ದಿನದ ಸುದ್ದಿ
ಕೋವಿಡ್ ಪರಿಣಾಮಕಾರಿ ನಿರ್ವಹಣೆಗೆ ಸೂಕ್ತ ಕ್ರಮಗಳು ಅಧಿಕಾರಿಗಳ ತಂಡ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಉತ್ತಮ ಫಲಿತಾಂಶ ನೀಡಬೇಕು : ಡಿಸಿ ಮಹಾಂತೇಶ ಬೀಳಗಿ
ಸುದ್ದಿದಿನ,ದಾವಣಗೆರೆ: ಕೋವಿಡ್ಗೆ ಸಕಾಲದಲ್ಲಿ ಚಿಕಿತ್ಸೆ ಮತ್ತು ನಿಯಂತ್ರಣಕ್ಕಾಗಿ ತಜ್ಞರ ಸಮಿತಿಯಿಂದ ನಿಯಮಿತ ಸಭೆ, ಡೆತ್ ಆಡಿಟ್ ಸಮಿತಿ ಪುನಾರಚನೆ, ಔಷಧಗಳ ಉಸ್ತುವಾರಿಗಾಗಿ ಫ್ಲೈಯಿಂಗ್ ಸ್ಕ್ವಾಡ್ ರಚನೆ ಹಾಗೂ ವಿವಿಧ ವ್ಯವಸ್ಥೆಗಳನ್ನು ನಿರ್ವಹಿಸಲು ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲು ಇಂದು ತುರ್ತು ಸಭೆ ಕರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಡಿಹೆಚ್ಓ, ಡಿಎಸ್, ಡಿಎಸ್ಓ ಮತ್ತು ಎರಡು ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ತುರ್ತು ಸಭೆ ನಡೆಸಿ ಕೋವಿಡ್ ಪರಿಣಾಮಕಾರಿ ಚಿಕಿತ್ಸೆ ಮತ್ತು ನಿಯಂತ್ರಣಕ್ಕೆ ಅಗತ್ಯವಾದ ನಿರ್ಧಾರಗಳನ್ನು ಕೈಗೊಂಡು, ವಿವಿಧ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದರು.
ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಸಿ ಆದಿಯಾಗಿ ಎಲ್ಲರೂ ಒಂದು ತಂಡದಲ್ಲಿ ಶ್ರದ್ದೆಯಿಂದ ಕಾರ್ಯ ನಿರ್ವಹಿಸಬೇಕು. ಮೊದಲನೆಯದಾಗಿ ಜಿಲ್ಲೆಯಲ್ಲಿ ಸಂಭವಿಸುವ ಕೋವಿಡ್ ಅಥವಾ ನಾನ್ ಕೋವಿಡ್ ಸಾವು ಕುರಿತು ವಿಶ್ಲೇಷಣೆ ನಡೆಸಲು ಈ ಹಿಂದೆ ರಚಿಸಲಾಗಿದ್ದ ಡೆತ್ ಆಡಿಟ್ ಸಮಿತಿಯನ್ನು ತಕ್ಷಣವೇ ಮರು ರಚಿಸಿ, ಇಂದಿನಿಂದಲೇ ಸಂಭವಿಸುವ ಯಾವುದೇ ಸಾವಿನ ವರದಿಯನ್ನು ನೀಡಬೇಕೆಂದು ಡಿಹೆಚ್ಓ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.
ಇದನ್ನೂ ಓದಿ | ರಾಜ್ಯದಲ್ಲಿಂದು 29,438 ಕೊರೋನಾ ಪ್ರಕರಣ ಪತ್ತೆ ; 208 ಮಂದಿ ಸಾವು
ತಜ್ಞರ ಸಮಿತಿ ಸಭೆ
ವೈದ್ಯಕೀಯ ತಜ್ಞರ ಸಮಿತಿಯ ಸದಸ್ಯರು ಪ್ರತಿ ಎರಡು ದಿನಗಳಿಗೆ ಒಮ್ಮೆ ಸಭೆಯನ್ನು ನಡೆಸಿ, ಆಸ್ಪತ್ರೆಯ ಸಕ್ರಿಯ ಪ್ರಕರಣಗಳು, ಆಕ್ಸಿಜನ್ ಬೆಡ್ಗಳಲ್ಲಿ ಎಷ್ಟು ಜನ ರೋಗಿಗಳು ಯಾವ ಸ್ಥಿತಿಯಲ್ಲಿದ್ದಾರೆ, ಯಾರಿಗೆ ಏನು ಅವಶ್ಯಕತೆ ಇದೆ ಹಾಗೂ ಮುಂದಿನ ಹತ್ತು ದಿನಗಳ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಿದ್ದಪಡಿಸಿ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.
ಫ್ಲೈಯಿಂಗ್ ಸ್ಕ್ವಾಡ್ ರಚನೆ
ಜಿಲ್ಲಾಸ್ಪತ್ರೆ ಉಗ್ರಾಣ ಹಾಗೂ ಇತರೆ ಕೋವಿಡ್ ನಿರ್ವಹಿಸುತ್ತಿರುವ ಆಸ್ಪತ್ರೆಗಳ ಫಾರ್ಮಸಿಗಳಲ್ಲಿ ಔಷಧಗಳ ಲಭ್ಯತೆ ಹಾಗೂ ಔಷಧಗಳ ಬಳಕೆ, ಹೆಚ್ಚಿನ ಬಳಕೆ ಮತ್ತು ದುರ್ಬಳಕೆ ಕುರಿತು ಉಸ್ತುವಾರಿ ನೋಡಿಕೊಳ್ಳಲು ಫ್ಲೈಯಿಂಗ್ ಸ್ಕ್ವಾಡ್ ರಚಿಸಲಾಗುವುದು. ಈ ಫ್ಲೈಯಿಂಗ್ ಸ್ಕ್ವಾಡ್ ಪೊಲೀಸರ ಸಹಾಯ ಪಡೆದುಕೊಂಡು ಉಗ್ರಾಣ, ಫಾರ್ಮಸಿಗಳಿಗೆ ಭೇಟಿ ನೀಡಿ ಕೋವಿಡ್ಗೆ ಸಂಬಂಧಿಸಿದ ಯಾವುದೇ ಔಷಧಿ, ಲಸಿಕೆ ಕುರಿತು ಪರಿಶೀಲಿಸಿ ಔಷಧ ಲಭ್ಯತೆ ಮತ್ತು ಬಳಕೆ ಬಗ್ಗೆ ವಿವರವಾದ ವರದಿ ನೀಡಬೇಕೆಂದರು.
ಹಾಗೂ ಕೆಪಿಎಂಇ ಅಡಿಯಲ್ಲಿ ಕಳೆದ ಬಾರಿ ರಚಿಸಲಾಗಿದ್ದ ತಂಡಗಳನ್ನು ಪುನಾರಚಿಸಲಾಗುವುದು. ಈ ತಂಡಗಳು ಮೆಡಿಕಲ್ ಶಾಪ್ಗಳ ವರದಿ ಮತ್ತು ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ರೆಮಿಡಿಸಿವಿರ್ ಸೇರಿದಂತೆ ಇತರೆ ಲಸಿಕೆ ಮಾರಾಟ ಮಾಡುತ್ತಿದ್ದರೆ ಅಂತಹ ಆಸ್ಪತ್ರೆಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
- ಕೋವಿಡ್ ನಿರ್ವಹಣೆಯಲ್ಲಿ ಜಿಲ್ಲಾ ಸಿಜಿ ಆಸ್ಪತ್ರೆ ದಾವಣಗೆರೆಯ ಕನ್ನಡಿ ಇದ್ದಂತೆ.. ರೋಗಿಗಳು, ಬೆಡ್ಗಳು, ಆಕ್ಸಿಜನ್, ಪರೀಕ್ಷೆಗಳು, ಬಿಡುಗಡೆ ಕುರಿತಾಗಿ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು ಪ್ರತಿಯೊಂದು ವಿಭಾಗಕ್ಕೂ ಒಬ್ಬೊಬ್ಬ ನುರಿತ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗುತ್ತಿದೆ. ಹಾಗೂ ಡೆತ್ ಆಡಿಟ್ ಸಮಿತಿ ಪುನಾರಚನೆ, ತಜ್ಞರ ಸಭೆ, ಸಿಸಿಸಿ ಸ್ಥಾಪನೆ, ಅಗತ್ಯ ಸಿಬ್ಬಂದಿ ನೇಮಕ, ಆಂಬುಲೆನ್ಸ್ ಖರೀದಿ ಹಾಗೂ ಅಗತ್ಯ ಔಷಧ ಮತ್ತು ಇತರೆ ಸುರಕ್ಷತಾ ಪರಿಕರಗಳು ಸೇರಿದಂತೆ ಕೋವಿಡ್ನ್ನು ಅತ್ಯಂತ ಪರಿಣಾಮಕಾರಿಯಾಗಿ ಎದುರಿಸಲು ಎಲ್ಲ ರೀತಿಯ ಸಿದ್ದತೆಯನ್ನು ವ್ಯವಸ್ಥಿತವಾಗಿ ಮಾಡಲು ಈ ತುರ್ತು ಸಭೆಯಲ್ಲಿ ನಿರ್ಧರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.
| ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ
ಆಕ್ಸಿಜನ್ ನಿರ್ವಹಣೆಗೆ ಪ್ರತ್ಯೇಕ ನೋಡಲ್ ಅಧಿಕಾರಿ : ಕೋವಿಡ್ ರೋಗಿಗಳಿಗೆ ಅಗತ್ಯವಿರುವ ಆಕ್ಸಿಜನ್ ಸರಬರಾಜು ಮಾಡಲು ಪ್ರತಿ ವಾರ್ಡುಗಳಿಗೆ ತೆರಳಿ ಯಾರಿಗೆ ಯಾವ ರೀತಿಯ ಆಕ್ಸಿಜನ್ ಅಗತ್ಯವಿದೆ ಎಂದು ವಿಶ್ಲೇಷಿಸಿ ನಿರ್ಧರಿಸಿ ಕ್ರಮ ಕೈಗೊಳ್ಳಲು ಪ್ರತ್ಯೇಕವಾಗಿ ಒಬ್ಬ ತಜ್ಞರನ್ನು ಆಕ್ಸಿಜನ್ ನಿರ್ವಹಣಾ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ ಎಂದರು.
ಆರ್ಟಿಪಿಸಿಆರ್ ಲ್ಯಾಬ್ ನಿರ್ವಹಣೆಗೆ ನೋಡಲ್ ಅಧಿಕಾರಿ : ಪ್ರತಿ ದಿನ ಎಷ್ಟು ಪರೀಕ್ಷೆಗಳು ನಡೆಯುತ್ತಿವೆ. ಹಾಗೂ ಸಂಪೂರ್ಣ ಲ್ಯಾಬ್ನ ಕಾರ್ಯವೈಖರಿಯನ್ನು ವಿಶ್ಲೇಷಿಸಿ ಕ್ರಮ ವಹಿಸಲು ಡಾ.ಗಂಗಾಧರ್ ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗುವುದು ಎಂದರು.
ಪ್ರಸ್ತುತ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕದ ಪರೀಕ್ಷೆಗಳು ಸಾಕಷ್ಟು ಆಗುತ್ತಿದ್ದರೂ ಡಾಟಾ ಎಂಟ್ರಿಯಲ್ಲಿ ಅದು ಸರಿಯಾಗಿ ಅಪ್ಡೇಟ್ ಮಾಡದೇ ಇರುವ ಕಾರಣ ರಾಜ್ಯ ವರದಿಯಲ್ಲಿ ಕಡಿಮೆ ತೋರಿಸುತ್ತಿದೆ. ಆದ ಕಾರಣ ಟಿಹೆಚ್ಓ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಡಾಟಾ ಎಂಟ್ರಿ ಸಮರ್ಪಕವಾಗಿ ಮಾಡಿಸಲು ಕ್ರಮ ಕೈಗೊಳ್ಳಬೇಕು.
ಸಿಜಿ ಆಸ್ಪತ್ರೆಯಲ್ಲಿ ಪ್ರಸ್ತುತ 2000 ಪೂಲಿಂಗ್ ಪರೀಕ್ಷೆ ಮಾಡಿಸುವ ಸಾಮಥ್ರ್ಯ ಇದೆ. ಸಕ್ರಿಯ ಪ್ರಕರಣದ 10 ಪಟ್ಟು ಟೆಸ್ಟ್ ಆಗಬೇಕಿದ್ದು, ಈ ಬಗ್ಗೆ ಕ್ರಮ ವಹಿಸಲಾಗುತ್ತಿದೆ. ಹಾಗೂ ಆಸ್ಪತ್ರೆಗೆ ಅಗತ್ಯವಿರುವ ಎಲ್ಲ ಅಗತ್ಯ ಔಷಧಿಗಳು ಮತ್ತು ಸುರಕ್ಷತಾ ಪರಿಕರ ಖರೀದಿಗೆ ಕ್ರಮ ವಹಿಸಲಾಗಿದೆ ಎಂದರು.
ಇಂದು ಕೋವಿಡ್ ಲಸಿಕೆಯ ಗುರಿ 13000 ಸಾವಿರ ಇದ್ದು 7000 ಲಸಿಕೆ ಸರಬರಾಜಾಗಿದ್ದು ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ನಗರ ಹಾಗೂ ಎಲ್ಲ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 03 ಆಂಬುಲೆನ್ಸ್ ಖರೀದಿ ಹಾಗೂ ಶವ ವಾಹನ ಸಿದ್ದಪಡಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೋತಿವೀರಪ್ಪ ಕಾಲೇಜಿನಲ್ಲಿ ಲಸಿಕೆ
ಪ್ರಸ್ತುತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಯನ್ನು ಸಿಜಿ ಆಸ್ಪತ್ರೆ ಬದಲಾಗಿ ನಗರದ ಮೋತಿ ವೀರಪ್ಪ ಕಾಲೇಜಿನಲ್ಲಿ ನೀಡಲು ಕ್ರಮ ಕೈಗೊಳ್ಳಲಾಗುವುದು.
ಮೇ 1 ರ ನಂತರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಇನ್ನೂ ಮಾರ್ಗಸೂಚಿಗಳು ಬಂದಿಲ್ಲ. ಆದರೂ ಈ ಲಸಿಕೆ ನೀಡಲು ಯುದ್ದದ ರೀತಿಯಲ್ಲಿ ಸನ್ನದ್ದರಾಗಬೇಕಿದ್ದು, ಮೈಕ್ರೋ ಪ್ಲಾನ್ ಸಿದ್ದಪಡಿಸಲಾಗುವುದು ಎಂದರು.
ಬೆಂಗಳೂರಿನ ರೋಗಿಗಳ ದಾಖಲು
ಬೆಂಗಳೂರಿನಲ್ಲಿ ಪ್ರಕರಣಗಳು ಹೆಚ್ಚಾಗಿ ಬೆಡ್ ಸಿಗದೇ ಇರುವ ಕಾರಣಕ್ಕೆ ದಾವಣಗೆರೆಗೆ ಕೆಲವರು ಬಂದು ಖಾಸಗಿ ಮತ್ತು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ವಿಷಯ ಗಮನಕ್ಕೆ ಬಂದಿದ್ದು, ಇನ್ನು ಮುಂದೆ ವೈದ್ಯಾಧಿಕಾರಿಗಳು ನನ್ನ ಗಮನಕ್ಕೆ ತಂದು ದಾಖಲು ಮಾಡಿಕೊಳ್ಳಬೇಕು. ಮೊದಲು ಜಿಲ್ಲೆಯ ಅವಶ್ಯಕತೆಗಳನ್ನು ಪರಿಗಣಿಸಿ ನಂತರ ದಾಖಲಾತಿ ಮಾಡಲು ಕ್ರಮ ವಹಿಸಲಾಗುವುದು ಎಂದರು.
ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್ಗೆ ಉತ್ತಮ ಚಿಕಿತ್ಸೆ ನೀಡಲು ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಅಧಿಕಾರಿಗಳ ತಂಡಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಡಲಾಗುತ್ತಿದ್ದು ಉತ್ತಮ ಫಲಿತಾಂಶ ಬರುವಂತೆ ಎಲ್ಲರೂ ಕೆಲಸ ಮಾಡಬೇಕು. ತಾಲ್ಲೂಕು ನೋಡಲ್ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದ ಅವರು ಸಾರ್ವಜನಿಕರೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದರು.
ಸ್ವಯಂಪ್ರೇರಿತ ವೈದ್ಯರಿಗೆ ಸ್ವಾಗತ
ಕೋವಿಡ್ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಕೋವಿಡ್ಗೆ ಸ್ವಯಂಪ್ರೇರಿತವಾಗಿ ಸೇವೆ ಸಲ್ಲಿಸಲು ಇಚ್ಚಿಸುವ ವೈದ್ಯರನ್ನು ಜಿಲ್ಲಾಡಳಿತ ಸ್ವಾಗತಿಸುತ್ತದೆ ಎಂದು ತಿಳಿಸಿದರು.
ಸಿಜಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಎಂಐಸಿಯು ನ್ನು ಸ್ಥಾಪಿಸಿ ಕಾರ್ಯ ನಿರ್ವಹಿಸುತ್ತಿದ್ದು, ರೂಂ ನಂ.65 ಮತ್ತು 66 ರಲ್ಲಿ ಸ್ಟೆಪ್ ಡೌನ್ ಎಂಐಸಿಯು ಸ್ಥಾಪಿಸಲು ಎಲ್ಲ ರೀತಿಯ ಕ್ರಮ ವಹಿಸಲಾಗುತ್ತಿದೆ. ಅಗತ್ಯ ಸಿಬ್ಬಂದಿ ನೇಮಕ ಅಥವಾ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಬಾಪೂಜಿ ಮತ್ತು ಎಸ್ಎಸ್ ಮೆಡಿಕಲ್ ಕಾಲೇಜುಗಳಿಂದ ತಲಾ ಒಬ್ಬರು ಮೈಕ್ರೋಬಯಾಲಜಿಸ್ಟ್ಗಳನ್ನು ತಾತ್ಕಾಲಿಕವಾಗಿ 2 ಅಥವಾ 3 ತಿಂಗಳ ಕಾಲ ಸಿಜಿ ಆಸ್ಪತ್ರೆಗೆ ನಿಯೋಜಿಸುವಂತೆ ಕಾಲೇಜುಗಳ ಮುಖ್ಯಸ್ಥರುಗಳಿಗೆ ಡಿಸಿ ಮನವಿ ಮಾಡಿದರು.
ಸಭೆಯಲ್ಲಿ ಎಸ್ಎಸ್ ಆಸ್ಪತ್ರೆಯ ಡಾ.ಕಾಳಪ್ಪನವರ್ ಮಾತನಾಡಿ, ರೋಗಿಗಳಿಗೆ ಲಿಕ್ವಿಡ್ ಆಕ್ಸಿಜನ್ ಉತ್ತಮವಾಗಿದ್ದು, ಇದರ ಲಭ್ಯತೆ ಹೆಚ್ಚಿಸಬೇಕೆಂದರು. ಬಾಪೂಜಿ ಆಸ್ಪತ್ರೆಯ ಡಾ.ರವಿ ಮಾತನಾಡಿ, ಲಿಕ್ವಿಡ್ ಆಕ್ಸಿಜನ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಸೂಕ್ತ ಎಂದರು.
ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್ ಪಾಲಿಕೆ ಆಯುಕ್ತ ಸ್ಮಾರ್ಟ್ ಸಿಟಿ ಎಂಡಿ ರವೀಂದ್ರ ಮಲ್ಲಾಪುರ, ವಿಶ್ವನಾಥ ಮುದಜ್ಜಿ, ಜಿ.ಪಂ ಉಪ ಕಾರ್ಯದರ್ಶಿ ಆನಂದ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್ಎಲ್ಓ ರೇಷ್ಮಾ ಹಾನಗಲ್, ಡಿಹೆಚ್ಓ ಡಾ.ನಾಗರಾಜ್, ಡಿಎಸ್ಓ ಡಾ.ರಾಘವನ್, ಡಿಎಸ್ ಡಾ.ಜಯಪ್ರಕಾಶ್, ಆರ್ಸಿಹೆಚ್ಓ ಡಾ.ಮೀನಾಕ್ಷಿ, ಜಿಲ್ಲಾ ಮಲೇರಿಯಾಧಿಕಾರಿ ಡಾ.ನಟರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಡಾ.ರೇಣುಕಾರಾಧ್ಯ, ಡಾ.ಮುರಳೀಧರ ಸೇರಿದಂತೆ ತಾಲ್ಲೂಕು ವೈದ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


