ದಿನದ ಸುದ್ದಿ
ಅಮೇರಿಕಾದ ಅಧ್ಯಕ್ಷರಾಗಿ ಬಿಡೆನ್ ಪ್ರಮಾಣವಚನ ಸ್ವೀಕರಿಸುತ್ತಾರೋ..? ಟ್ರಂಪ್ ಇನ್ನೊಂದು ಕೆಟ್ಟ ಪರಂಪರೆಯನ್ನು ಹುಟ್ಟು ಹಾಕುತ್ತಾರೋ..?
- ಅಲ್ಮೆಡಾ ಗ್ಲಾಡ್ಸನ್
ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶಕ್ಕೆ ಕೊನೆಗೂ ಓರ್ವ ಖಚಿತ ವಿನ್ನರ್ ಅನ್ನು ಕೊಡುವ ಮಟ್ಟಕ್ಕೆ ಬಂದು ನಿಂತಿದೆ. ಡೆಮೋಕ್ರಾಟಿಕ್ ಪಕ್ಷದ ಜೋ ಬೈಡನ್ ವಿಶ್ವದ ಅತೀ ಪುರಾತನ ಪ್ರಜಾಪ್ರಭುತ್ವದ 46 ನೇ ಅಧ್ಯಕ್ಷರಾಗುವುದು ಖಚಿತವಾದಂತಿದೆ.
ಬೈಡನ್ ಅವರನ್ನು ಅಧಿಕೃತವಾಗಿ ವಿನ್ನರ್ ಎಂದು ಘೋಷಿಸಿದರೂ, ಪ್ರಸಕ್ತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಲಭದಲ್ಲಿ ಸೋಲನ್ನುಪ್ಪುತ್ತಾರೆಂದು ನನಗನಿಸುವುದಿಲ್ಲ. ಹೇಗೂ ಅಮೇರಿಕಾದ ಪದ್ಧತಿಯಂತೆ ಜೋ ಬೈಡನ್ ಅಧಿಕಾರ ಸ್ವೀಕರಿಸುವುದು ಜನವರಿ ಎರಡನೆಯ ವಾರದಲ್ಲಿ. ಅಷ್ಟರವರೆಗೆ ಟ್ರಂಪಾತಿಗಳು ಏನೆಲ್ಲಾ ಡ್ರಾಮಾ ಮಾಡುತ್ತಾರೋ ಎಂದು ಕಾದುನೋಡಬೇಕು.
ಮೂರ್ನಾಲ್ಕು ರಾಜ್ಯಗಳಲ್ಲಿ ಅವರು ಈಗಾಗಲೇ ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ, ಅವರಿಗೆ ಒಮ್ಮೆ ಲೀಡ್ ಸಿಕ್ಕ ನಂತರ ಉಳಿದ ಮತಗಳ ಎಣಿಕೆ ಆಗಬಾರದಿತ್ತೆಂದು ಹೇಳಿ. ಇದೆಂಥಾ ಹುಚ್ಚುತನ ಎಂದು ಹುಬ್ಬೇರಿಸಬೇಡಿ. ಟ್ರಂಪ್ ಇದಕ್ಕಿಂತ ನೀಚ ಮಟ್ಟಕ್ಕಿಳಿಯಬಲ್ಲರೆಂದು ನಾಲ್ಕು ವರುಷಗಳಲ್ಲಿ ನೋಡಿಯಾಗಿದೆ.
ಅಷ್ಟಕ್ಕೂ ಆತನಿಗೆ ಮುಳುವಾಗಿರುವುದು ಕೊರೋನಾ ಹಾಗೂ ಈ ಕೊರೋನಾದ ಕಾರಣದಿಂದ ಆಗಿರುವ ಅಂಚೆ ಮತದಾನ. ಟ್ರಂಪು ಹಾಗು ಆತನ ಬೆಂಬಲಿಗರು ಕೊರೋನಾ-ಗಿರೋನಾ ಏನೂ ಇಲ್ಲ, ಎಲ್ಲಾ ಸುಳ್ಳು (ನಮ್ಮಲ್ಲೂ ಅನಂತ್ಮಾಣಿ ಹಾಗೆಯೇ ಹೇಳಿ ಕೊನೆಗೆ ಕ್ವಾರಂಟೀನ್ ಆಗಿದ್ದು) ಎಂದು ಹೇಳುತ್ತಲೇ ಬಂದಿದ್ದರು. ಹಾಗಾಗಿ ಟ್ರಂಪ್ ಬೆಂಬಲಿಗರಲ್ಲಿ ಹೆಚ್ಚಿನವರು ಮತಗಟ್ಟೆಗೆ ಹೋಗಿ ತಮ್ಮ ಮತ ಹಾಕಿ ಬಂದಿದ್ದರು.
ಆದರೆ ಬೈಡನ್ ಹಾಗೂ ಡೆಮೋಕ್ರಾಟಿಕ್ ಪಕ್ಷ ಕೊರೋನಾದ ಬಗ್ಗೆ ಜಾಗ್ರತೆ ವಹಿಸಬೇಕು, ಕೊರೋನಾದಿಂದ ಅಮೇರಿಕಾಕ್ಕೆ ಬಲುದೊಡ್ಡ ಹೊಡೆತ ಬೀಳಲಿದೆ ಎಂದು ಹೇಳುತ್ತಾ ಬಂದವರು. ಹಾಗಾಗಿ ಲಾಕ್ಡೌನ್ ಇಲ್ಲದಿದ್ದರೂ ಡೆಮೋಕ್ರಾಟಿಕ್ ಪಕ್ಷದ ಹೆಚ್ಚಿನ ಬೆಂಬಲಿಗರು ಅಂಚೆ ಮತದಾನಕ್ಕೆ ಮೊರೆಹೋಗಿದ್ದರು. ಪೆನ್ಸಿಲೇನ್ವಿಯಾ ಒಂದರಲ್ಲೇ ಟ್ರಂಪ್ಗೆ ಆರು ಲಕ್ಷ ಮತಗಳ ಲೀಡ್ ಇರುವಾಗ, ಸುಮಾರು 15 ಲಕ್ಷ ಮತಗಳ ಎಣಿಕೆ ಬಾಕಿಯಿದ್ದು, ಇದರಲ್ಲಿ ಹೆಚ್ಚಿನವು ಬೈಡನ್ ಬೆಂಬಲಿಗರ ಮತಗಳೆಂದು ಹೇಳಲಾಗುತಿತ್ತು.
ಇವತ್ತು ಮತ ಎಣಿಕೆ ಮುಗಿದಾಗ ಬೈಡನ್ ತನ್ನ ಸ್ವಂತ ರಾಜ್ಯವಾದ ಪೆನ್ಸಿಲೇನ್ವಿಯಾದಲ್ಲಿ ಟ್ರಂಪ್ಗಿಂತ ಮೂವತ್ತು ಸಾವಿರಕ್ಕಿಂತ ಹೆಚ್ಚು ಮತ ಪಡೆದು ಅಲ್ಲಿನ ಇಪ್ಪತ್ತೂ ಎಲೆಕ್ಟೋರಲ್ ಸೀಟುಗಳನ್ನು ಪಡೆದುಕೊಂಡಿದ್ದಾರೆ. ಜಾರ್ಜಿಯಾ, ಅರಿಝೋನಾ, ನೆವಾಡಾ, ಮಿಚಿಗನ್, ವಿಸ್ಕೋನ್ಸಿನ್ ಮುಂತಾದೆಡೆಯೂ ಇದೇ ಕಥೆ. ಹಾಗಾಗಿಯೇ ಟ್ರಂಪ್ ಒಮ್ಮೆ ಸ್ವಲ್ಪ ಅಂತರದ ಲೀಡ್ ಪಡೆಯುತ್ತಿದ್ದಂತೆ ಮತ ಎಣಿಕೆಯನ್ನು ನಿಲ್ಲಿಸಬೇಕೆಂದು ಕೇಳಿಕೊಂಡು ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದು.
ಅಮೇರಿಕಾದ ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ರಾಜ್ಯದಲ್ಲಿ ಮತ ಎಣಿಕೆಯ ಕೊನೆಗೆ 51% ಅಥವಾ ತನ್ನ ಎದುರಾಳಿಗಿಂತ ಹೆಚ್ಚು ಮತ ಪಡೆದ ವ್ಯಕ್ತಿ/ಪಕ್ಷ ಆ ರಾಜ್ಯದಲ್ಲಿರುವ ಎಲ್ಲಾ ಸೀಟುಗಳನ್ನು ತನ್ನದಾಗಿಸಿಕೊಳ್ಳುತ್ತದೆ. ಉದಾಹರಣೆಗೆ ಪೆನ್ಸಿಲೇನ್ವಿಯಾದಲ್ಲಿ 20 ಸೀಟುಗಳಿವೆ. ಬೈಡನ್ ಅಲ್ಲಿ 3,345,906 ಮತ ಪಡೆದರೆ, ಟ್ರಂಪ್ 3,311,448 ಮತ ಪಡೆದಿದ್ದರೆ.
ಕೇವಲ .4% ವ್ಯತ್ಯಾಸ. ಹಾಗಾಗಿ ನಿಮ್ಮ ಪ್ರಕಾರ ಟ್ರಂಪ್ ಒಂಬತ್ತು ಸೀಟು ಗೆದ್ದು ಬೈಡನ್ ಹನ್ನೊಂದು ಗೆದ್ದಿದ್ದಾರೆಂದರೆ, ಅದು ತಪ್ಪು. ಬೈಡನ್ಗೆ ಜಾಸ್ತಿ ಮತ ಬಂದಿರುವುದರಿಂದ ಅಲ್ಲಿನ 20 ಸೀಟುಗಳೂ ಬೈಡನ್ ಪಾಲಾಗಿವೆ. ಹಾಗಾಗಿಯೇ ಎರಡು ದಿನಗಳಿಂದ ಬೈಡನ್ 264 ಸೀಟುಗಳಿಂದ ಮುನ್ನಡೆಯಲ್ಲಿದ್ದಾರೆಂದು ತೋರಿಸುತ್ತಿದ್ದ ಫಲಿತಾಂಶ, ಇವತ್ತು ಪೆನ್ಸಿಲೇನ್ವಿಯಾದ ಮತ ಎಣಿಕೆ ಕೊನೆಗೊಳ್ಳುತ್ತಿದ್ದಂತೆ ಬೈಡನ್-284 ಎಂದು ತೋರಿಸುತ್ತಿದೆ, ಅಂದರೆ ಪೆನ್ಸಿಲೇನ್ವಿಯಾದ ಎಲ್ಲಾ ಇಪ್ಪತ್ತು ಸೀಟುಗಳು ಡೆಮೋಕ್ರಟಿಕ್ ಪಕ್ಷದ ಪಾಲಾಗಿವೆ.
ಆದರೆ ಈಗಲೇ ಹೇಳಿದಂತೆ ಟ್ರಂಪ್ ಬಹಳ ಸುಲಭದಲ್ಲಿ ಸೋಲುಪ್ಪುವ ಮನುಷ್ಯ ಅಲ್ಲ. ಕೋರ್ಟ್ ನಲ್ಲಿ ಏನಾಗುತ್ತೋ ನೋಡೋಣ. 2000 ನೇ ಇಸವಿಯಲ್ಲಿ ಜಾರ್ಜ್ ಬುಶ್ ಜೂನಿಯರ್ ಅಲ್ ಗೋರ್ ಎದುರು ಜಯಗಳಿಸಿದ್ದು ಹೀಗೆಯೇ. ಜಿದ್ದಾಜಿದ್ದಿನ ಚುನಾವಣೆಯಲ್ಲಿ ಡೆಮೋಕ್ರಾಟಿಕ್ ಪಕ್ಷದ ಅಲ್ ಗೋರ್ ಹಾಗೂ ರಿಪಬ್ಲಿಕ್ ಜಾರ್ಜ್ ಬುಶ್ ನಡುವೆ ಬಿರುಸಿನ ಪೈಪೋಟಿ ಇದ್ದರೂ, ಮೊದಲನೆಯ ದಿನದ ಎಣಿಕೆ ಕೊನೆಗೊಂಡಾಗ ಅಲ್ ಗೋರ್ ಬಳಿ 255 ಎಲೆಕ್ಟೋರಲ್ ಸೀಟಿದ್ದು, ಬುಶ್ ಬಳಿ 246 ಸೀಟಿತ್ತು. 5 ಸೀಟಿದ್ದ ನ್ಯೂ ಮೆಕ್ಸಿಕೋ, 7 ಸೀಟಿದ್ದ ಓರೆಗಾನ್ ಹಾಗೂ 29 ಸೀಟುಗಳ ಫ್ಲೊರೀಡಾದ ಫಲಿತಾಂಶ ಬಾಕಿಯಿತ್ತು. ಮರುದಿನ ಬಂದ ಫಲಿತಾಂಶದಲ್ಲಿ ಅಲ್ ಗೋರ್ ನ್ಯೂ ಮೆಕ್ಸಿಕೋ ಹಾಗೂ ಓರೆಗಾನ್ ಎರಡನ್ನೂ ಗೆದ್ದು 267 ಸೀಟುಗಳನ್ನು ಪಡೆದು, ಬಹುಮತಕ್ಕೆ ಕೇವಲ ಮೂರು ಸೀಟುಗಳಷ್ಟೇ ದೂರದಲ್ಲಿದ್ದರು.
ಹಾಗಾಗಿ 29 ಸೀಟುಗಳಿದ್ದ ಫ್ಲೊರೀಡಾದ ಫಲಿತಾಂಶವೇ ಹೊಸ ಅಧ್ಯಕ್ಷ ಯಾರೆಂದು ನಿರ್ಧರಿಸಲಿದೆಯೆಂದು ಖಚಿತವಾಗಿತ್ತು. ಎರಡನೆಯ ದಿನದ ಎಣಿಕೆ ಮುಗಿದಾಗ ಬುಶ್ ಒಂದು ಸಾವಿರ ಚಿಲ್ಲರೆ ಮತಗಳಿಂದ ಮುನ್ನಡೆಯಲ್ಲಿದ್ದರು. ಆ ಹೊತ್ತಿಗೆ ಜಾರ್ಜ್ ಬುಶ್ನ ಸಹೋದರ ಜೆಬ್ ಫ್ಲೊರೀಡಾದ ರಾಜ್ಯಪಾಲ. ಐವತ್ತು ಲಕ್ಷಕ್ಕಿಂತ ಹೆಚ್ಚಿನ ಮತ ಚಲಾವಣೆಯಾದ ರಾಜ್ಯದಲ್ಲಿ ಮುನ್ನಡೆ ಕೇವಲ ಒಂದು ಸಾವಿರ ಚಿಲ್ಲರೆಯಾಗಿದ್ದರಿಂದ ಮರು ಎಣಿಕೆಗೆ ಆದೇಶ ಬಂತು.
ಇದನ್ನು ಪ್ರಶ್ನಿಸಿ ಬುಶ್ ಕೋರ್ಟ್ ಮೆಟ್ಟಲೇರಿದರು. ಗೋರ್ ಕೂಡಾ ಕೋರ್ಟ್ ಕದ ತಟ್ಟಿದರು. ಸುಮಾರು ಒಂದು ತಿಂಗಳು ನಡೆದ ಕಾನೂನು ಪ್ರಕ್ರಿಯೆ, ಮರು ಎಣಿಕೆಯಲ್ಲಿ ಕೊನೆಗೂ ಸುಪ್ರೀಂ ಕೋರ್ಟ್ ಬುಶ್ ಅವರನ್ನು 537 ಮತಗಳಿಂದ ವಿಜಯಿ ಎಂದು ಘೋಷಿಸಿ, ಫ್ಲೊರೀಡಾದ ಇಪ್ಪತ್ತೊಂಬತ್ತು ಸೀಟುಗಳನ್ನು ಅವರ ಪಕ್ಷಕ್ಕೆ ಕೊಟ್ಟಿತು. ಹೀಗೆ ಬುಶ್ ಅಧ್ಯಕ್ಷರಾದರು.
ಅಂದು ಮರು ಎಣಿಕೆಯಲ್ಲಿ, ಮತ ಎಣಿಕೆಯಲ್ಲಿ ತೀವ್ರವಾದ ಹಸ್ತಕ್ಷೇಪ ಹಾಗೂ ಮೋಸ ನಡೆದಿದೆಯೆಂದು ಜನರ ಆರೋಪವಾಗಿತ್ತು. ಅಲ್ಲಿನ ರಾಜ್ಯಪಾಲರಾಗಿದ್ದ ಬುಶ್ ಸಹೋದರ ಹಾಗೂ ಸುಪ್ರೀಂ ಕೋರ್ಟ್ ನಲ್ಲಿದ್ದ ರಿಪಬ್ಲಿಕನ್ ಪಕ್ಷದ ನ್ಯಾಯಮೂರ್ತಿಗಳು ಕಳ್ಳ ಮಾರ್ಗದಿಂದ ಬುಶ್ರನ್ನು ಅಧ್ಯಕ್ಷರನ್ನಾಗಿ ಮಾಡಿದರು ಎಂದು ಇವತ್ತಿಗೂ ಅಮೇರಿಕಾ ಹೇಳುತ್ತಿದೆ.
ಈವಾಗ ಟ್ರಂಪ್ ಅಂಥಹದ್ದೇ ದುಸ್ಸಾಹಕ್ಕೆ ಕೈಹಾಕಿದ್ದಾರೆ. ಏನಾಗುತ್ತೋ ನೋಡಬೇಕು. ಸದ್ಯ ಅಮೇರಿಕದ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಮೂರ್ತಿಗಳ ಬಲಾಬಲ 6-3 ರಿಂದ ರಿಪಬ್ಲಿಕ ಪಕ್ಷದ ಪರವಾಗಿದೆಯೆಂದು ಹೇಳುತ್ತಿದ್ದಾರೆ. ಹಾಗಾಗಿ ಇವತ್ತು ವಿಜಯಿಯೆಂದು ಘೋಷಿಸಲ್ಪಟ್ಟಿರುವ ಜೋ ಬೈಡನ್ ಜನವರಿ ಎರಡನೆಯ ವಾರದಲ್ಲಿ ಅಮೇರಿಕಾದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೋ ಇಲ್ಲ ಅದರ ಮೊದಲು ಟ್ರಂಪ್ ಇನ್ನೊಂದು ಕೆಟ್ಟ ಪರಂಪರೆಯನ್ನು ಹುಟ್ಟು ಹಾಕುತ್ತಾರೋ, ಕಾದು ನೋಡಬೇಕು.
I WON THIS ELECTION, BY A LOT!
— Donald J. Trump (@realDonaldTrump) November 7, 2020
America, I’m honored that you have chosen me to lead our great country.
The work ahead of us will be hard, but I promise you this: I will be a President for all Americans — whether you voted for me or not.
I will keep the faith that you have placed in me. pic.twitter.com/moA9qhmjn8
— Joe Biden (@JoeBiden) November 7, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ದಿನದ ಸುದ್ದಿ
ವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
ಸುದ್ದಿದಿನ,ಬೆಂಗಳೂರು:ಕೋಡಿಪಾಳ್ಯದಲ್ಲಿರುವ ವಿಶ್ವ ವೆಂಕಟೇಶ್ವರ ವಿದ್ಯಾಧಾನ ಕೇಂದ್ರದ ವಿರುದ್ಧ ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದಿಂದ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿ ಸಂಸ್ಥೆಯ ಹೆಸರಿಗೆ ಧಕ್ಕೆ ತರುವ ಹುನ್ನಾರ ಕಳೆದ 3 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಗಂಭೀರ ಆರೋಪ ಮಾಡಿದೆ.
ಕೇವಲ 20 ವಿದ್ಯಾರ್ಥಿಗಳಿಂದ ಆರಂಭವಾದ ಈ ಸಂಸ್ಥೆಯು ಇಂದು ವಿವಿಐಎಸ್ ಶಾಲೆ, ಕೆಬಿಸಿ ಪಿಯು ಕಾಲೇಜು ಮತ್ತು ವಿವಿ ಪದವಿ ಕಾಲೇಜುಗಳನ್ನು ಹೊಂದಿದೆ. ಬಡ ಕೂಲಿ ಕಾರ್ಮಿಕರು ಮತ್ತು ವಲಸೆ ಕುಟುಂಬಗಳ 600ಕ್ಕೂ ಹೆಚ್ಚು ಮಕ್ಕಳು ಇಲ್ಲಿ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಪದವಿ ಕಾಲೇಜು ಆರಂಭಿಸಲು ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದ ಖಾಲಿ ಕಟ್ಟಡವನ್ನು 5 ವರ್ಷಗಳ ಅವಧಿಗೆ ಬಾಡಿಗೆಗೆ ಪಡೆಯಲಾಗಿತ್ತು. ವಿಠಲಗಿರಿಧಾಮದ ಮಠಾಧೀಶರಾದ ಶ್ರೀ ನಿರ್ಮಲಾನಂದ ಪುರಿ ಅವರು ಪ್ರತಿ ವರ್ಷ 5% ಬಾಡಿಗೆ ಹೆಚ್ಚಳದ ಷರತ್ತಿನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.
ಸಂಸ್ಥೆಯ ಅಧ್ಯಕ್ಷರು ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ, ಖಾಲಿ ಇದ್ದ ದೊಡ್ಡ ಕೊಠಡಿಗಳಿಗೆ ವಿಭಜನೆ, ಬಾಗಿಲುಗಳನ್ನು ಅಳವಡಿಸಿ, ಫರ್ನಿಚರ್ ತುಂಬಿ ತರಗತಿಗಳನ್ನು ಆರಂಭಿಸಿದರು. ಕಳೆದ 7 ವರ್ಷಗಳಿಂದ ಈ ಕಟ್ಟಡದಲ್ಲಿಯೇ ತರಗತಿಗಳು ನಡೆಯುತ್ತಿದ್ದು, ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅದೇ ಮಠದ ಮತ್ತೊಂದು ಭಾಗವನ್ನು “ಟಾಮ್ ಅಂಡ್ ಜೆರ್ರಿ” ವಿಶೇಷ ಮಕ್ಕಳ ಶಾಲೆಗೆ ಬಾಡಿಗೆಗೆ ನೀಡಲಾಗಿದೆ.
ಆದರೆ ಕಳೆದ 3 ವರ್ಷಗಳಿಂದ ಶ್ರೀ ನಿರ್ಮಲಾನಂದ ಪುರಿ ಮತ್ತು ಅವರ ಹಿಂಬಾಲಕರು ಶೈಕ್ಷಣಿಕ ವಾತಾವರಣಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಕಾಲೇಜಿನ ಸಿಬ್ಬಂದಿಯ ಮೇಲೆ ಅವಾಚ್ಯ ಶಬ್ದಗಳ ಪ್ರಯೋಗ, ಪರೀಕ್ಷಾ ಸಮಯದಲ್ಲಿ ಸ್ವಾಮೀಜಿಯ ಹಿಂಬಾಲಕರು ಕಾಲೇಜಿನ ಒಳಗೆ ನುಗ್ಗಿ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ಹರಡುವ ಮೂಲಕ ಸಂಸ್ಥೆಯ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆಡಳಿತ ಮಂಡಳಿ ದೂರಿದೆ.
ಇದರ ಜೊತೆಗೆ ಇನ್ನೊಂದು ಗಂಭೀರ ಆರೋಪ ಕೇಳಿಬಂದಿದೆ. ವಿಠಲ ರುಕ್ಮಿಣಿ ಮಠದ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನನ್ನು *”ಗೋಶಾಲೆ ಮತ್ತು ವೃದ್ಧಾಶ್ರಮ”*ಕ್ಕಾಗಿ ಮಂಜೂರು ಮಾಡಲಾಗಿದೆ. ಆದರೆ ಮಂಜೂರಾದ ಉದ್ದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ಜಮೀನನ್ನು ವಾಣಿಜ್ಯ ಉದ್ದೇಶಕ್ಕಾಗಿ ಹಂತಹಂತವಾಗಿ ಬಾಡಿಗೆಗೆ ನೀಡಲಾಗುತ್ತಿದೆ.
ಸಭಾಂಗಣದಲ್ಲಿದ್ದ ದೇವರ ಮೂರ್ತಿಯನ್ನು ಸಹ ಹಣಕ್ಕಾಗಿ ಬೇರೆ ಕಡೆಗೆ ವರ್ಗಾಯಿಸಿ ವಾಣಿಜ್ಯ ಉದ್ದೇಶಕ್ಕೆ ಬಳಸಲಾಗಿದೆ. ಸರ್ಕಾರವು ಈ ಜಾಗವನ್ನು ಗೋಶಾಲೆ ಮತ್ತು ವೃದ್ಧಾಶ್ರಮ ನಡೆಸುವುದಕ್ಕೆ ಮಂಜೂರು ಮಾಡಿದ್ದರೂ, ಇಲ್ಲಿ ಯಾವುದೇ ಗೋಶಾಲೆ ಅಥವಾ ವೃದ್ಧಾಶ್ರಮ ನಡೆಯುತ್ತಿಲ್ಲ. ಮಠದ ಆಸ್ತಿಯನ್ನು ಸ್ವಾಮೀಜಿ ಮತ್ತು ಅವರ ಹಿಂಬಾಲಕರು ಕಮರ್ಷಿಯಲ್ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಆಡಳಿತ ಮಂಡಳಿಯ ಆರೋಪ.
ಈ ಬೆಳವಣಿಗೆಯಿಂದಾಗಿ ಕಾಲೇಜಿನಲ್ಲಿ ಓದುತ್ತಿರುವ ನೂರಾರು ಬಡ ವಿದ್ಯಾರ್ಥಿಗಳ ಭವಿಷ್ಯ ಪ್ರಶ್ನಾರ್ಥಕವಾಗಿದೆ. ಕಂದಾಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ತನಿಖೆ ನಡೆಸಿ ಮಠದ ಸ್ವಾಮೀಜಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಆಡಳಿತ ಮಂಡಳಿ ಮತ್ತಷ್ಟು ಆರೋಪಿಸಿರುವ ಪ್ರಕಾರ, ಮಠದ ಸ್ವಾಮೀಜಿ ಸಾರ್ವಜನಿಕವಾಗಿ “ಮಠದ ಆಸ್ತಿಯನ್ನು ಸರ್ಕಾರದಿಂದ 54 ಲಕ್ಷ ರೂ.ಗೆ ಖರೀದಿ ಮಾಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ. ಅವರ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಒಬ್ಬ ವೃದ್ಧ ಮಹಿಳೆಯನ್ನು ಮೋಸ ಮಾಡಿ ಸೈಟ್ ಕಬಳಿಕೆ ಮಾಡಿ ಬೇರೊಬ್ಬರಿಗೆ ಮಾರಾಟ ಮಾಡಲಾಗಿದೆ. ಅಲ್ಲದೆ ಒಬ್ಬ ವೈದ್ಯರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ನೀಡುವುದಾಗಿ ಹೇಳಿ 10 ಲಕ್ಷ ರೂ. ಟೋಕನ್ ಹಣ ಪಡೆದು, ಹಣ ಹಿಂತಿರುಗಿಸದೆ ಸಮಸ್ಯೆ ಮಾಡಿದ ಪ್ರಕರಣವೂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. “ಹಣಕ್ಕಾಗಿ ಕಾವಿ ಧರಿಸಿ ಸಮಾಜಕ್ಕೆ ನಾಚಿಕೆ ತರುವ ಕೆಲಸ ಮಾಡುತ್ತಿದ್ದಾರೆ” ಎಂದು ಆಡಳಿತ ಮಂಡಳಿ ಆರೋಪಿಸಿದೆ.
~ವರದಿ: ಪವನ್ ಕಲ್ಯಾಣ್ ಡಿ.ಜಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಅತ್ಯಂತ ಸಂಕೀರ್ಣ ಶಸ್ತ್ರಚಿಕಿತ್ಸೆಯಲ್ಲಿ, ವೈದ್ಯರು ಟ್ಯೂಮರ್ (ಗಡ್ಡೆ) ಯನ್ನುಸಂಪೂರ್ಣವಾಗಿ ತೆಗೆದುಹಾಕುವುದರ ಜೊತೆಗೆ ಲಿವರ್ನ ಆರೋಗ್ಯಕರ ಭಾಗಗಳಿಗೆ ಯಾವುದೇ ಹಾನಿಯಾಗದಂತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ ಮೂಲದ ಈ ಮಹಿಳೆ, ಬೊಜ್ಜಿನ ಸಮಸ್ಯೆಯ ಜೊತೆಗೆ ಟೈಪ್-2 ಮಧುಮೇಹ ಮತ್ತು ಹೈಪೋಥೈರಾಯ್ಡಿಸಮ್ (ಥೈರಾಯ್ಡ್ ಸಮಸ್ಯೆ) ದಂತಹ ಕಾಯಿಲೆಗಳಿಂದಲೂ ಬಳಲುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ನಿರಂತರ ಹೊಟ್ಟೆನೋವು ಹಾಗೂ ಹಸಿವಾಗದಿರುವ ಸಮಸ್ಯೆಯಿಂದ ಅವರು ಒದ್ದಾಡುತ್ತಿದ್ದರು. ಇದಕ್ಕಾಗಿ ಸ್ಥಳೀಯ ಕ್ಲಿನಿಕ್ಗಳು ಮತ್ತು ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿನ ತಪಾಸಣೆಯಲ್ಲಿ ಅವರಿಗೆ ಲಿವರ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು.
ಸರಿಯಾದ ಚಿಕಿತ್ಸೆ ಸಿಗದೆ ಕಾಯಿಲೆ ಉಲ್ಬಣಗೊಂಡಿದ್ದಾಗ, ಅವರ ಪರಿಚಿತರೊಬ್ಬರು ದಾವಣಗೆರೆಯ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ಗೆ ಭೇಟಿ ನೀಡಿ, ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಆರ್.ಕೆ. ಹನುಮಂತ ನಾಯ್ಕ್ ಅವರನ್ನು ಸಂಪರ್ಕಿಸಲು ಸಲಹೆ ನೀಡಿದರು. ಮೊದಲ ತಪಾಸಣೆಯ ನಂತರ, ಮಹಿಳೆಯನ್ನು ಸ್ಕ್ಯಾನಿಂಗ್ ಮತ್ತು ಇತರ ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಈ ವೇಳೆ ಅವರ ಲಿವರ್ನ ಎಡಭಾಗದ (ಲೆಫ್ಟ್ ಲೋಬ್) ಆಳದಲ್ಲಿ ಗಡ್ಡೆಯೊಂದು ಬೆಳೆದಿರುವುದು ಕಂಡುಬಂತು. ಹೆಚ್ಚಿನ ಪರೀಕ್ಷೆಗಳ ನಂತರ ಇದು ‘ಇಂಟ್ರಾಹೆಪಾಟಿಕ್ ಚೋಲಾಂಜಿಯೋಕಾರ್ಸಿನೋಮ’ (intrahepatic cholangiocarcinoma) ಎಂಬ ಕಾಯಿಲೆ ಎಂದು ದೃಢಪಟ್ಟಿತು. ಈ ಹಿಂದೆಯೇ ಅವರಿಗೆ ಈ ಕಾಯಿಲೆ ಇರುವುದು ಪತ್ತೆಯಾಗಿದ್ದರೂ, ಶಸ್ತ್ರಚಿಕಿತ್ಸೆಯಲ್ಲಿನ ಸಂಕೀರ್ಣತೆಯ ಕಾರಣದಿಂದಾಗಿ ಹಿಂದಿನ ವೈದ್ಯರು ಅದನ್ನು ತೆಗೆದುಹಾಕಲು ಹಿಂದೇಟು ಹಾಕಿದ್ದರು.
ಸುಮಾರು 95 ಕೆ.ಜಿ ತೂಕವಿದ್ದ ಆ ಮಹಿಳೆ ಬೊಜ್ಜು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರಿಂದ, ಇಂತಹ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಪಡಿಸುವುದು ಅತ್ಯಂತ ಅಪಾಯಕಾರಿಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ, ಈ ರೋಗಿಯು ಶಸ್ತ್ರಚಿಕಿತ್ಸೆಯನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯರು ಹೃದಯ ಮತ್ತು ಶ್ವಾಸಕೋಶದ ವಿವರವಾದ ಪರೀಕ್ಷೆಗಳನ್ನು ನಡೆಸಿದರು.
ಈ ಸವಾಲಿನ ಪ್ರಕರಣವನ್ನು ಕೈಗೆತ್ತಿಕೊಂಡ ಡಾ. ಹನುಮಂತ ನಾಯ್ಕ್ ಮತ್ತು ಅವರ ತಂಡ, ಕ್ಯಾನ್ಸರ್ ಗಡ್ಡೆಯನ್ನು ಯಶಸ್ವಿಯಾಗಿ ತೆಗೆದುಹಾಕಲು ಸುಮಾರು ಆರು ಗಂಟೆಗಳ ಕಾಲ ಶ್ರಮಿಸಿತು. ಇದರ ಜೊತೆಗೆ ಸಾಕಷ್ಟು ಆರೋಗ್ಯಕರ ಲಿವರ್ ಸರಿಯಾಗಿ ಕಾರ್ಯನಿರ್ವಹಿಸುವಂತೆಯೂ ನೋಡಿಕೊಂಡಿತು. ಈ ಶಸ್ತ್ರಚಿಕಿತ್ಸೆಯು ಪಿತ್ತಕೋಶದ (ಗಾಲ್ ಬ್ಲಾಡರ್) ಜೊತೆಗೆ ಲಿವರ್ನ II, III, IVa ಮತ್ತು IVb ಭಾಗಗಳನ್ನು ತೆಗೆದುಹಾಕುವ ದೊಡ್ಡ ಶಸ್ತ್ರಚಿಕಿತ್ಸೆಯನ್ನು (ಮೇಜರ್ ಲೆಫ್ಟ್ ಹೆಪಟೆಕ್ಟಮಿ) ಒಳಗೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಮಧ್ಯದ ಹೆಪಾಟಿಕ್ ರಕ್ತನಾಳವನ್ನು ಅತ್ಯಂತ ಎಚ್ಚರಿಕೆಯಿಂದ ರಕ್ಷಿಸಲಾಯಿತು.
ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಅತ್ಯಂತ ತ್ವರಿತವಾಗಿ ಚೇತರಿಸಿಕೊಂಡರು. ಶಸ್ತ್ರಚಿಕಿತ್ಸೆ ಮುಗಿದ ಆರು ಗಂಟೆಗಳಲ್ಲೇ ದ್ರವಾಹಾರ ಸೇವಿಸಲು ಆರಂಭಿಸಿದ ಅವರು, ಕ್ರಮೇಣ ಮೃದುವಾದ ಆಹಾರವನ್ನು ಸೇವಿಸುವ ಹಂತಕ್ಕೆ ತಲುಪಿದರು. ಅವರ ಆರೋಗ್ಯ ಸ್ಥಿರವಾಗಿದ್ದರಿಂದ ಕೇವಲ ಐದು ದಿನಗಳಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
ಶಸ್ತ್ರಚಿಕಿತ್ಸೆ ಬಗ್ಗೆ ಮಾತನಾಡಿದ ಡಾ. ಆರ್. ಕೆ. ಹನುಮಂತ ನಾಯ್ಕ್, “ಟ್ಯೂಮರ್ನ ಗಾತ್ರ ಮತ್ತು ಅದು ಇದ್ದ ಜಾಗ, ಅದರ ಜೊತೆಗೆ ರೋಗಿಯ ಬೊಜ್ಜು ಮತ್ತು ಇತರ ವೈದ್ಯಕೀಯ ಸಮಸ್ಯೆಗಳಿಂದಾಗಿ ಇದು ತಾಂತ್ರಿಕವಾಗಿ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆಯಾಗಿತ್ತು. ಆರೋಗ್ಯಕರ ಲಿವರ್ ಅನ್ನು ಉಳಿಸಿಕೊಂಡು ಕ್ಯಾನ್ಸರ್ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆದುಹಾಕುವುದು ನಮ್ಮ ಮೊದಲ ಆದ್ಯತೆಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ ಎಚ್ಚರಿಕೆಯ ಮೌಲ್ಯಮಾಪನ, ಶಸ್ತ್ರಚಿಕಿತ್ಸೆಯ ನಿಖರವಾದ ಯೋಜನೆ ಮತ್ತು ಶಸ್ತ್ರಚಿಕಿತ್ಸೆಯ ನಂತರದ ವ್ಯವಸ್ಥಿತ ಆರೈಕೆಯು ಈ ಯಶಸ್ಸಿಗೆ ಕಾರಣವಾಯಿತು” ಎಂದು ತಿಳಿಸಿದರು.
ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಕೇಂದ್ರದ ಫೆಸಿಲಿಟಿ ಡೈರೆಕ್ಟರ್ ಶ್ರೀ ಸುನಿಲ್ ಭಂಡಾರಿಗಲ್ ಮಾತನಾಡಿ, “ಹೆಚ್ಚಿನ ಅಪಾಯದಲ್ಲಿದ್ದ ರೋಗಿಗೆ ಇಂತಹ ಸಂಕೀರ್ಣವಾದ ಲಿವರ್ ಟ್ಯೂಮರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿಭಾಯಿಸಿರುವುದು ನಮ್ಮ ಶಸ್ತ್ರಚಿಕಿತ್ಸಾ ತಂಡದ ಪರಿಣತಿ ಮತ್ತು ವಿವಿಧ ವಿಭಾಗಗಳ ವೈದ್ಯರ ಸಂಯೊಜನೆ ಆರೈಕೆಯ (multidisciplinary care) ಮಹತ್ವವನ್ನು ತೋರಿಸುತ್ತದೆ. ಸಂಕೀರ್ಣ ಆರೋಗ್ಯ ಸಮಸ್ಯೆಗಳಿಗೆ ಸುಧಾರಿತ, ಸಕಾಲಿಕ ಮತ್ತು ರೋಗಿ-ಕೇಂದ್ರಿತ ಚಿಕಿತ್ಸೆಯನ್ನು ಒದಗಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ” ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ3 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

