ದಿನದ ಸುದ್ದಿ
ಅಧ್ಯಕ್ಷ ಯಾರಾದರೇನ್ ಯುದ್ಧ ಸಂಸ್ಕೃತಿ ‘ಬಿಡೆನ್’..!
- ನಾ ದಿವಾಕರ
ಹಣಕಾಸು ಬಂಡವಾಳ ವ್ಯವಸ್ಥೆ ಮತ್ತು ನವ ಉದಾರವಾದದ ಪ್ರಪಂಚದಲ್ಲಿ ಪ್ರಜಾತಾಂತ್ರಿಕ ಚುನಾವಣೆಗಳು ಹೆಚ್ಚಿನ ಪ್ರಾಶಸ್ತ್ಯ, ಪ್ರಾಮುಖ್ಯತೆ ಪಡೆಯುತ್ತವೆ. ಸರ್ವಾಧಿಕಾರಿ ಆಡಳಿತ ಇರುವ ದೇಶಗಳಲ್ಲಿ ಈ ಪ್ರಶ್ನೆ ಉದ್ಭವಿಸುವುದಿಲ್ಲ.
ಆದರೆ ಪ್ರಜಾತಂತ್ರವನ್ನು ಒಪ್ಪಿಕೊಂಡಿರುವ ದೇಶಗಳಲ್ಲಿ ಚುನಾಯಿತವಾಗುವ ಸರ್ಕಾರಗಳು ಜಾಗತಿಕ ಬಂಡವಾಳ ಮತ್ತು ಮಾರುಕಟ್ಟೆಗೆ ಹೇಗೆ ಸ್ಪಂದಿಸುತ್ತವೆ ಎನ್ನುವ ಆತಂಕ ಭಾರತವನ್ನೂ ಸೇರಿದಂತೆ ಎಲ್ಲ ದೇಶಗಳಲ್ಲೂ ಕಂಡುಬರುತ್ತದೆ. ಕಾರಣ ಸ್ಪಷ್ಟ, ಸರ್ಕಾರ ಯಾವುದೇ ಜನವಿರೋಧಿ-ಬಂಡವಾಳಶಾಹಿ ಆರ್ಥಿಕ ನೀತಿಯನ್ನು ಜಾರಿಗೊಳಿಸಿದರೂ ಅದಕ್ಕೆ ಜನಮನ್ನಣೆ ಇದೆ ಎನ್ನುವ ಭ್ರಮೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇರುತ್ತದೆ. ಇಂದು ನವಂಬರ್ 8- ಅಮಾನ್ಯೀಕರಣದ ಕರಾಳ ಕ್ಷಣಗಳನ್ನು ನೆನೆಯುವ ದಿನ, 2016ರ ಈ ದಿನವೂ ಸಹ “ಜನಮನ್ನಣೆ”ಯ ನೆಲೆಯಲ್ಲೇ ಸ್ವೀಕೃತವಾಗಿದ್ದನ್ನು ಸ್ಮರಿಸಬಹುದು.
ಈಗ ಅಮೆರಿಕ ಅಧ್ಯಕ್ಷೀಯ ಚುನಾವಣೆ ಮುಗಿದಿದೆ. ಅಮೆರಿಕದ ಜನತೆ ರಿಪಬ್ಲಿಕನ್ ಟ್ರಂಪ್ ಅವರನ್ನು ತಿರಸ್ಕರಿಸಿ ಡೆಮಾಕ್ರಟ್ ಬಿಡನ್ ಅವರನ್ನು ಆಯ್ಕೆ ಮಾಡಿದ್ದಾರೆ. ಈ ಇಬ್ಬರು ನಾಯಕರ ನಡುವಿನ ಸ್ಪರ್ಧೆ ಅಮೆರಿಕದ ಜನತೆಯಲ್ಲಿ ಸೃಷ್ಟಿಸಿದ್ದಷ್ಟೇ ಆತಂಕ ಮತ್ತು ಕುತೂಹಲವನ್ನು ಭಾರತದ ಜನತೆಯಲ್ಲೂ ಸೃಷ್ಟಿಸಿತ್ತು. ಈ ಕುತೂಹಲಕ್ಕೆ ಎರಡು ಆಯಾಮಗಳಿವೆ.
ಭಾರತವನ್ನು ಆಳುತ್ತಿರುವ ಬಲಪಂಥೀಯರಿಗೆ, ಆಡಳಿತವನ್ನು ನಿಯಂತ್ರಿಸುತ್ತಿರುವ ಹಿಂದುತ್ವವಾದಿ-ಸಂಘಪರಿವಾರದವರಿಗೆ ಟ್ರಂಪ್ ಫ್ಯಾಸಿಸ್ಟ್ ಶಕ್ತಿಯ ಸಂಕೇತವಾಗಿ ಕಾಣುತ್ತಿದ್ದುದು ಸ್ಪಷ್ಟ. ಬಲಪಂಥೀಯವಾದ-ಮತಾಂಧತೆ-ಫ್ಯಾಸಿಸಂ ಮತ್ತು ನವ ಉದಾರವಾದ ಇವುಗಳ ಸಮ್ಮಿಲನ ಇಡೀ ವಿಶ್ವದ ಪ್ರಭುತ್ವ ನೆಲೆಗಳನ್ನು ಗಟ್ಟಿಗೊಳಿಸುತ್ತಿರುವ ಸಂದರ್ಭದಲ್ಲಿ ಟ್ರಂಪ್ನಂತಹ ದೊಡ್ಡಣ್ಣಗಳು ಸ್ವೀಕಾರಾರ್ಹರಾಗುತ್ತಾರೆ.
ಆದರೆ ಅಮೆರಿಕದ ಜನತೆ ಈ ಅಭಿಪ್ರಾಯಕ್ಕೆ ವ್ಯತಿರಿಕ್ತವಾಗಿ ಡೆಮಾಕ್ರಟ್ ಪಕ್ಷದ ಜೋ ಬಿಡೆನ್ ಅವರನ್ನು ಆಯ್ಕೆ ಮಾಡಿದ್ದಾರೆ. ಬಿಡೆನ್ ಆಯ್ಕೆಯಿಂದ ಅಮೆರಿಕದ ಆಂತರಿಕ ಆಡಳಿತ ವ್ಯವಸ್ಥೆಯಲ್ಲಿ ಕೊಂಚ ಬದಲಾವಣೆಗಳನ್ನು ಕಾಣಬಹುದು. ಟ್ರಂಪ್ ಸೋತಿದ್ದರೂ ಆಡಳಿತ ನೀತಿಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಪ್ರಾಶಸ್ತ್ಯ ಪಡೆಯುವ ಸೆನೇಟ್ಗಳಲ್ಲಿ ರಿಪಬ್ಲಿಕನ್ ಪಕ್ಷ ಈಗಲೂ ಬಲಿಷ್ಟವಾಗಿದೆ. ಭಾರತದಲ್ಲಿನ ಒಂದು ವರ್ಗದ ಜನತೆಗೆ ಬಿಡೆನ್ ಸ್ವೀಕಾರಾರ್ಹವಾಗುತ್ತಾರೆ.
ಇದಕ್ಕೆ ಕಾರಣ ಬಿಡೆನ್ ಆಯ್ಕೆಯಿಂದ ಯಾವುದೇ ಮಹತ್ತರ ಬದಲಾವಣೆಯಾಗುತ್ತದೆ, ಭಾರತಕ್ಕೆ ಒಳಿತಾಗುತ್ತದೆ ಎನ್ನುವುದಲ್ಲ. ಟ್ರಂಪ್ನ ಮಹಿಳಾ ವಿರೋಧಿ, ಇಸ್ಲಾಂ ವಿರೋಧಿ, ಜನಾಂಗೀಯ ದ್ವೇಷ ಧೋರಣೆಗಳು ಕೊನೆಗೊಳ್ಳಬಹುದು ಎನ್ನುವ ಒಂದು ನಂಬಿಕೆಯಷ್ಟೆ. ಈ ನಿರೀಕ್ಷೆಗಳು ಕೊಂಚಮಟ್ಟಿಗೆ ಸಹಜ ಎನಿಸಿದರೂ, ಕಳೆದ ಐದು ದಶಕಗಳ ಅಮೆರಿಕದ ರಾಜಕಾರಣವನ್ನು ಗಮನಿಸಿದರೆ ಇದು ಹುಸಿ ನಿರೀಕ್ಷೆಯಾಗುವ ಸಾಧ್ಯತೆಗಳೇ ಹೆಚ್ಚು.
ಏಕೆಂದರೆ ಅಮೆರಿಕ ಸೃಷ್ಟಿಸಿರುವ ಇಸ್ಲಾಮಿಕ್ ಭಯೋತ್ಪಾದನೆ ಎಂಬ ಪೆಡಂಭೂತ ಒಂದು ಪಕ್ಷದ ಸೃಷ್ಟಿಯಲ್ಲ , ಇದು ಸಾಮ್ರಾಜ್ಯಶಾಹಿ ವ್ಯವಸ್ಥೆ ತನ್ನ ನೆಲೆಯನ್ನು ಗಟ್ಟಿಗೊಳಿಸಿಕೊಳ್ಳಲು ಸೃಷ್ಟಿಸಿರುವ ಒಂದು ವಿದ್ಯಮಾನ. ಅದಕ್ಕೆ ಬಲಿಯಾಗಿರುವುದು ಇತರ ರಾಷ್ಟ್ರಗಳೇ ಹೊರತು ಅಮೆರಿಕ ಅಲ್ಲ. 9/11ರ ಒಂದು ಸಂದರ್ಭವನ್ನು ಬಿಟ್ಟರೆ ಅಮೆರಿಕ ಭಯೋತ್ಪಾದಕ ದಾಳಿಗಳಿಗೆ ತುತ್ತಾಗಿಲ್ಲ. ಆದರೆ ಅಮೆರಿಕದ ಸಾಮ್ರಾಜ್ಯಶಾಹಿ ದಾಹಕ್ಕೆ ಭಯೋತ್ಪಾದನೆ ಒಂದು ಪ್ರಬಲ ಅಸ್ತ್ರವಾಗಿ ಇತರ ರಾಷ್ಟ್ರಗಳ ಅಸಂಖ್ಯಾತ ಜನರ ಜೀವಹರಣ ಮಾಡಿದೆ. ಮತ್ತೊಂದೆಡೆ ಅಮೆರಿಕದ ಕಪ್ಪು ಜನಾಂಗದ ಜನರ ಮೇಲಿನ ದೌರ್ಜನ್ಯಗಳೂ ಸಹ ಯಾವುದೋ ಒಂದು ರೀತಿಯಲ್ಲಿ ನಡೆಯುತ್ತಲೇ ಇದೆ.
ಇತ್ತೀಚಿನ ಫ್ಲಾಯ್ಡ್ ಘಟನೆಯ ನಂತರ ನಡೆದ ಬ್ಲಾಕ್ ಲೈಫ್ ಮ್ಯಾಟರ್ಸ್ ಆಂದೋಲನ ಟ್ರಂಪ್ ಅವರ ಸೋಲಿಗೆ ಎಷ್ಟರ ಮಟ್ಟಿಗೆ ಕಾರಣವಾಗಿದೆ ಎಂದು ಸ್ಪಷ್ಟವಾಗಿಲ್ಲ. ಮಹಿಳೆಯರ ಬಗ್ಗೆ ತುಚ್ಚವಾಗಿ ಮಾತನಾಡಿ ಮಹಿಳಾ ಆಂದೋಲನಗಳ ಕೆಂಗಣ್ಣಿಗೆ ಗುರಿಯಾಗಿದ್ದ ಟ್ರಂಪ್ಗೆ ಅನೇಕ ರಾಜ್ಯಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಿದ್ದಾರೆ.
ಕಪ್ಪು ಜನಾಂಗದವರೂ ಸಹ ಹೆಚ್ಚಿನ ಬೆಂಬಲ ನೀಡಿದ್ದಾರೆ. ಆದಾಗ್ಯೂ ಟ್ರಂಪ್ ಈ ಬಾರಿ ನಿರೀಕ್ಷೆಗೂ ಮೀರಿ ಸೋಲನುಭವಿಸಿದ್ದರೆ ಅದಕ್ಕೆ ಕಾರಣ ಅವರ ದ್ವೇಷ ರಾಜಕಾರಣ, ಬಿಳಿಯರ ಶ್ರೇಷ್ಠತೆ ಮತ್ತು ಪಾರಮ್ಯವನ್ನು ಮೆರೆಯುವ ಅಹಮಿಕೆ, ಇಸ್ಲಾಂ ವಿರೋಧಿ ಧೋರಣೆ ಮತ್ತು ಗೊಂದಲಯ ವಿದೇಶಾಂಗ ನೀತಿ. ಕೊರೋನಾ ನಿಯಂತ್ರಣದಲ್ಲಿ ವಿಫಲವಾಗಿರುವುದೂ ಒಂದು ಕಾರಣ ಎನ್ನಲಾಗುತ್ತಿದೆ.
ಡೊನಾಲ್ಡ್ ಟ್ರಂಪ್ ಆಡಳಿತದಲ್ಲಿ ಅಮೆರಿಕ ಹೆಚ್ಚಿನ ಯುದ್ಧಗಳಲ್ಲಿ ತೊಡಗಿಲ್ಲ ಎನ್ನುವ ಪ್ರಶಂಸೆಯ ಮಾತುಗಳು ಸಹ ಕೇಳಿಬರುತ್ತಿವೆ. ಭಾರತದಲ್ಲೂ ಕೆಲವು ವಿಶ್ಲೇಷಕರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ 2017ರ ಜನವರಿಯಲ್ಲಿ ಅಧಿಕಾರಕ್ಕೆ ಬರುವ ಮುನ್ನ ಮಧ್ಯಪ್ರಾಚ್ಯ ದೇಶಗಳಿಂದ ಸೇನೆಯನ್ನು ಹಿಂಪಡೆಯುವ ಆಶ್ವಾಸನೆ ನೀಡಿದ್ದ ಟ್ರಂಪ್ ಸಿರಿಯಾ ಮೇಲೆ 52 ಬಾರಿ ಕ್ಷಿಪಣಿ ದಾಳಿ ನಡೆಸಿದ್ದಾರೆ. ವೆನೆಜುವೆಲಾದಲ್ಲಿ ಕ್ಷಿಪ್ರ ಕ್ರಾಂತಿಗೆ ಪ್ರಯತ್ನಿಸಿ ವಿಫಲವಾಗಿದ್ದಾರೆ.
ಆಫ್ಘಾನಿಸ್ಥಾನದಲ್ಲಿ ಅಮೆರಿಕದ ಡ್ರೋನ್ ದಾಳಿಗಳಿಂದ ನೂರಾರು ಸಾವುಗಳು ಸಂಭವಿಸಿವೆ. ದೊಡ್ಡ ಪ್ರಮಾಣದ ಯುದ್ಧಗಳು ಸಂಭವಿಸದಿರುವುದಕ್ಕೆ ಬಂಡವಾಳ ವ್ಯವಸ್ಥೆ ಎದುರಿಸುತ್ತಿರುವ ಮಾರುಕಟ್ಟೆ ಬಿಕ್ಕಟ್ಟುಗಳು ಕಾರಣ ಎನ್ನುವುದನ್ನೂ ಗಮನಿಸಬೇಕು. ಯುದ್ಧಗಳು ಬಂಡವಾಳ ಮತ್ತು ಭೌಗೋಳಿಕ ವಿಸ್ತರಣೆಯ ಒಂದು ಸಾಧನವಾಗಿರುವುದರಿಂದ ಅವಶ್ಯಕತೆ ಇದ್ದಾಗ ಮಾತ್ರವೇ ಸಂಭವಿಸುತ್ತದೆ. ಇದಕ್ಕೆ ಚೀನಾ ಸಹ ಹೊರತಲ್ಲ, ಭಾರತವೂ ಹೊರತಲ್ಲ.
ಹಾಗೆಂದ ಮಾತ್ರಕ್ಕೆ ಟ್ರಂಪ್ ಶಾಂತಿಪ್ರಿಯರೇನೂ ಆಗಿರಲಿಲ್ಲ. ಚೀನಾದೊಡನೆ ನಿರಂತರ ಸಂಘರ್ಷದಲ್ಲಿದ್ದ ಟ್ರಂಪ್ ಸರ್ಕಾರಕ್ಕೆ ಯುದ್ಧದ ಸನ್ನಿವೇಶ ಸೃಷ್ಟಿಸುವಷ್ಟು ಆರ್ಥಿಕ ಸ್ಥಿರತೆ ಇರಲಿಲ್ಲ. ಆದರೆ ಯಾವುದೇ ಸಂದರ್ಭದಲ್ಲಿ ಯುದ್ಧ ಸಂಭವಿಸಿದರೂ ನಿರ್ವಹಿಸುವ ನಿಟ್ಟಿನಲ್ಲಿ ಅಮೆರಿಕದ ಸೇನಾ ವಲಯ ಸಿದ್ಧತೆ ನಡೆಸಿಯೇ ಇತ್ತು.
ಈ ಅಸಹಾಯಕತೆಯಿಂದಲೇ ಟ್ರಂಪ್ ಆಡಳಿತ ಉತ್ತರ ಕೊರಿಯಾ ಮತ್ತು ಇರಾನ್ ನೊಡನೆ ಸ್ನೇಹ ಹಸ್ತ ಚಾಚುವ ಮೂಲಕ ಪರಿಸ್ಥಿತಿಯನ್ನು ನಿಭಾಯಿಸಿತ್ತು. ಆದರೆ ಪ್ಯಾಲೆಸ್ಟೈನ್ ನಲ್ಲಿ ಇಸ್ರೇಲಿನ ಫ್ಯಾಸಿಸ್ಟ್ ಆಕ್ರಮಣಗಳಿಗೆ ಅಮೆರಿಕದ ನೀತಿ ಬದಲಾಗಿರಲಿಲ್ಲ. ಇದು ಸಾಧ್ಯವಾಗುವುದೂ ಇಲ್ಲ. ಏಕೆಂದರೆ ಕಳೆದ 70 ವರ್ಷಗಳಿಂದಲೂ ಅಮೆರಿಕದ ವಿದೇಶಾಂಗ ನೀತಿಯ ಕೆಲವು ಅಂಶಗಳು ಸಾಮ್ರಾಜ್ಯಶಾಹಿಯ ಚೌಕಟ್ಟಿನಿಂದ ಹೊರಬರಲು ಸಾಧ್ಯವಾಗಿಲ್ಲ.
ವಿಶ್ವದ ಸಮುದಾಯಗಳ ದೃಷ್ಟಿಯಲ್ಲಿ ಅಮೆರಿಕದಲ್ಲಿ ಸರ್ಕಾರಗಳು ಬದಲಾಗುವುದೆಂದರೆ ಹೆಚ್ಚಿನ ಆತಂಕ ಮೂಡಿಸುತ್ತವೆ. ಮತ್ತಾವ ದೇಶದ ಮೇಲೆ ಯುದ್ಧ ಸಾರಲಾಗುತ್ತದೆ, ಮತ್ತಾವ ದೇಶದಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕಲು ಸೇನೆಯನ್ನು ನಿಯೋಜಿಸಲಾಗುತ್ತದೆ, ಪ್ರಜಾತಂತ್ರ ಸ್ಥಾಪಿಸಲು ಮತ್ತು ವಿಶ್ವಶಾಂತಿಗಾಗಿ ಮತ್ತಾವ ಸಣ್ಣ ರಾಷ್ಟ್ರದ ಮೇಲೆ ಮಾರಣಾಂತಿಕ ಆಕ್ರಮಣ ನಡೆಸಲಾಗುತ್ತದೆ, ಹೀಗೆ ಹಲವು ಅನುಮಾನಗಳು ವಿಶ್ವ ಸಮುದಾಯವನ್ನು ಕಾಡುತ್ತಲೇ ಇರುತ್ತದೆ. ಇಲ್ಲಿ ಅಮೆರಿಕದ ರಿಪಬ್ಲಿಕನ್ ಮತ್ತು ಡೆಮಾಕ್ರಟ್ ಪಕ್ಷಗಳ ನಡುವೆ ವ್ಯತ್ಯಾಸವನ್ನೇನೂ ಕಾಣಲಾಗುವುದಿಲ್ಲ.
ವಿಶ್ವ ಶಾಂತಿಗಾಗಿ ನೊಬೆಲ್ ಪ್ರಶಸ್ತಿ ಪಡೆದ ಬರಾಕ್ ಒಬಾಮ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅಮೆರಿಕ ಅತಿ ಹೆಚ್ಚು ಬಾಂಬ್ ದಾಳಿಗಳನ್ನು ನಡೆಸಿದ್ದುದನ್ನು ಸ್ಮರಿಸಬಹುದು. ಜಾರ್ಜ್ ಬುಷ್ ಅವರಿಗಿಂತಲೂ ಹೆಚ್ಚಿನ ಬಾಂಬ್ ದಾಳಿ ನಡೆಸಿರುವ ಕುಖ್ಯಾತಿ ಒಬಾಮಾ ಅವರಿಗೆ ಸಲ್ಲುತ್ತದೆ. ಡ್ರೋನ್ಗಳ ಮೂಲಕ ಸಣ್ಣಪುಟ್ಟ ರಾಷ್ಟ್ರಗಳ ಮೇಲೆ ದಾಳಿ ನಡೆಸುವ ಆಧುನಿಕ ಯುದ್ಧಪರಂಪರೆಗೆ ಒಬಾಮಾ ನಾಂದಿ ಹಾಡಿದ್ದರು. ಒಬಾಮಾ ಅವರ ಎರಡು ಅಧಿಕಾರಾವಧಿಯಲ್ಲಿ ಪಾಕಿಸ್ತಾನ, ಸೊಮಾಲಿಯಾ, ಯೆಮನ್ ಮುಂತಾದ ದೇಶಗಳ ಮೇಲೆ 563 ವೈಮಾನಿಕ ದಾಳಿ ನಡೆದಿದ್ದವು. ಈ ದೇಶಗಳಲ್ಲಿ ಕನಿಷ್ಟ 300 ರಿಂದ 800 ನಾಗರಿಕರು ಈ ದಾಳಿಗೆ ಬಲಿಯಾಗಿದ್ದರು.
ಆಫ್ಘಾನಿಸ್ತಾನ ಮತ್ತು ಇರಾಕ್ನಲ್ಲಿ ಅಮೆರಿಕದ ಪಡೆಗಳ ಸಂಖ್ಯೆಯನ್ನು ಒಬಾಮಾ ಕಡಿಮೆ ಮಾಡಿದರೂ ವಿಶ್ವದಾದ್ಯಂತ ನಡೆಸಿದ ವೈಮಾನಿಕ ದಾಳಿ, ಡ್ರೋನ್ ದಾಳಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದುದೂ ಸತ್ಯ. 2016ರಲ್ಲಿ ಅಮೆರಿಕದ ವಿಶೇಷ ಸೇನಾ ಕಾರ್ಯಪಡೆಗಳು ವಿಶ್ವದ ಶೇ 70 ರಷ್ಟು, ಅಂದರೆ 138 ರಾಷ್ಟ್ರಗಳಲ್ಲಿ ನೆಲೆ ಮಾಡಿದ್ದವು. 2016ರಲ್ಲೇ, ತಮ್ಮ ಅಧಿಕಾರದ ಕೊನೆಯ ವರ್ಷದಲ್ಲಿ, ಒಬಾಮಾ ಆಡಳಿತ 26171 ವೈಮಾನಿಕ ಬಾಂಬ್ ದಾಳಿ ನಡೆಸಿತ್ತು ಎಂದು ಅಲ್ಲಿನ ರಕ್ಷಣಾ ವಲಯದ ದಾಖಲೆಗಳು ಹೇಳುತ್ತವೆ. ಸಿರಿಯಾ ಮತ್ತು ಇರಾಕ್ ಈ ಬಾಂಬ್ ದಾಳಿಗೆ ಹೆಚ್ಚಾಗಿ ತುತ್ತಾದರೂ, ಆಫ್ಘಾನಿಸ್ತಾನ, ಲಿಬ್ಯಾ, ಯೆಮನ್, ಸೊಮಾಲಿಯಾ ಮತ್ತು ಪಾಕಿಸ್ತಾನದ ಜನತೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಯಿತು.
ಈ ಚಾರಿತ್ರಿಕ ಹಿನ್ನೆಲೆಯಲ್ಲಿ ನೋಡಿದಾಗ ಅಮೆರಿಕದ ಚುನಾವಣಾ ಫಲಿತಾಂಶಗಳು ನಮ್ಮೊಳಗೆ ಉಂಟುಮಾಡುವ ಉತ್ಸಾಹ ಮತ್ತು ಕುತೂಹಲ ಉತ್ಪ್ರೇಕ್ಷೆಯಿಂದ ಕೂಡಿರಬೇಕಿಲ್ಲ ಎನಿಸುತ್ತದೆ. ಆಂತರಿಕವಾಗಿ ಅಮೆರಿಕದ ಹೊಸ ಸರ್ಕಾರದ ನೀತಿಗಳು ಬದಲಾಗುತ್ತವೆ. ಕಪ್ಪು ಜನಾಂಗದ ಜನತೆ ಡೆಮಾಕ್ರಟ್ ಆಡಳಿತದಲ್ಲಿ ತಮ್ಮ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಂಡುಕೊಳ್ಳಬಹುದು.
ಟ್ರಂಪ್ ಅನುಸರಿಸಲು ಯೋಚಿಸಿದ್ದ “ ಅಮೆರಿಕ ಅಮೆರಿಕದ ಪ್ರಜೆಗಳಿಗಾಗಿ ” ಎನ್ನುವ ಧೋರಣೆ ಬದಲಾಗಬಹುದು. ವಿಶ್ವ ವಾಣಿಜ್ಯ ಸಂಸ್ಥೆಯ ನವ ಉದಾರವಾದ ಮತ್ತು ಜಾಗತೀಕರಣ ನೀತಿಗಳಿಗೆ ಬಿಡೆನ್ ಬದ್ಧತೆ ತೋರಬಹುದು. ಟ್ರಂಪ್ ಆಡಳಿತದಲ್ಲಿ ಅನುಸರಿಸಲಾಗಿದ್ದ ಮುಸ್ಲಿಂ ವಿರೋಧಿ ನೀತಿಗಳು, ಇಸ್ಲಾಂ ಭೀತಿ ಸೃಷ್ಟಿಸುವ ನೀತಿಗಳು ಬದಲಾಗಬಹುದು.
ಆದರೆ ಜಾಗತಿಕ ರಾಜಕಾರಣದಲ್ಲಿ ಇದಾವುದೂ ಪ್ರಭಾವ ಬೀರುವುದಿಲ್ಲ. ವಿಶ್ವದಾದ್ಯಂತ ಜನಸಾಮಾನ್ಯರಲ್ಲಿ , ಶ್ರಮಜೀವಿಗಳಲ್ಲಿ, ಶೋಷಿತರಲ್ಲಿ ಮತ್ತು ಸಾಮ್ರಾಜ್ಯಶಾಹಿಗಳ ದಾಳಿಗೆ ತುತ್ತಾದ ಸಣ್ಣಪುಟ್ಟ ರಾಷ್ಟ್ರಗಳಲ್ಲಿ ಇರುವ ಪ್ರಗತಿಪರ, ಫ್ಯಾಸಿಸ್ಟ್ ವಿರೋಧಿ ಮತ್ತು ಪ್ರಜಾತಂತ್ರವಾದಿಗಳು ಗಮನಿಸಬೇಕಾದ ಅಂಶವೆಂದರೆ ಅಮೆರಿಕದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಅಲ್ಲಿನ ಸಾಮ್ರಾಜ್ಯಶಾಹಿ ನೀತಿಗಳು ಬದಲಾಗುವುದಿಲ್ಲ, ವಿಸ್ತರಣಾವಾದ ಮತ್ತು ಸಂಪತ್ತಿನ ಮೇಲಿನ ನಿಯಂತ್ರಣದ ಹಪಹಪಿ ಕಡಿಮೆಯಾಗುವುದಿಲ್ಲ. ಅಮೆರಿಕ ವಿಶ್ವಶಾಂತಿಗಾಗಿ ಶ್ರಮಿಸುವ ಉದಾತ್ತ ಮಾತುಗಳನ್ನು ಆಡುತ್ತಲೇ ವಿಶ್ವದಾದ್ಯಂತ ಶಾಂತಿಯನ್ನು ಕದಡುವ ಯುದ್ಧಪರಂಪರೆಯನ್ನು ಪೋಷಿಸುತ್ತಲೇ ಬಂದಿದೆ.
ಇನ್ನು ಮುಂದೆಯೂ ಪೋಷಿಸುತ್ತಲೇ ಇರುತ್ತದೆ. ಆಂತರಿಕವಾಗಿ ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿಗಳಿಗೆ ಅನುಗುಣವಾಗಿ ಆಡಳಿತ ನಿಭಾಯಿಸುವ ಅಲ್ಲಿನ ಆಳುವ ವರ್ಗಗಳು ಬಾಹ್ಯ ಜಗತ್ತಿನಲ್ಲಿ ಅಮೆರಿಕದ ಬಂಡವಾಳಿಗರಿಗೆ ನೆಲೆ ಕಂಡುಕೊಳ್ಳಲು ಐಎಂಎಫ್, ವಿಶ್ವ ವಾಣಿಜ್ಯ ಸಂಸ್ಥೆ ಮುಂತಾದ ಆರ್ಥಿಕ ಅಸ್ತ್ರಗಳನ್ನು ಬಳಸುತ್ತಲೇ, ತೈಲ ಸಂಪತ್ತು, ಖನಿಜ ಸಂಪತ್ತು ಮತ್ತು ಅಗ್ಗದ ಶ್ರಮದ ಮೇಲೆ ತನ್ನ ಅಧಿಪತ್ಯ ಸಾಧಿಸಲು ತನ್ನ ಸೇನೆಯನ್ನೂ ಸಮರ್ಥವಾಗಿ ಬಳಸುತ್ತದೆ. ತಾಲಿಬಾನ್ ನಿಂದ ಐಸಿಸ್ ವರೆಗಿನ ಬೆಳವಣಿಗೆಗಳಿಗೆ ಈ ವಿಸ್ತರಣಾವಾದವೇ ಮೂಲ ಕಾರಣ ಎನ್ನುವುದನ್ನೂ ಗಮನಿಸಬೇಕಿದೆ.
ಹಣಕಾಸು ಬಂಡವಾಳ ಮತ್ತು ಬಂಡವಾಳಶಾಹಿ ವ್ಯವಸ್ಥೆ ಎದುರಿಸುತ್ತಿರುವ ಪ್ರಸ್ತುತ ಬಿಕ್ಕಟ್ಟಿನಿಂದ ಹೊರಬರಲು ಸಾಮ್ರಾಜ್ಯಶಾಹಿ ದೇಶಗಳು ಭಾರತವನ್ನೂ ಸೇರಿದಂತೆ ಹಲವು ರಾಷ್ಟ್ರಗಳನ್ನು ಚಿಮ್ಮು ಹಲಗೆಯಂತೆ ಬಳಸಿಕೊಳ್ಳುತ್ತವೆ. ಭಾರತದಲ್ಲೂ ಆಡಳಿತ ವ್ಯವಸ್ಥೆಯ ಮೇಲೆ ಬಹುಮಟ್ಟಿಗೆ ನಿಯಂತ್ರಣ ಸಾಧಿಸಿರುವ ಕಾರ್ಪೋರೇಟ್ ಹಿತಾಸಕ್ತಿಗಳು ಇದನ್ನು ಸ್ವಾಗತಿಸುತ್ತವೆ. ಅಮೆರಿಕ ವಿಶ್ವಶಾಂತಿಯ ಮಂತ್ರ ಜಪಿಸಿದರೆ ಭಾರತದ ಆಳುವ ವರ್ಗಗಳು ದೇಶಭಕ್ತಿಯ ಮಂತ್ರ ಜಪಿಸುತ್ತವೆ. ಎರಡೂ ಮಂತ್ರಗಳ ಮೂಲ ಇರುವುದು ಶ್ರಮಜೀವಿಗಳ ಶೋಷಣೆಯಲ್ಲಿ ಮತ್ತು ಸಂಪನ್ಮೂಲಗಳ ಲೂಟಿಯಲ್ಲಿ. ಈ ನಡುವೆ ಯುದ್ಧ ಸಂಭವಿಸಿದರೂ ಅದು ನಿಮಿತ್ತ ಮಾತ್ರ.
(ಕೆಲವು ಮಾಹಿತಿಗಳ ಆಕರ- ಪೀಪಲ್ಸ್ ರಿವ್ಯೂ ಮತ್ತಿತರ ಪತ್ರಿಕೆಗಳು)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.
ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.
ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.
ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.
ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.
ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.
ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.
ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.
ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ6 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ4 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
-
ದಿನದ ಸುದ್ದಿ15 hours agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

