Connect with us

ದಿನದ ಸುದ್ದಿ

ಜಿಎಸ್ ಟಿ ಪರಿಹಾರದಲ್ಲಿ ರಾಜ್ಯಕ್ಕೆ ಅಂದಾಜು 27 ಸಾವಿರ ಕೋಟಿ ಖೋತಾ ಆಗಬಹುದು : ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು : ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯುಪಿಎ ಸರ್ಕಾರದ ಹತ್ತು ವರ್ಷಗಳಲ್ಲಿ ಕರ್ನಾಟಕಕ್ಕೆ ನೀಡಿದ್ದ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ. ಯುಪಿಎಗಿಂತ ತಮ್ಮ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಿದೆ ಎಂದು ಒಂದಷ್ಟು ಸುಳ್ಳು ಅಂಕಿ-ಅಂಶಗಳನ್ನು ಮುಂದಿಟ್ಟು ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕಿಡಿಕಾರಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ವ್ಯಾಪಾರದಲ್ಲಿ ನುರಿತ ಗುಜರಾತಿಗಳು ಲೆಕ್ಕದಲ್ಲಿ ಪಕ್ಕಾ ಎನ್ನುವ ಅಭಿಪ್ರಾಯ ಇದೆ. ಆದರೆ ಆ ರಾಜ್ಯದವರಾದ ಪ್ರಧಾನಿ ಮತ್ತು ಗೃಹಸಚಿವರು ಬಾಯಿಬಿಟ್ಟರೆ ಸುಳ್ಳು ಲೆಕ್ಕಗಳೇ ಉದುರುತ್ತವೆ. ಗೃಹಸಚಿವ ಅಮಿತ್ ಶಾ ಅವರು ಮತ್ತೊಮ್ಮೆ ಸುಳ್ಳುಗಳ ಮೂಟೆ ಉರುಳಿಸಿಹೋಗಿದ್ದಾರೆ. ಈಗ ನಾನು ಹೇಳುವ ಲೆಕ್ಕವನ್ನು ಅವರು ಗಮನವಿಟ್ಟು ಕೇಳಬೇಕು ಮತ್ತು ತಾಳ್ಮೆಯಿಂದ ಉತ್ತರ ಕೊಡಬೇಕು.

ಮೊದಲನೆಯದಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುವ ದುಡ್ಡು ಭಿಕ್ಷೆ ಅಲ್ಲ, ಅದು ನ್ಯಾಯಬದ್ದವಾಗಿ ನಮಗೆ ಸಿಗಬೇಕಾಗಿರುವ ಪಾಲು. ಕರ್ನಾಟಕ ಪ್ರತಿವರ್ಷ ಅಂದಾಜು 2,20,000 ಕೋಟಿ ರೂಪಾಯಿಯಷ್ಟು ತೆರಿಗೆ-ಸುಂಕ ಮೂಲಕ ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಅದರಲ್ಲಿ ಹಣಕಾಸು ಆಯೋಗದ ಶಿಫಾರಸಿನ ಸೂತ್ರದಂತೆ ಆ ತೆರಿಗೆ ಹಣದಲ್ಲಿ ಶೇಕಡಾ 42ರಷ್ಟು ಹಣವನ್ನು ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಹಿಂದಿರುಗಿ ಕೊಡಬೇಕು. ಆದರೆ ಬಿಜೆಪಿ ಆಡಳಿತದ ಕಾಲದಲ್ಲಿ ನಮಗೆಂದೂ ಶೇಕಡಾ 42ರಷ್ಟು ಪಾಲು ಸಿಕ್ಕಿಲ್ಲ ಎಂದರು.

ಯುಪಿಎ ಆಡಳಿತದ ಕಾಲದಲ್ಲಿ (2010/11- 2013/14) ಹಣಕಾಸು ಆಯೋಗ ಕರ್ನಾಟಕಕ್ಕೆ ಕೇಂದ್ರ ತೆರಿಗೆಗಳ ಪಾಲು ನಿಗದಿಪಡಿಸಿದ್ದು ರೂ.45, 713 ಕೋಟಿ, ನಾವು ಪಡೆದದ್ದು ರೂ.47,036 ಕೋಟಿ. ಇದು ನಿಗದಿಪಡಿಸಿದ್ದಕ್ಕಿಂತ ರೂ.1.323 ಕೋಟಿ (ಶೇಕಡಾ 2.9ರಷ್ಟು) ಹೆಚ್ಚು. ಬಿಜೆಪಿ ಆಡಳಿತದ ಕಾಲದಲ್ಲಿ (2014-15 2019-20) 13 ಮತ್ತು 14ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.2,03,039 ಕೋಟಿ, ಸಿಕ್ಕಿದ್ದು ಕೇವಲ ರೂ.1,65 963 ಕೋಟಿ ರೂಪಾಯಿ ಮಾತ್ರ, ಅಂದರೆ ರೂ.48,768 ಕೋಟಿ (ಶೇಕಡಾ 18.2ರಷ್ಟು) ಕಡಿಮೆ.

2019-20ರ ವರ್ಷಕ್ಕೆ ಕರ್ನಾಟಕಕ್ಕೆ ಹಣಕಾಸು ಆಯೋಗ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.48, 768 ಕೋಟಿ, ನಮಗೆ ಸಿಕ್ಕಿರುವುದು ರೂ.30.919 ಕೋಟಿ ಮಾತ್ರ. ಇದರ ಜೊತೆಗೆ ಹತ್ತು ವರ್ಷಗಳ ಹಿಂದಿನ ಮತ್ತು ಈ ಹಣಕಾಸು ವರ್ಷದ ಕೇಂದ್ರ ಸರ್ಕಾರದ ಬಜೆಟ್ ಗಾತ್ರದಲ್ಲಿನ ಹೆಚ್ಚಳವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ರಾಜ್ಯ ಬಜೆಟ್ ಪ್ರಕಾರ 2020-21ನೇ ಹಣಕಾಸು ವರ್ಷದಲ್ಲಿ ನಿರೀಕ್ಷಿತ ತೆರಿಗೆ ಪಾಲು ರೂ.28,591 ಕೋಟಿ. ನನ್ನ ಪ್ರಕಾರ ಪ್ರಸಕ್ತ ವರ್ಷ ಮೊತ್ತ ರೂ.15,017 ಕೋಟಿಗೆ ಇಳಿದರೂ ಅಚ್ಚರಿ ಇಲ್ಲ. ಹೀಗಾದರೆ ಇದು 2019-20ರಲ ನಿರೀಕ್ಷೆಗಿಂತ ರೂ.33,751 ಕೋಟಿ ಇಲ್ಲವೇ ರಾಜ್ಯ ಬಜೆಟ್ ಅಂದಾಜಿಗಿಂತ ರೂ.24 789ರಷ್ಟು ಕಡಿಮೆ ಯಾಗುತ್ತದೆ.

ಜಿಎಸ್ ಟಿ ಪರಿಹಾರದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ. ಇತ್ತೀಚಿನ ಅಂದಾಜಿನ ಪ್ರಕಾರ ಜಿಎಸ್ ಟಿ ಪರಿಹಾರದಲ್ಲಿ ಅಂದಾಜು 25ರಿಂದ 27 ಸಾವಿರ ಕೋಟಿ ಖೋತಾ ಆಗಬಹುದು. ಕೇಂದ್ರ ಸರ್ಕಾರ ಇತ್ತೀಚೆಗೆ 18-19,000 ಕೋಟಿಯಷ್ಟೇ ಪರಿಹಾರ ನೀಡುವುದಾಗಿ ಹೇಳಿತ್ತು.
ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಲಿರುವ ಅನುದಾನ ರೂ.31,570 ಕೋಟಿಗಳಷ್ಟಾಗಬಹುದೆಂದು ನಿರೀಕ್ಷಿಸಲಾಗಿತ್ತು. ಈಗಿನ ಲೆಕ್ಕಾಚಾರದ ಪ್ರಕಾರ ಇದು ರೂ.17,372 ಕೋಟಿ ಗಳಷ್ಟಾಗಬಹುದು. ಇದರಿಂದ ರೂ.14,198 ಕೋಟಿ ಖೋತಾ ಆಗಲಿದೆ. ರಾಜ್ಯದ ಹಣಕಾಸು ಪರಿಸ್ಥಿತಿಗೆ ಇದು ಮಾರಕ ಹೊಡೆತ ಎಂದು

ಒಟ್ಟಾರೆಯಾಗಿ ಕರ್ನಾಟಕ ರಾಜ್ಯ ಕಳೆದ ವರ್ಷಕ್ಕಿಂತ ಸುಮಾರು 50,000 ಕೋಟಿಯಷ್ಟು ಕಡಿಮೆ ಅನುದಾನ ಪಡೆಯಬಹುದು ಇದನ್ನು ಆಧರಿಸಿ ಪ್ರಸಕ್ತ ಹಣಕಾಸು ವರ್ಷದ ಆದಾಯ ರೂ.1,80,217 ಕೋಟಿ ಗಳಾಗಬಹುದೆಂದು ರಾಜ್ಯ ಬಜೆಟ್ ನಲ್ಲಿ ನಿರೀಕ್ಷಿಸಲಾಗಿತ್ತು. ಕೇಂದ್ರ ಅನುದಾನದ ಕಡಿತದಿಂದಾಗಿ ಇದು ರೂ.1,14,758 ಕೋಟಿಗೆ ಇಳಿಯುವ ನಿರೀಕ್ಷೆ ಇದೆ.
ದಶಕಗಳಿಂದ ನಮ್ಮ ಒಟ್ಟು ಸಾಲ ಸುಮಾರು ರೂ.3.2ಲಕ್ಷ ಕೋಟಿಗಳೆಂದು ಅಂದಾಜು ಮಾಡಲಾಗಿದೆ. ಆದರೆ ಈಗಿನ ಒಂದೇ ವರ್ಷದಲ್ಲಿ ಸುಮಾರು ರೂ.90,000 ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಬಿಜೆಪಿ ಸರ್ಕಾರ ಕರ್ನಾಟಕವನ್ನು ಶಾಶ್ವತ ಸಾಲಗಾರ ರಾಜ್ಯವನ್ನಾಗಿ ಮಾಡಲು ಹೊರಟಿದೆ.

ಕೇಂದ್ರದಿಂದ ಸಿಗಬೇಕಾಗಿರುವ ತೆರಿಗೆ ಪಾಲು ಮತ್ತು ಅನುದಾನದ ಖೋತಾದಿಂದಾಗಿ ಆರ್ಥಿಕ ನಷ್ಟಕ್ಕೀಡಾಗಿರುವ ಕರ್ನಾಟಕಕ್ಕೆ ವಿಶೇಷ ಅನುದಾನದ ರೂಪದಲ್ಲಿ ರೂ.5,495 ಕೋಟಿ ನೀಡಬೇಕೆಂದು ಹಣಕಾಸು ಆಯೋಗ ಶಿಫಾರಸು ಮಾಡಿತ್ತು. ಈ ಅನುದಾನದ ನೆರವಿಗೂ ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಈಗಿನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಡ್ಡಗಾಲು ಹಾಕಿದ್ದಾರೆ.

ಕಾಂಗ್ರೆಸ್ ಪಕ್ಷದ ವಿರುದ್ಧ ಈ ರೀತಿ ತಿರುಚಿದ ಅಂಕಿಅಂಶಗಳನ್ನು ಮುಂದಿಟ್ಟುಕೊಂಡು ಆರೋಪಗಳನ್ನು ಮಾಡುವ ಮೊದಲು ಕೇಂದ್ರ ಹೋಮ್ ಮಿನಿಸ್ಟರ್ ಅಮಿತ್ ಶಾ ಅವರು ಮತ್ತೊಮ್ಮೆ ತಮ್ಮ ಹೋಂವರ್ಕ್ ಸರಿಯಾಗಿ ಮಾಡಿಕೊಂಡು ಬರಬೇಕೆಂದು ಅವರಿಗೆ ಸಲಹೆ ನೀಡುತ್ತೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

Published

on

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending