ದಿನದ ಸುದ್ದಿ
ಕೋವಿಡ್ ಪರಿಣಾಮಕಾರಿ ನಿರ್ವಹಣೆಗೆ ಸೂಕ್ತ ಕ್ರಮಗಳು ಅಧಿಕಾರಿಗಳ ತಂಡ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಉತ್ತಮ ಫಲಿತಾಂಶ ನೀಡಬೇಕು : ಡಿಸಿ ಮಹಾಂತೇಶ ಬೀಳಗಿ

ಸುದ್ದಿದಿನ,ದಾವಣಗೆರೆ: ಕೋವಿಡ್ಗೆ ಸಕಾಲದಲ್ಲಿ ಚಿಕಿತ್ಸೆ ಮತ್ತು ನಿಯಂತ್ರಣಕ್ಕಾಗಿ ತಜ್ಞರ ಸಮಿತಿಯಿಂದ ನಿಯಮಿತ ಸಭೆ, ಡೆತ್ ಆಡಿಟ್ ಸಮಿತಿ ಪುನಾರಚನೆ, ಔಷಧಗಳ ಉಸ್ತುವಾರಿಗಾಗಿ ಫ್ಲೈಯಿಂಗ್ ಸ್ಕ್ವಾಡ್ ರಚನೆ ಹಾಗೂ ವಿವಿಧ ವ್ಯವಸ್ಥೆಗಳನ್ನು ನಿರ್ವಹಿಸಲು ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲು ಇಂದು ತುರ್ತು ಸಭೆ ಕರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಡಿಹೆಚ್ಓ, ಡಿಎಸ್, ಡಿಎಸ್ಓ ಮತ್ತು ಎರಡು ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ತುರ್ತು ಸಭೆ ನಡೆಸಿ ಕೋವಿಡ್ ಪರಿಣಾಮಕಾರಿ ಚಿಕಿತ್ಸೆ ಮತ್ತು ನಿಯಂತ್ರಣಕ್ಕೆ ಅಗತ್ಯವಾದ ನಿರ್ಧಾರಗಳನ್ನು ಕೈಗೊಂಡು, ವಿವಿಧ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದರು.
ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಸಿ ಆದಿಯಾಗಿ ಎಲ್ಲರೂ ಒಂದು ತಂಡದಲ್ಲಿ ಶ್ರದ್ದೆಯಿಂದ ಕಾರ್ಯ ನಿರ್ವಹಿಸಬೇಕು. ಮೊದಲನೆಯದಾಗಿ ಜಿಲ್ಲೆಯಲ್ಲಿ ಸಂಭವಿಸುವ ಕೋವಿಡ್ ಅಥವಾ ನಾನ್ ಕೋವಿಡ್ ಸಾವು ಕುರಿತು ವಿಶ್ಲೇಷಣೆ ನಡೆಸಲು ಈ ಹಿಂದೆ ರಚಿಸಲಾಗಿದ್ದ ಡೆತ್ ಆಡಿಟ್ ಸಮಿತಿಯನ್ನು ತಕ್ಷಣವೇ ಮರು ರಚಿಸಿ, ಇಂದಿನಿಂದಲೇ ಸಂಭವಿಸುವ ಯಾವುದೇ ಸಾವಿನ ವರದಿಯನ್ನು ನೀಡಬೇಕೆಂದು ಡಿಹೆಚ್ಓ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.
ಇದನ್ನೂ ಓದಿ | ರಾಜ್ಯದಲ್ಲಿಂದು 29,438 ಕೊರೋನಾ ಪ್ರಕರಣ ಪತ್ತೆ ; 208 ಮಂದಿ ಸಾವು
ತಜ್ಞರ ಸಮಿತಿ ಸಭೆ
ವೈದ್ಯಕೀಯ ತಜ್ಞರ ಸಮಿತಿಯ ಸದಸ್ಯರು ಪ್ರತಿ ಎರಡು ದಿನಗಳಿಗೆ ಒಮ್ಮೆ ಸಭೆಯನ್ನು ನಡೆಸಿ, ಆಸ್ಪತ್ರೆಯ ಸಕ್ರಿಯ ಪ್ರಕರಣಗಳು, ಆಕ್ಸಿಜನ್ ಬೆಡ್ಗಳಲ್ಲಿ ಎಷ್ಟು ಜನ ರೋಗಿಗಳು ಯಾವ ಸ್ಥಿತಿಯಲ್ಲಿದ್ದಾರೆ, ಯಾರಿಗೆ ಏನು ಅವಶ್ಯಕತೆ ಇದೆ ಹಾಗೂ ಮುಂದಿನ ಹತ್ತು ದಿನಗಳ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಿದ್ದಪಡಿಸಿ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.
ಫ್ಲೈಯಿಂಗ್ ಸ್ಕ್ವಾಡ್ ರಚನೆ
ಜಿಲ್ಲಾಸ್ಪತ್ರೆ ಉಗ್ರಾಣ ಹಾಗೂ ಇತರೆ ಕೋವಿಡ್ ನಿರ್ವಹಿಸುತ್ತಿರುವ ಆಸ್ಪತ್ರೆಗಳ ಫಾರ್ಮಸಿಗಳಲ್ಲಿ ಔಷಧಗಳ ಲಭ್ಯತೆ ಹಾಗೂ ಔಷಧಗಳ ಬಳಕೆ, ಹೆಚ್ಚಿನ ಬಳಕೆ ಮತ್ತು ದುರ್ಬಳಕೆ ಕುರಿತು ಉಸ್ತುವಾರಿ ನೋಡಿಕೊಳ್ಳಲು ಫ್ಲೈಯಿಂಗ್ ಸ್ಕ್ವಾಡ್ ರಚಿಸಲಾಗುವುದು. ಈ ಫ್ಲೈಯಿಂಗ್ ಸ್ಕ್ವಾಡ್ ಪೊಲೀಸರ ಸಹಾಯ ಪಡೆದುಕೊಂಡು ಉಗ್ರಾಣ, ಫಾರ್ಮಸಿಗಳಿಗೆ ಭೇಟಿ ನೀಡಿ ಕೋವಿಡ್ಗೆ ಸಂಬಂಧಿಸಿದ ಯಾವುದೇ ಔಷಧಿ, ಲಸಿಕೆ ಕುರಿತು ಪರಿಶೀಲಿಸಿ ಔಷಧ ಲಭ್ಯತೆ ಮತ್ತು ಬಳಕೆ ಬಗ್ಗೆ ವಿವರವಾದ ವರದಿ ನೀಡಬೇಕೆಂದರು.
ಹಾಗೂ ಕೆಪಿಎಂಇ ಅಡಿಯಲ್ಲಿ ಕಳೆದ ಬಾರಿ ರಚಿಸಲಾಗಿದ್ದ ತಂಡಗಳನ್ನು ಪುನಾರಚಿಸಲಾಗುವುದು. ಈ ತಂಡಗಳು ಮೆಡಿಕಲ್ ಶಾಪ್ಗಳ ವರದಿ ಮತ್ತು ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ರೆಮಿಡಿಸಿವಿರ್ ಸೇರಿದಂತೆ ಇತರೆ ಲಸಿಕೆ ಮಾರಾಟ ಮಾಡುತ್ತಿದ್ದರೆ ಅಂತಹ ಆಸ್ಪತ್ರೆಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
- ಕೋವಿಡ್ ನಿರ್ವಹಣೆಯಲ್ಲಿ ಜಿಲ್ಲಾ ಸಿಜಿ ಆಸ್ಪತ್ರೆ ದಾವಣಗೆರೆಯ ಕನ್ನಡಿ ಇದ್ದಂತೆ.. ರೋಗಿಗಳು, ಬೆಡ್ಗಳು, ಆಕ್ಸಿಜನ್, ಪರೀಕ್ಷೆಗಳು, ಬಿಡುಗಡೆ ಕುರಿತಾಗಿ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು ಪ್ರತಿಯೊಂದು ವಿಭಾಗಕ್ಕೂ ಒಬ್ಬೊಬ್ಬ ನುರಿತ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗುತ್ತಿದೆ. ಹಾಗೂ ಡೆತ್ ಆಡಿಟ್ ಸಮಿತಿ ಪುನಾರಚನೆ, ತಜ್ಞರ ಸಭೆ, ಸಿಸಿಸಿ ಸ್ಥಾಪನೆ, ಅಗತ್ಯ ಸಿಬ್ಬಂದಿ ನೇಮಕ, ಆಂಬುಲೆನ್ಸ್ ಖರೀದಿ ಹಾಗೂ ಅಗತ್ಯ ಔಷಧ ಮತ್ತು ಇತರೆ ಸುರಕ್ಷತಾ ಪರಿಕರಗಳು ಸೇರಿದಂತೆ ಕೋವಿಡ್ನ್ನು ಅತ್ಯಂತ ಪರಿಣಾಮಕಾರಿಯಾಗಿ ಎದುರಿಸಲು ಎಲ್ಲ ರೀತಿಯ ಸಿದ್ದತೆಯನ್ನು ವ್ಯವಸ್ಥಿತವಾಗಿ ಮಾಡಲು ಈ ತುರ್ತು ಸಭೆಯಲ್ಲಿ ನಿರ್ಧರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.
| ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ
ಆಕ್ಸಿಜನ್ ನಿರ್ವಹಣೆಗೆ ಪ್ರತ್ಯೇಕ ನೋಡಲ್ ಅಧಿಕಾರಿ : ಕೋವಿಡ್ ರೋಗಿಗಳಿಗೆ ಅಗತ್ಯವಿರುವ ಆಕ್ಸಿಜನ್ ಸರಬರಾಜು ಮಾಡಲು ಪ್ರತಿ ವಾರ್ಡುಗಳಿಗೆ ತೆರಳಿ ಯಾರಿಗೆ ಯಾವ ರೀತಿಯ ಆಕ್ಸಿಜನ್ ಅಗತ್ಯವಿದೆ ಎಂದು ವಿಶ್ಲೇಷಿಸಿ ನಿರ್ಧರಿಸಿ ಕ್ರಮ ಕೈಗೊಳ್ಳಲು ಪ್ರತ್ಯೇಕವಾಗಿ ಒಬ್ಬ ತಜ್ಞರನ್ನು ಆಕ್ಸಿಜನ್ ನಿರ್ವಹಣಾ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ ಎಂದರು.
ಆರ್ಟಿಪಿಸಿಆರ್ ಲ್ಯಾಬ್ ನಿರ್ವಹಣೆಗೆ ನೋಡಲ್ ಅಧಿಕಾರಿ : ಪ್ರತಿ ದಿನ ಎಷ್ಟು ಪರೀಕ್ಷೆಗಳು ನಡೆಯುತ್ತಿವೆ. ಹಾಗೂ ಸಂಪೂರ್ಣ ಲ್ಯಾಬ್ನ ಕಾರ್ಯವೈಖರಿಯನ್ನು ವಿಶ್ಲೇಷಿಸಿ ಕ್ರಮ ವಹಿಸಲು ಡಾ.ಗಂಗಾಧರ್ ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗುವುದು ಎಂದರು.
ಪ್ರಸ್ತುತ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕದ ಪರೀಕ್ಷೆಗಳು ಸಾಕಷ್ಟು ಆಗುತ್ತಿದ್ದರೂ ಡಾಟಾ ಎಂಟ್ರಿಯಲ್ಲಿ ಅದು ಸರಿಯಾಗಿ ಅಪ್ಡೇಟ್ ಮಾಡದೇ ಇರುವ ಕಾರಣ ರಾಜ್ಯ ವರದಿಯಲ್ಲಿ ಕಡಿಮೆ ತೋರಿಸುತ್ತಿದೆ. ಆದ ಕಾರಣ ಟಿಹೆಚ್ಓ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಡಾಟಾ ಎಂಟ್ರಿ ಸಮರ್ಪಕವಾಗಿ ಮಾಡಿಸಲು ಕ್ರಮ ಕೈಗೊಳ್ಳಬೇಕು.
ಸಿಜಿ ಆಸ್ಪತ್ರೆಯಲ್ಲಿ ಪ್ರಸ್ತುತ 2000 ಪೂಲಿಂಗ್ ಪರೀಕ್ಷೆ ಮಾಡಿಸುವ ಸಾಮಥ್ರ್ಯ ಇದೆ. ಸಕ್ರಿಯ ಪ್ರಕರಣದ 10 ಪಟ್ಟು ಟೆಸ್ಟ್ ಆಗಬೇಕಿದ್ದು, ಈ ಬಗ್ಗೆ ಕ್ರಮ ವಹಿಸಲಾಗುತ್ತಿದೆ. ಹಾಗೂ ಆಸ್ಪತ್ರೆಗೆ ಅಗತ್ಯವಿರುವ ಎಲ್ಲ ಅಗತ್ಯ ಔಷಧಿಗಳು ಮತ್ತು ಸುರಕ್ಷತಾ ಪರಿಕರ ಖರೀದಿಗೆ ಕ್ರಮ ವಹಿಸಲಾಗಿದೆ ಎಂದರು.
ಇಂದು ಕೋವಿಡ್ ಲಸಿಕೆಯ ಗುರಿ 13000 ಸಾವಿರ ಇದ್ದು 7000 ಲಸಿಕೆ ಸರಬರಾಜಾಗಿದ್ದು ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ನಗರ ಹಾಗೂ ಎಲ್ಲ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 03 ಆಂಬುಲೆನ್ಸ್ ಖರೀದಿ ಹಾಗೂ ಶವ ವಾಹನ ಸಿದ್ದಪಡಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೋತಿವೀರಪ್ಪ ಕಾಲೇಜಿನಲ್ಲಿ ಲಸಿಕೆ
ಪ್ರಸ್ತುತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಯನ್ನು ಸಿಜಿ ಆಸ್ಪತ್ರೆ ಬದಲಾಗಿ ನಗರದ ಮೋತಿ ವೀರಪ್ಪ ಕಾಲೇಜಿನಲ್ಲಿ ನೀಡಲು ಕ್ರಮ ಕೈಗೊಳ್ಳಲಾಗುವುದು.
ಮೇ 1 ರ ನಂತರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಇನ್ನೂ ಮಾರ್ಗಸೂಚಿಗಳು ಬಂದಿಲ್ಲ. ಆದರೂ ಈ ಲಸಿಕೆ ನೀಡಲು ಯುದ್ದದ ರೀತಿಯಲ್ಲಿ ಸನ್ನದ್ದರಾಗಬೇಕಿದ್ದು, ಮೈಕ್ರೋ ಪ್ಲಾನ್ ಸಿದ್ದಪಡಿಸಲಾಗುವುದು ಎಂದರು.
ಬೆಂಗಳೂರಿನ ರೋಗಿಗಳ ದಾಖಲು
ಬೆಂಗಳೂರಿನಲ್ಲಿ ಪ್ರಕರಣಗಳು ಹೆಚ್ಚಾಗಿ ಬೆಡ್ ಸಿಗದೇ ಇರುವ ಕಾರಣಕ್ಕೆ ದಾವಣಗೆರೆಗೆ ಕೆಲವರು ಬಂದು ಖಾಸಗಿ ಮತ್ತು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ವಿಷಯ ಗಮನಕ್ಕೆ ಬಂದಿದ್ದು, ಇನ್ನು ಮುಂದೆ ವೈದ್ಯಾಧಿಕಾರಿಗಳು ನನ್ನ ಗಮನಕ್ಕೆ ತಂದು ದಾಖಲು ಮಾಡಿಕೊಳ್ಳಬೇಕು. ಮೊದಲು ಜಿಲ್ಲೆಯ ಅವಶ್ಯಕತೆಗಳನ್ನು ಪರಿಗಣಿಸಿ ನಂತರ ದಾಖಲಾತಿ ಮಾಡಲು ಕ್ರಮ ವಹಿಸಲಾಗುವುದು ಎಂದರು.
ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್ಗೆ ಉತ್ತಮ ಚಿಕಿತ್ಸೆ ನೀಡಲು ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಅಧಿಕಾರಿಗಳ ತಂಡಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಡಲಾಗುತ್ತಿದ್ದು ಉತ್ತಮ ಫಲಿತಾಂಶ ಬರುವಂತೆ ಎಲ್ಲರೂ ಕೆಲಸ ಮಾಡಬೇಕು. ತಾಲ್ಲೂಕು ನೋಡಲ್ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದ ಅವರು ಸಾರ್ವಜನಿಕರೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದರು.
ಸ್ವಯಂಪ್ರೇರಿತ ವೈದ್ಯರಿಗೆ ಸ್ವಾಗತ
ಕೋವಿಡ್ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಕೋವಿಡ್ಗೆ ಸ್ವಯಂಪ್ರೇರಿತವಾಗಿ ಸೇವೆ ಸಲ್ಲಿಸಲು ಇಚ್ಚಿಸುವ ವೈದ್ಯರನ್ನು ಜಿಲ್ಲಾಡಳಿತ ಸ್ವಾಗತಿಸುತ್ತದೆ ಎಂದು ತಿಳಿಸಿದರು.
ಸಿಜಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಎಂಐಸಿಯು ನ್ನು ಸ್ಥಾಪಿಸಿ ಕಾರ್ಯ ನಿರ್ವಹಿಸುತ್ತಿದ್ದು, ರೂಂ ನಂ.65 ಮತ್ತು 66 ರಲ್ಲಿ ಸ್ಟೆಪ್ ಡೌನ್ ಎಂಐಸಿಯು ಸ್ಥಾಪಿಸಲು ಎಲ್ಲ ರೀತಿಯ ಕ್ರಮ ವಹಿಸಲಾಗುತ್ತಿದೆ. ಅಗತ್ಯ ಸಿಬ್ಬಂದಿ ನೇಮಕ ಅಥವಾ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಬಾಪೂಜಿ ಮತ್ತು ಎಸ್ಎಸ್ ಮೆಡಿಕಲ್ ಕಾಲೇಜುಗಳಿಂದ ತಲಾ ಒಬ್ಬರು ಮೈಕ್ರೋಬಯಾಲಜಿಸ್ಟ್ಗಳನ್ನು ತಾತ್ಕಾಲಿಕವಾಗಿ 2 ಅಥವಾ 3 ತಿಂಗಳ ಕಾಲ ಸಿಜಿ ಆಸ್ಪತ್ರೆಗೆ ನಿಯೋಜಿಸುವಂತೆ ಕಾಲೇಜುಗಳ ಮುಖ್ಯಸ್ಥರುಗಳಿಗೆ ಡಿಸಿ ಮನವಿ ಮಾಡಿದರು.
ಸಭೆಯಲ್ಲಿ ಎಸ್ಎಸ್ ಆಸ್ಪತ್ರೆಯ ಡಾ.ಕಾಳಪ್ಪನವರ್ ಮಾತನಾಡಿ, ರೋಗಿಗಳಿಗೆ ಲಿಕ್ವಿಡ್ ಆಕ್ಸಿಜನ್ ಉತ್ತಮವಾಗಿದ್ದು, ಇದರ ಲಭ್ಯತೆ ಹೆಚ್ಚಿಸಬೇಕೆಂದರು. ಬಾಪೂಜಿ ಆಸ್ಪತ್ರೆಯ ಡಾ.ರವಿ ಮಾತನಾಡಿ, ಲಿಕ್ವಿಡ್ ಆಕ್ಸಿಜನ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಸೂಕ್ತ ಎಂದರು.
ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್ ಪಾಲಿಕೆ ಆಯುಕ್ತ ಸ್ಮಾರ್ಟ್ ಸಿಟಿ ಎಂಡಿ ರವೀಂದ್ರ ಮಲ್ಲಾಪುರ, ವಿಶ್ವನಾಥ ಮುದಜ್ಜಿ, ಜಿ.ಪಂ ಉಪ ಕಾರ್ಯದರ್ಶಿ ಆನಂದ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್ಎಲ್ಓ ರೇಷ್ಮಾ ಹಾನಗಲ್, ಡಿಹೆಚ್ಓ ಡಾ.ನಾಗರಾಜ್, ಡಿಎಸ್ಓ ಡಾ.ರಾಘವನ್, ಡಿಎಸ್ ಡಾ.ಜಯಪ್ರಕಾಶ್, ಆರ್ಸಿಹೆಚ್ಓ ಡಾ.ಮೀನಾಕ್ಷಿ, ಜಿಲ್ಲಾ ಮಲೇರಿಯಾಧಿಕಾರಿ ಡಾ.ನಟರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಡಾ.ರೇಣುಕಾರಾಧ್ಯ, ಡಾ.ಮುರಳೀಧರ ಸೇರಿದಂತೆ ತಾಲ್ಲೂಕು ವೈದ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್ಆರ್ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ1 day ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ1 day ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ1 day ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ1 day ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ