್ತೀಯ ಕೊರತೆಯ ಗಡಿಯನ್ನು ಒಂದು ಮಿತಿಯಿಂದ ಆಚೆ ದಾಟಲಾರವು.

ಈ ಉದ್ದೇಶಕ್ಕಾಗಿ ಅವು ತಮ್ಮ ಹಣಕಾಸು ನೀತಿಯನ್ನಷ್ಟೇ ಬಳಸಿಕೊಳ್ಳಬಲ್ಲವು. ಆದರೆ, ಬೇಡಿಕೆಯ ಕೊರತೆ ಇರುವ ಸನ್ನಿವೇಶದಲ್ಲಿ, ಒಟ್ಟಾರೆ ಬೇಡಿಕೆಯನ್ನು ಹೆಚ್ಚಿಸುವ ಗುರಿ ಸಾಧಿಸಲು ಹಣಕಾಸು ನೀತಿಯಷ್ಟೇ ಸಾಲುವುದಿಲ್ಲ. ಪರಿಣಾಮವಾಗಿ, ಒಟ್ಟು ಬೇಡಿಕೆಯ ಕೊರತೆಯ ಪರಿಸ್ಥಿತಿ ಮುಂದುವರೆಯುತ್ತದೆ. ಬೇಡಿಕೆಗೆ ಕೊರತೆ ಇರುವ ಪರಿಸ್ಥಿತಿಯಲ್ಲಿ, ಎಷ್ಟು ಸಾಧ್ಯವೊ ಅಷ್ಟು ದೊಡ್ಡ ಮಾರುಕಟ್ಟೆಗಳುನ್ನು ಹಿಡಿಯಲು ಕಿತ್ತಾಟ ನಡೆಯುತ್ತದೆ. ತನ್ನ ಸ್ವರಕ್ಷಣಾತ್ಮಕ ವ್ಯಾಪಾರ ನೀತಿಯನ್ನು ಬೇರೆಯವರು ಸ್ವೀಕರಿಸುವಂತೆ ಮಾಡುವ ಅಮೇರಿಕಾದ ಪ್ರಯತ್ನ ಸಫಲವಾಗುವುದು ಸಾಧ್ಯವೇ ಇಲ್ಲ.

(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

-ಪ್ರೊ.ಪ್ರಭಾತ್ ಪಟ್ನಾಯಕ್
ಅನು: ಕೆ.ಎಂ.ನಾಗರಾಜ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

Published

on

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.

ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.

ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.

ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ,‌ ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.

ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.

ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.

ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.

ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ‌ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.

ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ‌ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ‌ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.

*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿ‌ಸಚಿವ ಎಚ್.ಆಂಜನೇಯ ‌ಅಧಿಕಾರಿಗಳೊಂದಿಗೆ ಭೇಟಿ‌ ನೀಡಿ‌ ಪರಿಶೀಲಿಸಿದರು.

Continue Reading

ದಿನದ ಸುದ್ದಿ

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

Published

on

ಮುಖ್ಯಾಂಶಗಳು


ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ

​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ

ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್

ಸುದ್ದಿದಿನ,​ದಾವಣಗೆರೆ: ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಖರೀದಿ ವ್ಯವಹಾರದಲ್ಲಿ ನಿಯಮ ಉಲ್ಲಂಘಿಸಿ, ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪದ ಬೆನ್ನತ್ತಿರುವ ಲೋಕಾಯುಕ್ತ ಸಂಸ್ಥೆಯು ತನಿಖೆಯನ್ನು ತೀವ್ರಗೊಳಿಸಿದೆ.

​ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ಅಧಿಕಾರಿಗಳು ಜುಲೈ 7 ರಿಂದ 10 ರವರೆಗೆ ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ಸ್ಥಳ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.

ನಿಯಮ ಗಾಳಿಗೆ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ– ಕರ್ನಾಟಕ’ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಅವರು 2025ರ ಜನೆವರಿ 21ರಂದು ಲೋಕಾಯುಕ್ತಕ್ಕೆ ಈ ಕುರಿತು ಅಧಿಕೃತ ದೂರು ನೀಡಿದ್ದರು. 2022-23ನೇ ಸಾಲಿನಲ್ಲಿ ದಾವಣಗೆರೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಾಮಗ್ರಿಗಳನ್ನು ಖರೀದಿಸುವಾಗ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಅಧಿಕೃತ ಮಾರಾಟಗಾರರಿಂದ ದರಪಟ್ಟಿ (ಕೊಟೇಷನ್) ಪಡೆಯದೆ, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸರ್ಕಾರದ ಹಣ ಪೋಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ತನಿಖೆ ಎದುರಿಸುತ್ತಿರುವವರು

ಶ್ರೀ ಎನ್.ಜೆ. ಆನಂದ್, ಕಾರ್ಯನಿರ್ವಾಹಕ ಅಧಿಕಾರಿ (ಇಒ), ತಾಲೂಕು ಪಂಚಾಯಿತಿ, ದಾವಣಗೆರೆ.

​ಶ್ರೀ ನಾಗರಾಜ್ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ, ತಾಲೂಕು ಪಂಚಾಯಿತಿ, ದಾವಣಗೆರೆ.

​ಶ್ರೀ ಚನ್ನಪ್ಪ ಎ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಜಿಲ್ಲಾ ಪಂಚಾಯತ್, ದಾವಣಗೆರೆ.

ಕಚೇರಿಯಲ್ಲಿ ತಪಾಸಣೆ

ದೂರಿನ ಅನ್ವಯ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ತನಿಖಾಧಿಕಾರಿ ಟಿ.ಸಿ. ಜಯರಾಮಯ್ಯ ಅವರು ತನಿಖಾ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಜುಲೈ 7 ರಂದು ಬೆಳಗ್ಗೆ 11.30ಕ್ಕೆ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತನಿಖಾ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 10 ರವರೆಗೆ ಸರಣಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸ್ಥಳ ತನಿಖೆಯ ಸಂದರ್ಭದಲ್ಲಿ ಖುದ್ದಾಗಿ ಹಾಜರಿದ್ದು, ಪೂರಕ ದಾಖಲೆಗಳೊಂದಿಗೆ ಸಹಕರಿಸುವಂತೆ ದೂರುದಾರರಿಗೂ ನೋಟಿಸ್ ನೀಡಲಾಗಿದೆ.

​ಜಿಲ್ಲೆಯ ಪ್ರಭಾವಿ ಅಧಿಕಾರಿಗಳೇ ಲೋಕಾಯುಕ್ತ ತನಿಖೆಯ ಬಿಸಿಗೆ ಸಿಲುಕಿರುವುದು ಆಡಳಿತ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಅಂಕಣ10 hours ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ2 days ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ3 days ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ5 days ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ5 days ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ1 week ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

ದಿನದ ಸುದ್ದಿ1 week ago

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ...

ದಿನದ ಸುದ್ದಿ1 week ago

ಕುಂದುವಾಡದಲ್ಲಿ ದೂಡಾ ಹೊಸ ಬಡಾವಣೆ ನಿರ್ಮಾಣ ಯೋಜನೆ ಕೈ ಬಿಡಲು ರೈತರ ಆಗ್ರಹ | ವಸತಿ ಯೋಜನೆ ಕೈ ಬಿಡಿ ಎಂದು ದೂಡಾಗೆ ಸೂಚಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾದಿಂದ ನಿರ್ಮಾಣ ಮಾಡಲು ಹೊರಟಿರುವ ವಸತಿ(ಹೊಸ ಲೇ ಔಟ್) ಯೋಜನೆಯನ್ನ ಈ ಕೂಡಲೇ ಕೈ ಬಿಡಬೇಕು ಎಂದು ರೈತರು ನಗರಾಭಿವೃದ್ದಿ...

ದಿನದ ಸುದ್ದಿ2 weeks ago

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ ....

ದಿನದ ಸುದ್ದಿ2 weeks ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

Trending